ವೇದಜೀವನ ಬ್ಲಾಗಿಗೆ ಸ್ವಾಗತ. ಸುವಿಚಾರಗಳು ಎಲ್ಲಿಂದಲಾದರೂ ಬರಲಿ, ಯಾರಿಂದಲಾದರೂ ಬರಲಿ, ಪೂರ್ವಾಗ್ರಹ ಪೀಡಿತರಾಗದೆ ಸ್ವೀಕರಿಸೋಣ.
ಪರಿಚಯ ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ
ಪರಿಚಯ ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ

ಭಾನುವಾರ, ಆಗಸ್ಟ್ 13, 2017

ಪ್ರಜ್ಞಾಚಕ್ಷು ವಿರಜಾನಂದರು


      ಮಹರ್ಷಿ ದಯಾನಂದ ಸರಸ್ವತಿಯವರನ್ನು ಜಗತ್ತಿಗೆ ಪರಿಚಯಿಸಿದ ವಿರಜಾನಂದರು ಹುಟ್ಟು ಕುರುಡರು. ಪಂಜಾಬಿನ ಕರ್ತಾರಪುರದಲ್ಲಿ ಕ್ರಿ.ಶ. 1778ರಲ್ಲಿ ಜನಿಸಿದ ಅವರು ಚಿಕ್ಕಂದಿನಲ್ಲೇ ತಂದೆ-ತಾಯಿಯವರನ್ನು ಕಳೆದುಕೊಂಡಿದ್ದರು. ಅವರ ಅತ್ತಿಗೆ, ಅಣ್ಣ ಈ ಕುರುಡನನ್ನು ಏಕೆ ಈ ಶನಿ ನಮಗೆ ಗಂಟು ಬಿದ್ದಿತೋ, ಎಲ್ಲಾದರೂ ತೊಲಗಿಹೋಗಬಾರದೇ ಎಂದು ಪ್ರತಿನಿತ್ಯ ಹಂಗಿಸುತ್ತಿದ್ದರು. ಇಂತಹ ಬಯ್ಗಳವನ್ನು ಸಹಿಸುವುದು ಕಷ್ಟವೆಂಬ ಸ್ಥಿತಿಗೆ ತಲುಪಿದ ಆ ಬಾಲಕ ಒಂದು ದಿನ ಮನೆಯಿಂದ ಹೊರಟೇಬಿಟ್ಟಾಗ ಅವನಿಗೆ ಕೇವಲ ಎಂಟು ವರ್ಷ. ಒಂದು ಕೈಯಲ್ಲಿ ಕೋಲು ಹಿಡಿದುಕೊಂಡು ನಡೆದೇ ನಡೆದ. ಈಗಿನಂತೆ ರಸ್ತೆಗಳಿಲ್ಲದ, ಕಾಡು-ಮೇಡುಗಳಿಂದ ಕೂಡಿದ ಪ್ರದೇಶಗಳಲ್ಲಿ ತಡವರಿಸಿ ನಡೆಯುತ್ತಾ ಸುಮಾರು 2000 ಮೈಲುಗಳಷ್ಟು ದೂರ ಕ್ರಮಿಸಿ ಆತ ತಲುಪಿದ್ದು ಹರಿದ್ವಾರ ಎಂದರೆ ಊಹಿಸುವುದೂ ಕಷ್ಟವಾಗುತ್ತದೆ.   ಕಣ್ಣಿರುವವರು, ಧೃಢಕಾಯರೂ ಆ ರೀತಿ ಕ್ರಮಿಸಲು ಹಿಂಜರಿಯುವ ಕಾಲವದು. ಅಂಧ ಬಾಲಕ ಅದನ್ನು ಮಾಡಿದ್ದೇ ಒಂದು ದೊಡ್ಡ ಕೆಲಸ. ಆತನ ಸಾಧನೆ ಅಲ್ಲಿಗೇ ನಿಲ್ಲಲಿಲ್ಲ. ಆತನ ಬುದ್ಧಿ ಎಷ್ಟು ತೀಕ್ಷ್ಣವೆಂದರೆ, ಕೃಷ್ಣಶಾಸ್ತ್ರಿ ಅನ್ನುವವರು ಗಂಗಾನದಿಯಲ್ಲಿ ನಿಂತುಕೊಂಡು ಋಗ್ವೇದ ಹೇಳುತ್ತಿದ್ದುದನ್ನು ಕೇಳುತ್ತಾ ನಿಂತಿದ್ದ ಅವರು ಕೇಳಿದರು, ಶಾಸ್ತ್ರಿಗಳೇ, ಇನ್ನೊಂದು ಒಂದು ಸಲ ಹೇಳಿ. ಅವರು ಹೇಳಿದರು.  ಇವರು ಸ್ವಲ್ಪವೂ ಮರೆಯದೆ ಕಲಿತರು. ಅದ್ಭುತ ಗ್ರಹಣ ಶಕ್ತಿಯಿಂದಾಗಿ ಒಂದು ಸಲ ಕೇಳಿದರೆ ಸಾಕು, ಅದು ಅವರಿಗೆ ಮನದಟ್ಟಾಗಿಬಿಡುತ್ತಿತ್ತು. ನಂತರದಲ್ಲಿ ಹೆಸರಾಂತ ಸಂಸ್ಕೃತ ವಿದ್ವಾಂಸರಾಗಿದ್ದ ಸ್ವಾಮಿ ಪೂರ್ಣಾನಂದರ ಶಿಷ್ಯರಾಗಿ ಪುರಾತನ ಋಷಿ-ಮುನಿಗಳು ರಚಿಸಿದ ಸಾಹಿತ್ಯ, ಸಂಸ್ಕೃತ ವ್ಯಾಕರಣ, ನಿರುಕ್ತ, ಮುಂತಾದುವನ್ನು ಕಲಿತರು ಎಂದು ಹೇಳುತ್ತಾರೆ. ಹಿಂದೂ ತತ್ತ್ವದರ್ಶನಗಳ ಮೂಲವಿಚಾರಗಳನ್ನು ಮನನ ಮಾಡಿಕೊಂಡರು. ಗಾಯತ್ರಿ ಮಂತ್ರವನ್ನು ವರ್ಷಗಳ ಕಾಲ ಪಠಿಸುತ್ತಿದ್ದರಿಂದ ಪ್ರಾಪ್ತವಾದ ದಿವ್ಯದೃಷ್ಟಿಯಿಂದ ಅವರಿಗೆ ಆಧ್ಯಾತ್ಮಿಕ ಉನ್ನತಿ ಮತ್ತು ಮಂತ್ರಗಳಲ್ಲಿ ಸ್ವಾಮಿತ್ವ ದೊರಕಿತು ಎನ್ನಲಾಗಿದೆ. ಅದೇನೇ ಇರಲಿ, ಕುರುಡರಾಗಿದ್ದರೂ ಅವರು ನಾಲ್ಕೂ ವೇದಗಳಲ್ಲಿ ಪಾಂಡಿತ್ಯ ಹೊಂದಿದ್ದಂತೂ ನಿರ್ವಿವಾದದ ವಿಚಾರವಾಗಿತ್ತು.  ಕಣ್ಣಿರುವವರಿಗೂ ಕಷ್ಟವಾದ ಈ ಜ್ಞಾನ ವಿರಜಾನಂದರಿಗೆ ಲಭ್ಯವಾಗಿತ್ತು.
     ಮೋಕ್ಷ ಸಾಧನೆಗೆ ಮೂರ್ತಿಪೂಜೆಯ ಅಗತ್ಯವಿಲ್ಲವೆಂದು ಶಿಷ್ಯರಿಗೆ ಹೇಳುತ್ತಿದ್ದ ಅವರು ದೇವರನ್ನು ತಮ್ಮ ಸುತ್ತಮುತ್ತಲಿನಲ್ಲೇ ಎಲ್ಲಾ ಜೀವಿಗಳಲ್ಲಿ, ವಸ್ತುಗಳಲ್ಲಿ, ತಮ್ಮ ಹೃದಯಗಳಲ್ಲೇ ಕಾಣಬೇಕೆಂದು, ಕೇವಲ ದೇಗುಲಗಳಲ್ಲಿನ ವಿಗ್ರಹಗಳಲ್ಲಿ ಮಾತ್ರ ಕಾಣಲು ಪ್ರಯತ್ನಿಸಬಾರದೆಂದು ಒತ್ತಿ ಹೇಳುತ್ತಿದ್ದರು. ವಿನೋದ ಪ್ರವೃತ್ತಿಯವರಾದ ಅವರು ಒಮ್ಮೆ ಮಥುರಾ ನಗರದಲ್ಲಿ ನಡುಬೇಸಿಗೆಯ ಮಧ್ಯಾಹ್ನದಲ್ಲಿ ಕೋಲೂರಿಕೊಂಡು ಹೋಗುತ್ತಿದ್ದರು. ಅದೇ ಸಮಯದಲ್ಲಿ  ಒಂದು ಚಿಕ್ಕ ರಥದ ಮೇಲೆ ದೇವರ ಮೂರ್ತಿಯನ್ನು ಕೂರಿಸಿಕೊಂಡು ಭಕ್ತಾದಿಗಳು ಬರುತ್ತಿದ್ದರು. ಬಿಸಿಲು ಜೋರಾಗಿದ್ದರಿಂದ ರಥವನ್ನು ನಡುರಸ್ತೆಯಲ್ಲೇ ಬಿಟ್ಟು ಮರದ ನೆರಳಿನಲ್ಲಿ ಸುಧಾರಿಸಿಕೊಳ್ಳುತ್ತಿದ್ದರು. ಈ ಪುಣ್ಯಾತ್ಮ ಕೋಲೂರಿಕೊಂಡು ಹೋಗುತ್ತಾ ಆ ರಥದ ಮೇಲೇ ಬಿದ್ದುಬಿಟ್ಟರು. ಭಕ್ತರು ಕಿರುಚಿದರು, "ಏಯ್, ಕುರುಡಾ, ದೇವರು ಇರೋದು ಗೊತ್ತಾಗಲ್ವಾ?" ವಿರಜಾನಂದರು ನಗುತ್ತಲೇ ಹೇಳಿದ್ದರು, "ನಾನು ಕುರುಡ ಅನ್ನೋದು ಜಗತ್ತಿಗೇ ಗೊತ್ತು, ಆ ನಿಮ್ಮ ದೇವರೂ ಕುರುಡನೇ ಇರಬೇಕು, ಪಾಪ, ಮುದುಕ, ಕುರುಡ ಬರ್ತಾ ಇದಾನೆ ಅಂತ ಪಕ್ಕಕ್ಕೆ ಸರಿಯೋಕೆ ಆಗ್ತಾ ಇರಲಿಲ್ವಾ?"
     ಸಂನ್ಯಾಸಿ ದಯಾನಂದ ಸರಸ್ವತಿ ಗುರುವನ್ನು ಅರಸುತ್ತಾ ಸ್ವಾಮಿ ವಿರಜಾನಂದರ ಬಳಿಗೆ ಬಂದಾಗ ದಯಾನಂದರಿಗೆ 36 ವರ್ಷ ವಯಸ್ಸು. ಮಥುರಾದ ವಿರಜಾನಂದರ ಶಾಲೆಗೆ ಬಂದ ದಯಾನಂದರು ಬಾಗಿಲು ಬಡಿದಿದ್ದರು. ಒಳಗಿನಿಂದ ಗಂಭೀರ ಧ್ವನಿ ಕೇಳಿಬಂದಿತು, ಯಾರದು?
ದಯಾನಂದ: ಗುರುದೇವಾ, ನಾನು ನಿಮ್ಮ ಸೇವಕ. ನನ್ನನ್ನು ದಯಾನಂದ ಸರಸ್ವತಿ ಎನ್ನುತ್ತಾರೆ.
ವಿರಜಾನಂದ: ಏನು ಬೇಕು?
ದಯಾನಂದ: ಜ್ಞಾನದ ಬೆಳಕಿಗಾಗಿ ನಿಮ್ಮನ್ನು ಹುಡುಕಿಕೊಂಡು ಬಂದಿರುವೆ.
ವಿರಜಾನಂದ: ನಿನಗೆ ವ್ಯಾಕರಣ ಗೊತ್ತಿದೆಯೇ?
ದಯಾನಂದ: ನಾನು ಕೌಮುದಿ ಮತ್ತು ಸಾರಸ್ವತಗಳನ್ನು ಓದಿಕೊಂಡಿದ್ದೇನೆ.
ವಿರಜಾನಂದ: ಏನು? ಕೌಮುದಿ, ಸಾರಸ್ವತ? ಇಲ್ಲಿಂದ ಹೊರಟು ಹೋಗು. ಆ ಉಪಯೋಗವಿಲ್ಲದ ಪುಸ್ತಕಗಳನ್ನು ಯಮುನಾ ನದಿಯಲ್ಲಿ ಬಿಸಾಕು, ಆಮೇಲೆ ಬಾ.
     ಗುರುವಿನ ಆದೇಶದಂತೆ ದಯಾನಂದರು ನೇರವಾಗಿ ಯಮುನಾ ನದಿಯ ಬಳಿಗೆ ಹೋದರು. ನೂರಾರು ಮೈಲುಗಳು ದೂರ ಪ್ರಯಾಣ ಮಾಡುತ್ತಾ ಈ ಪುಸ್ತಕಗಳನ್ನು ತಲೆಯ ಮೇಲೆ ಹೊತ್ತು ತಂದಿದ್ದ ಅವರು ಅವುಗಳ ಕುರಿತು ವ್ಯಾಮೋಹ ಇಟ್ಟುಕೊಳ್ಳದೆ ನದಿಗೆ ಎಸೆದುಬಿಟ್ಟರು ಮತ್ತು ಹಿಂತಿರುಗಿ ಬಂದು ಹೇಳಿದರು, "ಗುರುದೇವಾ, ನಿಮ್ಮ ಆದೇಶವನ್ನು ಪಾಲಿಸಿದ್ದೇನೆ". ಶಿಷ್ಯನಿಗಾಗಿ ಗುರುಗಳ ಶಾಲೆಯ ಬಾಗಿಲು ತೆರೆಯಲ್ಪಟ್ಟಿತು.
     ವಿರಜಾನಂದರು ಕೃಷ್ಣಾಜಿನದ ಮೇಲೆ ಕುಳಿತಿದ್ದರು. ಕೇವಲ ಚರ್ಮ ಮತ್ತು ಮೂಳೆಗಳು ಕಾಣುತ್ತಿದ್ದ ಕೃಷಕಾಯದ ವಿರಜಾನಂದರ ಮುಖ ತೇಜಸ್ಸಿನಿಂದ ಕೂಡಿತ್ತು. ಅವರಿಗೆ ನಮಿಸಿದ ದಯಾನಂದರ ತಲೆಯ ಮೇಲೆ ಪ್ರೀತಿಪೂರ್ವಕವಾಗಿ ಕೈಯಾಡಿಸಿದರು. ದಯಾನಂದರು ಅಂಧರಾಗಿದ್ದ ಗುರುಗಳ ಕಡೆಗೆ ಆಶ್ಚರ್ಯದಿಂದ ನೋಡಿದರು. ಕುರುಡರಾಗಿದ್ದ ಗುರುಗಳು ಒಂದು ಅಕ್ಷರವನ್ನೂ ಓದಲು ಸಾಧ್ಯವಿರಲಿಲ್ಲ. ಆದರೆ ಅವರು ಜ್ಞಾನಸಮೃದ್ಧತೆಯ ಜೀವಂತ ಪ್ರತಿರೂಪವಾಗಿದ್ದರು ಮತ್ತು ಶಿಷ್ಯರ ಎಲ್ಲಾ ಸಂದೇಹಗಳನ್ನು ವೇದಗಳ, ಎಲ್ಲಾ ಗ್ರಂಥಗಳ ಮಂತ್ರಗಳು, ಉದಾಹರಣೆಗಳೊಂದಿಗೆ ಸಾಧಾರವಾಗಿ ಪರಿಹರಿಸುತ್ತಿದ್ದರು. ಯೋಗ್ಯ ಗುರುಗಳಿಗಾಗಿ 15 ವರ್ಷಗಳಿಂದ ನಡೆಸಿದ್ದ ದಯಾನಂದರ ಹುಡುಕಾಟ ಕೊನೆಗೊಂಡಿತ್ತು. ದಯಾನಂದರ ಅರ್ಪಣಾ ಮನೋಭಾವ, ಕಲಿಯುವ ಆಸಕ್ತಿಗಳು ಅವರನ್ನು ಗುರುವಿನ ಮೆಚ್ಚಿನ ಶಿಷ್ಯರನ್ನಾಗಿಸಿದವು. ದಯಾನಂದರು ಪ್ರತಿದಿನ ಬೆಳಿಗ್ಗೆ ಚಳಿಯಿರಲಿ, ಬಿಸಿಲಿರಲಿ, ಮಳೆಯಿರಲಿ ಯಮುನಾ ನದಿಯಿಂದ ಗುರುಗಳ ಸ್ನಾನಕ್ಕೆ ಮತ್ತು ಇತರ ಉಪಯೋಗಗಳಿಗಾಗಿ ನೀರು ಹೊತ್ತು ತರುತ್ತಿದ್ದರು. ನೆಲವನ್ನು ಗುಡಿಸಿ, ಸಾರಿಸುವ ಕೆಲಸವೂ ಅವರದೇ ಆಗಿತ್ತು. ಯಾವುದೇ ಕೆಲಸವನ್ನೂ ಅಳುಕಿಲ್ಲದೆ, ಹಿಂಜರಿಯದೆ ಮಾಡುತ್ತಿದ್ದ ಅವರನ್ನು ಕಂಡರೆ ಗುರುವಿಗೆ ವಿಶೇಷ ಅಕ್ಕರೆಯಿತ್ತು.
     ಒಮ್ಮೆ ವಿರಜಾನಂದರಿಗೆ ಯಾವುದೋ ಕಾರಣಕ್ಕೆ ದಯಾನಂದರ ಮೇಲೆ ಸಿಟ್ಟು ಬಂದು ಅವರ ಬೆನ್ನಿನ ಮೇಲೆ ಬಲವಾಗಿ ಹೊಡೆದಿದ್ದರು. ಹಾಗೆ ಹೊಡೆದಿದ್ದರಿಂದ ಕೃಷದೇಹಿ ಗುರುವಿನ ಕೈಗೇ ನೋವಾಯಿತು. ದಯಾನಂದರು ವಿನೀತರಾಗಿ ಹೇಳಿದ್ದರು, "ಗುರುದೇವಾ, ನನ್ನ ದೇಹ ಕಲ್ಲಿನಂತಿದೆ. ನೀವು ಹೊಡೆದರೆ ಅದಕ್ಕೆ ನೋವಾಗುವುದಿಲ್ಲ. ನಿಮ್ಮ ಕೈಗಳಿಗೇ ನೋವಾಗುತ್ತದೆ. ಇನ್ನು ಮುಂದೆ ನನ್ನನ್ನು ಶಿಕ್ಷಿಸಬೇಕಾದಾಗ ಕೈಗಳ ಬದಲಾಗಿ ಕೋಲಿನಿಂದ ಹೊಡೆಯಿರಿ" ಎಂದು ಹೇಳಿ ಒಂದು ಕೋಲನ್ನು ತಂದುಕೊಟ್ಟಿದ್ದರು. ಅಂದಿನ ಗುರು-ಶಿಷ್ಯರ ಸಂಬಂಧವನ್ನು ಇಂದು ಕಲ್ಪಿಸಿಕೊಳ್ಳಲೂ ಸಾಧ್ಯವಿಲ್ಲ. ದಯಾನಂದರ ಕೋರಿಕೆ ವ್ಯರ್ಥವಾಗಲಿಲ್ಲ. ಮುಂದೊಮ್ಮೆ ವಿರಜಾನಂದರು ಸಿಟ್ಟಿನಲ್ಲಿ ದಯಾನಂದರ ಭುಜದ ಮೇಲೆ ಬಲವಾಗಿ ಬಾರಿಸಿದ್ದರು. ಇದನ್ನು ಕಂಡ ಸಹವಿದ್ಯಾರ್ಥಿ ನಯನಸುಖ ಗುರುವಿಗೆ ಹೇಳಿದ್ದ, "ಗುರುದೇವಾ, ಇಂತಹ ದೊಡ್ಡ ಸಂನ್ಯಾಸಿಯನ್ನು ಈ ರೀತಿ ದಂಡಿಸುವುದು ತರವಲ್ಲ. ಅವರನ್ನು ಗೌರವದಿಂದ ಕಾಣಬೇಕು". ಪಾಠ ಮುಗಿದ ಮೇಲೆ ದಯಾನಂದರು ಮಿತ್ರನಿಗೆ ಆಕ್ಷೇಪಿಸಿದ್ದರು, "ಗುರುದೇವರು ದ್ವೇಷದಿಂದ ಹೊಡೆದರೆಂದು ಭಾವಿಸಿರುವೆಯಾ? ಕುಂಬಾರ ಮಣ್ಣನ್ನು ತುಳಿದು ಹದ ಮಾಡಿ ಸುಂದರ ಮಡಿಕೆಯನ್ನಾಗಿಸುವಂತೆ, ಗುರು ಶಿಷ್ಯರನ್ನು ಹೊಡೆದು, ತಿದ್ದಿ ವ್ಯಕ್ತಿತ್ವವನ್ನು ರೂಪಿಸುತ್ತಾರೆ. ಗುರುಗಳಿಗೆ ನೀನು ಆ ರೀತಿ ಮಾತನಾಡಬಾರದಿತ್ತು". ಮುಂದೆ ದಯಾನಂದರು ಮಹರ್ಷಿಯೆನಿಸಿ ಜನರಿಗೆ ಉಪದೇಶ ನೀಡುತ್ತಿದ್ದ ಸಂದರ್ಭದಲ್ಲಿ ತಮ್ಮ ಭುಜದ ಮೇಲೆ ಗುರುಗಳು ಹೊಡೆದಿದ್ದರಿಂದ ಆಗಿದ್ದ ಗುರುತನ್ನು ತೋರಿಸಿ ಹೇಳುತ್ತಿದ್ದರು, 'ಇದು ಗುರುವಿಗೆ ಯಾವಾಗಲೂ ಕೃತಜ್ಞನಾಗಿರಬೇಕೆಂದು ನೆನಪಿಸುತ್ತವೆ'.
     ಆರ್ಯಸಮಾಜ ಸ್ಥಾಪಕರಾಗಿ ವೇದದ ವಿಚಾರಗಳನ್ನು ಪ್ರಚಾರ ಮಾಡುವಲ್ಲಿ ಅಗ್ರಪಾತ್ರ ವಹಿಸಿದ, ಅಂಧಶ್ರದ್ಧೆ, ಮೂಢನಂಬಿಕೆಗಳನ್ನು ತೊಡೆಯಲು ಸತತ ಪ್ರಯತ್ನ ಮಾಡುತ್ತಾ, ಸತ್ಯಾರ್ಥ ಪ್ರಕಾಶದಂತಹ ವೈಚಾರಿಕ ಕ್ರಾಂತಿ ಮೂಡಿಸುವ ಗ್ರಂಥ ರಚಿಸಿದ, ಸತ್ಯಕ್ಕಾಗಿ ತಮ್ಮ ಜೀವನವನ್ನೇ ಬಲಿದಾನ ಮಾಡಿದ ಮಹರ್ಷಿ ದಯಾನಂದ ಸರಸ್ವತಿಯವರ ವೈಚಾರಿಕ ಪ್ರಖರತೆಯ ಮೂಲ ವಿರಜಾನಂದ ಸರಸ್ವತಿಯವರೇ ಆಗಿದ್ದರು. 1868ರಲ್ಲಿ 90 ವರ್ಷದವರಿದ್ದಾಗ ವಿರಜಾನಂದರ ದೇಹಾಂತ್ಯವಾಯಿತು. ಕಣ್ಣುಗಳಿದ್ದೂ ಕುರುಡರಾಗಿರವವರೇ ಹೆಚ್ಚಾಗಿರುವಾಗ, ಹುಟ್ಟು ಕುರುಡರಾಗಿದ್ದರೂ ಅಂತರಂಗದ ದೃಷ್ಟಿಯಿಂದ ಸಕಲವನ್ನೂ ಅರಿತಿದ್ದ ವಿರಜಾನಂದ ಸರಸ್ವತಿಯವರು ಸಾಧಕರಿಗೆ ಅನುಪಮ ಮಾರ್ಗದರ್ಶಿಯಾಗಿದ್ದಾರೆ.
-ಕ.ವೆಂ.ನಾಗರಾಜ್.


