ವೇದಜೀವನ ಬ್ಲಾಗಿಗೆ ಸ್ವಾಗತ. ಸುವಿಚಾರಗಳು ಎಲ್ಲಿಂದಲಾದರೂ ಬರಲಿ, ಯಾರಿಂದಲಾದರೂ ಬರಲಿ, ಪೂರ್ವಾಗ್ರಹ ಪೀಡಿತರಾಗದೆ ಸ್ವೀಕರಿಸೋಣ.
ಕವನ ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ
ಕವನ ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ

ಬುಧವಾರ, ಏಪ್ರಿಲ್ 2, 2014

ಪರಮಾತ್ಮ ಸ್ತುತಿ

ಸ್ವಾಮಿ ದೇವನೆ ಸರ್ವದಾತನೆ ವಂದನೆ ಶತವಂದನೆ |
ದುರಿತವೆಲ್ಲವ ದೂರಮಾಡಿ ಒಳಿತುಗೊಳಿಸಲು ಪ್ರಾರ್ಥನೆ || ಪ ||

ಜಗವ ಸಲಹುವ ಸ್ವಾಮಿ ನೀನೇ ಒಬ್ಬನೇ ನೀನೊಬ್ಬನೇ
ಸರ್ವ ಗ್ರಹಗಳ ಶಕ್ತಿ ನೀನೆ ಲೋಕದೊಡೆಯನೆ ವಂದನೆ |
ಜ್ಯೋತಿ ನೀನೇ ಶಕ್ತಿ ನೀನೇ ಸಚ್ಚಿದಾನಂದನೊಬ್ಬನೇ
ಸಕಲವೆಲ್ಲವು ನಿನ್ನದಾಗಿರೆ ನಮ್ಮತನವಿದು ಅರ್ಪಣೆ || ೧ ||

ಆತ್ಮದಾತನೆ ಶಕ್ತಿದಾತನೆ ಜಗದ್ವಂದ್ಯನೆ ಪರಮನೆ
ಸತ್ಯಮಾರ್ಗದಿ ನಡೆಸುವಾತನೆ ದೇವದೇವನೆ ವಂದನೆ |
ಸತ್ಯ ಸುಂದರ ಶಿವನು ನೀನೆ ಹುಟ್ಟು ಸಾವಿನ ಒಡೆಯನೆ 
ಸಕಲವೆಲ್ಲವು ನಿನ್ನದಾಗಿರೆ ನಮ್ಮತನವಿದು ಅರ್ಪಣೆ || ೨ ||

ಪಶುಗಳೊಡೆಯನೆ ಪಕ್ಷಿಪಿತನೆ ಸಕಲ ಜೀವರ ರಾಜನೆ
ಜೀವರಾಶಿಯ ಕಾರ್ಯಕೊಡೆಯ ನ್ಯಾಯದೇವಗೆ ವಂದನೆ |
ಪ್ರಾಣದಾತನೆ ತ್ರಾಣದಾತನೆ ಹರುಷರೂಪಕೆ ತಿಲಕನೆ
ಸಕಲವೆಲ್ಲವು ನಿನ್ನದಾಗಿರೆ ನಮ್ಮತನವಿದು ಅರ್ಪಣೆ || ೩ ||

ಭುವಿಗೆ ಆಸರೆ ನಿನ್ನ ಕರುಣೆ ಪರಮ ಬೆಳಕಿನ ಲೋಕಕೆ
ಮುಕ್ತ ಸ್ಥಿತಿಗೆ ನೆಲೆಯ ನೀಡಿಹ ಕರುಣದೇವಗೆ ವಂದನೆ |
ಅಂತರಿಕ್ಷದ ಗ್ರಹಸಮೂಹಕೆ ಗತಿಯ ನೀಡಿಹ ಮಾನ್ಯನೆ
ಸಕಲವೆಲ್ಲವು ನಿನ್ನದಾಗಿರೆ ನಮ್ಮತನವಿದು ಅರ್ಪಣೆ || ೪ ||

ನಿನ್ನ ಬಿಟ್ಟು ಅನ್ಯರರಿಯೆವು  ಜೀವಕುಲದ ಸ್ವಾಮಿಯೆ
ಸರ್ವ ಸೃಷ್ಟಿಯ ಜನಕ ನೀನೆ ಒಡೆಯ ನಿನಗೆ ವಂದನೆ |
ದಾಸರಾಗದೆ ಸಿರಿಗೆ ನಾವು ಒಡೆಯರಾಗಿ ಬಾಳುವ 
ಕಾಮಿತಾರ್ಥದ ಫಲವು ಸಿಗಲಿ ನಿನ್ನ ಪೂಜಿಪ ಜೀವಗೆ || ೫ ||

ತೃಪ್ತಭಾವದ ಮುಕ್ತ ಸ್ಥಿತಿಯ ನಿನ್ನ ನೆಲೆಯಲಿ ಅರಸುವ
ವಿದ್ವಜ್ಜನರಿಗೆ ಜ್ಯೋತಿಯಾಗಿ ಮಾರ್ಗ ತೋರುವ ದೇವನೆ |
ನೀನೆ ಬಂಧು ನೀನೆ ದಾರಿ ನೀನೆ ಭಾಗ್ಯವಿಧಾತನು
ನಿನ್ನ ಸೃಷ್ಟಿಯ ನೀನೆ ಬಲ್ಲೆ ವಂದನೆ ಜಗದೊಡೆಯನೆ || ೬ ||

