ವೇದಜೀವನ ಬ್ಲಾಗಿಗೆ ಸ್ವಾಗತ. ಸುವಿಚಾರಗಳು ಎಲ್ಲಿಂದಲಾದರೂ ಬರಲಿ, ಯಾರಿಂದಲಾದರೂ ಬರಲಿ, ಪೂರ್ವಾಗ್ರಹ ಪೀಡಿತರಾಗದೆ ಸ್ವೀಕರಿಸೋಣ.

ಭಾನುವಾರ, ಡಿಸೆಂಬರ್ 6, 2015

ಸಾಧನಾ ಸೋಪಾನ - 12: ಅಗ್ನಿ - ಜೀವರು ಮತ್ತು ದೇವರ ನಡುವಣ ಕೊಂಡಿ


     ಸಾಧನಾಪಥದ ಸೋಪಾನಗಳಾದ ಜ್ಞಾನ, ವಾಕ್ಕು, ಮನಸ್ಸು, ಇಚ್ಛಾಶಕ್ತಿ, ಸ್ಮರಣಶಕ್ತಿ, ಧ್ಯಾನ, ಧ್ಯಾನ ಏಕೆ ಮತ್ತು ಹೇಗೆ ಎಂಬ ಅರಿವು, ದೈಹಿಕ ಮತ್ತು ಮಾನಸಿಕ ಶಕ್ತಿ, ಆಹಾರ, ನೆಲ ಮತ್ತು ಜಲಗಳಿಗಿಂತ ಅಗ್ನಿತತ್ತ್ವ ಹೇಗೆ ಮೇಲಿನದೆಂಬ ಬಗ್ಗೆ ನೋಡೋಣ. ಸೂಕ್ಷ್ಮ ತತ್ತ್ವಗಳು ಸ್ಥೂಲ ತತ್ತ್ವಗಳಿಗಿಂತ ಹೆಚ್ಚು ವ್ಯಾಪಿಸಬಲ್ಲವಾದುದಾಗಿವೆ. ಅಗ್ನಿತತ್ತ್ವ ಸೃಷ್ಟಿಕಾರಕ, ಸ್ಥಿತಿಕಾರಕ ಮತ್ತು ಲಯಕಾರಕ ಪರಮಾತ್ಮನ ಗುಣಗಳನ್ನು ಹೊಂದಿದೆ. ಸೂರ್ಯ ನಮಗೆ ಬೆಳಕು ಮತ್ತು ಶಾಖ ನೀಡುವವನಾಗಿದ್ದಾನೆ. ಶಾಖ ಹೆಚ್ಚಾದಾಗ ಮಳೆ ಬರುತ್ತದೆ, ನೀರು ಅಗ್ನಿಯ ಕಾರಣದಿಂದ, ಅದರ ನಂತರದಲ್ಲಿ ಬರುತ್ತದೆ. ಮಳೆ ಹೇಗೆ ಬರುತ್ತದೆ ಎಂಬುದು ಸಾಮಾನ್ಯ ಜ್ಞಾನದ ಅರಿವಿರುವವರಿಗೆ ತಿಳಿದೇ ಇರುತ್ತದೆ. ನದಿ, ಕೆರೆ, ಕಟ್ಟೆಗಳು, ಸಾಗರಗಳಲ್ಲಿನ ನೀರು ಶಾಖದಿಂದಾಗಿ ಆವಿಯಾಗಿ ವಾತಾವರಣದಲ್ಲಿ ಸೇರಿ ನೀರಿನ ಸಣ್ಣ ಕಣಗಳಾಗಿ ಸಂಗ್ರಹವಾಗುತ್ತವೆ. ಇವುಗಳು ಮೋಡದ ರೂಪದಲ್ಲಿ ಸಂಗ್ರಹವಾಗುತ್ತವೆ. ಹೆಚ್ಚಿನ ಕಣಗಳ ದಟ್ಟ ಸಂಗ್ರಹವಾದಾಗ ಮೋಡಗಳು