ಶುಕ್ರವಾರ, ಏಪ್ರಿಲ್ 24, 2015

ಸಾರ್ಥಕ ಹೊತ್ತು, ಸನ್ಮಿತ್ರನಿಗೆ ಅರವತ್ತು!


     ಕಳೆದ ಭಾನುವಾರ ನನ್ನ ದೀರ್ಘಕಾಲದ ಮಿತ್ರ ಶ್ರೀಧರ ೬೦ ವಸಂತಗಳನ್ನು ಕಂಡು ಮುಂದಡಿಯಿಟ್ಟ ದಿನ. ಆ ಸುಸಂದರ್ಭದ ನಿಮಿತ್ತ ಮಿತ್ರನ ಮನೆಯಲ್ಲಿ ಅಗ್ನಿಹೋತ್ರ, ವಿಶೇಷ ಕಾರ್ಯಕಲಾಪಗಳು, ಬಂಧು-ಮಿತ್ರರ ಶುಭ ಹಾರೈಕೆಗಳ ಮೇಳೈಕೆಗಳೊಂದಿಗೆ ರಾ.ಸ್ವ.ಸಂಘದ ಜ್ಯೇಷ್ಠ ಪ್ರಚಾರಕ ಸನ್ಮಾನ್ಯ ಶ್ರೀ ಸು.ರಾಮಣ್ಣನವರ ಆಶೀರ್ವಾದಪೂರ್ವಕ ಸಂದೇಶಸೂಚಕವಾದ ಮಾತುಗಳು, ದೂರವಾಣಿ ಮೂಲಕವೇ ಸಾಂದರ್ಭಿಕವಾಗಿ ಮಾತನಾಡಿದ ವೇದಾಧ್ಯಾಯಿ ಶ್ರೀ ಸುಧಾಕರ ಶರ್ಮರ ಮಾತುಗಳು ಶುಭಸಂದರ್ಭವನ್ನು ಮತ್ತಷ್ಟು ಮಹತ್ವಗೊಳಿಸಿದವು. ಸಮ್ಮಿಶ್ರಭಾವದಿಂದ ನನ್ನ ಕಣ್ಣುಗಳಿಂದ ಜಾರಿದ ಒಂದೆರಡು ಹನಿಗಳನ್ನು ಬೇರೆಯವರು ಗಮನಿಸದಂತೆ ಒರೆಸಿಕೊಂಡೆ. ನನ್ನ ಮತ್ತು ಶ್ರೀಧರರ ಗೆಳೆತನ ಸಾಗಿಬಂದ ದಿನಗಳನ್ನು ಮನಸ್ಸು ಮೆಲುಕು ಹಾಕಿತ್ತು.                                                      
     ಅರವತ್ತು ವರ್ಷಗಳು ಜೀವಿಯ ಕಾಲದಲ್ಲಿ ಆತ್ಮಾವಲೋಕನದ ಸಮಯ. ಕಳೆದ ಆ ವರ್ಷಗಳಲ್ಲಿ ಬಾಳಿನಲ್ಲಿ ಕಳೆದುದೆಷ್ಟೋ, ಕೂಡಿದುದೆಷ್ಟೋ, ಗುಣಿಸಿದೆಷ್ಟೋ ಮತ್ತು ಭಾಗಿಸಿದದೆಷ್ಟೋ ಎಲ್ಲ ಲೆಕ್ಕವನ್ನೂ ಮಾಡಿದ ನಂತರ ಉಳಿವ ಶೇಷವೇ ಆ ಸಮಯದ ಬದುಕಿನ ಸ್ಥಿತಿ! ನನ್ನ ಸನ್ಮಿತ್ರನ ಈಗಿನ ಸ್ಥಿತಿಯಲ್ಲಿ ಈ ರೀತಿ ಲೆಕ್ಕ ಹಾಕಿದರೆ ಪುಣ್ಯದ ಲೆಕ್ಕದಲ್ಲಿ ಗಣನೀಯ ಶಿಲ್ಕು ಇರುವುದು ಗೋಚರವಾಗದೇ ಇರದು. ಧನ್ಯತೆ ಮತ್ತು ಮಾನ್ಯತೆ ಎರಡನ್ನೂ ಗಳಿಸಿಕೊಂಡಿರುವುದಕ್ಕೆ ಪೂರ್ವಾರ್ಜಿತ ಕರ್ಮ ಮತ್ತು ಈಗ ಮಾಡಿರುವ ಸುಕರ್ಮಗಳ ಫಲಗಳೇ ಕಾರಣವೆಂದರೆ ತಪ್ಪಿಲ್ಲ.


