ವೇದಜೀವನ ಬ್ಲಾಗಿಗೆ ಸ್ವಾಗತ. ಸುವಿಚಾರಗಳು ಎಲ್ಲಿಂದಲಾದರೂ ಬರಲಿ, ಯಾರಿಂದಲಾದರೂ ಬರಲಿ, ಪೂರ್ವಾಗ್ರಹ ಪೀಡಿತರಾಗದೆ ಸ್ವೀಕರಿಸೋಣ.

ಬುಧವಾರ, ಫೆಬ್ರವರಿ 20, 2013

ವೇದೋಕ್ತ ಜೀವನ ಪಥ: ದೈನಂದಿನ ಪಂಚಮಹಾಯಜ್ಞಗಳು - 4.ಅತಿಥಿಯಜ್ಞ



     ನಾಲ್ಕನೆಯದು ಅತಿಥಿಯಜ್ಞ. ಇದೂ ಮುಖ್ಯತಃ ಗೃಹಸ್ಥರಿಗೇ ಸಂಬಂಧಿಸಿದ ಯಜ್ಞ. ಯಾವ ಪೂರ್ವ ನಿಶ್ಚಯವೂ ಇಲ್ಲದೆ, ಬರುವ ದಿನದ ಅರಿವು ಇಲ್ಲದೆ, ತಾವಾಗಿ ಬಂದ ಸಂನ್ಯಾಸಿಗಳನ್ನೂ, ಸದಾಚಾರಿ ವಿದ್ವಾಂಸರನ್ನೂ, ಆತ್ಮಜರನ್ನೂ ಅದರದಿಂದ ಸ್ವಾಗತಿಸಿ, ಅವರಿಂದ ಆತ್ಮೋದ್ಧಾರಕಾರವಾದ ಉಪದೇಶಗಳನ್ನು ಪಡೆದುಕೊಂಡು, ಅವರನ್ನು ಭೋಜನಾದಿಗಳಿಂದ ಸತ್ಕರಿಸುವುದೇ ಅತಿಥಿಯಜ್ಞ. ಅತಿಥಿಯಜ್ಞದ ಮಹತ್ವವನ್ನು ವರ್ಣಿಸುತ್ತಾ ಅಥರ್ವವೇದ ಹೇಳುತ್ತದೆ:-
ಅಶಿತಾವತ್ಯಥಾವಶ್ನೀಯಾದ್ಯಜಸ್ಯ ಸಾತ್ಮತ್ವಾಯ ಯಜ್ಞಸ್ಯಾವಿಚ್ಛೇದಾಯ ತದ್ ವ್ರತಮ್ || (ಅಥರ್ವ.೯.೬.೩೮) 
     [ಅತಿಥೌ ಅಶಿತಾವತಿ] ಅತಿಥಿಯು ಊಟ ಮಾಡಿದ ಮೇಲೆ, [ಅಶ್ನೀಯಾತ್] ಗೃಹಸ್ಥನು ಊಟ ಮಾಡಬೇಕು. [ಯಜ್ಞಸ್ಯ ಸಾತ್ಮತ್ವಾಯ] ಯಜ್ಞವು ಆತ್ಮವಂತವಾಗುವಂತೆ ಮಾಡುವುದಕ್ಕಾಗಿ [ಯಜ್ಞಸ್ಯ ಆವಿಚ್ಛೇದಾಯ] ಯಜ್ಞವು ನಿರಂತರ ನಡೆಯುವಂತೆ ಮಾಡುವುದಕ್ಕಾಗಿ (ಎಂಬುದಾಗಿ ತಿಳಿಯಬೇಕು). [ತದ್ ವ್ರತಮ್] ಅದೇ ವ್ರತ.
     ಯಜ್ಞವು ಜಳ್ಳಾಗದಂತೆ, ಕೇವಲ ತಿರುಳಿಲ್ಲದ ಆಡಂಬರವಾಗದಂತೆ, ಅದು ಚೈತನ್ಯದಾಯಕವಾಗುವಂತೆ ಮಾಡಲಿಕ್ಕಾಗಿ ಮತ್ತು ಅದು ಮುರಿದು ಬೀಳದಂತೆ, ಸತತವೂ ನಡೆದು ಬರುವಂತೆ ಮಾಡುವುದಕ್ಕಾಗಿ, ಜ್ಞಾನಿಯಾದ ಸತ್ಯಮಯವಾದ ಆಧ್ಯಾತ್ಮಿಕ ಪ್ರವಚನವನ್ನು ನೀಡಬಲ್ಲ ಅತಿಥಿಯನ್ನು ಮೊದಲು ಭೋಜನಾದಿಗಳಿಂದ ಸತ್ಕರಿಸಿ, ಆಮೇಲೆ ತಾನು ಭುಂಜಿಸುವುದು ಗೃಹಸ್ಥನ ವ್ರತವಾಗಿರಬೇಕು. ಅತಿಥಿಯ ಲಕ್ಷಣವನ್ನು ಹೇಳುತ್ತಾ ಅಥರ್ವವೇದ ಹೀಗೆನ್ನುತ್ತದೆ:-
ಏಷ ವಾ ಅತಿಥಿರ್ಯಚ್ಛೋತ್ರೀಯಸ್ತಸ್ಮಾತ್ಪೂರ್ವೋ ನಾಶ್ನೀಯಾತ್ || (ಅಥರ್ವ.೯.೬.೩೭)
     [ಯತ್ ಶ್ರೋತ್ರೀಯಃ] ಯಾವನು ವೇದವೇತ್ತನಾಗಿದ್ದಾನೋ, [ಏಷ ವಾ ಅತಿಥಿಃ] ಅವನೇ ಅತಿಥಿಯು. [ತಸ್ಮಾತ್ ಏವ ಪೂರ್ವಃ] ಆತನಿಗಿಂತಲೂ ಮೊದಲಿಗನಾಗಿ, [ನ ಅಶ್ನೀಯಾತ್] ಊಟ ಮಾಡಬಾರದು. 
     ಚತುರ್ವೇದ ಪಾರಂಗತನಾದ ವಿದ್ವಾಂಸನೇ ಗೃಹಸ್ಥರಿಗೆ ಪಾರಮಾರ್ಥಿಕ - ಲೌಕಿಕ - ಜ್ಞಾನಗಳನ್ನು ಕೊಡಬಲ್ಲನು. ಧರ್ಮ, ಮನೆಮನೆಯಲ್ಲಿಯೂ ಜೀವಂತವಾಗಿ ಮೆರೆಯಬೇಕಾದರೆ, ವಿದ್ವಾನ್ ಅತಿಥಿಗಳ ಆಗಮನ ಅನಿವಾರ್ಯ. ಅತಿಥಿಸತ್ಕಾರ ಮಾಡದೆ, ತಾನೇ ಮೊದಲು ತಿನ್ನುವ ಗೃಹಸ್ಥನ ಬಗೆಗೆ ಅಥರ್ವವೇದ ಹೇಳುತ್ತದೆ:- 
ಊರ್ಜಾಂ ಚ ವಾ ಏಷ ಸ್ಫಾತಿಂ ಚ ಗೃಹಾಣಾಮಶ್ನಾತಿ ಯಃ ಪೂರ್ವೋsತಿಥೇರಶ್ನಾತಿ || (ಅಥರ್ವ.೯.೬.೩೩)
     [ಯಃ ಅತಿಥೇಃ ಪೂರ್ವಃ ಅಶ್ನಾತಿ] ಯಾವನು ಅತಿಥಿಗಿಂತ ಮೊದಲಿಗನಾಗಿ ಭುಂಜಿಸುತ್ತಾನೋ, [ಏಷ ಗೃಹಾಣಾಂ ಊರ್ಜಂ ಚ ವಾ ಸ್ಫಾತಿಂ ಚ ಅಶ್ನಾತಿ] ಅವನು ಮನೆಯ ತೇಜಸ್ಸನ್ನೂ, ಪಾರಸ್ಪರಿಕ ಪರಿಜ್ಞಾನವನ್ನೂ ನುಂಗಿಬಿಡುತ್ತಾನೆ.
ಶ್ರಿಯಂ ಚ ವಾ ಏಷ ಸಂವಿಧಂ ಚ ಗೃಹಾಣಾಮಶ್ನಾತಿ ಯಃ ಪೂರ್ವೋsತಿಥೇರಶ್ನಾತಿ || (ಅಥರ್ವ.೯.೬.೩೬)
     [ಯಃ ಅತಿಥೇಃ ಪೂರ್ವಃ ಅಶ್ನಾತಿ] ಯಾವನು ಅತಿಥಿಗಿಂತ ಮೊದಲಿಗನಾಗಿ ಭುಂಜಿಸುತ್ತಾನೋ, [ಏಷ ಗೃಹಾಣಾಂ ಶ್ರಿಯಂ ಚ ವಾ ಸಂವಿದಂ ಚ ಅಶ್ನಾತಿ] ಅವನು ಮನೆಯ ಸಂಪತ್ತನ್ನೂ, ಪಾರಸ್ಪರಿಕ ಪರಿಜ್ಞಾನವನ್ನೂ ನುಂಗಿಬಿಡುತ್ತಾನೆ. 
     ಗೃಹಸ್ಥರ ಧರ್ಮ, ಕೇವಲ ತಮ್ಮ ಹೊಟ್ಟೆ ಹೊರೆದುಕೊಳ್ಳುವುದಲ್ಲ. ಮಾನವಮಾತ್ರರ ಉತ್ಕರ್ಷಕ್ಕಾಗಿ ಸದುಪದೇಶ ಮಾಡುತ್ತಾ, ತಿರುಗುವ ಜ್ಞಾನಿಗಳಿಗೂ ಆದರ, ಸತ್ಕಾರ ಸಲ್ಲಿಸಿ, ಸಾಮಾಜಿಕ ಹಿತದಲ್ಲಿಯೂ ಭಾಗವಹಿಸಬೇಕಾದುದು ಅವರ ಕರ್ತವ್ಯ. ಅಭ್ಯಾಗತರನ್ನು ಅಂದರೆ, ಕರೆಸಿಕೊಂಡು ಬಂದವರನ್ನು ಸತ್ಕರಿಸುವುದರಲ್ಲಿ ವಿಶೇಷವೇನೂ ಇಲ್ಲ. ಅತಿಥಿಸತ್ಕಾರದಿಂದಲೇ ಗೃಹಸ್ಥರ ಹೃದಯ ವಿಶಾಲವಾಗುವುದು. ವಿದ್ವತ್ಸಂಗದಿಂದ ಅಧ್ಯಾತ್ಮಜ್ಞಾನವೂ ಬೆಳೆದುಬರುವುದು. 
-ಪಂ. ಸುಧಾಕರ ಚತುರ್ವೇದಿ.

