ವೇದಜೀವನ ಬ್ಲಾಗಿಗೆ ಸ್ವಾಗತ. ಸುವಿಚಾರಗಳು ಎಲ್ಲಿಂದಲಾದರೂ ಬರಲಿ, ಯಾರಿಂದಲಾದರೂ ಬರಲಿ, ಪೂರ್ವಾಗ್ರಹ ಪೀಡಿತರಾಗದೆ ಸ್ವೀಕರಿಸೋಣ.

ಬುಧವಾರ, ಸೆಪ್ಟೆಂಬರ್ 29, 2010

ಮೂಢ ಉವಾಚ -8

                 ನನ್ನದು?
ಇರುವುದು ನಿನದಲ್ಲ ಬರುವುದು ನಿನಗಲ್ಲ
ತರಲಾರದ ನೀನು ಹೊರುವೆಯೇನನ್ನು?
ಇದ್ದುದಕೆ ತಲೆಬಾಗಿ ಬಂದುದಕೆ ಋಣಿಯಾಗಿ
ಫಲಧಾರೆ ಹರಿಯಗೊಡು ಮರುಳು ಮೂಢ ||

               ದೀಪಾವಳಿ
ಒಡಲಗುಡಿಯ ರಜ-ತಮಗಳ ಗುಡಿಸಿ
ಒಳಗಣ್ಣಿನಲಿ ಕಂಡ ಸತ್ವವನು ಉರಿಸಿ |
ಮನದ ಕತ್ತಲ ಕಳೆದು ತಿಳಿವಿನ ಬೆಳಕ
ಪಸರಿಪುದೆ ದೀಪಾವಳಿ ತಿಳಿ ಮೂಢ ||

              ಸಮಪಾಲು
ಅಹುದಿಹುದು ಅಡೆತಡೆಯು ಬಾಳಹಾದಿಯಲಿ
ಸಾಗಬೇಕರಿತು ಪತಿ ಪತ್ನಿ ಜೊತೆಜೊತೆಯಲಿ |
ಸಮಪಾಲು ಪಡೆದಿರಲು ನೋವು ನಲಿವಿನಲಿ
ಬಾಳು ಬಂಗಾರ ಬದುಕು ಸಿಂಗಾರ ಮೂಢ ||

             ನೀತಿವಂತ
ನೀತಿವಂತರ ನಡೆಯು ನ್ಯಾಯಕಾಸರೆಯು
ನುಡಿದಂತೆ ನಡೆಯುವರು ಸವಿಯ ನೀಡುವರು |
ಪ್ರಾಣವನೆ ಪಣಕಿಟ್ಟು ಮಾತನುಳಿಸುವರು
ಜಗದ ಹಿತ ಕಾಯ್ವ ಧೀರರವರು ಮೂಢ ||
************
-ಕ.ವೆಂ.ನಾಗರಾಜ್

ಬುಧವಾರ, ಸೆಪ್ಟೆಂಬರ್ 22, 2010

ಮೂಢ ಉವಾಚ -7

ಸೂತ್ರ
ಸರಸರನೆ ಮೇಲೇರಿ ಗಿರಕಿ ತಿರುಗಿ
ಪರಪರನೆ ಹರಿದು ದಿಕ್ಕೆಟ್ಟು ತಲೆಸುತ್ತಿ
ಬೀಳುವುದು ಗಾಳಿಪಟ ಬಂಧ ತಪ್ಪಿದರೆ
ಸೂತ್ರ ಹರಿದರೆ ಎಚ್ಚರವಿರು ಮೂಢ


ನಾನತ್ವ
ತಾನೇ ಸರಿ ತನ್ನದೇ ಸರಿ ಕಾಣಿರಿ
ಎಂಬ ಸರಿಗರ ಸಿರಿಗರ ಬಡಿದ ಪರಿ
ಏನು ಪೇಳ್ವುದೋ ತಿಪ್ಪೆಯ ಒಡೆಯ
ತಾನೆಂಬ ಶುನಕದ ಹಿರಿಮೆಗೆ ಮೂಢ


ಹೆದರಿಕೆ
ಅವರಿಲ್ಲ ಇವರಿಲ್ಲ ನಿನ್ನವರು ಯಾರಿಲ್ಲ
ಹಿತವಿಲ್ಲದ ಕಹಿಪ್ರವರ ಜಗಕೆ ಬೇಕಿಲ್ಲ
ಬಿದ್ದೆದ್ದು ನಡೆಯದಿರೆ ಒಗೆಯುವರು ಕಲ್ಲ
ಹೆದರಿಕೆ ಸಲ್ಲ ದೇವನಿಹನಲ್ಲ ಮೂಢ

ತೃಪ್ತಿ
ಉಣ್ಣಲುಡಲಿರಬೇಕು ನೆರಳಿರಬೇಕು
ಮನವರಿತು ಅನುಸರಿಪ ಮಡದಿ ಬೇಕು
ಬೆಳಕಾಗಿ ಬಾಳುವ ಮಕ್ಕಳಿರಬೇಕು
ಇರುವುದೇ ಸಾಕೆಂಬ ಮನ ಬೇಕು ಮೂಢ
***********
-ಕ.ವೆಂ.ನಾಗರಾಜ್

ಭಾನುವಾರ, ಸೆಪ್ಟೆಂಬರ್ 12, 2010

ಮೂಢ ಉವಾಚ -6

ಅರಿವು
ಸೋತೆನೆಂದೆನಬೇಡ ಸೋಲು ನೀನರಿತೆ
ಬಿದ್ದೆನೆಂದೆನಬೇಡ ನೋವು ನೀನರಿತೆ
ಸೋಲರಿತು ನೋವರಿತು ಹಸಿವರಿತು
ಜಗವರಿಯೆ ನೀನೇ ಗೆಲುವೆ ಮೂಢ

ಕೊಂಬೆ
ರಸಭರಿತ ಫಲಮೂಲ ಕೊಂಬೆ ತಾನಲ್ಲ
ಫಲಸತ್ವ ಸಾಗಿಪ ಮಾರ್ಗ ತಾನಹುದು
ಮಾಡಿದೆನೆನಬೇಡ ನಿನ್ನದೆನಬೇಡ
ಜಗವೃಕ್ಷರಸ ಹರಿವ ಕೊಂಬೆ ನೀನು ಮೂಢ

ಯಾರು?
ಕೆಲಸವಿರೆ ಓಲೈಸುವರು ಇಲ್ಲದಿರೆ ಹೀನೈಸುವರು
ಎಲ್ಲರ ಸೇವೆ ಬಯಸುವರು ತಾನಾರಿಗೂ ಆಗರು
ಕಂಡರೂ ಕಾಣದೊಲು ನಟಿಸುವ ಚತುರರಿವರು
ಇವರೊಳು ನೀಯಾರು ನಾಯಾರು ಹೇಳು ಮೂಢ

ಯಾರು?
ಆಪತ್ತಿಗಾಗುವರಿಹರು ತಿರುಗಿ ನೋಡದವರಿಹರು
ಒಳಿತು ಹಾರೈಸುವರಿಹರು ಕೆಡಕು ಬಯಸುವರಿಹರು
ಒಳಿತು ಮಾಡದ ಕೆಡಕು ಎಣಿಸಲರಿಯರಿಹರು
ಇವರೊಳು ನೀಯಾರು ನಾಯಾರು ಹೇಳು ಮೂಢ
*************
-ಕವಿನಾಗರಾಜ್.