ವೇದಜೀವನ ಬ್ಲಾಗಿಗೆ ಸ್ವಾಗತ. ಸುವಿಚಾರಗಳು ಎಲ್ಲಿಂದಲಾದರೂ ಬರಲಿ, ಯಾರಿಂದಲಾದರೂ ಬರಲಿ, ಪೂರ್ವಾಗ್ರಹ ಪೀಡಿತರಾಗದೆ ಸ್ವೀಕರಿಸೋಣ.

ಶನಿವಾರ, ಆಗಸ್ಟ್ 6, 2016

ರಾಕ್ಷಸತ್ವ


     ರಾಕ್ಷಸ ಎಂದಾಕ್ಷಣ ನಮ್ಮ ಕಣ್ಣ ಮುಂದೆ ಬರುವ ಚಿತ್ರವೆಂದರೆ ದೈತ್ಯಾಕಾರದ ದೇಹ, ಭೀಭತ್ಸ ರೂಪ, ಡೊಳ್ಳು ಹೊಟ್ಟೆ, ಹೊರಚಾಚಿರುವ ಕೋರೆ ಹಲ್ಲುಗಳು, ತಲೆಯ ಮೇಲೆ ಕೊಂಬುಗಳು, ಕೈಯಲ್ಲಿ ಅಪಾಯಕಾರಿ ಆಯುಧಗಳು, ಬೇಕಾದ ರೂಪ ಧರಿಸುವ ಶಕ್ತಿ ಇರುವನು, ರಕ್ತಪಿಪಾಸು ಎಂಬಂತೆ. ಪುರಾಣಗಳಲ್ಲಿ, ಜಾನಪದ ಕಥೆಗಳಲ್ಲಿ ಬರುವ ರಾಕ್ಷಸರ ಚಿತ್ರಣವೂ ಹೀಗೆಯೇ ಇರುತ್ತದೆ. ಅವರು ಹೇಗಾದರೂ ಇರಲಿ, ರಾಕ್ಷಸರು ಎಂದಾಕ್ಷಣ ಅವರು ಕೆಟ್ಟವರು ಎಂಬ ಭಾವವಂತೂ ಮೂಡಿಬಿಡುತ್ತದೆ. ರಾಕ್ಷಸರು ನಿಜವಾಗಿ ಹೀಗಿರುತ್ತಾರೆಯೇ?
     ರಕ್ಷಃ ಅಥವ ರಕ್ಷಸ್ ಅಂದರೆ ಶತ್ರುಗಳು, ದುರ್ಭಾವನೆ, ದುರ್ವಿಚಾರ ಎಂದರ್ಥ. ಯಾರು ರಕ್ಷಸ್ಸುಗಳನ್ನು, ಅಂದರೆ ದುರ್ಭಾವನೆಗಳನ್ನು, ದುರ್ವಿಚಾರಗಳನ್ನು ಹೊಂದಿರುತ್ತಾರೋ, ದುಷ್ಕಾರ್ಯಗಳನ್ನು ಮಾಡುತ್ತಾರೋ ಅವರೇ ರಾಕ್ಷಸರು. ರಾಕ್ಷಸತ್ವಕ್ಕೆ ಯಾವುದೇ ಜಾತಿಯ ಕಟ್ಟಿಲ್ಲ. ರಾಕ್ಷಸನೂ ಒಬ್ಬ ಮಾನವ ಜೀವಿಯೇ ಹೊರತು ಬೇರೆಯಲ್ಲ. ಒಬ್ಬ ರಾಕ್ಷಸನಾಗುವುದು ಅಥವ ಮಾನವನಾಗುವುದು ನಡವಳಿಕೆಯಿಂದ ಅಷ್ಟೆ. ಅರಿಷಡ್ವರ್ಗಗಳಾದ ಕಾಮ, ಕ್ರೋಧ, ಮದ, ಮತ್ಸರ, ಲೋಭ ಮತ್ತು ಮೋಹಗಳೇ ರಕ್ಷಸ್ಸುಗಳು. ಅದಕ್ಕೆ ಬಲಿಯಾಗಿ ಕುಕೃತ್ಯಗಳನ್ನು ಎಸಗುವವರೇ ರಾಕ್ಷಸರು.
