ವೇದಜೀವನ ಬ್ಲಾಗಿಗೆ ಸ್ವಾಗತ. ಸುವಿಚಾರಗಳು ಎಲ್ಲಿಂದಲಾದರೂ ಬರಲಿ, ಯಾರಿಂದಲಾದರೂ ಬರಲಿ, ಪೂರ್ವಾಗ್ರಹ ಪೀಡಿತರಾಗದೆ ಸ್ವೀಕರಿಸೋಣ.

ಬುಧವಾರ, ಜೂನ್ 29, 2016

ಪುರೋಹಿತರಾಗೋಣ!


     ಹೀಗೆ ಹೇಳಿದಾಕ್ಷಣ ಹುಬ್ಬೇರಿಸುತ್ತೀರಿ ಎಂಬುದು ಗೊತ್ತು. ಏಕೆಂದರೆ ಪುರೋಹಿತ ಎಂದರೆ ಸಾಮಾನ್ಯವಾಗಿ ನಮ್ಮ ಕಣ್ಣ ಮುಂದೆ ಬರುವ ಚಿತ್ರವೆಂದರೆ ಪೂಜೆ-ಪುನಸ್ಕಾರಗಳನ್ನು ಮಾಡುವ ಒಬ್ಬ  ಅರ್ಚಕನದೇ ಆಗಿರುತ್ತದೆ. ಮತ್ತೊಂದು ಕಾರಣವೂ ಇದೆ. ಬುದ್ಧಿಜೀವಿಗಳೆನಿಸಿಕೊಂಡವರು ಸಾಮಾನ್ಯವಾಗಿ ಪುರೋಹಿತಶಾಹಿ ಎಂಬ ಪದವನ್ನು ಒಂದು ವರ್ಗದವರನ್ನು ದೂಷಿಸಲು ಕಾರಣವಾಗಿಯೋ, ಅಕಾರಣವಾಗಿಯೋ ಸುಲಭವಾಗಿ ಬಳಸುವ ಪದವಾಗಿದೆ. ಇಂದು ಅನೇಕ ಪದಗಳು ಮೂಲ ಅರ್ಥದಲ್ಲಿ ಬಳಕೆಯಾಗದೆ ವಿರುದ್ಧಾರ್ಥದಲ್ಲಿ ಬಳಕೆಯಾಗುತ್ತಿರುವುದು ವಿಪರ್ಯಾಸ. ಜಾತಿಯ ಬಲದಲ್ಲೇ ರಾಜಕಾರಣ ಮಾಡುತ್ತಿರುವವರು ಜಾತ್ಯಾತೀತತೆಯ ಮಾತನಾಡುತ್ತಾರೆ. ಯಾವುದಾದರೂ ಒಂದು ಕೋಮನ್ನು ದ್ವೇಷಿಸುವುದೇ ಬಂಡವಾಳವಾಗಿರುವವರು ಕೋಮು ಸೌಹಾರ್ದತೆಯ  ಮಾತನಾಡುತ್ತಾರೆ. ಕೋಟ್ಯಾಧೀಶರಾದರೂ, ಅಧಿಕಾರಸ್ಥಾನದಲ್ಲಿದ್ದು ಇತರರನ್ನು ನಿಯಂತ್ರಿಸುವ ಶಕ್ತಿಯಿರುವವರೂ ಹಿಂದುಳಿದವರು, ದಲಿತರು, ಶೋಷಿತರು ಎನಿಸಿಕೊಳ್ಳುವವರಿದ್ದಾರೆ. ಕಡುಬಡವರಾಗಿದ್ದರೂ ಹುಟ್ಟಿನ ಜಾತಿಯ ಕಾರಣ ಮುಂದುವರೆದವರು ಎಂದೆನಿಸಿಕೊಂಡವರಿದ್ದಾರೆ. ಮೂಲ ಅರ್ಥ ಕಳೆದುಕೊಂಡು ಸವಕಲಾಗಿರುವ ಪದಗಳ ಸಾಲಿನಲ್ಲಿ ಸೇರಿರುವ ಈ ಪುರೋಹಿತ ಪದದ ಮೂಲ ಅರ್ಥ ಕುರಿತು ವಿಶ್ಲೇಷಿಸುವುದೇ ಈ ಲೇಖನದ ಉದ್ದೇಶವಾಗಿದೆ.
     ಮೂಲ ಸಂಸ್ಕೃತ ಪದವಾದ ಪುರೋಹಿತ ಎಂಬ ಪದದ ಶಬ್ದಾರ್ಥ ಪುರಸ್ ಎಂದರೆ ಮುಂದೆ ಹಿತ ಎಂದರೆ ಇಡಲ್ಪಟ್ಟವನು ಅರ್ಥಾತ್ ಮುಂದೆ ಇರಿಸಲ್ಪಟ್ಟವನು, ಅಗ್ರಣಿ, ಮುಂದಿರುವವನು ಎಂದು. ಒಬ್ಬ ವ್ಯಕ್ತಿ ಪುರೋಹಿತನೆಂದು ಗೌರವಿಸಲ್ಪಡಬೇಕಾದರೆ ಆತನಲ್ಲಿ ವಿಶೇಷವಾದ ಜ್ಞಾನ ಮತ್ತು ಗುಣಗಳು ಇರಬೇಕಾಗುತ್ತದೆ. ಸಂದಿಗ್ಧ ಸಂದರ್ಭಗಳಲ್ಲಿ, ಸಮಸ್ಯೆಗಳು ಎದುರಾದ ಸಂದರ್ಭಗಳಲ್ಲಿ ಅದಕ್ಕೆ ಸೂಕ್ತ ಪರಿಹಾರಗಳನ್ನು, ಸಮಸ್ಯೆಗಳಿಂದ ಹೊರಬರುವ ಮಾರ್ಗೋಪಾಯಗಳನ್ನು ತಿಳಿಸಬಲ್ಲ ಶಕ್ತಿ ಆತನಲ್ಲಿರಬೇಕಾಗುತ್ತದೆ. ಮುಂದಿರುವುದರಿಂದ ಹಿಂದೆ ಇರುವವರಿಗೆ ಆತ ಸಹಜವಾಗಿ ಮಾರ್ಗದರ್ಶಕನಾಗಿರಬೇಕಾಗುತ್ತದೆ. ಇತರರಿಗೆ ಬುದ್ಧಿ ಹೇಳಬೇಕಾದರೆ ಆತ ಸ್ವತಃ ಜ್ಞಾನವಂತ, ಶೀಲವಂತ, ಚಾರಿತ್ರ್ಯವಂತನಾಗಿರಬೇಕಾಗುತ್ತದೆ. ಇಂತಹ ಗುಣಗಳಿರುವವರು ಮಾತ್ರ ನೈಜ ಪುರೋಹಿತರೆನಿಸಿಕೊಳ್ಳಬಲ್ಲರು. ಪಂಡಿತರು ಎಂಬ ಪದ ಸಮಾನಾರ್ಥವನ್ನು ಕೊಡುವುದಾಗಿದೆ. ಗುರುಗಳು, ಸಾಧು-ಸಂತರು, ಸರ್ವರ ಹಿತವನ್ನು ಬಯಸುವವರೆಲ್ಲರೂ ಪುರೋಹಿತರೇ ಆಗುತ್ತಾರೆ. ಇದಕ್ಕೆ ಯಾವುದೇ ಜಾತಿಯ ಕಟ್ಟಾಗಲೀ, ಲೇಪವಾಗಲೀ ಇಲ್ಲವೆಂಬುದಕ್ಕೆ ಇತಿಹಾಸದಲ್ಲಿ ಅಸಂಖ್ಯ ಉದಾಹರಣೆಗಳಿವೆ. ವಿಶ್ವಾಮಿತ್ರ, ವಸಿಷ್ಠ, ವ್ಯಾಸ, ವಾಲ್ಮೀಕಿ ಮುಂತಾದ ಅನೇಕ ಋಷಿಮುನಿಗಳು ಒಂದು ಜಾತಿಯ ಎಲ್ಲೆಗೆ ಸೇರಿದವರಲ್ಲವೆಂಬುದನ್ನು ನೆನಪಿನಲ್ಲಿಡಬೇಕಿದೆ. 
     ಹೆಮ್ಮೆಯ ವಿಜಯನಗರ ಸಂಸ್ಥಾನದ ರೂವಾರಿ ವಿದ್ಯಾರಣ್ಯರು ಕಲಿಕೆಯ ಕೊನೆಯ ಹಂತದಲ್ಲಿದ್ದಾಗ ಗುರು ವಿದ್ಯಾತೀರ್ಥರು ಇತರ ಶಿಷ್ಯರಿಗೆ ಕೇಳಿದಂತೆ ಶಿಷ್ಯ ಮಾಧವನಿಗೂ (ಅರ್ಚಕರ ಮಗನಾಗಿದ್ದ ವಿದ್ಯಾರಣ್ಯರ ಪೂರ್ವಾಶ್ರಮದ ಹೆಸರು) ಕೇಳಿದ್ದರು: ಮಾಧವ, ನೀನು ಮುಂದೆ ಏನಾಗಬೇಕೆಂದಿರುವೆ?
ಮಾಧವ ಉತ್ತರಿಸಿದ್ದ: ಗುರುಗಳೇ, ಮನುಷ್ಯನಲ್ಲಿ ನಾನು ಎಂಬ ಅಹಮಿಕೆ ಇರುವವರೆಗೆ, ಏನನ್ನಾದರೂ ಸಾಧಿಸುವುದು ಕಷ್ಟ. ದೇವರ ಇಚ್ಛೆ ಇದ್ದರೆ, ಕಾಣುವ ದೇವರಾದ ಮನುಕುಲದ ಸೇವೆಗಾಗಿ, ಮೌಢ್ಯದ ಕಾರಣದಿಂದ ಮಲಗಿರುವ ದೇಶದ ಜಾಗೃತಿಗಾಗಿ ನನ್ನ ಜೀವನವನ್ನು ಉಪಯೋಗಿಸುವೆ. ನನ್ನ ದೇಶ ಮತ್ತು ಧರ್ಮದ ರಕ್ಷಣೆಗಾಗಿ, ದೇಶದ ಸ್ವಾತಂತ್ರ್ಯಕ್ಕಾಗಿ ನನ್ನ ಜೀವನ ಮುಡುಪಿಡಬೇಕೆಂದಿದ್ದೇನೆ.  
ಈ ಉತ್ತರದಿಂದ ಆನಂದಿತರಾದ ಗುರುಗಳು ಅವನನ್ನು ಆಲಂಗಿಸಿಕೊಂಡು, ಮಗು, ಇತರರ ಒಳಿತಿಗೆ ಕೆಲಸ ಮಾಡುವುದು, ದೇಶ, ಧರ್ಮ, ಸ್ವಾತಂತ್ರ್ಯದ ಸಲುವಾಗಿ ಜೀವನ ಮೀಸಲಿಡುವುದು ಪವಿತ್ರವಾದುದು. ನಿನ್ನ ಆದರ್ಶದ ಪಾಲನೆಯಲ್ಲಿ ಯಶಸ್ವಿಯಾಗು. ನಿನ್ನ ಸೇವೆಯಿಂದ ಜಗತ್ತಿಗೆ ಒಳಿತಾಗಲಿ ಎಂದು ಹೃತ್ಪೂರ್ವಕವಾಗಿ ಆಶೀರ್ವದಿಸಿದ್ದರು. ಮುಂದಿನದು ಇತಿಹಾಸ. ಹಕ್ಕ-ಬುಕ್ಕರನ್ನು ಮುಂದಿಟ್ಟುಕೊಂಡು ದೇಶ ಮತ್ತು ಧರ್ಮದ ಹಿತ ಕಾಪಾಡುವ ಧ್ಯೇಯದ ವಿಜಯನಗರ ಸಂಸ್ಥಾನ ಸ್ಥಾಪಿಸಿದರು. ವಿದ್ಯಾರಣ್ಯರು ಕೇವಲ ಮಾರ್ಗದರ್ಶಕರಾಗಿ ಉಳಿದರು. ಇದು ಆದರ್ಶ ಪುರೋಹಿತನ ಲಕ್ಷಣ. 
     ಹಿಂದಿನ ರಾಜ-ಮಹಾರಾಜರುಗಳ ಆಸ್ಥಾನದಲ್ಲಿ ರಾಜಪುರೋಹಿತರುಗಳು ಇರುತ್ತಿದ್ದರು. ಅವರುಗಳು ಧಾರ್ಮಿಕ ಆಚರಣೆಗಳ ಕುರಿತಲ್ಲದೆ, ಸಮಸ್ಯೆಗಳು ಬಂದಾಗ ಅವನ್ನು ಎಲ್ಲಾ ದೃಷ್ಟಿಯಿಂದ ನೋಡಿ ಸೂಕ್ತ ಪರಿಹಾರ ರೂಪಿಸುವಲ್ಲಿ ರಾಜರಿಗೆ ನೆರವಾಗುತ್ತಿದ್ದರು. ಚಾಣಕ್ಯ, ಸಮರ್ಥ ಗುರು ರಾಮದಾಸರು ಮುಂತಾದ ನೂರಾರು ಮಾರ್ಗದರ್ಶಕರ ನೆರವಿನಿಂದ ಸನಾತನ ಸಂಸ್ಕೃತಿ ಜೀವಂತವಾಗಿದೆ. ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ತೊಡಗಿಕೊಂಡ, ಸಾವಿರಾರು ಜನರಿಗೆ ಪ್ರೇರೇಪಣೆ ನೀಡಿದ ಸಾಧು-ಸಂತರ ಸಂಖ್ಯೆ ಗಣನೀಯವಾಗಿದೆ. ಒಮ್ಮೆ ಮಹರ್ಷಿ ದಯಾನಂದ ಸರಸ್ವತಿಯವರ ಶಿಷ್ಯ ಸ್ವಾಮಿ ಶ್ರದ್ಧಾನಂದರ ಆಶ್ರಮಕ್ಕೆ ಬ್ರಿಟಿಷ್ ಪೋಲಿಸರು ನುಗ್ಗಿ ತಪಾಸಣೆ ನಡೆಸಿದ್ದರು. ಅವರಿಗೆ ಅಲ್ಲಿ ಬಾಂಬುಗಳನ್ನು ತಯಾರಿಸಲಾಗುತ್ತಿದೆಯೆಂಬ ಗುಮಾನಿ ಇತ್ತಂತೆ. ಹುಡುಕಿದರೂ ಏನೂ ಸಿಗದೆ ಪೋಲಿಸರು ವಾಪಸಾಗಿದ್ದರು. ನಂತರದಲ್ಲಿ ಶ್ರದ್ಧಾನಂದರು ಅಲ್ಲಿದ್ದ ತಮ್ಮ ಶಿಷ್ಯರನ್ನು ಉದ್ದೇಶಿಸಿ ಕಣ್ಣ ಮುಂದೆಯೇ ಇದ್ದ ಜೀವಂತ ಬಾಂಬುಗಳನ್ನು ಪೋಲಿಸರು ಗುರುತಿಸದೇ ಹೋದರಲ್ಲಾ! ಎಂದು ತಮಾಷೆ ಮಾಡಿದ್ದರು. ಅಲ್ಲಿ ತಯಾರಾಗುತ್ತಿದ್ದುದು ಕೃತಕ ಬಾಂಬುಗಳಲ್ಲ, ದೇಶಕ್ಕಾಗಿ ಪ್ರಾಣಾರ್ಪಣೆ ಮಾಡಬಲ್ಲ ಜೀವಂತ ಶಿಷ್ಯರ ರೂಪದಲ್ಲಿನ ಬಾಂಬುಗಳು! ಭಾರತದ ಹಿರಿಮೆಯನ್ನು ಜಗತ್ತಿಗೆ ಸಾರಿದ ವಿವೇಕಾನಂದರು ನಮ್ಮ ಸಂಸ್ಕೃತಿಯ ಪುರೋಹಿತರು! ಸರಳತೆ, ಸಜ್ಜನಿಕೆ, ಪ್ರಾಮಾಣಿಕತೆ, ದಾರ್ಶನಿಕತೆ, ವಿದ್ವತ್ತುಗಳಿಗೆ ಹೆಸರಾದ ಸರ್ ಎಂ. ವಿಶ್ವೇಶ್ವರಯ್ಯ, ಡಿವಿಜಿ, ಡಾ. ರಾಧಾಕೃಷ್ಣನ್, ಅಬ್ದುಲ್ ಕಲಾಂ ಮುಂತಾದವರು, ನಾಡು-ನುಡಿಗಳಿಗೆ ಜೀವ ಸವೆಸಿದ ಅಸಂಖ್ಯರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಅಗ್ರಣಿಗಳಾಗಿದ್ದು ಇತರರಿಗೆ ಮಾರ್ಗದರ್ಶಿಯಾಗಿದ್ದುದನ್ನು ಸ್ಮರಿಸಬೇಕು. ಇಂತಹವರು ನಿಜ ಪುರೋಹಿತರು, ಪುರದ ಹಿತ ಬಯಸುವವರು! 
     ಪುರೋಹಿತನಾದವನ ಗುರುತರವಾದ ಹೊಣೆಗಾರಿಕೆ ಎಂದರೆ ಎಡವದೆ ನಡೆಯಬೇಕಾಗಿರುವುದು ಮತ್ತು ತಿಳಿದ ಜ್ಞಾನವನ್ನು ಸಮಾಜಕ್ಕೆ ತಿಳಿಸಿಕೊಡುವುದಾಗಿರುತ್ತದೆ. ಅಗ್ರಣಿಯಾದವನೇ ಎಡವಿದರೆ ಸಮಾಜಕ್ಕೆ ತಪ್ಪು ಸಂದೇಶ ರವಾನೆಯಾಗುವುದಲ್ಲದೆ ಪುರೋಹಿತರೆಲ್ಲರೂ ಅಂತಹವರೇ ಎಂಬ ಭಾವನೆ ಮೂಡಲು ಕಾರಣವಾಗುತ್ತದೆ. ಕೆಸರೆರಚಲು ಕಾಯುತ್ತಿರುವ ಜನರು ಮತ್ತು ಮಾಧ್ಯಮಗಳವರು ಇದಕ್ಕೆ ನೀರೆರೆಯುತ್ತಾರೆ. ಕಾವಿ ಧರಿಸಿದವರೆಲ್ಲರೂ ಸಂತರಾಗಲಾರರು ಮತ್ತು ಸಂತರಾಗಲು ಕಾವಿಯನ್ನೇ ಧರಿಸಬೇಕೆಂದಿಲ್ಲ.  ತಿಳಿದ ಜ್ಞಾನವನ್ನು ಆಸಕ್ತರಿಗೆ ಹಂಚದಿರುವುದು ಸಹ ಸ್ತೇಯ(ಕಳ್ಳತನ)ವೆನಿಸುತ್ತದೆ. ಸರ್ವೇ ಭವನ್ತು ಸುಖಿನಃ ಸರ್ವೇ ಸಂತು ನಿರಾಮಯಾಃ| ಸರ್ವೇ ಭದ್ರಾಣಿ ಪಶ್ಶಂತು ಮಾ ಕಶ್ಚಿತ್ ದುಃಖಭಾಗ್ಭವೇತ್||  ಎಂದು ಸಾರುವ ನೈಜ ಪುರೋಹಿತರು ನಾವಾಗೋಣ.
-ಕ.ವೆಂ.ನಾಗರಾಜ್.
**************
ದಿನಾಂಕ 23.03.2016ರ ಜನಹಿತ ಪತ್ರಿಕೆಯ 'ಜನಕಲ್ಯಾಣ' ಅಂಕಣದಲ್ಲಿ ಪ್ರಕಟಿತ:

ಗುರುವಾರ, ಜೂನ್ 23, 2016

ಕ್ಷಮಿಸಿ ಮರೆಯೋಣ


     ಹಿರಿಯರೊಬ್ಬರು ನಿಧನರಾಗುವ ಮುನ್ನ ಹಿಂದಿನ ಎರಡು ದಿನಗಳಲ್ಲಿ ತಮ್ಮನ್ನು ಕಾಣಲು ಬರುತ್ತಿದ್ದ ಮಕ್ಕಳಿಗೆ, ಬಂಧುಗಳಿಗೆ, ಸ್ನೇಹಿತರಿಗೆ, ಹಿತೈಷಿಗಳಿಗೆಲ್ಲಾ ಹೇಳುತ್ತಿದ್ದುದು ಒಂದೇ ಮಾತು: 'ಎಲ್ಲಾ ಮರೆತುಬಿಡಿ; ಎಲ್ಲರೂ ಚೆನ್ನಾಗಿರಿ'. ಸಂಬಂಧಪಟ್ಟವರು, ಪಡದಿದ್ದವರು ಎಲ್ಲರಿಗೂ ಈ ಮಾತು ಹೇಳುತ್ತಿದ್ದುದು, ಕೈಹಿಡಿದುಕೊಂಡು ಈ ಮಾತು ಪುನರುಚ್ಛರಿಸುತ್ತಿದ್ದುದು, ಹಾಗೂ ಕೆಲವರಿಂದ ಈ ಕುರಿತು ಭಾಷೆ ಪಡೆಯುತ್ತಿದ್ದುದನ್ನು ಕಂಡ ಕೆಲವರಿಗೆ ಅದು ಅರಳು ಮರಳಿನ ಮಾತಿನಂತೆ ಕಂಡಿದ್ದಿರಬಹುದು. ಆದರೆ ಅಂತರ್ಮುಖಿಯಾಗಿ ಯೋಚಿಸಿದಾಗ ಉತ್ತಮ ಬದುಕಿನ ಸಂದೇಶ ಇದರಲ್ಲಡಗಿರುವುದು ಗೋಚರಿಸದೆ ಇರದು. ಲೋಕೋ ಭಿನ್ನರುಚಿಃ ಎಂಬಂತೆ ಭಿನ್ನ ಅಭಿರುಚಿಗಳ ಜನರ ನಡುವೆ ಸಮನ್ವಯ ಸಾಧಿಸಬೇಕೆಂದರೆ ಈ ಸಂದೇಶದ ಪಾಲನೆಯಿಂದ ಮಾತ್ರ ಸಾಧ್ಯ.
     ಸುಮಾರು ಹದಿನೈದು ವರ್ಷಗಳ ಹಿಂದಿನ ಪ್ರಸಂಗವಿದು. ಅರಕಲಗೂಡಿನಲ್ಲಿ ತಹಸೀಲ್ದಾರನಾಗಿದ್ದಾಗ ಒಂದು ಜಮೀನಿನ ತಕರಾರು ಪ್ರಕರಣ ನನ್ನ ಮುಂದೆ ಬಂದಿತ್ತು. ಗಂಡ ಅಪಘಾತದಲ್ಲಿ ಮೃತನಾದ ನಂತರ ಆತನ ಹೆಸರಿನಲ್ಲಿದ್ದ  ಜಮೀನನ್ನು ತನ್ನ ಹೆಸರಿಗೆ ಖಾತೆ ಮಾಡಿಕೊಡಲು ಮಧ್ಯ ವಯಸ್ಕ ವಿಧವೆ ಕೋರಿದ್ದ ಅರ್ಜಿಗೆ ಗಂಡನ ಅಣ್ಣಂದಿರು ತಕರಾರು ಸಲ್ಲಿಸಿದ್ದರು. ವಿಚಾರಣೆ ಕಾಲದಲ್ಲಿ ತಿಳಿದು ಬಂದಿದ್ದೇನೆಂದರೆ ಮೃತನ ತಂದೆ-ತಾಯಿಗೆ ನಾಲ್ಕು ಗಂಡು ಮಕ್ಕಳು ಮತ್ತು ಒಬ್ಬಳು ಹೆಣ್ಣು ಮಗಳು. ಮೃತನನ್ನು ಹೊರತುಪಡಿಸಿ ಉಳಿದವರೆಲ್ಲಾ ಒಳ್ಳೆಯ ಸ್ಥಿತಿಯಲ್ಲಿದ್ದರು. ಮಗಳನ್ನು ಸಿರಿವಂತ ಕುಟುಂಬಕ್ಕೆ ಕೊಟ್ಟು ವಿವಾಹ ಮಾಡಲಾಗಿತ್ತು. ಹಿರಿಯ ಮಗ ಬೆಂಗಳೂರಿನ ಸರ್ಕಾರಿ ಕಾಲೇಜೊಂದರ ಪ್ರೊಫೆಸರ್, ಎರಡನೆಯವನು ತುಮಕೂರಿನಲ್ಲಿ ಇಂಜನಿಯರ್, ಕೊನೆಯ ಮಗ ಪ್ರೌಢಶಾಲೆಯ ಉಪಾಧ್ಯಾಯ. ಮೃತ ವ್ಯಕ್ತಿ ಮೂರನೆಯವನಾಗಿದ್ದು ಅವಿದ್ಯಾವಂತ. ತಂದೆ-ತಾಯಿಗೆ ಪಿತ್ರಾರ್ಜಿತವಾಗಿ ಬಂದಿದ್ದ ನಾಲ್ಕು ಎಕರೆ ತರಿ ಜಮೀನು ಇತ್ತು. ಒಳ್ಳೆಯ ಸ್ಥಿತಿಯಲ್ಲಿದ್ದ ಉಳಿದ ಮಕ್ಕಳು ಅವಿದ್ಯಾವಂತ ಸಹೋದರನೂ ಚೆನ್ನಾಗಿರಲಿ, ಹಳ್ಳಿಯನ್ನು ಬಿಟ್ಟುಬರಲಿಚ್ಛಿಸದ ತಂದೆ-ತಾಯಿಗೆ ಆಸರೆಯಾಗಿರಲಿ ಎಂಬ ಭಾವನೆಯಿಂದ ಪಿತ್ರಾರ್ಜಿತ ಸ್ವತ್ತನ್ನು ಅವನ ಹೆಸರಿಗೆ ಖಾತೆ ಮಾಡಿಕೊಡಲು ಒಪಿ ಜಮೀನಿನ ಮೇಲಿನ ಹಕ್ಕು ಬಿಟ್ಟುಕೊಟ್ಟು ಅವನ ಹೆಸರಿಗೆ ಖಾತೆ ಮಾಡಿಕೊಟ್ಟಿದ್ದರು. ಬಡಕುಟುಂಬದ ಹೆಣ್ಣನ್ನು ಮದುವೆಯಾಗಿದ್ದ  ಅವನ ಬದುಕಿಗೂ ಇದರಿಂದ ಭದ್ರತೆ ಬಂದಿತ್ತು. ಕೆಲವು ವರ್ಷಗಳ ನಂತರ ಆತ ಅಪಘಾತದಲ್ಲಿ ತೀರಿದಾಗ ಜಮೀನಿನ ಪಾಲು ಕೇಳುವುದರೊಂದಿಗೆ ಮೃತನ ಹೆಂಡತಿಯ ಹೆಸರಿಗೆ ಖಾತೆ ಮಾಡಿಕೊಡಬಾರದೆಂದು  ಮೃತನ ಅಣ್ಣಂದಿರು ತಕರಾರು ಮಾಡಿದ್ದರು. ಜಮೀನು ಕೈತಪ್ಪಿದಲ್ಲಿ ಆಸರೆಯಿಲ್ಲದೆ ಬೀದಿಗೆ ಬೀಳಲಿದ್ದ ಮೃತನ ಹೆಂಡತಿ, ಮದುವೆ ವಯಸ್ಸಿಗೆ ಬಂದಿದ್ದ ಅವನ ಮಗಳ ಕುರಿತು ತಕರಾರುದಾರರಿಗೆ ಮರುಕವಿರಲಿಲ್ಲ. ಕೊನೆಯ ಮಗನೊಬ್ಬ ಮಾತ್ರ ಅತ್ತಿಗೆಯ ಪರವಾಗಿ ಮಾತನಾಡಿದ್ದ. ಪ್ರಭಾವಿ ರಾಜಕಾರಣಿಯೊಬ್ಬರು ತಕರಾರುದಾರರ ಪರವಾಗಿ ತೀರ್ಪು ನೀಡಲು ಒಂದು ರೀತಿಯ ಬೆದರಿಕೆಯ ಒತ್ತಾಯ ಮಾಡಿದ್ದರು. ಕಾಲೇಜು ಪ್ರೊಫೆಸರರು ಹತ್ತು ಸಾವಿರ ರೂ. ಲಂಚದ ಆಮಿಷ ಒಡ್ಡಿದ್ದರು. ಇದನ್ನು ಲೆಕ್ಕಿಸದೆ, ಜಮೀನಿನ ಮೇಲಿನ ಹಕ್ಕನ್ನು ಮೊದಲೇ ಬಿಟ್ಟುಕೊಟ್ಟು ಮೃತನ ಹೆಸರಿಗೆ ಖಾತೆ ಮಾಡಿಕೊಡಲು ತಕರಾರುದಾರರು ಹಿಂದೆ ಬರೆದುಕೊಟ್ಟಿದ್ದ ಒಪ್ಪಿಗೆ ಪತ್ರ ಹಾಗೂ ಮೃತ ಗಂಡನ ಹೆಸರಿನಲ್ಲಿದ್ದ ಜಮೀನು ಇವುಗಳನ್ನು ಪರಿಗಣಿಸಿ ಮೃತನ ಪತ್ನಿಯ ಹೆಸರಿಗೆ ಖಾತೆ ಮಾಡಲು ತೀರ್ಪು ನೀಡಿದಾಗ ಜಮೀನು ಕೈತಪ್ಪಿ ಹೋಗುವುದೆಂದೇ ಆತಂಕದಲ್ಲಿದ್ದ ಆ ಬಡ ಹೆಣ್ಣು ಮಗಳು ತನ್ನ ಮಗಳೊಂದಿಗೆ ಬಂದು ಕಣ್ಣೀರಿಡುತ್ತಾ ಕೃತಜ್ಞತೆ ವ್ಯಕ್ತಪಡಿಸಿದ್ದಳು. ಆಗ ಆಕೆ ಕಾಲೇಜು ಪ್ರೊಫೆಸರರ ಪತ್ನಿಗೂ ತನಗೂ ಒಮ್ಮೆ ಸಂಸಾರಕ್ಕೆ ಸಂಬಂಧಿಸಿದ ವಿಷಯಕ್ಕೆ ಜಗಳವಾಗಿತ್ತೆಂದೂ, ಕುಟುಂಬಗಳಲ್ಲಿ ಪರಸ್ಪರ ಮನಸ್ತಾಪಕ್ಕೆ ಇದೇ ಕಾರಣವಾಗಿ ತಾನು ಬೀದಿಗೆ ಬೀಳುವ ಪ್ರಸಂಗ ಒದಗಿತೆಂದೂ ಕಣ್ಣೀರಿಟ್ಟಿದ್ದಳು. ಮುಂದೊಮ್ಮೆ ಕಾಲೇಜು ಪ್ರೊಫೆಸರರು ಭೇಟಿಯಾದಾಗ ಅವರೊಂದಿಗೆ ಚರ್ಚಿಸಿ ದೊಡ್ಡ ಸ್ಥಾನದಲ್ಲಿರುವ ಅವರು ಪ್ರಸಂಗ ಇಲ್ಲಿಗೇ ಮುಕ್ತಾಯಗೊಳಿಸಿದಲ್ಲಿ ಆಗುವ ಸತ್ಪರಿಣಾಮದ ಕುರಿತು ಹಾಗೂ ಇದರಿಂದ ನಿಜಕ್ಕೂ ದೊಡ್ಡವರೆನಿಸಿಕೊಳ್ಳುತ್ತೀರೆಂದು ಮನವರಿಕೆ ಮಾಡಿಕೊಟ್ಟಾಗ ತೀರ್ಪಿನ ವಿರುದ್ಧ ಅವರು ಸಲ್ಲಿಸಬೇಕೆಂದಿದ್ದ್ದ ಮೇಲುಮನವಿಯನ್ನು ಸಲ್ಲಿಸಿರಲಿಲ್ಲ. ಕೆಟ್ಟ ಘಳಿಗೆಯೊಂದರಲ್ಲಿ ಕುಟುಂಬದ ಸದಸ್ಯರುಗಳಲ್ಲಿ ಉಂಟಾಗುವ ಮನಸ್ತಾಪ ಮಾನವೀಯತೆಯನ್ನೇ ಹೇಗೆ ಮರೆಸುತ್ತದೆ ಎಂಬುದನ್ನು ತೋರಿಸುವುದಷ್ಟೇ ಈ ಪ್ರಸಂಗ ಉಲ್ಲೇಖಿಸಿದ ಉದ್ದೇಶ. ಹಲವಾರು ಕಾರಣಗಳಿಗಾಗಿ ಉಂಟಾಗುವ ಜಗಳ, ಮನಸ್ತಾಪಗಳನ್ನು ಮರೆತು ಪರಸ್ಪರರನ್ನು ಕ್ಷಮಿಸಿ ಮುನ್ನಡೆದಲ್ಲಿ ಸಂಬಂಧಗಳು ಉಳಿದುಕೊಳ್ಳುತ್ತವೆ. ಇಲ್ಲದಿದ್ದಲ್ಲಿ ಸಂಬಂಧಗಳು ಹಳಸುತ್ತದೆ. ಹಳಸಿದ ಸಂಬಂಧಗಳ ಲಾಭ ಇತರರಿಗೆ ಆಗುತ್ತದೆ. ಸಂಬಂಧಿಸಿದವರು ನಗೆಪಾಟಲಿಗೆ ಒಳಗಾಗುವರಲ್ಲದೆ ಅವರ ಬಗ್ಗೆ ಇರುವ ಒಳ್ಳೆಯ ಅಭಿಪ್ರಾಯ ಹೊರಟುಹೋಗುತ್ತದೆ. ಸಂಬಂಧಗಳು ಕಳಚಿದ ಬಗ್ಗೆ ಮನದಾಳದಲ್ಲಿ ನೋವು ಉಳಿಯುತ್ತದೆ. ಹೊಂದಿಕೊಂಡು ನಡೆದಲ್ಲಿ ಸಂಬಂಧಗಳು ಮಧುರವಾಗಿ ಉಳಿಯದಿದ್ದರೂ ಹಾಳಾಗುವುದಿಲ್ಲ. ಈ ಹಿನ್ನೆಲೆಯಲ್ಲಿ ಎಲ್ಲಾ ಮರೆತುಬಿಡಿ, ಚೆನ್ನಾಗಿರಿ ಎಂಬ ಮಾತು ಅರ್ಥಪೂರ್ಣವೆನಿಸುತ್ತದೆ. ಮನ ನೋಯುವಂತಹ ಕೆಲವು ಸಂಗತಿಗಳು ಘಟಿಸಿದ  ಸಂದರ್ಭಗಳಲ್ಲಿ ತಕ್ಷಣದಲ್ಲಿ ಕೋಪದಿಂದ ಪ್ರತಿಕ್ರಿಯೆ ವ್ಯಕ್ತಪಡಿಸದೆ ಇದ್ದಲ್ಲಿ ಸಂಬಂಧಗಳು ಉಳಿದುಕೊಳ್ಳುತ್ತವೆ.