ವೇದಭಾರತಿಯ ತಂಡದ ಸಹಕಾರದೊಡನೆ ವಿಶೇಷ ಅಗ್ನಿಹೋತ್ರ
     ಇದು ವಾನಪ್ರಸ್ಥಾಶ್ರಮದ ಸಮಯ. ವಾನಪ್ರಸ್ಥವೆಂದರೆ ಜನರಿಂದ ದೂರವಾಗಿ ಬಾಳುವುದಲ್ಲ. ಇಂದಿನ ಕಾಲಮಾನದ ಪರಿಸ್ಥಿತಿಯಲ್ಲಿ ವಾನಪ್ರಸ್ಥದ ಮೂಲ ಪರಿಕಲ್ಪನೆಯನ್ನು ಸೂಕ್ತವಾಗಿ ಪರಿವರ್ತಿಸಿ ಅಳವಡಿಸಿಕೊಳ್ಳುವುದು ಅಗತ್ಯವಾಗಿದೆ. ಸಾಮಾನ್ಯವಾಗಿ ಒಬ್ಬೊಬ್ಬರಿಗೆ ಒಂದೊಂದು ವೃತ್ತಿ, ಪ್ರವೃತ್ತಿ, ಹವ್ಯಾಸಗಳು ತೃಪ್ತಿ, ಸಂತೋಷ ಕೊಡುವ ಸಂಗತಿಯಾಗಿರುತ್ತದೆ. ನಿವೃತ್ತಿಯೆಂದರೆ ಅಂತಹ ಹವ್ಯಾಸಗಳನ್ನು ನಿಲ್ಲಿಸುವುದಲ್ಲ. ಬದಲಾಗಿ ಅವುಗಳನ್ನು ಇತರರ ಹಿತಕ್ಕಾಗಿ ಬಳಸುವುದು. ಕೇವಲ ಆತ್ಮತೃಪ್ತಿ ಮತ್ತು ಇತರರಿಗೆ ಮಾರ್ಗದರ್ಶಿಯಾಗಿರಲು ಮಾತ್ರ ಇವುಗಳ ಬಳಕೆಯಾಗಬೇಕು. ಪಡೆಯುವುದಕ್ಕಿಂತ ಕೊಡುವುದಕ್ಕೆ ಆದ್ಯತೆಯಿರಬೇಕು. ಅಷ್ಟಕ್ಕೂ ನಮ್ಮಲ್ಲಿರುವುದೆಲ್ಲಾ ನಾವು ಪಡೆದಿದ್ದೇ ಅಲ್ಲವೇ? ಬದುಕಿನ ಜಂಜಾಟದಲ್ಲಿ ತನ್ನತನಕ್ಕೆ ಅದುವರೆಗೆ ಸಿಕ್ಕದ ಆದ್ಯತೆಯನ್ನು ಜೀವನದ ಅಂತಿಮ ಘಟ್ಟದಲ್ಲಾದರೂ ಸಿಕ್ಕುವಂತೆ ನೋಡಿಕೊಂಡು ತಾನು ತಾನಾಗಿರಬೇಕು, ಅರ್ಥಾತ್ ತನಗಾಗಿ ಬಾಳಬೇಕು. ತನಗಾಗಿ ಬಾಳುವ ಈ ರೀತಿಯ ಬಾಳುವಿಕೆಯಲ್ಲಿ ಸ್ವಾರ್ಥವಿರಲಾರದು. ಏಕೆಂದರೆ, ಅದು ಆತ್ಮತೃಪ್ತಿಯ, ಆತ್ಮ ಚಿಂತನೆಯ, ಆತ್ಮಾನುಸಂಧಾನದ ಮಾರ್ಗ. ನನ್ನ ಮಿತ್ರನ ಸದ್ಯದ ಗುರಿಯೆಂದರೆ ವೇದದ ಕುರಿತು ಪ್ರಚಾರ, ಪ್ರಸಾರದಲ್ಲಿ ತೊಡಗುವುದು, ಅಗ್ನಿಹೋತ್ರವನ್ನು ಜನಪ್ರಿಯಗೊಳಿಸುವುದು ಮತ್ತು ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗುವುದು ಮತ್ತು ಇತರರನ್ನೂ ಆ ದಿಸೆಯಲ್ಲಿ ಪ್ರೇರಿಸುವುದು. ಆತ ಸಾಗುತ್ತಿರುವ ರೀತಿಯಿಂದ ಯಶಸ್ಸಿನ ಹಾದಿಯಲ್ಲಿ ಸಾಗುತ್ತಿರುವುದು ಕಾಣುತ್ತಿದೆ. ಯಶಸ್ವಿಯೂ ಆಗಲಿ ಎಂಬುದು ಮನದಾಳದ ಹಾರೈಕೆ.
     ೧೯೭೦ರ ದಶಕದ ಸಮಯದಲ್ಲಿ ಶ್ರೀಧರರ ಪರಿಚಯವಾದಾಗ ಆತ ಇನ್ನೂ ಐ.ಟಿ.ಐ. ಓದುತ್ತಿದ್ದ ವಿದ್ಯಾರ್ಥಿ. ನಾನು ಆಗಿನ್ನೂ ಕೆಲಸಕ್ಕೆ ಸೇರಿ ಒಂದು ವರ್ಷವಾಗಿತ್ತು. ನಾನು ಜಿಲ್ಲಾ ಫುಡ್ ಇನ್ಸ್‌ಪೆಕ್ಟರ್ ಆಗಿದ್ದೆ. ಇಬ್ಬರೂ ಸಂಘದ ಕಾರ್ಯಕರ್ತರಾದ್ದರಿಂದ ಪರಿಚಯ ಸಹಜವಾಗಿ ಆಗಿತ್ತು. ೧೯೭೩ರಲ್ಲಿ ಶ್ರೀಧರ್ ಸಂಘದ ಕಾರ್ಯಾಲಯದಲ್ಲಿ ಇದ್ದುಕೊಂಡು ವಾರಾನ್ನ ಮಾಡಿಕೊಂಡು ವಿದ್ಯಾಭ್ಯಾಸ ಮಾಡುತ್ತಿದ್ದ ಸಮಯ. ಆತ ವಾಣಿವಿಲಾಸ ಪ್ರಾಥಮಿಕ ಶಾಲೆಯ ಆವರಣದಲ್ಲಿ ನಡೆಯುತ್ತಿದ್ದ ಶೈಲೇಂದ್ರ ಸಾಯಂಶಾಖೆಯ ಮುಖ್ಯಶಿಕ್ಷಕನಾಗಿದ್ದರೆ, ನಾನು ಭಾಗ ಕಾರ್ಯವಾಹ ಮತ್ತು ನಂತರದಲ್ಲಿ ನಗರ ಸಹಕಾರ್ಯವಾಹನಾಗಿ ಜವಾಬ್ದಾರಿ ಹೊಂದಿದ್ದೆ. ಚ.ವಾಸುದೇವ್ ಜಿಲ್ಲಾ ಪ್ರಚಾರಕ್, ಬಿ.ಎನ್.ಹರಿಪ್ರಸಾದ್ (ಈಗಿನ ಬೆಂಗಳೂರಿನ ಜನಪ್ರಿಯ ಶಾಸಕರಾದ ಬಿ.ಎನ್.ವಿಜಯಕುಮಾರರ ತಮ್ಮ) ನಗರ ಪ್ರಚಾರಕ್, ಎ.ವಿ. ಚಂದ್ರಶೇಖರ್ (ಈಗ ಉಚ್ಛ ನ್ಯಾಯಾಲಯದ ನ್ಯಾಯಾಧೀಶರು) ವಿಸ್ತಾರಕ್ ಮತ್ತು ಸು.ರಾಮಣ್ಣನವರು ಮೈಸೂರು ವಿಭಾಗ ಪ್ರಚಾರಕರಾಗಿದ್ದ ಸಮಯವದು. ಹೊ.ವೆ.ಶೇಷಾದ್ರಿಯವರು ಪ್ರಾಂತ ಪ್ರಚಾರಕರಾಗಿದ್ದರು. ನಾನು ಪ್ರತಿನಿತ್ಯ ನನ್ನ ವ್ಯಾಪ್ತಿಯಲ್ಲಿನ ಒಂದೊಂದು ಶಾಖೆಗೆ ಹೋಗುತ್ತಿದ್ದೆ. ಶ್ರೀಧರ್ ನಡೆಸುತ್ತಿದ್ದ ಶಾಖೆಗೂ ವಾರಕ್ಕೆ ಎರಡು-ಮೂರು ದಿನಗಳು ಹೋಗುತ್ತಿದ್ದೆ. ಶ್ರೀಧರ್ ನಡೆಸುತ್ತಿದ್ದ ಶಾಖೆ ಸಂಖ್ಯಾತ್ಮಕವಾಗಿ ಮತ್ತು ಗುಣಾತ್ಮಕವಾಗಿ ಉತ್ತಮದ್ದಾಗಿತ್ತು. ಅವರು ಬಾಲ ಸ್ವಯಂಸೇವಕರೊಂದಿಗೆ ಬೆರೆಯುತ್ತಿದ್ದ ರೀತಿ, ಆಟವಾಡಿಸುತ್ತಿದ್ದ ಶೈಲಿ, ಗಟ್ಟಿ ಕಂಠದಲ್ಲಿ ಹೇಳಿಕೊಡುತ್ತಿದ್ದ ದೇಶಭಕ್ತಿಗೀತೆಗಳು, ಶಾಖೆಗೆ ಬಾರದಿದ್ದ ಬಾಲಕರ ಮನೆಗಳಿಗೆ ಹೋಗಿ ಅವರನ್ನು ಮಾತನಾಡಿಸುತ್ತಿದ್ದುದು, ಮುಂತಾದವು ಹೊಸ ಹೊಸ ಬಾಲಕರನ್ನು ಶಾಖೆಯೆಡೆಗೆ ಸೆಳಯುತ್ತಿದ್ದವು. ಶ್ರೀಧರರ ಇಂದಿನ ಕಾರ್ಯಕ್ಷಮತೆ, ಸಂಘಟನಾಚತುರತೆ, ವಾಕ್ಪಟುತ್ವಗಳಿಗೆ ಅವರು ಶೈಲೇಂದ್ರ ಶಾಖೆಯ ಮುಖ್ಯಶಿಕ್ಷಕನಾಗಿದ್ದುದು, ಮೇಲೆ ತಿಳಿಸಿದ ಮಹನೀಯರ ಮಾರ್ಗದರ್ಶನ, ಜೊತೆಯಲ್ಲಿದ್ದ ಸಮರ್ಥ ಸಂಘದ ಕಾರ್ಯಕರ್ತರ ಸಹವಾಸ, ಬಡತನದ ಕಷ್ಟ-ನಷ್ಟಗಳ ಅರಿವುಗಳು ಗಟ್ಟಿ ತಳಹದಿ ಹಾಕಿತ್ತೆಂಬುದರಲ್ಲಿ ಅನುಮಾನವೇ ಇಲ್ಲ.
     ಅಧಿಕಾರದಾಹದಿಂದ ಅಂದಿನ ಪ್ರಧಾನಿ ಇಂದಿರಾಗಾಂಧಿಯವರು ಜನತೆಯ ಮೇಲೆ ಹೇರಿದ್ದ ೧೯೭೫-೭೭ರ ತುರ್ತುಪರಿಸ್ಥಿತಿ ದೇಶವನ್ನು ಸರ್ವಾಧಿಕಾರಕ್ಕೆ ದೂಡಿತ್ತು. ವಿರೋಧಿಗಳನ್ನೆಲ್ಲಾ ಜೈಲುಪಾಲಾಗಿಸಿದ್ದರು. ಪತ್ರಿಕಾ ಮತ್ತು ಇತರ ಮಾಧ್ಯಮಗಳಿಗೆ ದಿಗ್ಬಂಧನ, ರಾ.ಸ್ವ.ಸಂಘ ಸೇರಿದಂತೆ ಹಲವಾರು ಸಂಘ ಸಂಸ್ಥೆಗಳ ನಿಷೇಧ ದೇಶದ ಪ್ರಜಾಪ್ರಭುತ್ವಕ್ಕೆ ಅತಿ ದೊಡ್ಡ ಗಂಡಾಂತರ ತಂದಿತ್ತು. ಆ ಅವಧಿ ನನ್ನ ಪಾಲಿಗೂ ಕರಾಳ ಅವಧಿಯಾಗಿತ್ತು. ನಾನೂ ಸೇರಿದಂತೆ ಹಲವರನ್ನು ಕ್ರಿಮಿನಲ್ ಮೊಕದ್ದಮೆಗಳನ್ನು ಹೂಡಿ ಜೈಲಿಗೆ ಅಟ್ಟಿದ್ದರು. ನನ್ನ ನೌಕರಿ ಹೋಗಿತ್ತು. ಸುಮಾರು ಆರು ತಿಂಗಳುಗಳ ಕಾಲ ಹಾಸನದ ಜೈಲಿನಲ್ಲಿ ಕಳೆದಿದ್ದೆ. ಶ್ರೀಧರ್ ಆ ಸಮಯದಲ್ಲಿ ೧೯೭೪ರಿಂದ೭೭ರವರೆಗೆ ಬೆಂಗಳೂರಿನಲ್ಲಿದ್ದು ತುರ್ತುಪರಿಸ್ಥಿತಿ ಅವಧಿಯಲ್ಲಿ ಭೂಗತನಾಗಿ ತುರ್ತುಪರಿಸ್ಥಿತಿ ವಿರುದ್ಧ ಜನರನ್ನು ಜಾಗೃತಗೊಳಿಸುವ ಕಹಳೆ ಪತ್ರಿಕೆಯ ವಿವಿದೆಡೆಗೆ ತಲುಪಿಸುವ ಕೆಲಸ ಮಾಡುತ್ತಿದ್ದರು. ತೆರೆಮರೆಯ ಈ ಕೆಲಸ ಅತ್ಯಂತ ಮಹತ್ವದ್ದು ಮತ್ತು ಅಪಾಯಕಾರಿಯಾಗಿದ್ದುದಾಗಿತ್ತು. ಹಲವು ಸಲ ಚಾಣಾಕ್ಷತೆಯಿಂದ ಪೋಲಿಸರ ಕೈಗೆ ಸಿಕ್ಕದಂತೆ ತಪ್ಪಿಸಿಕೊಂಡಿದ್ದರು. ಆ ಕರಾಳ ಅವಧಿ ನೂರಾರು ಸ್ವಯಂಸೇವಕರ ಜೀವನವನ್ನೇ, ಸಂಸಾರಗಳನ್ನೇ ನಾಶ ಮಾಡಿತ್ತು. ಸಂಘದ ದಿಟ್ಟ ಹೋರಾಟದಿಂದ ಪ್ರಜಾಪ್ರಭುತ್ವ ಮರುಸ್ಥಾಪನೆಯಾಗಿದ್ದು ಈಗ ಇತಿಹಾಸ.
ಸ್ವಾಮಿ ವಿವೇಕಾನಂದರ 150ನೇ ಜನ್ಮ ವರ್ಷಾಚರಣೆ ಸಂದರ್ಭದಲ್ಲಿ ಜಿಲ್ಲಾ ಸಂಯೋಜಕನಾಗಿ
     ೧೯೭೭ರಿಂದ ೭೯ರವರೆಗೆ ಕೆಜಿಎಫ್ ನಲ್ಲಿದ್ದ ಶ್ರೀಧರ್ ೧೯೭೯ರಲ್ಲಿ ಹಾಸನ ಜಿಲ್ಲೆಗೆ ಬಂದವರು ತದನಂತರದಲ್ಲಿ ಹಾಸನ ಜಿಲ್ಲೆಯಲ್ಲಿಯೇ ಕೆಲಸ ಮಾಡಿದರು. ನನ್ನ ಮತ್ತು ಶ್ರೀಧರರ ಮರುಭೇಟಿ ೧೯೮೦ರ ದಶಕದ ಆರಂಭದ ವರ್ಷಗಳಲ್ಲಿ ಹೊಳೆನರಸಿಪುರದಲ್ಲಾಯಿತು. ನಾನು ಹೊಳೆನರಸಿಪುರಕ್ಕೆ ಉಪತಹಸೀಲ್ದಾರನಾಗಿ ಹೋದಾಗ ಅವರು ಕೆ.ಇ.ಬಿ. ನೌಕರರಾಗಿ ಅಲ್ಲಿ ಕೆಲಸ ಮಾಡುತ್ತಿದ್ದರು. ಸಂಘದ, ವಿಶ್ವಹಿಂದು ಪರಿಷತ್ತಿನ ಅನೇಕ ಚಟುವಟಿಕಗಳಲ್ಲಿ ಇಬ್ಬರೂ ಸಕ್ರಿಯವಾಗಿ ತಡಗಿಸಿಕೊಂಡಿದ್ದೆವು. ನಾನು ಕಂದಾಯ ಇಲಾಖಾ ನೌಕರರ ಸಂಘದ ಅಧ್ಯಕ್ಷ ಮತ್ತ ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿಯೂ ಆಗಿದ್ದರಿಂದ ಆ ಸಂಘಗಳ ಮೂಲಕವೂ ಸಮಾಜಮುಖಿ ಚಟುವಟಿಕೆಗಳನ್ನು ಮಾಡಲು ಅವಕಾಶವಾಗಿತ್ತು. ಅಂತಹ ಚಟುವಟಿಕೆಗಳಿಗೆ ಶ್ರೀಧರರ ಸಕ್ರಿಯ ಸಹಕಾರ ಲಭಿಸುತ್ತಿತ್ತು. ಅಲ್ಲಿಂದ ನನಗೆ ವರ್ಗಾವಣೆಯಾದಾಗ ಮತ್ತೆ ಬೇರ್ಪಟ್ಟೆವು.
ಸಂಸ್ಕೃತ ಸಮ್ಮೇಳನದಲ್ಲಿ ಸಮ್ಮೇಳನ ಸಂಯೋಜಕನಾಗಿ
     ಸಕಲೇಶಪುರ, ಬೇಲೂರು, ಮಂಗಳೂರು ಜಿಲ್ಲೆಯ ಸ್ಥಳಗಳಲ್ಲಿ ಕಾರ್ಯ ನಿರ್ವಹಿಸಿ ಹಾಸನಕ್ಕೆ ೧೯೯೧-೯೨ರಲ್ಲಿ ವರ್ಗ ಮಾಡಿಸಿಕೊಂಡು ಜಿಲ್ಲಾಧಿಕಾರಿ ಕಛೇರಿಗೆ ಕಾರ್ಯ ಮಾಡಲು ಬಂದಾಗ ಶ್ರೀಧರ್ ಸಹ ಹಾಸನದಲ್ಲಿದ್ದರು. ನಾನು ಶಾಂತಿನಗರದ ಸ್ವಂತ ಮನೆಯಲ್ಲಿದ್ದರೆ, ಅವರೂ ಶಾಂತಿನಗರದಲ್ಲೇ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಶ್ರೀಧರ್ ಆಗ ವಿಶ್ವಹಿಂದುಪರಿಷತ್ತಿನ ಜಿಲ್ಲಾ ಕಾರ್ಯದರ್ಶಿಗಳಾಗಿದ್ದರು.ಅದೇ ಸಮಯದಲ್ಲಿ  ಶ್ರೀರಾಮಜನ್ಮಭೂಮಿಮುಕ್ತಿ ಹೋರಾಟ ಆರಂಭವಾಗಿ  ವಿಶ್ವಹಿಂದು ಪರಿಷತ್ತಿನ ಮೇಲೆ ಸರ್ಕಾರವು ನಿಶೇಧವನ್ನು ಹೇರಿದ್ದರಿಂದ ವಿಶ್ವಹಿಂದು ಪರಿಷತ್ತಿನ ಹೆಸರಲ್ಲಿ ಚಟುವಟಿಕೆ ನಡೆಸುವಂತಿರಲಿಲ್ಲ. ಆಗ ರೂಪುಗೊಂಡಿದ್ದೇ ಮನೆ-ಮನೆ ಭಜನೆ ಕಾರ್ಯಕ್ರಮ. ಶ್ರೀಧರ್, ನಾನು, ವಿಶ್ವೇಶ್ವರಯ್ಯ (ಈಗ ಮೈಸೂರಿನಲ್ಲಿದ್ದಾರೆ) ಮತ್ತು ಉಪೇಂದ್ರ (ಈಗ ಚಿಕ್ಕಮಗಳೂರಿನಲ್ಲಿ) ನಾವು ನಾಲ್ವರು ಮಾತನಾಡಿಕೊಂಡು ಪ್ರತಿ ಶನಿವಾರ ಒಂದೊಂದು ಮನೆಯಲ್ಲಿ ಸಾಮೂಹಿಕ ಭಜನೆ ನಡೆಸುವುದೆಂದು ತೀರ್ಮಾನಿಸಿ ಆರಂಭಿಸಿಯೇ ಬಿಟ್ಟೆವು. ಸಾಯಂಕಾಲ ೭ರಿಂದ ೭.೪೫ರವರೆಗೆ ಭಜನೆ, ೧೦ ನಿಮಿಷಗಳ ಕಾಲ ಸಾಮಯಿಕ ಮಹತ್ವದ ವಿಷಯದ ಕುರಿತು ಯಾರಾದರೂ ಒಬ್ಬರ ಮಾತು, ನಂತರ ಮಂಗಳಾರತಿ (ಯಾರ ಮನೆಯಲ್ಲಿ ಭಜನೆ ನಡೆಯುತ್ತಿತ್ತೋ ಆ ಮನೆಯವರು ಪೂಜಿಸುವ ದೇವರಿಗೆ), ಜೊತೆಗೆ ಭಾರತಮಾತಾ ನಮನವೂ ಇರುತ್ತಿತ್ತು. ಪ್ರಸಾದ ವಿನಿಯೋಗದೊಂದಿಗೆ ೮ರ ವೇಳೆಗೆ ಕಾರ್ಯಕ್ರಮ ಮುಗಿಯುತ್ತಿತ್ತು. ಸುಮಾರು ಎರಡು ವರ್ಷಗಳ ಕಾಲ ನಡೆದ ಈ ಕಾರ್ಯಕ್ರಮ ಶಾಂತಿನಗರ ಮತ್ತು ಹೇಮಾವತಿನಗರದ  ಅನೇಕರ ಮನೆಗಳಲ್ಲಿ ನಡೆದು, ಪರಸ್ಪರರಲ್ಲಿ ಸೌಹಾರ್ದತೆ, ಬಡಾವಣೆಯವರೆಲ್ಲಾ ಒಂದೇ ಕುಟುಂಬದವರು ಎಂಬ ಭಾವನೆ ಮೂಡಿಸುವಲ್ಲಿ ಯಶಸ್ವಿಯಾಗಿತ್ತು. ಇದರ ಫಲವಾಗಿ ಅಂಚೆ-ತಂತಿ ಗಣಪತಿ ದೇವಸ್ಥಾನದ ಆವರಣದಲ್ಲಿ ನಾವುಗಳೇ ರಾಮನವಮಿ ಉತ್ಸವವನ್ನು ಸುಮಾರು ೧೦ ವರ್ಷಗಳವರೆಗೆ ವಿಜೃಂಭಣೆಯಿಂದ ಮಾಡಿದ್ದೆವು. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ದೊಡ್ಡ ಮೆರವಣಿಗೆಗಳು ನಡೆಯುತ್ತಿದ್ದವು. ನಂತರದಲ್ಲಿ ಶ್ರೀಧರ್ ಸ್ವಂತ ಮನೆ ಈಶಾವಾಸ್ಯಮ್ವಾಸಿಯಾದರೆ ನಾನು ವರ್ಗಾವಣೆಯಾಗಿ ಬೇರೆ ಜಿಲ್ಲೆಗಳಲ್ಲಿ ಸುತ್ತುತ್ತಿದ್ದುದರಿಂದ ಈ ಕಾರ್ಯಕ್ರಮ ಸ್ಥಗಿತಗೊಂಡಿತು. ಶ್ರೀಧರ್ ಅರಸಿಕೆರೆಯ ತಾಲ್ಲೂಕು ಸಹಕಾರ್ಯವಾಹ ಮತ್ತು ನಂತರದಲ್ಲಿ ಜಿಲ್ಲಾಸಹಕಾರ್ಯವಾಹರಾಗಿ, ವಿಶ್ವ ಹಿಂದು ಪರಿಷತ್ತಿನ ಜಿಲ್ಲಾ ಕಾರ್ಯದರ್ಶಿಯಾಗಿ ಗಣನೀಯ ಕಾರ್ಯ ಮಾಡಿದ್ದಾರೆ. ಸಂಘದ ಜಿಲ್ಲಾ ಪ್ರಚಾರ ಪ್ರಮುಖರಾಗಿಯೂ ಅವರು ಜವಾಬ್ದಾರಿ ನಿರ್ವಹಿಸಿದ್ದರು.
     ಹಾಸನ ನಗರದಲ್ಲಿ ಸೇವಾಚಟುವಟಿಕೆಗಳನ್ನು ನಡೆಸಿಕೊಂಡು ಹೋಗುವ ಸಲುವಾಗಿ ಅಕ್ಟೋಬರ್, ೧೯೯೩ರಲ್ಲಿ ಸೇವಾಭಾರತಿ ಸಂಸ್ಥೆ ಉದಯವಾಗಿ ಅದಕ್ಕಾಗಿ ೧೩ ಸದಸ್ಯರ ತಂಡ ಜೋಡಿಸಲಾಯಿತು. ನಾನು ಈ ಸಂಸ್ಥೆಯ ಸಂಯೋಜಕರಾಗಿದ್ದರೆ, ಡಾ. ಗುರುರಾಜ ಹೆಬ್ಬಾರ್ ಅಧ್ಯಕ್ಷರು, ಡಾ. ವೈ.ಎಸ್. ವೀರಭದ್ರಪ್ಪ ಹಾಗೂ ಡಾ. ಭಾರತಿ ರಾಜಶೇಖರ್ ಉಪಾಧ್ಯಕ್ಷರು, ಶ್ರೀ ಹೆಚ್.ಬಿ ಲಕ್ಷ್ಮಣ್ ಕಾರ್ಯದರ್ಶಿ, ಶ್ರೀ ಸುಬ್ರಹ್ಮಣ್ಯ ಭಟ್ ಸಹಕಾರ್ಯದರ್ಶಿ, ಶ್ರೀ ಎಂ.ಎಸ್. ಶ್ರೀಕಂಠಯ್ಯ ಖಜಾಂಚಿಯಾಗಿದ್ದರೆ, ಸದಸ್ಯರುಗಳಾಗಿ ಶ್ರೀಯುತರಾದ ಹರಿಹರಪುರ ಶ್ರೀಧರ್, ಕೆ. ವೆಂಕಟಯ್ಯ, ನರಹರಿ, ಗಿರಿಜಮ್ಮ, ಸೀತಾಲಕ್ಷ್ಮಮ್ಮ, ಡಾ. ದೇವದಾಸ್‌ರವರು ಇದ್ದರು. ಆ ಸಮಯದಲ್ಲಿ ಶ್ರೀಧರ್ ಸಂಘದ ಜಿಲ್ಲಾ ಸೇವಾಪ್ರಮುಖ್ ಆಗಿ ಜವಾಬ್ದಾರಿ ಹೊಂದಿದ್ದರು. ಯೋಗ ಮತ್ತು ಸಂಸ್ಕೃತ ತರಗತಿಗಳು, ವೈದ್ಯಕೀಯ ಸೇವೆ, ಆಪ್ತ ಸಲಹಾ ಕೇಂದ್ರ ಮತ್ತು ಶಿಕ್ಷಣ ವಿಭಾಗಗಳಲ್ಲಿ ಸೇವಾ ಚಟುವಟಿಕೆಗಳನ್ನು ನಡೆಸಿಕೊಂಡು ಹೋಗಲು ನಿರ್ಧರಿಸಿದೆವು. ಹೆಸರಿಗೆ ೧೩ ಜನರ ತಂಡವಿದ್ದರೂ ಡಾ. ಗುರುರಾಜ ಹೆಬ್ಬಾರ್ ಮತ್ತು ಡಾ. ವೈ.ಎಸ್. ವೀರಭದ್ರಪ್ಪನವರ  ಅತ್ಯಮೂಲ್ಯ ಸಹಕಾರ ಪಡೆದು ನಿಜವಾಗಿ ಸೇವಾಭಾರತಿಯ ಕೆಲಸದಲ್ಲಿ ತೊಡಗಿಕೊಂಡವರು ನಾನು, ಶ್ರೀಧರ್ ಮತ್ತು ವಿಜಯಾ ಬ್ಯಾಂಕ್ ಉದ್ಯೋಗಿ ಲಕ್ಷ್ಮಣ್ ಮಾತ್ರ. ಇದು ವಾಸ್ತವ ಸಂಗತಿ. ಈ ಮೂವರ ತಂಡವನ್ನು  ಸೇವಾ ಆಟೋ ಎಂದು ಸ್ನೇಹಿತರು ಹಾಸ್ಯ ಮಾಡುತ್ತಿದ್ದರು. ೩ ಚಕ್ರಗಳ ಪೈಕಿ ಒಂದಕ್ಕೆ ತೊಂದರೆಯಾದರೂ ಸೇವಾ ಆಟೋ ಸಾಗುತ್ತಿರಲಿಲ್ಲ. ಈ ಆಟೋದ ಎಂಜಿನ್ ಹೆಬ್ಬಾರರಾಗಿದ್ದರು. ಸುಮಾರು ೪ ವರ್ಷಗಳ ಕಾಲ ಈ ಸೇವಾಚಟುವಟಿಕೆಗಳು ನಡೆದು ಜನಮನ್ನಣೆ ಗಳಿಸಿತ್ತು. ನಂತರದಲ್ಲಿ ಲಕ್ಷ್ಮಣ್ ಮೈಸೂರಿಗೆ ಮತ್ತು ನಾಗರಾಜ್ ಮಂಗಳೂರಿಗೆ ವರ್ಗಾವಣೆಗೊಂಡದ್ದರಿಂದ ನಡೆಯುತ್ತಿದ್ದ ಸೇವಾಚಟುವಟಿಕೆಗಳನ್ನು ಮುಂದುವರೆಸಲಾಗಿರಲಿಲ್ಲ. ಸೇವಾಭಾರತಿಯಿಂದ ಹಾಸನದ ಅಂಬೇಡ್ಕರ್ ನಗರ ಮತ್ತು ಸಿದ್ದಯ್ಯನಗರಗಳ ವ್ಯಾಪ್ತಿಯಲ್ಲಿ ೮ ಉಚಿತ ಆರೋಗ್ಯ ತಪಾಸಣಾ ಶಿಬಿರಗಳು, ಉಚಿತ ನೇತ್ರ ಶಸ್ತ್ರಚಿಕಿತ್ಸಾ ಶಿಬಿರ, ರಕ್ತದಾನಿಗಳ ವಿವರ ಸಂಗ್ರಹಿಸಿ ರಕ್ತದಾನ ಮಾಡುವ ವ್ಯವಸ್ಥೆ, ಸೇವಾದಿನದ ಆಚರಣೆ, ಸಂಸ್ಕೃತ ಸಂಭಾಷಣಾ ಶಿಬಿರಗಳು, ಸ್ವದೇಶಿ ಜಾಗರಣ ಆಂದೋಲನ, ವಿವಿಧ ಸಾಂಸ್ಕೃತಿಕ ಚಟುವಟಿಕೆಗಳು, ಶಾಂತಿನಗರ ಬಡಾವಣೆಯಲ್ಲಿ ಪಾರ್ಥೇನಿಯಂ ನಿರ್ಮೂಲನಾ ಕಾರ್ಯದ ಜೊತೆಗೆ ವಿನೂತನ ರೀತಿಯ ರಕ್ಷಾಬಂಧನ ಕಾರ್ಯಕ್ರಮ, ಇತ್ಯಾದಿ ಚಟುವಟಿಕೆಗಳು ಸುಮಾರು ನಾಲ್ಕು ವರ್ಷಗಳವರೆಗೆ ನಡೆದು ಜನಮನ್ನಣೆ ಗಳಿಸಿತ್ತು. ನಂತರದಲ್ಲಿ ನಾನು ತಹಸೀಲ್ದಾರನಾಗಿ ಮಂಗಳೂರಿಗೆ, ಲಕ್ಷ್ಮಣ್ ಮೈಸೂರಿಗೆ ವರ್ಗವಾಗಿ ಹೋದನಂತರದಲ್ಲಿ ಸೇವಾಭಾರತಿ ಚಟುವಟಿಕೆ ಸ್ತಬ್ಧವಾಯಿತು. ಈಗಲೂ ಯಾರಾದರೂ ತರುಣರು ಈ ಕಾರ್ಯ ಮುಂದುವರೆಸಲು ಮುಂದೆ ಬಂದಲ್ಲಿ ನನ್ನ ಮತ್ತು ಶ್ರೀಧರರ ಕ್ರಿಯಾತ್ಮಕ ಸಹಕಾರ ಸಿಗಲಿದೆ.
     ನಂತರದ ಮತ್ತು ಈಗಿನ ಚಟುವಟಿಕೆಗಳು ವೇದಭಾರತಿಯ ಯಶೋಗಾಥೆಯದು. ಶಿಕಾರಿಪುರ ಮತ್ತು ಶಿವಮೊಗ್ಗಗಳಲ್ಲಿ ಕಾರ್ಯ ನಿರ್ವಹಿಸಿ ೨೦೦೯ರ ಡಿಸೆಂಬರಿನಲ್ಲಿ ಸ್ವಯಂ ನಿವೃತ್ತಿ ಪಡೆದು ಹಾಸನಕ್ಕೆ ಬಂದೆ. ಶ್ರೀಧರ್ ಸಹ ಒಂದೆರಡು ವರ್ಷಗಳ ನಂತರ ಸ್ವಯಂ ನಿವೃತ್ತಿ ತೆಗೆದುಕೊಂಡರು. ವೇದಸುಧೆ ಅಂತರ್ಜಾಲದ ಬ್ಲಾಗ್ ಅನ್ನು ಶ್ರೀಧರ್ ತೆರೆದರು. ನನ್ನನ್ನು ಗೌರವ ಸಂಪಾದಕರಾಗಿರಲು ಮತ್ತು ಲೇಖನಗಳನ್ನು ಬರೆಯಲು ಕೋರಿದರು. ಈ ಬ್ಲಾಗ್ ಎಷ್ಟು ಜನಪ್ರಿಯವಾಯಿತೆಂದರೆ ಇದುವರೆಗೆ ಸುಮಾರು ಒಂದೂವರೆ ಲಕ್ಷಕ್ಕೂ ಹೆಚ್ಚು ಪುಟವೀಕ್ಷಣೆಗಳನ್ನು ಇದು ಕಂಡಿದೆ. ಬ್ಲಾಗಿನ ವಾರ್ಷಿಕೋತ್ಸವವನ್ನೂ ಆಚರಿಸಿದೆವು. ಶ್ರೀಧರ್ ಮತ್ತು ನನ್ನ ತಮ್ಮನ ಒತ್ತಾಯದ ಮೇರೆಗೆ ನನ್ನ ಮೂಢ ಉವಾಚ ಸಹ ಈ ಸಂದರ್ಭದಲ್ಲಿ ಬಿಡುಗಡೆಯಾಯಿತು. ವೇದಭಾರತಿಯ ಚಟುವಟಿಕೆಗಳ ಬಗ್ಗೆ ವಿವರಗಳು ಪ್ರಚುರವಾಗುತ್ತಲೇ ಇರುವುದರಿಂದ ಇಲ್ಲಿ ಪುನಃ ಅ ಬಗ್ಗೆ ವಿವರಿಸಹೋಗುವದಿಲ್ಲ. ತಮ್ಮ ಮನೆಯ ಹಾಲ್ ಅನ್ನೇ ಈ ಚಟುವಟಿಕೆಗಳಿಗೆ ಮೀಸಲಿಟ್ಟು ವೇದಭಾರತಿಯ ಬೆನ್ನೆಲುಬಾಗಿರುವ ಶ್ರೀಧರರಿಗೆ ಸಕ್ರಿಯ ಸಹಕಾರ, ಬೆಂಬಲಗಳನ್ನು ವೇದಭಾರತಿ ಕಾರ್ಯಕರ್ತರು ಹೀಗೆಯೇ ಮತ್ತು ಇನ್ನೂ ಹೆಚ್ಚಿನ ರೀತಿಯಲ್ಲಿ ಮುಂದುವರೆಸಲಿ ಎಂದು ಹಾರೈಸುವೆ.
      ಹಾಸನದಲ್ಲಿ ನಡೆದ ನಮ್ಮ ಕೆಳದಿ ಕವಿಮನೆತನದವರ ವಾರ್ಷಿಕ ಸಮಾವೇಶದಲ್ಲಿ ಅದು ತಮ್ಮದೇ ಕೆಲಸವೆಂಬಂತೆ ನನ್ನ ಹೆಗಲಿಗೆ ಹೆಗಲಾಗಿ ಶ್ರಮಿಸಿದ ಶ್ರೀಧರರಿಗೆ ನಾನು ಕೃತಜ್ಞ. ಜಿಲ್ಲಾ ಸಂಸ್ಕೃತ ಸಮ್ಮೇಳನದ ಬಗ್ಗೆ ಹೇಳಲೇಬೇಕು. ಸಮ್ಮೇಳನದ ಸಂಯೋಜಕರಾಗಿ ಸಮ್ಮೇಳನವು ರಾಜ್ಯದ ಬೇರೆ ಜಿಲ್ಲೆಗಳಲ್ಲಿ ನಡೆದ ಸಮ್ಮೇಳನಗಳಿಗಿಂತ ಅತ್ಯದ್ಭುತವಾಗಿ ಯಶಸ್ವಿಗೊಳಿಸಲು ಶ್ರೀಧರ್ ವಹಿಸಿದ ಶ್ರಮ ಅಭಿನಂದನೀಯ. ಅವರ ಸಂಘಟನಾ ಚತುರತೆ ಇಲ್ಲಿ ಫಲ ನೀಡಿತು. ಅವರು ಹಾಸನದ ಜನಮಿತ್ರ ಮತ್ತು ಜನಹಿತ ಪತ್ರಿಕೆಗಳಲ್ಲಿ, ವಿಕ್ರಮ ವಾರಪತ್ರಿಕೆಯಲ್ಲಿ ನಿರಂತರವಾಗಿ ವೇದದ ವಿಚಾರಗಳ ಬಗ್ಗೆ ಬರೆಯುತ್ತಿದ್ದ ಲೇಖನಗಳ ಸಂಗ್ರಹ ಜೀವನವೇದ ನಿಜಕ್ಕೂ ಒಂದು ಅದ್ಭುತ ಕೃತಿಯಾಗಿದ್ದು ಸಮ್ಮೇಳನದಲ್ಲಿ ಬಿಡುಗಡೆಯಾಯಿತು. ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವೂ ಆಗಿ ಜನಪ್ರಿಯವೆನಿಸಿರುವುದು ಹೆಮ್ಮೆಯ ಸಂಗತಿ.
     ಬರೆಯುತ್ತಾ ಹೋದರೆ ಮುಗಿಯಲಾರದು. ಸಂಕ್ಷಿಪ್ತವಾಗಿ ನನ್ನ ಮತ್ತು ಶ್ರೀಧರರ ದಶಕಗಳ ಒಡನಾಟದ ಕೆಲವು ಸಂದರ್ಭಗಳನ್ನು ಸ್ಮರಿಸಿಕೊಂಡಿರುವೆ. ಶ್ರೀಧರರಿಂದ ಇನ್ನೂ ಹೆಚ್ಚು ರಭಸದಲ್ಲಿ ಸಮಾಜಮುಖಿ ಚಟುವಟಿಕೆಗಳಿಗೆ ಚಾಲನೆ ಸಿಗಲಿ ಎಂದು ಹಾರೈಸುತ್ತೇನೆ. ಅವರಿಗೆ ಇನ್ನೂ ಹೆಚ್ಚಿನ ಧನ್ಯತೆ ಮತ್ತು ಮಾನ್ಯತೆ ಎರಡೂ ಸಿಗಲಿ ಎಂದು ಪುನಃ ಹಾರೈಸುತ್ತಾ, ಅವರಿಗೆ ನನ್ನ ಕ್ರಿಯಾತ್ಮಕ ಸಹಕಾರ ಸದಾ ಇರುತ್ತದೆಂದು ತಿಳಿಸುತ್ತಾ ಈ ಕೆಲವು ಸಾಲುಗಳನ್ನು ಅವರ ಅರವತ್ತರ ಸಂದರ್ಭಕ್ಕೆ ಉಡುಗೊರೆಯಾಗಿ ನೀಡಿರುವೆ.
"ಸೇವೆಯೆಂಬ ಯಜ್ಞದಲ್ಲಿ ಸಮಿದೆಯಂತೆ ಉರಿಯುವಾ"
-ಕ.ವೆಂ.ನಾಗರಾಜ್.
**************
ದಿನಾಂಕ 27.04.2015ರ ಜನಮಿತ್ರ ಪತ್ರಿಕೆಯಲ್ಲಿ ಪ್ರಕಟಿತ:


ಶನಿವಾರ, ಮಾರ್ಚ್ 28, 2015

ಪ್ರಖರ ಸತ್ಯವಾದಿ ಪಂ. ಸುಧಾಕರ ಚತುರ್ವೇದಿಯವರಿಗೆ 119 ವರ್ಷಗಳು - ಮಹಾನ್ ವ್ಯಕ್ತಿಯ ಮಾರ್ಗದರ್ಶನ ಸದಾ ನಮಗಿರಲಿ!


     ಮರ್ಯಾದಾ ಪುರುಷೋತ್ತಮ ಶ್ರೀರಾಮನ ಜನ್ಮದಿನದಂದೇ ಪ್ರಖರ ಸತ್ಯವಾದಿ, ನಂಬಿದ ಧ್ಯೇಯಕ್ಕಾಗಿ ಟೀಕೆ, ಟಿಪ್ಪಣಿಗಳಿಗೆ ಅಂಜದೆ ಹಿಡಿದ ಹಾದಿಯಲ್ಲಿಯೇ ಅಳುಕದೆ ಮುಂದುವರೆದು, ಸತ್ಯಪ್ರಸಾರ ಮಾಡುತ್ತಿರುವ ಕರ್ಮಯೋಗಿ, ಶತಾಯು ಪಂಡಿತ ಸುಧಾಕರ ಚತುರ್ವೇದಿಯವರ ಜನ್ಮದಿನವೂ ಆಗಿರುವುದು ವಿಶೇಷವೇ ಸರಿ. ಈ ರಾಮನವಮಿಗೆ (28.3.2015) 118ವಸಂತಗಳನ್ನು ಕಂಡು 119ನೆಯ ವರ್ಷಕ್ಕೆ ಕಾಲಿರಿಸಿರುವ ಅವರಿಗೆ ಶಿರಬಾಗಿ ಪ್ರಣಾಮಗಳನ್ನು ಸಲ್ಲಿಸುತ್ತಾ ಈ ಕೆಲವು ಸಾಲುಗಳನ್ನು ನಿಮ್ಮೊಡನೆ ಹಂಚಿಕೊಳ್ಳುತ್ತಿದ್ದೇನೆ. 
     ಪಂಡಿತ ಸುಧಾಕರ ಚತುರ್ವೇದಿಯವರ ಪೂರ್ವಿಕರು ತುಮಕೂರಿನ ಕ್ಯಾತ್ಸಂದ್ರದವರಾದರೂ ಇವರು ಹುಟ್ಟಿದ್ದು, ಬೆಳೆದಿದ್ದು ಎಲ್ಲಾ  ಬೆಂಗಳೂರಿನಲ್ಲಿಯೇ. ಶಿಕ್ಷಣ ಇಲಾಖೆಯಲ್ಲಿ ಇನ್ಸ್‌ಪೆಕ್ಟರ್ ಆಗಿದ್ದ ಶ್ರೀ ಟಿ.ವಿ. ಕೃಷ್ಣರಾವ್ ಮತ್ತು  ಶ್ರೀಮತಿ ಲಕ್ಷ್ಮಮ್ಮನವರ ಮಗನಾಗಿ ೧೮೯೭ರ ರಾಮನವಮಿಯಂದು ಬಳೇಪೇಟೆಯಲ್ಲಿದ್ದ ಮನೆಯಲ್ಲಿ ಜನಿಸಿದ ಇವರು ಸಂಪ್ರದಾಯಸ್ಥ ಬ್ರಾಹ್ಮಣ ಕುಟುಂಬಕ್ಕೆ ಸೇರಿದವರಾಗಿದ್ದರೂ ಅರ್ಥವಿಲ್ಲದ ಕುರುಡು ಸಂಪ್ರದಾಯಗಳನ್ನು ಒಪ್ಪದಿದ್ದವರು, ಸರಿ ಅನ್ನಿಸಿದ್ದನ್ನು ಮಾತ್ರ ಮಾಡಿದವರು. ನಾನು ಹಾಸನದವನೆಂದು ತಿಳಿದಾಗ, ಪಂಡಿತರು ತಮ್ಮ ತಂದೆ ಹಾಸನದ ಶಿಕ್ಷಣ ಇಲಾಖೆಯಲ್ಲೂ ಕೆಲಸ ನಿರ್ವಹಿಸಿದ್ದು ತಾವು ೬-೭ ವರ್ಷದವರಾಗಿದ್ದಾಗ -ಅಂದರೆ ಸುಮಾರು ೧೧೦ ವರ್ಷಗಳ ಹಿಂದೆ-  ಹಾಸನದ ದೇವಿಗೆರೆ ಸಮೀಪದಲ್ಲಿ ಬಾಡಿಗೆ ಮನೆಯೊಂದರಲ್ಲಿ ಕೆಲವು ಸಮಯ ಇದ್ದೆವೆಂದು ನೆನಪಿಸಿಕೊಂಡಿದ್ದರು.  ಅಪ್ಪಟ ಕನ್ನಡಿಗರಾದ ಪಂ. ಸುಧಾಕರ ಚತುರ್ವೇದಿಯವರು ತಮ್ಮ ೧೩ನೆಯ ವಯಸ್ಸಿನಲ್ಲಿಯೇ  ಉತ್ತರ ಭಾರತದ ಹರಿದ್ವಾರದ ಹತ್ತಿರದ ಕಾಂಗಡಿ ಗುರುಕುಲಕ್ಕೆ ಸೇರಿ ಉಪನಿಷತ್ತು, ವ್ಯಾಕರಣ, ಛಂದಸ್ಸು, ಗಣಿತ, ಜ್ಯೋತಿಷ್ಯ, ಷಡ್ದರ್ಶನಗಳು ಸೇರಿದಂತೆ ವೇದಾಧ್ಯಯನ ಮಾಡಿದವರು. ಮಹರ್ಷಿ ದಯಾನಂದ ಸರಸ್ವತಿಯವರ ವಿಚಾರಗಳಿಂದ ಪ್ರಭಾವ9ತರಾಗಿದ್ದು, ಸ್ವಾಮಿ ಶ್ರದ್ಧಾನಂದರ ಪ್ರೀತಿಯ ಶಿಷ್ಯರಾಗಿ ಬೆಳೆದವರು. ನಾಲ್ಕೂ ವೇದಗಳನ್ನು ಅಧ್ಯಯಿಸಿದ ಅವರು ನಿಜ ಅರ್ಥದಲ್ಲಿ ಚತುರ್ವೇದಿಯಾಗಿ, 'ಚತುರ್ವೇದಿ' ಎಂಬ ಸಾರ್ಥಕ ಹೆಸರು ಗಳಿಸಿದವರು.  ಜಾತಿ ಭೇದ ತೊಲಗಿಸಲು ಸಕ್ರಿಯವಾಗಿ ತೊಡಗಿಕೊಂಡವರು. ನೂರಾರು ಅಂತರ್ಜಾತೀಯ ವಿವಾಹಗಳನ್ನು ಮುಂದೆ ನಿಂತು ಮಾಡಿಸಿದವರು ಮತ್ತು ಅದಕ್ಕಾಗಿ ಬಂದ ವಿರೋಧಗಳನ್ನು ಎದುರಿಸಿದವರು. ವೇದದಲ್ಲಿ ವರ್ಣವ್ಯವಸ್ಥೆಯಿದೆಯೇ ಹೊರತು, ಹುಟ್ಟಿನಿಂದ ಬರುವ ಜಾತಿಪದ್ಧತಿ ಇಲ್ಲವೆಂದು ಪ್ರತಿಪಾದಿಸಿದವರು, ಮನುಷ್ಯರೆಲ್ಲಾ ಒಂದೇ ಜಾತಿ, ಬೇಕಾದರೆ ಗಂಡು ಜಾತಿ, ಹೆಣ್ಣುಜಾತಿ ಅನ್ನಬಹುದು ಎಂದವರು. ಸಾಹಿತಿಯಾಗಿಯೂ ಸಹ ಅನೇಕ ಕೃತಿಗಳನ್ನು ಜನಹಿತವನ್ನು ಮನದಲ್ಲಿ ಇಟ್ಟುಕೊಂಡೇ ಕನ್ನಡ, ಸಂಸ್ಕೃತ, ಇಂಗ್ಲಿಷ್, ಹಿಂದಿ ಭಾಷೆಗಳಲ್ಲಿ ರಚಿಸಿದವರು. 
     ಸ್ವಾತಂತ್ರ್ಯ ಹೋರಾಟದಲ್ಲಿ ತಮ್ಮನ್ನು ಸಕ್ರಿಯರಾಗಿ ತೊಡಗಿಸಿಕೊಂಡಿದ್ದ ಅವರು ಗಾಂಧೀಜಿಯವರ ಒಡನಾಟ ಹೊಂದಿದವರಾಗಿದ್ದರು. ಪಂಡಿತರು ಇದ್ದ ಗುರುಕುಲಕ್ಕೆ ಗಾಂಧೀಜಿಯವರು ಭೇಟಿ ಕೊಟ್ಟಿದ್ದ ಸಂದರ್ಭದಲ್ಲಿ ಇವರು ಗಾಂಧೀಜಿಯವರಿಂದ ಪ್ರಭಾವಿತರಾಗಿದ್ದಂತೆ, ಗಾಂಧೀಜಿಯವರೂ ಇವರಿಂದ ಪ್ರಭಾವಿತರಾಗಿದ್ದರು. ಗಾಂಧೀಜಿಯವರ ಹತ್ಯೆಯಾಗುವವರೆಗೂ ಇವರಿಬ್ಬರ ಸ್ನೇಹ ಮುಂದುವರೆದಿತ್ತು.  ಕುಪ್ರಸಿದ್ಧ ಜಲಿಯನ್ ವಾಲಾಬಾಗ್ ಹತ್ಯಾಕಾಂಡದ ಸಾಕ್ಷಿಯಾಗಿದ್ದ ಅವರು ಗಾಂಧೀಜಿಯವರ ಸೂಚನೆಯಂತೆ ಅಲ್ಲಿ ಹತರಾಗಿದ್ದವರ ನೂರಾರು ಶವಗಳ ಸಾಮೂಹಿಕ ಶವಸಂಸ್ಕಾರ ಮಾಡಿದವರು. ಕ್ರಾಂತಿಕಾರಿ ಭಗತ್ ಸಿಂಗರಿಗೆ ಗುರುವೂ ಆಗಿದ್ದವರು. ತಾವು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಲು ಸ್ವಾಮಿ ಶ್ರದ್ಧಾನಂದರ ಪ್ರೋತ್ಸಾಹ ಕಾರಣವಾದರೂ ವೇದದ 'ಅಧೀನಾಃ ಸ್ಯಾಮ ಶರದಃ ಶತಂ, ಭೂಯಶ್ಚ ಶರದಃ ಶತಾತ್' - 'ನೂರು ವರ್ಷಕ್ಕೂ ಹೆಚ್ಚುಕಾಲ ಸ್ವಾತಂತ್ರ್ಯದಿಂದ, ಆತ್ಮಗೌರವದಿಂದ ಬಾಳೋಣ' ಎಂಬ ಅರ್ಥದ ಸಾಲು ಸಂಗ್ರಾಮಕ್ಕೆ ಪ್ರೇರಿಸಿತ್ತು ಎಂದು ಹೇಳುತ್ತಾರೆ. ಭಾರತೀಯರನ್ನು ಕೀಳಾಗಿ ಕಾಣುತ್ತಿದ್ದ ಆಂಗ್ಲರ ನಡವಳಿಕೆ ಇವರ ಮತ್ತು ಇವರಂತಹ ಸಾವಿರಾರು ಜನರ ಸ್ವಾಭಿಮಾನವನ್ನು ಕೆಣಕಿ ಹೋರಾಟ ಕಾವು ಪಡೆದಿತ್ತು. ಹೋರಾಟ ಕಾಲದಲ್ಲಿ ಕೃಶ ಶರೀರದವರಾದರೂ ಇವರ ಮನೋಬಲ ಮತ್ತು ಛಲದಿಂದಾಗಿ ಅನೇಕ ಪ್ರಾಣಾಂತಿಕ ಪೆಟ್ಟುಗಳನ್ನು ಹಲವಾರು ಬಾರಿ ತಿಂದರೂ ಸಹಿಸಿ ಅರಗಿಸಿಕೊಂಡವರು. ದಂಡಿ ಉಪ್ಪಿನ ಸತ್ಯಾಗ್ರಹ, ಕ್ವಿಟ್ ಇಂಡಿಯಾ ಚಳುವಳಿ ಸೇರಿದಂತೆ ಅನೇಕ ಸತ್ಯಾಗ್ರಹಗಳಲ್ಲಿ ಸಕ್ರಿಯರಾಗಿ ಭಾಗವಹಿಸಿದ್ದವರು. ಸುಮಾರು ೧೫ ವರ್ಷಗಳ ಕಾಲ ಸೆರೆವಾಸ ಅನುಭವಿಸಿದವರು. ಭಾರತ-ಪಾಕಿಸ್ತಾನದ ವಿಭಜನೆಯ ಕಾಲದ ಭೀಕರ ಮಾರಣಹೋಮವನ್ನು ಕಂಡ ನೆನಪು ಮಾಸದೆ ಇರುವವರು. ಒಟ್ಟಿನಲ್ಲಿ ಹೇಳಬೇಕೆಂದರೆ ಇವರು ನಮ್ಮೊಡನಿರುವ  ಇತಿಹಾಸದ ನೈಜ ಜೀವಂತ ಪ್ರತಿನಿಧಿ.
     ವೇದ ಇವರ ಉಸಿರಾಗಿದೆ. ಸಾರ್ವಕಾಲಿಕ ಮೌಲ್ಯ ಸಾರುವ ವೇದಗಳ ಸಂದೇಶ ಸಾರುವುದೇ ಅವರ ಜೀವನ ಧ್ಯೇಯವಾಗಿದೆಯೆಂದರೆ ತಪ್ಪಿಲ್ಲ. ವೇದದ ಹೆಸರಿನಲ್ಲಿ ನಡೆಯುತ್ತಿರುವ ಅನೇಕ ಆಚರಣೆಗಳು ಅವೈದಿಕವಾಗಿರುವ ಬಗ್ಗೆ ಅಸಮಾಧಾನಿಯಾಗಿರುವ ಅವರು ಅಂತಹ ಆಚರಣೆಗಳನ್ನು ಖಂಡಿಸಿ ತಿಳುವಳಿಕೆ ನೀಡುವ ಕಾಯಕ ಮುಂದುವರೆಸಿದ್ದಾರೆ. 'ವೇದೋಕ್ತ ಜೀವನ ಪಥ'ವೆಂಬ ಕಿರು ಪುಸ್ತಕದಲ್ಲಿ ಜೀವನದ ಮೌಲ್ಯಗಳು, ಜೀವಾತ್ಮ, ಪರಮಾತ್ಮ, ಪ್ರಕೃತಿಗಳ ಸ್ವರೂಪ, ಮಾನವ ಧರ್ಮ, ಚತುರ್ವರ್ಣಗಳು, ಬ್ರಹ್ಮಚರ್ಯಾದಿ ಚತುರಾಶ್ರಮಗಳು, ದೈನಂದಿನ ಕರ್ಮಗಳು, ಷೋಡಶ ಸಂಸ್ಕಾರಗಳು, ರಾಜನೀತಿ, ಸಾಮಾಜಿಕ ಜೀವನ, ಚತುರ್ವಿಧ ಪುರುಷಾರ್ಥಗಳನ್ನು ವೇದದ ಹಿನ್ನೆಲೆಯಲ್ಲಿ ವಿಶ್ಲೇಷಿಸಿದ್ದು, ಅದರಂತೆ ನಡೆದದ್ದೇ ಆದಲ್ಲಿ ಜೀವನ ಸಾರ್ಥಕವಾಗುವುದು. 'ಅರವತ್ತಕ್ಕೆ ಅರಳು-ಮರಳು' ಎಂಬ ಪ್ರಚಲಿತ ಗಾದೆ ಮಾತಿಗೆ ವಿರುದ್ಧವಾಗಿ ಇಂದಿಗೂ ಪಂಡಿತರ ವೈಚಾರಿಕ ಪ್ರಖರತೆಯ ಹೊಳಪು ಮಾಸಿಲ್ಲ, ನೆನಪು ಕುಂದಿಲ್ಲ. ಇವರ ಜೀವನೋತ್ಸಾಹ ಬತ್ತದ ಚಿಲುಮೆಯಾಗಿದ್ದು ದೇಹ, ಮನಸ್ಸು, ಬುದ್ಧಿಗಳನ್ನು ಹಿಡಿತದಲ್ಲಿಟ್ಟುಕೊಂಡಿರುವುದೇ ಇದಕ್ಕೆ ಕಾರಣವಿರಬಹುದು. ಪ್ರಶಸ್ತಿ, ಸನ್ಮಾನಗಳಿಗಾಗಿ ಲಾಬಿ ನಡೆಸುವವರೇ ತುಂಬಿರುವ, ಅದಕ್ಕಾಗಿ ತಮ್ಮತನವನ್ನೇ ಮಾರಿಕೊಳ್ಳುವವರಿರುವ ಈ ದೇಶದಲ್ಲಿ ಪ್ರಚಾರದಿಂದ ದೂರವಿರುವ ಇವರು ನಿಜವಾದ ಭಾರತರತ್ನರೆಂದರೆ ತಪ್ಪಿಲ್ಲ. ಎರಡು ವರ್ಷಗಳ ಹಿಂದೆ ಕನ್ನಡ ರಾಜ್ಯೋತ್ಸವದಂದು ರಾಜ್ಯಸರ್ಕಾರ ಇವರನ್ನು ರಾಜ್ಯಪ್ರಶಸ್ತಿ ನೀಡಿ ಗೌರವಿಸಿದೆ. ಇಂತಹವರು ನಮ್ಮೊಡನೆ ಇರುವುದೇ ನಮ್ಮ ಸೌಭಾಗ್ಯ, ಪುಣ್ಯವೆನ್ನಬೇಕು. ಬೆಂಗಳೂರಿನ ಜಯನಗರದ ೫ನೆಯ ಬ್ಲಾಕಿನ ಶ್ರೀ ಕೃಷ್ಣಸೇವಾಶ್ರಮ ರಸ್ತ್ರೆಯ ಮನೆ ನಂ. ೨೮೬/ಸಿಯಲ್ಲಿ ವಾಸವಿರುವ ಇವರ ಮನೆಯಲ್ಲಿ ಪ್ರತಿ ಶನಿವಾರ ಸಾಯಂಕಾಲ ೫-೩೦ಕ್ಕೆ ಸರಿಯಾಗಿ ಸತ್ಸಂಗ ನಡೆಯುತ್ತಿದ್ದು, ಆಸಕ್ತರಿಗೆ ಮಾರ್ಗದರ್ಶನ ಮಾಡುತ್ತಿದ್ದಾರೆ. ಅವರ ವಿಚಾರಗಳನ್ನು ಒಪ್ಪಲೇಬೇಕೆಂದಿಲ್ಲ. ಎಲ್ಲವನ್ನೂ ಆಲೋಚಿಸಿ, ವಿಮರ್ಶಿಸಿಯೇ ಒಪ್ಪಬೇಕೆಂಬುದೇ ಅವರ ಆಗ್ರಹ. 
     ವೇದದ ಬೆಳಕಿನಲ್ಲಿ ಸತ್ಯ ವಿಚಾರಗಳನ್ನು ಪ್ರಸರಿಸುವ ಧ್ಯೇಯದಲ್ಲಿ ಅವಿರತ ತೊಡಗಿರುವ ಮಹಾನ್ ವ್ಯಕ್ತಿಯ ಮಾರ್ಗದರ್ಶನ ಹೀಗೆಯೇ ಮುಂದುವರೆಯುತ್ತಿರಲಿ ಎಂದು ಪ್ರಾರ್ಥಿಸೋಣ. ಕರ್ಮಯೋಗಿ ಸಾಧಕರಿಗೆ ಸಾಷ್ಟಾಂಗ ಪ್ರಣಾಮಗಳು. ಹಾಸನದ ವೇದಭಾರತಿ ಅವರ ವಿಚಾರಗಳನ್ನು ಅನುಷ್ಠಾನಗೊಳಿಸುವತ್ತ ಪುಟ್ಟದಾದರೂ ದಿಟ್ಟ ಹೆಜ್ಜೆಯನ್ನಿಟ್ಟಿದೆ.
-ಕ.ವೆಂ.ನಾಗರಾಜ್.
**************
ಪಂಡಿತರೊಡನೆ: 
[ಮೂರು ವರ್ಷಗಳ ಹಿಂದಿನ ಫೋಟೋ]


