ವೇದಜೀವನ ಬ್ಲಾಗಿಗೆ ಸ್ವಾಗತ. ಸುವಿಚಾರಗಳು ಎಲ್ಲಿಂದಲಾದರೂ ಬರಲಿ, ಯಾರಿಂದಲಾದರೂ ಬರಲಿ, ಪೂರ್ವಾಗ್ರಹ ಪೀಡಿತರಾಗದೆ ಸ್ವೀಕರಿಸೋಣ.

ಸೋಮವಾರ, ಜನವರಿ 6, 2014

ಹಣೆ ಬರಹಕ್ಕೆ ಹೊಣೆ ಯಾರು?

     'ಹಣೆ ಬರಹಕ್ಕೆ ಹೊಣೆ ಯಾರು? ಬಂದದ್ದನ್ನು ಅನುಭವಿಸಲೇಬೇಕು', 'ಎಲ್ಲಾ ವಿಧಿಲಿಖಿತ, ನಾವೇನು ಮಾಡೋಕಾಗುತ್ತೆ?' - ಇಂತಹ ಮಾತುಗಳನ್ನು ಸಾಮಾನ್ಯವಾಗಿ ಕೇಳುತ್ತಲೇ ಇರುತ್ತೇವಲ್ಲವೇ? ಇದಕ್ಕೆ ವಿಧಿ, ಅದೃಷ್ಟ, ಕರ್ಮ, ಕಿಸ್ಮತ್, ಮುಂತಾದ  ಹೆಸರುಗಳನ್ನೂ ಕೊಡುತ್ತೇವೆ.  ಯಾವುದೇ ವ್ಯಕ್ತಿ ಅನಿವಾರ್ಯವಾಗಿ ಎದುರಿಸಲೇಬೇಕಾಗುತ್ತದೆ, ಅದನ್ನು ಬದಲಾಯಿಸಲಾಗದು, ಅನುಭವಿಸಲೇಬೇಕು ಎಂಬ ಸಂಗತಿಯನ್ನು ವಿಧಿ, ಹಣೆಬರಹ ಎನ್ನಬಹುದು. ಅಂತಹ ಹಣೆಬರಹಗಳು ನಮ್ಮ ಜೀವನವನ್ನು ನಿರ್ದೇಶಿಸುತ್ತವೆ. ನಾವು ಹೇಗೆ ಜೀವಿಸಬೇಕೆಂಬುದನ್ನು ನಾವು ನಿರ್ಧರಿಸಬಲ್ಲೆವು, ಆದರೆ ಎಂದು ಹುಟ್ಟಬೇಕು, ಎಲ್ಲಿ ಹುಟ್ಟಬೇಕು ಎಂಬುದನ್ನು ನಿರ್ಧರಿಸಲಾರೆವು. ನಮ್ಮ ಅಪ್ಪ-ಅಮ್ಮ ಯಾರಾಗಬೇಕು ಎಂಬುದೂ ನಮ್ಮ ಕೈಯಲ್ಲಿಲ್ಲ. ನಮ್ಮ ಕುಟುಂಬದವರನ್ನು ನಾವು ಪ್ರೀತಿಸಬಹುದು ಅಥವ ದ್ವೇಷಿಸಬಹುದು, ಆದರೆ ನಮ್ಮ ಕುಟುಂಬವನ್ನು ಆರಿಸಿಕೊಳ್ಳಲಾರೆವು. ಎಂತಹ ವಿಚಿತ್ರ! ನಾವು ನಮ್ಮ ಸ್ನೇಹಿತರು, ಪ್ರೀತಿಪಾತ್ರರನ್ನು ಆಯ್ಕೆ ಮಾಡಿಕೊಳ್ಳಬಹುದು, ಅದರೆ ಅವರು ಅವರು ನಮ್ಮನ್ನು ಅರಿಸಿಕೊಳ್ಳುವಂತೆ ಬಲವಂತ ಮಾಡಲಾರೆವು. ಎಂತಹ ಚಿಕಿತ್ಸೆ ಬೇಕೆಂದು ಆರಿಸಿಕೊಳ್ಳಬಹುದು, ಎಂತಹ ಕಾಯಿಲೆ ಬೇಕೆಂದು ಆರಿಸಿಕೊಳ್ಳಬಹುದೇ? ನಾನು ಪ್ರಯಾಣ ಮಾಡುವ ರಸ್ತೆಯನ್ನು ಆರಿಸಿಕೊಳ್ಳಬಹುದು, ಆದರೆ ಆ ರಸ್ತೆ ಎಲ್ಲಿ ತಲುಪಬೇಕೆಂದು ನಿರ್ಧರಿಸಲಾಗದು. ಎಲ್ಲಾ ಬರೀ ಗೊಂದಲವೇ! ನಾವು ಎಂದೂ ಸಾಯಬಾರದು ಎಂದುಕೊಂಡರೆ ಸಾಧ್ಯವೇ? ಒಬ್ಬ ಅದೃಷ್ಟವಂತ ಒಂದೇ ಪ್ರಯತ್ನದಲ್ಲಿ ಅಸಾಧ್ಯವಾದುದನ್ನು ಸಾಧಿಸಿಬಿಡಬಹುದು; ಆದರೆ ದುರದೃಷ್ಟವಂತ ಅದೇ ಕೆಲಸವನ್ನು ನೂರು ಸಲ ನೂರು ವಿಧದಲ್ಲಿ ಮಾಡಲು ಪ್ರಯತ್ನಿಸಿ ವಿಫಲನಾಗಿಬಿಡಬಹುದು. ಹಾಗಾದರೆ ಇದನ್ನು ಹಣೆಬರಹ ಎನ್ನಬಹುದೇ? ಇಂತಹ ನೂರಾರು ಸಂದಿಗ್ಧಗಳು, ಸನ್ನಿವೇಶಗಳು ಮನುಷ್ಯನನ್ನು ಗೊಂದಲಕ್ಕೆ ಈಡು ಮಾಡುವುದಂತೂ ನಿರ್ವಿವಾದ. ಮೈಸೂರು ಸಂಸ್ಥಾನವನ್ನು ಕೈವಶ ಮಾಡಿಕೊಂಡು, ಕೆಳದಿ ಸಂಸ್ಥಾನವನ್ನೂ ನುಂಗಿ ನೀರು ಕುಡಿದಿದ್ದ ಹೈದರಾಲಿ ನಿರಕ್ಷರಕುಕ್ಷಿ. ಪತ್ರಗಳಿಗೆ ಸಹಿ ಮಾಡಬೇಕಾದಾಗ ಹೆಬ್ಬೆರಳಿನ ಗುರುತು ಹಾಕುತ್ತಿದ್ದ. ಆಗ ಅದನ್ನು ಆಶ್ಚರ್ಯದಿಂದ ನೋಡುತ್ತಿದ್ದವರಿಗೆ ಹೈದರಾಲಿ, "ಅಲ್ಲೇಕೆ ನೋಡುತ್ತೀರಿ? ಇಲ್ಲಿ ನೋಡಿ" ಎಂದು ತನ್ನ ಹಣೆ ಮುಟ್ಟಿ ತೋರಿಸುತ್ತಿದ್ದ.
     ಹಣೆಬರಹ, ವಿಧಿಲಿಖಿತ ಮುಂತಾದುವಕ್ಕೆ ಅರ್ಥ ಬರಬೇಕೆಂದರೆ ಸನಾತನ ಧರ್ಮೀಯರು ನಂಬುವಂತೆ ಪುನರ್ಜನ್ಮ ಮತ್ತು ಕರ್ಮಫಲವಿರಬೇಕು ಅನ್ನಿಸುತ್ತದೆ. ಇಲ್ಲದಿದ್ದರೆ ಯಾವುದೇ ಒಂದು ಜೀವಿ ಬಡತನದ ಮನೆಯಲ್ಲಿ ಏಕೆ ಜನಿಸಬೇಕು, ಹದ್ದು, ಗೂಬೆಯಾಗಿ ಏಕೆ ಹುಟ್ಟಬೇಕು, ತನ್ನ ಯಾವುದೇ ತಪ್ಪಿಲ್ಲದೆ ಅಂಗವಿಕಲವಾಗಿ ಹುಟ್ಟಬೇಕು ಅಥವ ಶ್ರೀಮಂತರ ಮನೆಯಲ್ಲಿ ಬಾಳುವಂತಾಗಬೇಕು? ಕ್ರೈಸ್ತರು, ಮಹಮದೀಯರು ಪುನರ್ಜನ್ಮ ನಂಬುವುದಿಲ್ಲ. ಹಾಗಾದರೆ ಹುಟ್ಟುವಾಗಲೇ ಬರುವ ಇಂತಹ ವೈಪರೀತ್ಯಗಳಿಗೆ ಏನು ಕಾರಣ ಕೊಡಬೇಕು? ಸತ್ತ ಮೇಲೆ ಒಂದು ನಿಶ್ಚಿತ ದಿನದಂದು ಮಾತ್ರವೇ ತನ್ನ ಪಾಪ/ಪುಣ್ಯಗಳಿಗೆ ತಕ್ಕಂತೆ ಫಲ ಅನುಭವಿಸುವುದಾದರೆ, ಪುನರ್ಜನ್ಮವಿಲ್ಲವೆಂದಾದರೆ, ಹುಟ್ಟುತ್ತಲೇ ಈ ರೀತಿಯ ಕಷ್ಟ ಅನುಭವಿಸಬೇಕಾದ ಪರಿಸ್ಥಿತಿಗೆ ವಿವರಣೆ ಕೊಡುವುದು ಕಷ್ಟವಾಗುತ್ತದೆ. ಯಾವುದೇ ಕಾರಣವಿಲ್ಲದೆ, ತಮ್ಮ ಯಾವುದೇ ತಪ್ಪಿಲ್ಲದೆ ಕೆಲವರನ್ನು ಸುಖಿಗಳನ್ನಾಗಿ, ಕೆಲವರನ್ನು ದುಃಖಿಗಳನ್ನಾಗಿ ಹುಟ್ಟಿಸಿದರೆ ದೇವರು ನಿಷ್ಕರುಣಿ ಅಥವ ಪಕ್ಷಪಾತಿ ಎನ್ನಬೇಕಾಗುತ್ತದೆ. ಅಲ್ಲದೆ ಅಂತಹ ಸಂದರ್ಭದಲ್ಲಿ ಜೀವಿಗಳು ಮಾಡುವ ಕೆಟ್ಟ ಮತ್ತು ಒಳ್ಳೆಯ ಕೆಲಸಗಳಿಗೆ ದೇವರೇ ಹೊಣೆಗಾರನಾಗಬೇಕಾಗುತ್ತದೆ. ಹಾಗೆ ಇರಲಾರದು! ಅಲ್ಲದಿದ್ದರೆ ಈ ಸ್ಥಿತಿಗೆ ಕಾರಣವೇನಿರಬಹುದು? ಇದಕ್ಕೆ ಕೊಡಬಹುದಾದ ಮತ್ತು ಒಪ್ಪಬಹುದಾದ ವಿವರಣೆಯೆಂದರೆ ಜೀವಿಯು ತಾನು ಮಾಡಿದ ಕರ್ಮಫಲವಾಗಿ ಈ ರೀತಿ ಆಗುತ್ತದೆಂಬುದು! ಒಬ್ಬರೇ ತಂದೆ-ತಾಯಿಗಳಿಗೆ ಹುಟ್ಟಿದ ಮಕ್ಕಳೆಲ್ಲರೂ ಒಂದೇ ಗುಣ, ಸ್ವಭಾವದವರು, ಸಾಮರ್ಥ್ಯ, ಅಭಿರುಚಿಯುಳ್ಳವರಾಗಿರುವುದಿಲ್ಲ ಅಲ್ಲವೇ? ಹಿಂದಿನ ಕುಸಂಸ್ಕಾರ, ಸುಸಂಸ್ಕಾರಗಳ ಫಲವಿರುವುದಿಲ್ಲ, ಪುನರ್ಜನ್ಮವಿಲ್ಲ ಎಂದಾಗಿದ್ದರೆ ಎಲ್ಲರೂ ಸಮಾನ ವ್ಯಕ್ತಿತ್ವ ಹೊಂದಿದವರಾಗಿರುತ್ತಿದ್ದರು.
