ವೇದಜೀವನ ಬ್ಲಾಗಿಗೆ ಸ್ವಾಗತ. ಸುವಿಚಾರಗಳು ಎಲ್ಲಿಂದಲಾದರೂ ಬರಲಿ, ಯಾರಿಂದಲಾದರೂ ಬರಲಿ, ಪೂರ್ವಾಗ್ರಹ ಪೀಡಿತರಾಗದೆ ಸ್ವೀಕರಿಸೋಣ.
ಮೂಢ ಉವಾಚ ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ
ಮೂಢ ಉವಾಚ ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ

ಭಾನುವಾರ, ಸೆಪ್ಟೆಂಬರ್ 11, 2016

ಮುಕ್ತಿಪಥ



      ಆದಿಗುರು ಶ್ರೀ ಶಂಕರಾಚಾರ್ಯ ವಿರಚಿತ 'ಸಾಧನಾಪಂಚಕಮ್' ಒಬ್ಬ ಸಾಧಕ ಅನುಸರಿಸಬೇಕಾದ ರೀತಿ-ನೀತಿಗಳನ್ನು ತಿಳಿಸುವ ಅಪೂರ್ವ ರಚನೆ. ಪರಮ ಸತ್ಯದ ದರ್ಶನ ಮಾಡಿಸುವ ಶ್ರೇಯಸ್ಕರ, ಸನ್ಮಾರ್ಗದ ಪಥವನ್ನು ತೋರಿಸುವ ಈ ಪಂಚಕದಲ್ಲಿ ಒಂದೊಂದರಲ್ಲಿ 8 ಸೂತ್ರಗಳಂತೆ ಒಟ್ಟು  40 ಸೂತ್ರಗಳನ್ನು ಅಳವಡಿಸಲಾಗಿದೆ. ಇದರ ಕನ್ನಡ ಭಾವಾನುವಾದವನ್ನು ಮೂಢನ ಮುಕ್ತಕಗಳ ರೂಪದಲ್ಲಿ ಸಹೃದಯರ ಮಂದಿಟ್ಟಿರುವೆ. ಮೂಲ ಕೃತಿಯನ್ನೂ ಇಲ್ಲಿ ಅವಗಾಹನೆಗೆ ಮಂಡಿಸಿದೆ.  
     ಮುಕ್ತಿಪಥ 
(ಆದಿಗುರು ಶ್ರೀ  ಶಂಕರಾಚಾರ್ಯರ ಸಾಧನಾ ಪಂಚಕದ 
ಕನ್ನಡ ಭಾವಾನುವಾದ - ಮೂಢನ ಮುಕ್ತಕಗಳ ರೂಪದಲ್ಲಿ)
ನಿತ್ಯ ವೇದಾಧ್ಯಯನ ಮಾಡುವವನಾಗಿ
ವೇದೋಕ್ತ ಕರ್ಮಗಳ ಪಾಲಿಸುವನಾಗಿ |
ಈಶಾರಾಧನೆಯಾಗೆ ಕರ್ಮಗಳು ಸಕಲ
ಮುಕ್ತಿಪಥದಲಿ ನೀನು ಮುನ್ನಡೆವೆ ಮೂಢ || ೧ || 

ಹಾದಿ ತಪ್ಪಿಸುವ ಕರ್ಮಗಳ ತ್ಯಜಿಸಿ
ಅಂತರಂಗದ ಕೊಳೆಯ ತೊಳೆದುಹಾಕಿ |
ಹೊರಸುಖದ ದೋಷವನು ಗುರುತಿಸುವನಾಗೆ
ಮುಕ್ತಿಪಥದಲಿ ನೀನು ಮುನ್ನಡೆವೆ ಮೂಢ || ೨ ||

ನಿನ್ನ ನಿಜರೂಪವನು ತಿಳಿಯಲೆಣಿಸಿರಲು
ಮೋಹ ಸಂಕಲೆಯ ಕಳೆಯಹೊರಟಿರಲು |
ಜ್ಞಾನಿಗಳ ಸಂಗದಲಿ ನಿಜವನರಿಯುತಿರೆ
ಮುಕ್ತಿಪಥದಲಿ ನೀನು ಮುನ್ನಡೆವೆ ಮೂಢ || ೩ ||

ಪರಮಾತ್ಮನಲಿ ಭಕ್ತಿ ಧೃಢವಾಗಿ ತಾನಿರಲು
ಶಾಂತಿ ಮತ್ತಿತರ ಗುಣಗಳನೆ ಪಡೆದಿರಲು |
ಸ್ವಾರ್ಥಪರ ಕರ್ಮದಲಿ ಆಸಕ್ತಿ ತ್ಯಜಿಸಿದೊಡೆ
ಮುಕ್ತಿಪಥದಲಿ ನೀನು ಮುನ್ನಡೆವೆ ಮೂಢ || ೪ ||

ಸದ್ವಿದ್ಯದಾತರಲಿ ಆಶ್ರಯವ ಪಡೆದಿರಲು
ಸದ್ಗುರು ಪಾದಸೇವೆಯನು ನಿತ್ಯ ಗೈದಿರಲು |
ತಿಳಿಯಲುಜ್ಜುಗಿಸೆ ಓಂಕಾರದರ್ಥವನು 
ಮುಕ್ತಿಪಥದಲಿ ನೀನು ಮುನ್ನಡೆವೆ ಮೂಢ || ೫ ||

ಉಪನಿಷದ್ವಾಕ್ಯಗಳು ಸುಮನನವಾಗಿರಲು
ವಾಕ್ಯಾಂತರಾರ್ಥದ ಜಿಜ್ಞಾಸೆ ಮಾಡುತಲಿ |
ಉನಿಷದ್ವಾಕ್ಯವದೆ ನಿಜಜ್ಞಾನವೆನಿಸಿರಲು
ಮುಕ್ತಿಪಥದಲಿ ನೀನು ಮುನ್ನಡೆವೆ ಮೂಢ || ೬ || 

ವಿತಂಡವಾದದೊಡೆ ಇರಿಸಿ ಅಂತರವ
ಉಪನಿಷತ್ತಿನ ಪಥವೆ ನಿನ್ನ ಪಥವೆನಿಸಿರಲು |
ಬ್ರಹ್ಮಾನುಭವದಲ್ಲಿ ಒಂದಾಗಿ ಸಾಗುತಿರೆ
ಮುಕ್ತಿಪಥದಲಿ ನೀನು ಮುನ್ನಡೆವೆ ಮೂಢ || ೭ ||

ಗರ್ವದಲಿ ಮೆರೆಯದಿರು ಎಂದೆಂದಿಗು
ಶರೀರವಿದು ನೀನಲ್ಲ ನೆನಪಿಟ್ಟಿರು |
ತಿಳಿದವರ ಕೂಡೆ ವಾದವನು ಮಾಡದಿರೆ
ಮುಕ್ತಿಪಥದಲಿ ನೀನು ಮುನ್ನಡೆವೆ ಮೂಢ || ೮ ||

ಹಸಿವು ರೋಗಗಳ ಪರಿಹರಿಸಿಕೊಳಬೇಕು
ದಿನನಿತ್ಯದಾಹಾರ ಔಷಧಿಯೊಲಿರಬೇಕು |
ರುಚಿಯಾದ ಭೋಜನವ ಬಯಸದಿರಲಾಗಿ
ಮುಕ್ತಿಪಥದಲಿ ನೀನು ಮುನ್ನಡೆವೆ ಮೂಢ || ೯ || 

ತಾನಾಗಿ ಬಂದುದೇ ಪರಮಾನ್ನವೆನಬೇಕು
ಶೀತೋಷ್ಣ ಆದಿಗಳ ಸಹಿಸಿಕೊಳಬೇಕು |
ಅನುಚಿತ ಮಾತುಗಳನಾಡದಿರೆ ಮನುಜ
ಮುಕ್ತಿಪಥದಲಿ ನೀನು ಮುನ್ನಡೆವೆ ಮೂಢ || ೧೦ || 

ನಿರ್ಲಿಪ್ತಭಾವವನು ಹೊಂದಿದವನಾಗಿ
ನಿಂದಾಪನಿಂದೆಗಳ ಗಣಿಸದಿರಬೇಕು |   
ಏಕಾಂತದಲಿ ಸುಖವನರಸುತಿರಲಾಗಿ
ಮುಕ್ತಿಪಥದಲಿ ನೀನು ಮುನ್ನಡೆವೆ ಮೂಢ || ೧೧ ||

ಪರಮಾತ್ಮನಲಿ ಚಿತ್ತ ಲೀನವಿರಿಸಲುಬೇಕು
ಎಲ್ಲೆಲ್ಲು ಅವನನ್ನೆ ಕಾಣುತಿರಬೇಕು |
ಜಗವಿದು ಮನಸಿನಾಟವೆಂದೆಣಿಸುತಿರೆ
ಮುಕ್ತಿಪಥದಲಿ ನೀನು ಮುನ್ನಡೆವೆ ಮೂಢ || ೧೨ ||

ಪೂರ್ವಕರ್ಮಗಳ ಫಲವನನುಭವಿಸಬೇಕು
ಒದಗುವ ಫಲದಿಂದ ಹೆದರದಿರಬೇಕು |
ಕರ್ಮಫಲವನನುಭವಿಸಿ ಕಳೆದಿರಲು
ಮುಕ್ತಿಪಥದಲಿ ನೀನು ಮುನ್ನಡೆವೆ ಮೂಢ || ೧೩ || 

ಬ್ರಹ್ಮಾನುಭವದಲ್ಲಿ ಅಚಲನಾಗಿರುತಿರಲು
ಪರಮಾನಂದವದು ಸನಿಹದಲಿರದೇನು |
ಆದಿಗುರು ಶಂಕರರು ತೋರಿರುವ ಮಾರ್ಗ
ಮನುಜಕುಲಕಿದು ಉತ್ತಮವು ಮೂಢ || ೧೪ ||
-ಕ.ವೆಂ.ನಾಗರಾಜ್.
***************
'ಸಾಧನಾ ಪಂಚಕಮ್'
ವೇದೋ ನಿತ್ಯಮಧೀಯತಾಂ ತದುದಿತಂ ಕರ್ಮ ಸ್ವನುಷ್ಠೀಯತಾಂ
ತೇನೇಶಸ್ಯ ವಿಧೀಯತಾಂ ಅಪಚಿತಿಃ ಕಾಮ್ಯೇ ಮತಿಸ್ತ್ಯಜತಾಮ್ |
ಪಾಪೌಘಃ ಪರುಧೂಯತಾಂ ಭವಸುಖೇ ದೋಷೋsನುಸಂಧೀಯತಾಂ
ಆತ್ಮೇಚ್ಛಾ ವ್ಯವಸೀಯತಾಂ ನಿಜಗೃಹಾತ್ ತೂರ್ಣಂ ವಿನಿರ್ಗಮ್ಯತಾಮ್ || ೧ ||

ಸಂಗಃಸತ್ಸು ವಿಧೀಯತಾಂ ಭಗವತೋ ಭಕ್ತಿರ್ದೃಢಾsಧೀಯತಾಂ 
ಶಾಂತ್ಯಾದಿಃ ಪರಿಚೀಯತಾಂ ದೃಢತರಂ ಕರ್ಮಾಶು ಸನ್ತ್ಯಜ್ಯತಾಮ್ |
ಅದ್ವಿದ್ವಾಬುಪಸೃಪ್ಯತಾಂ ಪ್ರತಿದಿನಂ ತತ್ಪಾದುಕಾ ಸೇವ್ಯತಾಂ
ಬ್ರಹ್ಮೈಕಾಕ್ಷರಮರ್ಥ್ಯತಾಂ ಶ್ರುತಿಶಿರೋವಾಕ್ಯಂ ಸಮಾಕರ್ಣ್ಯತಾಮ್ || ೨ ||

ವಾಕ್ಯಾರ್ಥಶ್ಚ ವಿಚಾರ್ಯತಾಂ ಶ್ರುತಿಶಿರಃ ಪಕ್ಷಃ ಸಮಾಶ್ರೀಯತಾಂ
ದುಸ್ತರ್ಕಾತ್ ಸುವಿರಮ್ಯತಾಂ ಶ್ರುತಿಮತಸ್ತರ್ಕೋsನುಸಂಧೀಯತಾಮ್ |
ಬ್ರಹ್ಮಾಸ್ಮೀತಿ ವಿಭಾವ್ಯತಾಂ ಅಹರಹರ್ಗರ್ವಃ ಪರಿತ್ಯಜ್ಯತಾಂ
ದೇಹೇsಹಂ ಮತಿರುಝ್ಯುತಾಂ ಬುಧಜನೈರ್ವಾದಃ ಪರಿತ್ಯಜ್ಯತಾಮ್ || ೩ ||