ಗುರುವಾರ, ಫೆಬ್ರವರಿ 14, 2013

ಸಮಾನತೆ, ವಿಶ್ವಭ್ರಾತೃತ್ವ ಮತ್ತು ನಾವು



     "ನನಗೆ ಒಂದು ಕನಸು ಇದೆ. ಅದೆಂದರೆ ನನ್ನ ನಾಲ್ಕು ಮಕ್ಕಳು ಒಂದು ದಿನ ಅವರ ಬಣ್ಣಗಳಿಂದಲ್ಲದೆ ಅವರ ಗುಣಗಳಿಂದ ಗುರುತಿಸಲ್ಪಡುವ ದೇಶದಲ್ಲಿ ಬಾಳುತ್ತಾರೆ ಅನ್ನುವುದು" - ಇದು ಅಮೆರಿಕಾದ ದಿ. ಮಾರ್ಟಿನ್ ಲೂಥರ್ ಕಿಂಗ್ ರವರ ಉದ್ಗಾರ. ಇದು ಸಮಾನತೆಯನ್ನು ಬಯಸಿದ, ಅಲ್ಲಿ ಪ್ರಚಲಿತವಿದ್ದ ಕಪ್ಪು-ಬಿಳಿ ಜನಾಂಗ ದ್ವೇಷದ ವಿರುದ್ಧ ಹೋರಾಡಿದ್ದ ವ್ಯಕ್ತಿಯ ಕನಸು. ಸಮಾನತೆ ಅನ್ನುವ ಕಲ್ಪನೆ ಯಾವುದೇ ಆದರ್ಶಮಾನವನ ಗುರಿ. ಸಮಾನತೆ ಅಂದರೇನು ಅನ್ನುವುದಕ್ಕೆ ವಿವರಣೆ ನೀಡುವುದು ಕಷ್ಟವೇ ಸರಿ. ಸರಿಸಮ ಎಂಬುದು ನಿಘಂಟಿನ ಅರ್ಥ. ವ್ಯಾವಹಾರಿಕ ಜಗತ್ತಿನಲ್ಲಿ ಸಮಾನತೆಯ ಕಲ್ಪನೆಯ ಸಾಕಾರ ಹೇಗೆ ಎಂಬುದರ ಕುರಿತು ಚಿಂತಿಸಬೇಕಿದೆ. ಭಾರತದ ಸಂವಿಧಾನದಲ್ಲಿ ದೇಶದ ನಾಗರಿಕರಲ್ಲಿ ಜಾತಿ, ಮತ, ಲಿಂಗ, ಭಾಷೆ - ಇಂತಹ ಯಾವುದೇ ಕಾರಣದಿಂದ ಭೇದ ಕೂಡದು, ಎಲ್ಲರಿಗೂ ಸಮಾನವಾದ ಹಕ್ಕು ಇದೆ ಎಂದಿದೆ. ಆದರೆ ಇಲ್ಲಿ ಜಾತಿಯ ಹೆಸರಿನಲ್ಲಿ, ಮತದ ಹೆಸರಿನಲ್ಲಿ, ಲಿಂಗದ ಹೆಸರಿನಲ್ಲಿ, ಭಾಷೆಯ ಹೆಸರಿನಲ್ಲಿ ಭೇದ ಭಾವ ತಾಂಡವವಾಡುತ್ತಿರುವುದು ದುರ್ದೈವ. ಯಾರು ಈ ಸಮಾನತೆಯನ್ನು ಸಾಧಿಸಬೇಕಿದೆಯೋ ಆ ಆಳುವ ಸ್ಥಾನದಲ್ಲಿರುವ ಜನಪ್ರತಿನಿಧಿಗಳೇ ಇಂತಹ ಭೇದ ಭಾವಗಳನ್ನು ಉಳಿಸಿ, ಪೋಷಿಸಿಕೊಂಡು ಬರುತ್ತಿರುವುದು ಘೋರ ಸತ್ಯ. 
     ವ್ಯಾವಹಾರಿಕವಾಗಿ ಸಮಾನತೆ ಅನ್ನುವುದು ಹೇಳುವಷ್ಟು ಸುಲಭವಲ್ಲ. ಸಮಾನತೆಯೆಂದರೆ ಒಬ್ಬ ಹೆಸರಾಂತ ಜಟ್ಟಿ/ಕುಸ್ತಿಪಟುವನ್ನು, ಒಬ್ಬ ಬಡಕಲು ದೇಹದವನನ್ನು ಮತ್ತು ಅನಾರೋಗ್ಯಪೀಡಿತನನ್ನು ಸಮಾನ ಬಲಶಾಲಿ ಎಂದು ಒಪ್ಪಿಕೊಳ್ಳಬೇಕೆಂದು ವಾದಿಸುವುದಲ್ಲ. ಒಬ್ಬ ವಿದ್ವಾಂಸನನ್ನೂ, ಓದು ತಲೆಗೆ ಹತ್ತದವನನ್ನೂ ಮತ್ತು ಮಾನಸಿಕ ವಿಕಲ್ಪನನ್ನು ಸಮಾನ ಜ್ಞಾನಿಗಳೆಂದು ಪರಿಗಣಿಸುವುದಲ್ಲ. ಜಾತಿಯ ಆಧಾರದಲ್ಲಿ ಒಬ್ಬರು ಶೇ. 50ರಷ್ಟು ಅಂಕ ಪಡೆದವರೂ, ಶೇ. 60 ಅಂಕ ಪಡೆದ ಇತರರಿಗೆ ಸಮ ಎಂದು ಪರಿಗಣಿಸುವುದರಲ್ಲಿ ಸಮಾನತೆ ಬರುವುದಿಲ್ಲ. 100  ಮೀಟರ್ ದೂರದ ಓಟದ ಸ್ಪರ್ಧೆಯಲ್ಲಿ 100 ಮೀ. ಓಡಿದವನನ್ನೂ, 80-90 ಮೀ. ಓಡಿದವರನ್ನೂ ಸಮರೆಂದು ಪರಿಗಣಿಸುವುದಲ್ಲ. ಬದಲಾಗಿ ಅಶಕ್ತರು, ಹಿಂದುಳಿದವರು ಎಂದು ಪರಿಗಣಿಸಲ್ಪಟ್ಟವರಿಗೆ ಅಗತ್ಯದ ಎಲ್ಲಾ ಅನುಕೂಲ, ಸೌಲಭ್ಯಗಳನ್ನು ಕಲ್ಪಿಸಿ ಅವರು ಮುಂದೆ ಬರಲು ಅವಕಾಶ ಕಲ್ಪಿಸುವುದರಲ್ಲಿ ಸಮಾನತೆ ಕಾಣಬೇಕು. ಎಲ್ಲರೂ ಒಂದೇ ಎತ್ತರದವರಾಗಬೇಕೆಂದು ಕೆಲವರ ತಲೆ, ಕಾಲುಗಳನ್ನು ಕತ್ತರಿಸುವುದು ಸಮಾನತೆಯಾಗಲಾರದು. ಅದು ಪ್ರಗತಿಯ ಲಕ್ಷಣವಲ್ಲ. ಸಮಾನತೆಯೆಂದರೆ ವಿವಿಧ ವಿಷಯಗಳನ್ನೆಲ್ಲಾ ಸಮಾನ ರೀತಿಯಲ್ಲಿ ನೋಡುವುದಲ್ಲ, ವಿವಿಧ ವಿಷಯಗಳನ್ನು ವಿವಿಧ ದೃಷ್ಟಿಯಿಂದ ನೋಡುವುದು. ಸಮಾನ ಅವಕಾಶಗಳಿಂದ ಯಾರೂ ವಂಚಿತರಾಗದೆ ಇರುವಂತೆ ನೋಡಿಕೊಳ್ಳುವುದರಲ್ಲಿ ಸಮಾನತೆಯಿದೆ. ಈ ಜಗತ್ತಿನಲ್ಲಿ ಎಲ್ಲಾ ರೀತಿಯ ಜನರಿರುತ್ತಾರೆ. ಎಲ್ಲರೂ ಒಂದೇ ರೀತಿಯಲ್ಲಿ ಇರಲು, ಅಂದರೆ ಆರೋಗ್ಯವಂತರಾಗಿರಲು, ಬಲಶಾಲಿಗಳಾಗಿರಲು, ಜ್ಞಾನಿಗಳಾಗಿರಲು, ಅಂಗವೈಕಲ್ಯತೆಯಿಲ್ಲದಿರಲು, ಒಂದೇ ಜಾತಿ/ಧರ್ಮದವರಾಗಿರಲು, ಒಂದೇ ವಿಚಾರ ಹೊಂದಿದವರೂ ಆಗಲು -ನಾವು, ನೀವು ಇಷ್ಟಪಟ್ಟರೂ- ಸಾಧ್ಯವಿದೆಯೇ? ಹೀಗಿರುವಾಗ ನಿಜವಾದ ಸಮಾನತೆಯೆಂದರೆ, ವ್ಯವಹರಿಸುವಾಗ ಪಕ್ಷಪಾತ, ದುರಾಗ್ರಹ, ಅಭಿಮಾನಗಳಿಗೆ ಅವಕಾಶ ಕೊಡದೆ ಪ್ರತಿಯೊಬ್ಬರೂ ತಾವು ಇಷ್ಟಪಡುವ, ಇರಬಯಸುವ ರೀತಿಯಲ್ಲಿ ಬಾಳಲು, ಬದುಕಲು ಸಹಕರಿಸುವುದು ಅನ್ನಬಹುದಷ್ಟೆ. ದೇವರ ಮುಂದೆ ಎಲ್ಲರೂ ಸಮಾನರು ಎಂಬುದನ್ನು ಅರಿಯಬೇಕಿದೆ. ಇಲ್ಲಿ ದೇವರು ಎಂಬ ಪದವನ್ನು ಯಾವುದೇ ಜಾತಿ/ಮತಗಳವರ ದೇವರು ಎಂಬರ್ಥದಲ್ಲಿ ಬಳಸಿಲ್ಲ. ಜಾತಿಗೊಬ್ಬ ದೇವರು, ಮತಕ್ಕೊಬ್ಬ ದೇವರು ಎನ್ನುವುದು, ಅವರ ದೇವರನ್ನು ಇವರು, ಇವರ ದೇವರನ್ನು ಅವರು ನಿಂದಿಸುವ ಮನೋಭಾವಗಳು ಮಾನವನ ಸಂಕುಚಿತ ಭಾವನೆಯನ್ನು ತೋರಿಸುತ್ತದೆ. ಈ ರೀತಿಯ ತಾರತಮ್ಯವೆಸಗದ ಮನೋಭಾವನೆ ಬೆಳೆಸಿಕೊಂಡವರು ಮಾತ್ರ ಕೇವಲ ಮಾನವರಲ್ಲಿ ಮಾತ್ರವಲ್ಲ ಜಗತ್ತಿನ ಎಲ್ಲಾ ಜೀವಿಗಳ ಕುರಿತು ಅಕ್ಕರೆ, ಅಕರಾಸ್ತೆ ಹೊಂದುತ್ತಾರೆ. ಪ್ರಪಂಚದಲ್ಲಿ ಒಂದೇ ಒಂದು ವಿಚಾರದಲ್ಲಿ ಮಾತ್ರ ಸಮಾನತೆಯಿದೆ. ಎಲ್ಲರೂ ಕೊನೆಗೆ ಸಾಯುತ್ತಾರೆ ಅನ್ನುವುದೇ ಆ ಸಮಾನತೆ. ಸಾವಿನಲ್ಲಿ ಮಾತ್ರ ಎಲ್ಲರೂ ಸಮಾನರು.