      ಹೊಂದಾಣಿಕೆಯಿದ್ದಲ್ಲಿ ಸಂಬಂಧಗಳು ಚೆನ್ನಾಗಿರುತ್ತದೆ. ಸಂಬಂಧಗಳು ಚೆನ್ನಾಗಿದ್ದಲ್ಲಿ ಜೀವನ ಸಹನೀಯವೆನಿಸುತ್ತದೆ. ಸಂಬಂಧಗಳು ಹಾಳಾಗಲು ಕಾರಣಗಳೇನು ಎಂದು ವಿಶ್ಲೇಷಿಸುವುದು ಋಣಾತ್ಮಕ ಚಿಂತನೆಯಾಗುತ್ತದೆ. ಸಂಬಂಧಗಳು ಹಾಳಾಗದಿರಲು ಏನು ಮಾಡಬಹುದು ಎಂದು ಧನಾತ್ಮಕವಾಗಿ ನೋಡೋಣ. ಸಂಬಂಧಗಳು ಉಳಿಯಬೇಕೆಂದರೆ - ೧. ಸಂಬಂಧಗಳು ಇರಬೇಕು, ಉಳಿಯಬೇಕು, ಬೆಳೆಯಬೇಕು ಎಂಬ ಮನೋಭಾವ, ೨. ಕುಟುಂಬ ಎಂದರೆ ಕೇವಲ ಗಂಡ, ಹೆಂಡತಿ ಮತ್ತು ಮಕ್ಕಳು ಮಾತ್ರ ಎಂಬ ಸೀಮಿತ ಪರಿಧಿಯಿಂದ ಹೊರಬರುವುದು. ೩. ಕುಟುಂಬದ ಸದಸ್ಯರುಗಳಲ್ಲಿ ಭಿನ್ನಾಭಿಪ್ರಾಯಗಳಿದ್ದಲ್ಲಿ ಮನಸ್ತಾಪಗಳ ಸಂದರ್ಭಗಳು ಬಾರದಂತೆ ನೋಡಿಕೊಳ್ಳುವುದು, ೪. ತಾಳ್ಮೆ, ಸಹನೆಯಿಂದ ವರ್ತಿಸುವುದು, ಕೋಪತಾಪದ ಸಂದರ್ಭಗಳಲ್ಲಿ ತಕ್ಷಣ ಪ್ರತಿಕ್ರಿಯಿಸದೆ ಸೂಕ್ತ ಸಮಯದಲ್ಲಿ ಅಭಿಪ್ರಾಯ ವ್ಯಕ್ತಪಡಿಸುವುದು, ೫. ಮೂರನೆಯ ವ್ಯಕ್ತಿಗಳು ಮೂಗು ತೂರಿಸಿ ಸಂಬಂಧಗಳನ್ನು ಕೆಡಿಸಲು ಅವಕಾಶ ಕೊಡದಿರವುದು, ಅವರು ಹೇಳುವ ಮಾತುಗಳಲ್ಲಿ ನಿಜವಿದ್ದರೂ ಅದಕ್ಕೆ ಪ್ರಾಮುಖ್ಯತೆ ನೀಡದಿರುವುದು, ೬. ಇರುವ ಸ್ಥಿತಿಗಿಂತ ಉತ್ತಮ ಸ್ಥಿತಿಗೆ ಬರಲು ಸಂಬಂಧಿಗಳಲ್ಲಿ ಆರೋಗ್ಯಕರ ಸ್ಪರ್ಧೆ ಇರಬೇಕು, ಆದರೆ ನಮಗಿಂತ ಚೆನ್ನಾಗಿರುವ ಸಂಬಂಧಿಗಳ ಕುರಿತು ಹೊಟ್ಟೆಕಿಚ್ಚು ಪಡದೆ, ಉತ್ತಮ ಸ್ಥಿತಿಯಲ್ಲಿರದವರನ್ನು ಕಡೆಗಣಿಸದೆ ಇರುವ ಮನೋಭಾವ ಇರಬೇಕು. ನಾವು ದೊಡ್ಡವರಾಗಲು ಇತರರನ್ನು ಚಿಕ್ಕವರಾಗಿ ಬಿಂಬಿಸಬೇಕಿಲ್ಲ. ನಾವು ದೊಡ್ಡತನದಿಂದ ವರ್ತಿಸಬೇಕಷ್ಟೆ. ೭. ಮಾತುಕತೆಗಳಲ್ಲಿ ಸಂಯಮವಿರುವುದು. ವ್ಯಕ್ತಿಗಳನ್ನು ಮುದುಕ, ಮುದುಕಿ, ಕುಂಟ, ಕುರುಡ, ಕುಳ್ಳ, ಲಂಬು, ಪೆದ್ದ, ಹುಚ್ಚ, ಇತ್ಯಾದಿ ವಿಶೇಷತೆಗಳನ್ನು ಜೋಡಿಸಿ ಎದುರಿನಿಂದಾಗಲೀ, ಹಿಂದಿನಿಂದಾಗಲೀ ಸಂಬೋಧಿಸದಿರುವುದು. ಇತರರ ಅಭಿಪ್ರಾಯಗಳನ್ನು ಅವು ನಮಗೆ ಸರಿಯೆನಿಸದಿದ್ದರೂ ಗೌರವಿಸುವ ಅಭ್ಯಾಸ ಬೆಳೆಸಿಕೊಳ್ಳುವುದು. ಎದುರಿಗಿಲ್ಲದ ವ್ಯಕ್ತಿಗಳ ಬಗ್ಗೆ ಸಹ ಹಗುರವಾಗಿ ಮಾತನಾಡದಿರುವುದು. ಒಂದಲ್ಲಾ ಒಂದು ಸಂದರ್ಭದಲ್ಲಿ ಆ ಮಾತು ಅವರಿಗೆ ತಲುಪುತ್ತದೆ ಹಾಗೂ ಅದರಿಂದ ಮಾತನಾಡಿದವರು ಸಣ್ಣವರಾಗುತ್ತಾರೆ ಎಂಬ ಅರಿವಿರುವುದು.  ೮. ತಮ್ಮದು ತಪ್ಪು ಎಂದು ಕಂಡುಬಂದರೆ ಹಿಂಜರಿಕೆ ತೋರದೆ ಒಪ್ಪಿಕೊಂಡು ಸರಿಪಡಿಸಿಕೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡುವುದು, ೯. ಸಂಬಂಧಗಳನ್ನು ಕೆಡಿಸುವವರಿಂದ ದೂರವಿರುವುದು, ೧೦. ಯಾರನ್ನೂ ದೂರದಿರುವುದು, ಯಾರಿಗೂ ಕೇಡೆಣಿಸದಿರುವುದು, . . ಹೀಗೆ ಪಟ್ಟಿ ಬೆಳೆಸುತ್ತಾ ಹೋಗಬಹುದು. ಇದರಲ್ಲಿನ ಒಂದೊಂದು ಅಂಶಗಳ ಕುರಿತೂ ಸ್ವವಿಮರ್ಶೆ ಮಾಡಿಕೊಳ್ಳುವುದು ಪ್ರತಿಯೊಬ್ಬರಿಗೆ ಅವಶ್ಯವಾಗಿದೆ.
     ಬಾಳು, ಬಾಳಗೊಡು ಎಂದ ಮಹಾವೀರ, ನಿನ್ನಂತೆಯೇ ನಿನ್ನ ನೆರೆಯವನನ್ನು ಪ್ರೀತಿಸು ಎಂದ ಏಸುಕ್ರಿಸ್ತ, ಇವನಾರವ, ಇವನಾರವ ಎಂದೆಣಿಸದಿರಯ್ಯ, ಇವ ನಮ್ಮವನೆಂದೆಣಿಸಯ್ಯ ಎಂದ ಬಸವಣ್ಣ,  ತನ್ನಂತೆ ಪರರ ಬಗೆದೊಡೆ ಕೈಲಾಸ ಬಿನ್ನಾಣವಕ್ಕು ಎಂದ ಸರ್ವಜ್ಙನೇ ಮುಂತಾದ ದಾರ್ಶನಿಕರು, ಸಂತರು ಒತ್ತಿ ಹೇಳುವುದು ಒಂದೇ ವಿಷಯ - ಮನುಷ್ಯನಿಗೆ ಇರಬೇಕಾಧ ಹೊಂದಾಣಿಕೆಯ ಮನೋಭಾವ. ನಮ್ಮದು ತಪ್ಪಿದ್ದರೆ ತಿದ್ದಿಕೊಂಡು ನಡೆಯೋಣ. ಇತರರ ತಪ್ಪನ್ನು ಕ್ಷಮಿಸೋಣ. ಕ್ಷಮಿಸುವ ಮನೋಭಾವ ದೈವತ್ವದ ಗುಣ. ಸ್ವಾಮಿ ವಿವೇಕಾನಂದರ ಈ ವಾಣಿಯನ್ನುನೆನಪಿನಲ್ಲಿಡೋಣ:
     ಇತರರಿಗೆ ಒಳಿತು ಮಾಡುವುದೇ ಧರ್ಮ; ಇತರರನ್ನು ಘಾಸಿಗೊಳಿಸುವುದು ಅಧರ್ಮ. ಇತರರನ್ನು ಪ್ರೀತಿಸುವುದು ಧರ್ಮ; ದ್ವೇಷಿಸುವುದೇ ಅಧರ್ಮ. ಇತರರ ಬಗ್ಗೆ ದೂಷಿಸಿ ಮಾತನಾಡುವುದು ತಪ್ಪು. ಬಹಳಷ್ಟು ಸಂಗತಿಗಳು ಮನಸ್ಸಿನಲ್ಲಿ ಮೂಡಬಹುದು; ಅವುಗಳನ್ನು ವ್ಯಕ್ತಪಡಿಸುತ್ತಾ ಹೋದರೆ ಕ್ರಮೇಣ ಸಣ್ಣ ಮಣ್ಣುಗುಡ್ಡೆಯೇ ಬೆಟ್ಟವಾಗುತ್ತದೆ. ಕ್ಷಮಿಸಿದರೆ ಮತ್ತು ಕ್ಷಮಿಸಿ ಮರೆತುಬಿಟ್ಟರೆ ಎಲ್ಲವೂ ಸುಖಾಂತ್ಯವಾಗುತ್ತದೆ.  ಎಂತಹ ಸತ್ವಯುತವಾದ, ಸತ್ಯವಾದ ಮಾತಿದು! 
ಅಡಿಗಡಿಗೆ ಕಾಡಿ ಶಿರನರವ ತೀಡಿ
ಮಿಡಿದಿಹುದು ಉಡಿಯೊಳಗಿನ ಕಿಡಿಯು||
ಗಡಿಬಿಡಿಯಲಡಿಯಿಡದೆ ತಡೆತಡೆದು
ಸಿಡಿನುಡಿಯ ನೀಡು ಸಿಹಿಯ ಮೂಢ||
 -ಕ.ವೆಂ. ನಾಗರಾಜ್.
***************
ದಿನಾಂಕ 16.03.2016ರ ಜನಹಿತ ಪತ್ರಿಕೆಯ 'ಜನಕಲ್ಯಾಣ' ಅಂಕಣದಲ್ಲಿ [ಪ್ರಕಟಿತ:

