ವೇದಜೀವನ ಬ್ಲಾಗಿಗೆ ಸ್ವಾಗತ. ಸುವಿಚಾರಗಳು ಎಲ್ಲಿಂದಲಾದರೂ ಬರಲಿ, ಯಾರಿಂದಲಾದರೂ ಬರಲಿ, ಪೂರ್ವಾಗ್ರಹ ಪೀಡಿತರಾಗದೆ ಸ್ವೀಕರಿಸೋಣ.

ಶುಕ್ರವಾರ, ಮಾರ್ಚ್ 30, 2012

ಅನುಪಮ ಕರ್ಮಯೋಗಿ, ಪ್ರಖರ ಸತ್ಯವಾದಿ ಪಂ. ಸುಧಾಕರ ಚತುರ್ವೇದಿಯವರಿಗೆ 116ನೆಯ ವರ್ಷದ ಜನ್ಮದಿನದ ಶುಭಾಶಯಗಳು


      ಶ್ರೀರಾಮನವಮಿಯ ದಿನವಾದ ೦೧-೦೪-೨೦೧೨ರಂದೇ ಪ್ರಖರ ಸತ್ಯವಾದಿ, ನಂಬಿದ ಧ್ಯೇಯಕ್ಕಾಗಿ ಟೀಕೆ, ಟಿಪ್ಪಣಿಗಳಿಗೆ ಅಂಜದೆ ಹಿಡಿದ ಹಾದಿಯಲ್ಲಿಯೇ ಅಳುಕದೆ ಮುಂದುವರೆದು, ಸತ್ಯಪ್ರಸಾರ ಮಾಡುತ್ತಿರುವ ಕರ್ಮಯೋಗಿ ಪಂಡಿತ ಸುಧಾಕರ ಚತುರ್ವೇದಿಯವರ ಜನ್ಮದಿನವೂ ಆಗಿರುವುದು ವಿಶೇಷವೇ ಸರಿ. ೧೧೫ ವಸಂತಗಳನ್ನು ಕಂಡು ೧೧೬ನೆಯ ವರ್ಷಕ್ಕೆ ಕಾಲಿರಿಸಿರುವ ಅವರಿಗೆ ಶಿರಬಾಗಿ ಪ್ರಣಾಮಗಳನ್ನು ಸಲ್ಲಿಸುತ್ತಾ ಈ ಕೆಲವು ಸಾಲುಗಳನ್ನು ನಿಮ್ಮೊಡನೆ ಹಂಚಿಕೊಳ್ಳುತ್ತಿದ್ದೇನೆ. 
     ಇವರ ಪೂರ್ವಿಕರು ತುಮಕೂರಿನ ಕ್ಯಾತ್ಸಂದ್ರದವರಾದರೂ ಇವರು ಹುಟ್ಟಿದ್ದು, ಬೆಳೆದಿದ್ದು ಬೆಂಗಳೂರಿನಲ್ಲಿಯೇ. ಶಿಕ್ಷಣ ಇಲಾಖೆಯಲ್ಲಿ ಇನ್ಸ್‌ಪೆಕ್ಟರ್ ಆಗಿದ್ದ ಶ್ರೀ ಟಿ.ವಿ. ಕೃಷ್ನರಾವ್ ಮತ್ತು  ಶ್ರೀಮತಿ ಲಕ್ಷ್ಮಮ್ಮನವರ ಮಗನಾಗಿ ೧೮೯೭ರ ರಾಮನವಮಿಯಂದು ಬಳೇಪೇಟೆಯಲ್ಲಿದ್ದ ಮನೆಯಲ್ಲಿ ಜನಿಸಿದ ಇವರು ಸಂಪ್ರದಾಯಸ್ಥ ಕುಟುಂಬಕ್ಕೆ ಸೇರಿದ್ದರೂ ಅರ್ಥವಿಲ್ಲದ ಕುರುಡು ಸಂಪ್ರದಾಯಗಳನ್ನು ಒಪ್ಪದವರು, ಸರಿ ಅನ್ನಿಸಿದ್ದನ್ನು ಮಾತ್ರ ಮಾಡಿದವರು.     ಅಪ್ಪಟ ಕನ್ನಡಿಗರಾದ ಪಂ. ಸುಧಾಕರ ಚತುರ್ವೇದಿಯವರು ತಮ್ಮ ೧೩ನೆಯ ವಯಸ್ಸಿನಲ್ಲಿಯೇ  ಉತ್ತರ ಭಾರತದ ಹರಿದ್ವಾರದ ಹತ್ತಿರದ ಕಾಂಗಡಿ ಗುರುಕುಲಕ್ಕೆ ಸೇರಿ ಉಪನಿಷತ್ತು, ವ್ಯಾಕರಣ, ಛಂದಸ್ಸು, ಗಣಿತ, ಜ್ಯೋತಿಷ್ಯ, ಷಡ್ದರ್ಶನ, ವೇದಾಭ್ಯಾಸ ಅಧ್ಯಯನ ಮಾಡಿದವರು. ಅವರು ಮಹರ್ಷಿ ದಯಾನಂದ ಸರಸ್ವತಿಯವರಿಂದ ಪ್ರಭಾವಿತರಾಗಿದ್ದು, ಸ್ವಾಮಿ ಶ್ರದ್ಧಾನಂದರ ಪ್ರೀತಿಯ ಶಿಷ್ಯರಾಗಿ ಬೆಳೆದರು. ನಾಲ್ಕೂ ವೇದಗಳನ್ನು ಅಧ್ಯಯಿಸಿದ ಅವರು ನಿಜ ಅರ್ಥದಲ್ಲಿ ’ಚತುರ್ವೇದಿ’ಯಾಗಿ, ಚತುರ್ವೇದಿ ಎಂಬ ಸಾರ್ಥಕ ಹೆಸರು ಗಳಿಸಿದವರು.  ಜಾತಿ ಭೇದ ತೊಲಗಿಸಲು ಸಕ್ರಿಯವಾಗಿ ತೊಡಗಿಕೊಂಡವರು. ಸಾವಿರಾರು ಅಂತರ್ಜಾತೀಯ ವಿವಾಹಗಳನ್ನು ಮುಂದೆ ನಿಂತು ಮಾಡಿಸಿದವರು ಮತ್ತು ಅದಕ್ಕಾಗಿ ಬಂದ ವಿರೋಧಗಳನ್ನು ಎದುರಿಸಿದವರು. ವೇದದಲ್ಲಿ ವರ್ಣವ್ಯವಸ್ಥೆಯಿದೆಯೇ ಹೊರತು, ಹುಟ್ಟಿನಿಂದ ಬರುವ ಜಾತಿಪದ್ಧತಿ ಇಲ್ಲವೆಂದು ಪ್ರತಿಪಾದಿಸಿದವರು, ಮನುಷ್ಯರೆಲ್ಲಾ ಒಂದೇ ಜಾತಿ, ಬೇಕಾದರೆ ಗಂಡು ಜಾತಿ, ಹೆಣ್ಣುಜಾತಿ ಅನ್ನಬಹುದು ಎಂದವರು. ಸಾಹಿತಿಯಾಗಿಯೂ ಸಹ ಅನೇಕ ಕೃತಿಗಳನ್ನು ಜನಹಿತವನ್ನು ಮನದಲ್ಲಿ ಇಟ್ಟುಕೊಂಡೇ ಕನ್ನಡ, ಸಂಸ್ಕೃತ, ಇಂಗ್ಲಿಷ್, ಹಿಂದಿ ಭಾಷೆಗಳಲ್ಲಿ ರಚಿಸಿದವರು. 
     ಸ್ವಾತಂತ್ರ್ಯ ಹೋರಾಟದಲ್ಲಿ ತಮ್ಮನ್ನು ಸಕ್ರಿಯರಾಗಿ ತೊಡಗಿಸಿಕೊಂಡಿದ್ದ ಅವರು ಗಾಂಧೀಜಿಯ ಒಡನಾಟ ಹೊಂದಿದವರಾಗಿದ್ದರು. ಪಂಡಿತರು ಇದ್ದ ಗುರುಕುಲಕ್ಕೆ ಗಾಂಧೀಜಿಯವರು ಭೇಟಿ ಕೊಟ್ಟಿದ್ದ ಸಂದರ್ಭದಲ್ಲಿ ಇವರು ಗಾಂಧೀಜಿಯವರಿಂದ ಪ್ರಭಾವಿತರಾಗಿದ್ದಂತೆ, ಗಾಂಧೀಜಿಯವರೂ ಇವರಿಂದ ಪ್ರಭಾವಿತರಾಗಿದ್ದರು. ಗಾಂಧೀಜಿಯವರ ಹತ್ಯೆಯಾಗುವವರೆಗೂ ಇವರಿಬ್ಬರ ಸ್ನೇಹ ಮುಂದುವರೆದಿತ್ತು.  ೧೩ ವರ್ಷಗಳ ಕಾಲ ಸೆರೆವಾಸ ಕಂಡವರು. ಕುಪ್ರಸಿದ್ಧ ಜಲಿಯನ್ ವಾಲಾಬಾಗ್ ಹತ್ಯಾಕಾಂಡದ ಸಾಕ್ಷಿಯಾಗಿದ್ದ ಅವರು ಗಾಂಧೀಜಿಯವರ ಸೂಚನೆಯಂತೆ ಅಲ್ಲಿ ಹತರಾಗಿದ್ದ ನೂರಾರು ಶವಗಳ ಸಾಮೂಹಿಕ ಶವಸಂಸ್ಕಾರ ಮಾಡಿದವರು. ಕ್ರಾಂತಿಕಾರಿ ಭಗತ್ ಸಿಂಗರಿಗೆ ಗುರುವೂ ಆಗಿದ್ದವರು. ತಾವು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಲು ಸ್ವಾಮಿ ಶ್ರದ್ಧಾನಂದರ ಪ್ರೋತ್ಸಾಹ ಕಾರಣವಾದರೂ ವೇದದ 'ಅಧೀನಾಃ ಸ್ಯಾಮ ಶರದಃ ಶತಂ, ಭೂಯಶ್ಚ ಶರದಃ ಶತಾತ್' - ನೂರು ವರ್ಷಕ್ಕೂ ಹೆಚ್ಚುಕಾಲ ಸ್ವಾತಂತ್ರ್ಯದಿಂದ ಬಾಳೋಣ ಎಂಬ ಅರ್ಥದ ಸಾಲು ಸಂಗ್ರಾಮಕ್ಕೆ ಪ್ರೇರಿಸಿತ್ತು ಎಂದು ಹೇಳುತ್ತಾರೆ. ಭಾರತೀಯರನ್ನು ಕೀಳಾಗಿ ಕಾಣುತ್ತಿದ್ದ ಆಂಗ್ಲರ ನಡವಳಿಕೆ ಇವರ ಮತ್ತು