     ಆರ್ಥಿಕ ಸಮಾನತೆಯನ್ನೂ ಸಹ ವ್ಯಾವಹಾರಿಕವಾಗಿ ಉಳಿಸಿಕೊಂಡು ಬರುವುದು ದುಸ್ಸಾಧ್ಯ. ಒಂದು ಸಣ್ಣ ಕಾಲ್ಪನಿಕ ಉದಾಹರಣೆ ನೋಡೋಣ. ಒಂದು ಹಳ್ಳಿಯಲ್ಲಿ ಒಂದು ನೂರು ಕುಟುಂಬಗಳಿದ್ದು, ಅದರಲ್ಲಿ 30 ಕುಟುಂಬಗಳು ಶ್ರೀಮಂತ, 40 ಕುಟುಂಬಗಳು ಮಧ್ಯಮ ಮತ್ತು 40 ಕುಟುಂಬಗಳು ಬಡ ಕುಟುಂಬಗಳೆಂದು ಭಾವಿಸೋಣ. ಅವರಲ್ಲಿನ ಎಲ್ಲಾ ಆಸ್ತಿ-ಪಾಸ್ತಿಗಳನ್ನು ವಶಪಡಿಸಿಕೊಂಡು ಬಂದ ಹಣವನ್ನು -ಕುಟುಂಬಕ್ಕೆ ತಲಾ 15 ಲಕ್ಷ ರೂ. ಎಂದುಕೊಳ್ಳೋಣ- ಎಲ್ಲಾ ಕುಟುಂಬಗಳವರಿಗೆ ಹಂಚಲಾಯಿತು ಎಂದುಕೊಳ್ಳೋಣ. ಐದು ವರ್ಷಗಳು ಕಳೆದ ನಂತರ ಸಮೀಕ್ಷೆ ನಡೆಸಿದರೆ ಆ ಹಳ್ಳಿಯಲ್ಲಿ ಶ್ರೀಮಂತ, ಮಧ್ಯಮ ಮತ್ತು ಬಡ ಕುಟುಂಬಗಳ ಸಂಖ್ಯೆಯಲ್ಲಿ ಗಣನೀಯವಾಗಿ ಹೆಚ್ಚು-ಕಡಿಮೆ ಕಂಡುಬರಲಾರದು. ಇದಕ್ಕೆ ಮೂಲಕಾರಣ ಜನರ ಮನೋಭಾವ ಎನ್ನುವುದನ್ನು ತಿಳಿಯಲು ಕಷ್ಟವೇನಲ್ಲ. ಬುದ್ಧಿ ಮತ್ತು ಶ್ರಮ ಉಪಯೋಗಿಸಿಕೊಂಡವರು ಮತ್ತು ಹಣವನ್ನು ಸೂಕ್ತ ರೀತಿ ಉಪಯೋಗಿಸಿಕೊಂಡವರು ಶ್ರೀಮಂತರಾಗುತ್ತಾರೆ, ಅಲ್ಪ ಬುದ್ಧಿ, ಅಲ್ಪ ಶ್ರಮಪಡುವವರು ಮಧ್ಯಮವರ್ಗದವರಾಗುತ್ತಾರೆ. ದುಶ್ಚಟಗಳಿಗೆ ದಾಸರಾದವರು, ಸೋಮಾರಿಗಳು, ಹಣವನ್ನು ಸೂಕ್ತ ರೀತಿಯಲ್ಲಿ ಬಳಸಲು ಬರದವರು ತಮ್ಮ ಹಣವನ್ನು ಪೋಲು ಮಾಡಿ ಬಡವರಾಗುತ್ತಾರೆ. ಮತ್ತೆ ಸಮಾನತೆಯ ಕೂಗು ಬಂದರೆ ಪುನಃ ಎಲ್ಲರ ಹಣವನ್ನು ಕಸಿದು ಸಮಾನವಾಗಿ ಹಂಚಬೇಕೆ? ಇಲ್ಲಿ ಅಗತ್ಯವಿರುವುದು ಜನರನ್ನು ಶ್ರಮಜೀವಿಗಳಾಗಿಸುವುದಕ್ಕೆ, ದುಶ್ಚಟಗಳಿಂದ ದೂರವಿರಿಸುವುದಕ್ಕೆ ಬೇಕಾದ ಜ್ಞಾನದ ತಿಳಿವನ್ನು ಮೂಡಿಸುವುದಕ್ಕೆ, ಬದುಕನ್ನು ಒಳ್ಳೆಯ ರೀತಿಯಲ್ಲಿ ನಡೆಸಿ ಮುಂದೆ ಬರಲು ಸಹಕರಿಸುವುದಕ್ಕೆ ಅಷ್ಟೆ. ಕೊಟ್ಟ ಸೌಲಭ್ಯಗಳನ್ನು ಸರಿಯಾಗಿ ಉಪಯೋಗಪಡಿಸಿಕೊಳ್ಳುವವರಿಗೆ ಮಾತ್ರ ಸೌಲಭ್ಯ ನೀಡಿದರೆ ಮಾತ್ರ ಪ್ರಯೋಜನವಾದೀತು. ಇಲ್ಲದಿದ್ದರೆ ಅದು ಅಪಾತ್ರದಾನವಾಗುವುದು.
     ಎಲ್ಲರೂ ಎಲ್ಲಾ ವಿಷಯಗಳಲ್ಲಿ ಪ್ರವೀಣರಾಗಿರುವುದಿಲ್ಲ. ಆದ್ದರಿಂದ ಎಲ್ಲರೂ ಎಲ್ಲಾ ಕೆಲಸಗಳನ್ನು ಮಾಡಲಾರರು. ಯಾರು ಯಾವ ವಿಷಯದಲ್ಲಿ ಪ್ರವೀಣರಾಗಿರುತ್ತಾರೋ ಆ ಕ್ಷೇತ್ರದಲ್ಲಿ ಬದುಕು ಕಾಣಬಲ್ಲರು. ಹೀಗಾಗಿ ಕೆಲವರು ಬೌದ್ಧಿಕ ಕ್ಷೇತ್ರ, ಕೆಲವರು ವಾಣಿಜ್ಯ ಕ್ಷೇತ್ರ, ಆಡಳಿತಾತ್ಮಕ ಕ್ಷೇತ್ರ, ಶಾರೀರಿಕ ಶ್ರಮದ ಕ್ಷೇತ್ರಗಳಲ್ಲಿ ತೊಡಗಿಕೊಂಡು ಜೀವನದ ದಾರಿ ಕಾಣುತ್ತಾರೆ. ನಿಜ ಸಮಾನತೆಯೆಂದರೆ ಈ ಎಲ್ಲಾ ಕೆಲಸಗಳಲ್ಲಿ ಉಚ್ಛ-ನೀಚ ಭಾವನೆಗಳಿಗೆ ಅವಕಾಶ ಕೊಡದಿರುವುದು. ವಾಸ್ತವವಾಗಿ ನೋಡಿದರೆ ಯಾವ ಒಂದು ವಿಭಾಗವೂ ಚಿಕ್ಕದಲ್ಲ ಅಥವ ದೊಡ್ಡದಲ್ಲ. ಸಮಾಜದ ಅಸ್ತಿತ್ವಕ್ಕೆ ಈ ಎಲ್ಲವೂ ಇರಲೇಬೇಕು. ಯಾವುದೊಂದು ಇಲ್ಲದಿದ್ದರೂ ಆ ಸಮಾಜ ಅಂಗವಿಕಲವಾಗುತ್ತದೆ. ಈ ಕೆಲಸಗಳು ಸಂಬಂಧಿಸಿದ ವ್ಯಕ್ತಿಗಳ ಶಕ್ತಿ, ಸಾಮರ್ಥ್ಯವನ್ನು, ಒಲವನ್ನೂ ಅವಲಂಬಿಸಿದವಾದ್ದರಿಂದ ಅವರುಗಳ ಆ ಕೆಲಸಗಳಿಗೆ ಮನ್ನಣೆ ನೀಡುವ ಮನೋಭಾವ ಬಂದಲ್ಲಿ ಅದು ಸಮಾನತೆಯೆನಿಸೀತು.
     ವಿಶ್ವಮಾನವ ಕಲ್ಪನೆ, ವಿಶ್ವಭ್ರಾತೃತ್ವ ಅನ್ನುವುದನ್ನೂ ಪರಸ್ಪರರಲ್ಲಿ ಸೋದರತೆ, ಸಮಾನತೆಗೆ ಪರ್ಯಾಯವಾಗಿ ಬಳಸುವುದನ್ನು ಕಂಡಿದ್ದೇವೆ. ಪ್ರಪಂಚದಲ್ಲಿ 196 ದೇಶಗಳಿವೆಯೆಂದು ಗುರುತಿಸುತ್ತಾರೆ. ಎಷ್ಟೋ ದೇಶಗಳ ಹೆಸರುಗಳೇ ನಮಗೆ ಗೊತ್ತಿಲ್ಲ. ವಿಶ್ವಭ್ರಾತೃತ್ವ ಸಾಧ್ಯವಿದ್ದರೆ ಈ ದೇಶಗಳ ಸಂಖ್ಯೆ ಕಡಿಮೆಯಿರುತ್ತಿತ್ತು ಅಥವ ವಿವಿಧ ದೇಶಗಳ ನಡುವೆ ಸ್ನೇಹಭಾವವಿರುತ್ತಿತ್ತು. ಈಗಲಾದರೋ ದೇಶಗಳು ಒಡೆಯುತ್ತಿವೆ, ಆಕ್ರಮಣಕ್ಕೆ ಒಳಗಾಗುತ್ತವೆ, ಗಡಿರೇಖೆಗಳು ಬದಲಾಗುತ್ತವೆ. ಪ್ರಪಂಚವೇ ಒಂದು ಕುಟುಂಬ ಎಂಬ ವೇದವಾಣಿಯ ಸಾಕಾರಕ್ಕೆ ಪೂರಕ ವಾತಾವರಣವಿದೆಯೇ? ಈ 196 ದೇಶಗಳ ಪೈಕಿ 49 ದೇಶಗಳು ಮುಸ್ಲಿಮರು ಬಹುಸಂಖ್ಯಾತರಾಗಿರುವ ದೇಶಗಳಾಗಿವೆ, ಕೆಲವು ಇಸ್ಲಾಮಿಕ್ ದೇಶಗಳೆಂದೇ-ಪಾಕಿಸ್ತಾನವೂ ಸೇರಿ- ಘೋಷಿಸಲ್ಪಟ್ಟ ದೇಶಗಳಾಗಿವೆ. 120 ದೇಶಗಳು ಕ್ರಿಶ್ಚಿಯನ್ ದೇಶಗಳೆಂದು ಗುರುತಿಸಲ್ಪಡುತ್ತವೆ. ಒಂದು ಅಂದಾಜಿನ ಪ್ರಕಾರ ಮತ/ಧರ್ಮದ ಅನುಸಾರ ಪ್ರಪಂಚದ ಜನಸಂಖ್ಯೆ ಸುಮಾರು ಹೀಗಿದೆ:
1. ಕ್ರಿಶ್ಚಿಯನ್ - 2 ಬಿಲಿಯನ್.
2. ಇಸ್ಲಾಮ್ -  1.3 ಬಿಲಿಯನ್,
3. ಹಿಂದೂ -  900 ಮಿಲಿಯನ್,
4. ಇತರರು -  850 ಮಿಲಿಯನ್,
5. ಬೌದ್ಧ -   360 ಮಿಲಿಯನ್,
6. ಚೀನಾ ಮೂಲವಾಸಿ - 225 ಮಿಲಿಯನ್,
7. ಆದಿವಾಸಿ ಪದ್ಧತಿ -   95 ಮಿಲಿಯನ್. 
8. ಯಹೂದ್ಯರು -     19 ಮಿಲಿಯನ್.