ಸತ್ಯಪಥದಿ ಮುಂದೆ ಸಾಗಲು ಮತಿಯ ಕರುಣಿಸು ದೇವನೆ
ಸಂಪತ್ತು ಬರಲಿ ನ್ಯಾಯ ಮಾರ್ಗದಿ ನಿನ್ನ ಕರುಣೆಯ ಬಲದಲಿ |
ರಜವ ತೊಳೆದು ತಮವ ಕಳೆದು ಸತ್ತ್ವ ತುಂಬಲು ಬೇಡುವೆ
ಬಾಳ ಬೆಳಗುವ ಜ್ಯೋತಿ ನೀನೆ ವಂದನೆ ಶತ ವಂದನೆ || ೭ ||
-ಕ.ವೆಂ.ನಾ.
*********
ಪ್ರೇರಣೆ:
     ಈ ಕೆಳಕಂಡ ವೇದಮಂತ್ರಗಳ ಪ್ರೇರಣೆಯಿಂದ ಇದನ್ನು ರಚಿಸಿದ್ದು, ಇದು ಪದಶಃ ಅನುವಾದವಲ್ಲ. ಮಂತ್ರದ ಸಾರವನ್ನು, ಭಾವವನ್ನು ಕನ್ನಡದಲ್ಲಿ ಮೂಡಿಸುವ ಸಣ್ಣ ಪ್ರಯತ್ನವಷ್ಟೆ.

ಓಂ ವಿಶ್ವಾನಿ ದೇವ ಸವಿತರ್ದುರಿತಾನಿ ಪರಾ ಸುವ| ಯದ್ಭದ್ರಂ ತನ್ನ ಆ ಸುವ|| (ಯಜು.೩೦.೩.)

ಓಂ ಹಿರಣ್ಯಗರ್ಭಃ ಸಮವರ್ತತಾಗ್ರೇ ಭೂತಸ್ಯ ಜಾತಃ ಪತಿರೇಕ ಆಸೀತ್| ಸ ದಾಧಾರ ಪೃಥಿವೀಂ ದ್ಯಾಮುತೇಮಾಂ ಕಸ್ಮೈ ದೇವಾಯ ಹವಿಷಾ ವಿಧೇಮ|| (ಯಜು.೧೩.೪.)

ಓಂ ಯ ಆತ್ಮದಾ ಬಲದಾ ಯಸ್ಯ ವಿಶ್ವ ಉಪಾಸತೇ ಪ್ರಶಿಷಂ ಯಸ್ಯ ದೇವಾಃ| ಯಸ್ಯ ಚ್ಛಾಯಾಮೃತಂ ಯಸ್ಯ ಮೃತ್ಯುಃ ಕಸ್ಮೈಃ ದೇವಾಯ ಹವಿಷಾ ವಿಧೇಮ|| (ಯಜು.೨೫.೧೩.)

ಓಂ ಯಃ ಪ್ರಾಣತೋ ನಿಮಿಷತೋ ಮಹಿತ್ವೈಕ ಇದ್ರಾಜಾ ಜಗತೋ ಬಭೂವ| ಯ ಈಶೇ ಅಸ್ಯ ದ್ವಿಪದಶ್ಚತುಷ್ಪದಃ ಕಸ್ಮೈ ದೇವಾಯ ಹವಿಷಾ ವಿಧೇಮ|| (ಯಜು.೨೫.೧೧.)

ಓಂ ಯೇನ ದ್ಯೌರುಗ್ರಾ ಪೃಥಿವೀ ಚ ಧೃಢಾ ಯೇನ ಸ್ವ ಸ್ತಭಿತಂ ಯೇನ ನಾಕಃ| ಯೋ ಅಂತರಿಕ್ಷೇ ರಜಸೋ ವಿಮಾನಃ ಕಸ್ಮೈ ದೇವಾಯ ಹವಿಷಾ ವಿಧೇಮ|| (ಯಜು.೩೨.೬.)

ಓಂ ಪ್ರಜಾಪತೇ ನ ತ್ವದೇತಾನ್ಯನ್ಯೋ ವಿಶ್ವಾ ಜಾತಾನಿ ಪರಿ ತಾ ಬಭೂವ| ಯತ್ ಕಾಮಾಸ್ತೇ ಜುಹುಮಸ್ತನ್ನೋ ಅಸ್ತು ವಯಂ ಸ್ಯಾಮ ಪತಯೋ ರಯೀಣಾಮ್|| (ಋಕ್.೧೦.೧೨೧.೧೦.)

ಓಂ ಸ ನೋ ಬಂಧುರ್ಜನಿತಾ ಸ ವಿಧಾತಾ ಧಾಮಾನಿ ವೇದ ಭುವನಾನಿ ವಿಶ್ವಾ| ಯತ್ರ ದೇವಾ ಅಮೃತಮಾನಶಾನಾಸ್ತೃತೀಯೇ ಧಾಮನ್ನಧ್ಯೈರಯಂತ|| (ಯಜು.೩೨.೧೦.)

ಓಂ ಅಗ್ನೇ ನಯ ಸುಪಥಾ ರಾಯೇ ಅಸ್ಮಾನ್ ವಿಶ್ವಾನಿ ದೇವ ವಯುನಾನಿ ವಿದ್ವಾನ್| ಯುಯೋಧ್ಯಸ್ಮಜ್ಜುಹುರಾಣಮೇನೋ ಭೂಯಿಷ್ಠಾಂ ತೇ ನಮ ಉಕ್ತಿಂ ವಿಧೇಮ|| (ಯಜು.೪೦.೧೬.)