ಹುಟ್ಟು ಮೊದಲಲ್ಲ ಸಾವು ಕೊನೆಯಲ್ಲ
ಹುಟ್ಟು ಸಾವಿನ ಕೊಂಡಿ ಬದುಕಿನಾ ಬಂಡಿ |
ಹಿಂದಕೋ ಮುಂದಕೋ ಬಂಡಿ ಸಾಗುವುದು
ನಶಿಸಿದರೆ ಏರುವೆ ಹೊಸಬಂಡಿ ಮೂಢ ||
     ಪ್ರತಿ ಜೀವಿಯೂ ಹಿಂದೆ ಮಾಡಿದ ಒಳ್ಳೆಯ, ಕೆಟ್ಟ ಕೆಲಸಗಳಿಗನುಗುಣವಾಗಿ ಕಟ್ಟಿಕೊಂಡು ಬಂದ ಬುತ್ತಿಯ ಗಂಟನ್ನು ಹೊತ್ತುಕೊಂಡೇ ಬರುತ್ತಾರೆ ಎಂಬುದನ್ನು ಒಪ್ಪಿಕೊಂಡರೆ ಮಾತ್ರ ದೇವರು ಕ್ರೂರಿಯಲ್ಲ, ಪಕ್ಷಪಾತಿಯಲ್ಲ, ಅನ್ಯಾಯಗಾರನಲ್ಲ ಎನ್ನಬಹುದು. ಅಥರ್ವವೇದದ ಒಂದು ಮಂತ್ರ ಹೀಗೆ ಹೇಳುತ್ತದೆ:
ನ ಕಿಲ್ಬಿಷಮತ್ರ ನಾಧಾರೋ ಅಸ್ತಿ ನ ಯನ್ಮಿತ್ರೈಃ ಸಮಮಮಾನ ಏತಿ |
ಅನೂನಂ ಪಾತ್ರಂ ನಿಹಿತಂ ನ ಏತತ್ಪಕ್ತಾರಂ ಪಕ್ವಃ ಪುನರಾ ವಿಶಾತಿ ||  (ಅಥರ್ವ.೧೨.೩.೪೮)
     ಈ ದೇವರ ನ್ಯಾಯವಿಧಾನದಲ್ಲಿ ಯಾವ ಒಡಕೂ, ದೋಷವೂ ಇಲ್ಲ, ಬೇರೆ ಯಾವ ಆಧಾರವೂ ಇಲ್ಲ. ಸ್ನೇಹಿತರ, ಸಹಕಾರಿಗಳ ಸಹಾಯದಿಂದ ಕ್ಷೇಮವಾಗಿದ್ದೇನೆಂದುಕೊಂಡು ಮೋಕ್ಷಕ್ಕೆ ಸೇರುತ್ತೇನೆ ಎಂಬುದೂ ಕೂಡ ಇಲ್ಲ. ನಮ್ಮ ಈ ಒಡಕಿಲ್ಲದ ಅಂತಃಕರಣದ ಪಾತ್ರೆ ಗೂಢವಾಗಿ ಇಡಲ್ಪಟ್ಟಿದೆ. ಬೇಯಿಸಿದ ಅನ್ನ, ಕರ್ಮಫಲವಿಪಾಕ ಅದನ್ನು ಪಾಕ ಮಾಡಿದವನನ್ನು ಪುನಃ ಮರಳಿ ಪ್ರವೇಶಿಸಿಯೇ ತೀರುತ್ತದೆ ಎಂಬುದು ಈ ಮಂತ್ರದ ಅರ್ಥ. 'ಮಾಡಿದ್ದುಣ್ಣೋ ಮಹರಾಯ'! ತಾನು ಮಾಡಿದ ಪಾಪವನ್ನು ಇತರರ ಹೆಗಲಿಗೆ ಹೊರಿಸಿ ಪಾರಾಗಬಹುದೆಂದಾಗಲೀ, ಯಾವುದೇ ಪೂಜಾರಿ, ಪಾದ್ರಿ, ಮೌಲ್ವಿಗಳ ಮಧ್ಯಸ್ತಿಕೆಂದ ಪುಣ್ಯ ಗಳಿಸಬಹುದೆಂದಾಗಲೀ, ಮುಕ್ತಿ ಹೊಂದಬಹುದೆಂಬುದಾಗಲೀ, ತಪ್ಪುಕಾಣಿಕೆ ಒಪ್ಪಿಸಿ ಮಾಡಿದ ತಪ್ಪಿನಿಂದ ತಪ್ಪಿಸಿಕೊಳ್ಳಬಹುದೆಂದಾಗಲೀ ಇಲ್ಲವೇ ಇಲ್ಲ. ಮಾಡಿದ್ದನ್ನು ಅನುಭವಿಸಲೇಬೇಕು. ನಮ್ಮ ಹಣೆಬರಹಕ್ಕೆ ಹೊಣೆಗಾರರು ನಾವೇ!