     ಧೃತರಾಷ್ಟ್ರನ ಪುತ್ರಮೋಹ ಅವನ ನೂರು ಮಕ್ಕಳನ್ನೂ ಅವನು ಬದುಕಿದ್ದಾಗಲೇ ಬಲಿ ತೆಗೆದುಕೊಂಡಿತು. ದೃಷ್ಟಿಹೀನನಾಗಿದ್ದ ಆತ ದುರ್ಯೋಧನನ ಮೇಲಿನ ಅತಿಯಾದ ಮೋಹದಿಂದ ನ್ಯಾಯ, ನೀತಿ, ಧರ್ಮಗಳ ವಿಷಯದಲ್ಲೂ ಸಹ ಕುರುಡನಾಗಿದ್ದ. ಮತಾಂಧರು ಸಹಮಾನವರನ್ನೇ ಕಿಂಚಿತ್ತೂ ಕರುಣೆಯಿಲ್ಲದೆ ಹಿಂಸಾತ್ಮಕವಾಗಿ ಬಲಿ ತೆಗೆದುಕೊಳ್ಳುತ್ತಿರುವುದನ್ನೂ ಕಾಣುತ್ತಿದ್ದೇವೆ. ಅಜ್ಞಾನದ ಪರಮಾವಧಿಯೆನ್ನಬಹುದಾದ ಈ ಮೋಹ ಮಾನವನನ್ನು ದಾನವನನ್ನಾಗಿ ಮಾಡುತ್ತದೆ.
     ಕೋಪದಿಂದಾಗಿ ಯಾವುದು ಒಳ್ಳೆಯದು, ಯಾವುದು ಕೆಟ್ಟದ್ದು ಎಂದು ವಿವೇಚಿಸುವ ಶಕ್ತಿಯನ್ನು ಹೊಸಕಿಹಾಕಿ ಪಶುವಿನಂತೆ ವರ್ತಿಸುವ ವ್ಯಕ್ತಿಗೆ ಸ್ನೇಹಿತ-ವೈರಿ, ತನ್ನವರು-ಬೇರೆಯವರು, ಸೋದರ-ಸೋದರಿ, ಹಿರಿಯರು-ಕಿರಿಯರು ಮುಂತಾದ ಯಾವ ವ್ಯತ್ಯಾಸವೂ ಗೊತ್ತಾಗದು. ಗೊತ್ತಾಗುವಷ್ಟರಲ್ಲೇ ಅನಾಹುತ ಜರುಗಿಬಿಟ್ಟಿರುತ್ತದೆ. ಸಭ್ಯತೆ, ಸಂಸ್ಕೃತಿ, ಸ್ಥಾನ-ಮಾನಗಳ ಪರಿವೆಯೂ ಕ್ರೋಪಿಷ್ಠನಿಗೆ ಇರುವುದಿಲ್ಲ. ಕೋಪವೆಂಬ ರಕ್ಕಸನಿಂದ ಎಲ್ಲೆಲ್ಲೂ ಅಪಕಾರ, ಎಲ್ಲೆಲ್ಲೂ ಹಾಹಾಕಾರ!
     ಮತ್ಸರದ ಕುರಿತು ಹೇಳಲೇಬೇಕಿಲ್ಲ. ಪೃಥ್ವೀರಾಜನ ಏಳಿಗೆ ಸಹಿಸದ ಜಯಚಂದ್ರನ ಮತ್ಸರ ಭಾರತವನ್ನು ಶತಮಾನಗಳ ಕಾಲ ದಾಸ್ಯಕ್ಕೆ ದೂಡಿತು. ದಾಯಾದಿ ಮತ್ಸರ ಮಹಾಭಾರತಕ್ಕೆ ನಾಂದಿ ಹಾಡಿತು. ತನ್ನ ಮಗನಿಗೆ ರಾಜ್ಯ ಸಿಗಲೆಂದು ಕೈಕೇಯಿ ರಾಮನನ್ನು ಕಾಡಿಗೆ ಹೋಗುವಂತೆ ಮಾಡಿದಳು. ಮತ್ಸರ ಅನ್ನುವುದು ನಮ್ಮ ಒಳಗಿನ ಕಲ್ಮಶ, ನಿವಾರಿಸಿಕೊಂಡರೆ ಮುಂದೆ ಸಾಗುತ್ತೇವೆ. ಇಲ್ಲದಿದ್ದರೆ ಕೆಳಕ್ಕೆ ಜಾರುತ್ತೇವೆ.
     ಇನ್ನು ಕಾಮದ ವಿಷಯ ಹೇಳುವುದೇ ಬೇಡ. ರಾವಣನ ವಧೆಯಾದ ಸಂದರ್ಭದಲ್ಲಿ ಮಂಡೋದರಿ ಶೋಕಿಸಿದ ಪರಿ ಇದು: 'ನೀನು ಮೊದಲು ಇಂದ್ರಿಯಗಳನ್ನು ಜಯಿಸಿ ಮೂಲೋಕಗಳಿಗೆ ಒಡೆಯನಾದೆ. ಆ ಇಂದ್ರಿಯಗಳು ಅದನ್ನು ನೆನಪಿನಲ್ಲಿಟ್ಟುಕೊಂಡಿದ್ದವೋ ಎಂಬಂತೆ ನಿನ್ನ ಮೇಲೆ ದ್ವೇಷ ಸಾಧಿಸಿ ನಿನ್ನನ್ನು ಗೆದ್ದವು.' ಜೀವನಕ್ಕೆ ಬೇಕಾದ ಅಮೂಲ್ಯ ಪಾಠ ಈ ಮಾತಿನಲ್ಲ್ಲಿದೆ. ಕಾಮ ಹಿಡಿತದಲ್ಲಿದ್ದರೆ ಅದರಿಂದ ಏನು ಬೇಕಾದರೂ ಸಾಧಿಸಬಹುದು. ಅದರ ಹಿಡಿತಕ್ಕೆ ಸಿಕ್ಕಿಬಿದ್ದರೆ ಮುಗಿದೇಹೋಯಿತು. ಅನೇಕ ವರ್ಷಗಳ ಸಾಧನೆಯನ್ನು ಕ್ಷಣಾರ್ಧದಲ್ಲಿ ನುಂಗಿ ನೀರು ಕುಡಿಯುವ ಸಾಮರ್ಥ್ಯ ಕಾಮಕ್ಕಿದೆ. ಆಧ್ಯಾತ್ಮಿಕ ಪಥದಲ್ಲಿ ಸಾಗುತ್ತಿರುವವರು, ಜನನಾಯಕರು, ಸಮಾಜದಲ್ಲಿ ಉನ್ನತ ಸ್ಥಾನ-ಮಾನಗಳನ್ನು ಹೊಂದಿದವರು ಕ್ಷಣಿಕ ದೌರ್ಬಲ್ಯದ ಸುಳಿಗೆ ಸಿಕ್ಕಿ ಅಧಃಪತನ ಹೊಂದಿದ, ಮತ್ತೆ ಮೇಲಕ್ಕೇರಲು ಸಾಧ್ಯವೆನಿಸದ ಸ್ಥಿತಿಯಲ್ಲಿರುವ ಅನೇಕರನ್ನು ನಾವು ಕಂಡಿದ್ದೇವೆ, ಕಾಣುತ್ತಿದ್ದೇವೆ. ಈ ಸುಳಿಗೆ ಸಿಕ್ಕಿದವರ ಸಂಸಾರಗಳು ಹಾಳಾಗಿರುವ, ನೆಮ್ಮದಿ ಕಳೆದುಕೊಂಡಿರುವ, ಪ್ರಾಣ ಕಳೆದಿರುವ ಮತ್ತು ಕಳೆದುಕೊಂಡಿರುವವರ ಉದಾಹರಣೆಗಳು ಹೇರಳವಾಗಿ ಸಿಗುತ್ತವೆ. ಕ್ಷಣಿಕ ಆನಂದದ ಉನ್ಮಾದ ಜೀವನದ ದಿಕ್ಕನ್ನೇ ತಿರುಗಿಸಬಲ್ಲದು ಎಂಬುದರ ಅರಿವು ಮೂಡುವಷ್ಟರಲ್ಲಿ ಪ್ರಮಾದ ಘಟಿಸಿಬಿಟ್ಟಿರುತ್ತದೆ.
