ವೇದಜೀವನ ಬ್ಲಾಗಿಗೆ ಸ್ವಾಗತ. ಸುವಿಚಾರಗಳು ಎಲ್ಲಿಂದಲಾದರೂ ಬರಲಿ, ಯಾರಿಂದಲಾದರೂ ಬರಲಿ, ಪೂರ್ವಾಗ್ರಹ ಪೀಡಿತರಾಗದೆ ಸ್ವೀಕರಿಸೋಣ.
ಚುಟುಕು-ಗುಟುಕು ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ
ಚುಟುಕು-ಗುಟುಕು ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ

ಭಾನುವಾರ, ಜುಲೈ 17, 2011

ಉತ್ತರ ಸಿಕ್ಕಿತು!

     ಅವನ ಪಾಡಿಗೆ ಅವನು ಸುಮ್ಮನೆ ಹೋಗುತ್ತಿದ್ದಾಗ ಎದುರಿಗೆ ಪ್ರಶ್ನೆಯೊಂದು ಅಡ್ಡ ಬಂದಿತು. ಅದನ್ನು ನಿರ್ಲಕ್ಷಿಸಿ ಪಕ್ಕಕ್ಕೆ ಸರಿಸಿ ಹೋಗಲು ಪ್ರಯತ್ನಿಸಿದರೆ ಅದೂ ಪಕ್ಕಕ್ಕೆ ಬಂದು ಉತ್ತರ ಹೇಳಲು ಆಗ್ರಹಿಸಿತು. ಅದನ್ನು ದೂಡಿದಷ್ಟೂ ದೊಡ್ಡದಾಗಿ ಬೆಳೆಯುತ್ತಾ ಹೋಗುತ್ತಿತ್ತು. ಉತ್ತರ ಹೇಳದೆ ಬಿಡುಗಡೆಯಿಲ್ಲವೆಂದು ಅವನಿಗೆ ಮನದಟ್ಟಾಯಿತು. ಅವನಿಗೆ ಉತ್ತರ ಗೊತ್ತಿರಲಿಲ್ಲ. ಅವನು ಉತ್ತರ ಹುಡುಕಲು ಪ್ರಾರಂಭಿಸಿದ. ಪ್ರಶ್ನೆಯೂ ಅವನನ್ನು ನೆರಳಿನಂತೆ ಹಿಂಬಾಲಿಸುತ್ತಲೇ ಇತ್ತು. ಉತ್ತರ ಕಂಡು ಹಿಡಿಯಲು ಅವನು ಹಲವಾರು ವರ್ಷಗಳ ಕಾಲ ಊರೂರು ಅಲೆದ, ಕಾಡು-ಮೇಡುಗಳನ್ನು ಸುತ್ತಿದ. ಎಲ್ಲರನ್ನೂ ವಿಚಾರಿಸಿದ. ಉತ್ತರ ಸಿಗುತ್ತಿರಲಿಲ್ಲ. ಚರ್ಚು, ಮಸೀದಿ, ಮಠ, ಮಂದಿರಗಳಿಗೆ ಭೇಟಿ ಕೊಟ್ಟ. ಉಹುಂ, ಉತ್ತರ ಸಿಗಲಿಲ್ಲ. ಮೌಲ್ವಿ, ಮುಲ್ಲಾ, ಪಾದ್ರಿ, ಅರ್ಚಕರು, ವಿದ್ವಾಂಸರುಗಳು, ಗುರುಗಳು, ಸಾಧು, ಸಂತರನ್ನು ಕಂಡು ಪ್ರಾರ್ಥಿಸಿದ. ಒಬ್ಬೊಬ್ಬರು ಒಂದೊಂದು ರೀತಿ ಹೇಳಿದರು. ಕೆಲವರು ತಾವು ಹೇಳಿದ ದಾರಿಯಲ್ಲಿ ಹೋದರೆ ಮಾತ್ರ ಉತ್ತರ ಸಿಗುತ್ತದೆ, ಇಲ್ಲದಿದ್ದರೆ ಸಿಗಲು ಸಾಧ್ಯವೇ ಇಲ್ಲ ಎಂದರು. ಒಬ್ಬೊಬ್ಬರು ಒಂದೊಂದು ರೀತಿ ಹೇಳುತ್ತಿದ್ದರು. ಅವರು ಹೇಳುವುದನ್ನು ಕೇಳುತ್ತಿದ್ದರೆ ಅದು ಸರಿಯಿರಬಹುದು ಎನ್ನಿಸುತ್ತಿತ್ತು. ಇನ್ನೊಬ್ಬರು ಹೇಳುವುದನ್ನು ಕೇಳಿದಾಗ ಇದೂ ಸರಿಯಿರಬಹುದು ಎನ್ನಿಸುತ್ತಿತ್ತು, ಆದರೆ ಸ್ಪಷ್ಟ ಉತ್ತರ ಸಿಗದೆ ಗೊಂದಲವಾಗಿಬಿಡುತ್ತಿತ್ತು. ಪ್ರಶ್ನೆ ಅವನನ್ನು ನೋಡಿ ಗಹಗಹಿಸಿ ನಗುತ್ತಿತ್ತು. ಕೊನೆಗೆ ಸುಸ್ತಾಗಿ ಒಂದೆಡೆ ಕುಳಿತು ಕಣ್ಣು ಮುಚ್ಚಿ ಯಾವ ಉತ್ತರ ಸರಿ ಎಂದು ಆಲೋಚಿಸತೊಡಗಿದ. ಪ್ರಶ್ನೆಯೂ ಆದಿಶೇಷನಂತೆ ಅವನ ಬೆನ್ನ ಹಿಂದೆಯೇ ಕುಳಿತಿತ್ತು. ಸಿಕ್ಕ ಎಲ್ಲಾ ಉತ್ತರಗಳನ್ನು ಮನಸ್ಸಿನಲ್ಲೇ ವಿಮರ್ಶಿಸತೊಡಗಿದ, ಅಳೆದು ತೂಗಿ ನೋಡತೊಡಗಿದ. ಹೀಗೆ ಆಲೋಚಿಸುತ್ತಾ, ಆಲೋಚಿಸುತ್ತಾ ಅವನು ಒಳಗೆ, ಒಳಗೆ, ತನ್ನ ಒಳಗೆ, ತನ್ನ ಅಂತರಂಗದ ಒಳಗೇ ಸಾಗತೊಡಗಿದ. ಹಾಗೆಯೇ ಸಾಗುತ್ತಿದ್ದಾಗ ಅವನಿಗೆ ಕ್ಷೀಣ ಬೆಳಕೊಂದು ಕಂಡಿತು. ಅದನ್ನು ಅನುಸರಿಸಿ ಮುಂದೆ ಮುಂದೆ ಹೋಗತೊಡಗಿದ. ಕ್ರಮೇಣ ಬೆಳಕು ದೊಡ್ಡದಾಗುತ್ತಾ ಹೋಯಿತು. ಕೊನೆಗೊಮ್ಮೆ ಉಜ್ವಲ ಪ್ರಕಾಶ ಕಂಡಿತು. ಅವನಿಗೆ ತಾನು ಯಾರು ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿಬಿಟ್ಟಿತ್ತು. ಅದುವರೆಗೆ ಉತ್ತರ ಇದ್ದ ಸ್ಥಳ ಬಿಟ್ಟು ಆತ ಬೇರೆಲ್ಲಾ ಕಡೆ ಹುಡುಕಿದ್ದ. ಉತ್ತರ ಸಿಕ್ಕಿದ ಸಂತೋಷದಿಂದ ಪ್ರಶ್ನೆಗೆ ಉತ್ತರ ಹೇಳಲು ಹೊರಪ್ರಪಂಚಕ್ಕೆ ಬಂದರೆ, ಅಲ್ಲಿ ಪ್ರಶ್ನೆಯೇ ಕಾಣುತ್ತಿರಲಿಲ್ಲ. ಅದು ಕಣ್ಣಿಗೆ ಕಾಣದಷ್ಟು ಸಣ್ಣದಾಗಿ ಉತ್ತರದೊಳಗೆ ಐಕ್ಯವಾಗಿಬಿಟ್ಟಿತ್ತು!
(ಚಿತ್ರಕೃಪೆ: ಅಂತರ್ಜಾಲ).
*****************
-ಕ.ವೆಂ.ನಾಗರಾಜ್.