ಭಾನುವಾರ, ಜನವರಿ 4, 2015

ವಿಶಿಷ್ಟ ವ್ಯಕ್ತಿತ್ವದ ಡಾ. ಜೆಸ್ಸಿ(ಮಾಯಾ) ಜೆ.ಮರ್ಸೆ


     ಡಾ. ಜೆಸ್ಸಿ ಜೆ.ಮರ್ಸೆ ಪ್ರಸ್ತುತ ಅಮೆರಿಕಾದ ಮಾಯೊನಿಕ್ ಸೈನ್ಸಸ್ ಅಂಡ್ ಟೆಕ್ನೋಲಜಿ ಲಿ. ಯೂನಿವರ್ಸಿಟಿಯ ಚಾನ್ಸಲರ್ ಆಗಿದ್ದಾರೆ. ಅವರ ಗುರುಗಳಾದ ವಾಸ್ತು ವ್ಯಾಸ ದಿ. ಡಾ. ಗಣಪತಿ ಸ್ಥಪತಿ ಇವರ ಸಹಯೋಗದಲ್ಲಿ ಸಿದ್ಧಪಡಿಸಿದ ಸಿಲಬಸ್ಸಿನಂತೆ ಈ ಸಂಸ್ಥೆಯಲ್ಲಿ ಮಾಯೊನಿಕ್ ವಿಜ್ಞಾನ ಮತ್ತು ತಂತ್ರಜ್ಞಾನ, ವಾಸ್ತುಶಾಸ್ತ್ರ, ಸ್ಥಾಪತ್ಯವೇದದ ಅನುಸಾರ ಕಟ್ಟಡ ರಚನೆ ಮುಂತಾದ ವಿಷಯಗಳಲ್ಲಿ ತರಬೇತಿ ನೀಡಲಾಗುತ್ತಿದೆ. ಈ ವಿಷಯಗಳ ಕುರಿತು ಡಾ. ಮರ್‍ಸೇಯವರು ಹಲವಾರು ಪಠ್ಯಪುಸ್ತಕಗಳು ಮತ್ತು ಲೇಖನಗಳನ್ನು ಬರೆದಿದ್ದಾರೆ ಮತ್ತು ಹಲವಾರು ವೇದಿಕೆಗಳಲ್ಲಿ ಉಪನ್ಯಾಸಗಳನ್ನೂ ನೀಡಿದ್ದಾರೆ. ಹಲವಾರು ವರ್ಷಗಳ ಕಾಲ ಡಾ. ಗಣಪತಿ ಸ್ಥಪತಿಯವರ ಮತ್ತು ಮಹಾಮುನಿ ಮಾಯನ್‌ರವರ ಬರಹಗಳನ್ನು ಆಳವಾಗಿ ಅಧ್ಯಯನ ನಡೆಸಿದ್ದಾರೆ. ಡಾ. ಗಣಪತಿ ಸ್ಥಪತಿ ಇವರನ್ನು ಮಹಾಮುನಿ ಮಾಯನ್ ನೆನಪಿನಲ್ಲಿ ಮಾಯಾ ಎಂದು ಕರೆಯುತ್ತಿದ್ದರು.
     ಇವರು ಪ್ರಾಕೃತಿಕ ಚಿಕಿತ್ಸಾ ಮತ್ತು ವೈದ್ಯಪದ್ಧತಿಯಲ್ಲಿ ಸುಮಾರು ೨೫ ವರ್ಷಗಳ ಕಾಲ ಚಿಕಿತ್ಸಕರಾಗಿದ್ದರು. ಹಲವಾರು ಚಿಕಿತ್ಸಾ ಪದ್ಧತಿಗಳನ್ನು ಅಭಿವೃದ್ಧಿಪಡಿಸಿ ಕಾಯಿಲೆಗಳನ್ನು ಗುಣಪಡಿಸುವ ಇವರ ರೀತಿಗಳಿಗೆ ಇತರ ವೃತ್ತಿಪರರಿಂದಲೂ ಬೇಡಿಕೆಯಿತ್ತು. ಇದಕ್ಕೂ ಮುನ್ನ ಕಾಲೇಜಿನ ಪ್ರೊಫೆಸರ್ ಆಗಿ ಅಮೆರಿಕಾದ ಹಲವು ಯೂನಿವರ್‍ಸಿಟಿಗಳಲ್ಲಿ ರಚನಾತ್ಮಕತೆ, ಮಾಧ್ಯಮ, ಸಮಾಜಿಕತೆ ಮತ್ತು ದೃಷ್ಯ ಅಧ್ಯಯನಗಳ ಕುರಿತು ಬೋಧಿಸಿದ್ದರು. ಸುಮಾರು ೩೮ ವರ್ಷಗಳಿಗೂ ಹೆಚ್ಚು ಅವಧಿಯಲ್ಲಿ ಮಾನಸಿಕ ಕೇಂದ್ರಿತ ವ್ಯಕ್ತಿತ್ವ ಗುಣವರ್ಧನಾ ವಿಷಯಗಳು, ಧ್ಯಾನ, ಯೋಗ, ಅತೀಂದ್ರಿಯ ವಿಷಯ ಮತ್ತು ಚಿಕಿತ್ಸಾ ವಿಷಯಗಳಲ್ಲಿ ಅಮೆರಿಕಾದ್ಯಂತ ಹಲವಾರು ಸೆಮಿನಾರುಗಳನ್ನು ನಡೆಸಿದ್ದಾರೆ. ೧೯೮೦ರ ದಶಕದಲ್ಲಿ ಡಾ. ಮರ್‍ಸೇಯವರು ಹಲವಾರು ಕಂಪೆನಿಗಳಿಗೆ ತಂಡದ ರಚನೆ ಮತ್ತು ವ್ಯಕ್ತಿಗತ ಅಭಿವೃದ್ಧಿಗಳ ಕುರಿತು ಸಲಹಾಕಾರರಾಗಿ ಕೆಲಸ ಮಾಡಿದ್ದಾರೆ. ೧೯೭೦ರ ಅಂತ್ಯದಲ್ಲಿ ಅವರು ಚಿತ್ರೀಕರಣ, ವಿಡಿಯೋ ಹಾಗೂ ವ್ಯವಹಾರ ಮತ್ತು ಶಿಕ್ಷಣದ ಸಲುವಾಗಿ ಬಹುವಿಧ ಮಾಧ್ಯಮವನ್ನು ಸ್ಥಾಪಿಸಿ ಕಾರ್ಯ ಮಾಡಿದ್ದರು. 
     ಡಾ.ಮರ್‍ಸೇಯವರು ಒಬ್ಬ ಸೈನ್ಯದ ಅಧಿಕಾರಿಯೂ ಆಗಿ ೭ ವರ್ಷಗಳ ಕಾಲ ಸೇವೆ ಸಲ್ಲಿಸಿ ಹಲವು ಪ್ರಶಸ್ತಿಗಳು ಮತ್ತು ಗೌರವಗಳನ್ನು ಪಡೆದಿದ್ದಾರೆ. ಸೈನ್ಯದಲ್ಲಿ ಅವರು ಸಿಬ್ಬಂದಿ ವ್ಯವಸ್ಥೆ ಮತ್ತು ತರಬೇತಿಯ ಜವಾಬ್ದಾರಿ ಹೊಂದಿ ತರಬೇತಿ ಮತ್ತು ಪರೀಕ್ಷೆಗಳಿಗಾಗಿ ರೂಪುರೇಷೆಗಳನ್ನು ಸಿದ್ಧಪಡಿಸಿದ್ದರು. ಸಿಬ್ಬಂದಿ ವ್ಯವಸ್ಥಾಪಕರಾಗಿ ಅವರು ೧೭೦೦೦ ಸಿಬ್ಬಂದಿ ನೇಮಕಾತಿಗೆ ಕಾರಣರಾಗಿದ್ದರು.
     ಚಿಕ್ಕ ವಯಸ್ಸಿನಲ್ಲೇ ನ್ಯೂಯಾರ್ಕಿನ ತಮ್ಮ ತಂದೆಯ ಡೈರಿ ಫಾರ್ಮಿನಲ್ಲಿ ಕಟ್ಟಡಗಳನ್ನು ರಚಿಸಲು ಅವರು ಪ್ರಾರಂಭಿಸಿದ್ದರು. ಈ ಕಟ್ಟಡಗಳ ರಚನೆ, ಪುನರ್ನಿರ್ಮಾಣಗಳ ಪ್ರವೃತ್ತಿಯನ್ನು ಜೀವನಪೂರ್ತಿ ಮುಂದುವರೆಸಿಕೊಂಡು ಅವರು ೪೦ ವರ್ಷಗಳಿಗೂ ಹೆಚ್ಚುಕಾಲದಿಂದ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ೧೯೯೦ರಲ್ಲಿ ಅವರು ಮನೆಗಳನ್ನು ಖರೀದಿಸಿ ಪುನರ್ವಿನ್ಯಾಸಗೊಳಿಸಿ ಮಾರುವ ಒಂದು ಕಂಪೆನಿಯನ್ನು ಪ್ರಾರಂಭಿಸಿದರು. ಕಾಲಾಂತರದಲ್ಲಿ ಡಾ. ಸ್ಥಪತಿಯವರೊಂದಿಗೆ ಅಧ್ಯಯನದ ನಂತರ ಅದು ವಾಸ್ತು ಪ್ರಕಾರ ಮಾಯೊನಿಕ್ ವಿಜ್ಞಾನ ಮತ್ತು ತಂತ್ರಜ್ಞಾನ ಅನುಸರಿಸಿ ಪುನರ್ವಿನ್ಯಾಸಗೊಳಿಸುವಲ್ಲಿ ಬದಲಾಯಿತು.
     ಡಾ. ಮರ್‍ಸೇಯವರು ಸಮಾಜವಿಜ್ಞಾನ ಮತ್ತು ಸಾಮಾಜಿಕ ಕಾರ್ಯದ ವಿಷಯಗಳಲ್ಲಿ ಬಿ.ಎ. ಪದವಿ, ಸಂವಹನ ಮತ್ತು ಮಲ್ಟಿ ಮಿಡಿಯಾಗಳಲ್ಲಿ ಎಂ.ಎ. ಪದವಿ, ಪ್ರಾಕೃತಿಕ ವೈದ್ಯದಲ್ಲಿ ಡಾಕ್ಟೊರೇಟ್ ಮತ್ತು ಸೈಕಾಲಜಿಕಲ್ ಅಂಡ್ ಕ್ವಾಂಟಿಟೇಟಿವ್ ಫೌಂಡೇಶನ್ನುಗಳಲ್ಲಿ ಪಿ.ಹೆಚ್.ಡಿ. ಗಳಿಸಿದ್ದು, ದೃಶ್ಯ ಶಿಕ್ಷಣ ವಿಸುಯಲ್ ಆಂಥ್ರೊಪಾಲಜಿ (ಕ್ರಿಯಾತ್ಮಕತೆ ಮತ್ತು ಮಾನವ ಸಂವೇದನೆ) ಬೋಧನೆ ಮತ್ತು ಕಲಿಕೆಗೆ ಸಂಬಂಧಿಸಿದ ಸೂಚನಾತ್ಮಕ ವಿನ್ಯಾಸ ತಯಾರಿಕೆಗಳಲ್ಲಿ ವಿಶೇಷ ಪರಿಣಿತಿ ಹೊಂದಿದ್ದಾರೆ. ಅವರ ವಿಚಾರಗಳನ್ನು Visualizer –Verbalizer Cognitive Styles ಎಂಬ ರ್ಶೀಕೆಯಲ್ಲಿ ಪ್ರಕಟಿಸಿದ್ದಾರೆ. ಧ್ಯಾನ ಮತ್ತು ವೇದವಿಚಾರಗಳಲ್ಲಿ ೪೦ ವರ್ಷಗಳಿಗೂ ಮೇಲ್ಪಟ್ಟು ಅವಧಿಯ ವಿದ್ಯಾರ್ಥಿಯಾಗಿದ್ದಾರೆ. ಅವರಲ್ಲಿ ಮಾಯೊನಿಕ್ ವಿಜ್ಞಾನ ಮತ್ತು ತಂತ್ರಜ್ಞಾನ ಪೂರ್ಣಗೊಳಿಸಿದ ಮತ್ತು ಡಾಕ್ಟೊರೇಟ್ ಪಡೆದ ಪ್ರಮಾಣಪತ್ರಗಳಿವೆ. ಆಳವಾದ ಅಧ್ಯಯನ ಮಾಡಿರುವ ಅವರು ಈ ವಿಷಯಗಳ ಕುರಿತು (ಮಾಯೊನಿಕ್ ವಿಜ್ಞಾನ ಮತ್ತು ತಂತ್ರಜ್ಞಾನ, ವಾಸ್ತು ಶಾಸ್ತ್ರಗಳು, ಸ್ಥಾಪತ್ಯ ವೇದದ ಕಟ್ಟಡ ವಿನ್ಯಾಸ) Fabric of The Universe: The Origins, Implications, and Applications of Vastu Science and Vaastu Science and technology  ಎಂಬ ರ್ಶೀಕೆಯ ಪುಸ್ತಕದಲ್ಲಿ ಮಂಡಿಸಿದ ವಿಚಾರಕ್ಕೆ ಪ್ರೋತ್ಸಾಹಕರ ಪುಸ್ತಕ ವಿಮರ್ಶೆಗಳು ಬಂದಿವೆ. 
     ಇವರ ವ್ಯಾಪಕವಾದ ಜೀವನಾನುಭವ ಮತ್ತು ಶಿಕ್ಷಣ ಹಾಗೂ ವಾಸ್ತು ವ್ಯಾಸ ಡಾ. ವಿ. ಗಣಪತಿ ಸ್ಥಪತಿಯವರ ಮಾರ್ಗದರ್ಶನದಲ್ಲಿ ಮಾಯೊನಿಕ್ ಸೈನ್ಸಸ್ ಅಂಡ್ ಟೆಕ್ನೋಲಜಿ ಯೂನಿವರ್‍ಸಿಟಿ ಒಂದು ಉತ್ತಮವಾದ ಮತ್ತು ಘನವಾದ ಮಾಯೊನಿಕ್ ವಿಜ್ಞಾನ ಮತ್ತು ತಂತ್ರಜ್ಞಾನ (ವಾಸ್ತುಶಾಸ್ತ್ರ ಮತ್ತು ಸ್ಥಾಪತ್ಯ ವೇದದ ಕಟ್ಟಡ ವಿನ್ಯಾಸ ನಿರ್ಮಾಣ) ಕಲಿಕೆಯ ಕೇಂದ್ರವಾಗಿದೆ. ಡಾ. ಮರ್‍ಸೇಯವರು ಶಾಸ್ತ್ರಗಳಿಂದ ಸಂಕೀರ್ಣವಾದ ಮತ್ತು ವಿವಿಧ ಮಾಹಿತಿಗಳನ್ನು ಕ್ರೋಢೀಕರಿಸಿ ಅದನ್ನು ಪಾಶ್ಚಿಮಾತ್ಯ ಮನಸ್ಸುಗಳಿಗೆ ದೊರೆಯುವಂತೆ ಮಾಡಿದ್ದಾರೆ. ಅವರ ಗುರಿ ಮಾಯೊನಿಕ್ ವಿಜ್ಞಾನ ಮತ್ತು ತಂತ್ರಜ್ಞಾನ, ವಾಸ್ತು ವಿನ್ಯಾಸ, ಪಾರಂಪರಿಕ ಭಾರತೀಯ ವಿನ್ಯಾಸ ಮತ್ತು ಸ್ಥಾಪತ್ಯ ವೇದದ ಅನುಸಾರ ಕಟ್ಟಡ ವಿನ್ಯಾಸ ಕುರಿತು ಒಂದು ಅಧಿಕೃತವಾದ ಮಾದರಿ ಶಿಕ್ಷಣ ಮತ್ತು ಕಲಿಕೆಯನ್ನು ಅಭಿವೃದ್ಧಿಪಡಿಸಿ ಅದನ್ನು ಅಮೆರಿಕಾದಲ್ಲಿ ಪ್ರಚುರಿಸುವುದಾಗಿದೆ. 
-ಕ.ವೆಂ.ನಾಗರಾಜ್.
***************
[ಡಾ. ಜೆಸ್ಸಿಯವರ ಶಿಷ್ಯ ಅಭಿಲಾಷ್ ನೀಡಿದ ವಿವರಗಳನ್ನು ಆಧರಿಸಿದೆ.]

ಮಂಗಳವಾರ, ಏಪ್ರಿಲ್ 8, 2014

ಇತಿಹಾಸದ ನೈಜ, ಜೀವಂತ ಪ್ರತಿನಿಧಿ: ೧೧೮ನೆಯ ವರ್ಷಕ್ಕೆ ಕಾಲಿರಿಸಿರುವ ಪಂ. ಸುಧಾಕರ ಚತುರ್ವೇದಿ

     ಮರ್ಯಾದಾ ಪುರುಷೋತ್ತಮ ಶ್ರೀರಾಮನ ಜನ್ಮದಿನದಂದೇ ಪ್ರಖರ ಸತ್ಯವಾದಿ, ನಂಬಿದ ಧ್ಯೇಯಕ್ಕಾಗಿ ಟೀಕೆ, ಟಿಪ್ಪಣಿಗಳಿಗೆ ಅಂಜದೆ ಹಿಡಿದ ಹಾದಿಯಲ್ಲಿಯೇ ಅಳುಕದೆ ಮುಂದುವರೆದು, ಸತ್ಯಪ್ರಸಾರ ಮಾಡುತ್ತಿರುವ ಕರ್ಮಯೋಗಿ, ಶತಾಯು ಪಂಡಿತ ಸುಧಾಕರ ಚತುರ್ವೇದಿಯವರ ಜನ್ಮದಿನವೂ ಆಗಿರುವುದು ವಿಶೇಷವೇ ಸರಿ. ಈ ರಾಮನವಮಿಗೆ (೮-೦೪-೨೦೧೪) ೧೧೭ ವಸಂತಗಳನ್ನು ಕಂಡು ೧೧೮ನೆಯ ವರ್ಷಕ್ಕೆ ಕಾಲಿರಿಸಿರುವ ಅವರಿಗೆ ಶಿರಬಾಗಿ ಪ್ರಣಾಮಗಳನ್ನು ಸಲ್ಲಿಸುತ್ತಾ ಈ ಕೆಲವು ಸಾಲುಗಳನ್ನು ನಿಮ್ಮೊಡನೆ ಹಂಚಿಕೊಳ್ಳುತ್ತಿದ್ದೇನೆ. 
     ಪಂಡಿತ ಸುಧಾಕರ ಚತುರ್ವೇದಿಯವರ ಪೂರ್ವಿಕರು ತುಮಕೂರಿನ ಕ್ಯಾತ್ಸಂದ್ರದವರಾದರೂ ಇವರು ಹುಟ್ಟಿದ್ದು, ಬೆಳೆದಿದ್ದು ಎಲ್ಲಾ  ಬೆಂಗಳೂರಿನಲ್ಲಿಯೇ. ಶಿಕ್ಷಣ ಇಲಾಖೆಯಲ್ಲಿ ಇನ್ಸ್‌ಪೆಕ್ಟರ್ ಆಗಿದ್ದ ಶ್ರೀ ಟಿ.ವಿ. ಕೃಷ್ಣರಾವ್ ಮತ್ತು  ಶ್ರೀಮತಿ ಲಕ್ಷ್ಮಮ್ಮನವರ ಮಗನಾಗಿ ೧೮೯೭ರ ರಾಮನವಮಿಯಂದು ಬಳೇಪೇಟೆಯಲ್ಲಿದ್ದ ಮನೆಯಲ್ಲಿ ಜನಿಸಿದ ಇವರು ಸಂಪ್ರದಾಯಸ್ಥ ಬ್ರಾಹ್ಮಣ ಕುಟುಂಬಕ್ಕೆ ಸೇರಿದವರಾಗಿದ್ದರೂ ಅರ್ಥವಿಲ್ಲದ ಕುರುಡು ಸಂಪ್ರದಾಯಗಳನ್ನು ಒಪ್ಪದಿದ್ದವರು, ಸರಿ ಅನ್ನಿಸಿದ್ದನ್ನು ಮಾತ್ರ ಮಾಡಿದವರು. ನಾನು ಹಾಸನದವನೆಂದು ತಿಳಿದಾಗ, ಪಂಡಿತರು ತಮ್ಮ ತಂದೆ ಹಾಸನದ ಶಿಕ್ಷಣ ಇಲಾಖೆಯಲ್ಲೂ ಕೆಲಸ ನಿರ್ವಹಿಸಿದ್ದು ತಾವು ೬-೭ ವರ್ಷದವರಾಗಿದ್ದಾಗ -ಅಂದರೆ ಸುಮಾರು ೧೧೦ ವರ್ಷಗಳ ಹಿಂದೆ-  ಹಾಸನದ ದೇವಿಗೆರೆ ಸಮೀಪದಲ್ಲಿ ಬಾಡಿಗೆ ಮನೆಯೊಂದರಲ್ಲಿ ಕೆಲವು ಸಮಯ ಇದ್ದೆವೆಂದು ನೆನಪಿಸಿಕೊಂಡಿದ್ದರು.  ಅಪ್ಪಟ ಕನ್ನಡಿಗರಾದ ಪಂ. ಸುಧಾಕರ ಚತುರ್ವೇದಿಯವರು ತಮ್ಮ ೧೩ನೆಯ ವಯಸ್ಸಿನಲ್ಲಿಯೇ  ಉತ್ತರ ಭಾರತದ ಹರಿದ್ವಾರದ ಹತ್ತಿರದ ಕಾಂಗಡಿ ಗುರುಕುಲಕ್ಕೆ ಸೇರಿ ಉಪನಿಷತ್ತು, ವ್ಯಾಕರಣ, ಛಂದಸ್ಸು, ಗಣಿತ, ಜ್ಯೋತಿಷ್ಯ, ಷಡ್ದರ್ಶನಗಳು ಸೇರಿದಂತೆ ವೇದಾಧ್ಯಯನ ಮಾಡಿದವರು. ಮಹರ್ಷಿ ದಯಾನಂದ ಸರಸ್ವತಿಯವರ ವಿಚಾರಗಳಿಂದ ಪ್ರಭಾವ9ತರಾಗಿದ್ದು, ಸ್ವಾಮಿ ಶ್ರದ್ಧಾನಂದರ ಪ್ರೀತಿಯ ಶಿಷ್ಯರಾಗಿ ಬೆಳೆದವರು. ನಾಲ್ಕೂ ವೇದಗಳನ್ನು ಅಧ್ಯಯಿಸಿದ ಅವರು ನಿಜ ಅರ್ಥದಲ್ಲಿ ಚತುರ್ವೇದಿಯಾಗಿ, 'ಚತುರ್ವೇದಿ' ಎಂಬ ಸಾರ್ಥಕ ಹೆಸರು ಗಳಿಸಿದವರು.  ಜಾತಿ ಭೇದ ತೊಲಗಿಸಲು ಸಕ್ರಿಯವಾಗಿ ತೊಡಗಿಕೊಂಡವರು. ನೂರಾರು ಅಂತರ್ಜಾತೀಯ ವಿವಾಹಗಳನ್ನು ಮುಂದೆ ನಿಂತು ಮಾಡಿಸಿದವರು ಮತ್ತು ಅದಕ್ಕಾಗಿ ಬಂದ ವಿರೋಧಗಳನ್ನು ಎದುರಿಸಿದವರು. ವೇದದಲ್ಲಿ ವರ್ಣವ್ಯವಸ್ಥೆಯಿದೆಯೇ ಹೊರತು, ಹುಟ್ಟಿನಿಂದ ಬರುವ ಜಾತಿಪದ್ಧತಿ ಇಲ್ಲವೆಂದು ಪ್ರತಿಪಾದಿಸಿದವರು, ಮನುಷ್ಯರೆಲ್ಲಾ ಒಂದೇ ಜಾತಿ, ಬೇಕಾದರೆ ಗಂಡು ಜಾತಿ, ಹೆಣ್ಣುಜಾತಿ ಅನ್ನಬಹುದು ಎಂದವರು. ಸಾಹಿತಿಯಾಗಿಯೂ ಸಹ ಅನೇಕ ಕೃತಿಗಳನ್ನು ಜನಹಿತವನ್ನು ಮನದಲ್ಲಿ ಇಟ್ಟುಕೊಂಡೇ ಕನ್ನಡ, ಸಂಸ್ಕೃತ, ಇಂಗ್ಲಿಷ್, ಹಿಂದಿ ಭಾಷೆಗಳಲ್ಲಿ ರಚಿಸಿದವರು. 
     ಸ್ವಾತಂತ್ರ್ಯ ಹೋರಾಟದಲ್ಲಿ ತಮ್ಮನ್ನು ಸಕ್ರಿಯರಾಗಿ ತೊಡಗಿಸಿಕೊಂಡಿದ್ದ ಅವರು ಗಾಂಧೀಜಿಯವರ ಒಡನಾಟ ಹೊಂದಿದವರಾಗಿದ್ದರು. ಪಂಡಿತರು ಇದ್ದ ಗುರುಕುಲಕ್ಕೆ ಗಾಂಧೀಜಿಯವರು ಭೇಟಿ ಕೊಟ್ಟಿದ್ದ ಸಂದರ್ಭದಲ್ಲಿ ಇವರು ಗಾಂಧೀಜಿಯವರಿಂದ ಪ್ರಭಾವಿತರಾಗಿದ್ದಂತೆ, ಗಾಂಧೀಜಿಯವರೂ ಇವರಿಂದ ಪ್ರಭಾವಿತರಾಗಿದ್ದರು. ಗಾಂಧೀಜಿಯವರ ಹತ್ಯೆಯಾಗುವವರೆಗೂ ಇವರಿಬ್ಬರ ಸ್ನೇಹ ಮುಂದುವರೆದಿತ್ತು.  ಕುಪ್ರಸಿದ್ಧ ಜಲಿಯನ್ ವಾಲಾಬಾಗ್ ಹತ್ಯಾಕಾಂಡದ ಸಾಕ್ಷಿಯಾಗಿದ್ದ ಅವರು ಗಾಂಧೀಜಿಯವರ ಸೂಚನೆಯಂತೆ ಅಲ್ಲಿ ಹತರಾಗಿದ್ದವರ ನೂರಾರು ಶವಗಳ ಸಾಮೂಹಿಕ ಶವಸಂಸ್ಕಾರ ಮಾಡಿದವರು. ಕ್ರಾಂತಿಕಾರಿ ಭಗತ್ ಸಿಂಗರಿಗೆ ಗುರುವೂ ಆಗಿದ್ದವರು. ತಾವು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಲು ಸ್ವಾಮಿ ಶ್ರದ್ಧಾನಂದರ ಪ್ರೋತ್ಸಾಹ ಕಾರಣವಾದರೂ ವೇದದ 'ಅಧೀನಾಃ ಸ್ಯಾಮ ಶರದಃ ಶತಂ, ಭೂಯಶ್ಚ ಶರದಃ ಶತಾತ್' - 'ನೂರು ವರ್ಷಕ್ಕೂ ಹೆಚ್ಚುಕಾಲ ಸ್ವಾತಂತ್ರ್ಯದಿಂದ, ಆತ್ಮಗೌರವದಿಂದ ಬಾಳೋಣ' ಎಂಬ ಅರ್ಥದ ಸಾಲು ಸಂಗ್ರಾಮಕ್ಕೆ ಪ್ರೇರಿಸಿತ್ತು ಎಂದು ಹೇಳುತ್ತಾರೆ. ಭಾರತೀಯರನ್ನು ಕೀಳಾಗಿ ಕಾಣುತ್ತಿದ್ದ ಆಂಗ್ಲರ ನಡವಳಿಕೆ ಇವರ ಮತ್ತು ಇವರಂತಹ ಸಾವಿರಾರು ಜನರ ಸ್ವಾಭಿಮಾನವನ್ನು ಕೆಣಕಿ ಹೋರಾಟ ಕಾವು ಪಡೆದಿತ್ತು. ಹೋರಾಟ ಕಾಲದಲ್ಲಿ ಕೃಶ ಶರೀರದವರಾದರೂ ಇವರ ಮನೋಬಲ ಮತ್ತು ಛಲದಿಂದಾಗಿ ಅನೇಕ ಪ್ರಾಣಾಂತಿಕ ಪೆಟ್ಟುಗಳನ್ನು ಹಲವಾರು ಬಾರಿ ತಿಂದರೂ ಸಹಿಸಿ ಅರಗಿಸಿಕೊಂಡವರು. ದಂಡಿ ಉಪ್ಪಿನ ಸತ್ಯಾಗ್ರಹ, ಕ್ವಿಟ್ ಇಂಡಿಯಾ ಚಳುವಳಿ ಸೇರಿದಂತೆ ಅನೇಕ ಸತ್ಯಾಗ್ರಹಗಳಲ್ಲಿ ಸಕ್ರಿಯರಾಗಿ ಭಾಗವಹಿಸಿದ್ದವರು. ಸುಮಾರು ೧೫ ವರ್ಷಗಳ ಕಾಲ ಸೆರೆವಾಸ ಅನುಭವಿಸಿದವರು. ಭಾರತ-ಪಾಕಿಸ್ತಾನದ ವಿಭಜನೆಯ ಕಾಲದ ಭೀಕರ ಮಾರಣಹೋಮವನ್ನು ಕಂಡ ನೆನಪು ಮಾಸದೆ ಇರುವವರು. ಒಟ್ಟಿನಲ್ಲಿ ಹೇಳಬೇಕೆಂದರೆ ಇವರು ನಮ್ಮೊಡನಿರುವ  ಇತಿಹಾಸದ ನೈಜ ಜೀವಂತ ಪ್ರತಿನಿಧಿ.
     ವೇದ ಇವರ ಉಸಿರಾಗಿದೆ. ಸಾರ್ವಕಾಲಿಕ ಮೌಲ್ಯ ಸಾರುವ ವೇದಗಳ ಸಂದೇಶ ಸಾರುವುದೇ ಅವರ ಜೀವನ ಧ್ಯೇಯವಾಗಿದೆಯೆಂದರೆ ತಪ್ಪಿಲ್ಲ. ವೇದದ ಹೆಸರಿನಲ್ಲಿ ನಡೆಯುತ್ತಿರುವ ಅನೇಕ ಆಚರಣೆಗಳು ಅವೈದಿಕವಾಗಿರುವ ಬಗ್ಗೆ ಅಸಮಾಧಾನಿಯಾಗಿರುವ ಅವರು ಅಂತಹ ಆಚರಣೆಗಳನ್ನು ಖಂಡಿಸಿ ತಿಳುವಳಿಕೆ ನೀಡುವ ಕಾಯಕ ಮುಂದುವರೆಸಿದ್ದಾರೆ. 'ವೇದೋಕ್ತ ಜೀವನ ಪಥ'ವೆಂಬ ಕಿರು ಪುಸ್ತಕದಲ್ಲಿ ಜೀವನದ ಮೌಲ್ಯಗಳು, ಜೀವಾತ್ಮ, ಪರಮಾತ್ಮ, ಪ್ರಕೃತಿಗಳ ಸ್ವರೂಪ, ಮಾನವ ಧರ್ಮ, ಚತುರ್ವರ್ಣಗಳು, ಬ್ರಹ್ಮಚರ್ಯಾದಿ ಚತುರಾಶ್ರಮಗಳು, ದೈನಂದಿನ ಕರ್ಮಗಳು, ಷೋಡಶ ಸಂಸ್ಕಾರಗಳು, ರಾಜನೀತಿ, ಸಾಮಾಜಿಕ ಜೀವನ, ಚತುರ್ವಿಧ ಪುರುಷಾರ್ಥಗಳನ್ನು ವೇದದ ಹಿನ್ನೆಲೆಯಲ್ಲಿ ವಿಶ್ಲೇಷಿಸಿದ್ದು, ಅದರಂತೆ ನಡೆದದ್ದೇ ಆದಲ್ಲಿ ಜೀವನ ಸಾರ್ಥಕವಾಗುವುದು. 'ಅರವತ್ತಕ್ಕೆ ಅರಳು-ಮರಳು' ಎಂಬ ಪ್ರಚಲಿತ ಗಾದೆ ಮಾತಿಗೆ ವಿರುದ್ಧವಾಗಿ ಇಂದಿಗೂ ಪಂಡಿತರ ವೈಚಾರಿಕ ಪ್ರಖರತೆಯ ಹೊಳಪು ಮಾಸಿಲ್ಲ, ನೆನಪು ಕುಂದಿಲ್ಲ. ಇವರ ಜೀವನೋತ್ಸಾಹ ಬತ್ತದ ಚಿಲುಮೆಯಾಗಿದ್ದು ದೇಹ, ಮನಸ್ಸು, ಬುದ್ಧಿಗಳನ್ನು ಹಿಡಿತದಲ್ಲಿಟ್ಟುಕೊಂಡಿರುವುದೇ ಇದಕ್ಕೆ ಕಾರಣವಿರಬಹುದು. ಪ್ರಶಸ್ತಿ, ಸನ್ಮಾನಗಳಿಗಾಗಿ ಲಾಬಿ ನಡೆಸುವವರೇ ತುಂಬಿರುವ, ಅದಕ್ಕಾಗಿ ತಮ್ಮತನವನ್ನೇ ಮಾರಿಕೊಳ್ಳುವವರಿರುವ ಈ ದೇಶದಲ್ಲಿ ಪ್ರಚಾರದಿಂದ ದೂರವಿರುವ ಇವರು ನಿಜವಾದ ಭಾರತರತ್ನರೆಂದರೆ ತಪ್ಪಿಲ್ಲ. ಎರಡು ವರ್ಷಗಳ ಹಿಂದೆ ಕನ್ನಡ ರಾಜ್ಯೋತ್ಸವದಂದು ರಾಜ್ಯಸರ್ಕಾರ ಇವರನ್ನು ರಾಜ್ಯಪ್ರಶಸ್ತಿ ನೀಡಿ ಗೌರವಿಸಿದೆ. ಇಂತಹವರು ನಮ್ಮೊಡನೆ ಇರುವುದೇ ನಮ್ಮ ಸೌಭಾಗ್ಯ, ಪುಣ್ಯವೆನ್ನಬೇಕು. ಬೆಂಗಳೂರಿನ ಜಯನಗರದ ೫ನೆಯ ಬ್ಲಾಕಿನ ಶ್ರೀ ಕೃಷ್ಣಸೇವಾಶ್ರಮ ರಸ್ತ್ರೆಯ ಮನೆ ನಂ. ೨೮೬/ಸಿಯಲ್ಲಿ ವಾಸವಿರುವ ಇವರ ಮನೆಯಲ್ಲಿ ಪ್ರತಿ ಶನಿವಾರ ಸಾಯಂಕಾಲ ೫-೩೦ಕ್ಕೆ ಸರಿಯಾಗಿ ಸತ್ಸಂಗ ನಡೆಯುತ್ತಿದ್ದು, ಆಸಕ್ತರಿಗೆ ಮಾರ್ಗದರ್ಶನ ಮಾಡುತ್ತಿದ್ದಾರೆ. ಅವರ ವಿಚಾರಗಳನ್ನು ಒಪ್ಪಲೇಬೇಕೆಂದಿಲ್ಲ. ಎಲ್ಲವನ್ನೂ ಆಲೋಚಿಸಿ, ವಿಮರ್ಶಿಸಿಯೇ ಒಪ್ಪಬೇಕೆಂಬುದೇ ಅವರ ಆಗ್ರಹ. 
     ವೇದದ ಬೆಳಕಿನಲ್ಲಿ ಸತ್ಯ ವಿಚಾರಗಳನ್ನು ಪ್ರಸರಿಸುವ ಧ್ಯೇಯದಲ್ಲಿ ಅವಿರತ ತೊಡಗಿರುವ ಮಹಾನ್ ವ್ಯಕ್ತಿಯ ಮಾರ್ಗದರ್ಶನ ಹೀಗೆಯೇ ಮುಂದುವರೆಯುತ್ತಿರಲಿ ಎಂದು ಪ್ರಾರ್ಥಿಸೋಣ. ಕರ್ಮಯೋಗಿ ಸಾಧಕರಿಗೆ ಸಾಷ್ಟಾಂಗ ಪ್ರಣಾಮಗಳು.
-ಕ.ವೆಂ.ನಾಗರಾಜ್.
[8-04-2014ರ ಜನಮಿತ್ರ ಪತ್ರಿಕೆಯಲ್ಲಿ ಪ್ರಕಟಿತ ಲೇಖನ]

ಪಂಡಿತರೊಡನೆ: 
ಮಾಹಿತಿಗೆ: ಎರಡು ವರ್ಷಗಳ ಹಿಂದಿನ ಫೋಟೋಗಳಿವು.

ಸಂಪದಿಗ ಗಣೇಶರು ಒದಗಿಸಿದ ಮಾಹಿತಿ:

The Times of India
Bangalore



I have no desire for death: Pt Sudhakar Chaturvedi


BANGALORE: At the World Elders Day celebrations, Pandit Sudhakar Chaturvedi, who claims to be 121 years and wants to live to be 300 years, said he had no time for death. 

"I have no desire for death. Marne ko fursat nahin (no time for death)," he said, adding, "For longevity, one has to practise celibacy (brahmacharya) and also eat less so that the stomach doesn't bend." 

He went on: "Now you don't find brahmacharis — there are only brashtacharis (corrupt people)."
************

ಗುರುವಾರ, ಜುಲೈ 25, 2013

ಸ್ವಾಮಿ ಚಿದ್ರೂಪಾನಂದ ಸರಸ್ವತಿ - ಕಿರುಪರಿಚಯ

     ಅದೊಂದು ಅಪೂರ್ವ ಸನ್ನಿವೇಶ. ಕೆ.ಆರ್. ನಗರ ತಾಲ್ಲೂಕಿನ ಹಂಪಾಪುರ ಗ್ರಾಮದ ಶ್ರೀ ಮಧುಸೂದನರಾವ್ ಮತ್ತು ಶ್ರೀಮತಿ ಸ್ವರೂಪರಾಣಿ ದಂಪತಿಗಳು ಕೆಲವು ವರ್ಷಗಳಿಂದ ನಡೆಸುತ್ತಿದ್ದ ಗೋಶಾಲೆಯಲ್ಲಿ ಸ್ಥಾಪಿಸಿದ್ದ ವೇಣುಗೋಪಾಲಸ್ವಾಮಿ ದೇವರ ವಿಗ್ರಹದ ವಿಧಿವತ್ ಪ್ರತಿಷ್ಟಾಪನೆ ಕಾರ್ಯ ಹುಬ್ಬಳ್ಳಿಯ ಪ.ಪೂ. ಶ್ರೀ ಸ್ವಾಮಿ ಚಿದ್ರೂಪಾನಂದ ಸರಸ್ವತಿಗಳವರ ಸಾನ್ನಿಧ್ಯದಲ್ಲಿ ೦೯-೦೬-೨೦೧೩ರಂದು ನೆರವೇರಿತ್ತು. ಆ ಗೋಶಾಲೆಗೂ ಒಂದು ಹಿನ್ನೆಲೆಯಿತ್ತು. ೨೦ ವರ್ಷದ ಬೆಳೆದ ಮಗ ಸುಭಾಷ್ ಅಕಾಲಿಕವಾಗಿ ತೀರಿಹೋದ ದುಃಖವನ್ನು ಅರಗಿಸಿಕೊಳ್ಳಲಾಗದ ಆ ದಂಪತಿಗಳು ಗೋಶಾಲೆಯನ್ನು ನಡೆಸುವ ಮೂಲಕ ಮರೆಯಲು ಪ್ರಯತ್ನಿಸಿದ್ದಾರೆ. ಆಹ್ವಾನವಿದ್ದದ್ದರಿಂದ ಹಾಸನದ ವೇದಭಾರತಿಯ ನಾವು ಹದಿನೈದು ವೇದಾಭ್ಯಾಸಿಗಳು ಆ ಸಮಾರಂಭಕ್ಕೆ ಹೋಗಿದ್ದೆವು. ನಮ್ಮ ತಂಡದಲ್ಲಿ ಮಹಿಳೆಯರೂ ಇದ್ದು ಸ್ವಾಮಿಗಳ ಸಮ್ಮುಖದಲ್ಲಿ ವೇದಘೋಷವನ್ನೂ ಮಾಡಿದೆವು. ಮಹಿಳೆಯರೂ ವೇದಮಂತ್ರಗಳನ್ನು ಹೇಳಿದ್ದನ್ನು ಕೇಳಿದ ಸ್ವಾಮಿಗಳು ಆನಂದಿತರಾಗಿ ವೇದಭಾರತಿಯ ಕುರಿತು ವಿಚಾರಿಸಿದರು. ಯಾವುದೇ ಜಾತಿ, ಮತ, ಪಂಥ, ಲಿಂಗ, ವಯಸ್ಸುಗಳ ತಾರತಮ್ಯವಿಲ್ಲದೆ ಕಳೆದ ಒಂದು ವರ್ಷದಿಂದ ವೇದಾಭ್ಯಾಸ ಮಾಡುತ್ತಿರುವ ಬಗ್ಗೆ, ಇದಕ್ಕೆ ಪೂರಕವಾದ ವೈಚಾರಿಕ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ನಡೆಸುತ್ತಿರುವ ಬಗ್ಗೆ ತಿಳಿಸಿ, ಈ ಕಾರ್ಯಕ್ಕೆ ಅವರ ಆಶೀರ್ವಾದವನ್ನೂ ಕೋರಿದೆವು. ಆಗ ಅವರು ಉದ್ಗರಿಸಿದ್ದೇನೆಂದರೆ, "ಇದು ನಿಜವಾಗಿ ರಾಷ್ಟ್ರ ಕಟ್ಟುವ ಕೆಲಸ. ಆಗಬೇಕಾಗಿರುವುದೂ ಇದೇ. ಕೇವಲ ನನ್ನ ಆಶೀರ್ವಾದ ನಿಮಗೆ ಸಾಕೆ? ಐ ವಿಲ್ ಬಿ ವಿತ್ ಯು! " ಈ ಭೇಟಿಯ ಫಲಶ್ರುತಿಯಾಗಿ ಇದೀಗ ಸ್ವಾಮಿಗಳು ವೇದಭಾರತಿ ಮತ್ತು ಹುಬ್ಬಳ್ಳಿಯ ಆರ್ಷವಿದ್ಯಾಕೇಂದ್ರದ ಆಶ್ರಯದಲ್ಲಿ ಹಾಸನದ ಶ್ರೀ ಸೀತಾರಾಮಾಂಜನೇಯ ದೇವಸ್ಥಾನದಲ್ಲಿ ಇದೇ ತಿಂಗಳು ೨೫ ರಿಂದ ೩೦ರವರೆಗೆ ಗೀತಾಜ್ಞಾನಯಜ್ಞ ನಡೆಸಿಕೊಡುತ್ತಿದ್ದಾರೆ. ಪ.ಪೂ. ಶ್ರೀ ಸ್ವಾಮಿ ಚಿದ್ರೂಪಾನಂದ ಸರಸ್ವತಿಗಳವರ ಕಿರುಪರಿಚಯ ಮಾಡಿಕೊಡುವುದು ಈ ಲೇಖನದ ಉದ್ದೇಶ.
     ಪೂಜ್ಯರ ಪೂರ್ವಾಶ್ರಮದ ಹೆಸರು ದತ್ತಾತ್ರೇಯ. ಸಾತ್ವಿಕ ದಂಪತಿಗಳಾದ ಕೃಷ್ಣಭಟ್ಟ-ಕಮಲಾಬಾಯಿಯವವರ ಮೂರನೆಯ ಮಗನಾಗಿ ೧೧-೧-೧೯೪೮ರಲ್ಲಿ ಜನಿಸಿದ ಇವರು ಚಿಕ್ಕಂದಿನಲ್ಲಿಯೇ ತಂದೆಯವರನ್ನು ಕಳೆದುಕೊಂಡು, ತಾಯಿ ಮತ್ತು ಸೋದರಮಾವನ ಆಶ್ರಯದಲ್ಲಿ ಸುಯೋಗ್ಯ ಶಿಕ್ಷಣ, ಸಂಸ್ಕಾರಗಳನ್ನು ಪಡೆದರು. ಬಾಲ್ಯದಿಂದಲೇ ಭಜನೆ, ಕೀರ್ತನೆ, ಸತ್ಸಂಗಗಳಲ್ಲಿ ಕಳೆಯುವ ಅವಕಾಶ ಮತ್ತು ಸಂಸ್ಕಾರ ಅವರಿಗೆ ಲಭ್ಯವಾಗಿತ್ತು. ತಬಲ ಮತ್ತು ಹಾರ್ಮೋನಿಯಮ್ ನುಡಿಸುವುದನ್ನು ಕಲಿತ ಅವರಿಗೆ ಸಂಗೀತದಲ್ಲೂ ಆಸಕ್ತಿಯಿತ್ತು. ಅವರ ತಾಯಿ ಹಸ್ತ ಸಾಮುದ್ರಿಕ, ಶರೀರ ಹಾಗೂ ಮುಖಲಕ್ಷಣ ಶಾಸ್ತ್ರಗಳನ್ನು ತಿಳಿದವರಾಗಿದ್ದು, ಮಗನಿಗೆ ಬಯ್ಯುವಾಗ ಆಗಾಗ್ಗೆ 'ನೀನು ಸನ್ಯಾಸಿ ಆಗು' ಅನ್ನುತ್ತಿದ್ದರಂತೆ. ಹುಬ್ಬಳ್ಳಿಯ ಭೂಮರೆಡ್ಡಿ ತಾಂತ್ರಿಕ ಕಾಲೇಜಿನಲ್ಲಿ ಸಿವಿಲ್ ಇಂಜನಿಯರಿಂಗ್ ಶಿಕ್ಷಣ ಪಡೆದು, ಕೆಲಕಾಲ ಅಣ್ಣಿಗೇರಿ, ನವಲಗುಂದಗಳಲ್ಲಿ ಖಾಸಗಿ ಸೇವೆಯನ್ನೂ ಸಲ್ಲಿಸಿದ್ದರು. ಸ್ವಾಮಿ ಚಿನ್ಮಯಾನಂದರ ಪ್ರಭಾವಕ್ಕೆ ಒಳಗಾದ ಅವರು ೧೯೭೯-೮೦ರಲ್ಲಿ ಸ್ವಾಮಿ ಚಿನ್ಮಯಾನಂದರ ಸಾಂದಿಪಿನಿ ಗುರುಕುಲದಲ್ಲಿ ಎರಡೂವರೆ ವರ್ಷಗಳ ಕಾಲ ವೇದಾಂತ ಸಾಧನಾ ತರಬೇತಿ ಪಡೆದರು. ನಂತರ ಸ್ವಾಮಿ ದಯಾನಂದ ಸರಸ್ವತಿಗಳವರ ಆಚಾರ್ಯತ್ವದಲ್ಲಿ ಹೃಷಿಕೇಶ, ಮುಂಬಯಿ, ಉತ್ತರಕಾಶಿಗಳಲ್ಲಿ ಶಾಸ್ತ್ರ ಅಧ್ಯಯನ ತರಬೇತಿ ಪಡೆದು, ನೈಷ್ಟಿಕ ಬ್ರಹ್ಮಚಾರಿ ದೀಕ್ಷೆ ಹೊಂದಿ ಮುಕ್ತಚೈತನ್ಯ ಎಂಬ ಹೆಸರು ಪಡೆದರು. ಮೂರು ವರ್ಷಗಳ ಕಾಲ ಬಳ್ಳಾರಿ ಜಿಲ್ಲೆಯ ಮಳಗಿಯಲ್ಲಿ ಆಶ್ರಮ ಹೊಂದಿ ಭಜನೆ, ಸತ್ಸಂಗ, ಉಪನ್ಯಾಸಗಳಲ್ಲಿ ತೊಡಗಿಸಿಕೊಂಡರು. ವೈಜ್ಞಾನಿಕವಾಗಿ, ವೈಚಾರಿಕವಾಗಿ ಶುದ್ಧ ಅದ್ವೈತ ವೇದಾಂತವನ್ನು ಮನಸ್ಸಿಗೆ ನಾಟುವಂತೆ ಹೇಳುವ ಕಲೆ ಅವರಿಗೆ ಕರಗತವಾಗಿತ್ತು. ಹೃಷಿಕೇಶದ ಗಂಗಾತಟದಲ್ಲಿ ಸ್ವಾಮಿ ದಯಾನಂದ ಸರಸ್ವತಿಗಳಿಂದ ಸಂನ್ಯಾಸ ದೀಕ್ಷೆ ಪಡೆದು ಸ್ವಾಮಿ ಚಿದ್ರೂಪಾನಂದ ಸರಸ್ವತಿ ಎಂಬ ನಾಮಧೇಯವನ್ನು ಸದ್ಗುರುವಿನಿಂದ ಪಡೆದರು.
     ಗುರುಗಳ ಮಾರ್ಗದರ್ಶನದಲ್ಲಿ ಸತತ ಏಳು ವರ್ಷಗಳ ಕಾಲ ಬ್ರಹ್ಮಸೂತ್ರ, ಉಪನಿಷತ್ತು, ಭಗವದ್ಗೀತೆ, ವೇದ, ಉಪದೇಶಸಾರ, ಇತ್ಯಾದಿಗಳನ್ನು ಆಳವಾಗಿ ಅಭ್ಯಸಿಸಿದ ಪೂಜ್ಯರು, ಗುರುಗಳ ಸೂಚನೆಯಂತೆ ತಾವು ಹೊಂದಿದ ಜ್ಞಾನಪ್ರಸಾರಕಾರ್ಯವನ್ನು ಮಾಡುತ್ತಾ ಎಲ್ಲೆಡೆ ಪ್ರವಾಸ ಮಾಡತೊಡಗಿದರು. ಹಲವು ಸಲ ವಿದೇಶಗಳಲ್ಲೂ ಸಂಚರಿಸಿ ಆಧ್ಯಾತ್ಮಿಕ ಪ್ರಚಾರ ಮಾಡಿದರು. ಇದೀಗ ಕರ್ನಾಟಕವನ್ನು ತಮ್ಮ ಕಾರ್ಯಕ್ಷೇತ್ರವನ್ನಾಗಿ ಮಾಡಿಕೊಂಡಿದ್ದಾರೆ. ಪೂರ್ವಾಶ್ರಮದಲ್ಲಿ ಸಿವಿಲ್ ಇಂಜನಿಯರ್ ಆಗಿ ಮನೆಗಳನ್ನು ಕಟ್ಟುತ್ತಿದ್ದ, ಮುರಿದ ಮನೆಗಳನ್ನು ಸರಿಪಡಿಸುತ್ತಿದ್ದ ಪೂಜ್ಯರು ಈಗಲೂ ಆಧ್ಯಾತ್ಮಿಕ ಇಂಜನಿಯರ್ ಆಗಿ ಮುರಿದ ಮನಗಳನ್ನು ಕಟ್ಟುವ ಕಾಯಕ ಮುಂದುವರೆಸಿದ್ದಾರೆ. ಜನರ ಆತ್ಮವಿಶ್ವಾಸವನ್ನು ಬಡಿದೆಬ್ಬಿಸುವ, ಧಾರ್ಮಿಕ ಭಾವನೆಗಳನ್ನು ಜಾಗೃತಗೊಳಿಸುವ ಈ ಕಾರ್ಯಕ್ಕೆ ಕ್ಲಿಷ್ಟ ವಿಷಯಗಳನ್ನು ಸರಳವಾಗಿಸಿ ಹೇಳಬಲ್ಲ ಅವರ ಪಾಂಡಿತ್ಯ, ಜನರೊಡನೆ ಬೆರೆಯುವ ರೀತಿಗಳು ಸಹಕರಿಸಿವೆ.
     ಹುಬ್ಬಳ್ಳಿಯಲ್ಲಿ ಆರ್ಷವಿದ್ಯಾಪೀಠದ ಹೆಸರಿನಲ್ಲಿ ಆಶ್ರಮ ಹೊಂದಿರುವ ಇವರು ಹಾವೇರಿ ಜಿಲ್ಲೆಯ ಹಾನಗಲ್ಲ ತಾಲ್ಲೂಕಿನ ಮಲಗುಂದದಲ್ಲಿ ಗುರುಕುಲವೊಂದನ್ನೂ ಸ್ಥಾಪಿಸಿದ್ದಾರೆ. ಆಶ್ರಮ ಮತ್ತು ಗುರುಕುಲದಲ್ಲಿ ಅನೇಕ ವ್ಯಕ್ತಿತ್ವ ವಿಕಸನ ಶಿಬಿರಗಳು, ಆಧ್ಯಾತ್ಮ ಶಿಬಿರಗಳು, ಸೇವಾಕಾರ್ಯದ ಪ್ರಶಿಕ್ಷಣಾರ್ಥಿಗಳಿಗೆ ತರಬೇತಿಗಳನ್ನು ಆಗಾಗ್ಗೆ ನಡೆಸುತ್ತಾ ಬಂದಿರುವುದಲ್ಲದೆ, ಅನೇಕ ಮಾರ್ಗದರ್ಶಿ ಉಪನ್ಯಾಸಗಳನ್ನು ನೀಡುತ್ತಿರುತ್ತಾರೆ. ಸ್ವಾಮಿ ದಯಾನಂದ ಸರಸ್ವತಿಯವರು ೨೦೦೦ದಲ್ಲಿ ಪ್ರಾರಂಭಿಸಿದ ಅಖಿಲ ಭಾರತ ಸೇವಾ ಅಭಿಯಾನದ ಅಡಿಯಲ್ಲಿ ದೇಶಾದ್ಯಂತ ಬಡ ಮಕ್ಕಳಿಗೆ ಅನುಕೂಲವಾಗುವಂತೆ ಶಾಲೆಗಳ ಸಮೀಪದಲ್ಲಿಯೇ ಛಾತ್ರಾಲಯ(ಹಾಸ್ಟೆಲ್)ಗಳನ್ನು ಸ್ಥಾಪಿಸಿ ಅವರುಗಳಿಗೆ ಉಚಿತವಾಗಿ ಊಟ, ವಸತಿಗಳನ್ನು ಒದಗಿಸುವುದಲ್ಲದೆ ಶಿಕ್ಷಣಕ್ಕೆ ಪೂರಕವಾದ ಆವಶ್ಯಕತೆಗಳನ್ನು ಒದಗಿಸುವುದು, ಆಟೋಟಗಳು, ಕುಶಲಕಲೆಗಳು, ಸಾಂಸ್ಕೃತಿಕ ಚಟುವಟಿಕೆಗಳು ಮುಂತಾದವುಗಳಲ್ಲಿ ತರಬೇತಿ ನೀಡುವುದರ ಜೊತೆಗೆ ಅವರನ್ನು ಸದ್ವಿಚಾರಗಳನ್ನು ಹೊಂದುವ ಸುಯೋಗ್ಯ ಮಾನವರನ್ನಾಗಿ ರೂಪಿಸಿ ಭವಿಷ್ಯ ಭಾರತದ ಸತ್ಪ್ರಜೆಗಳನ್ನಾಗಿ ರೂಪಿಸುವ ಗುರಿ ಹೊಂದಲಾಗಿದೆ. ಈಗಾಗಲೇ ದೇಶದ ೧೧ ರಾಜ್ಯಗಳಲ್ಲಿ ೪೦ ಛಾತ್ರಾಲಯಗಳನ್ನು ನಡೆಸಲಾಗುತ್ತಿದೆ. ಕರ್ನಾಟಕದಲ್ಲಿ ಸೇವಾ ಅಭಿಯಾನದ ಪ್ರಮುಖರಾಗಿರುವ ಪೂಜ್ಯ ಸ್ವಾಮಿ ಚಿದ್ರೂಪಾನಂದರ ಮುಂದಾಳತ್ವದಲ್ಲಿ ೧೭ ಛಾತ್ರಾಲಯಗಳಲ್ಲಿ ೫೦೦ಕ್ಕೂ ಹೆಚ್ಚು ಬಡ ವಿದ್ಯಾರ್ಥಿಗಳು ಪ್ರಯೋಜನ ಪಡೆಯುತ್ತಿದ್ದಾರೆ. ೧೨೦ ಸಂಧ್ಯಾ ಗುರುಕುಲಗಳು ೪೦೦೦ಕ್ಕೂ ಹೆಚ್ಚು ಶಾಲೆಗೆ ಹೋಗುವ ಮಕ್ಕಳಿಗೆ ಉಪಯೋಗಿಯಾಗಿವೆ. ಹೊನ್ನಾವರದಲ್ಲಿ ಒಂದು ಪ್ರಾಥಮಿಕ ಶಾಲೆ, ಕಲಭಾವಿಯಲ್ಲಿ ಪ್ರೌಢಶಾಲೆ, ಬೆಂಗಳೂರು ಮತ್ತು ಹುಬ್ಬಳ್ಳಿಯಲ್ಲಿ ವೇದ ಪಾಠಶಾಲೆಗಳು ಇವರ ಮಾರ್ಗದರ್ಶನದಲ್ಲಿ ನಡೆಯುತ್ತಿವೆ. ೧೭೦ ಸ್ವಸಹಾಯ ಸಂಘಗಳು ಕಾರ್ಯನಿರತವಾಗಿವೆ. ೧೯೯೮ರಲ್ಲಿ ಪೂಜ್ಯರಿಂದ ಪ್ರಾರಂಭವಾದ ಅಕ್ಷಯ ಟ್ರಸ್ಟ್ ಸಹಾಯ ಅಗತ್ಯವಿರುವ ಎಲ್ಲರಿಗೆ ಜಾತಿ,ಮತ, ರಾಷ್ಟ್ರೀಯತೆಗಳ ಭೇದವಿಲ್ಲದೆ ಶಿಕ್ಷಣ ನೀಡುವ ಗುರಿ ಹೊಂದಿದ್ದು ೬ ಶಾಲೆಗಳು, ಪಿಯು ವಿಜ್ಞಾನ ಕಾಲೇಜು ಮತ್ತು ವೇದಪಾಠಶಾಲೆ ನಡೆಸುತ್ತಿದ್ದು ಸುಮರು ೫೦೦೦ ಮಕ್ಕಳು ಪ್ರಯೋಜನ ಹೊಂದಿದ್ದಾರೆ. 'ಸ್ವಾಸ್ಥ್ಯ' ಎಂಬ ಕನಸಿನ ಯೋಜನೆ ರೂಪಿಸಿರುವ ಇವರು, ಅಕ್ಷಯ ಟ್ರಸ್ಟ್ ವತಿಯಿಂದ ಇದರ ಅಡಿಯಲ್ಲಿ ಎಲ್ಲಾ ಆಧುನಿಕ ಸೌಲಭ್ಯಗಳನ್ನು ಹೊಂದಿರುವ ಸುಸಜ್ಜಿತ ಭವನದಲ್ಲಿ ನಿಯಮಿತವಾಗಿ ಧಾರ್ಮಿಕ ಪ್ರವಚನಗಳು, ಧ್ಯಾನ, ಪ್ರಾರ್ಥನೆ ಮತ್ತು ಯೋಗ ಮಾಡಲು ಅವಕಾಶ, ಸಾತ್ವಿಕ ಆಹಾರ, ವ್ಯಾಯಾಮಶಾಲೆ, ಈಜುವಕೊಳ, ಇತ್ಯಾದಿಗಳನ್ನು ಒದಗಿಸಿ ಸ್ವಾಸ್ಥ್ಯ ಜೀವನ ನಡೆಸಬಯಸುವವರಿಗೆ ಅವಕಾಶ ಕಲ್ಪಿಸಬಯಸಿದ್ದಾರೆ. 
        ಇವರ ವಿಚಾರಧಾರೆಯ ಕೆಲವು ಅಂಶಗಳು:
* ಸಮಾಜದಲ್ಲಿ ಕೆಲವು ಪರಿವರ್ತನೆಗಳು ಆಗಬೇಕಿದೆ. ಜನರು ಧರ್ಮಭೀರುಗಳಾಗಬೇಕು.
* ಸಂನ್ಯಾಸಿಗಳ ಅವಶ್ಯಕತೆ ಸಮಾಜಕ್ಕೆ ಇಲ್ಲ. ಬದಲಾಗಿ ಸುಸಂಘಟಿತವಾದ ಸಮಾಜವನ್ನು ಕಟ್ಟುವಂತಹ, ಜಾತಿರಹಿತ ಸಮಾಜವನ್ನು ಕಟ್ಟಬಲ್ಲ ಉತ್ಸಾಹಿ ತರುಣರ ಅವಶ್ಯಕತೆ ಇದೆ. ಅವರನ್ನೇ ಸಂನ್ಯಾಸಿಗಳೆಂದು ಕರೆದರೂ ತಪ್ಪಿಲ್ಲ.
* ಜಾತಿಯ, ರಾಜಕಾರಣಿಗಳ ಅಥವ ಸರಕಾರದ, ಅಧಿಕಾರಿಗಳ ಮುಲಾಜಿಗೆ ಒಳಪಟ್ಟು ಉತ್ಸಾಹ ತೋರುವ ಸಂನ್ಯಾಸಿಗಳಿಂದ ಸಮಾಜದಲ್ಲಿ ಸುಸಂಘಟನೆ ತರಲಾಗದು. ಯಾವ ಮತ್ತು ಯಾರ ಮುಲಾಜಿಗೂ ಒಳಗಾಗದ ಸಂನ್ಯಾಸಿಗಳು ಇರಬೇಕು. ಇಂತಹ ಉತ್ಕಟ ಅನಿಸಿಕೆಯನ್ನು ಸಾಕಾರಗೊಳಿಸಲು ಸಾಕಷ್ಟು ಬಾರಿ ಪ್ರಯತ್ನಿಸಿರುವೆ. ಆಗುತ್ತಾ ಇಲ್ಲ. ಆದರೂ ಸಂಕಲ್ಪ ದೂರವಾಗಿಲ್ಲ.
* ಸಂನ್ಯಾಸಿಗಳಲ್ಲಿ ಎರಡು ವಿಧ - ಸಾಧಕ ಸಂನ್ಯಾಸಿ, ಜ್ಞಾನಿ ಸಂನ್ಯಾಸಿ. ಜ್ಞಾನಿ ಸಂನ್ಯಾಸಿಗಳಿಗೆ ಯಾವುದೇ ಕಟ್ಟುಪಾಡುಗಳಿಲ್ಲ. ಸಾಧಕ ಸಂನ್ಯಾಸಿಗಳಿಗೆ ರಾಷ್ಟ್ರಹಿತ, ಸಮಾಜಹಿತ, ಧರ್ಮರಕ್ಷಣೆ ಮತ್ತು ಆತ್ಮವಿಕಾಸಗಳೆಂಬ ನಾಲ್ಕು ಕರ್ತವ್ಯಗಳಿವೆ. ಸಮಾಜಹಿತವೆಂದರೆ ಸಮಸ್ತ ಮಾನವಕುಲಹಿತ. ಸಮಾಜವೆಂದರೆ ಲಿಂಗಾಯತ ಸಮಾಜ, ಬ್ರಾಹ್ಮಣ ಸಮಾಜ, ಕ್ಷತ್ರಿಯ ಸಮಾಜ, ಇತ್ಯಾದಿ ಪರಿಗಣಿಸುವುದಲ್ಲ. ಸದ್ಯದ ಸಂನ್ಯಾಸಿಗಳು ಜಾತಿ ಆಧಾರಿತ ಸಮಾಜದ ಸುಸಂಘಟನೆಗಾಗಿ ದುಡಿಯುವಂತಹವರಾದರೆ ಆದಷ್ಟು ಬೇಗ ತಮ್ಮ ವಿಚಾರಧಾರೆಯಲ್ಲಿ ಪರಿವರ್ತನೆ ಮಾಡಿಕೊಳ್ಳುವುದು ಒಳ್ಳೆಯದು.
* ಯುವಕರ ವಿಚಾರದಲ್ಲಿ ಧಾರ್ಮಿಕ ಜವಾಬ್ದಾರಿ ಹೊತ್ತ ಗುರುಗಳು, ಆಚಾರ್ಯರು, ಸಂನ್ಯಾಸಿಗಳು ಅವರನ್ನು ಅರ್ಥ ಮಾಡಿಕೊಂಡು, ಅವರಿಗೆ ಅರ್ಥವಾಗುವ ರೀತಿಯಲ್ಲಿ ಮಾರ್ಗದರ್ಶನ ಮಾಡಬೇಕು. ಧಾರ್ಮಿಕ ವಿಚಾರಗಳನ್ನು ವೈಜ್ಞಾನಿಕವಾಗಿ ವಿಶ್ಲೇಷಿಸಿ ಯುವಪೀಳಿಗೆಗೆ ಕೊಟ್ಟರೆ ಅವರಿಗೂ ಆಸಕ್ತಿ ಬರುತ್ತದೆ.
* ದೀನ ದಲಿತ, ಕಡುಬಡವ ಮಕ್ಕಳಿಗೆ ಸಂಸ್ಕಾರ, ಶಿಕ್ಷಣಗಳನ್ನು ಉಚಿತವಾಗಿ ನೀಡುವ ಪ್ರಯತ್ನವನ್ನು ಪ್ರತಿ ಯುವಕ-ಯುವತಿಯರು, ಸಂನ್ಯಾಸಿಗಳು ಯಾವುದೇ ರೀತಿಯಲ್ಲಿ ಮಾಡಬೇಕು.
* ಮೌಲ್ಯಗಳ ಅಧಃಪತನದಿಂದಾಗಿ ಜನರಲ್ಲಿ ಸುಳ್ಳು, ವಂಚನೆ. ಮೋಸಗಳು ಇವೆ, ಇದರಿಂದಾಗಿ ಅಸತ್ಯದ ಅನುಸರಣೆ ಮಾಡುತ್ತಾರೆ, ಸತ್ಯವನ್ನು ದೂರ ಮಾಡುತ್ತಾರೆ. ಸತ್ಯಕ್ಕೆ ಕುಂದಿಲ್ಲ. ಶಾಸ್ತ್ರಾಧ್ಯಯನ, ಶಾಸ್ತ್ರ ಪರಂಪರೆ ಇದು ಒಬ್ಬಿಬ್ಬರ ಕೊಡುಗೆಯಲ್ಲ. ಸಹಸ್ರಾರು ವರ್ಷಗಳ, ಸಹಸ್ರಾರು ಜನರ ಶ್ರಮಕ್ಕೆ ವೈಜ್ಞಾನಿಕತೆಯಿದೆ, ವಿಶ್ಲೇಷಣೆ ಇದೆ, ಕರ್ತವ್ಯವೂ ಇದೆ. ಪ್ರಮಾಣರಹಿತವಾದ ಇತರ ಮಾರ್ಗಗಳನ್ನು ಜನರು ಅನುಸರಿಸುತ್ತಾರೆಂದರೆ ಇದಕ್ಕೆ ಮೌಲ್ಯದ ಅಧಃಪತನವೇ ಕಾರಣ. ಕ್ರಮೇಣ ಇದರಲ್ಲಿ ಕೊರತೆ ಕಾಣುವ ಜನರು ಇದರಿಂದ ದೂರ ಸರಿಯುತ್ತಾರೆ. ಸತ್ಯ ತಲೆಯೆತ್ತುತ್ತದೆ. 
     ಹಾಸನದ ಶ್ರೀ ಸೀತಾರಾಮಾಂಜನೇಯ ದೇವಸ್ಥಾನದಲ್ಲಿ ಇದೇ ೨೫ರಿಂದ ೩೦ರವರೆಗೆ ಪೂಜ್ಯರು ಭಗವದ್ಗೀತೆಯ ಮತ್ತು ಉಪನಿಷತ್ ಕುರಿತು ನಡೆಸಿಕೊಡಲಿರುವ ಪ್ರವಚನಗಳು ಆಸಕ್ತರಿಗೆ ಮಾರ್ಗದರ್ಶಿಯಾಗಲಿರುವುದರಲ್ಲಿ ಅನುಮಾನವಿಲ್ಲ.