     ಮದ ಸೊಕ್ಕಿ ಮೆರೆಯುವವರನ್ನು ಯಾರು ಇಷ್ಟಪಡುತ್ತಾರೆ? ಮದಕ್ಕೆ ಹಲವು ರೂಪಗಳಿವೆ- ಸಂಪತ್ತಿನ ಮದ, ಅಧಿಕಾರ ಮದ, ರೂಪ ಮದ, ಯೌವನದ ಮದ, ತಿಳಿದವನೆಂಬ ಮದ, ಇತ್ಯಾದಿ. ಸಿಗಬೇಕಾದ ಸಂಸ್ಕಾರ ಸಿಗದಿದ್ದಾಗ ಮದದ ಠೇಂಕಾರಕ್ಕೆ ಮಿತಿ ಇರುವುದಿಲ್ಲ. ಮದದ ಕಾಯಿಲೆಯಿಂದ ನರಳುತ್ತಿರುವವರಿಂದ ದೂರವಿರುವುದೇ ಕ್ಷೇಮ.
     ಲೋಭಿಗಳಿಗೆ ಯಾವುದೇ ನೀತಿ, ನಿಯಮಗಳು, ಸಿದ್ಧಾಂತಗಳು ಪಥ್ಯವಾಗುವುದಿಲ್ಲ. ಅವರ ಒಂದೇ ಗುರಿ ಎಲ್ಲವೂ ತಮಗಿರಲಿ ಎಂಬುದಷ್ಟೇ. ಇದರಿಂದಾಗಿ ಆಸ್ತಿಕತೆ, ಧಾರ್ಮಿಕತೆ, ಒಳ್ಳೆಯ ವಿಚಾರಗಳು, ನಡೆಗಳು, ಒಟ್ಟಾರೆಯಾಗಿ ಸತ್ಪ್ರವೃತ್ತಿಗಳು ಮರೆಯಾಗುತ್ತವೆ. ಕ್ರೂರ ಪಶುಗಳಿಗೂ ಅವರಿಗೂ ವ್ಯತ್ಯಾಸ ಇರದೆ, ಸಮಾಜ ದುಸ್ಥಿತಿಗೆ ಜಾರುತ್ತದೆ. ಲೋಭಿ ತಾನು ಕೆಡುವುದಲ್ಲದೆ, ಸಮಾಜವನ್ನೂ ಕೆಡಿಸುತ್ತಾನೆ. ಲೋಭಿಯಾದವರು ಯಾವ ಮಾರ್ಗದಲ್ಲೇ ಆಗಲಿ, ತನಗೆ ಹಣ ಬಂದರಾಯಿತು ಎಂಬ ಮನೋಭಾವದವನಾಗಿದ್ದು, ಈ ಕಾರಣದಿಂದಲೇ ಕಪ್ಪು ಹಣ, ಭ್ರಷ್ಠಾಚಾರ, ಕಾಳಸಂತೆ, ಜೂಜು, ಬೆಟ್ಟಿಂಗ್, ಕಲಬೆರಕೆ, ಮಾದಕ ದ್ರವ್ಯಗಳ ವ್ಯಾಪಾರ. ಕಳ್ಳ ಸಾಗಾಣಿಕೆ, ವೇಶ್ಯಾವಾಟಿಕೆ, ದೇಶದ್ರೋಹದ ಚಟುವಟಿಕೆಗಳು, ಪ್ರಾಣಹಾನಿ, ಮಾನಹಾನಿ, ಭಯೋತ್ಪಾದಕತೆ, ಮುಂತಾದವುಗಳು ವಿಜೃಂಭಿಸುತ್ತವೆ.