     ಭಗವದ್ಗೀತೆಯ ಒಂದು ಅಧ್ಯಾಯವೇ ಕರ್ಮಯೋಗಕ್ಕೆ ಮೀಸಲಾಗಿದೆ. ಯಾರೂ ಕರ್ಮ ಮಾಡದೇ ಇರಲಾರರು, ಸದ್ವಿಚಾರಗಳಿಂದ ಒಡಗೂಡಿದ ಕರ್ಮವೇ ಮೋಕ್ಷಕ್ಕೊಯ್ಯಬಲ್ಲದು ಎಂಬುದು ಇದರ ಸಾರ. ಒಳ್ಳೆಯ ಕೆಲಸಗಳಿಂದ ಒಳ್ಳೆಯದಾಗುತ್ತದೆ ಎಂಬುದು ಇದರ ನೀತಿ. ನಾವು ಬದುಕಬೇಕೆಂದರೆ ಅದಕ್ಕಾಗಿ ಪ್ರತಿ ಕ್ಷಣವೂ ಸಾಯಬೇಕು. ನಾವು ಬಿಡುವ ಪ್ರತಿ ಉಸಿರೂ ನಮ್ಮನ್ನು ಸಾವಿನ ಸಮೀಪಕ್ಕೆ ಒಯ್ಯುತ್ತಿರುತ್ತದೆ. ಬದುಕು ಮತ್ತು ಸಾವು ಎನ್ನುವುದು ಒಂದೇ ವಸ್ತುವಿನ ಬೇರೆ ಬೇರೆ ಮುಖಗಳಷ್ಟೆ. ಸಮುದ್ರದ ಅಲೆಗಳಂತೆ ಒಮ್ಮೆ ಮೇಲೆ ಏಳುತ್ತದೆ, ಒಮ್ಮೆ ಕೆಳಗೆ ಬೀಳುತ್ತದೆ. ಬದುಕು ಮತ್ತು ಸಾವು ಎರಡೂ ಸೇರಿದರೆ ಮಾತ್ರ ಒಂದು ಪೂರ್ಣವಾದ ಸಂಗತಿ, ಇಲ್ಲದಿದ್ದರೆ ಅದು ಅಪೂರ್ಣ.
ತಪ್ಪಿಗಿರಬಹುದು ಕಾರಣವು ನೂರು
ಪರರು ಕಾರಣರಲ್ಲ ಹೊರಿಸದಿರು ದೂರು |
ಹುಂಬತನ ಭಂಡತನ ಮೊಂಡುತನ ಬೇಡ
ಅಡಿಗಡಿಗೆ ಅಳುಕುವ ಪಾಡೇಕೆ ಮೂಢ ||
     ನಾವು ಈಗ ಏನಾಗಿದ್ದೇವೋ ಅದಕ್ಕೆ ನಾವೇ ಕಾರಣರು ಎಂದಾದಾಗ ದೇವರನ್ನಾಗಲೀ, ಇತರರನ್ನಾಗಲೀ ಏಕೆ ದೂಷಿಸಬೇಕು? ಸಾವಧಾನದಿಂದ, ಪೂರ್ವಾಗ್ರಹ ಪೀಡಿತರಾಗದೆ ಯೋಚಿಸಿದರೆ ಈ ಸತ್ಯದ ಅರಿವು ಆಗಲು ಸಾಧ್ಯ. ನಮ್ಮ ತಪ್ಪುಗಳಿಗೆ ಹೊಣೆಗಾರರು ನಾವೇ ಎಂಬುದು ನಾವು ಕಲಿಯಬೇಕಾದ ಮೊದಲ ಪಾಠ. ಯಾರನ್ನೂ ಹೊಗಳುವಂತಿಲ್ಲ, ಯಾರನ್ನೂ ತೆಗಳುವಂತಿಲ್ಲ. ತಿಳಿಯೋಣ, ಕೆಲವೊಮ್ಮೆ ನಮ್ಮ ದುರದೃಷ್ಟ ಮತ್ತು ಸೋಲುಗಳೇ ನಾವು ಉನ್ನತವಾದುದನ್ನು ಸಾಧಿಸಬೇಕೆಂಬ ಛಲ ಮೂಡಿಸುತ್ತದೆ. ಹಿಂದೆ ಮಾಡಿದ ಕೆಲಸಗಳ ಫಲವೇ ಇಂದು ನಾವು ಏನಾಗಿದ್ದೇವೆಯೋ ಅದು ಎನ್ನುವುದಾದರೆ, ಮುಂದೆ ನಾವು ಏನಾಗಬೇಕು ಎಂದು ನಿರ್ಧರಿಸಿ ಅದರಂತೆ ನಮ್ಮ ಈಗಿನ ಕೆಲಸಗಳಿಂದ ಸಾಧಿಸಬಹುದು ಎಂಬುದನ್ನೂ ಒಪ್ಪಬೇಕು. ಮಾಡಬೇಕಿರುವುದೆಂದರೆ ಅದನ್ನು ಹೇಗೆ ಸಾಧಿಸಬೇಕು ಎಂಬುದನ್ನು ಅರಿತು ಮುಂದುವರೆಯುವುದಷ್ಟೆ. ನಮ್ಮ ಭವಿಷ್ಯದ ಶಿಲ್ಪಿಗಳು ನಾವೇ ಆಗಿದ್ದು, ಯಶಸ್ಸಿಗೆ ಬೇಕಾದ ಎಲ್ಲಾ ಸಲಕರಣೆಗಳೂ ನಮ್ಮೊಳಗೇ ಇವೆ. 'ಇದು ನನ್ನ ಹಣೆಯ ಬರಹ ಎಂದು ಹೇಳುವವನು ಹೇಡಿ ಮತ್ತು ಮೂರ್ಖ' ಎಂದು ಸಂಸ್ಕೃತದ ಒಂದು ಗಾದೆ ಹೇಳುತ್ತದೆ. ಬಲಶಾಲಿ ವ್ಯಕ್ತಿ ತನ್ನ ಭವಿಷ್ಯವನ್ನು ತಾನೇ ರೂಪಿಸಿಕೊಳ್ಳುತ್ತಾನೆ. ಸಾಮಾನ್ಯವಾಗಿ ದುರ್ಬಲ ಮನಸ್ಕರು, ಅಶಕ್ತರು ಮಾತ್ರ ತಮ್ಮ ಹಣೆಯಬರಹದ ಬಗ್ಗೆ ಚಿಂತಿಸಿ ಜ್ಯೋತಿಷಿಗಳ ಮೊರೆ ಹೋಗುವುದನ್ನು ಕಾಣುತ್ತೇವೆ. ಅಂತಹವರು ತಮ್ಮ ಹಣೆಬರಹವನ್ನು ಇತರರಿಂದ ಬರೆಸಿಕೊಳ್ಳುವ ಬಲಿಪಶುಗಳಾಗುತ್ತಾರೆಂದರೆ ಕಠಿಣವಾದ ಮಾತಾಗಬಹುದು. ಹಣೆಬರಹ, ವಿಧಿಲಿಖಿತ ಮುಂತಾದ ಪದಗಳು ತಮ್ಮ ಜೀವನಕ್ಕೆ ಸಂಬಂಧಿಸಿದ ಪ್ರತಿಯೊಂದು ಸಂಗತಿಯ ಜರುಗುವಿಕೆಗೆ ತಾವೇ ಕಾರಣರೆಂಬುದನ್ನು ಅರಗಿಸಿಕೊಳ್ಳಲಾಗದವರು ಹೇಳಬಹುದಾದ ಪದಗಳು! ನಾವು ಏನನ್ನು ಬಿತ್ತುತ್ತೇವೋ ಅದನ್ನೇ ಬೆಳೆಯುತ್ತೇವೆ, ಇದೇ ಸತ್ಯ. ನಮ್ಮ ಹಣೆಯಬರಹವನ್ನು ಬರೆಯುವವರು, ನಿರ್ಧರಿಸುವವರು ನಾವೇ ಎಂಬುದನ್ನು ಅರಿತಾಗ ಮಾತ್ರ ನಾವು ಸರಿಯಾದ ದಾರಿಯಲ್ಲಿ ನಡೆಯುವ ಮನಸ್ಸು ಮಾಡುತ್ತೇವೆ.