-ಕ.ವೆಂ.ನಾಗರಾಜ್, 

(ಆಧಾರ: ಸ್ವಾಮಿ ಸುವ್ರತಾನಂದ ಸರಸ್ವತಿಯವರ 'ಚಿದ್ರೂಪ ದರ್ಶನ')
     

ಮಂಗಳವಾರ, ಏಪ್ರಿಲ್ 23, 2013

ಜೀವಂತ ಇತಿಹಾಸದ ನೈಜ ಪ್ರತಿನಿಧಿ ಪಂ. ಸುಧಾಕರ ಚತುರ್ವೇದಿಯವರಿಗೆ 117ನೆಯ ವರ್ಷದ ಜನ್ಮದಿನದ ಶುಭ ಹಾರೈಕೆಗಳು



     ಮರ್ಯಾದಾ ಪುರುಷೋತ್ತಮ ಶ್ರೀರಾಮನ ಜನ್ಮದಿನದಂದೇ ಪ್ರಖರ ಸತ್ಯವಾದಿ, ನಂಬಿದ ಧ್ಯೇಯಕ್ಕಾಗಿ ಟೀಕೆ, ಟಿಪ್ಪಣಿಗಳಿಗೆ ಅಂಜದೆ ಹಿಡಿದ ಹಾದಿಯಲ್ಲಿಯೇ ಅಳುಕದೆ ಮುಂದುವರೆದು, ಸತ್ಯಪ್ರಸಾರ ಮಾಡುತ್ತಿರುವ ಕರ್ಮಯೋಗಿ, ಶತಾಯುಷಿ ಪಂಡಿತ ಸುಧಾಕರ ಚತುರ್ವೇದಿಯವರ ಜನ್ಮದಿನವೂ ಆಗಿರುವುದು ವಿಶೇಷವೇ ಸರಿ. ಈ ರಾಮನವಮಿಗೆ (19-04-2013) 116 ವಸಂತಗಳನ್ನು ಕಂಡು 117ನೆಯ ವರ್ಷಕ್ಕೆ ಕಾಲಿರಿಸಿರುವ ಅವರಿಗೆ ಶಿರಬಾಗಿ ಪ್ರಣಾಮಗಳನ್ನು ಸಲ್ಲಿಸುತ್ತಾ ಈ ಕೆಲವು ಸಾಲುಗಳನ್ನು ನಿಮ್ಮೊಡನೆ ಹಂಚಿಕೊಳ್ಳುತ್ತಿದ್ದೇನೆ. 
     ಪಂಡಿತ ಸುಧಾಕರ ಚತುರ್ವೇದಿಯವರ ಪೂರ್ವಿಕರು ತುಮಕೂರಿನ ಕ್ಯಾತ್ಸಂದ್ರದವರಾದರೂ ಇವರು ಹುಟ್ಟಿದ್ದು, ಬೆಳೆದಿದ್ದು ಎಲ್ಲಾ  ಬೆಂಗಳೂರಿನಲ್ಲಿಯೇ. ಶಿಕ್ಷಣ ಇಲಾಖೆಯಲ್ಲಿ ಇನ್ಸ್‌ಪೆಕ್ಟರ್ ಆಗಿದ್ದ ಶ್ರೀ ಟಿ.ವಿ. ಕೃಷ್ಣರಾವ್ ಮತ್ತು  ಶ್ರೀಮತಿ ಲಕ್ಷ್ಮಮ್ಮನವರ ಮಗನಾಗಿ 1897ರ ರಾಮನವಮಿಯಂದು ಬಳೇಪೇಟೆಯಲ್ಲಿದ್ದ ಮನೆಯಲ್ಲಿ ಜನಿಸಿದ ಇವರು ಸಂಪ್ರದಾಯಸ್ಥ ಬ್ರಾಹ್ಮಣ ಕುಟುಂಬಕ್ಕೆ ಸೇರಿದವರಾಗಿದ್ದರೂ ಅರ್ಥವಿಲ್ಲದ ಕುರುಡು ಸಂಪ್ರದಾಯಗಳನ್ನು ಒಪ್ಪದಿದ್ದವರು, ಸರಿ ಅನ್ನಿಸಿದ್ದನ್ನು ಮಾತ್ರ ಮಾಡಿದವರು. ನಾನು ಹಾಸನದವನೆಂದು ತಿಳಿದಾಗ, ಪಂಡಿತರು ತಮ್ಮ ತಂದೆ ಹಾಸನದ ಶಿಕ್ಷಣ ಇಲಾಖೆಯಲ್ಲೂ ಕೆಲಸ ನಿರ್ವಹಿಸಿದ್ದು ತಾವು 6-7 ವರ್ಷದವರಾಗಿದ್ದಾಗ -ಅಂದರೆ ಸುಮಾರು 110 ವರ್ಷಗಳ ಹಿಂದೆ-  ಹಾಸನದ ದೇವಿಗೆರೆ ಸಮೀಪದಲ್ಲಿ ಬಾಡಿಗೆ ಮನೆಯೊಂದರಲ್ಲಿ ಕೆಲವು ಸಮಯ ಇದ್ದೆವೆಂದು ನೆನಪಿಸಿಕೊಂಡಿದ್ದರು.  ಅಪ್ಪಟ ಕನ್ನಡಿಗರಾದ ಪಂ. ಸುಧಾಕರ ಚತುರ್ವೇದಿಯವರು ತಮ್ಮ 13ನೆಯ ವಯಸ್ಸಿನಲ್ಲಿಯೇ  ಉತ್ತರ ಭಾರತದ ಹರಿದ್ವಾರದ ಹತ್ತಿರದ ಕಾಂಗಡಿ ಗುರುಕುಲಕ್ಕೆ ಸೇರಿ ಉಪನಿಷತ್ತು, ವ್ಯಾಕರಣ, ಛಂದಸ್ಸು, ಗಣಿತ, ಜ್ಯೋತಿಷ್ಯ, ಷಡ್ದರ್ಶನಗಳು ಸೇರಿದಂತೆ ವೇದಾಧ್ಯಯನ ಮಾಡಿದವರು. ಮಹರ್ಷಿ ದಯಾನಂದ ಸರಸ್ವತಿಯವರ ವಿಚಾರಗಳಿಂದ ಪ್ರಭಾವಿತರಾಗಿದ್ದು, ಸ್ವಾಮಿ ಶ್ರದ್ಧಾನಂದರ ಪ್ರೀತಿಯ ಶಿಷ್ಯರಾಗಿ ಬೆಳೆದವರು. ನಾಲ್ಕೂ ವೇದಗಳನ್ನು ಅಧ್ಯಯಿಸಿದ ಅವರು ನಿಜ ಅರ್ಥದಲ್ಲಿ ಚತುರ್ವೇದಿಯಾಗಿ, 'ಚತುರ್ವೇದಿ' ಎಂಬ ಸಾರ್ಥಕ ಹೆಸರು ಗಳಿಸಿದವರು.  ಜಾತಿ ಭೇದ ತೊಲಗಿಸಲು ಸಕ್ರಿಯವಾಗಿ ತೊಡಗಿಕೊಂಡವರು. ನೂರಾರು ಅಂತರ್ಜಾತೀಯ ವಿವಾಹಗಳನ್ನು ಮುಂದೆ ನಿಂತು ಮಾಡಿಸಿದವರು ಮತ್ತು ಅದಕ್ಕಾಗಿ ಬಂದ ವಿರೋಧಗಳನ್ನು ಎದುರಿಸಿದವರು. ವೇದದಲ್ಲಿ ವರ್ಣವ್ಯವಸ್ಥೆಯಿದೆಯೇ ಹೊರತು, ಹುಟ್ಟಿನಿಂದ ಬರುವ ಜಾತಿಪದ್ಧತಿ ಇಲ್ಲವೆಂದು ಪ್ರತಿಪಾದಿಸಿದವರು, ಮನುಷ್ಯರೆಲ್ಲಾ ಒಂದೇ ಜಾತಿ, ಬೇಕಾದರೆ ಗಂಡು ಜಾತಿ, ಹೆಣ್ಣುಜಾತಿ ಅನ್ನಬಹುದು ಎಂದವರು. ಸಾಹಿತಿಯಾಗಿಯೂ ಸಹ ಅನೇಕ ಕೃತಿಗಳನ್ನು ಜನಹಿತವನ್ನು ಮನದಲ್ಲಿ ಇಟ್ಟುಕೊಂಡೇ ಕನ್ನಡ, ಸಂಸ್ಕೃತ, ಇಂಗ್ಲಿಷ್, ಹಿಂದಿ ಭಾಷೆಗಳಲ್ಲಿ ರಚಿಸಿದವರು. 
     ಸ್ವಾತಂತ್ರ್ಯ ಹೋರಾಟದಲ್ಲಿ ತಮ್ಮನ್ನು ಸಕ್ರಿಯರಾಗಿ ತೊಡಗಿಸಿಕೊಂಡಿದ್ದ ಅವರು ಗಾಂಧೀಜಿಯವರ ಒಡನಾಟ ಹೊಂದಿದವರಾಗಿದ್ದರು. ಪಂಡಿತರು ಇದ್ದ ಗುರುಕುಲಕ್ಕೆ ಗಾಂಧೀಜಿಯವರು ಭೇಟಿ ಕೊಟ್ಟಿದ್ದ ಸಂದರ್ಭದಲ್ಲಿ ಇವರು ಗಾಂಧೀಜಿಯವರಿಂದ ಪ್ರಭಾವಿತರಾಗಿದ್ದಂತೆ, ಗಾಂಧೀಜಿಯವರೂ ಇವರಿಂದ ಪ್ರಭಾವಿತರಾಗಿದ್ದರು. ಗಾಂಧೀಜಿಯವರ ಹತ್ಯೆಯಾಗುವವರೆಗೂ ಇವರಿಬ್ಬರ ಸ್ನೇಹ ಮುಂದುವರೆದಿತ್ತು.  ಕುಪ್ರಸಿದ್ಧ ಜಲಿಯನ್ ವಾಲಾಬಾಗ್ ಹತ್ಯಾಕಾಂಡದ ಸಾಕ್ಷಿಯಾಗಿದ್ದ ಅವರು ಗಾಂಧೀಜಿಯವರ ಸೂಚನೆಯಂತೆ ಅಲ್ಲಿ ಹತರಾಗಿದ್ದವರ ನೂರಾರು ಶವಗಳ ಸಾಮೂಹಿಕ ಶವಸಂಸ್ಕಾರ ಮಾಡಿದವರು. ಕ್ರಾಂತಿಕಾರಿ ಭಗತ್ ಸಿಂಗರಿಗೆ ಗುರುವೂ ಆಗಿದ್ದವರು. ತಾವು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಲು ಸ್ವಾಮಿ ಶ್ರದ್ಧಾನಂದರ ಪ್ರೋತ್ಸಾಹ ಕಾರಣವಾದರೂ ವೇದದ 'ಅಧೀನಾಃ ಸ್ಯಾಮ ಶರದಃ ಶತಂ, ಭೂಯಶ್ಚ ಶರದಃ ಶತಾತ್' - 'ನೂರು ವರ್ಷಕ್ಕೂ ಹೆಚ್ಚುಕಾಲ ಸ್ವಾತಂತ್ರ್ಯದಿಂದ ಬಾಳೋಣ' ಎಂಬ ಅರ್ಥದ ಸಾಲು ಸಂಗ್ರಾಮಕ್ಕೆ ಪ್ರೇರಿಸಿತ್ತು ಎಂದು ಹೇಳುತ್ತಾರೆ. ಭಾರತೀಯರನ್ನು ಕೀಳಾಗಿ ಕಾಣುತ್ತಿದ್ದ ಆಂಗ್ಲರ ನಡವಳಿಕೆ ಇವರ ಮತ್ತು ಇವರಂತಹ ಸಾವಿರಾರು ಜನರ ಸ್ವಾಭಿಮಾನವನ್ನು ಕೆಣಕಿ ಹೋರಾಟ ಕಾವು ಪಡೆದಿತ್ತು. ಹೋರಾಟ ಕಾಲದಲ್ಲಿ ಕೃಶ ಶರೀರದವರಾದರೂ ಇವರ ಮನೋಬಲ ಮತ್ತು ಛಲದಿಂದಾಗಿ ಅನೇಕ ಪ್ರಾಣಾಂತಿಕ ಪೆಟ್ಟುಗಳನ್ನು ಹಲವಾರು ಬಾರಿ ತಿಂದರೂ ಸಹಿಸಿ ಅರಗಿಸಿಕೊಂಡವರು. ದಂಡಿ ಉಪ್ಪಿನ ಸತ್ಯಾಗ್ರಹ, ಕ್ವಿಟ್ ಇಂಡಿಯಾ ಚಳುವಳಿ ಸೇರಿದಂತೆ ಅನೇಕ ಸತ್ಯಾಗ್ರಹಗಳಲ್ಲಿ ಸಕ್ರಿಯರಾಗಿ ಭಾಗವಹಿಸಿದ್ದವರು. ಸುಮಾರು 15 ವರ್ಷಗಳ ಕಾಲ ಸೆರೆವಾಸ ಅನುಭವಿಸಿದವರು. ಭಾರತ-ಪಾಕಿಸ್ತಾನದ ವಿಭಜನೆಯ ಕಾಲದ ಭೀಕರ ಮಾರಣಹೋಮವನ್ನು ಕಂಡ ನೆನಪು ಮಾಸದೆ ಇರುವವರು. ಒಟ್ಟಿನಲ್ಲಿ ಹೇಳಬೇಕೆಂದರೆ ಇವರು ನಮ್ಮೊಡನಿರುವ ಜೀವಂತ ಇತಿಹಾಸದ ನೈಜ ಪ್ರತಿನಿಧಿ.