ಶನಿವಾರ, ಜೂನ್ 18, 2016

ಉದಾತ್ತ ವಿಚಾರದ ಬಲಿವೈಶ್ವದೇವಯಜ್ಞ


ಹಸಿದವಗೆ ಹುಸಿ ವೇದಾಂತ ಬೇಡ
ಕಥೆ ಕವನ ಸಾಹಿತ್ಯ ಬೇಡವೇ ಬೇಡ |
ಬಳಲಿದ ಉದರವನು ಕಾಡಬೇಡ
ಮುದದಿ ಆದರಿಸಿ ಮೋದಪಡು ಮೂಢ ||
     ಒಂದು ಕಾಲವಿತ್ತು. ಯಾರಾದರೂ ಅತಿಥಿಗೆ, ಹಸಿದವರಿಗೆ, ಪ್ರಯಾಣಿಕರಿಗೆ ಊಟ ಹಾಕದೆ ಮನೆಯ ಯಜಮಾನ ಊಟ ಮಾಡುತ್ತಿರಲಿಲ್ಲ. ಯಾರೂ ಬರದಿದ್ದರೆ ಯಜಮಾನನೇ ಅಂತಹವರನ್ನು ಹುಡುಕಿಕೊಂಡು ಹೋಗುತ್ತಿದ್ದುದೂ ಉಂಟು. ಅನ್ನ ಮತ್ತು ವಿದ್ಯೆಗಳನ್ನು ಮಾರಾಟ ಮಾಡಬಾರದೆಂಬುದು ಅಂದು ಪಾಲಿಸಿಕೊಂಡು ಬರುತ್ತಿದ್ದ ಸಂಪ್ರದಾಯವಾಗಿತ್ತು. ಆಹಾರ ಮತ್ತು ಶಿಕ್ಷಣ ವ್ಯಾಪಾರದ ಸರಕಾಗಿರುವ ಇಂದಿನ ಕಾಲದಲ್ಲಿ ಇಂತಹ ಆಚಾರವನ್ನು ಕಲ್ಪಿಸಿಕೊಳ್ಳುವುದೂ ಕಷ್ಟವೇ.
     ಯಜ್ಞ ಎಂದಾಕ್ಷಣ ಹೋಮಕುಂಡದ ಮುಂದೆ ಕುಳಿತು ಮಂತ್ರ ಪಠಿಸುತ್ತಾ ಹವನ, ಹೋಮಗಳನ್ನು ನಡೆಸುವುದು ಮಾತ್ರ ಅಲ್ಲ ಎಂಬುದನ್ನು ನೆನಪಿನಲ್ಲಿಡಬೇಕು. ಯಾವುದೆಲ್ಲಾ ಶ್ರೇಷ್ಠತಮವಾದ ಕಾರ್ಯಗಳೋ ಅವೆಲ್ಲವೂ ಯಜ್ಞವಾಗುತ್ತದೆ. ಬ್ರಹ್ಮಯಜ್ಞ (ಸಂಧ್ಯಾಕಾಲದಲ್ಲಿ, ಅಂದರೆ ಸೂರ್ಯೋದಯ ಮತ್ತು ಸೂರ್ಯಾಸ್ತ ಸಮಯದಲ್ಲಿ ಮಾಡುವ ಸಂಧ್ಯಾವಂದನೆ), ದೇವಯಜ್ಞ (ಪಂಚಭೂತಗಳಾದ ಭೂಮಿ, ಆಕಾಶ, ವಾಯು, ಜಲ, ಅಗ್ನಿಗಳ ಸಂರಕ್ಷಣೆ, ಪೋಷಣೆಯ ಸಂಕಲ್ಪದೊಡನೆ ಮಾಡುವ ಪರಮಾತ್ಮನ ಸ್ತುತಿ), ಪಿತೃಯಜ್ಞ (ಹಿರಿಯರು ಸತ್ತ ನಂತರ ಮಾಡುವ ಶ್ರಾದ್ಧಕಾರ್ಯಗಳಾಗಿರದೆ ಅವರು ಬದುಕಿರುವಾಗ ಅವರನ್ನು ಸಂತೋಷದಿಂದ ಇರುವಂತೆ ನೋಡಿಕೊಳ್ಳುವುದು), ಬಲಿವೈಶ್ವದೇವಯಜ್ಞ (ಮುಂದೆ ವಿವರಿಸಿದೆ) ಮತ್ತು ಅತಿಥಿ ಯಜ್ಞ (ಆಕಸ್ಮಿಕವಾಗಿ ಆಗಮಿಸುವ ಸಜ್ಜನರು, ಸಾಧು-ಸಂತರು, ವಿದ್ವಜ್ಜನರು, ಹಿರಿಯರು ಮುಂತಾದವರನ್ನು ಯಥೋಚಿತವಾಗಿ ಸತ್ಕರಿಸುವುದು) ಇವುಗಳನ್ನು ಪಂಚಮಹಾಯಜ್ಞಗಳೆಂದು ಹೆಸರಿಸಲಾಗಿದೆ.
     ಪಂಚಮಹಾಯಜ್ಞಗಳಲ್ಲಿ ನಾಲ್ಕನೆಯದಾದ ಬಲಿವೈಶ್ವದೇವಯಜ್ಞ - ನಿಜಕ್ಕೂ ಒಂದು ಅದ್ಭುತ ವಿಚಾರ, ಉದಾತ್ತ ಕಲ್ಪನೆಗಳನ್ನೊಳಗೊಂಡ ಪ್ರತಿದಿನ ಮಾಡಬೇಕಾದ ಯಜ್ಞವಾಗಿದೆ. ಇದನ್ನು ಪ್ರತ್ಯಕ್ಷ ಆಚರಣೆಗೆ ತಂದಿರುವವರನ್ನು ನಾನು ಕಂಡಿಲ್ಲ. ಅಂತಹವರು ಇದ್ದರೆ ಅವರಿಗೆ ನನ್ನ ಸಾಷ್ಟಾಂಗ ಪ್ರಣಾಮಗಳು. ಈ ಯಜ್ಞದ ಆಚರಣೆಯ ಕ್ರಮ ಹೀಗಿದೆ. ಭೋಜನಕ್ಕಾಗಿ ಸಿದ್ಧಪಡಿಸಿದ ಆಹಾರ ಪದಾರ್ಥಗಳಲ್ಲಿ ಹುಳಿ, ಉಪ್ಪು, ಖಾರ, ದ್ವಿದಳ ಧಾನ್ಯಗಳನ್ನು ಹೊರತುಪಡಿಸಿ ಉಳಿದ ಆಹಾರದಲ್ಲಿ ಸ್ವಲ್ಪ ಭಾಗವನ್ನು ಪರಮಾತ್ಮನ ಸಾಕ್ಷಾತ್ಕಾರ ಮತ್ತು ಜಠರಾಗ್ನಿಯ ಪ್ರದೀಪ್ತತೆಗಾಗಿ, ಶಾಂತಿ, ಇತ್ಯಾದಿ ಸದ್ಗುಣಗಳ ಧಾರಣೆಗಾಗಿ, ಪ್ರಾಣಾಪಾನ ಪುಷ್ಟಿಗಾಗಿ, ವಿವಿಧ ಶಕ್ತಿಗಳ ಸಲುವಾಗಿ ಮತ್ತು ಸಮಸ್ತ ವಿದ್ವಜ್ಜನರ ಪ್ರಸನ್ನತೆಯ ಸಲುವಾಗಿ, ರೋಗಗಳಿಗೆ ಚಿಕಿತ್ಸೆ ನೀಡುವ ವೈದ್ಯನ ಹಾಗೂ ರೋಗನಿರೋಧಕ ಶಕ್ತಿ ಪ್ರಾಪ್ತಿಗಾಗಿ, ಶರೀರಧಾರ್ಢ್ಯ ಪ್ರಾಪ್ತಿಗಾಗಿ, ಅಧ್ಯಯನಾನುಕೂಲ ವಿದ್ವಾಂಸರ ಪ್ರಸನ್ನತೆಗಾಗಿ, ನಮ್ಮ ಹಿರಿಯರು ಮತ್ತು ಪರಮಾತ್ಮನ ತೃಪ್ತಿಗಾಗಿ ಒಂದು ಮಂತ್ರಕ್ಕೆ ಒಂದು ಸಲದಂತೆ ಅಗ್ನಿಗೆ ಆಹುತಿ ನೀಡಬೇಕು. ಶಕ್ತಿಮೂಲವಾದ ಆಹಾರದ ಕಣಗಳು ಅಗ್ನಿಯಲ್ಲಿ ವಿಭಜಿತವಾಗಿ ವಾತಾವರಣದಲ್ಲಿ ಹರಡಿ ಸೇವಿಸುವವರಿಗೆ ಶಕ್ತಿಯನ್ನು ಉತ್ತೇಜಿಸುತ್ತವೆಯೆನ್ನಲಾಗಿದೆ. ಆ ಸಂದರ್ಭದಲ್ಲಿ ಹೇಳಲಾಗುವ ೧೦ ಮಂತ್ರಗಳು:
     ಓಂ ಅಗ್ನಯೇ ಸ್ವಾಹಾ|| ಓಂ ಸೋಮಾಯ ಸ್ವಾಹಾ|| ಓಂ ಅಗ್ನಿ ಸೋಮಾಭ್ಯಾಂ ಸ್ವಾಹಾ|| ಓಂ ವಿಶ್ವೇಭ್ಯೋ ದೇವೇಭ್ಯಃ ಸ್ವಾಹಾ|| ಓಂ ಧನ್ವಂತರಯೇ ಸ್ವಾಹಾ|| ಓಂ ಕುಹ್ವೈ ಸ್ವಾಹಾ|| ಓಂ ಅನುಮತ್ಯೈ ಸ್ವಾಹಾ|| ಓಂ ಪ್ರಜಾಪತಯೇ ಸ್ವಾಹಾ|| ಓಂ ಸಹ ದ್ವಾವಾ ಪೃಥಿವೀಭ್ಯಾಂ ಸ್ವಾಹಾ|| ಓಂ ಸ್ವಿಷ್ಟಕೃತೇ ಸ್ವಾಹಾ||
     ನಂತರದಲ್ಲಿ ಒಂದು ಎಲೆಯ ಮೇಲೆ ಉಪ್ಪು ಹಾಕಲ್ಪಟ್ಟ ಸಿದ್ಧಪಡಿಸಿದ ಅನ್ನ, ಸಾರು, ಪಲ್ಯ, ರೊಟ್ಟಿ ಮುಂತಾದ ಆಹಾರಪದಾರ್ಥಗಳ ಒಂದು ಭಾಗವನ್ನು ಹರಡಿ, ಅದನ್ನು ಪುನಃ ಏಳು ಭಾಗಗಳಾಗಿ ವಿಂಗಡಿಸಿ, ಶ್ವಭ್ಯೋ ನಮಃ| ಪತಿತೇಭ್ಯೋ ನಮಃ| ಶ್ವಪಗ್ಯೋ ನಮಃ| ಪಾಪ ರೋಗಿಭ್ಯೋ ನಮಃ| ಗೋಭ್ಯೋ ನಮಃ| ವಾಯುಸೇಭ್ಯೋ ನಮಃ| ಕೃಮಿಭ್ಯೋ ನಮಃ| ಎಂದು ಹೇಳಿ ಆ ಭಾಗಗಳನ್ನು ದೀನರಿಗೆ, ದುರ್ಬಲರಿಗೆ, ಹಸಿದವರಿಗೆ, ರೋಗಿಗಳಿಗೆ, ಗೋವು, ನಾಯಿ, ಮುಂತಾದ ಸಾಕುಪ್ರಾಣಿಗಳಿಗೆ, ಪಕ್ಷಿಗಳಿಗೆ, ಇರುವೆ ಮೊದಲಾದ ಕ್ರಿಮಿಕೀಟಗಳಿಗೆ ಕೊಡಬೇಕು. ನಂತರದಲ್ಲಿ ಸ್ವತಃ ಊಟ ಮಾಡುವುದು ಕ್ರಮ. ಸಾಮರಸ್ಯ, ಸ್ವಾರ್ಥತ್ಯಾಗ, ಪರಾರ್ಥ ಚಿಂತನೆಗೆ ಇಂಬು ಕೊಡುವ ಇಂತಹ ಕ್ರಿಯೆಯನ್ನು ಪ್ರೋತ್ಸಾಹಿಸುವುದು ಅಗತ್ಯವಾಗಿದೆ. ಮನುಷ್ಯ-ಮನುಷ್ಯರ ನಡುವೆಯೇ ಆ ಜಾತಿ, ಈ ಜಾತಿ, ಮೇಲು-ಕೀಳು, ಬಡವ-ಶ್ರೀಮಂತ, ಜ್ಞಾನಿ-ಅಜ್ಞಾನಿ, ಇತ್ಯಾದಿ ಭೇದ ಭಾವಗಳ ಮಹಾಪೂರವನ್ನೇ ಕಾಣುತ್ತಿರುವ ನಮಗೆ, ಮಾನವರಿರಲಿ, ಸಕಲ ಜೀವರಾಶಿಗಳ ಅಭ್ಯುದಯದ ಕಲ್ಪನೆ, ಮಾರ್ಗದರ್ಶನ ಮಾಡುವ ಈ ಕ್ರಿಯೆ ಅನುಕರಣೀಯವಾಗಿದೆ.
     ನೋಡುವ ಕಣ್ಣುಗಳಿದ್ದರೆ ನಮಗೆ ಬಲಿವೈಶ್ವದೇವ ಯಜ್ಞದ ಉದ್ದೇಶವನ್ನು ಬದುಕಿನ ಅಂಗವಾಗಿಸಿಕೊಂಡ ಹಲವಾರು ಮಹನೀಯರು ಕಂಡುಬರುತ್ತಾರೆ. ಉದಾಹರಣೆಗೆ ಹೇಳಬೇಕೆಂದರೆ, ತಮಿಳುನಾಡಿನ ತೂತ್ತುಕುಡಿ ಜಿಲ್ಲೆಯ ಶ್ರೀವೈಕುಂಠಮ್ ಕಲಾ ಕಾಲೇಜಿನಲ್ಲಿ ಗ್ರಂಥಪಾಲಕರಾಗಿ ಕೆಲಸ ಮಾಡಿದ್ದ ಪಾಲಂ ಕಲ್ಯಾಣಸುಂದರಮ್ ತಮ್ಮ 30 ವರ್ಷಗಳ ಸೇವೆಯಲ್ಲಿ ಪಡೆದ ಸಂಬಳದ ಹಣವನ್ನು ಪೂರ್ಣವಾಗಿ ಬಡಬಗ್ಗರ ಸೇವೆಗಾಗಿ ವಿನಿಯೋಗಿಸಿದವರು. ಬ್ರಹ್ಮಚಾರಿಯಾಗಿದ್ದ ಇವರು ತಮ್ಮ ಅಗತ್ಯಗಳಿಗಾಗಿ ಹೋಟೆಲ್ ಮಾಣಿಯಂತಹ ಕೆಲಸಗಳನ್ನೂ ಮಾಡಿದವರು. ಪೆನ್ಶನ್ ಮತ್ತು ನಿವೃತ್ತಿ ಸಂಬಂಧವಾಗಿ ಬಂದ ಸುಮಾರು 10 ಲಕ್ಷ ರೂಗಳನ್ನೂ ಜಿಲ್ಲಾಧಿಕಾರಿಯವರ ನಿಧಿಗೆ ಕೊಟ್ಟು ನಿರಾಳರಾದವರು. ವಿಶ್ವಸಂಸ್ಥೆ ಇವರನ್ನು 20ನೆಯ ಶತಮಾನದ ಪ್ರಮುಖ ವ್ಯಕ್ತಿಗಳಲ್ಲೊಬ್ಬರು ಎಂದು,  ಅಮೆರಿಕಾದ ಒಂದು ಸಂಸ್ಥೆ ಸಹಸ್ರಮಾನದ ಪುರುಷ,  ಭಾರತ ಸರ್ಕಾರ 1990ರಲ್ಲಿ ಭಾರತದ ಅತ್ಯುತ್ತಮ ಗ್ರಂಥಪಾಲಕರೆಂದು ಇವರನ್ನು ಸನ್ಮಾನಿಸಿದೆ. ಪ್ರಪಂಚದ ಅತ್ಯುಚ್ಛ ಹತ್ತು ಗ್ರಂಥಪಾಲಕರುಗಳಲ್ಲೊಬ್ಬರು ಎಂದು ಗುರುತಿಸಲ್ಪಟ್ಟವರಿವರು. ಕೇಂಬ್ರಿಡ್ಜಿನ ಇಂಟರ್ ನ್ಯಾಶನಲ್ ಬಯೋಗ್ರಾಫಿಕಲ್ ಸೆಂಟರ್ ಇವರನ್ನು ಪ್ರಪಂಚದ ಅತ್ಯುನ್ನತ (Noble) ಉದಾತ್ತರಲ್ಲೊಬ್ಬರು ಎಂದು ಗೌರವಿಸಿದೆ. ರೋಟರಿ ಇಂಟರ್‌ನ್ಯಾಷನಲ್ 2011ರಲ್ಲಿ ಇವರನ್ನು ಜೀವಮಾನದ ಸಾಧನೆಗಾಗಿ ಸನ್ಮಾನಿಸಿದೆ. ಸಹಸ್ರಮಾನದ ವ್ಯಕ್ತಿ ಎಂದು ಗೌರವಿಸಿದಾಗ ಇವರಿಗೆ ಕೊಡಲಾಗಿದ್ದ 30 ಕೋಟಿ ರೂ.ಗಳನ್ನೂ ಬಿಡಿಗಾಸೂ ಇಟ್ಟುಕೊಳ್ಳದೆ ಸಮಾಜಕ್ಕೇ ಧಾರೆ ಎರೆದುಬಿಟ್ಟ ಪುಣ್ಯಾತ್ಮ ಇವರು. ಯಾರು ಯಾರನ್ನೋ ಹೀರೋಗಳು ಎಂದು ಭಾವಿಸುವ ನಮಗೆ ಕಲ್ಯಾಣಸುಂದರಮ್‌ರಂತಹವರು ಹೀರೋಗಳಾಗಬೇಕು.
-ಕ.ವೆಂ.ನಾಗರಾಜ್.
**************
ದಿನಾಂಕ 09-03-2016ರ ಜನಹಿತ ಪತ್ರಿಕೆಯ 'ಜನಕಲ್ಯಾಣ' ಅಂಕಣದಲ್ಲಿ ಪ್ರಕಟಿತ:

ಸೋಮವಾರ, ಜೂನ್ 13, 2016

ನಿಂದಕರಿಗೆ ನಮಸ್ಕಾರ!