   

ಮಂಗಳವಾರ, ಮಾರ್ಚ್ 11, 2014

ಮಾಡಿದ್ದುಣ್ಣೋ ಮಹರಾಯ!

ಎಂಥ ಸತ್ಯ ಎಂಥ ಸತ್ಯ ಎಂಥ ಸತ್ಯವು |
ಅಟ್ಟಿದ್ದೇ ಉಣಬೇಕು ಎಂಬ ಸತ್ಯವು || ಪ ||

ಒಂಬತ್ತು ಬಾಗಿಲಿನ ದೇವಮಂದಿರ
ಮಂದಿರದ ಅಧಿಪತಿಯೆ ಸತ್ಯಸುಂದರ |
ಸುತ್ತೆಲ್ಲ ಹರಿದಿಹುದು ನವರಸಧಾರಾ
ಮಾಯೆಯ ಮುಸುಕಿನಲಿ ಜೀವನಸಾರ || ೧ ||

ಮಂದಿರದ ಒಳಗಿಹುದು ಕಾಣದ ಪಾತ್ರೆ
ಅಂಕಿಲ್ಲದ ಡೊಂಕಿಲ್ಲದ ಸೋರದ ಪಾತ್ರೆ |
ದೇವನ ಲೆಕ್ಕದಲಿ ದೋಷವೆಂಬುದಿಲ್ಲ
ಬೇಯುತಿದೆ ಪಾತ್ರೆಯಲಿ ಮಾಡಿದಡುಗೆಯೆಲ್ಲ || ೨ ||

ಮಾಡಿದ ಕರ್ಮವದು ಬೆನ್ನನು ಬಿಡದು
ಧನಕನಕ ಬಂಧು ಬಳಗ ನೆರವಿಗೆ ಬರದು |
ಅಟ್ಟಡುಗೆಯುಣ್ಣದೆ ವಿಧಿಯೆ ಇಲ್ಲವು
ರಸಪಾಕವ ಮಾಡುವುದೆ ಇರುವ ದಾರಿಯು || ೩ ||
-ಕ.ವೆಂ.ನಾ.
*************
ಪ್ರೇರಣೆ:
ನ ಕಿಲ್ಬಿಷಮತ್ರ ನಾಧಾರೋ ಅಸ್ತಿ ನ ಯನ್ಮಿತ್ರೈಃ ಸಮಮಮಾನ ಏತಿ |
ಅನೂನಂ ಪಾತ್ರಂ ನಿಹಿತಂ ನ ಏತತ್ಪಕ್ತಾರಂ ಪಕ್ವಃ ಪುನರಾ ವಿಶಾತಿ ||  (ಅಥರ್ವ.೧೨.೩.೪೮)
     ಅರ್ಥ:  ಈಶ್ವರೀಯ ನ್ಯಾಯವಿಧಾನದಲ್ಲಿ ಯಾವ ಒಡಕೂ, ದೋಷವೂ ಇಲ್ಲ. ಬೇರೆ ಯಾವ ಆಧಾರವೂ ಇಲ್ಲ. ಸ್ನೇಹಿತರ ಮಧ್ಯೆ ಸೇರಿಕೊಂಡು, ಕ್ಷೇಮವಾಗಿದ್ದೇನೆಂದುಕೊಂಡು ಮೋಕ್ಷಕ್ಕೆ ಸೇರುತ್ತೇನೆ ಎಂಬುದೂ ಕೂಡ ಇಲ್ಲ. ನಮ್ಮ ಈ ಒಡಕಿಲ್ಲದ ಅಂತಃಕರಣದ ಪಾತ್ರೆ ಗೂಢವಾಗಿ ಇಡಲ್ಪಟ್ಟಿದೆ. ಬೇಯಿಸಿದ ಅನ್ನ (ಕರ್ಮಫಲವಿಪಾಕ) ಅದನ್ನು ಪಾಕ ಮಾಡಿದವನನ್ನು ಪುನಃ ಮರಳಿ ಪ್ರವೇಶಿಸಿಯೇ ತೀರುತ್ತದೆ.

ಭಾನುವಾರ, ಮಾರ್ಚ್ 9, 2014

ದೇವನ ನೆನೆಯುವೆ

ಬೆಳಗಾಗಿ ನಾನೆದ್ದು ದೇವನ ನೆನೆಯುವೆ
ಪರಮಸಂಪದದೊಡೆಯ ತೇಜಸ್ವಿಯ |
ಭೂತಾಯಿಯಂತೆ ಮತ್ತೆ ಆಗಸದಂತೆ
ಎಲ್ಲೆಲ್ಲೂ ಇರುವವಗೆ ಶರಣೆನ್ನುವೆ || ೧ ||

ಬುದ್ಧಿಗೊಡೆಯ ಜಗದೀಶನ ನೆನೆಯುವೆ
ಕರ್ಮಫಲದಾತ ಜ್ಯೋತಿರ್ಮಯನ |
ಮಂಗಳಮಯ ಸಕಲ ಲೋಕಪ್ರಿಯ
ದೇವಾಧಿದೇವನಿಗೆ ಶರಣೆನ್ನುವೆ || ೨ ||