     ವಸ್ತುಸ್ಥಿತಿಯಂತೆ ವಿಶ್ಲೇಷಣೆ ಮಾಡಿದರೆ ಮತ/ಧರ್ಮಗಳೂ ಸಮಾನತೆಯ ಶತ್ರುಗಳಾಗಿ ಪರಿಣಮಿಸಿರುವುದು ಗೋಚರವಾಗದಿರದು. ಎಲ್ಲಿ ಪರಧರ್ಮ ಸಹಿಷ್ಣುತೆ ಇರುತ್ತದೋ ಅಲ್ಲಿ ಸಮಾನತೆಯ ಕನಸು ಕಾಣಬಹುದು. ಕೋಟ್ಯಂತರ ವರ್ಷಗಳಿಂದ ಅಸ್ತಿತ್ವದಲ್ಲಿರುವ ಈ ಪ್ರಪಂಚದಲ್ಲಿ ಕೇವಲ ಸುಮಾರು 2013ವರ್ಷಗಳ ಹಿಂದೆ ಪ್ರಾರಂಭವಾದ ಕ್ರಿಶ್ಚಿಯನ್ ಮತವನ್ನು ಇಂದು ಪ್ರಪಂಚದ ಅತಿ ಹೆಚ್ಚು ಸಂಖ್ಯೆಯ ಜನರು ಅನುಸರಿಸುತ್ತಿದ್ದಾರೆ. ಸುಮಾರು 1400 ವರ್ಷಗಳ ಹಿಂದೆ ಜನಿಸಿದ ಇಸ್ಲಾಮ್ ಮತಾನುಯಾಯಿಗಳು ಎರಡನೆಯ ಸ್ಥಾನದಲ್ಲಿದ್ದಾರೆ. ಇಷ್ಟೊಂದು ಕ್ಷಿಪ್ರ ಪ್ರಗತಿಯ ಹಿಂದೆ ತಮ್ಮ ತಮ್ಮ ಧರ್ಮಗಳನ್ನು ಅಗ್ರಣಿಗಳಾಗಿಸಲು ನಡೆದ ಪ್ರಯತ್ನಗಳದು ಸಿಂಹಪಾಲೆಂದರೆ ತಪ್ಪಾಗಲಾರದು. ಆಸೆ, ಆಮಿಷ, ಅನಿವಾರ್ಯತೆ, ಬಡತನ ಮತ್ತು ಅಜ್ಞಾನಗಳ ದುರುಪಯೋಗ, ಕುಟಿಲೋಪಾಯಗಳು, ದುರ್ಮಾರ್ಗಗಳು, ಬಲಪ್ರಯೋಗಗಳಿಂದ ಮಾಡಲಾದ ಮತಾಂತರಗಳ ಕೊಡುಗೆಯೂ ಇದರಲ್ಲಿದೆ. ಪ್ರಪಂಚವನ್ನೇ ಕ್ರಿಶ್ಚಿಯನ್/ಮುಸ್ಲಿಮ್ ಬಹುಸಂಖ್ಯಾತರನ್ನಾಗಿಸಲು ಪ್ರಯತ್ನಗಳು ಎಡೆಬಿಡದೆ ನಡೆಯುತ್ತಿದ್ದು, ಇದಕ್ಕಾಗಿ ಯುದ್ಧಗಳು ಸಂಭವಿಸಿವೆ, ಸಂಭವಿಸಲಿವೆ. ಆರೋಗ್ಯಕರ ಪೈಪೋಟಿ ಮಾನವನ ಅಭಿವೃದ್ಧಿಗೆ ಪೂರಕ. ಅನಾರೋಗ್ಯಕರ ಪೈಪೋಟಿ ಮಾನವನಿಗೆ ಮಾರಕ. ಪೈಪೋಟಿ ಹೀಗೆಯೇ ಮುಂದುವರೆದಲ್ಲಿ ಮುಂದಿನ ದಿನಗಳಲ್ಲಿ ಕ್ರಿಶ್ಚಿಯನ್ ಮತ್ತು ಮುಸ್ಲಿಮ್ ರಾಷ್ಟ್ರಗಳ ನಡುವೆ ಯುದ್ಧಗಳು -ನೇರ ಮತ್ತು ಪರೋಕ್ಷ-  ನಡೆಯುವ ಸಾಧ್ಯತೆಗಳನ್ನು ತಳ್ಳಿಹಾಕಲಾಗದು. ಧರ್ಮ/ಮತದ ಹೆಸರಿನಲ್ಲಿ ವೈಚಾರಿಕ ಮನೋಭಾವ. ಚಿಂತನೆಗಳಿಗೆ ಇರುವ ಅವಕಾಶಗಳಿಗೆ ಬೇಡಿ ತೊಡಿಸಲಾಗಿದೆ. ಹಾಗೆಯೇ, ಅಭಿವ್ಯಕ್ತಿ ಸ್ವಾತಂತ್ರ್ಯದ ಮುಸುಕಿನಲ್ಲಿ ವಿರೋಧಿ ಮತ/ಧರ್ಮಗಳವರನ್ನು ನಿಂದಿಸುವವರೂ ಇದ್ದಾರೆ. ಯಾರಿಗೆ ಯಾವ ಧರ್ಮ ಇಷ್ಟವೋ ಅದನ್ನು ಅನುಸರಿಸಲು ಅವಕಾಶ ಕೊಟ್ಟರೆ, ಮತಾಂತರಕ್ಕೆ ಪ್ರೋತ್ಸಾಹ ಸಿಗದಿದ್ದರೆ, ಪ್ರಲೋಭನೆ ಒಡ್ಡದಿದ್ದರೆ ಸಮಾನತೆಯ, ವಿಶ್ವಭ್ರಾತೃತ್ವದ ಕನಸು ಕಾಣಲು ಅವಕಾಶವಿದೆ. ಈ ವಾತಾವರಣ ಬರಬಹುದೆಂದು ನಿರೀಕ್ಷಿಸಲಾದೀತೆ?
     ಪ್ರಪಂಚದಲ್ಲಿ 6000-7000 ಭಾಷೆಗಳು ಇವೆಯೆನ್ನಲಾಗಿದೆ. ಜನಸಂಖ್ಯಾವಾರು ಲೆಕ್ಕ ಹಾಕಿದರೆ, 2009ರ ಅಂಕಿ ಅಂಶಗಳಂತೆ ಚೈನೀಸ್ ಭಾಷೆಯನ್ನು 1213 ಮಿಲಿಯನ್ ಜನರು ಮಾತನಾಡುತ್ತಿದ್ದು ಪ್ರಥಮ ಸ್ಥಾನದಲ್ಲಿ ಬರುತ್ತದೆ. ಅನುಕ್ರಮವಾಗಿ2,3 ಮತ್ತು 4ನೆಯ ಸ್ಥಾನಗಳಲ್ಲಿ 329 ಮಿಲಿಯನ್ ಜನ ಮಾತನಾಡುವ ಸ್ಪಾನಿಷ್, 328 ಮಿಲಿಯನ್ ಜನರು ಮಾತನಾಡುವ ಇಂಗ್ಲಿಷ್ ಮತ್ತು 229 ಮಿಲಿಯನ್ ಜನರು ಮಾತನಾಡುವ ಅರೇಬಿಕ್ ಭಾಷೆಗಳು ಬರುತ್ತವೆ. 182 ಮಿಲಿಯನ್ ಜನರು ಮಾತನಾಡುವ ಹಿಂದಿ 5ನೆಯ ಸ್ಥಾನದಲ್ಲಿದೆ. ಭಾರತ ದೇಶವೊಂದರಲ್ಲೇ 1652 ವಿವಿಧ ಭಾಷೆಗಳನ್ನು ಮಾತನಾಡುವ ಜನರಿದ್ದಾರೆ. ಬ್ರಿಟಿಷರ ಬಳುವಳಿಯಾಗಿ ಭಾರತಕ್ಕೆ ಬಂದ ಇಂಗ್ಲಿಷನ್ನು 1965ರವರೆಗೆ ಮಾತ್ರ ಉಳಿಸಿಕೊಳ್ಳಲು ಸಂವಿಧಾನದಲ್ಲಿ ನಿರ್ಧರಿಸಲಾಗಿತ್ತು. ಆದರೆ ಹಿಂದಿಯನ್ನು ರಾಷ್ಟ್ರಭಾಷೆಯಾಗಿ ಮಾಡುವ ವಿಚಾರದಲ್ಲಿ ದಕ್ಷಿಣ ಭಾರತದಲ್ಲಿ ಉಗ್ರ ಚಳುವಳಿಗಳು ನಡೆದು ವಿಷಯ ತಣ್ಣಗಾಯಿತು. ಪ್ರಾದೇಶಿಕ ಭಾಷೆಗಳ ಜೊತೆಗೆ ಇಂಗ್ಲಿಷಿನ ಬದಲಿಗೆ ಹಿಂದಿಯನ್ನು ಒಪ್ಪಿಕೊಂಡಿದ್ದರೆ, ಇಂದು ಹಿಂದಿ ಮಾತನಾಡುವವರ ಸಂಖ್ಯೆ ಪ್ರಪಂಚದಲ್ಲಿ ಎರಡನೆಯ ಸ್ಥಾನದಲ್ಲಿರುತ್ತಿತ್ತು. ಈ ಅಂಕಿ ಅಂಶಗಳನ್ನು ಸಾಂದರ್ಭಿಕವಾಗಿ ಹೇಳಿದ್ದಷ್ಟೆ ಹೊರತು ಮುಖ್ಯ ವಿಷಯಕ್ಕೆ ಬರುತ್ತೇನೆ. ಸ್ವಭಾಷಾ ಪ್ರೇಮಕ್ಕಿಂತ ಇತರ ಭಾಷಾದ್ವೇಶ ಸಹ ಸೋದರತೆಯ ಭಾವನೆಗೆ ಕೊಡಲಿ ಪೆಟ್ಟು ಹಾಕಿದೆ. ಹಿಂದಿ ಭಾಷೆಯ ಮೇಲಿನ ದ್ವೇಶ ಗುಲಾಮಗಿರಿಯ ಬಳುವಳಿಯಾದ ಇಂಗ್ಲಿಷನ್ನು ಅನಿವಾರ್ಯವನ್ನಾಗಿ ಉಳಿಸಿತು. ಇಂಗ್ಲಿಷ್ ಇಲ್ಲದೆ ಬೆಳವಣಿಗೆ, ಪ್ರಗತಿ ಅಸಾಧ್ಯ ಅನ್ನುವುದು ಸರಿಯಲ್ಲ ಅನ್ನುವುದನ್ನು ಪ್ರಪಂಚದ ಭಾಷಾ ಅಂಕಿ ಸಂಖ್ಯೆಗಳು ಸಾರಿವೆ. ಭಾಷಾವಾರು ರಾಜ್ಯಗಳ ರಚನೆ ಸಹ ದೇಶದ ಸಮಗ್ರತೆಗೆ ಧಕ್ಕೆ ತರುತ್ತಿದೆಯೇನೋ ಎಂದು ಅನ್ನಿಸುತ್ತಿದೆ. ಭಾಷೆಯ ಹೆಸರಿನಲ್ಲಿ ಅಕ್ಕ ಪಕ್ಕದ ರಾಜ್ಯಗಳ ನಡುವೆ ಹಿಂಸಾತ್ಮಕ ಗಲಭೆಗಳಾಗಿವೆ, ಆಗುತ್ತಿವೆ. ನಮ್ಮ ಭಾಷೆಯೇ ಹೆಚ್ಚು ಎಂಬ ವಾದ ವಿವಾದಗಳು ಮಾನವರ ನಡುವೆ ಕಂದಕ ಉಂಟು ಮಾಡುತ್ತಿವೆ. ನಮ್ಮ ನಮ್ಮ ಭಾಷೆಗಳನ್ನು ಪ್ರೀತಿಸೋಣ, ಉಳಿಸೋಣ, ಬೆಳೆಸೋಣ; ಇತರ ಭಾಷೆಗಳನ್ನು ದ್ವೇಷಿಸದಿರೋಣ ಎಂಬ ಭಾವನೆ ಬರುವುದು ಸಾಧ್ಯವಾದಾಗ ಮಾತ್ರ ಸೋದರತೆ, ಸಮಾನತೆಗಳ ಮಾತನ್ನಾಡಲು ನಮಗೆ ಹಕ್ಕಿರುತ್ತದೆ. 
     ಸಮಾನತೆಯ ಇನ್ನೊಂದು ಘೋರ ಶತ್ರು ಲಿಂಗ ತಾರತಮ್ಯ. ಕೇವಲ ನಮ್ಮ ಸುತ್ತಲಿನ ಸಂಗತಿಗಳ ಬಗ್ಗೆ ಮಾತ್ರ ನೋಡದೆ ಪ್ರಪಂಚದ ಎಲ್ಲೆಡೆ ಗಮನ ಹರಿಸಿದರೆ ಈ ತಾರತಮ್ಯದ ಪರಿಣಾಮ ಎಷ್ಟು ಅಸಹನೀಯ ಎಂಬುದು ಬಹುಷಃ ಅನುಭವಿಸಿದವರಿಗಷ್ಟೇ ತಿಳಿದೀತು. ಹುಟ್ಟಿದ ಮಗು ಹೆಣ್ಣು ಎಂದು ತಿಳಿದ ಸಮಯದಿಂದ ತಾರತಮ್ಯ ಪ್ರಾರಂಭವಾಗುತ್ತದೆ. ಹೆಣ್ಣಿನ ಶೋಷಣೆ ಮಾಡುವುದರಲ್ಲಿ ಹೆಣ್ಣೂ ಸಹ ಪ್ರಧಾನ ಪಾತ್ರ ವಹಿಸುತ್ತದೆ ಎಂಬುದನ್ನೂ ತಳ್ಳಿಹಾಕಲಾಗದು. ಜಾತಿ, ಧರ್ಮದ ಕಟ್ಟುಪಾಡುಗಳಲ್ಲಿ ಆಕೆಯನ್ನು ಕಟ್ಟಿಹಾಕಿ ಶಿಕ್ಷಣ ಪಡೆಯುವ ಹಕ್ಕಿನಿಂದಲೂ ಅವರು ವಂಚಿತರಾಗಿರುವುದು ಸುಳ್ಳಲ್ಲ. ಅವರು ಧರಿಸುವ ವಸ್ತ್ರಗಳ ಬಗ್ಗೆ ಸಹ ಮತಾಂಧರು ಕಟ್ಟುನಿಟ್ಟು ಮಾಡಿರುವುದು ತಿಳಿದ ವಿಷಯ. ತಾನು ಬುದ್ಧಿವಂತಳೆಂದು ತಿಳಿದ ಮಹಿಳೆ ಪುರುಷನಿಗೆ ಸಮನಾದ ಹಕ್ಕುಗಳಿಗೆ ಒತ್ತಾಯಿಸುತ್ತಾಳೆ, ಆದರೆ ಬುದ್ಧಿವಂತ ಮಹಿಳೆ ಸುಮ್ಮನಿರುತ್ತಾಳೆ ಎಂಬುದು ಜನಜನಿತ. ಹೆಣ್ಣು ಎಷ್ಟು ಸುರಕ್ಷಿತ ಎಂಬುದು ಈಗ ಅವರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳೇ ಸಾಕ್ಷಿ ಹೇಳುತ್ತಿವೆ. ಅನೇಕ ಕಾರಣಗಳಿಂದಾಗಿ ಲಿಂಗಸಮಾನತೆ ಸಾಧ್ಯವಿರದಿರಬಹುದು, ಆದರೆ ಸಮಾನ ಅವಕಾಶಗಳಿಂದ ಹೆಣ್ಣು ವಂಚಿತಳಾಗಬಾರದು. ಇಲ್ಲಿ ಹಿಂದಿನ ಸಂಗತಿಗಳಲ್ಲಿ ವಿಶ್ಲೇಷಿಸಿದಂತೆ ಸಮಾನತೆ ಎಂದರೆ ಸಮಾನ ಅವಕಾಶಗಳು ಎಂದು. ಸಮಾನ ಅವಕಾಶಗಳಿದ್ದು ಹೆಣ್ಣು ಎಷ್ಟು ಸಾಧನೆ ಮಾಡಲು ಸಾಧ್ಯವೋ ಮಾಡಲು ಸಾಧ್ಯವಾಗುವಂತಾಗಬೇಕು. ಈಗ ಹೇಳಿ, ಸಮಾನತೆ, ಸೋದರತೆ, ವಿಶ್ವಭ್ರಾತೃತ್ವ ಎಂದೆಲ್ಲಾ ಮಾತನಾಡಲು ಯಾರಿಗೆ ಬಾಯಿ ಬಂದೀತು?
     ಸಮಾನತೆಯ ಬಗ್ಗೆ ಮಾತನಾಡುವವರು ಒಂದು ಸಂಗತಿಯನ್ನು ನೆನಪಿನಲ್ಲಿಡಬೇಕಿದೆ. ಅದೆಂದರೆ ಯಾವುದೇ ವ್ಯಕ್ತಿ ಈಗ ತಾನು ಇರುವುದಕ್ಕಿಂತ ಮೇಲಿನ ಸ್ಥಿತಿಗೆ ತಲುಪಲು ಪ್ರಯತ್ನಿಸುತ್ತಲೇ ಇರುತ್ತಾನೆ. ಕಟು ವಾಸ್ತವವೆಂದರೆ ಮೊದಲು ನಾವು ನಮ್ಮನ್ನು ಇಷ್ಟಪಡುತ್ತೇವೆ, ನಂತರ ಬೇರೆಯವರನ್ನು! ಸಮಾನತೆಯನ್ನು ಯಾರೂ ಕೊಡುವುದಿಲ್ಲ, ನಾವು ಗಳಿಸಬೇಕು. ಬಡವ ಶ್ರೀಮಂತನಾಗಲು, ಆಟಗಾರ ಶ್ರೇಷ್ಠ ಆಟಗಾರನಾಗಲು, ಇರುವುದಕ್ಕಿಂತ ಉನ್ನತ ಅಧಿಕಾರ ಹೊಂದಲು ಬಯಸುತ್ತಲೇ ಇರುತ್ತಾರೆ. ಸಮಾನತೆಯೆಂದರೆ ಎಲ್ಲರೂ ಒಂದು ಹಂತದಲ್ಲೇ ಉಳಿದು ಸಮನಾಗಿ ಬಾಳುವುದಲ್ಲ. ಪದೇ ಪದೇ ಒತ್ತಿ ಹೇಳುತ್ತಿರುವಂತೆ ಇಲ್ಲೂ ಸಹ ಉನ್ನತ ಸ್ಥಿತಿ ತಲುಪಲು ಎಲ್ಲರಿಗೂ ಸಮಾನ ಅವಕಾಶವಿರುವಂತೆ ನೋಡಿಕೊಳ್ಳುವುದರಲ್ಲಿ ಸಮಾನತೆಯಿದೆ. ಆದರೆ ಈಗೇನಾಗುತ್ತಿದೆ? ಭ್ರಷ್ಟಾಚಾರ ಈ ಎಲ್ಲಾ ಸಮಾನ ಅವಕಾಶಗಳಿಗೆ ಕೊಕ್ಕೆ ಹಾಕಿದೆ. ಅಪಮಾರ್ಗಗಳನ್ನು ಬಳಸಿ ಮೇಲೇರುವ ಪ್ರಯತ್ನ, ಇತರರನ್ನು ಮುಂದೆ ಬರದಂತೆ ತಡೆಯುವ ಪ್ರಯತ್ನಗಳು ಮೇಲುಗೈ ಸಾಧಿಸಿವೆ. ಜನಸೇವೆಗಾಗಿ ಎಂದು ಕೈಮುಗಿದು ಅಧಿಕಾರಕ್ಕೇರುವ ನಾಯಕರು ಕೋಟಿ ಕೋಟಿ ಜನರ ಹಣ ಲೂಟಿ ಮಾಡುತ್ತಾರೆ. ಅಧಿಕಾರಕ್ಕಾಗಿ ದೇಶವನ್ನೇ ಮಾರಲು ಹಿಂದೆ ಮುಂದೆ ನೋಡದ, ಏನು ಮಾಡಲೂ ಹೇಸದವರ ಕೈಯಲ್ಲಿ ಅಧಿಕಾರ ಸಿಗುತ್ತದೆ. ಹಾಗಾದರೆ ಇದಕ್ಕೆ ಮುಕ್ತಿಯಿದೆಯೇ? ಮುಕ್ತಿಯಿದೆ, ಮಾರ್ಗವಿದೆ; ಸಮಾನತೆ, ವಿಶ್ವಭ್ರಾತೃತ್ವದ ಕನಸು ಕಾಣುವವರು ಮೊದಲು ಅದನ್ನು ತಮ್ಮಲ್ಲಿ ಅಳವಡಿಸಿಕೊಳ್ಳಬೇಕಿದೆ. ಆಗ ಇತರರಿಗೆ ಅವರು ಮಾರ್ಗದರ್ಶಿಯಾಗಬಲ್ಲರು.
     ದೇಶಪ್ರೇಮ, ಧರ್ಮಪ್ರೇಮ, ಜಾತಿಪ್ರೇಮ, ಭಾಷಾಪ್ರೇಮ ಎಲ್ಲವೂ ಒಳ್ಳೆಯದೇ. ಅಸಮಾನತೆಗೆ ದೇಶ, ಧರ್ಮ, ಜಾತಿ, ಭಾಷೆಗಳು ಕಾರಣವಲ್ಲ. ಆದರೆ ದೇಶ, ಧರ್ಮ, ಜಾತಿ, ಭಾಷೆಯ ಹೆಸರಿನಲ್ಲಿ ಅದೆಷ್ಟು ಮಾರಣಹೋಮಗಳಾಗಿವೆ! ನಿಜವಾದ ಕಾರಣ ನಿಮಗೆ ಈಗ ಗೊತ್ತಾಗಿರಬಹುದು. ಇತರ ದೇಶ/ಧರ್ಮ/ಜಾತಿ/ಭಾಷೆಗಳ ಮೇಲಿನ ದ್ವೇಷವೇ ಅದು! ಅದನ್ನು ತ್ಯಜಿಸಿದರೆ ನಾವು ವಿಶ್ವಮಾನವರೇ. ಅಸಮಾನತೆಯನ್ನು ಹೋಗಲಾಡಿಸಲು ಧರ್ಮ/ಜಾತಿಗಳು ಹುಟ್ಟಿದವು. ಆದರೆ ಮುಂದೆ ಅವೇ ಅಸಮಾನತೆಗೆ ಮೆಟ್ಟಲುಗಳಾದವು. ಸಮಾನತೆಯ ಸಾಧನೆಗೆ ಕೇವಲ ಸರ್ಕಾರವನ್ನು ನೆಚ್ಚಿ ಕುಳಿತುಕೊಳ್ಳುವಲ್ಲಿ, ಸರ್ಕಾರವನ್ನು ದೂಷಿಸುವುದರಲ್ಲಿ ಅರ್ಥವಿಲ್ಲ. ಸರ್ಕಾರ ಕೇವಲ ಸಾಧನ ಮಾತ್ರ. ಆ ಸಾಧನವನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಕೆಲಸ ಮಾಡಬೇಕಾದವರು ನಾವುಗಳೇ. ಪ್ರಗತಿ ಜೀವಂತಿಕೆಯ ಸಂಕೇತ. ಈಗ ಇರುವುದಕ್ಕಿಂತ ಮುಂದಿನ ಉತ್ತಮ ಸ್ಥಿತಿಗೆ ಮುಂದೆ ಹೋಗೋಣ. ಮುಂದೆ ಹೋದಾಗ ಹಿಂತಿರುಗಿ ನೋಡಿ, ಹಿಂದೆ ಬಿದ್ದವರನ್ನು ಮುಂದೆ ಬರಲು ಸಹಕರಿಸಿ ಕೈಹಿಡಿದು ಮುಂದೆ ತರೋಣ. ಮತ್ತೆ ಮುಂದೆ ಹೋಗೋಣ, ಮತ್ತೆ ಹಿಂದಿರುವವರನ್ನೂ ಮುಂದಕ್ಕೆ ತರೋಣ, ಮತ್ತೆ ಮುಂದೆ ಹೋಗೋಣ. ಈ ಪ್ರಕ್ರಿಯೆ ನಿರಂತರವಾಗಿರಲಿ. ಇದು ನಿಜವಾದ ಸಮಾನತೆಯ, ನಿಜವಾದ ಮಾನವತೆಯ, ನಿಜವಾದ ವಿಶ್ವಭ್ರಾತೃತ್ವದ ಕಲ್ಪನೆ. ಈ ಕಲ್ಪನೆ ಸಾಕಾರವಾಗಬೇಕಾದರೆ ಇದಕ್ಕೆ ಪೂರಕವಾದ ಜ್ಞಾನದ ಅರಿವನ್ನು ಮೂಡಿಸುವ ಕಾರ್ಯ ಮುಂದೆ ಇರುವವರದಾಗಿದೆ. ಟೀಕೆ ಮಾಡುತ್ತಾ, ಒಬ್ಬರನ್ನೊಬ್ಬರು ದೂಷಿಸುತ್ತಾ ಕಾಲಹರಣ ಮಾಡುವುದರಿಂದ ಮುಂದೆ ಬರಲಾಗುವುದಿಲ್ಲ. ಮುಂದೆ ಬರಬೇಕೆಂದರೆ ಮುಂದೆ ಹೋಗಬೇಕಷ್ಟೆ. ಸಮಾನತೆ ಬೇಕೆಂದರೆ ಹಿಂದಿರುವವರನ್ನು ಮುಂದೆ ತರಬೇಕಷ್ಟೆ, ಮುಂದಿರುವವರನ್ನು ಹಿಂದೆ ತರುವುದಲ್ಲ. ಇದಕ್ಕೆ ಬೇರೆ ಅಡ್ಡದಾರಿಗಳಿಲ್ಲ. ಯೋಚಿಸಿ; ನಾವು, ನೀವು ಕೆಲವು ವಿಷಯಗಳಲ್ಲಿ ಮುಂದಿದ್ದೇವೆ. ಏಕೆಂದರೆ ನಮಗಿಂತ ಹಿಂದೆ ಇರುವವರು ಬಹಳ ಜನರಿದ್ದಾರೆ. ಅವರನ್ನೂ ನಮ್ಮ ಜೊತೆಗೆ ಮುಂದೆ ತಂದು, ನಮಗಿಂತ ಮುಂದೆ ಇರುವವರ ಜೊತೆಗೆ ಸಮನಾಗಿ ಹೋಗುವ ಪ್ರಯತ್ನ ಎಡೆಬಿಡದೆ ಮಾಡೋಣ, ಮುನ್ನಡೆಯೋಣ.  
-ಕ.ವೆಂ.ನಾಗರಾಜ್.
*****************
ಚಿತ್ರಕೃಪೆ: ಅಂತರ್ಜಾಲದಿಂದ ಹೆಕ್ಕಿದ ಕ್ಲಿಪ್ ಕಲೆ. 