     ವೇದ ಇವರ ಉಸಿರಾಗಿದೆ. ಸಾರ್ವಕಾಲಿಕ ಮೌಲ್ಯ ಸಾರುವ ವೇದಗಳ ಸಂದೇಶ ಸಾರುವುದೇ ಅವರ ಜೀವನ ಧ್ಯೇಯವಾಗಿದೆಯೆಂದರೆ ತಪ್ಪಿಲ್ಲ. ವೇದದ ಹೆಸರಿನಲ್ಲಿ ನಡೆಯುತ್ತಿರುವ ಅನೇಕ ಆಚರಣೆಗಳು ಅವೈದಿಕವಾಗಿರುವ ಬಗ್ಗೆ ಅಸಮಾಧಾನಿಯಾಗಿರುವ ಅವರು ಅಂತಹ ಆಚರಣೆಗಳನ್ನು ಖಂಡಿಸಿ ತಿಳುವಳಿಕೆ ನೀಡುವ ಕಾಯಕ ಮುಂದುವರೆಸಿದ್ದಾರೆ. 'ವೇದೋಕ್ತ ಜೀವನ ಪಥ'ವೆಂಬ ಕಿರು ಪುಸ್ತಕದಲ್ಲಿ ಜೀವನದ ಮೌಲ್ಯಗಳು, ಜೀವಾತ್ಮ, ಪರಮಾತ್ಮ, ಪ್ರಕೃತಿಗಳ ಸ್ವರೂಪ, ಮಾನವ ಧರ್ಮ, ಚತುರ್ವರ್ಣಗಳು, ಬ್ರಹ್ಮಚರ್ಯಾದಿ ಚತುರಾಶ್ರಮಗಳು, ದೈನಂದಿನ ಕರ್ಮಗಳು, ಷೋಡಶ ಸಂಸ್ಕಾರಗಳು, ರಾಜನೀತಿ, ಸಾಮಾಜಿಕ ಜೀವನ, ಚತುರ್ವಿಧ ಪುರುಷಾರ್ಥಗಳನ್ನು ವೇದದ ಹಿನ್ನೆಲೆಯಲ್ಲಿ ವಿಶ್ಲೇಷಿಸಿದ್ದು, ಅದರಂತೆ ನಡೆದದ್ದೇ ಆದಲ್ಲಿ ಜೀವನ ಸಾರ್ಥಕವಾಗುವುದು. 'ಅರವತ್ತಕ್ಕೆ ಅರಳು-ಮರಳು' ಎಂಬ ಪ್ರಚಲಿತ ಗಾದೆ ಮಾತಿಗೆ ವಿರುದ್ಧವಾಗಿ ಇಂದಿಗೂ 117 ವರ್ಷಗಳ ಪಂಡಿತರ ವೈಚಾರಿಕ ಪ್ರಖರತೆಯ ಹೊಳಪು ಮಾಸಿಲ್ಲ, ನೆನಪು ಕುಂದಿಲ್ಲ. ಇವರ ಜೀವನೋತ್ಸಾಹ ಬತ್ತದ ಚಿಲುಮೆಯಾಗಿದ್ದು ದೇಹ, ಮನಸ್ಸು, ಬುದ್ಧಿಗಳನ್ನು ಹಿಡಿತದಲ್ಲಿಟ್ಟುಕೊಂಡಿರುವುದೇ ಇದಕ್ಕೆ ಕಾರಣವಿರಬಹುದು. ಪ್ರಶಸ್ತಿ, ಸನ್ಮಾನಗಳಿಗಾಗಿ ಲಾಬಿ ನಡೆಸುವವರೇ ತುಂಬಿರುವ, ಅದಕ್ಕಾಗಿ ತಮ್ಮತನವನ್ನೇ ಮಾರಿಕೊಳ್ಳುವವರಿರುವ ಈ ದೇಶದಲ್ಲಿ ಪ್ರಚಾರದಿಂದ ದೂರವಿರುವ ಇವರು ನಿಜವಾದ ಭಾರತರತ್ನರೆಂದರೆ ತಪ್ಪಿಲ್ಲ. ಕಳೆದ ವರ್ಷದ ಕನ್ನಡ ರಾಜ್ಯೋತ್ಸವದಂದು ರಾಜ್ಯಸರ್ಕಾರ ಇವರನ್ನು ರಾಜ್ಯಪ್ರಶಸ್ತಿ ನೀಡಿ ಗೌರವಿಸಿದೆ. ಇಂತಹವರು ನಮ್ಮೊಡನೆ ಇರುವುದೇ ನಮ್ಮ ಸೌಭಾಗ್ಯ, ಪುಣ್ಯವೆನ್ನಬೇಕು. ಬೆಂಗಳೂರಿನ ಜಯನಗರದ 5ನೆಯ ಬ್ಲಾಕಿನ ಶ್ರೀ ಕೃಷ್ಣಸೇವಾಶ್ರಮ ರಸ್ತ್ರೆಯ ಮನೆ ನಂ. 286/ಸಿಯಲ್ಲಿ ವಾಸವಿರುವ ಇವರ ಮನೆಯಲ್ಲಿ ಪ್ರತಿ ಶನಿವಾರ ಸಾಯಂಕಾಲ 5.30ಕ್ಕೆ ಸರಿಯಾಗಿ ಸತ್ಸಂಗ ನಡೆಯುತ್ತಿದ್ದು, ಆಸಕ್ತರಿಗೆ ಮಾರ್ಗದರ್ಶನ ಮಾಡುತ್ತಿದ್ದಾರೆ. ಅವರ ವಿಚಾರಗಳನ್ನು ಒಪ್ಪಲೇಬೇಕೆಂದಿಲ್ಲ. ಎಲ್ಲವನ್ನೂ ಆಲೋಚಿಸಿ, ವಿಮರ್ಶಿಸಿಯೇ ಒಪ್ಪಬೇಕೆಂಬುದೇ ಅವರ ಆಗ್ರಹ. 
     ವೇದದ ಬೆಳಕಿನಲ್ಲಿ ಸತ್ಯ ವಿಚಾರಗಳನ್ನು ಪ್ರಸರಿಸುವ ಧ್ಯೇಯದಲ್ಲಿ ಅವಿರತ ತೊಡಗಿರುವ ಮಹಾನ್ ವ್ಯಕ್ತಿಯ ಮಾರ್ಗದರ್ಶನ ಹೀಗೆಯೇ ಮುಂದುವರೆಯುತ್ತಿರಲಿ ಎಂದು ಪ್ರಾರ್ಥಿಸೋಣ. ಕರ್ಮಯೋಗಿ ಸಾಧಕರಿಗೆ ಸಾಷ್ಟಾಂಗ ಪ್ರಣಾಮಗಳು.
-ಕ.ವೆಂ.ನಾಗರಾಜ್.

ಶನಿವಾರ, ಸೆಪ್ಟೆಂಬರ್ 29, 2012

ವೇದಾಧ್ಯಾಯೀ ಶ್ರೀ ಸುಧಾಕರಶರ್ಮ ಕಿರು ಪರಿಚಯ



     ಈಗ್ಗೆ ೧ ವರ್ಷದ ಹಿಂದೆ ‘ಖತಾರ್’ ಎಂಬ ಖಾಸಗಿ ಧಾರ್ಮಿಕ ಟಿ.ವಿ. ವಾಹಿನಿಯಲ್ಲಿ ವಿವಿಧ ಮತ ಧರ್ಮಗಳ ಗುರುಗಳ ನಡುವೆ ಧಾರ್ಮಿಕ ಚರ್ಚೆಯೊಂದು ನೇರ ಸಂವಾದ ರೂಪದಲ್ಲಿ ನಡೆದಿತ್ತು. ಆ ಗುರುಗಳ ನಡುವೆ ‘ಬದುಕುವ ಕಲೆ’ ಕಲಿಸುವ ಓರ್ವ ಗುರು ಭಾರತ ದೇಶವನ್ನು ಪ್ರತಿನಿಧಿಸಿದ್ದರು. ಆದರೆ ಪರಸ್ಪರ ವಾದ ವಿವಾದ ಸಾಗಿದಂತೆ ನಮ್ಮ ಗುರುಗಳಿಗೆ ಸೋಲುಂಟಾಯಿತು! ಈ ಮಹನೀಯರು ನಮ್ಮ ಮನುಕುಲದ ಜ್ಞಾನ ಭಂಡಾರವೆನಿಸಿದ ವೇದಗಳನ್ನು ಬದಿಗಿಟ್ಟು, ನಮ್ಮ ಪರಂಪರೆ ನಡುವೆ ಸಾಗಿ ಬಂದಿರುವ ಕೆಲಸಕ್ಕೆ ಬಾರದ ಪುರಾಣಗಳು-ಪುಣ್ಯ ಕಥೆಗಳನ್ನು ಆಧರಿಸಿ ತಮ್ಮ ವಾದ ಮಂಡಿಸಲು ಯತ್ನಿಸಿದ್ದೇ ಅವರ ಸೋಲಿಗೆ ಕಾರಣವಾಯಿತು. ಅವರ ಜಾಗದಲ್ಲಿ ಪಂಡಿತ್ ಸುಧಾಕರ ಚತುರ್ವೇದಿಗಳೋ ಅಥವಾ ಅವರ ಶಿಷ್ಯ ಸುಧಾಕರ ಶರ್ಮರೋ ಇದ್ದಿದ್ದರೆ ಅದರ ಕಥೆಯೇ ಬೇರೆಯಾಗುತ್ತಿತ್ತು! ಅಂದಹಾಗೆ ಯಾರು ಈ ಸುಧಾಕರ ಶರ್ಮ?


     ಪ್ರಳಯದ ಭೀತಿ, ವಾಸ್ತು, ಜ್ಯೋತಿಷ್ಯ, ವ್ರತಾಚರಣೆ, ವಿಶೇಷ ಪೂಜೆ ಅವುಗಳಿಂದ ಸಿಗುತ್ತದೆನ್ನುವ ಪ್ರತಿಫಲ ಇತ್ಯಾದಿ ಕುತೂಹಲಕಾರಿ ವಿಷಯಗಳನ್ನು ತಿಳಿಯಲು ಕಾತರರಾಗುವ ನಾವು ಟಿ.ವಿ. ಮುಂದೆ ಕುಳಿತು ಅಂತಹ ಕಾರ್ಯಕ್ರಮಗಳನ್ನು ಎವೆಯಿಕ್ಕದೆ ವೀಕ್ಷಿಸುತ್ತೇವೆ. ಇಂತಹ ಅಸಂಬದ್ಧ ಪುರಾಣಗಳು, ಪುಣ್ಯ ಕಥೆಗಳು, ಪೂಜೆ, ಪುನಸ್ಕಾರದಂತಹ ವಿಷಯಗಳಾವುವೂ ವೇದದಲ್ಲಿಲ್ಲ; ಜಗತ್ತಿನಲ್ಲಿ ಮನುಷ್ಯ ಹೇಗೆ ಬದುಕಬೇಕು ಎಂಬುದನ್ನು ಬೋಧಿಸುವ ‘ಮನುಕುಲದ ಸಂವಿಧಾನ’ವೇ ವೇದ ಎಂಬ ಸತ್ಯ ಸಂಗತಿಗಳನ್ನು ವೇದ ಮಂತ್ರಗಳ ನಿಜವಾದ ಅರ್ಥ ಬಿಡಿಸಿಟ್ಟು ತಿಳಿಸಿಕೊಡುವ ದಾರ್ಶನಿಕರೇ ವೇದಾಧ್ಯಾಯಿ ಸುಧಾಕರಶರ್ಮ! ‘ಚಂದನ’ ವಾಹಿನಿಯಲ್ಲಿ ಪ್ರತಿ ಭಾನುವಾರ ಬೆಳಗ್ಗೆ ೯-೩೦ ರಿಂದ ಪ್ರಸಾರವಾಗುತ್ತಿರುವ ‘ಹೊಸ ಬೆಳಕು’ ಧಾರಾವಾಹಿಯ ಕೇಂದ್ರ ಬಿಂದು- ಒಂದೇ ಮಾತಿನಲ್ಲಿ ಹೇಳಬೇಕೆಂದರೆ ವೇದ, ವಿಜ್ಞಾನ ಹಾಗೂ ವೈಚಾರಿಕತೆ- ಈ ಮೂರನ್ನೂ ಮೇಳೈಸಿಕೊಂಡಿರುವ ಅಪರೂಪದ ವಿಶಿಷ್ಟ ಬಹುಮುಖ ವ್ಯಕ್ತಿತ್ವದ ಜ್ಞಾನ ವೃದ್ಧ ಈ ವ್ಯಕ್ತಿ!!

     ಪ್ರಸ್ತುತ ಭಾರತ ದೇಶ ಸಾಗುತ್ತಿರುವ ಹಾದಿಯನ್ನು ಹಿನ್ನೆಲೆಯಾಗಿಟ್ಟುಕೊಂಡು ವೇದಗಳ ಕುರಿತು ಚರ್ಚಿಸಲು ಹೊರಟಾಗ ಯಾರಾದರೂ ಮೂಗು ಮುರಿದರೆ ಅಥವಾ ‘ಅನಿಷ್ಟಕ್ಕೆಲ್ಲ ಶನೇಶ್ವರ ಹೊಣೆ’ ಎಂಬಂತೆ ವೇದಗಳನ್ನು ದೂಷಿಸಿದರೆ ಅದು ಸಹಜ ಹಾಗೂ ತಪ್ಪು ಅವರದಲ್ಲ! ಏಕೆಂದರೆ ವೇದಗಳ ಕುರಿತು ಶತ ಶತಮಾನಗಳಿಂದಲೂ ಹರಿದುಬಂದ ತಪ್ಪು ಕಲ್ಪನೆಗಳು, ಪ್ರಕ್ಷಿಪ್ತಗಳು, ಅರೆಬೆಂದ ಎರವಲು ಜ್ಞಾನ, ಗೊಡ್ಡು ಸಂಪ್ರದಾಯಗಳು, ವಿಚಾರವಿಲ್ಲದ ಆಚರಣೆಗಳು, ಜೀವನ ಶೈಲಿ ಇತ್ಯಾದಿ ಅನಿಷ್ಟ ಕಲಸು ಮೇಲೋಗರಗಳ ನಡುವೆ ಭಾರತೀಯರು ಬೆಳೆದು ಬಂದಿರುವ ಬಗೆಯೇ ಇದಕ್ಕೆ ಕಾರಣ. ವೇದಗಳು ವಜ್ರವಿದ್ದಂತೆ; ಆದರೆ ಅಜ್ಞಾನದಿಂದಾಗಿ ವಜ್ರವನ್ನು ತಿಪ್ಪೆಗೆ ಎಸೆಯಲಾಗಿದೆ; ಅದು ವಜ್ರದ ತಪ್ಪಲ್ಲವಲ್ಲ!? ಜಗತ್ತಿಗೇ ಶಾಂತಿ ಪಾಠ ಹೇಳಿದ ನಮ್ಮ ದೇಶದ ಸದ್ಯದ ಪರಿಸ್ಥಿತಿಗೆ ಕೈಗನ್ನಡಿಯಾಗಿ ಖತಾರ್ ಟಿ.ವಿ. ಪ್ರಕರಣ ರೂಪದಲ್ಲಿ ಇನ್ನೊಂದು ವಿಪರ್ಯಾಸ ಸೇರ್ಪಡೆಯಾಯಿತಷ್ಟೆ.

   ವೇದಾಧ್ಯಾಯಿ ಎಂದ ಕೂಡಲೇ ಸಂತನೋ, ಮುನಿಯೋ ಅಥವಾ ಯಾವುದೋ ಮಠದ ಸ್ವಾಮೀಜಿಯೋ ಎಂದೇನೂ ಭಾವಿಸಬೇಕಾಗಿಲ್ಲ. ಬಹುಮುಖ ವಿದ್ಯಾರ್ಹತೆ- ಅಂದರೆ ವಿಜ್ಞಾನ. ಸಂಸ್ಕೃತ ಹಾಗೂ ಲೆಕ್ಕ ಶಾಸ್ತ್ರ (ಐ.ಸಿಡಬ್ಲ್ಯುಎ) ಗಳಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಅವರು ವೇದಾಧ್ಯಾಯಿಯೂ ಆಗಿದ್ದು ಸಾಮಾನ್ಯರಲ್ಲಿ ಅಸಾಮಾನ್ಯ ಎಂದು ಧಾರಾಳವಾಗಿ ಹೇಳಬಹುದು! ಈ ಹಿಂದೆ ಪ್ರಜಾವಾಣಿಯಲ್ಲಿ ಪತ್ರಕರ್ತರಾಗಿದ್ದ ದಿ. ಎನ್. ಶ್ರೀಕಂಠಯ್ಯ ಅವರ ಪುತ್ರರಾದ ಶ್ರೀಯುತರು, ಮಹಾತ್ಮ ಗಾಂಧಿಯವರ ನಿಕಟವರ್ತಿ, ಸ್ವಾತಂತ್ರ್ಯ ಹೋರಾಟಗಾರ ಹಾಗೂ ಚತುರ್ವೇದಗಳ ಪಂಡಿತ ಸುಧಾಕರ ಚತುರ್ವೇದಿ ಅವರ ಶಿಷ್ಯರಾಗಿದ್ದಾರೆ. ಇವರ ಇಡೀ ಸುಖೀ ಕುಟುಂಬವೇ ವೇದೋಕ್ತ!
     ೧೯೭೩ ರಿಂದಲೂ ಬೆಂಗಳೂರು ಆಕಾಶವಾಣಿಯ ನಾಟಕ ಕಲಾವಿದರೂ, ಹಲವು ಮಹತ್ವದ ಕೃತಿಗಳ ರಚನಾಕಾರರೂ ಆಗಿರುವ ಶರ್ಮ ಅವರು ನಮ್ಮ ಪರಂಪರೆಯಲ್ಲಿ ಸಾಗಿಬಂದಿರುವ ಅನಿಷ್ಟ ಆಚರಣೆಗಳು, ಗೊಡ್ಡು ಸಂಪ್ರದಾಯಗಳ ಕಟ್ಟಾ ವಿರೋಧಿಯಾಗಿರುವುದರಿಂದ ‘ಖಂಡಿತವಾದಿ ಲೋಕ ವಿರೋಧಿ’ ಎಂಬಂತೆ ಸಂಪ್ರದಾಯಸ್ಥ ವೈದಿಕರ ಕೆಂಗಣ್ಣಿಗೂ ಗುರಿಯಾಗಿದ್ದಾರೆ. ‘ಮದುವೆ-ಏಕೆ-ಯಾವಾಗ-ಹೇಗೆ?’, ‘ಮೃತ್ಯುವೇ ನಮಸ್ಕಾರ’, ‘ಜ್ಯೋತಿಷಿಗಳೇ ಸತ್ಯದ ಕೊಲೆ ಮಾಡಬೇಡಿ!’, ‘ವಾಸ್ತು ಬೀಳದಿರಿ ಬೇಸ್ತು!"; ‘ಜನಿವಾರದಲ್ಲಿ ಬ್ರಾಹ್ಮಣ್ಯವಿಲ್ಲ’ ಇತ್ಯಾದಿ ಮಹತ್ವದ ಕೃತಿಗಳ ರಚನಾಕಾರರಾದ ಇವರು ಕರ್ನಾಟಕದಾದ್ಯಂತ ಹಾಗೂ ಪಕ್ಕದ ಆಂಧ್ರ ಪ್ರದೇಶದಲ್ಲೂ ವೇದಗಳ ಕುರಿತು ನಿರಂತರ ಉಪನ್ಯಾಸ ಹಾಗೂ ಪ್ರವಚನಗಳನ್ನು ನೀಡುತ್ತಿದ್ದಾರೆ.
     ವೇದಗಳ ಕುರಿತಾದ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸಮ್ಮೇಳನಗಳಲ್ಲಿ ಮಹತ್ವಪೂರ್ಣ ಪ್ರಬಂಧಗಳನ್ನು ಮಂಡಿಸಿರುವ ಶರ್ಮಾಜಿ, ವೇದ ಮಂತ್ರಾರ್ಥಗಳ ವಿವರಣೆ ಸಹಿತವಾಗಿ ಬ್ರಾಹ್ಮಣೇತರರು, ಮಹಿಳೆಯರು ಹಾಗೂ ಬಾಲಕಿಯರಿಗೂ ಸಹ ಉಪನಯನ ಸಂಸ್ಕಾರ ಮಾಡಿಸಿದ್ದಾರೆ; ಮಾಡಿಸುತ್ತಾರೆ! ವ್ಯಕ್ತಿತ್ವ ವಿಕಸನ, ಕೌಟುಂಬಿಕ ಹಾಗೂ ಮಾನಸಿಕ ಸಮಸ್ಯೆಗಳಿಗೆ ಕೌನ್ಸಿಲಿಂಗ್ (ಸಮಾಲೋಚನೆ) ಮಾಡುವ ಶ್ರೀಯುತರನ್ನು, ರಾಜ್ಯದ ಅನೇಕ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ಟಿ.ವಿ. ಮಾಧ್ಯಮಗಳು ಹಲವು ಕಾರ್ಯಕ್ರಮಗಳ ಮೂಲಕ ಪರಿಚಯಿಸಿವೆ; ಅವರ ಲೇಖನಗಳನ್ನು ಪ್ರಕಟಿಸುತ್ತಿವೆ ಹಾಗೂ ತಮ್ಮ ಕಾರ್ಯಕ್ರಮಗಳಿಗೆ ಬಳಸಿಕೊಳ್ಳುತ್ತಿವೆ.
     ಬೆಂಗಳೂರು ನಿವಾಸಿಗಳಾಗಿರುವ ಶ್ರೀಯುತರು, ತಮ್ಮ ಮಕ್ಕಳನ್ನು ಹೊರಗಿನ ಯಾವುದೇ ಶಾಲೆಗಳಿಗೂ ಕಳುಹಿಸದೆ ಮನೆಯಲ್ಲೇ ಗುರುಕುಲ ಮಾದರಿ ವೇದ ಶಿಕ್ಷಣ ಕೊಡಿಸಿದ್ದು, ಯಾವ ಪದವೀಧರರಿಗಿಂತಲೂ ಕಡಿಮೆಯಿಲ್ಲದೆ ಒಂದು ಕೈ ಹೆಚ್ಚಾಗಿಯೇ ಬುದ್ಧಿವಂತರನ್ನಾಗಿ ಬೆಳೆಸಿದ್ದಾರೆಂದರೆ ಅಚ್ಚರಿಯೇ ಸರಿ!

-ಎಚ್.ಎಸ್. ಪ್ರಭಾಕರ, ಹಿರಿಯ ಪತ್ರಕರ್ತರು,
ಪ್ರಧಾನ ಕಾರ್ಯದರ್ಶಿ, ಜಿಲ್ಲಾ ಪತ್ರಕರ್ತರ ಸಂಘ,
ಎಚ್.ಆರ್.ಎಸ್. ಕಾಂಪೌಂಡ್, ೬ನೇ ಕ್ರಾಸ್,
ಕೆ.ಆರ್. ಪುರಂ, ಹಾಸನ-೫೭೩ ೨೦೧