ನಿತ್ಯವಿಜಯಿಯಾದ ಒಡೆಯನ ನೆನೆಯುವೆ 
ಸಕಲ ಲೋಕಾಧಾರ ತೇಜಸ್ವಿಯ |
ಪಾತಕಿಕಂಟಕ ಸತ್‌ಪ್ರಕಾಶ ಈಶ
ಸರ್ವಜ್ಞ ದೇವನಿಗೆ ಶರಣೆನ್ನುವೆ || ೩ ||

ಮನೋಧಿನಾಯಕ ದೇವನ ಬೇಡುವೆ
ಕೊಡು ಮತಿಯ ಕೊಡು ಸಕಲ ಸಂಪತ್ತಿಯ |
ಮಾಡೆನ್ನ ಸತ್ಪ್ರಜೆಯ ಬೆಳೆಸುತಲಿ ಸಜ್ಜನರ
ಸತ್ಯಕ್ಕಾಧೀಶ ದೇವ ಶರಣೆನ್ನುವೆ || ೪ ||

ಪರಮ ಬೆಳಕಿನೊಡೆಯ ದೇವನ ಬೇಡುವೆ
ಕರುಣಿಸು ರಕ್ಷೆ ಮೇಣ್ ಸಕಲಸುಖವ |
ಸಜ್ಜನರ ಸುಮತಿಯ ಪಾಲಿಸುವ ಮನವ
ನೀಡೆಂದು ಬೇಡುತ ಶರಣೆನ್ನುವೆ || ೫ ||

ಜಗದಂತರಾತ್ಮನೆ ವಿದ್ವಜ್ಜನರ ಬೇಡುವೆ
ನಿಮ್ಮಂತೆ ಎಮಗೂ ಸಿಗಲಿ ಸದ್ಬುದ್ಧಿ |
ಸಕಲಜಗವು ನಿನ್ನ ಹಾಡಿ ಹೊಗಳುತಲಿರಲು
ದಾರಿ ತೋರೈ ಪ್ರಭುವೆ ಶರಣೆನ್ನುವೆ || ೬ ||
-ಕ.ವೆಂ.ನಾ.
************** 
ಆಧಾರ:
ಓಂ ಪ್ರಾತರಗ್ನಿಂ ಪ್ರಾತರಿಂದ್ರಂ ಹವಾಮಹೇ ಪ್ರಾತರ್ಮಿತ್ರಾವರುಣಾ ಪ್ರಾತರಶ್ವಿನಾ |
ಪ್ರಾತರ್ಭಗಂ ಪೂಷಣಂ ಬ್ರಹ್ಮಣಸ್ಪತಿಂ ಪ್ರಾತಃ ಸೋಮಮುತ ರುದ್ರಂ ಹುವೇಮ || (ಋಕ್.೭.೪೧.೧.)

ಓಂ ಪ್ರಾತರ್ಜಿತಂ ಭಗಮುಗ್ರಂ ಹುವೇಮ ವಯಂ ಪುತ್ರಮದಿತೇರ್ಯೋ ವಿಧರ್ತಾಃ |
ಆಧ್ರಶ್ಚಿದ್ ಯಂ ಮನ್ಯಮಾನಸ್ತುರಶ್ಚಿದ್ ರಾಜಾ ಚಿದ್ ಯಂ ಭಗಂ ಭಕ್ಷೀತ್ಯಾಹ || (ಋಕ್.೭.೪೧.೨.)

ಓಂ ಭಗ ಪ್ರಣತೇರ್ಭಗ ಸತ್ಯರಾಧೋ ಭಗೇಮಾಂ ಧಿಯಮುದವಾ ದದನ್ನಃ |
ಭಗ ಪ್ರ ಣೋ ಜನಯ ಗೋಭರಶ್ವೈರ್ಭಗ ಪ್ರ ನೃಭಿರ್ನೃವಂತಃ ಸ್ಯಾಮ || (ಋಕ್.೭.೪೧.೩.)

ಓಂ ಉತೇದಾನೀಂ ಭಗವಂತಃ ಸ್ಯಾಮೋತ ಪ್ರಪಿತ್ವ ಉತ ಮಧ್ಯೇ ಅಹ್ನಾಂ |
ಉತೋದಿತಾ ಮಘವನ್ ತ್ಸೂರ್ಯಸ್ಯ ವಯಂ ದೇವಾನಾಂ ಸುಮತೌ ಸ್ಯಾಮ || (ಋಕ್.೭.೪೧.೪.)

ಓಂ ಭಗ ಏವ ಭಗವಾನ್ ಅಸ್ತು ದೇವಸ್ತೇನ ವಯಂ ಭಗವಂತಃ ಸ್ಯಾಮ | 
ತಂ ತ್ವಾ ಭಗ ಸರ್ವ ಇಜ್ಜೋಹವೀ ತಿ ಸ ನೋ ಭಗ ಪುರಏತಾ ಭವೇಹಃ || (ಋಕ್.೭.೪೧.೫.) 
ಚಿತ್ರ: ಅಂತರ್ಜಾಲದಿಂದ ಹೆಕ್ಕಿದ ರಾಯಲ್ಟಿ ಮುಕ್ತ ಚಿತ್ರ (dreamstine.com)