ಇವರಂತಹ ಸಾವಿರಾರು ಜನರ ಸ್ವಾಭಿಮಾನವನ್ನು ಕೆಣಕಿ ಹೋರಾಟ ಕಾವು ಪಡೆದಿತ್ತು. ಹೋರಾಟ ಕಾಲದಲ್ಲಿ ಕೃಶ ಶರೀರದವರಾದರೂ ಇವರ ಮನೋಬಲ ಮತ್ತು ಛಲದಿಂದಾಗಿ ಅನೇಕ ಪ್ರಾಣಾಂತಿಕ ಪೆಟ್ಟುಗಳನ್ನು ಹಲವಾರು ಬಾರಿ ತಿಂದರೂ ಸಹಿಸಿ ಅರಗಿಸಿಕೊಂಡವರು. ದಂಡಿ ಉಪ್ಪಿನ ಸತ್ಯಾಗ್ರಹ, ಕ್ವಿಟ್ ಇಂಡಿಯಾ ಚಳುವಳಿ ಸೇರಿದಂತೆ ಅನೇಕ ಸತ್ಯಾಗ್ರಹಗಳಲ್ಲಿ ಸಕ್ರಿಯರಾಗಿ ಭಾಗವಹಿಸಿದ್ದವರು. ಭಾರತ-ಪಾಕಿಸ್ತಾನದ ವಿಭಜನೆಯ ಕಾಲದ ಭೀಕರ ಮಾರಣಹೋಮವನ್ನು ಕಂಡ ನೆನಪು ಮಾಸದೆ ಇರುವವರು. ಒಟ್ಟಿನಲ್ಲಿ ಹೇಳಬೇಕೆಂದರೆ ಇವರು ನಮ್ಮೊಡನಿರುವ ಜೀವಂತ ಇತಿಹಾಸದ ನೈಜ ಪ್ರತಿನಿಧಿ.
     ವೇದ ಇವರ ಉಸಿರಾಗಿದೆ. ಸಾರ್ವಕಾಲಿಕ ಮೌಲ್ಯ ಸಾರುವ ವೇದಗಳ ಸಂದೇಶ ಸಾರುವುದೇ ಅವರ ಜೀವನ ಧ್ಯೇಯವಾಗಿದೆಯೆಂದರೆ ತಪ್ಪಿಲ್ಲ. ವೇದದ ಹೆಸರಿನಲ್ಲಿ ನಡೆಯುತ್ತಿರುವ ಅನೇಕ ಆಚರಣೆಗಳು ಅವೈದಿಕವಾಗಿರುವ ಬಗ್ಗೆ ಅಸಮಾಧಾನಿಯಾಗಿರುವ ಅವರು ಅಂತಹ ಆಚರಣೆಗಳನ್ನು ಖಂಡಿಸಿ ತಿಳುವಳಿಕೆ ನೀಡುವ ಕಾಯಕ ಮುಂದುವರೆಸಿದ್ದಾರೆ. ವೇದೋಕ್ತ ಜೀವನ ಪಥವೆಂಬ ಕಿರು ಪುಸ್ತಕದಲ್ಲಿ ಜೀವನದ ಮೌಲ್ಯಗಳು, ಜೀವಾತ್ಮ, ಪರಮಾತ್ಮ, ಪ್ರಕೃತಿಗಳ ಸ್ವರೂಪ, ಮಾನವ ಧರ್ಮ, ಚತುರ್ವರ್ಣಗಳು, ಬ್ರಹ್ಮಚರ್ಯಾದಿ ಚತುರಾಶ್ರಮಗಳು, ದೈನಂದಿನ ಕರ್ಮಗಳು, ಷೋಡಶ ಸಂಸ್ಕಾರಗಳು, ರಾಜನೀತಿ, ಸಾಮಾಜಿಕ ಜೀವನ, ಚತುರ್ವಿಧ ಪುರುಷಾರ್ಥಗಳನ್ನು ವೇದದ ಹಿನ್ನೆಲೆಯಲ್ಲಿ ವಿಶ್ಲೇಷಿಸಿದ್ದು, ಅದರಂತೆ ನಡೆದದ್ದೇ ಆದಲ್ಲಿ ಜೀವನ ಸಾರ್ಥಕವಾಗುವುದು. ಇವರ ಜೀವನೋತ್ಸಾಹ ಬತ್ತದ ಚಿಲುಮೆಯಾಗಿದ್ದು ದೇಹ, ಮನಸ್ಸು, ಬುದ್ಧಿಗಳನ್ನು ಹಿಡಿತದಲ್ಲಿಟ್ಟುಕೊಂಡಿರುವುದೇ ಇದಕ್ಕೆ ಕಾರಣವಿರಬಹುದು. ಪ್ರಶಸ್ತಿ, ಸನ್ಮಾನಗಳಿಗಾಗಿ ಲಾಬಿ ನಡೆಸುವವರೇ ತುಂಬಿರುವ, ಅದಕ್ಕಾಗಿ ತಮ್ಮತನವನ್ನೇ ಮಾರಿಕೊಳ್ಳುವವರಿರುವ ಈ ದೇಶದಲ್ಲಿ ಪ್ರಚಾರದಿಂದ ದೂರವಿರುವ ಇವರು ನಿಜವಾದ ಭಾರತರತ್ನರೆಂದರೆ ತಪ್ಪಿಲ್ಲ. ಇಂತಹವರು ನಮ್ಮೊಡನೆ ಇರುವುದೇ ನಮ್ಮ ಸೌಭಾಗ್ಯ, ಪುಣ್ಯವೆನ್ನಬೇಕು. ಬೆಂಗಳೂರಿನ ಜಯನಗರದ ೫ನೆಯ ಬ್ಲಾಕಿನ ಶ್ರೀ ಕೃಷ್ಣಸೇವಾಶ್ರಮ ರಸ್ತ್ರೆಯ ಮನೆ ನಂ. ೨೮೬/ಸಿ ಯಲ್ಲಿ ವಾಸವಿರುವ ಇವರ ಮನೆಯಲ್ಲಿ ಪ್ರತಿ ಶನಿವಾರ ಸಾಯಂಕಾಲ ೫-೩೦ಕ್ಕೆ ಸರಿಯಾಗಿ ಸತ್ಸಂಗ ನಡೆಯುತ್ತಿದ್ದು, ಆಸಕ್ತರಿಗೆ ಮಾರ್ಗದರ್ಶನ ಮಾಡುತ್ತಿದ್ದಾರೆ. ಅವರ ವಿಚಾರಗಳನ್ನು ಒಪ್ಪಲೇಬೇಕೆಂದಿಲ್ಲ. ಎಲ್ಲವನ್ನೂ ಆಲೋಚಿಸಿ, ವಿಮರ್ಶಿಸಿಯೇ ಒಪ್ಪಬೇಕೆಂಬುದೇ ಅವರ ಆಗ್ರಹ. ನೀವೂ ಈ ಅಪರೂಪದ ಸಾಧಕರನ್ನು ಒಮ್ಮೆಯಾದರೂ ಭೇಟಿ ಮಾಡಬೇಕು ಮತ್ತು ಅವರ ಮಾತುಗಳನ್ನು ಆಲಿಸಬೇಕು ಎಂಬುದು ನನ್ನ ಆಶಯ. ಈ ಕರ್ಮಯೋಗಿ ಸಾಧಕರಿಗೆ ಮತ್ತೊಮ್ಮೆ ನನ್ನ ಸಾಷ್ಟಾಂಗ ಪ್ರಣಾಮಗಳು.
-ಕ.ವೆಂ.ನಾಗರಾಜ್.
***************************
ಪಂ. ಸುಧಾಕರ ಚತುರ್ವೇದಿಯವರ ವಿಚಾರದ ತುಣುಕುಗಳಿಗಾಗಿ ಇಲ್ಲಿ ನೋಡಿ:
1. ವಿಚಾರ ಮಾಡೋಣ: http://vedajeevana.blogspot.in/2011/03/blog-post.html
2. ಕೆಲವು ಮಾಹಿತಿಗಳು: http://vedajeevana.blogspot.in/2011/04/blog-post.html
3. ಬಾಳಿಗೆ ಬೆಳಕು: http://vedajeevana.blogspot.in/2011/06/blog-post_22.html
4. ವಿಚಾರ ಲಹರಿ - 1 http://vedajeevana.blogspot.in/2011/09/blog-post_14.html
5. ವಿಚಾರ ಲಹರಿ - 2 http://vedajeevana.blogspot.in/2011/09/2.html
6. ಸಂದರ್ಶನ - http://vedajeevana.blogspot.in/2011/09/blog-post_30.html
7. ಮರ್ಯಾದಾ ಪುರುಷೋತ್ತಮ ಶ್ರೀರಾಮನ ನೆನೆಯೋಣ: 
           http://vedajeevana.blogspot.in/2012/03/blog-post_23.html   
8. ವೇದೋಕ್ತ ಜೀವನ ಪಥ -ಮಾಲಿಕೆ:     
http://vedajeevana.blogspot.in/search/label/%E0%B2%B5%E0%B3%87%E0%B2%A6%E0%B3%8B%E0%B2%95%E0%B3%8D%E0%B2%A4%20%E0%B2%9C%E0%B3%80%E0%B2%B5%E0%B2%A8%20%E0%B2%AA%E0%B2%A5         

9 ಕಾಮೆಂಟ್‌ಗಳು:

  1. ಸಾರ್ಥಕ ಜೀವಿಗೆ ಸಾಸ್ಟಾಂಗ ಪ್ರಣಾಮಗಳು.[ಶ್ರೀರಾಮನ ಜನ್ಮದಿನವಾದ ೦೧-೦೪-೨೦೧೨ರಂದೇ] ರಾಮನ ಜನನ ೦೧-೦೪-೨೦೧೨ ಎಂದು ಅರ್ಥ ವಾದೀತು. ಪಂಡಿತರು ಶ್ರೀ ರಾಮ ನವಮಿಯಂದು ಜನಿಸಿರಬೇಕಲ್ಲವೇ? ಅಂದು ಏಪ್ರಿಲ್ ೧ ನೇ ದಿನಾಂಕ ಇದ್ದಿರಬೇಕು.

    ಪ್ರತ್ಯುತ್ತರಅಳಿಸಿ
  2. ಕವಿಗಳೆ ಪ೦ಡಿತರಿಗೆ ಹುಟ್ಟು ಹಬ್ಬದ ಶುಭಾಶಯಗಳು. ಅ೦ಥಹ ಮಹಾನ್ ವ್ಯಕ್ತಿಯನ್ನು ಪರಿಚಯಿಸಿಕೊಟ್ಟಿದ್ದಕ್ಕೆ ತಮಗೆ ಅನ೦ತ ಧನ್ಯವಾದಗಳು

    ಪ್ರತ್ಯುತ್ತರಅಳಿಸಿ
  3. ಕವಿಗಳೆ ಪ೦ಡಿತರಿಗೆ ಹುಟ್ಟು ಹಬ್ಬದ ಶುಭಾಶಯಗಳು. ಅ೦ಥಹ ಮಹಾನ್ ವ್ಯಕ್ತಿಯನ್ನು ಪರಿಚಯಿಸಿಕೊಟ್ಟಿದ್ದಕ್ಕೆ ತಮಗೆ ಅನ೦ತ ಧನ್ಯವಾದಗಳು