     ರಾಕ್ಷಸರು ಹೊರಗೆ ಎಲ್ಲೋ ಇಲ್ಲ. ನಮ್ಮೊಳಗೇ ಇದ್ದಾರೆ. ಅವರನ್ನು ಹತ್ತಿಕ್ಕಬೇಕಾದವರು ನಾವೇ! ಅವಿವೇಕದ ರಕ್ಕಸನನ್ನು ಹತ್ತಿಕ್ಕಲು ವಿವೇಕದ ಪರಮಾತ್ಮನೇ ಬರಬೇಕು. ವಿವೇಚಿಸಿ ನಡೆಯುವುದು, ಸತ್ಸಂಗ, ಸಜ್ಜನ ಸಹವಾಸ, ಸಾತ್ವಿಕ ಆಹಾರ, ಸಂಸ್ಕಾರಯುತ ಮನೆ, ಉತ್ತಮ ಮಾರ್ಗದರ್ಶನ, ನೈತಿಕ ಮೌಲ್ಯ ಬೋಧಿಸುವ ಶಿಕ್ಷಣ- ಇವು ಒಳಗಿನ ರಾಕ್ಷಸರನ್ನು ಹತ್ತಿಕ್ಕಲು ಇರುವ ಪರಿಣಾಮಕಾರಿ ಆಯುಧಗಳಾದರೆ, ಹೊರಗಿನ ರಾಕ್ಷಸರನ್ನು ನಿಯಂತ್ರಿಸಲು ಉಪಯೋಗಿಸಬಹುದಾದ ಆಯುಧಗಳೆಂದರೆ ಸಾಮ, ದಾನ, ಭೇದ ಮತ್ತು ದಂಡ. ಒಬ್ಬ ದುರ್ಜನನನ್ನು ಮನ ಪರಿವರ್ತಿಸಿ, ಯೋಗ್ಯ ತಿಳುವಳಿಕೆ ನೀಡಿ ಸಜ್ಜನನನ್ನಾಗಿಸಿದರೆ, ಒಬ್ಬ ರಾಕ್ಷಸ ಕಡಿಮೆಯಾಗುವುದರ ಜೊತೆಗೆ ಒಬ್ಬ ಸಜ್ಜನನ ಸಂಖ್ಯೆ ಹೆಚ್ಚಾಗುತ್ತದೆ. ಮನ ಪರಿವರ್ತನೆ ಸಾಧ್ಯವೇ ಇಲ್ಲ, ಅವನಿಂದ ಸಮಾಜಕ್ಕೆ ಹಾನಿ ತಪ್ಪಿದ್ದಲ್ಲ ಅನ್ನಿಸಿದರೆ, ಸಾಮ, ದಾನ, ಭೇದದ ಪ್ರಯೋಗಗಳು ಉಪಯೋಗಕ್ಕೆ ಬರದಿದ್ದರೆ ದಂಡಪ್ರಯೋಗ ಸಮಾಜದ ದೃಷ್ಟಿಯಿಂದ ಅನಿವಾರ್ಯವಾಗುತ್ತದೆ. ಮೌಲ್ಯಯುತ ಆಡಳಿತ ಬಂದರೆ ಇದೂ ಸಹ ಸಾಧ್ಯ.
-ಕ.ವೆಂ.ನಾಗರಾಜ್.
****************
ದಿನಾಂಕ 11.05.2016ರ ಜನಹಿತ ಪತ್ರಿಕೆಯ 'ಜನಕಲ್ಯಾಣ' ಅಂಕಣದಲ್ಲಿ ಪ್ರಕಟಿತ:

1 ಕಾಮೆಂಟ್‌:

  1. Sanjay Kumar
    ಕೋಪದಿಂದ ತೆಗೆದುಕೊಂಡ ನಿರ್ಧಾರ ಅನಾಹುತಕ್ಕೆ ಕಾರಣ

    Nagraj Nadig
    ನಾನೇ ಈ ರಾಕ್ಷಸನಿಗೆ ಬಲಿಯಾಗಿ ಎಷ್ಟೋ ಸಂದರ್ಭಗಳಲ್ಲಿ ಸಂಸಾರದಲಿ, ಸಮಾಜದಲ್ಲಿ, ಸಂಘಟನೆಯಲ್ಲಿ ಸಾಮರಸ್ಯವನು ಕದಡಿದ್ದೆ ಆಗ ಸಂಘದ ಜಿಲ್ಲಾ ಜೇಷ್ಟ ಪ್ರಚಾರಕರು ನೀಡಿದ ಹಿತವಚನದಿಂದ ತಹಬಂದಿಗೆ ತಂದುಕೊಂಡಿರುವೆ.

    ಪ್ರತ್ಯುತ್ತರಅಳಿಸಿ