ಗುರುವಾರ, ಏಪ್ರಿಲ್ 12, 2012

ಪುಣ್ಯವೆನ್ನಿರಿ


ಕಾಣಿರೋ ಕಾಣಿರೋ ನೀವು ಕಾಣಿರೋ
ನರಜನ್ಮ ಸಿಕ್ಕಿಹುದು ಪುಣ್ಯವೆನ್ನಿರೋ |
ಪಶು ಪಕ್ಷಿ ಕ್ರಿಮಿ ಕೀಟ ಅಲ್ಲ ಕಾಣಿರೋ
ಯೋಚಿಸುವ ಶಕ್ತಿಯಿದೆ ಧನ್ಯರೆನ್ನಿರೋ ||


ನೂರಾರು ಜನ್ಮಗಳ ಫಲವು ತಿಳಿಯಿರೋ
ಏರುವುದು ಕಷ್ಟವಿದೆ ಜಾರಬೇಡಿರೋ |
ಜ್ಞಾನದ ಬೆಳಕಿನಲ್ಲಿ ಸತ್ಯ ಅರಿಯಿರೋ
ಅಟ್ಟಡುಗೆಯುಣಬೇಕು ವಿಧಿಯಿಲ್ಲವೋ ||


ಜ್ಞಾನಿಗಳ ಅರಿತವರ ನುಡಿಯ ಕೇಳಿರೋ
ಅನುಭವವೇ ದೊಡ್ಡ ಗುರು ನಿಜವ ಕಾಣಿರೋ |
ಸಂಪ್ರದಾಯದುರುಳಲ್ಲಿ ಸಿಕ್ಕಬೇಡಿರೋ
ಅರ್ಥವರಿತು ಪಾಲಿಸುವ ಮನಸ ಮಾಡಿರೋ ||


ದೇವನಿರದ ಜಾಗವಿಲ್ಲ ಅವಗೆ ನಮಿಸಿರೋ
ಹೃದಯವೇ ಅವನಿರುವ ಮೂಲಸ್ಥಾನವೋ |
ಮಠ ಮಂದಿರ ಚರ್ಚುಗಳ ಹಂಗಿಲ್ಲವೋ
ಜ್ಞಾನಜ್ಯೋತಿ ಬೆಳಗುವುದೆ ಪೂಜೆ ಕಾಣಿರೋ ||


ಹೊಗಳಿಕೆಗೆ ಉಬ್ಬನು ತೆಗಳಿಕೆಗೆ ಕುಗ್ಗನೋ
ಸ್ತುತಿ ನಿಂದೆ ಎಲ್ಲಾ ಒಂದೆ ನಿರ್ವಿಕಾರನವನೋ |
ಜಾತಿ ಭೇದ ಅವಗಿಲ್ಲ ನಿಮಗದು ಮತ್ತೇತಕೋ
ವಿಶ್ವಪ್ರಿಯನ ಮಕ್ಕಳಾಗಿ ಪ್ರಿಯರಾಗಿ ಬಾಳಿರೋ ||


ಹೀನ ದೀನ ಆರ್ತರ ಕಣ್ಣೀರು ಒರೆಸಿರೋ
ಇದಕಿಂತ ಪರಮ ಪೂಜೆ ಬೇರಿಲ್ಲ ತಿಳಿಯಿರೋ |
ಬರಿಗೈಲಿ ಬಂದವರು ಏನ ಹೊತ್ತೊಯ್ಯುವಿರೋ
ಇರುವುದೇ ಮೂರು ದಿನ ನಗುನಗುತಾ ಬಾಳಿರೋ ||
***********
-ಕ.ವೆಂ.ನಾಗರಾಜ್.

ಗುರುವಾರ, ಜುಲೈ 14, 2011

ಅರಿವು



ನಮ್ಮವರೆಂಬರು ನಮ್ಮವರಲ್ಲ; ಮೋಹಕೆ ಸಿಲುಕಿ ಬಳಲಿದೆನಲ್ಲ |
ದೇವ ನಿನ್ನನು ನೆನೆಯಲೆ ಇಲ್ಲ; ಹುಟ್ಟಿನ ಮಹತಿ ತಿಳಿಯಲೆ ಇಲ್ಲ ||ಪ||


ಕಂಡದ್ದೆಲ್ಲ ಬಯಸಿದೆನಲ್ಲ: ಸಿಕ್ಕದೆ ಇರಲು ಶಪಿಸಿದೆನಲ್ಲ |
ಇಲ್ಲದ ಬಯಸಿ ಕೊರಗಿದೆನಲ್ಲ; ಇದ್ದುದ ಬಿಟ್ಟು ಕೆಟ್ಟೆನಲ್ಲ ||೧||


ಚಪಲತೆ ಕಣ್ಣನು ಮುಚ್ಚಿತಲ್ಲ; ನಿಜ ಕಾಣದಾಯಿತಲ್ಲ |
ಚಂಚಲ ಬುದ್ಧಿ ಆಡಿದ ಆಟಕೆ ಎಡವಿ ಬಿದ್ದೆನಲ್ಲಾ ||೨||


ಸಜ್ಜನ ಸಂಗವ ಮಾಡಲಿಲ್ಲ; ಸದ್ಗತಿ ಸಿಗಲಿಲ್ಲ |
ಕೋಪವು ಮತಿಯ ತಿಂದಿತಲ್ಲ; ಮನಸೇ ಸರಿಯಿಲ್ಲ ||೩||


ಮಿಗಿಲಾರೆಂದು ಬೀಗಿದೆನಲ್ಲ; ನಗೆಪಾಟಲಾಯಿತಲ್ಲ |
ರಜೋ ತಮಗಳ ಆರ್ಭಟದಲ್ಲಿ ಸತ್ವ ಸತ್ತಿತಲ್ಲಾ ||೪||


ನಾನು ಎಂಬುದು ನಿಜವಲ್ಲ; ನಾನೇ ಎಂಬುದು ತರವಲ್ಲ |
ನಿನ್ನನು ಬಿಟ್ಟು ನಾನೆಲ್ಲೆಂಬುದ ಅರಿಯಲಿಲ್ಲವಲ್ಲಾ ||೫||
********************
-ಕ.ವೆಂ.ನಾಗರಾಜ್.