    ಪ್ರತ್ಯುತ್ತರಅಳಿಸಿ
  4. ಸತ್ಯವನ್ನು ನುಡಿಯುವ ಹಿರಿಯ ಚೈತನ್ಯಕ್ಕೆ ನಮಸ್ಕಾರ. ಅವರ ವಿಸ್ತಾರವಾದ ಜ್ಞಾನ ವೈಚಾರಿಕ ಜ್ಞಾನದ ವಿಸ್ತಾರವೆಲ್ಲವೂ ನಮ್ಮ೦ಥವರಿಗೆ ದಾರಿದೀಪವಾಗಲಿದೆ. ಅವರ ವಿಚಾರಗಳೂ ಮತ್ತು ನನ್ನ ವಿಚಾರಗಳೂ ತುಂಬಾ ಹೋಲುತ್ತವೆ. ಅದಕ್ಕಾಗೆ ನನಗೆ ಹೆಮ್ಮೆ. ಅವರಿಗೆ ನನ್ನ ಸಾಷ್ಟಾ೦ಗ ಪ್ರಣಾಮಗಳು ಮತ್ತು ಅವರಿಗೆ ನನ್ನ ಜನ್ಮದಿಂದ ಶುಭಾಶಯಗಳು.

    ಅವರ ಪರಿಚಯಕ್ಕೆ ನಿಮಗೆ ಅನಂತಾನಂತ ವಂದನೆಗಳು. ನಿಮ್ಮ ಕೃಷಿ ಶ್ಲಾಘನೀಯ.

    ಪ್ರತ್ಯುತ್ತರಅಳಿಸಿ
  5. ಆತ್ಮೀಯ ನಾಗರಾಜರೆ,
    ಪಂಡಿತ ಶತಾಯುಷಿ ಚತುರ್ವೇದಿ ಸುಧಾಕರ ಶರ್ಮರ ಸಾರ್ಥಕ 116 ವರ್ಷಗಳ ಬದುಕಿನ ಬಗ್ಗೆ ತಿಳಿಸಿದ್ದಕ್ಕೆ ನಿಮಗೆ ಕೃತಜ್ಞತೆಗಳು. ಅವರ ಜೀವನ ಮತ್ತು ಅವರ ಬದುಕಿನ ನಿಷ್ಠೆ ನಮ್ಮೆಲ್ಲರಿಗೂ ದಾರಿದೀಪ. ಅವರ ಬದುಕಿನ ಬಗ್ಗೆ ಬರೆದ ನಿಮ್ಮಲ್ಲಿ ಒಂದು ವಿನಂತಿ. ಅವರ ಜೀವನದಲ್ಲಿ ಅಳವಡಿಸಿಕೊಂಡ ಹಲವು ನಿತ್ಯ ಕರ್ಮಗಳು ಮತ್ತು ಧೀರ್ಘಾಯುಷ್ಯದ ಗುಟ್ಟು ಇವುಗಳ ಬಗ್ಗೆ ಮಾಹಿತಿ ಇದ್ದಲ್ಲಿ ಕೊಡಿ. ಇಂತಹ ಸಾಧಕರ ಜೀವನವೇ ಒಂದು ತಪಸ್ಸು, ಅದನ್ನು ತಿಳಿಯುವ ಕುತೂಹಲ.
    ಧನ್ಯವಾದಗಳು
    ಪ್ರಕಾಶ್

    ಪ್ರತ್ಯುತ್ತರಅಳಿಸಿ
  6. ಆತ್ಮೀಯ ಪ್ರಕಾಶರೇ, ನಾನು ಭಾವಿಸಿರುವಂತೆ ದೇಹ, ಮನಸ್ಸು, ಬುದ್ಧಿಗಳ ಮೇಲಿನ ಅವರ ಹಿಡಿತ ಅಸಾಧಾರಣವಾದದ್ದು. ಅದೇ ಅವರ ಮುನ್ನಡೆಯುವಿಕೆಗೆ ಕಾರಣ. ಅವರದು 'ಬದುಕೋಣ, ಸಾಯದಿರೋಣ' ಎಂಬ ಮನೋಭಾವ.

    ಪ್ರತ್ಯುತ್ತರಅಳಿಸಿ