ನಿನಗೆ ನೀನೆ ಬಂಧು ನಿನಗೆ ನೀನೆ ಶತ್ರು
ಪರರು ಮಾಡುವುದೇನು ನಿನದೆ ತಪ್ಪಿರಲು |
ಉನ್ನತಿಗೆ ಹಂಬಲಿಸು ಅವನತಿಯ ಕಾಣದಿರು
ನಿನ್ನುದ್ಧಾರ ನಿನ್ನಿಂದಲೇ ಮೂಢ ||
     ನಡೆಯುವ ಪ್ರತಿಯೊಂದು ಕಾರ್ಯಕ್ಕೂ ಒಂದು ಕಾರಣವಿರುತ್ತದೆ. ಅದರಲ್ಲಿನ ಸತ್ಯ, ವಾಸ್ತವತೆ ಅರಿತು ತಪ್ಪು ತಿದ್ದಿಕೊಂಡು ಮುನ್ನಡೆದರೆ ಹಣೆಬರಹವನ್ನು ಬದಲಾಯಿಸಬಹುದು. ತಮಾಷೆಯ ವಿಷಯವೆಂದರೆ ಗೆದ್ದವರು ತಮ್ಮ ಗೆಲುವಿಗೆ ಹಣೆಬರಹ ಕಾರಣವೆನ್ನುವುದಿಲ್ಲ, ಸೋತವರು ಮಾತ್ರ ಸೋಲಿಗೆ ನೆಪವಾಗಿ ಹಣೆಬರಹವೆಂದುಬಿಡುತ್ತಾರೆ. ಬಲಶಾಲಿಗಳನ್ನು ಹಣೆಬರಹ ಇಷ್ಟಪಡುತ್ತದೆ.
-ಕ.ವೆಂ.ನಾಗರಾಜ್

1 ಕಾಮೆಂಟ್‌:

  1. H A Patil on January 6, 2014 - 8:29pm
    ಕವಿ ನಾಗರಾಜ ರವರಿಗೆ ವಂದನೆಗಳು
    ಹಣೆ ಬರಹಕೆ ಯಾರು ಹೊಣೆ ಯೋಚನೆಗೆ ಹಚ್ಚುವ ಲೇಖನ ಕೊನೆಯ ಪ್ಯಾರಾದಲ್ಲಿ ತಾವು ನಮೂದಿಸಿದ ಅಭಿಪ್ರಾಯಕ್ಕೆ ನನ್ನ ಸಹಮತ ವಿದೆ. ಮನುಷ್ಯ ಪ್ರಯತ್ನಶೀಲನಾಗಬೇಕು ಹಣೆಬರಹಕ್ಕೆ ಆತುಕೊಂಡು ಬದುಕು ಸವೆಸಿ ಬಿಡಬಾರದು.ಇರುವಷ್ಟು ದಿವಸ ಸಮಾಜಕ್ಕೆ ಹೊರೆ ಯಾಗದೆ ಕ್ರಿಯಾಶೀಲವಾಗಿ ಬದುಕಿ ಹೋಗಿ ಬಿಡಬೇಕು. ಉತ್ತಮ ವಿಚಾರ ಪ್ರಚೋದನಾತ್ಮಕ ಲೇಖನ ನೀಡಿದ್ದಕ್ಕೆ ಧನ್ಯವಾದಗಳು.
    kavinagaraj on January 7, 2014 - 10:31am
    ವಂದನೆಗಳು, ಪಾಟೀಲರೇ. ಹಣೆಬರಹ ಬದಲಾಯಿಸಬಹುದು ಎಂಬುದು ಧೀರ ಸಂನ್ಯಾಸಿ ವಿವೇಕರ ವಿವೇಕದ ಮಾತು!

    sathishnasa on January 6, 2014 - 9:28pm
    ಹಿಂದೆ ಮಾಡಿದ ಕರ್ಮಗಳಿಂದ ಈಗ ಸುಖ,ದುಃಖಗಳನ್ನು ಅನುಭವಿಸುತ್ತೇವೆ ಎಂದುಕೊಂಡರು ಜಿಜ್ಞಾಸೆ ಮೂಡುತ್ತದೆ ಏಕೆಂದರೆ ಹಿಂದಕ್ಕೆ ನೋಡಿಕೊಂಡು ಹೋದರೆ ಒಮ್ಮೆ ನಾವು ಕರ್ಮ ಶೂನ್ಯರಾಗಿರುತ್ತೇವೆ ಅಂದಮೇಲೆ ಜನ್ಮ ಬರಲು ಸಾಧ್ಯವಿಲ್ಲ ಅಥವಾ ನಮ್ಮ (ನಾನು ಎನ್ನುವ) ಅಸ್ತಿತ್ವವೇ ಇರುವುದಿಲ್ಲ ಆದುದರಿಂದ ಎಲ್ಲದಕ್ಕು ಕಾರಣ "ದೇವರು" ಅಥವಾ ಒಂದು "ಶಕ್ತಿ" ತನ್ನಿಚ್ಚೆಯಂತೆ ನಡೆಸುತ್ತಿದೆ ಎನಿಸುತ್ತದೆ ('ನಾನು' ಎನ್ನುವ ಅಹಮಿಕೆಯನ್ನು ಹುಟ್ಟಿ ಹಾಕಿ). ಹಾಗಾಗಿ ಎಲ್ಲಿವರೆಗೆ ಕರ್ಮಗಳನ್ನು ನಾವು ಮಾಡುತ್ತಿದ್ದೇವೆ ಎಂಬ ಭಾವನೆ ಇರುತ್ತದೆಯೋ ಅಲ್ಲಿವರೆಗೆ ಸುಖ,ದುಃಖಗಳು ಇರುತ್ತದೆ ಎಂಬುದು ನನ್ನ ಅನಿಸಿಕೆ . ನಿಮ್ಮ ಚಿಂತನಾರ್ಹ ಲೇಖನಕ್ಕೆ ಧನ್ಯವಾದಗಳು ನಾಗರಾಜ್ ರವರೇ .........ಸತೀಶ್
    kavinagaraj on January 7, 2014 - 10:39am
    ನಮಸ್ತೆ ಸತೀಶರೇ. ಕರ್ಮಫಲಕ್ಕನುಗುಣವಾಗಿ ಜನ್ಮ ಬರುವುದು ಹಣೆಬರಹ (ಅಥವ 'ಅವನ' ಕೆಲಸ!) ಜನಿಸಿದ ಮೇಲೆ ಹಣೆಬರಹ ಬರೆಯುವವರು, ಬರೆದುಕೊಳ್ಳುವವರು ಜೀವಿಯೇ ಎಂಬುದು ನನಗೆ ಒಪ್ಪಿತವಾದ ತರ್ಕ. ಜನಿಸಿದ ನಂತರವೂ ಎಲ್ಲವೂ 'ಅವನ' ಇಚ್ಛೆಯಂತೆ ನಡೆಯುತ್ತದೆ ಎಂದಾದರೆ ಕರ್ಮಫಲಕ್ಕೆ ಅರ್ಥ ಬರಲಾರದು. ತರ್ಕದ ಸಲುವಾಗಿ: ಒಬ್ಬನಿಗೆ ಸಿಟ್ಟು ಬಂದು ಮತ್ತೊಬ್ಬನನ್ನು ಕೊಂದುಬಿಡುತ್ತಾನೆ ಎಂದಿಟ್ಟುಕೊಳ್ಳೋಣ. ಅದು ದೇವನ ಇಚ್ಛೆಯಂತೆ ನಡೆದುದಾದರೆ ಅಪರಾಧ ಸಹ ದೇವರದೇ ಆಗುತ್ತದೆ. ಜೀವಿಯ ಹತೋಟಿ ಮೀರಿ ನಡೆಯುವ ಕಾರ್ಯಗಳು ಮಾತ್ರ 'ಅವನವು' ಎನ್ನಬಹುದು.

    nageshamysore on January 7, 2014 - 3:08am
    ಕವಿಗಳೆ ನಮಸ್ಕಾರ, ಗೆದ್ದವರು ಹಣೆಬರಹದ ಕುರಿತು ಯೋಚಿಸುವುದೂ ಕಡಿಮೆಯೆಂದು ಕಾಣುತ್ತದೆ. ಸೋತವರಿಗೆ ಕನಿಷ್ಠ ಸೋಲಿನ ಕಾರಣ-ನೆಪವಾಗಿಯಾದರೂ ಹಣೆಬರಹ ಕೆಲಸಕ್ಕೆ ಬರುತ್ತದೆ. ನಿಮ್ಮ ಬರಹಕ್ಕೆ ಅದರ ತಲೆ ಬರಹವೆ ಅತ್ಯುತ್ತಮ ಪ್ರತಿಕ್ರಿಯೆ ಸಹ - "ಹಣೆಬರಹಕ್ಕೆ ಹೊಣೆ ಯಾರು?" ಚಿಂತನಾರ್ಹ ಲೇಖನಕ್ಕೆ ಧನ್ಯವಾದಗಳು. ನಾಗೇಶ ಮೈಸೂರು
    kavinagaraj on January 7, 2014 - 10:41am
    ಧನ್ಯವಾದ ನಾಗೇಶರೇ. ಗೆಲುವಿಗೆ ನೂರಾರು ನಾಯಕರು! ಸೋಲಿಗೆ? 'ಹಣೆಬರಹ' ಒಂದೇ! :)

    ಪ್ರತ್ಯುತ್ತರಅಳಿಸಿ