ಸೋಮವಾರ, ಮೇ 16, 2011

ಸೋಲದಿರು

ದೂಷಿಸದಿರು ಮನವೆ ಪರರು ಕಾರಣರಲ್ಲ
ನಿನ್ನೆಣಿಕೆ ತಪ್ಪಾಗಿ ಕಂಡಿರುವೆ ನೋವ |
ವಿಧಿಯು ಕಾರಣವಲ್ಲ ಹಣೆಬರಹ ಮೊದಲಲ್ಲ
ಕೊರಗಿದರೆ ಫಲವಿಲ್ಲ ದಣಿಯದಿರು ಮನವೆ ||


ಉಗ್ರವಾಗಿಹ ಮನವೆ ತಾಳು ತಾಳೆಲೆ ನೀನು
ವಿವೇಕ ನಲುಗೀತು ಕೆರಳದಿರು ತಾಳು |
ವ್ಯಗ್ರತೆಯ ನಿಗ್ರಹಿಸಿ ಸಮಚಿತ್ತದಲಿ ನಡೆಯೆ
ಸೋಲಿನ ಅನುಭವವೆ ಗೆಲುವಿಗಾಸರೆಯು ||


ಮೂಢನಂತಾಡದಿರು ಮತಿಗೆಟ್ಟು ನರಳದಿರು
ಮೈ ಕೊಡವಿ ಮೇಲೆದ್ದು ಅಡಿಯನಿಡು ಧೀರ |
ಸೋಲದಿರೆಲೆ ಜೀವ ಕಾಯ್ವ ನಮ್ಮನು ದೇವ
ಛಲಬಿಡದೆ ಮುನ್ನಡೆದು ಉಳಿಸು ಸ್ವಂತಿಕೆಯ ||


ಲೋಕದೊಪ್ಪಿಗೆ ಬೇಕೆ ಪರರ ಮನ್ನಣೆಯೇಕೆ
ದಾರಿ ಸರಿಯಿರುವಾಗ ಅಳುಕು ಅಂಜಿಕೆಯೇಕೆ
ಒಳಮನವು ಒಪ್ಪಿರಲು ಚಂಚಲತೆ ಇನ್ನೇಕೆ
ಪಯಣಿಗನೆ ನೀ ಸಾಗು ದಾರಿ ನಿಚ್ಛಳವಿರಲು ||
***************
-ಕ.ವೆಂ.ನಾಗರಾಜ್.

ಗುರುವಾರ, ಅಕ್ಟೋಬರ್ 28, 2010

ಮೊರೆ






ಸರಿಸಿಬಿಡು ಮೂಢಮನ ಆವರಿತ ಪೊರೆಯಾ|
ತೆರೆದುಬಿಡು ಕಿಟಕಿಯನು ಒಳಬರಲಿ ಬೆಳಕು||
ರೂಢಿರಾಡಿಯಲಿ ಸಿಲುಕಿ ತೊಳಲಾಡುತಿಹೆ ನಾನು|
ಕರುಣೆದೋರೈ ದೇವ ಸತ್ಪಥದಿ ಮುನ್ನಡೆಸು||

ಸರ್ವರೊಳ್ಳಿತ ಬಯಸಿ ಸ್ವಂತಹಿತ ಕಡೆಗಿಟ್ಟೆ|
ಸರ್ವದೂಷಿತನಾಗಿ ನೆಲೆಗಾಣದಿದೆ ಮನವು||
ಅರಿಗಳಾರರ ಬಂದಿ ದಿಕ್ಕೆಟ್ಟು ಕುಳಿತಿರುವೆ|
ಸದ್ಗುರುವೆ ಕೃಪೆದೋರಿ ಹಿಡಿದೆತ್ತಿ ಸಂತಯಿಸು||


ಪಂಡಿತನು ನಾನಲ್ಲ ಪಾಂಡಿತ್ಯವೆನಗಿಲ್ಲ|
ಒಳಮನದ ನುಡಿಯೊಂದೆ ಆಸರೆಯು ನನಗೆಲ್ಲ||
ಹುಲುಮನುಜ ನಾನಾಗಿ ಭಾವಬಂಧಿಯು ನಾನು|
ಸಮಚಿತ್ತ ಕರುಣಿಸೈ ನೆಮ್ಮದಿಯ ನೀನೀಡು||
**********************
-ಕವಿನಾಗರಾಜ್.

ಶನಿವಾರ, ಅಕ್ಟೋಬರ್ 2, 2010

ಆಹಾ, ನಾವ್ ಆಳುವವರು!