     ದೂರುವವರು, ದೂಷಿಸುವವರು ಇರುವ ಕಾರಣದಿಂದಲೇ ಜನರು ತಮ್ಮ ನಡವಳಿಕೆಯ ಬಗ್ಗೆ ಎಚ್ಚರದಿಂದಿರುತ್ತಾರೆ. ಪಕ್ಷಿಗಳಿಗೆ ಅಪಾಯವಿರದಿರುತ್ತಿದ್ದರೆ ಅವು ನಿರಾತಂಕವಾಗಿ ಓಡಾಡಿಕೊಂಡಿದ್ದು ಹಾರುವುದನ್ನೇ ಮರೆತುಬಿಡುತ್ತಿದ್ದವಲ್ಲವೇ? ಅದೇ ರೀತಿ ನಿಂದಕರಿಂದಾಗಿ ಜನರು ತಪ್ಪು ಮಾಡಬಯಸುವುದಿಲ್ಲ. ದೂರುವುದು, ದೂಷಿಸುವುದು ಒಂದು ಹಂತದವರೆಗೆ ಒಳ್ಳೆಯದು. ತಪ್ಪನ್ನು ಸರಿಯಾಗಿಸುವ ದೃಷ್ಟಿಯಿಂದ ಮಾಡುವ ನಿಂದನೆಗಳು ಒಳ್ಳೆಯದು. ಆದರೆ ನಿಂದನೆ, ದೂಷಣೆಗಳನ್ನೇ ಹವ್ಯಾಸವಾಗಿರಿಸಿಕೊಂಡ, ದೂಷಣೆಯಲ್ಲೇ ಮತ್ತು ಅದರಿಂದ ಇತರರಿಗೆ ಆಗುವ ಹಿಂಸೆಯಿಂದಲೇ ಸಂತೋಷ ಪಡುವ ಮನೋಭಾವ ಹೊಂದಿದ ಕೆಲವು ವಿಕ್ಷಿಪ್ತ ಮನಸ್ಕರಿಂದ ಸಮಸ್ಯೆಗೆ ಪರಿಹಾರ ಸಿಗುವುದಿರಲಿ, ಸಮಸ್ಯೆ ಇನ್ನೂ ಜಟಿಲವಾಗುತ್ತದೆ. ತಪ್ಪು ಕಂಡು ಹಿಡಿಯುವುದು ಸುಲಭ; ದೂರುವುದೂ ಸುಲಭ; ಆದರೆ ಅದಕ್ಕೆ ಪರಿಹಾರದ ದಾರಿಯನ್ನು ಸೂಚಿಸುವುದು ಮತ್ತು ಅದರಂತೆ ನಡೆಯುವುದು ಉತ್ತಮವಾದ ನಡವಳಿಕೆಯೆನಿಸುತ್ತದೆ. ಮನಸ್ಸು ಶಾಂತ ಸ್ಥಿತಿಯಲ್ಲಿ ಇರಬೇಕೆಂದರೆ ಮೊದಲು ಇತರರಲ್ಲಿ ತಪ್ಪು ಕಂಡು ಹಿಡಿಯಲು ಹೋಗದೆ, ತಮ್ಮ ತಪ್ಪುಗಳನ್ನು ಗುರುತಿಸಿಕೊಂಡು ತಿದ್ದಿ ನಡೆಯುವುದನ್ನು ಅಭ್ಯಸಿಸಬೇಕು. ಇತರರ ತಪ್ಪುಗಳ ಬಗ್ಗೆಯೇ ಚಿಂತಿಸುವುದು ಮತ್ತು ಎತ್ತಿ ಆಡುವುದರಿಂದ ನೆಮ್ಮದಿ ಹಾಳಾಗುತ್ತದೆ. ನೆಮ್ಮದಿ ಹಾಳಾಗುವುದೆಂದರೆ ನಾಶದ ಹಾದಿ ಹಿಡಿದಂತೆಯೇ ಸರಿ.
     ಅಷ್ಟಕ್ಕೂ ಒಬ್ಬರನ್ನೊಬ್ಬರು ದೂರುವುದಾದರೂ ಏಕೆ? ಈ ಪ್ರಪಂಚದಲ್ಲಿ ಒಬ್ಬರು ಇದ್ದಂತೆ ಇನ್ನೊಬ್ಬರು ಇರುವುದಿಲ್ಲ. ಒಬ್ಬೊಬ್ಬರ ಸ್ವಭಾವ ಒಂದೊಂದು ತರಹ. ಎಲ್ಲರೂ ತಮ್ಮಂತೆಯೇ ಇರಬೇಕು, ತಮ್ಮಂತೆಯೇ ವಿಚಾರ ಹೊಂದಿರಬೇಕು, ತಮ್ಮ ವಿಚಾರವನ್ನು ಎಲ್ಲರೂ ಒಪ್ಪಬೇಕು ಎಂಬ ಅಂತರ್ಗತ ಅನಿಸಿಕೆಯೇ ದೂರುವುದಕ್ಕೆ ಮೂಲ. ಒಂದೇ ಕುಟುಂಬದ ಸದಸ್ಯರುಗಳೂ, ಒಂದೇ ಸಂಘ-ಸಂಸ್ಥೆಯ ಸದಸ್ಯರುಗಳೂ, ಆತ್ಮೀಯರೆಂದು ಭಾವಿಸುವ ಸ್ನೇಹಿತರ ವಲಯದಲ್ಲೂ ಪರಸ್ಪರ ಹೊಂದಾಣಿಕೆ ಆಗದ ಅನೇಕ ಸಂಗತಿಗಳು ಇರುತ್ತವೆ. ಆದರೂ ಇವರುಗಳು ಹೊಂದಿಕೊಂಡು ಹೋಗುವುದಕ್ಕೆ ಹೆಚ್ಚಿನ ಸಂಗತಿಗಳು ಪರಸ್ಪರರಿಗೆ ಒಪ್ಪಿಗೆಯಾಗುವುದೇ ಕಾರಣ. ನಾವು ಇತರರೊಂದಿಗೆ ಹೊಂದಿಕೊಂಡುಹೋಗುತ್ತೇವೆಂದರೆ ಅವರ ನ್ಯೂನತೆಗಳನ್ನು ನಾವು ಸಹಿಸಿಕೊಳ್ಳುತ್ತೇವೆ ಎಂದು ಅರ್ಥ. ಹಾಗೆಯೇ, ಇತರರು ನಮ್ಮೊಂದಿಗೆ ವಿಶ್ವಾಸವಾಗಿರುತ್ತಾರೆಂದರೆ ಅವರು ನಮ್ಮ ತಪ್ಪುಗಳನ್ನು ಸಹಿಸಿಕೊಳ್ಳುತ್ತಾರೆ ಎಂದು ಅರ್ಥ.
     ಕೆಲವರು ಕೆಲವೊಂದು ವಿಷಯಗಳಿಗೆ ಸಂಬಂಧಿಸಿದಂತೆ ಬದಲಾಗದ ಅಭಿಪ್ರಾಯಗಳನ್ನು ಹೊಂದಿರುತ್ತಾರೆ. ಅಂತಹವರು ಮುಂದೊಮ್ಮೆ ತಮ್ಮ ಅಭಿಪ್ರಾಯ ತಪ್ಪೆಂದು ಕಂಡಾಗಲೂ ತಿದ್ದಿಕೊಳ್ಳಲು ಮನಸ್ಸು ಮಾಡುವುದಿಲ್ಲ. ತಾವು ತಿಳಿದಿರುವುದೇ ಸತ್ಯ, ಇತರರು ಹೇಳುವುದೆಲ್ಲಾ ಸುಳ್ಳು, ತಪ್ಪು ಎಂದೇ ವಾದಿಸುತ್ತಾರೆ. ಉದ್ವೇಗದಿಂದ ಅನುಚಿತ ಪದಗಳನ್ನೂ ಬಳಸುತ್ತಾರೆ. ಇದು ಹಲವರ ಮನಸ್ಸನ್ನು ನೋಯಿಸುತ್ತದೆ. ಇದಕ್ಕೆ ಮದ್ದಿಲ್ಲ. ಕಾಮಾಲೆ ಕಣ್ಣಿನವರಿಗೆ ಲೋಕವೆಲ್ಲಾ ಹಳದಿ ಎನ್ನುವಂತೆ ಅವರ ವರ್ತನೆ ಇರುತ್ತದೆ. ಪ್ರಪಂಚವನ್ನು ಅದು ಇದ್ದಂತೆಯೇ ನೋಡುವ, ಒಪ್ಪುವ ಮನಸ್ಸು ಇರಬೇಕು. ಮುಕ್ತ ಮನಸ್ಸಿನಿಂದ ಅಭಿಪ್ರಾಯಿಸಬೇಕು. ತಿದ್ದುವ, ತಿದ್ದಿಕೊಳ್ಳುವ  ಕೆಲಸವನ್ನು ಮೊದಲು ನಮ್ಮಿಂದಲೇ ಆರಂಭಿಸಬೇಕು. ಯಾರನ್ನಾದರೂ ದೂಷಿಸಿ, ಹಂಗಿಸಿ ಬದಲಾಯಿಸುತ್ತೇವೆ ಎನ್ನುವುದು ಅಸಾಧ್ಯದ ಮಾತು. ಪ್ರೀತಿಸುವವರ ಮಾತನ್ನು ಎಲ್ಲರೂ ಗೌರವಿಸುತ್ತಾರೆ, ದ್ವೇಷಿಸುವವರ ಮಾತನ್ನು ಯಾರೂ ಕೇಳಲಾರರು. ಬದಲಾವಣೆ ಹೃದಯದಿಂದ ಬರಬೇಕು, ಶುದ್ಧ ಮನಸ್ಸಿನಿಂದ ಬರಬೇಕು. ಶುದ್ಧ ಹೃದಯ, ಮನಸ್ಸುಗಳು ಇರುವವರಿಗೆ ಇತರರು ಅಶುದ್ಧರು ಎಂದು ಅನ್ನಿಸುವುದೇ ಇಲ್ಲ. ನಮ್ಮಲ್ಲೇ ಇಲ್ಲದುದನ್ನು ಇತರರಿಂದ ನಿರೀಕ್ಷಿಸಲಾಗುವುದೇ?
     ಇನ್ನು ಕೆಲವರು ಇರುತ್ತಾರೆ. ಅವರು ಪ್ರತಿ ವಿಷಯದಲ್ಲೂ ಮೂಗು ತೂರಿಸುವವರು, ಪ್ರತಿ ವಿಷಯದಲ್ಲೂ ಒಂದಲ್ಲಾ ಒಂದು ತಪ್ಪು ಕಂಡು ಹಿಡಿಯುವ ಮನೋಭಾವದವರು. ಸಾಮಾನ್ಯವಾಗಿ ತಾವೊಬ್ಬ ಪಂಡಿತ, ಹಿರಿಯ, ಹೆಚ್ಚು ತಿಳಿದವನು ಎಂದುಕೊಂಡಿರುವವರಲ್ಲಿ ಈ ಸ್ವಭಾವ ಕಾಣಬರುತ್ತದೆ. ತಮ್ಮ ಪಾಂಡಿತ್ಯದ ಕುರಿತು ಇತರರ ಗಮನ ಸೆಳೆಯುವುದು ಅವರ ಉದ್ದೇಶವಿರಬಹುದು. ದೂಷಿಸುವವರು ಒಂದು ರೀತಿಯಲ್ಲಿ ಒಳ್ಳೆಯದನ್ನೇ ಮಾಡುತ್ತಾರೆ.  ಸದುದ್ದೇಶದಿಂದ, ತಪ್ಪನ್ನು ಸರಿ ಮಾಡುವ ಕಾರಣದಿಂದ ಮಾಡುವ ದೂರು ಒಳಿತು ಮಾಡುತ್ತದೆ, ತಿದ್ದಿಕೊಂಡು ನಡೆಯಲು ಸಹಕಾರಿಯಾಗುತ್ತದೆ. ಮುಂದೆ ಎಚ್ಚರಿಕೆಯಿಂದ ನಡೆಯಬೇಕೆಂಬುದನ್ನು ಕಲಿಸುತ್ತದೆ. ಪೂರ್ವಾಗ್ರಹದ ಮತ್ತು ದುರುದ್ದೇಶದ ದೂರುಗಳೂ ಸಹ ನಮ್ಮ ಅನುಭವದ ಖಜಾನೆ ತುಂಬಲು ಸಹಕಾರಿಯಾಗುತ್ತವೆ. ಬೆಳೆಯುವ ಲಕ್ಷಣವೆಂದರೆ, ಇತರರ ತಪ್ಪುಗಳನ್ನು ಗಮನಿಸಿ ದೂರುವ ಪ್ರವೃತ್ತಿ ಬಿಟ್ಟು, ನಮ್ಮ ಸ್ವಂತದ ತಪ್ಪುಗಳನ್ನು ಗುರುತಿಸಿ ತಿದ್ದಿಕೊಂಡು ನಡೆಯಲು ಪ್ರಯತ್ನಿಸುವುದು. ನಾವು ನಮ್ಮ ಹಿರಿಯರನ್ನು, ಸೋದರ-ಸೋದರಿಯರನ್ನು, ಸಮಾಜವನ್ನು ದೂರುತ್ತೇವೆ, ನಮ್ಮನ್ನು ಮಾತ್ರ ದೂರಿಕೊಳ್ಳುವುದಿಲ್ಲ. ಬದಲಾಗಬೇಕಾದುದು ಅವರುಗಳಲ್ಲ, ನಾವೇ ಎಂಬ ಅರಿವು ಮೂಡಿದರೆ ನಾವು ಇತರರನ್ನು ದೂರುವುದಿಲ್ಲ. ನಮ್ಮ ಅತ್ಯಂತ ಘೋರವಾದ ತಪ್ಪುಗಳನ್ನೂ ನಾವು ಕ್ಷಮಿಸಿಕೊಂಡುಬಿಡುತ್ತೇವೆ. ಹಾಗಿರುವಾಗ, ಇತರರ ಸಣ್ಣ ಪುಟ್ಟ ತಪ್ಪುಗಳನ್ನು ಕ್ಷಮಿಸುವಷ್ಟಾದರೂ ನಾವು ದೊಡ್ಡವರಾಗಬಾರದೆ?  ದೂರುಗಳಿಂದ ಪಾಠ ಕಲಿಯೋಣ, ಪೂರ್ವಾಗ್ರಹದ ದೂರುಗಳನ್ನು ನಿರ್ಲಕ್ಷಿಸೋಣ, ಇತರರನ್ನು ದೂರದಿರೋಣ.
ನಿಂದಕರ ವಂದಿಸುವೆ ನಡೆಯ ತೋರಿಹರು
ಮನೆಮುರುಕರಿಂ ಮನವು ಮಟ್ಟವಾಗಿಹುದು |
ಕುಹಕಿಗಳ ಹರಸುವೆ ಮತ್ತೆ ಪೀಡಕರ
ಜರೆವವರು ಗುರುವಾಗರೇ ಮೂಢ ||
-ಕ.ವೆಂ.ನಾಗರಾಜ್.
**************
ದಿನಾಂಕ 02.03.2016ರ ಜನಹಿತ ಪತ್ರಿಕೆಯ 'ಜನಕಲ್ಯಾಣ' ಅಂಕಣದಲ್ಲಿ ಪ್ರಕಟಿತ:

ಮಂಗಳವಾರ, ಜೂನ್ 7, 2016

ಸತ್ಸಂಗದ ಸತ್ಯ


     ನೀವು ಸತ್ಸಂಗಕ್ಕೆ ಏಕೆ ಹೋಗುತ್ತೀರಿ? - ಸತ್ಸಂಗಕ್ಕೆ ಹೋಗುವ ಕೆಲವರನ್ನು ವಿಚಾರಿಸಿದಾಗ ಅವರಿಂದ ಬಂದ ಉತ್ತರಗಳಿವು:
'ಸತ್ಸಂಗಕ್ಕೆ ಹೋಗುವುದರಿಂದ ನೆಮ್ಮದಿ ಸಿಗುತ್ತದೆ'.
'ಮನಸ್ಸು ಹಗುರವಾಗುತ್ತದೆ'.
'ಮನೆ, ಕಛೇರಿಗಳ ಜಂಜಾಟದಿಂದ ರೋಸಿದ ಮನಸ್ಸಿಗೆ ಶಾಂತಿ ಸಿಗುತ್ತದೆ'.
     ಇದೇ ಅರ್ಥದ ಹಲವು ಉತ್ತರಗಳು ಬಂದರೆ, ಒಬ್ಬರು ಮಾತ್ರ, ಟೈಮ್ ಪಾಸ್ ಅಗುತ್ತದೆ ಅಂದಿದ್ದರು. ಸತ್ಸಂಗದ ಅಂತರಂಗಕ್ಕಿಳಿಯಲು ಈ ಉತ್ತರಗಳು ಪ್ರೇರಿಸಿದವು. ಸತ್ಸಂಗ ಎಂಬದು ಸಂಸ್ಕೃತ ಪದವಾಗಿದ್ದು, ಇದರ ಅರ್ಥ ಸತ್ಯದೊಡನೆ ಇರುವುದು, ಸತ್ಯಕ್ಕಾಗಿ ಒಗ್ಗೂಡುವುದು ಅರ್ಥಾತ್ ಸತ್ಯದ ಸಂಗ ಮಾಡುವುದು ಎಂದಾಗುತ್ತದೆ. ವ್ಯಾವಹಾರಿಕ ಬಳಕೆಯಲ್ಲಿ ಸದ್ವಿಚಾರಗಳನ್ನು ಪ್ರೇರಿಸುವ, ಪ್ರಸರಿಸುವ ಸಜ್ಜನರ ಕೂಟವೇ ಸತ್ಸಂಗ. ಅದು ಒಟ್ಟಿಗೆ ಭಜನೆ ಮಾಡುವುದಿರಬಹುದು, ಉಪನ್ಯಾಸಗಳನ್ನು ಕೇಳುವುದಿರಬಹುದು, ವಿಚಾರ ಕಮ್ಮಟವಿರಬಹುದು, ಧಾರ್ಮಿಕ/ಸಾಂಸ್ಕೃತಿಕ/ಸಾಹಿತ್ಯಿಕ ವಿಷಯಗಳ ಕಾರ್ಯಕ್ರಮಗಳಿರಬಹುದು, ಒಟ್ಟಾರೆಯಾಗಿ ಧನಾತ್ಮಕ ಅಂಶಗಳಿಗೆ ಒತ್ತು ಕೊಡುವ ಯಾವುದೇ ಚಟುವಟಿಕೆಗಳನ್ನು ಸತ್ಸಂಗದ ವ್ಯಾಪ್ತಿಯಲ್ಲಿ ತರಬಹುದು.
     ನಾನು ಭಾಗವಹಿಸಿರುವ ಒಂದು ಮಾದರಿ ಸತ್ಸಂಗದ ಬಗ್ಗೆ ಉದಾಹರಿಸಿ ವಿಷಯ ಮುಂದುವರೆಸುವೆ. ಬೆಂಗಳೂರಿನಲ್ಲಿರುವ ೧೧೮ ವರ್ಷಗಳ ಪಂ. ಸುಧಾಕರ ಚತುರ‍್ವೇದಿಯವರ ಮನೆಯಲ್ಲಿ ಪ್ರತಿ ಶನಿವಾರ ಸಂಜೆ ೫.೩೦ಕ್ಕೆ ಸರಿಯಾಗಿ ಸತ್ಸಂಗ ಪ್ರಾರಂಭವಾಗುತ್ತದೆ. ಪ್ರಾರಂಭದಲ್ಲಿ ಸರಳ ಅಗ್ನಿಹೋತ್ರ ನಡೆಯುತ್ತದೆ. ದಿವ್ಯ ಮತ್ತು ಹಿತಕರ ವಾತಾವರಣ ಉಂಟುಮಾಡುವ ಈ ಅಗ್ನಿಹೋತ್ರ ಸುಮಾರು ೧೫ ನಿಮಿಷಗಳ ಕಾಲ ನಡೆಯುತ್ತದೆ. ನಂತರದಲ್ಲಿ ಎರಡು ವೈದಿಕ ಭಜನೆಗಳನ್ನು ಸಾಮೂಹಿಕವಾಗಿ ಹಾಡಲಾಗುತ್ತದೆ. ಯಾವುದೇ ಜಾತಿ, ಮತ, ಪಂಥ ಭೇದವಿಲ್ಲದೆ ಆಸಕ್ತರು ಭಾಗವಹಿಸುತ್ತಾರೆ. ನಂತರದಲ್ಲಿ ಪಂ. ಸುಧಾಕರ ಚತುರ‍್ವೇದಿಯವರು ಸುಮಾರು ೪೦ ನಿಮಿಷಗಳ ಕಾಲ ಮಾತನಾಡುತ್ತಾರೆ. ಯಾವುದಾದರೂ ಒಂದು ವೇದಮಂತ್ರದ ಅರ್ಥ, ವಿಸ್ತಾರ ತಿಳಿಸುತ್ತಾ, ತಮ್ಮ ಜೀವನಾನುಭವಗಳನ್ನು ಹಂಚಿಕೊಳ್ಳುತ್ತಾ ಮನುಕುಲ ಬಾಳಬೇಕಾದ ರೀತಿಯ ಕುರಿತು ಹೇಳುವ ಅವರ ಮಾತುಗಳು ಹೃದಯಸ್ಪರ್ಷಿಯಾಗಿರುತ್ತವೆ. ಕೊನೆಯಲ್ಲಿ ಬಂದವರ ಪೈಕಿಯೇ ಯಾರಾದರೂ ಒಬ್ಬರು ತಂದಿರುವ ಸಿಹಿ ಅಥವ ಪ್ರಸಾದವನ್ನು ಎಲ್ಲರಿಗೂ ಹಂಚುವುದರೊಂದಿಗೆ ಸತ್ಸಂಗ ಮುಗಿಯುತ್ತದೆ. ನನಗಂತೂ ಅವರ ಮಾತುಗಳು ಅಂತರಂಗವನ್ನು ಬಡಿದೆಬ್ಬಿಸಿವೆ, ಎಚ್ಚರಿಸಿವೆ, ಸರಿದಾರಿಯನ್ನು ತೋರಿಸಿವೆ. ನನ್ನಂತೆಯೇ ಹಲವರ ಅಭಿಪ್ರಾಯವೂ ಇದೇ ಆಗಿವೆ. 
     ಸತ್ಸಂಗದ ಪೂರ್ಣ ಲಾಭ ಸಿಗಬೇಕೆಂದರೆ ಬಾಗಿಲ ಬಳಿಯಲ್ಲಿಯೇ ನಮ್ಮ ದಿನನಿತ್ಯದ ಚಿಂತೆಗಳು, ಮನದಲ್ಲಿ ಮೂಡುವ ವಿಚಾರಗಳು, ಹಳೆಯ ಎಲ್ಲಾ ಸಂಗತಿಗಳನ್ನು ಮರೆತು ಒಬ್ಬ ಹೊಸ ವಿದ್ಯಾರ್ಥಿಯಂತೆ, ಏನೂ ಗೊತ್ತಿಲ್ಲದವರಂತೆ, ಹೊಸದಾಗಿ ತಿಳಿಯಲು ಉತ್ಸುಕನಾಗಿ ಒಳಪ್ರವೇಶಿಸುವುದು ಉತ್ತಮ. ಯಾವಾಗಲೂ ಹೊಸಬರಂತೆ ಮತ್ತು ಹೊಸಬರಂತೆಯೇ ಇರಲು ಅಭ್ಯಾಸ ಮಾಡಿಕೊಂಡರೆ ಉತ್ತಮ ಅನುಭವ ನಮ್ಮದಾಗುವುದು. ಸತ್ಸಂಗದಲ್ಲಿ ಸಮಾನ ಮನಸ್ಕರು ಒಂದು ಸಮಾನ ಧನಾತ್ಮಕ ವಿಷಯದ ಸಲುವಾಗಿ ಒಟ್ಟುಗೂಡುತ್ತಾರೆ. ಈ ರೀತಿಯ ಒಟ್ಟುಗೂಡುವಿಕೆಯೇ ಪರಿಣಾಮಕಾರಿಯಾಗಿರುತ್ತದೆ. ಸುಮ್ಮನೆ ಸಮಯ ಕಳೆಯಲು ಬರುವವರಿಂದಲೂ ಉಪಯೋಗವಿದೆ. ಕನಿಷ್ಠ ಸತ್ಸಂಗ ನಡೆಯುವ ಒಂದು, ಒಂದೂವರೆ ಗಂಟೆಯವರೆಗಾದರೂ ಅವರು ಋಣಾತ್ಮಕ ವಿಷಯಗಳಿಂದ ದೂರವಿರುತ್ತಾರಲ್ಲಾ! ಅಲ್ಲಿ ನಡೆಯುವ ಪ್ರವಚನ, ಕಾರ್ಯಕ್ರಮ, ಭಜನೆ, ಇತ್ಯಾದಿಗಳಿಂದ ಒಂದು ಅಲೌಕಿಕ, ಸಂತಸಕರ, ಹಿತಕರ ತರಂಗಗಳು ಉಂಟಾಗುತ್ತವೆ. ಈ ತರಂಗಗಳು ಅಲ್ಲಿ ಸೇರಿದವರ ಮೇಲೆ ಒಳ್ಳೆಯ ಪ್ರಭಾವ ಬೀರಿ ಆನಂದವನ್ನುಂಟುಮಾಡುತ್ತವೆ. ಒಳ್ಳೆಯ ವಿಚಾರಗಳ ಕುರಿತು ಯೋಚಿಸುವಂತೆ, ಒಳ್ಳೆಯ ಕಾರ್ಯಗಳಲ್ಲಿ ತೊಡಗಿಕೊಳ್ಳುವಂತೆ ಅಲ್ಲಿ ಪ್ರೇರೇಪಣೆ ಸಿಗುತ್ತದೆ. ಸತ್ಸಂಗದ ಯಶಸ್ಸು ಇರುವುದು ಇಲ್ಲಿಯೇ! 
     ಆದಿ ಶಂಕರಾಚಾರ್ಯರ ಭಜಗೋವಿಂದಮ್ ಸ್ತೋತ್ರದ ಒಂಬತ್ತನೆಯ ಶ್ಲೋಕ ಹೀಗಿದೆ:
ಸತ್ಸಂಗತ್ವೇ ನಿಸ್ಸಂಗತ್ವಮ್ ನಿಸ್ಸಂಗತ್ವೇ ನಿರ್ಮೋಹತ್ವಮ್ 
ನಿರ್ಮೋಹತ್ವೇ ನಿಶ್ಚಲತತ್ತ್ವಮ್ ನಿಶ್ಚಲತತ್ವೇ ಜೀವನ್ಮುಕ್ತಿಃ||
     ಉತ್ತಮರಾದ ವಿದ್ವಜ್ಜನರ ಸಹವಾಸದಿಂದ ಒಬ್ಬ ವ್ಯಕ್ತಿ ಎಲ್ಲಾ ರೀತಿಯ ಬಂಧನಗಳಿಂದ ಮುಕ್ತನಾಗುತ್ತಾನೆ, ಈ ರೀತಿಯಾಗಿ ಭ್ರಮೆಗಳಿಂದ ಹೊರಬಂದವನು ತಪ್ಪುದಾರಿಯಲ್ಲಿ ಹೋಗುವದಿಲ್ಲ, ಸರಿದಾರಿಯಲ್ಲೇ ನಡೆಯುತ್ತಾನೆ. ಈ ನಿರ್ಮೋಹತ್ವದಿಂದ ಮನಸ್ಸು ಚಂಚಲವಾಗುವುದಿಲ್ಲ, ಪ್ರಾಪಂಚಿಕ ಆಕರ್ಷಣೆಗಳಿಂದ ವಿಚಲಿತಗೊಳ್ಳುವುದಿಲ್ಲ. ಈ ಗುಣದಿಂದಾಗಿ ಮುಕ್ತಿಯನ್ನು ಸಾಧಿಸುತ್ತಾನೆ ಎಂಬುದು ಈ ಶ್ಲೋಕದ ಅರ್ಥ. ಸತ್ಸಂಗದ ಉದ್ದೇಶ ಅರ್ಥಪೂರ್ಣವಾಗಿ, ಸಮರ್ಥವಾಗಿ ಈ ಶ್ಲೋಕದಲ್ಲಿ ಚುಟುಕಾಗಿ ಬಿಂಬಿತಗೊಂಡಿದೆ. 
     ಈ ವೇದಮ್ರಂತ್ರದ ಆಶಯವೂ ಇದೇ ಆಗಿದೆ:
ಓಂ ತಚ್ಛಕ್ಷುರ್ದೇವಹಿತಂ ಪುರಸ್ತಾಚ್ಛುಕ್ರಮುಚ್ಛರತ್| ಪಶ್ಶೇಮ ಶರದಃ ಶತಂ ಜೀವೇಮ ಶರದದಃ ಶತಗ್ಂ ಶೃಣುಯಾಮ ಶರದಃ ಶತಂ ಪ್ರ ಬ್ರವಾಮ ಶರದಃ ಶತಮದೀನಾಃ ಸ್ಯಾಮ ಶರದಃ ಶತಂ ಭೂಯಶ್ಚ ಶರದಃ ಶತಾತ್|| (ಯಜು.೩೬.೨೪.)
     ಅರ್ಥ: ವಿದ್ವಜ್ಜನರಿಗೆ ಹಿತಕಾರಿಯಾದ, ವಿದ್ವಜ್ಜನರಿಂದ ಪೂಜಿತನಾದ ಪರಮಾತ್ಮ ನಮ್ಮ ಮುಂದೆ ವಿರಾಜಿಸುತ್ತಿದ್ದಾನೆ. ಆ ಪರಮಾತ್ಮನ ಕೃಪೆಯಿಂದ ನೂರು ವರ್ಷಗಳ ಕಾಲ (ಒಳ್ಳೆಯದನ್ನೇ) ನೋಡುತ್ತಿರೋಣ, ನೂರು ವರ್ಷಗಳ ಕಾಲ (ಒಳ್ಳೆಯ ರೀತಿಯಲ್ಲಿ) ಜೀವಿಸೋಣ, ನೂರು ವರ್ಷಗಳ ಕಾಲ (ಒಳ್ಳೆಯದನ್ನೇ) ಕೇಳುತ್ತಿರೋಣ, ನೂರು ವರ್ಷಗಳ ಕಾಲ ದಾಸ್ಯತನಕ್ಕೆ ಒಳಪಡದೆ ಸ್ವತಂತ್ರರಾಗಿ, ಸ್ವಾಭಿಮಾನಿಗಳಾಗಿ ಬಾಳೋಣ ಮತ್ತು ಈ ರೀತಿಯಾಗಿ ನೂರು ವರ್ಷಗಳಿಗೂ ಹೆಚ್ಚು ಕಾಲ ಜೀವಿಸೋಣ.
-ಕ.ವೆಂ.ನಾಗರಾಜ್.
**************
ದಿನಾಂಕ 26.02.2016ರ ಜನಹಿತ ಪತ್ರಿಕೆಯ 'ಜನಕಲ್ಯಾಣ' ಅಂಕಣದಲ್ಲಿ ಪ್ರಕಟಿತ:

ಶುಕ್ರವಾರ, ಜೂನ್ 3, 2016

ಚಿಂತೆಯದೇ ಚಿಂತೆ


     ಅನುಗಾಲವೂ ಚಿಂತೆ ಜೀವಕೆ ಎಂದು ದಾಸರು ಹೇಳಿರುವುದು ಸತ್ಯಸ್ಯ ಸತ್ಯವಾಗಿದೆ. ಚಿತೆ ಸತ್ತವರನ್ನು ದಹಿಸಿದರೆ ಚಿಂತೆ ಬದುಕಿರುವವರನ್ನೇ ದಹಿಸುತ್ತದೆ ಎಂಬುದು ಅನುಭವದ ನುಡಿಗಟ್ಟಾಗಿದೆ. ಪುಣ್ಯಕೋಟಿ ಗೋವಿನ ಹಾಡನ್ನು ಬದಲಾಯಿಸಿ ಹೀಗೆ ಹಾಡಬಹುದೇನೋ - ಚಿಂತೆಯೇ ನಮ್ಮ ತಾಯಿ ತಂದೆ, ಚಿಂತೆಯೇ ನಮ್ಮ ಬಂಧು ಬಳಗ, ಚಿಂತೆಯಿಲ್ಲದ ಮನುಜನಿದ್ದೊಡೆ, ಅವನೆ ನಿಜ ಪರಮಾತ್ಮನು! ಹಾಗಾದರೆ ಪರಮಾತ್ಮನಿಗೆ ಚಿಂತೆಯೇ ಇಲ್ಲವೇ? ಎಷ್ಟೊಂದು ಸೂರ್ಯಮಂಡಲಗಳು, ಎಷ್ಟೊಂದು ನಕ್ಷತ್ರಗಳು, ಎಷ್ಟೊಂದು ಬಗೆಯ ಜೀವಿಗಳು, ಎಷ್ಟೊಂದು ಬಗೆಯ ಪ್ರಕೃತಿ ಇವೆಲ್ಲದರ ಸೃಷ್ಟಿ, ಸ್ಥಿತಿ, ಲಯಗಳಿಗೆ ಕಾರಣನಾದ ಅವನಿಗೆ ಚಿಂತೆ ಇಲ್ಲವೇ ಎಂದು ಕೇಳಬಹುದು. ನಿಜ, ಅವನಿಗೆ ಚಿಂತೆಯೇ ಇಲ್ಲ. ಏಕೆಂದರೆ ಅವನ ಕೆಲಸ ಅವನು ಮಾಡಿ ಮುಗಿಸಿದ್ದಾಗಿದೆ. ಸೃಷ್ಟಿ, ಸ್ಥಿತಿ. ಲಯಗಳನ್ನು ಸಹಜವಾಗಿ, ನಿರಂತರವಾಗಿ ನಡೆದುಕೊಂಡು ಹೋಗುತ್ತಿರುವಂತೆ ಮಾಡಿಬಿಟ್ಟಾಗಿದೆ. ಮನುಷ್ಯನಿಗೂ ಮಾಡಿದ್ದುಣ್ಣೋ ಮಹರಾಯ ಎಂದು ಕರ್ಮಕ್ಕೆ ತಕ್ಕ ಫಲ ಎಂದು ಹೇಳಿಬಿಟ್ಟಿದ್ದಾನೆ. ಹಾಗಾಗಿ ಆ ದೇವರು ನಿಶ್ಚಿಂತೆಯಾಗಿ ಯಾರು ಯಾರ ತಲೆ ಕಡಿದರೂ ಸಾಕ್ಷಿಯಂತೆ ನೋಡುತ್ತಾ ಸುಮ್ಮನಿರುತ್ತಾನೆಯೇ ಹೊರತು ತಲೆ ಕೆಡಿಸಿಕೊಳ್ಳುವುದೇ ಇಲ್ಲ.
     ಈ ಚಿಂತೆ ಅನ್ನುವುದಾದರೂ ಏನು? ಚಿಂತೆ ಅನ್ನುವುದು ಮನಸ್ಸಿನಲ್ಲಿ ಮುಂಬರಲಿರುವ ಅಪಾಯಗಳು, ಅಹಿತಕರ ಸನ್ನಿವೇಶಗಳನ್ನು ಎದುರಿಸುವ ಉಪಾಯಗಳ ಕುರಿತು ನಡೆಯುವ ತಾಕಲಾಟಗಳು. ಆ ಸಮಸ್ಯೆಗಳು ಆರೋಗ್ಯದ್ದಾಗಿರಬಹುದು, ವೃತ್ತಿಗೆ ಸಂಬಂಧಿಸಿದ್ದಿರಬಹುದು, ಆರ್ಥಿಕ ಕಾರಣಗಳಿರಬಹುದು, ಕೌಟುಂಬಿಕ, ಸಾಮಾಜಿಕ ಸಮಸ್ಯೆಗಳಿರಬಹುದು, ಇಂತಹ ಮತ್ತಾವುದೋ ಆಗಿರಬಹುದು. ನೈಜ ಸಮಸ್ಯೆಗಿಂತ ಕಾಲ್ಪನಿಕ ಸಮಸ್ಯೆ ಮನುಷ್ಯನನ್ನು ಹಿಂಡಿಬಿಡುತ್ತದೆ. ಚಿಂತೆ ಹೆಚ್ಚಾದಷ್ಟೂ ಅದು ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಾ ಹೋಗುತ್ತದೆ. ಈ ಚಿಂತೆ ಅನ್ನುವುದು ಸಮಸ್ಯೆಯನ್ನು ಎದುರಿಸಿ ಗೆಲ್ಲಲು ಸಹಾಯಕವಾಗಬಹುದು. ಆದರೆ, ಹೀಗಾದರೆ ಏನು?, ಹಾಗಾದರೆ ಏನು?, ಸಮಸ್ಯೆಗೆ ಪರಿಹಾರವೇ ಇಲ್ಲದಿದ್ದರೆ ಏನು ಮಾಡುವುದು? ಇತ್ಯಾದಿ ತಾಕಲಾಟಗಳು, ಅನುಮಾನಗಳು ಮತ್ತು ಸಂದೇಹಗಳು ಮನಸ್ಸಿನ ಆರೋಗ್ಯಕ್ಕೆ, ದೈಹಿಕ ಆರೋಗ್ಯಕ್ಕೆ ಅಪಾಯಕಾರಿಯಾಗದೇ ಇರವು. ಅವು ಜೀವನದಲ್ಲಿನ ಆಸಕ್ತಿಯನ್ನು ಕಳೆದುಬಿಡುತ್ತವೆ, ಆತಂಕ ಮನೆ ಮಾಡಿ ಶಕ್ತಿಯನ್ನು ಬಸಿದುಬಿಡುತ್ತವೆ, ದಿನನಿತ್ಯದ ಚಟುವಟಿಕೆಗಳು ಏರುಪೇರಾಗುವಂತೆ ಮಾಡುತ್ತವೆ. ಸಮಸ್ಯೆ ಎದುರಿಸುವ ಕುರಿತು ಒಬ್ಬನೇ ಒಂಟಿಯಾಗಿ ಚಿಂತಿಸದೆ, ಅದನ್ನು ಆಪ್ತರಾದವರೊಡನೆ ಹಂಚಿಕೊಂಡರೆ ಸಮಸ್ಯೆಗೆ ಪರಿಹಾರ ಹುಡುಕಲು ಸುಲsವಾಗಬಹುದು. ಕನಿಷ್ಠ ಪಕ್ಷ ನೈತಿಕ ಬೆಂಬಲವಾದರೂ ಸಿಕ್ಕಿ ಮನಸ್ಸು ಹಗುರವಾಗಬಹುದು. ಒಳ್ಳೆಯ ಸಹವಾಸಗಳು, ಒಳ್ಳೆಯ ಆಹಾರ, ಒಳ್ಳೆಯ ನಿದ್ದೆ ಚಿಂತೆಯನ್ನು ಹಗುರಗೊಳಿಸಬಲ್ಲವು. ಆದರೆ, ಈ ಚಿಂತೆ ಇದಕ್ಕೆ ಅವಕಾಶ ಕೊಟ್ಟೀತೇ ಅನ್ನುವುದೂ ಪ್ರಶ್ನೆಯಾಗುತ್ತದೆ.
     ಸತತವಾಗಿ ಚಿಂತಿತರಾಗಿರುವುದು ಬಹಳ ಹಾನಿಯುಂಟುಮಾಡುತ್ತದೆ. ಅದು ರಾತ್ರಿಯ ಸಮಯದಲ್ಲಿ ನಿದ್ರೆ ಬರದಂತೆ ಮಾಡುತ್ತದೆ. ದಿನದ ಸಮಯದಲ್ಲಿ ಏನೋ ಆತಂಕ, ಏನೋ ದುಗುಡ, ಏನೋ ಉದ್ವೇಗದಲ್ಲಿ ಇರುವಂತೆ ಮಾಡುತ್ತದೆ. ಯಾವ ಕೆಲಸ-ಕಾರ್ಯಗಳಲ್ಲೂ ಆಸಕ್ತಿ ಕಾಣುವುದಿಲ್ಲ. ಖಿನ್ನತೆ ಕಾಡುತ್ತದೆ ಮತ್ತು ಯಾರ ಸಹವಾಸವೂ, ಸ್ನೇಹವೂ ಹಿತಕರವೆನಿಸುವುದಿಲ್ಲ, ಏನೋ ಕಳೆದುಕೊಂಡವರಂತೆ ಚಡಪಡಿಸುತ್ತಿರುತ್ತಾರೆ. ಸೂಕ್ಷ್ಮ ಸ್ವಭಾವದವರಿಗೆ, ಭಾವಜೀವಿಗಳಿಗೆ ಚಿಂತೆಯಿಂದ ಆಗುವ ಹಾನಿ, ತೊಂದರೆಗಳ ಅರಿವಿದ್ದರೂ ಚಿಂತೆಯಿಂದ ಮುಕ್ತರಾಗುವ ದಾರಿ ಕಂಡುಕೊಳ್ಳುವುದು ಸುಲಭವಲ್ಲ.
     ಚಿಂತೆ ಮಾಡದಿರುವುದು ಇಷ್ಟೊಂದು ಕಷ್ಟವಾಗಿರುವುದೇಕೆ? ಸತತ ಚಿಂತೆಯಿಂದ ನರಳುವವರು ಚಿಂತೆಯ ಬಗ್ಗೆ ಧನಾತ್ಮಕವಾದ ಮತ್ತು ಋಣಾತ್ಮಕವಾದ ನಂಬಿಕೆಗಳನ್ನು ಹೊಂದಿರುತ್ತಾರೆ. ಚಿಂತೆ ತಲೆ ಕೆಡುವಂತೆ ಮಾಡುತ್ತದೆ, ಅದು ಆರೋಗ್ಯವನ್ನು ಹಾಳು ಮಾಡುತ್ತದೆ, ಸತತವಾಗಿ ಚಿಂತಿಸುವುದರಿಂದ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ, ಅದು ನಿರಂತರವಾಗಿರುತ್ತದೆ ಎಂಬುದು ಋಣಾತ್ಮಕ ನಂಬಿಕೆಯಾಗಿದೆ. ಚಿಂತಿಸುವುದರಿಂದ ಕೆಟ್ಟ ಸಂಗತಿಗಳನ್ನು ನಿವಾರಿಸಿಕೊಳ್ಳಬಹುದು, ಸಮಸ್ಯೆಗಳನ್ನು ಪರಿಹರಿಸುತ್ತದೆ, ಅತಿ ಕೆಟ್ಟ ಸನ್ನಿವೇಶಗಳಲ್ಲೂ ಸಿದ್ಧರಿರುವಂತೆ ಮಾಡುತ್ತದೆ ಅಥವ ಸಮಸ್ಯೆಗೆ ಪರಿಹಾರಕ್ಕೆ ದಾರಿ ಮಾಡಿಕೊಡುತ್ತದೆ ಎಂಬುದು ಧನಾತ್ಮಕ ನಂಬಿಕೆಯೆನಿಸುತ್ತದೆ. ಈ ಎರಡೂ ನಂಬಿಕೆಗಳು ಒಳ್ಳೆಯವಲ್ಲ. ಋಣಾತ್ಮಕ ನಂಬಿಕೆ ಆತಂಕವನ್ನು ಹೆಚ್ಚಿಸುತ್ತದೆ ಮತ್ತು ಚಿಂತೆ ಮುಂದುವರೆಯುವಂತೆ ಮಾಡುತ್ತದೆ. ಧನಾತ್ಮಕ ನಂಬಿಕೆ ಸಹ ಅಷ್ಟೇ ಹಾನಿ ತರಬಲ್ಲದು. ಚಿಂತೆ ಮಾಡುವುದರಿಂದ ಸಮಸ್ಯೆ ಪರಿಹಾರಕ್ಕೆ ಸಹಾಯವಾಗುತ್ತದೆ ಎಂಬ ಭಾವನೆ ಚಿಂತಿಸುವ ಸ್ವಭಾವವನ್ನು ಉತ್ತೇಜಿಸುತ್ತದೆ. ಮನಸ್ಸಿನ ಮೇಲೆ ಹತೋಟಿ ಸಾಧಿಸಬೇಕೆಂದರೆ ಚಿಂತೆ ಅನ್ನುವುದು ಒಂದು ಸಮಸ್ಯೆ, ಪರಿಹಾರವಲ್ಲ ಎಂದು ಅರಿತುಕೊಳ್ಳಬೇಕಿದೆ.
     ಆತಂಕ, ಚಿಂತೆಗಳು ರಚನಾತ್ಮಕ ಶಕ್ತಿಯನ್ನು ಕಸಿದುಬಿಡುತ್ತವೆ, ಉತ್ಸಾಹಕ್ಕೆ ಗರ ಬಡಿಯುತ್ತದೆ, ಕ್ರಿಯಾತ್ಮಕತೆಯ ಬಾಗಿಲು ಮುಚ್ಚಿಬಿಡುತ್ತದೆ. ಆಗ ಏನು ಮಾಡಬಹುದು? ಸತತ ಚಿಂತೆಯಿಂದ ನರಳುವವರು ಏನೇ ಪ್ರಯತ್ನ ಮಾಡಿದರೂ ಅದರಿಂದ ಪಾರಾಗುವುದು ಸುಲಭವಲ್ಲವೆಂಬುದು ಅರಿವಿಗೆ ಬಂದಾಗ ನಿರಾಶೆ ಮೂಡುತ್ತದೆ. ಚಿಂತೆಯನ್ನು ಮರೆಯುವ ಪ್ರಯತ್ನ ಅಷ್ಟು ಸುಲಭವಲ್ಲ. ಮರೆಯಬೇಕೆಂದಷ್ಟೂ ಚಿಂತೆಯ ಸುತ್ತಲೇ ಮನಸ್ಸು ಸುಳಿದಾಡುತ್ತಿರುತ್ತದೆ. ಒಂದು ಉದಾಹರಣೆ ನೋಡೋಣ. ಕಣ್ಣು ಮುಚ್ಚಿ ಒಂದು ದೊಡ್ಡ ಹಂದಿ ತಿಪ್ಪೆಯ ಹೊಲಸಲ್ಲಿ ಆನಂದವಾಗಿ ಬಾಯಾಡಿಸುತ್ತಿರುವ ಚಿತ್ರವನ್ನು ಕಲ್ಪಿಸಿಕೊಳ್ಳೋಣ. ಮನಸ್ಸಿನಲ್ಲಿ ಆ ಚಿತ್ರ ಮನಸ್ಸಿನಲ್ಲಿ ಗಟ್ಟಿಗೊಂಡಾಗ ಆ ಚಿತ್ರದ ಕುರಿತು ಚಿಂತಿಸುವುದನ್ನು ನಿಲ್ಲಿಸೋಣ. ಏನೇ ಆದರೂ ಮುಂದಿನ ಐದು ನಿಮಿಷಗಳ ಅವಧಿಯವರೆಗೆ ಹಂದಿಯ ನೆನಪು ಬಾರದಿರುವಂತೆ ನಿರ್ಧರಿಸೋಣ. ಏನಾಗುತ್ತದೆ? ಅದರ ಕುರಿತು ಚಿಂತಿಸಬಾರದೆಂದುಕೊಂಡರೂ ಅದು ಸಾಧ್ಯವಾಗದು. ಮತ್ತೆ ಮತ್ತೆ ಆ ಚಿತ್ರ ಮೂಡಿಬರುತ್ತಿರುತ್ತದೆ. ಆದ್ದರಿಂದ ಚಿಂತೆಯನ್ನು ಮರೆಯಲು ಪ್ರಯತ್ನಿಸುವ ಬದಲು ಅದನ್ನು ನಿಯಂತ್ರಿಸಲು ಬೇರೆ ಮಾರ್ಗವನ್ನೇ ಹುಡುಕಬೇಕಿದೆ. ಚಿಂತೆ ಮಾಡಲು ದಿನದ ಒಂದು ನಿರ್ದಿಷ್ಟ ಅವಧಿಯನ್ನು, ಉದಾಹರಣೆಗೆ ಸಂಜೆಯ ೫ ಗಂಟೆಯಿಂದ ೬ ಗಂಟೆಯವರೆಗೆ ಅಥವ ರಾತ್ರಿಯ ೯ ಗಂಟೆಯಿಂದ ೧೦ ಗಂಟೆಯವರೆಗೆ, ಹೀಗೆ ನಿಗದಿಪಡಿಸಿಕೊಂಡರೆ ಮನಸ್ಸು ಸ್ವಲ್ಪ ಮಟ್ಟಿಗೆ ಚಿಂತೆಯನ್ನು ಬದಿಗಿಟ್ಟು ಮುಂದೂಡಲು ಸಹಾಯವಾಗುತ್ತದೆ. ಚಿಂತೆಗಾಗಿ ಸಮಯವಿರುವುದರಿಂದ ಇತರ ಸಂಗತಿಗಳಿಗೆ ಗಮನ ಕೊಡೋಣ ಎಂದು ಮನಸ್ಸನ್ನು ಸಿದ್ಧಪಡಿಸಿಕೊಳ್ಳಬಹುದಾಗಿದೆ. ಹೀಗೆ ಮುಂದೂಡುವ ಶಕ್ತಿ ರೂಢಿಸಿಕೊಂಡರೆ ಚಿಂತೆಯನ್ನು ನಿಯಂತ್ರಿಸುವ ಶಕ್ತಿ ಇದೆಯೆಂಬ ಅರಿವು ಮೂಡಿ ಹುರುಪು ಉಳಿಸಿಕೊಳ್ಳಲು ಸಹಾಯಕವಾಗುತ್ತದೆ.