ಸೋಮವಾರ, ಫೆಬ್ರವರಿ 11, 2013

ವೇದೋಕ್ತ ಜೀವನ ಪಥ: ದೈನಂದಿನ ಪಂಚಮಹಾಯಜ್ಞಗಳು - ೩.ಪಿತೃಯಜ್ಞ


     ಇನ್ನು ಮೂರನೆಯ ಮಹಾಯಜ್ಞ - ಪಿತೃಯಜ್ಞ. ಈ ವಿಷಯದಲ್ಲಿ ಜನಸಾಮಾನ್ಯಕ್ಕೆ ಬಹಳ ಭ್ರಾಂತಿಯಿದೆ. ತೀರಿಹೋದ ತಂದೆ-ತಾಯಿಗಳಿಗೆ ಶ್ರಾದ್ದ ಮಾಡಿ, ಪಿಂಡದಾನ - ತಿಲತರ್ಪಣ ಕೊಡುವುದೇ ಪಿತೃಯಜ್ಞವೆಂಬ ಬುದ್ಧಿವಿರುದ್ದವೂ, ಅವೈದಿಕವೂ ಆದ ನಂಬಿಕೆ ಬಹುಮಂದಿಗಿದೆ. ಪ್ರತಿಯೊಬ್ಬ ಜೀವನೂ ತನ್ನ ಸತ್ಕರ್ಮ - ದುಷ್ಕರ್ಮಗಳಿಗೆ ಉತ್ತರದಾತೃ; ಪ್ರತಿಯೊಬ್ಬ ಜೀವನಿಗೂ ಅವನವನ ಕರ್ಮಾನುಸಾರ ಜನ್ಮಾಂತರದಲ್ಲಿ ಊರ್ಧ್ವಗತಿ-ಅಧೋಗತಿಗಳು ಪ್ರಾಪ್ತವಾಗುತ್ತವೆ. ಈ ವಿಷಯದ ಬಗೆಗೆ ಅನ್ಯರು ಮಾಡುವ ಯಾವ ಕರ್ಮವೂ ಭಗವಂತನ ಕರ್ಮಫಲದಾನದ ನ್ಯಾಯಸಿದ್ಧಾಂತವನ್ನು ಪರಿವರ್ತಿಸಲಾರದು. ಮೃತರಾದ ತಂದೆ-ತಾಯಿಗಳು ಪುಣ್ಯಾತ್ಮರಾಗಿದ್ದ ಪಕ್ಷದಲ್ಲಿ ಅವರ ಊರ್ಧ್ವಗತಿಗೆ ಇಲ್ಲಿ ಹಾಕುವ ಪಿಂಡ, ತಿಲತರ್ಪಣಗಳು ಅನಾವಶ್ಯಕ. ಅವರು ಪಾಪಾತ್ಮರಾಗಿದ್ದ ಪಕ್ಷದಲ್ಲಿ, ಅವರ ಅಧೋಗತಿಯನ್ನು ಇಲ್ಲಿನ ಶ್ರಾದ್ಧಕರ್ಮಗಳಿಂದ ತಪ್ಪಿಸಲು ಸಾಧ್ಯವಿಲ್ಲ. ಹೀಗೆ ಮೃತರ ಶ್ರಾದ್ಧ ಒಂದು ಅರ್ಥರಹಿತವಾದ ಆಡಂಬರ ಕ್ರಿಯೆ ಮಾತ್ರ. 
     ಶ್ರಾದ್ಧ ಎಂದರೆ, ಶ್ರದ್ಧೆಯಿಂದ ಸಲ್ಲಿಸುವ ಸೇವೆ, ತರ್ಪಣ ಎಂದರೆ ತೃಪ್ತಿ ನೀಡುವ ಕಾರ್ಯ. ಇವೆರಡೂ ಸಶರೀರರಾದ ಜೀವಂತರಾದ ಮಾತಾ-ಪಿತೃಗಳಿಗೆ ಸಲ್ಲಬೇಕಾದ ಸೇವೆಗಳೇ ಹೊರತು, ಮೃತರಿಗಲ್ಲ. ಮೃತರಿಗೆ ನಾವು ಸದ್ಗತಿಯನ್ನು ಕೊಡಲಾರೆವು. ಅವರಿಂದ ನಮಗಾದ ಉಪಕಾರಗಳನ್ನು ಸ್ಮರಿಸುವುದು; ಅವರ ಹೆಸರನ್ನು ಚಿರಸ್ಥಾಯಿಯಾಗಿ ಉಳಿಯುವಂತೆ ಯಾವುದಾದರೂ ಸತ್ಕಾರ್ಯ ಮಾಡುವುದು ತಪ್ಪಲ್ಲ. ಆದರೆ ಕರ್ಮಗತಿಯನ್ನು ಪರಿವರ್ತಿಸಬಲ್ಲೆವೆಂದು ಮಾತ್ರ ಕನಸಿನಲ್ಲಿಯೂ ಭಾವಿಸಬಾರದು.
     ಪಿತೃಯಜ್ಞ, ವೈದಿಕ ಸಿದ್ಧಾಂತಾನುಸಾರ, ಜೀವಂತ ಮಾತಾ-ಪಿತೃಗಳಿಗೆ ಮಕ್ಕಳು ಸಲ್ಲಿಸುವ ಸೇವೆ. ಗುರುಕುಲದಲ್ಲಿರುವ ಬ್ರಹ್ಮಚಾರಿಗಳಿಗೂ, ವಾನಪ್ರಸ್ಥಿಗಳಿಗೂ, ಸಂನ್ಯಾಸಿಗಳಿಗೂ ಇದು ಸಂಬಂಧಿಸುವುದಿಲ್ಲ. ಇದು ಕೇವಲ ಗೃಹಸ್ಥರಿಗೆ ಮಾತ್ರ ಸಂಬಂಧಿಸಿದ ಯಜ್ಞ. ಋಗ್ವೇದ ಹೇಳುತ್ತಲಿದೆ:-
ಸ ವಹ್ನೀ ಪುತ್ರಃ ಪಿತ್ರೋಃ ಪವಿತ್ರವಾನ್ ಪುನಾತಿ ಧೀರೋ ಭುವನಾನಿ ಮಾಯಯಾ || (ಋಕ್.೧.೧೬೦.೩)
[ಪಿತ್ರೋಃ] ಮಾತಾ-ಪಿತೃಗಳನ್ನು, ಸೇವಾಶುಶ್ರೂಷೆಗಳಿಂದ, [ವಹ್ನಿಃ] ಎತ್ತಿ ಹಿಡಿಯುವವನೇ, [ಪುತ್ರಃ] ನಿಜವಾದ ಮಗನು. [ಸ ಧೀರಃ] ಆ ಮಾತಾ-ಪಿತೃಸೇವಕನಾದ, ಬುದ್ಧಿಯಿಂದ ಪ್ರೇರಿತನಾದ ಸುಪುತ್ರನೇ, [ಮಾಯಯಾ] ತನ್ನ ಪ್ರಜ್ಞೆಯಿಂದ [ಪವಿತ್ರವಾನ್] ಪವಿತ್ರಶಕ್ತಿಯುತನಾಗಿ [ಭುವನಾನಿ ಪುನಾತಿ] ಲೋಕಗಳನ್ನು ಪವಿತ್ರಗೊಳಿಸುತ್ತಾನೆ. 
ಮಾತಾ-ಪಿತೃಗಳಿಗೆ ಭಕ್ತಿ ತೋರದ ಪುತ್ರ ಕೃತಘ್ನ. ಅವನಲ್ಲಿ ಪವಿತ್ರ ಭಾವನೆಗಳೇ ಉದಿಸವು. ಇನ್ನು ಅವನು ಜಗತ್ತನ್ನು ಪಾವನಗೊಳಿಸುವುದಾದರೂ ಹೇಗೆ?
     ಗೃಹಸ್ಥ-ಗೃಹಿಣಿಯರು, ಮನೆಯಲ್ಲಿರುವ ತಂದೆ-ತಾಯಿಗಳನ್ನು ತ್ರಿಕರಣಶುದ್ಧಿ ಪೂರ್ವಕವಾಗಿ ಉಪಚರಿಸಬೇಕು. ಅವರ ಮನಸ್ಸಿಗೆ ನೋವಾಗದಂತೆ, ಶರೀರಗಳಿಗೆ ಕಷ್ಟವಾಗದಂತೆ ನೋಡಿಕೊಳ್ಳಬೇಕು. ಪಾರಿವಾರಿಕ ಜೀವನವನ್ನು ಸುಖಮಯವಾಗಿ ಮಾಡಲು, ಅಥರ್ವವೇದ ಕೊಡುವ ಈ ಆದೇಶಗಳನ್ನು ನೆನಪಿನಲ್ಲಿಡಬೇಕಾದುದು ಆವಶ್ಯಕ.
ಅನುವ್ರತಃ ವಿತುಃ ಪುತ್ರೋ ಮಾತ್ರಾ ಭವತು ಸಂಮನಾ | 
ಜಾಯಾ ಪತ್ಯೇ ಮಧುಮತೀಂ ವಾಚಂ ವದತು ಶಂತಿವಾಮ್ || (ಅಥರ್ವ.೩.೩೦.೨)
     [ಪುತ್ರಃ] ಮಗನು, [ಪಿತುಃ ಅನುವ್ರತಃ] ತಂದೆಗೆ ಅನುಕೂಲವಾದ ಸಂಕಲ್ಪವುಳ್ಳವನೂ, [ಮಾತ್ರಾ] ತಾಯಿಯೊಂದಿಗೆ [ಸಮ್ಮನಾಃ] ಸಮಾನ ಚಿತ್ತನೂ, [ಭವತು] ಆಗಿರಲಿ. [ಜಾಯಾ] ಪತ್ನಿಯು [ಪತ್ಯೇ] ಪತಿಗೆ [ಮಧುಮತೀಂ ಶಂತಿವಾಂ ವಾಚಮ್] ಮಧುರವೂ, ಶಾಂತಿದಾಯಕವೂ ಆದ ಮಾತನ್ನು, [ವದತು] ಆಡಲಿ.
ಮಾ ಭ್ರಾತಾ ಭ್ರಾತರಂ ದ್ವಿಕ್ಷನ್ಮಾ ಸ್ವಸಾರಮುತ ಸ್ವಸಾ | 
ಸಮ್ಯಂಚಃ ಸವ್ರತಾ ಭೂತ್ವಾ ವಾಚಂ ವದತ ಭದ್ರಯಾ || (ಅಥರ್ವ.೩.೩೦.೩)
     [ಭ್ರಾತಾ] ಸೋದರನು [ಭ್ರಾತರಮ್] ಸೋದರನನ್ನು [ಮಾ ದ್ವಿಕ್ಷತ್] ದ್ವೇಷಿಸದಿರಲಿ. [ಉತ] ಅಂತೆಯೇ [ಸ್ವಸಾರಮ್] ಸಹೋದರಿಯು [ಸ್ವಸಾ] ಸಹೋದರಿಯೊಂದಿಗೆ (ದ್ವೇಷಭಾವನೆ ಹೊಂದದಿರಲಿ). [ಸಮ್ಯಂಚಃ] ಪರಸ್ಪರ ಪ್ರೀತಿಯುಕ್ತರೂ [ಸವ್ರತಾಃ] ಒಂದೇ ಸಂಕಲ್ಪವುಳ್ಳವರೂ [ಭದ್ರಯಾ] ಶುಭವಾದ ರೀತಿಯಲ್ಲಿ [ವಾಚಂ ವದತ] ಮಾತನ್ನಾಡಿರಿ.
     ಪತಿ-ಪತ್ನಿಯರಲ್ಲಿ, ಸೋದರ-ಸೋದರಿಯರಲ್ಲಿ ಪರಸ್ಪರ ವೈಮನಸ್ಯವಿದ್ದರೆ, ಅವರು ಮಾತಾ-ಪಿತೃಗಳನ್ನು ಉಪಚರಿಸುವುದಾದರೂ ಎಂತು? ಗೃಹದ ವಾತಾವರಣವನ್ನು ಮಧುರವಾಗಿಟ್ಟುಕೊಂಡು, ಪ್ರತಿದಿನವೂ ಮಾತಾ-ಪಿತೃಗಳನ್ನು ಎಲ್ಲ ರೀತಿಯಲ್ಲಿಯೂ ಪ್ರಸನ್ನರಾಗಿಯೂ, ತೃಪ್ತರನ್ನಾಗಿಯೂ ಇಟ್ಟುಕೊಂಡಿರುವುದೇ ನಿಜವಾದ ಪಿತೃಯಜ್ಞ.
ಹಿಂದಿನ ಲೇಖನಕ್ಕೆ ಲಿಂಕ್ದೇವಯಜ್ಞ

ಬುಧವಾರ, ಫೆಬ್ರವರಿ 6, 2013

ದೂರವಾಣಿ ಮೂಲಕ ವೇದ ಮಂತ್ರ ಕಲಿಕೆ

ದೂರವಾಣಿ ಮೂಲಕ ಹಾಸನದ ತಾತನಿಂದ ಕಲಿತ ವೇದ ಮಂತ್ರಗಳನ್ನು ಹೇಳುತ್ತಿರುವ ಮೊಮ್ಮಗಳು ಅಕ್ಷಯ:



-ಬಿಂದು ರಾಘವೇಂದ್ರ, ಬೆಂಗಳೂರು.