ಆಹಾ, ನಾವ್ ಆಳುವವರು
ಓಹೋ ನಾವ್ ಅಳಿಸುವವರು ||ಪ||


ಕುರ್ಚಿಯ ಕಾಲ್ಗಳನೊತ್ತುವೆವು
ತಡೆದರೆ ಕೈಯನೆ ಕಡಿಯುವೆವು|

ದೇಶವ ಪೊರೆಯುವ ಹಿರಿಗಣರು
ಖಜಾನೆ ಕೊರೆಯುವ ಹೆಗ್ಗಣರು|


ಜಾತ್ಯಾತೀತರು ಎನ್ನುವೆವು
ಜಾತೀಯತೆಯ ಬೆಳೆಸುವೆವು|


ಗಾಂಧಿಯ ನಾಮ ಜಪಿಸುವೆವು
ಬ್ರಾಂದಿಯ ಕುಡಿದು ಮಲಗುವೆವು|


ಬಿದ್ದರೆ ಪಾದವ ಹಿಡಿಯುವೆವು
ಎದ್ದರೆ ಎದೆಗೆ ಒದೆಯುವೆವು|


ಪಾದಯಾತ್ರೆಯನು ಮಾಡುವೆವು
ಕುರ್ಚಿಯ ಕನಸನು ಕಾಣುವೆವು|


ಗೆದ್ದವರನೆ ನಾವ್ ಕೊಳ್ಳುವೆವು
ಸ್ವಂತದ ಸೇವೆಯ ಮಾಡುವೆವು|

ಸಮಾಜ ಸೇವಕರೆನ್ನುವೆವು
ದೇಶವ ಹರಿದು ತಿನ್ನುವೆವು|
*********
-ಕವಿನಾಗರಾಜ್.

ಗುರುವಾರ, ಆಗಸ್ಟ್ 12, 2010

ಸತ್ಯ

ಕಷ್ಟವೇನಲ್ಲ,
ಹುಡುಕಿದರೆ ಸಿಕ್ಕೀತು
ಬದುಕಲಗತ್ಯದ ಪ್ರೀತಿ!

ಕಠಿಣಾತಿ ಕಷ್ಟ,
ಹುಡುಕಿದರೂ ಸಿಕ್ಕದು
ಎಲ್ಲಿಹುದದು ಸತ್ಯ?

ಅಯ್ಯೋ ಮರುಳೆ,
ಪಂಡಿತೋತ್ತಮರೆಂದರು
ದೇವರೇ ಸತ್ಯ!

ದೇವರು? ಸತ್ಯ?
ಎಲ್ಲಿಹುದದು ಸತ್ಯ?
ಇನ್ನು ದೇವರು?

ಸಿಕ್ಕರೂ ಸತ್ಯ,
ಮುಖವಾಡದಡಗಿಹುದು ಸತ್ಯ,
ಅರ್ಥವಾಗದ ಸತ್ಯ!

ಅರ್ಥೈಸಿದರೆ ಸತ್ಯ,
ಪಥ್ಯವಾದರೆ ಸತ್ಯ,
ದೇವನೊಲಿವ, ಸತ್ಯ!
****
-ಕವಿನಾಗರಾಜ್.

ಗುರುವಾರ, ಆಗಸ್ಟ್ 5, 2010

ಮಕ್ಕಳಿಗೆ ಕಿವಿಮಾತು


ಬಾಳಸಂಜೆಯಲಿ ನಿಂತಿಹೆನು ನಾನಿಂದು
ಮನಸಿಟ್ಟು ಕೇಳಿರಿ ಹೇಳುವೆನು ಮಾತೊಂದು

ಕೇಳುವುದು ಬಿಡುವುದು ನಿಮಗೆ ಬಿಟ್ಟಿದ್ದು
ಅಂತರಾಳದ ನುಡಿಗಳಿವು ಹೃದಯದಲ್ಲಿದ್ದದ್ದು

ಗೊತ್ತಿಹುದು ನನಗೆ ರುಚಿಸಲಾರದು ನಿಮಗೆ
ಸಂಬಂಧ ಉಳಿಸುವ ಕಳಕಳಿಯ ಮಾತು

ಗೊತ್ತಿಹುದು ನನಗೆ ಪ್ರಿಯವಹುದು ನಿಮಗೆ
ಸಂಬಂಧ ಕೆಡಿಸುವ ಬಣ್ಣ ಬಣ್ಣದ ಮಾತು

ಹುಳುಕು ಹುಡುಕುವರೆಲ್ಲೆಲ್ಲು ವಿಷವನೆ ಕಕ್ಕುವರು
ಒಳಿತು ಕಾಣುವರೆಲ್ಲೆಲ್ಲು ಅಮೃತವ ಸುರಿಸುವರು

ದಾರಿಯದು ಸರಿಯಿರಲಿ ಅನೃತವನಾಡದಿರಿ
ತಪ್ಪೊಪ್ಪಿ ಸರಿನಡೆವ ಮನ ನಿಮಗೆ ಇರಲಿ

ಗೌರವಿಸಿ ಹಿರಿಯರ ಕಟುಮಾತನಾಡದಿರಿ
ಅಸಹಾಯಕರ ಶಾಪ ತಂದೀತು ಪರಿತಾಪ

ದೇವರನು ಅರಸದಿರಿ ಗುಡಿಗೋಪುರಗಳಲ್ಲಿ
ದೇವನಿಹನಿಲ್ಲಿ ನಮ್ಮ ಹೃದಯಮಂದಿರದಲ್ಲಿ

ಇಟ್ಟಿಗೆ ಕಲ್ಲುಗಳ ಜೋಡಿಸಲು ಕಟ್ಟಡವು
ಹೃದಯಗಳ ಜೋಡಿಸಿರಿ ಆಗುವುದು ಮನೆಯು

ಮಕ್ಕಳೇ ನಾ ನಂಬಿದಾ ತತ್ವ ಪಾಲಿಸುವಿರಾ?
ಬಾಳ ಪಯಣದ ಕೊನೆಗದುವೆನಗೆ ಸಂಸ್ಕಾರ
-ಕ.ವೆಂ.ನಾಗರಾಜ್.