ಗುರುವಾರ, ಜೂನ್ 30, 2011

ನೂತನ ಕೊಠಡಿ ಪ್ರವೇಶ(?)


      'ವಿಪ್ರವಾಹಿನಿ' ನಾಗರಾಜರ ಮನೆಯಲ್ಲಿ ಪ್ರತಿತಿಂಗಳ ಕೊನೆಯ ಭಾನುವಾರ ವೇದಪಾಠ ನಡೆಸಲಾಗುತ್ತಿತ್ತು. ಬೇಲೂರಿನ ಶ್ರೀ ವಿಶ್ವನಾಥಶರ್ಮರವರು ಪಾಠ ಹೇಳಿಕೊಡುತ್ತಿದ್ದರು. ತಿಂಗಳಿಗೆ ಒಮ್ಮೆ ಮಾತ್ರ ನಡೆದರೆ ಸಾಕಾಗಲಾರದು, ವಾರಕ್ಕೊಮ್ಮೆಯಾದರೂ ನಡೆದರೆ ಒಳ್ಳೆಯದೆಂಬ ಸಲಹೆ ಮೂಡಿಬಂದಿತು. ಮುಂದಿನ ಭಾನುವಾರ ನಮ್ಮ ಮನೆಯಲ್ಲಿ ನಡೆಸಬಹುದೆಂಬ ನನ್ನ ಕೋರಿಕೆಯನ್ನು ಶ್ರೀ ವಿಶ್ವನಾಥಶರ್ಮ ಮತ್ತು ಅಭ್ಯಾಸಿಗಳು ಒಪ್ಪಿದರು.
      ಸರ್ಕಾರಿ ಸೇವೆಯಿಂದ ಸ್ವ ಇಚ್ಛಾ ನಿವೃತ್ತಿಯಾದ ನಂತರ ಹಾಸನದ ಸ್ವಂತದ ಮನೆಯ ಮೇಲೆ ಒಂದು ಕೊಠಡಿಯನ್ನು ಕಟ್ಟಿಸಿದ್ದೆ. ಕೊಠಡಿ ಪೂರ್ಣವಾದ ನಂತರ ಆ ನಿಮಿತ್ತ ಪ್ರತ್ಯೇಕ ಕಾರ್ಯಕ್ರಮ - ಗೃಹಪ್ರವೇಶ, ಸತ್ಯನಾರಾಯಣಪೂಜೆ, ಇತ್ಯಾದಿ - ಮಾಡಿರಲಿಲ್ಲ, ಮಾಡುವ ಇರಾದೆಯೂ ಇರಲಿಲ್ಲ. ವೇದಪಾಠವನ್ನು ಆ ಕೊಠಡಿಯಲ್ಲೇ ನಡೆಸಲು ಮತ್ತು ಆ ಸಂದರ್ಭದಲ್ಲಿ ಪ್ರಾರಂಭದಲ್ಲಿ ಅಗ್ನಿಹೋತ್ರ ಮಾಡಲು ಮತ್ತು ಅದನ್ನೇ ಕೊಠಡಿಯ ಗೃಹಪ್ರವೇಶ ಎಂದು ಭಾವಿಸಲು ನಿರ್ಧರಿಸಿದೆವು. ಶರ್ಮರಿಗೆ ದೂರವಾಣಿ ಮೂಲಕ ಪಾಠಾಭ್ಯಾಸದ ಮುನ್ನ ಅಗ್ನಿಹೋತ್ರ ಕಾರ್ಯ ನಡೆಸಲು ಕೇಳಿದಾಗ ಅವರ ಒಪ್ಪಿಗೆಯೂ ಸಿಕ್ಕಿತು. ಆ ಭಾನುವಾರ ಬೆಳಿಗ್ಗೆ ೧೦-೩೦ರ ವೇಳೆಗೆ ಹರಿಹರಪುರ ಶ್ರೀಧರ ತಮ್ಮ ಪತ್ನಿಯೊಂದಿಗೆ ಬಂದರು. ವಿಪ್ರವಾಹಿನಿ ನಾಗರಾಜ್-ಗಿರಿಜಾಂಬಾರವರೂ ಆಗಮಿಸಿದರು. ಶ್ರೀಧರರು ತಮ್ಮೊಂದಿಗೆ ಅಗ್ನಿಹೋತ್ರ ಮಾಡಲು ಹೋಮಕುಂಡ, ಸಮಿತ್ತು ಮತ್ತು ಅಗತ್ಯ ಸಾಮಗ್ರಿ ತಂದಿದ್ದರು. 'ಹಾಸನವಾಣಿ' ಸಂಪಾದಕಿ ಶ್ರೀಮತಿ ಲೀಲಾವತಿ, ನಿವೃತ್ತ ಕಾರ್ಯಪಾಲಕ ಇಂಜನಿಯರ್ ಜಯರಾಮ್ ಮತ್ತು ಕೆಲವರು ವೇಧಾಭ್ಯಾಸಿಗಳೂ ಹಾಜರಾದರು. ಪಾಠದ ಮುನ್ನ ಅಗ್ನಿಹೋತ್ರ ನಡೆಯಿತು. ಕೊಠಡಿಯ ವಿದ್ಯುಕ್ತ ಪ್ರವೇಶ ಆಯಿತು ಅಂದುಕೊಂಡೆವು. ಕಾರ್ಯಕ್ರಮದ ನಂತರ ಮನೆಯಲ್ಲಿ ಎಲ್ಲರಿಗೂ ಊಟವಾಯಿತು. ಅಂದಹಾಗೆ ಕಾರ್ಯಕ್ರಮ ನಡೆದ ಭಾನುವಾರ ಈ ವರ್ಷದ ಯುಗಾದಿಯ ಹಿಂದಿನ ದಿನವಾದ ೦೩-೦೪-೨೦೧೧ರ ಅಮಾವಾಸ್ಯೆಯಂದು. ಅಂದು ತೆಗೆದಿದ್ದ ಕೆಲವು ಫೋಟೋಗಳು ಇಲ್ಲಿವೆ.