ಶುಕ್ರವಾರ, ಫೆಬ್ರವರಿ 1, 2013

ವೇದೋಕ್ತ ಜೀವನ ಪಥ: ದೈನಂದಿನ ಪಂಚಮಹಾಯಜ್ಞಗಳು - ೨.ದೇವಯಜ್ಞ


     ಎರಡನೆಯ ಮಹಾಯಜ್ಞ ದೇವಯಜ್ಞ. ಇದೂ ಕೂಡ ಸೂರ್ಯೋದಯ-ಸೂರ್ಯಾಸ್ತ ಸಮಯಗಳಲ್ಲಿ ಮಾಡಬೇಕಾದ ದೈನಿಕ ಕ್ರಿಯೆ. ಇದನ್ನು ಹವನ, ಹೋಮ, ಅಗ್ನಿಹೋತ್ರ ಈ ಮೊದಲಾದ ಹೆಸರುಗಳಿಂದಲೂ ಕರೆಯುತ್ತಾರೆ. ಇದು ಆಧ್ಯಾತ್ಮಿಕ ಹಾಗೂ ಭೌತಿಕ - ಎರಡೂ ದೃಷ್ಟಿಗಳಿಂದಲೂ ಆಚರಣೀಯ. ಹಸನಾದ ಗೋವಿನ ತುಪ್ಪ, ಶಾಸ್ತ್ರೋಕ್ತವಾಗಿ ನಿರ್ಮಿಸಿದ ಹವ್ಯದ್ರವ್ಯ, ಉತ್ತಮವಾದ ಸಮಿತ್ತು - ಇವುಗಳನ್ನು ಅಗ್ನಿಯಲ್ಲಿ ಆಹುತಿಯಾಗಿ ಕೊಡುವುದರಿಂದ ಹೋಮಧೂಮ ವಾತಾವರಣದಲ್ಲಿನ ರೋಗಾಣುಗಳನ್ನು ನಾಶಪಡಿಸಿ, ಸುಗಂಧವನ್ನು ಹರಡಿ, ಮನಸ್ಸಿಗೆ ಉಲ್ಲಾಸವನ್ನೂ, ದೇಹಕ್ಕೆ ಆರೋಗ್ಯವನ್ನೂ ನೀಡುತ್ತದೆ. ಒಬ್ಬನು ತಿನ್ನಬಹುದಾದ ಪ್ರಮಾಣದ ಘೃತ ನೂರಾರು ಉಸಿರಾಡುವ ಮಂದಿಗಳಿಗೆ ಲಾಭವನ್ನುಂಟುಮಾಡುತ್ತದೆ. ಆಧ್ಯಾತ್ಮಿಕ ದ್ಟೃಂದ, ಈ ದೇವಯಜ್ಞ ಒಂದು ಅದ್ಭುತ ವರದಾನವೇ ಆಗಿದೆ. ವಿನಿಯೋಗಿಸುವ ಒಂದೊಂದು ಮಂತ್ರದಲ್ಲಿಯೂ ಆಧ್ಯಾತ್ಮಿಕ ತತ್ತ್ವ ತುಳುಕುತ್ತದೆ. ಅಗ್ನ್ಯುದ್ದೀಪನದ ಮಂತ್ರ ಆತ್ಮವನ್ನು ಸುಪ್ತಾವಸ್ಥೆಯಿಂದ ಹೊಡೆದೆಬ್ಬಿಸುತ್ತದೆ:- ಉದ್ಬುಧಸ್ಯಾಗ್ನೇ ಪ್ರತಿ ಜಾಗೃಹಿತ್ವಮ್|| (ಯಜು. ೧೫.೫೪) ಓ ಶರೀರನೇತೃ ಜೀವ, ಎಚ್ಚರನಾಗು, ಜಾಗರೂಕನಾಗು. ಮತ್ತು 'ಇದಂ ನ ಮಮ' ಎಂಬ ಘೋಷಣೆ, ಹೃದಯದಲ್ಲಿನ ಸ್ವಾರ್ಥಭಾವನೆಯ ಬುಡಕ್ಕೆ ಕೊಡಲಿಪೆಟ್ಟು ಹಾಕಿ, ಹೃದಯವನ್ನು ಉದಾರವಾಗಿ ಮಾಡುತ್ತದೆ. ಅಗ್ನಿಹೋತ್ರದ ವಿಷಯದಲ್ಲಿ, ಈ ಕೆಳಗಿನ ವೇದಮಂತ್ರಗಳು ಸದಾ ಮನನೀಯ:-

ಸಾಯಂಸಾಯಂ ಗೃಹಪತಿನೋ ಅಗ್ನಿಃ ಪ್ರಾತಃಪ್ರಾತಃ ಸೌಮನಸಸ್ಯ ದಾತಾ |
ವಸೋರ್ವಸೋರ್ವಸುದಾನ ಏಧಿ ವಯಂ ತ್ವೇಂಧಾನಾಸ್ತನ್ವಂ ಪುಷೇಮ | (ಅಥರ್ವ.೧೯.೫೫.೩.)
     [ಸಾಯಂಸಾಯಂ] ಸಂಜೆ ಸಂಜೆ ಹೊತ್ತಿಸಿದ [ನಃ ಗೃಹಪತಿಃ ಅಗ್ನಿಃ] ನಮ್ಮ ಗೃಹರಕ್ಷಕವಾದ ಹೋಮಾಗ್ನಿ, [ಪ್ರಾತಃಪ್ರಾತಃ] ಬೆಳಗು ಬೆಳಗಿನವರೆಗೆ [ಸೌಮನಸಸ್ಯ ದಾತಾ] ಮಾನಸಿಕ ಉಲ್ಲಾಸವನ್ನು ಕೊಡುವಂತಹದಾಗಿದೆ. ಹೇ ಯಜ್ಞಾಗ್ನಿ, [ವಸೋರ್ವಸೋರ್ವಸುದಾನಃ] ಜೀವ ಜೀವನಿಗೂ ಸಂಪತ್ತನ್ನು ನೀಡುತ್ತಾ, [ಏಧಿ] ಪ್ರಾಪ್ತನಾಗು. [ವಯಮ್] ನಾವು [ತ್ವಾಂ ಇಂಧಾನಾಃ} ನಿನ್ನನ್ನು ಪ್ರದೀಪ್ತಗೊಳಿಸುತ್ತಾ [ತನ್ವಂ ಪುಷೇಮ] ದೇಹಶಕ್ತಿಯನ್ನು ಪೋಷಿಸಿಕೊಳ್ಳೋಣ.

ಪ್ರಾತಃಪ್ರಾತರ್ಗೃಹಪತಿನೋ ಅಗ್ನಿಃ ಸಾಯಂಸಾಯಂ ಸೌಮನಸಸ್ಯ ದಾತಾ |
ವಸೋರ್ವಸೋರ್ವಸುದಾನ ಏಧೀಂಧಾನಾಸ್ತ್ಯಾ ಶತಂಹಿಮಾ ಋಧೇಮ || (ಅಥರ್ವ.೧೯.೫೫.೪)
     [ಪ್ರಾತಃ ಪ್ರಾತಃ] ಬೆಳಗ್ಗೆ ಬೆಳಗ್ಗೆ ಹೊತ್ತಿಸಿದ, [ನಃ ಗೃಹಪತಿಃ ಅಗ್ನಿಃ] ನಮ್ಮ ಗೃಹರಕ್ಷಕ ಹೋಮಾಗ್ನಿ [ಸಾಯಂ ಸಾಯಂ] ಸಂಜೆ ಸಂಜೆಯವರೆಗೆ [ಸೌಮನಸಸ್ಯ ದಾತಾ] ಮನಃಪ್ರಸಾದವನ್ನು ಕೊಡುವಂತಹುದಾಗಿದೆ. [ವಸೋರ್ವಸೋರ್ವಸುದಾನಃ] ಜೀವ ಜೀವನಿಗೂ ಐಶ್ವರ್ಯವನ್ನು ತುಂಬಿಸಿಕೊಡುತ್ತಾ [ಏಧಿ] ಪ್ರಾಪ್ತನಾಗು. [ತ್ವಾ ಇಂಧಾನಾಃ] ನಿನ್ನನ್ನು ಉಜ್ವಲಗೊಳಿಸುತ್ತಾ [ಶತಂ ಹಿಮಾ ಋಧೇಮ] ನೂರು ವರ್ಷಗಳವರೆಗೆ ವೃದ್ಧಿ ಹೊಂದೋಣ.

     ಹೋಮದಲ್ಲಿ ಹಾಕಿದ ವಸ್ತುಗಳು ಹಾಳಾಗುತ್ತವೆಂದು ಹೇಳುವವರಿಗೆ ಪದಾರ್ಥವಿಜ್ಞಾನದ ಅರಿವಿಲ್ಲ. ಯಾವ ವಸ್ತುವೂ ನಾಶವಾಗುವುದಿಲ್ಲ. ರೂಪಾಂತರ ಹೊಂದಿ, ವಾಯುಮಂಡಲದಲ್ಲಿ ಸೂಕ್ಷ್ಮ ರೂಪದಿಂದ ಸೇರಿ, ಎಲ್ಲರಿಗೂ ಹಿತವನ್ನುಂಟುಮಾಡುತ್ತದೆ. ಹೋಮಾಗ್ನಿಯಿಂದ ಮನಸ್ಸು ಶರೀರಗಳಿಗೆ ಉಲ್ಲಾಸ; ಆಧ್ಯಾತ್ಮಿಕ ದೃಷ್ಟಿಯಿಂದ, ಜಗನ್ನಿಯಾಮಕನಾದ ತೇಜಃಸ್ವರೂಪ ಪರಮಾತ್ಮನ ಧ್ಯಾನ, ಚಿಂತನ, ಮನನಗಳಿಂದ ಆತ್ಮನಿಗೆ ಉತ್ಕರ್ಷ. ಹೀಗೆ ದ್ವಿವಿಧ ಲಾಭದಾಯಕ ಈ ದೇವಯಜ್ಞ. ಇದು ಬ್ರಹ್ಮಚಾರಿಗಳು, ಗೃಹಸ್ಥರು ಮತ್ತು ವಾನಪ್ರಸ್ಥಿಗಳಿಗೆ ಅನಿವಾರ್ಯ. ಸಂನ್ಯಾಸಿಗಳು ಸದಾ ಸಂಚಾರಿಗಳಾದ ಕಾರಣ ಮತ್ತು ಹೋಮದ ಸಲಕರಣೆಗಳನ್ನು ಹೊತ್ತು ತಿರುಗುವ ವಿಧಾನವಿಲ್ಲದ ಕಾರಣ, ದೇವಯಜ್ಞ ಅವರಿಗಿಲ್ಲ.
-ಪಂ. ಸುಧಾಕರ ಚತುರ್ವೇದಿ.
**************************