ಬುಧವಾರ, ಜುಲೈ 28, 2010

ಸ್ವಾರ್ಥ



         
ಸ್ವಾರ್ಥದ ಭೂತ ದ್ವೇಷದ ಕತ್ತಿ ಸೆಳೆದಿತ್ತು
ಕಂಡ ಕಂಡವರ ಗುಂಡಿಗೆಯ ಬಗೆದಿತ್ತು

ಅಪ್ಪ ಅಮ್ಮದಿರಿಲ್ಲ ಅಣ್ಣ ತಮ್ಮದಿರಿಲ್ಲ
ಗಂಡ ಹೆಂಡತಿಯಿಲ್ಲ ಮಕ್ಕಳು ಮರಿಯಿಲ್ಲ

ಯಾರನೂ ಉಳಿಸಿಲ್ಲ, ಬೇಡಿದರೂ ಬಿಡಲಿಲ್ಲ
ನಗುವು ಬಂದೀತೆಂದು ಹಲ್ಲು ಮುರಿದಿತ್ತು

ಓಡಿ ಹೋದಾರೆಂದು ಕಾಲ ತುಂಡರಿಸಿತ್ತು
ಬೇಡವೆಂದವರ ಕೈಯ ಕಡಿದಿತ್ತು

ಕಣ್ಣೀರು ಒರೆಸುವರ ಕಣ್ಣ ಬಗೆದಿತ್ತು
ಕೈಚೆಲ್ಲಿ ಕುಳಿತವರ ಬೆದರಿ ಬೆಂಡಾದವರ
ಗಂಟಲನು ಸೀಳಿ ಗಹಗಹಿಸಿ ನಕ್ಕಿತ್ತು

ನೊಂದು ಬೆಂದ ಅತೃಪ್ತ ಆತ್ಮಗಳು
ತಿರುಗಿ ಬೀಳುವ ವೇಳೆ ಕಾಲ ಮಿಂಚಿತ್ತು
                             -ಕ.ವೆಂ.ನಾಗರಾಜ್

[ಚಿತ್ರ: ಅಂತರ್ಜಾಲದಿಂದ ಹೆಕ್ಕಿದ್ದು.]

ಭಾನುವಾರ, ಜುಲೈ 25, 2010

ಏನಂತೆ? ? . . .! !

ಏನಂತೆ? ಸೋತರೇನಂತೆ?
ಸೋಲೆಂಬುದೇನೆಂದು ತಿಳಿಯಿತಂತೆ!
ಗೆಲುವಿನ ದಾರಿಯದು ಕಂಡಿತಂತೆ!!

ಏನಂತೆ? ಬಿದ್ದರೇನಂತೆ?
ನೋವೆಂಬುದೇನೆಂದು ತಿಳಿಯಿತಂತೆ!
ನೋಡಿ ನಡೆಯಲು ಕಲಿತೆನಂತೆ!!

ಏನಂತೆ? ಹಸಿವಾದರೇನಂತೆ?
ದುಡಿದು ಉಣ್ಣಲು ಮಾರ್ಗವಂತೆ!
ಹಳಸಿದ ಅನ್ನವೂ ರುಚಿಯಂತೆ!!

ಏನಂತೆ? ದುಃಖವಾದರೇನಂತೆ?
ಸಂತೋಷದ ದಾರಿ ಸಿಕ್ಕಿತಂತೆ!
ಸುಖವೆಂಬುದೊಳಗೇ ಇದೆಯಂತೆ!!

ಏನಂತೆ? ತಪ್ಪಾದರೇನಂತೆ?
ನಡೆ ತಿದ್ದಿ ಸಾಗುವ ಮನಸಂತೆ!
ತಲೆ ಎತ್ತಿ ನಡೆಯುವ ಕನಸಂತೆ!

ಏನಂತೆ? ನಿಂದಿಸಿದರೇನಂತೆ?
ನಿಂದಕರ ಬಾಯಿ ಹೊಲಸಂತೆ!
ನಾನಾರೆಂದು ನನಗೆ ತಿಳಿಯಿತಂತೆ!!

ಏನಂತೆ? ಸೂರಿಲ್ಲದಿರೇನಂತೆ?
ಲೋಕವೆ ನನ್ನ ಮನೆಯಂತೆ!
ಬಹು ದೊಡ್ಡ ಮನೆಯೇ ನನ್ನದಂತೆ!!

ಏನಂತೆ? ದಿಕ್ಕಿಲ್ಲದಿರೇನಂತೆ?
ಜನರೆಲ್ಲ ನನ್ನ ಬಂಧುಗಳಂತೆ!
ಬಲು ದೊಡ್ಡ ಸಂಸಾರ ನನ್ನದಂತೆ!!

? ? ! !