ಕಪ್ಪಾಗಿ ಭಾರವಾಗುತ್ತಾ ಹೋಗುತ್ತವೆ. ನೀರಿನ ಸಣ್ಣ ಕಣಗಳು ಪರಸ್ಪರ ಡಿಕ್ಕಿ ಹೊಡೆದಾಗ ಒಟ್ಟುಗೂಡಿ ದೊಡ್ಡ ಕಣಗಳಾಗುತ್ತಾ ಹೋಗುತ್ತವೆ. ಗುಡುಗು, ಸಿಡಿಲುಗಳೂ ಸಹ ಈ ಸಂದರ್ಭದಲ್ಲಿ ಕಾಣಬರುತ್ತವೆ. ಸಾಂದ್ರತೆ ಹೆಚ್ಚಾಗಿ ಗಾಳಿಗಿಂತ ಭಾರವಾದಾಗ ಅದು ಮಳೆಯಾಗಿ ಕೆಳಗೆ ಬೀಳುತ್ತದೆ. ಈ ಚಕ್ರ ನಿರಂತರವಾಗಿ ನಡೆಯುತ್ತಿರುತ್ತದೆ. ಸ್ವಾರ್ಥಕ್ಕಾಗಿ ಜಲಮೂಲಗಳನ್ನು ಮುಚ್ಚುತ್ತಿರುವ, ಕಾಡುಗಳನ್ನು, ಬೆಟ್ಟಗುಡ್ಡಗಳನ್ನು ನಾಶ ಮಾಡುತ್ತಿರುವ ಮಾನವ ಈ ಚಕ್ರ ಸುಗಮವಾಗಿ ತಿರುಗಲು ಅಡ್ಡಿಯಾಗಿದ್ದಾನೆ. ಇದರಿಂದಾಗಿ ಕಾಲ ಕಾಲಕ್ಕೆ ಸರಿಯಾಗಿ ಮಳೆಯಾಗದಿರುವುದು ಅಥವ ಅತಿಯಾಗಿ ಮಳೆಯಾಗುವುದು ಮುಂತಾದ ಅತಿರೇಕಗಳನ್ನು ಕಾಣುತ್ತಿದ್ದೇವೆ.
     ಪ್ರಮುಖವಾದ ಶಾಖ ಮತ್ತು ಬೆಳಕಿನ ಮೂಲವಾದ ಸೂರ್ಯ ಸೌರ ಮಂಡಲದ ಪ್ರಧಾನವಾದ ಮತ್ತು ಕೇಂದ್ರದಲ್ಲಿರುವ ಬೃಹತ್ ನಕ್ಷತ್ರವಾಗಿದೆ. ಭೂಮಿಯ ವ್ಯಾಸದ ಸುಮಾರು 109ರಷ್ಟು ದೊಡ್ಡದಾದ ಸೂರ್ಯ, ಭೂಮಿಯ ಸುಮಾರು 330,000ದಷ್ಟು ತೂಕವುಳ್ಳದ್ದಾಗಿದೆ. ಇದು ಸೌರಮಂಡಲದ ಒಟ್ಟು ತೂಕದ ಶೇ.99.86 ರಷ್ಟಿದೆ. ಈಗಿನ ಸೂರ್ಯ ಸುಮಾರು 4.567 ಬಿಲಿಯನ್ ವರ್ಷಗಳ ಹಿಂದೆ ಉಗಮಗೊಂಡವನಾಗಿದ್ದು, ಇನ್ನೂ ಸುಮಾರು 4 ಬಿಲಿಯನ್ ವರ್ಷಗಳವರೆಗೆ ಇರುತ್ತಾನೆನ್ನಲಾಗಿದೆ. ಶೇ.73.46ರಷ್ಟು ಜಲಜನಕ, ಶೇ.24.85ರಷ್ಟು ಹೀಲಿಯಮ್ ಹೊಂದಿರುವ ಸೂರ್ಯ ಉಳಿದ ಶೇ.1.69ರಷ್ಟು ಪ್ರಮಾಣದಲ್ಲಿ ಆಮ್ಲಜನಕ, ಇಂಗಾಲ, ಕಬ್ಬಿಣ, ನಿಯಾನ್, ಸಾರಜನಕ, ಸಿಲಿಕಾನ್, ಮೆಗ್ನೀಷಿಯಮ್ ಮತ್ತು ಗಂಧಕಗಳನ್ನು ಹೊಂದಿದೆ. ಇನ್ನೂ ಹೆಚ್ಚಿನ ಕುತೂಹಲಕಾರಿ ವಿಷಯಗಳನ್ನು  http://en.wikipedia.org/wiki/Sun ಇಲ್ಲಿ ತಿಳಿಯಬಹುದು. ಲೇಖನಕ್ಕೆ ಪೂರಕವಾಗಿ ಕೆಲವು ಮಾಹಿತಿಯನ್ನು ಮಾತ್ರ ಇಲ್ಲಿ ಪ್ರಸ್ತಾಪಿಸಿದೆ. ಆಗಸದಲ್ಲಿ ಅತಿ ಪ್ರಕಾಶಮಾನವಾದ ನಕ್ಷತ್ರವೆಂದರೆ ಸೂರ್ಯವೇ ಆಗಿದೆ. ಸೂರ್ಯನನ್ನು ದೇವತೆಯೆಂದು ಆರಾಧಿಸುವುದನ್ನು ಕಾಣಬಹುದು. ಭೂಮಿಯ ಮೇಲೆ ಸೂರ್ಯನ ಪ್ರಭಾವ ಗಣನೀಯವಾಗಿದ್ದು, ಸೂರ್ಯನ ಸುತ್ತ ಒಂದು ಸುತ್ತು ಸುತ್ತಲು ಭೂಮಿ ತೆಗೆದುಕೊಳ್ಳುವ ಕಾಲವನ್ನು ಒಂದು ವರ್ಷವೆನ್ನುತ್ತಾರೆ. ಈ ಕಾಲಗಣನೆಯೇ ಇಂದು ಬಳಕೆಯಲ್ಲಿರುವುದಾಗಿದೆ. ವಾರದ ಮೊದಲ ದಿನವನ್ನು ರವಿವಾರವೆಂದು ಹೆಸರಿಸಲಾಗಿದೆ. ಒಟ್ಟಾರೆಯಾಗಿ ಸೂರ್ಯ ಜೀವಿಗಳಿಗೆ ಶಕ್ತಿ, ಬೆಳಕು, ಜೀವನಾಧಾರ ಸಂಗತಿಯಾಗಿದ್ದಾನೆ.      ಈ ಬೃಹತ್ ಬ್ರಹ್ಮಾಂಡದಲ್ಲಿ ನಮ್ಮ ಭೂಮಿ ಇರುವುದೊಂದೇ ಸೂರ್ಯ ಮಂಡಲ ಅಲ್ಲ. ಇಂತಹ ಅದೆಷ್ಟು ಅಸಂಖ್ಯ ಸೂರ್ಯಗಳು, ಭೂಮಿಗಳು ಇರುವ ಸೂರ್ಯಮಂಡಲವಿದೆಯೋ ಗೊತ್ತಿಲ್ಲ. ನಮ್ಮ ಬಾಹ್ಯಾಕಾಶ ವಿಜ್ಞಾನಿಗಳು ಈಗಾಗಲೇ ಸುಮಾರು 500 ಸೂರ್ಯಮಂಡಲಗಳಿರುವುದನ್ನು ಖಚಿತಪಡಿಸಿದ್ದಾರೆ, ಇನ್ನೂ ಹೊಸ ಹೊಸ ಸೂರ್ಯಮಂಡಲಗಳು ಪತ್ತೆಯಾಗುತ್ತಿವೆ.
     "ಓಂ ಸೂರ್ಯೋ ಜ್ಯೋತಿರ್ಜ್ಯೋತಿಃ ಸೂರ್ಯಃ ಸ್ವಾಹಾ||" (ಯಜು.3.9.1.) 'ಸೂರ್ಯ ಜ್ಯೋತಿರ್ಯುಕ್ತನಾಗಿದ್ದಾನೆ. ಆದರೆ ಜ್ಯೋತಿರ್ಮಯ ಪ್ರಭುವು ಸೂರ್ಯನಿಗೂ ಸೂರ್ಯನಾಗಿದ್ದಾನೆ. ಇದು ಸತ್ಯ' ಎಂಬುದು ಇದರ ಅರ್ಥ. ವೇದಗಳು ಪರಮಾತ್ಮನನ್ನು ಅಗ್ನಿ ಎಂತಲೂ ಸಂಬೋಧಿಸಿರುವುದನ್ನು ಕಾಣಬಹುದು. ಇಲ್ಲಿ ಅಗ್ನಿ ಎಂದರೆ ಜ್ಯೋತಿರ್ಮಯ ಎಂದರ್ಥ. ಋಗ್ವೇದದ ಮೊದಲ ಮಂತ್ರ ಹೀಗಿದೆ:
ಅಗ್ನಿಮೀಳೇ ಪುರೋಹಿತಂ ಯಜ್ಷಸ್ಯ ದೇವಮೃತ್ವಿಜಮ್ | ಹೋತಾರಂ ರತ್ನಧಾತಮಮ್ || (ಋಕ್.೧.೧.೧.) (ಸರ್ವಹಿತಕಾರಿ, ಪೂಜ್ಯತಮ, ಜ್ಞಾನಸ್ವರೂಪ, ಜ್ಞಾನದಾತ, ಸರ್ವಪ್ರಥಮ, ಸರ್ವೋಪರಿಸ್ಥಿತ ಪರಮಾತ್ಮನನ್ನು ಸ್ತುತಿಸುತ್ತೇನೆ. ಅವನು ಬ್ರಹ್ಮಾಂಡರೂಪಿ ಯಜ್ಞದ ಪ್ರಕಾಶಕ, ಪ್ರವರ್ತಕ, ಸಮಯಾನುಸಾರ ಎಲ್ಲವನ್ನೂ ಪ್ರಾಪ್ತಗೊಳಿಸುವವನು,, ಸೃಷ್ಟಿ, ಸ್ಥಿತಿ, ಲಯಕರ್ತನು, ಪ್ರಸನ್ನತೆಯನ್ನುಂಟುಮಾಡುವ ರತ್ನಾದಿಗಳನ್ನು, ಉತ್ಕೃಷ್ಟ ಅನ್ನ, ಜಲ, ಫಲ ಪುಷ್ಪಾದಿಗಳನ್ನು ಕರುಣಿಸುವವನೂ ಆಗಿದ್ದಾನೆ.) ಪ್ರಾತಃಕಾಲದಲ್ಲಿ ಆಸ್ತಿಕರು ಉಚ್ಛರಿಸುವ ಈ ಮಂತ್ರವನ್ನು ಗಮನಿಸಿ:
ಓಂ ಪ್ರಾತರ್ಜಿತಂ ಭಗಮುಗ್ರಂ ಹುವೇಮ ವಯಂ ಪುತ್ರಮದಿತೇರ್ಯೋ ವಿಧರ್ತಾ |
ಆಧ್ರಶ್ಚಿದ್ ಯಂ ಮನ್ಯಮನಸ್ತುರಶ್ಚಿದ್ ರಾಜಾ ಚಿದ್ ಯಂ ಭಗಂ ಭಕ್ಷೀತ್ಯಾಹಃ || (ಋಕ್.೭.೪೧.೨)
    'ನಿತ್ಯವಿಜಯಿಯೂ, ಅತಿ ತೇಜಸ್ವಿಯೂ, ಸೂರ್ಯಾದಿ ಪ್ರಕಾಶಪುಂಜಗಳ ನಿತ್ಯಧಾರಕನೂ, ಸರ್ವಜ್ಞನೂ, ಪಾತಕಿಗಳನ್ನು ದಂಡಿಸುವವನೂ ಆದ ದೇವದೇವನ ದಿವ್ಯ ಪ್ರಕಾಶವನ್ನು ನಾವು ಪ್ರಾತಃಕಾಲ ಧರಿಸೋಣ' ಎಂಬದು ಇದರ ಅರ್ಥ. ಅಗ್ರಣಿಯಾಗಿರುವುದರಿಂದ, ಸದಾ ಜಾಗೃತವಾಗಿರುವುದರಿಂದ, ಜ್ಞಾನದಾಯಕನಾಗಿರುವುದರಿಂದ ಅಗ್ನಿಯನ್ನು ಆತ್ಮಕ್ಕೂ ಹೋಲಿಸುತ್ತಾರೆ. ಜ್ಞಾನಜ್ಯೋತಿ ಬೆಳಗಲಿ ಎಂಬ ಪದಪ್ರಯೋಗ ಗಮನಿಸಬಹುದು. ಯಜ್ಞದಲ್ಲಿ ಅಗ್ನಿಗೆ ಪ್ರಧಾನ ಪಾತ್ರವಿದೆ. ಇಲ್ಲಿ ಯಜ್ಞವೆಂದರೆ ಕೇವಲ ಹವನ, ಹೋಮಗಳಲ್ಲ. ಯಜ್ಞವೆಂದರೆ ಶ್ರೇಷ್ಠತಮವಾದ ಕರ್ಮಗಳು. ಈ ಅರ್ಥದಲ್ಲಿ ಒಳ್ಳೆಯ ರೀತಿಯಲ್ಲಿ ಸಹಜೀವಿಗಳ ಹಿತ ಗಮನದಲ್ಲಿರಿಸಿ ಬಾಳುವುದೇ ಯಜ್ಞವೆನಿಸುತ್ತದೆ. ಅಗ್ನಿಗೆ ಅರ್ಪಿಸುವ ವಸ್ತುಗಳನ್ನು ಅರಗಿಸಿ, ವಿಭಜಿಸಿ ಅದರ ಗುಣವನ್ನು ಎಲ್ಲೆಡೆಗೆ ಹರಡುವ ಶಕ್ತಿ ಇದೆ. ಆದ್ದರಿಂದ ಯಜ್ಞದಲ್ಲಿ ಅರ್ಪಿಸುವ ಹವಿಸ್ಸುಗಳು ಸುತ್ತಮತ್ತಲಿನ ವಾತಾವರಣವನ್ನು ಶುದ್ಧಗೊಳಿಸುವಂತಹದಾಗಿರಬೇಕು, ಆಹ್ಲಾದಕರ ವಾತಾವರಣ ನಿರ್ಮಿಸುವಂತಿರಬೇಕು. ಹವಿಸ್ಸು, ಸಮಿತ್ತು, ಪದಾರ್ಥಗಳನ್ನು ಅಗ್ನಿಗೆ ಅರ್ಪಿಸುವಾಗ 'ಇದಂ ನ ಮಮ' ಎಂಬ ಮಂತ್ರ ಉಚ್ಛರಿಸಲಾಗುತ್ತದೆ. ಇದರ ಅರ್ಥ, ಈ ಕಾರ್ಯ 'ನನಗಾಗಿ ಅಲ್ಲ', ಸಕಲರ ಹಿತಕ್ಕಾಗಿ ಎಂಬುದು ಸೂಚ್ಯಾರ್ಥವಾಗಿದೆ. ಅಗ್ನಿ ಜೀವರು ಮತ್ತು ದೇವರ ನಡುವಣ ಕೊಂಡಿಯಾಗಿದೆ.
     ಐದು ವಿಧದ ಅಗ್ನಿಯನ್ನು ಗುರುತಿಸುತ್ತಾರೆ - ಕಾಲಾಗ್ನಿ (ಸಮಯ), ಕ್ಷುದ್ಧಾಗ್ನಿ (ಹಸಿವು), ಶೀತಾಗ್ನಿ (ಶೀತಲ), ಕೋಪಾಗ್ನಿ (ಕೋಪ) ಮತ್ತು ಜ್ಞಾನಾಗ್ನಿ(ಜ್ಞಾನ). ನಮ್ಮ ಜೀವನದಲ್ಲಿ ಅನುಭವಕ್ಕೆ ಬರುವ ನವರಸಗಳೂ ಅಗ್ನಿಯ ಪ್ರತಿರೂಪವಾಗಿರುತ್ತವೆ. ಕಾಮಾಗ್ನಿ, ವಿರಹಾಗ್ನಿ, ಮೋಹಾಗ್ನಿ ಮುಂತಾದ ಪದಬಳಕೆಯನ್ನು ಗಮನಿಸಬಹುದು. ಬೆಂಕಿ ಉಗುಳುವ ಮಾತುಗಳು, ಕಣ್ಣಿನಲ್ಲೇ ಸುಡುವ ನೋಟ, ಹೊಟ್ಟೆಯುರಿ (ಮತ್ಸರ) ಮುಂತಾದವುಗಳೂ ಸಹ ಅಗ್ನಿಯ ಜೊತೆಗೂಡಿರುವುದನ್ನು ಕಾಣಬಹುದು. ಅಂದರೆ ಅಗ್ನಿ ನಮ್ಮತನವನ್ನು ಪ್ರತಿನಿಧಿಸುವ ಸಂಗತಿಯಾಗಿದೆ.