     ಮುಂದಿನ ಹಂತವಾಗಿ ಸಮಸ್ಯೆಯ ಅಂತರಾಳಕ್ಕೆ ಇಳಿಯಬೇಕು. ಸಮಸ್ಯೆಯನ್ನು ಕೇವಲ ಚಿಂತಿಸುವುದರಿಂದ ಬಗೆಹರಿಸಲಾಗದು. ಪರಿಸ್ಥಿತಿಯ ಅವಲೋಕನ ಮಾಡಬೇಕು, ಏನು ಮಾಡಬಹುದೆಂಬ ಬಗ್ಗೆ ಯೋಚಿಸಬೇಕು ಮತ್ತು ಅದನ್ನು ಕ್ರಿಯಾರೂಪಕ್ಕೆ ತರುವ ಮಾರ್ಗಗಳನ್ನು ಹುಡುಕಬೇಕು. ಈ ಪ್ರಶ್ನೆಗಳನ್ನು ನಮಗೆ ನಾವೇ ಹಾಕಿಕೊಳ್ಳಬೇಕು.
>>; ಸಮಸ್ಯೆ ಕೇವಲ ಊಹಾತ್ಮಕ ಮತ್ತು ಕಲ್ಪನೆಯದೇ?
>>; ಕಲ್ಪನೆಯ ಸಮಸ್ಯೆಯಾದರೆ, ಅದು ನಿಜಕ್ಕೂ ಸಂಭವಿಸಬಹುದೇ?
>>; ಸಮಸ್ಯೆ ಪರಿಹಾರಕ್ಕೆ ಏನಾದರೂ ಮಾಡಬಹುದೇ ಅಥವ ಅದನ್ನು ಎದುರಿಸಲು ಸಿದ್ಧರಾಗಿದ್ದೇವೆಯೇ? ಅಥವ ಅದು ನಮ್ಮ ನಿಯಂತ್ರಣಕ್ಕೆ ಹೊರತಾದುದೇ?
ಪರಿಹರಿಸಬಹುದಾದ ಸಮಸ್ಯೆಯಾದರೆ ಏನು ಮಾಡಬಹುದೆಂಬ ಸಾಧ್ಯಾಸಾಧ್ಯತೆಗಳ ಬಗ್ಗೆ ಯೋಜನೆಗಳನ್ನು ರೂಪಿಸಬೇಕು. ಅದರ ಬಗ್ಗೆಯೇ, ಪರಿಪೂರ್ಣ ಪರಿಹಾರದ ಬಗ್ಗೆಯೇ, ತಲೆ ಕೆಡಿಸಿಕೊಳ್ಳದೆ, ನಮ್ಮ ನಿಯಂತ್ರಣಕ್ಕೆ ಹೊರತಾದ ಸಂಗತಿಗಳನ್ನು ಬಿಟ್ಟು ಉಳಿದಂತೆ ಏನು ಬದಲಾವಂಣೆ ತರಬಹುದೋ ಅಂತಹುದರ ಬಗ್ಗೆ ಕೇಂದ್ರೀಕರಿಸಿ ಪ್ರಯತ್ನಿಸಬೇಕು. ಒಮ್ಮೆ ಕಾರ್ಯಯೋಜನೆ ಸಿದ್ಧಪಡಿಸಿಕೊಂಡು ಪ್ರವೃತ್ತರಾದೆವೆಂದರೆ ಅರ್ಧ ಚಿಂತೆಯಿಂದ ಮುಕ್ತರಾದಂತೆಯೇ ಸರಿ.
     ಪರಿಹರಿಸಲಾಗದ ಸಮಸ್ಯೆಗಳಿದ್ದರೆ ಏನು ಮಾಡುವುದು? ನಮ್ಮಲ್ಲಿ ಹೆಚ್ಚಿನವರು ಇಂತಹ ಸಮಸ್ಯೆಗಳ ಚಿಂತೆಯಲ್ಲೇ ಬಳಲುತ್ತಿರುತ್ತೇವೆ. ಇಂತಹ ಸಂದರ್ಭಗಳಲ್ಲಿ, ನಮ್ಮ ಭಾವನೆಗಳನ್ನು ನಿಯಂತ್ರಿಸಲು ಪ್ರಯತ್ನಿಸುವುದು ಅವಶ್ಯಕವಾಗಿದೆ. ಚಿಂತೆ ಸಮಸ್ಯೆ ಪರಿಹರಿಸಲಾಗದಿದ್ದರೂ ಭಾವನೆಗಳನ್ನು ನಿಯಂತ್ರಿಸಲು ಸಹಕಾರಿಯೆಂಬುದನ್ನು ಹಿಂದೆಯೇ ಹೇಳಿದೆ. ಆದರೆ ಅದು ಅಹಿತಕರ ಭಾವನೆಗಳನ್ನು ಹೋಗಲಾಡಿಸಲಾರದು. ಈ ವಿಷವೃತ್ತದಿಂದ ಹೊರಬರಬೇಕೆಂದರೆ ಅಹಿತಕರ ಭಾವನೆಗಳನ್ನು ಅವು ಇರುವಂತೆ ಒಪ್ಪಿಕೊಳ್ಳಬೇಕಷ್ಟೆ. ಈ ಭಾವನೆಗಳು ಜೀವನದಂತೆಯೇ ಗೋಜಲು ಗೋಜಲಾಗಿರುತ್ತವೆ ಎಂಬ ಸತ್ಯ ಮನಗಾಣಬೇಕು. ಭಾವನೆಗಳು ಯಾವಾಗಲೂ ಅರ್ಥವತ್ತಾಗಿರಲಾರದು ಅಥವ ಹಿತವಾಗಿರಲಾರದು. ಅವು ಮಾನವಸಹಜವೆಂದು ತಿಳಿದು ಅವುಗಳನ್ನು ನಮ್ಮ ಅನುಕೂಲಕ್ಕೆ ತಕ್ಕಂತೆ ಬಳಸಿಕೊಳ್ಳುವುದರ ಬಗ್ಗೆ ಗಮನಿಸಬೇಕು.
     ಸತತ ಚಿಂತೆಯಿಂದ ಬಳಲುತ್ತಿರುವವರ ಮೂಲ ಸಮಸ್ಯೆಯೆಂದರೆ ಅವರು ಅನಿಶ್ಚಿತತೆಯನ್ನು ತಾಳಿಕೊಳ್ಳಲಾರರು. ಮುಂದೆ ಏನಾಗಬಹುದು ಎಂಬ ಕುರಿತು ಅವರು ಶೇಕಡ ನೂರರಷ್ಟು ಖಚಿತಪಡಿಸಿಕೊಳ್ಳಬಯಸುವವರು. ಅದನ್ನು ತಿಳಿಯುವ ಸಲುವಾಗಿಯೇ ಮತ್ತು ಅಂತಹ ಅಹಿತಕರ ಸನ್ನಿವೇಶಗಳನ್ನು ತಡೆಯುವುದು ಹೇಗೆ ಎಂಬ ಕುರಿತಾಗಿಯೇ ಚಿಂತೆಯಿಂದ ಬಳಲುತ್ತಾರೆ. ಆದರೆ ಸಮಸ್ಯೆಯೆಂದರೆ ಅಂತಹ ಚಿಂತೆ ಉಪಯೋಗಕ್ಕೆ ಬರುವುದಿಲ್ಲ. ಮುಂದೆ ಆಗಬಹುದಾದ ಸಂಗತಿಗಳ ಬಗ್ಗೆ ಚಿಂತಿಸುವುದರಿಂದ ಭವಿಷ್ಯ ತಿಳಿಯಲಾಗದು. ಹಾಗೆ ಚಿಂತಿಸುವುದರಿಂದ ಒಳ್ಳೆಯ ಸ್ಥಿತಿ ಬಂದೀತೆಂದು ಭಾವಿಸುವುದಾದರೂ, ಅದು ಕೇವಲ ಭ್ರಮೆಯಾಗಿರುತ್ತದೆ. ಕೆಟ್ಟ ಸಂಭವನೀಯ ಸಂಗತಿಗಳ ಬಗ್ಗೆ ಚಿಂತಿಸುವುದರಿಂದ ಅದನ್ನು ನಡೆಯುವುದನ್ನು ನಿಲ್ಲಿಸಲಾಗದು. ಅಂತಹ ಚಿಂತೆ ನಮ್ಮ ಈಗಿನ ಸುಖ-ಸಂತೋಷಗಳನ್ನು ಕಿತ್ತುಕೊಳ್ಳುತ್ತದೆ. ಆದ್ದರಿಂದ ತಾತ್ಕಾಲಿಕವಾಗಿ ಈಗ ಏನು ಮಾಡಬಹುದೆಂಬ ಬಗ್ಗೆ ಮಾತ್ರ ಯೋಚಿಸಿ, ಕ್ರಮೇಣ ನಿಶ್ಚಿತ ಮತ್ತು ಉಪಯುಕ್ತ ಕ್ರಮಗಳ ಬಗ್ಗೆ ಮುಂದುವರೆಯುವುದು ಸೂಕ್ತ.
     ಸತತ ಚಿಂತೆಯಿಂದ ಬಳಲುವವರಿಗೆ ಸಮಸ್ಯೆ ವಾಸ್ತವಕ್ಕಿಂತ ಹೆಚ್ಚು ಅಪಾಯಕಾರಿಯಾಗಿ ತೋರುತ್ತದೆ. ಸಮಸ್ಯೆಯನ್ನು ನಿಭಾಯಿಸುವುದು ದುಸ್ತರವಾಗಿ ತೋರುತ್ತದೆ. ಇದನ್ನು ಅರಿವಿನ ವಿಕಾರವೆನ್ನಬೇಕೋ ಅಥವ ಬೇರೆ ಏನೆನ್ನಬೇಕೋ ತಿಳಿಯದು. ಈ ಅರಿವಿನ ವಿಕಾರ ವಾಸ್ತವಿಕ ವಿಚಾರಗಳನ್ನು ಅವಲಂಬಿಸಿರದಿದ್ದರೂ ಅದನ್ನು ಬಿಡುವುದು ಕಷ್ಟವೇ. ಎಷ್ಟೋ ಸಲ ಅದು ಮನಸ್ಸಿನಲ್ಲಿ ಅಚ್ಚಳಿಯದಂತೆ ಉಳಿದುಬಿಟ್ಟಿರುವ, ಬದಲಾಯಿಸಲಾಗದ ವಿಚಾರವಾಗಿರಬಹುದು. ಇದನ್ನು ಸರಿಪಡಿಸಲು ಮೆದುಳಿಗೆ ತರಬೇತಿ ಕೊಡುವುದು ಅಗತ್ಯ. ಸಮಸ್ಯೆಯ ಅಪಾಯಗಳ ಕುರಿತು ಯಾವ ಸಂಗತಿ ಭಯಕ್ಕೆ ಕಾರಣವಾಗಿದೆಯೋ ಅದನ್ನು ವಸ್ತುಸ್ಥಿತಿಯೆಂದು ಭಾವಿಸದೆ, ಅದರ ಕುರಿತು ಸಾಧಕ-ಬಾಧಕಗಳ ಕುರಿತು ಪರಿಶೀಲಿಸಿದರೆ ಸಮತೋಲಿತವಾಗಿ ಯೋಚಿಸಲು ಸಾಧ್ಯವಾಗಬಹುದು. ಈ ಅಂಶಗಳನ್ನೂ ಪರಿಗಣಿಸಬೇಕಾಗುತ್ತದೆ:
>>; ಚಿಂತೆಗೆ ಕಾರಣವಾದ ಸಂಗತಿ ಎಷ್ಟರಮಟ್ಟಿಗೆ ಸತ್ಯ? ಎಷ್ಟು ಅಸತ್ಯ?
>>; ಈಗಿನ ಪರಿಹಾರಕ್ಕಿಂತ ಬೇರೆ ರೀತಿಯ ಪರಿಹಾರಕ್ಕೆ ಅವಕಾಶವಿದೆಯೇ?
>>; ಭಯಕ್ಕೆ ಕಾರಣವಾದ ಸಂಗತಿ ನಡೆಯುವ ಸಾಧ್ಯತೆ ಎಷ್ಟು?
>>; ಅಂತಹ ಸಾಧ್ಯತೆ ಕಡಿಮೆಯಿದ್ದರೆ, ಇತರ ಪರಿಣಾಮಗಳಾದರೂ ಎಂತಹವು?
>>; ಚಿಂತಿಸುವುದು ಸಹಕಾರಿಯೇ? ಚಿಂತೆ ಮಾಡುವುದರಿಂದ ಎಷ್ಟರ ಮಟ್ಟಿಗೆ ಅನುಕೂಲ/ತೊಂದರೆ?
>>; ಇಂತಹುದೇ ಸಮಸ್ಯೆ ನನ್ನ ಸ್ನೇಹಿತನಿಗೆ ಇದ್ದರೆ ನಾನು ಏನು ಸಲಹೆ ಕೊಡುತ್ತಿದ್ದೆ?
     ಸಮಸ್ಯೆ ಉಂಟುಮಾಡುವವರಿಂದ ಹಿತಕರವಾದ ಅಂತರ ಕಾಯ್ದುಕೊಳ್ಳುವುದು ಸೂಕ್ತ. ಸಮಸ್ಯೆ ಉಲ್ಬಣವಾಗದಂತೆ ಅಂತಹವರೊಂದಿಗೆ ಜಾಗ್ರತೆಯಿಂದ ವ್ಯವಹರಿಸಬೇಕಾಗುತ್ತದೆ. ಆಪ್ತರು, ಸ್ನೇಹಿತರು, ಹಿತಚಿಂತಕರುಗಳನ್ನು ಎಚ್ಚರಿಕೆಯಿಂದ ಆರಿಸಿಕೊಳ್ಳಬೇಕು. ಚಿಂತೆಗೆ ಭವಿಷ್ಯದಲ್ಲಿ ಏನಾಗಬಹುದು ಮತ್ತು ಅದಕ್ಕೆ ನಾವು ಏನು ಮಾಡಬೇಕು ಎಂಬುದೇ ಮುಖ್ಯ ಕಾರಣವಾಗಿದೆ. ಮನಸ್ಸನ್ನು ನಿಯಂತ್ರಿಸಿಕೊಳ್ಳುವುದು ಮತ್ತು ಅದಕ್ಕೆ ತರಬೇತಿ ನೀಡಿದರೆ ಸಮಸ್ಯೆ ಹಗುರವಾದೀತು. ಮನಸ್ಸಿನ ಆತಂಕಗಳು, ಉದ್ವೇಗಗಳನ್ನು ಉಪೇಕ್ಷಿಸದೆ, ಹತ್ತಿಕ್ಕದೆ ಅವುಗಳನ್ನು ಹೊರಗಿನ ವ್ಯಕ್ತಿಯ ದೃಷ್ಟಿಯಿಂದ ನೋಡುವ ಅಭ್ಯಾಸ ಬೆಳೆಸಿಕೊಂಡರೆ ಒಳಿತಾದೀತು. ಇಂತಹ ಅಭ್ಯಾಸ ಬೆಳೆಸಿಕೊಂಡರೆ ಸಮಸ್ಯೆಗಳು ಮೋಡ ಆಕಾಶದಲ್ಲಿ ಸರಿದುಹೋದಂತೆ ಸರಿದು ಹೋಗಬಹುದು. ಚಿಂತೆ ಭವಿಷ್ಯದ ದುಃಖಗಳನ್ನು ನಿವಾರಿಸುತ್ತದೋ ಇಲ್ಲವೋ ತಿಳಿಯದು, ಆದರೆ ಇಂದಿನ ಸಂತೋಷವನ್ನು ಮಾತ್ರ ಹಾಳು ಮಾಡುತ್ತದೆ. ಮುಂದಿನ ಸಂಗತಿಗಳಿಗಿಂತ ಇಂದಿನ ಪರಿಸ್ಥಿತಿಯ ಬಗ್ಗೆ ಗಮನ ನೀಡಿದರೆ ಮುಂದಿನದೂ ಸರಾಗವಾಗಿ ಸಾಗಬಹುದು. ಮನಸ್ಸನ್ನು ಕೇಂದ್ರೀಕರಿಸಿ ಈಗ ಏನು ಮಾಡಬೇಕೆಂಬ ಬಗ್ಗೆ ಮಾತ್ರ ಧ್ಯಾನಿಸಿದರೆ ಅನುಕೂಲವಾಗಬಹುದು. ಹಳೆಯ ಚಿಂತೆಗಳಿಗೆ ಮನಸ್ಸು ಮರಳಿದರೂ, ವಿಚಲಿತರಾಗದೆ ಪ್ರಯತ್ನ ಮುಂದುವರೆಸಿದರೆ ಚಿಂತೆಯಿಂದ ಮುಕ್ತವಾಗುವ ದಾರಿ ಸಿಕ್ಕೀತು. ಚಿಂತಿಸದಿರೋಣ. ಚಿಂತೆಯದೇ ಚಿಂತೆಯಾಗಿರುವಾಗ ಇದು ಬಹಳ ಕಷ್ಟವಾದರೂ ಪ್ರಯತ್ನಪಟ್ಟು ಚಿಂತಿಸದಿರೋಣ.
-ಕ.ವೆಂ.ನಾಗರಾಜ್.
**************
ದಿನಾಂಕ 17.02.2016ರ ಜನಹಿತ ಪತ್ರಿಕೆಯ 'ಜನಕಲ್ಯಾಣ' ಅಂಕಣದಲ್ಲಿ ಪ್ರಕಟಿತ.