     ಅಗ್ನಿ ನೀರಿನಿಂದ ಉದಯಿಸುತ್ತದೆ ಮತ್ತು ನೀರಿನಲ್ಲಿ ವಾಸಿಸುತ್ತದೆ ಎಂದು ಋಗ್ವೇದದಲ್ಲಿ ಉಲ್ಲೇಖ ಬರುತ್ತದೆ. ವಿಷಯದ ಆಳಕ್ಕೆ ಹೋದರೆ ಇದರ ಅರ್ಥ ನಮಗೆ ತಿಳಿಯಬಹುದು. ನೀರು ಜಲಜನಕ ಮತ್ತು ಆಮ್ಲಜನಕದ ಮಿಶ್ರಣವಾಗಿದೆ. ಜಲಜನಕ ಶೀಘ್ರವಾಗಿ ದಹಿಸುವ ಅನಿಲವಾಗಿದ್ದು, ಆಮ್ಲಜನಕ ದಹನಕ್ಕೆ ಸಹಕಾರಿಯಾಗಿರುತ್ತದೆ ಅಲ್ಲವೇ? ಪ್ರತಿ ಶುಭ, ಅಶುಭ ಕಾರ್ಯಗಳಿಗೆ ಅಗ್ನಿ ಸಾಕ್ಷಿಯಾಗಿರುತ್ತದೆ. ಅಂತ್ಯ ಸಂಸ್ಕಾರದ ಕ್ರಿಯೆಯಲ್ಲಿ ಶವದಹನಕ್ಕೂ ಅಗ್ನಿ ಬೇಕು. ವೈವಾಹಿಕ ಜೀವನಕ್ಕೆ ಕಾಲಿಡುವಾಗಲೂ ಅಗ್ನಿಸಾಕ್ಷಿಯಾಗಿ ಕೈ ಹಿಡಿಯುವುದು ಎನ್ನುವರಲ್ಲವೇ? ಅಗ್ನಿ ಪಾವಿತ್ರ್ಯದ ಸಂಕೇತವೂ ಆಗಿದೆ, ಪರಮಾತ್ಮನಂತೆ ದಾರಿ ತೋರುವ ಗುಣವನ್ನೂ ಹೊಂದಿದೆ. ಈ ವೇದಮಂತ್ರ ಗಮನಿಸೋಣ:
ಓಂ ಅಗ್ನೇ ನಯ ಸುಪಥಾ ರಾಯೇ ಅಸ್ಮಾನ್ ವಿಶ್ವಾನಿ ದೇವ ವಯುನಾನಿ ವಿದ್ವಾನ್ |
ಯುಯೋಧ್ಯಸ್ಮಜ್ಜುಹುರಾಣಮೇನೋ ಭೂಯಿಷ್ಠಾಂತೇ ನಮ ಉಕ್ತಿಂ ವಿಧೇಮ || (ಯಜು.40.16.)
     ಈ ಮಂತ್ರದ ಭಾವಾನುವಾದವನ್ನು ಹೀಗೆ ಮಾಡಬಹುದು:
ಸತ್ಯಪಥದಿ ಮುಂದೆ ಸಾಗಲು ಮತಿಯ ಕರುಣಿಸು ದೇವನೆ
ಸಂಪತ್ತು ಬರಲಿ ನ್ಯಾಯ ಮಾರ್ಗದಿ ನಿನ್ನ ಕರುಣೆಯ ಬಲದಲಿ |
ರಜವ ತೊಳೆದು ತಮವ ಕಳೆದು ಸತ್ತ್ವ ತುಂಬಲು ಬೇಡುವೆ
ಬಾಳ ಬೆಳಗುವ ಜ್ಯೋತಿ ನೀನೆ ವಂದನೆ ಪ್ರಭು ವಂದನೆ ||
-ಕ.ವೆಂ.ನಾಗರಾಜ್.
***************
ದಿನಾಂಕ 5.11.2015ರ ಜನಹಿತ ಪತ್ರಿಕೆಯ 'ಜನಕಲ್ಯಾಣ' ಅಂಕಣದಲ್ಲಿ ಪ್ರಕಟಿತ:

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