ಕ್ಷುದ್ ವ್ಯಾಧಿಶ್ಚ ಚಿಕಿತ್ಸ್ಯತಾಂ ಪ್ರತಿದಿನಂ ಭಿಕ್ಷೌಷಧಂ ಭುಜ್ಯತಾಂ
ಸ್ವಾದ್ಯನ್ನಂ ನ ತು ಯಾಚ್ಯತಾಂ ವಿಧಿವಶಾತ್ ಪ್ರಾಪ್ತೇನ ಸಂತುಷ್ಟತಾಮ್ |
ಶೀತೋಷ್ಣಾದಿ ವಿಷಹ್ಯತಾಂ ನ ತು ವೃಥಾ ವಾಕ್ಯಂ ಸಮುಚ್ಚಾರ್ಯತಾಂ
ಔದಾಸೀನ್ಯಮಭೀಷ್ಟತಾಂ ಜನಕೃಪಾನೈಷ್ಠುರ್ಯಮುತ್ ಸೃಜ್ಯತಾಮ್ || ೪ ||

ಏಕಾಂತೇ ಸುಖಮಾಸ್ಯತಾಂ ಪರತರೇ ಚೇತಃ ಸಮಾಧೀಯತಾಂ
ಪೂರ್ಣಾತ್ಮಾ ಸುಸಮೀಕ್ಷತಾಂ ಜಗದಿದಂ ತದ್ಭಾದಿತಂ ದೃಶ್ಯತಾಮ್ |
ಪ್ರಾಕ್ಕರ್ಮ ಪ್ರವಿಲಾಪ್ಯತಾಂ ಚಿತಿಬಲಾನ್ನಾಪ್ಯುತ್ತರೈಃ ಶ್ಲಿಷ್ಯತಾಂ
ಪ್ರಾರಬ್ಧಂ ತ್ವಿಹ ಭುಜ್ಯತಾಂ ಅಥ ಪರಬ್ರಹ್ಮಾತ್ಮನಾ ಸ್ಥೀಯತಾಮ್ || ೫ ||

ಭಾನುವಾರ, ನವೆಂಬರ್ 7, 2010

ಮೂಢ ಉವಾಚ -21

ಭಯದ ಮಹಿಮೆಯನರಿಯದವರಾರಿಹರು?
ಭಯವಿಲ್ಲದಾ ಜೀವಿಯದಾವದಿರಬಹುದು?|
ನಿಶಾಭಯ ಏಕಾಂತಭಯ ಅಭದ್ರತೆಯ ಭಯ
ಭಯದಿಂದ ಮೂಡಿಹನೆ ಭಗವಂತ ಮೂಢ?||


ಭೋಗಿಯಾದವಗೆ ರೋಗಿಯಾಗುವ ಭಯ
ರೋಗಿಯಾದವಗೆ ಸಾವು ಬಂದೆರಗುವ ಭಯ|
ಅಭಿಮಾನಧನನಿಗೆ ಮಾನಹಾನಿಯ ಭಯ
ಭಯದ ಕಲ್ಪನೆಯೇ ಭಯಾನಕವು ಮೂಢ||


ಸತ್ಕುಲಜಾತನಿಗೆ ಹೆಸರು ಕೆಡುವ ಭಯ
ಧನವಿರಲು ಚೋರಭಯ ಮೇಣ್ ರಾಜಭಯ|
ಸಜ್ಜನರಿಂಗೆ ಕುಜನರು ಕಾಡುವ ಭಯ
ಭಯ ಭಯ ಭಯಮಯವೀ ಲೋಕ ಮೂಢ||


ಸಿರಿವಂತನಿಗೆ ದಾರಿದ್ರ್ಯ ಬಂದೀತೆಂಬ ಭಯ
ಬಲಶಾಲಿಯಾದವಗೆ ಶತ್ರು ಸಂಚಿನ ಭಯ|
ಮೇಲೇರಿದವಗೆ ಕೆಳಗೆ ಬಿದ್ದೇನೆಂಬ ಭಯ
ಭಯಮುಕ್ತನವನೊಬ್ಬನೇ ವಿರಾಗಿ ಮೂಢ||
*************
-ಕವಿನಾಗರಾಜ್.

ಬುಧವಾರ, ಅಕ್ಟೋಬರ್ 20, 2010

ಮೂಢ ಉವಾಚ -20

ಕೋಪಿಷ್ಠರೊಡನೆ ಬಡಿದಾಡಬಹುದು
ಅಸಹನೀಯವದು ಮಚ್ಚರಿಗರ ಪ್ರೇಮ|
ಪರರುತ್ಕರ್ಷ ಸಹಿಸರು ಕರುಬಿಯುರಿಯುವರು
ಉದರದುರಿಯನಾರಿಸುವರಾರೋ ಮೂಢ||


ಭುಕ್ತಾಹಾರ ಜೀರ್ಣಿಸುವ ವೈಶ್ವಾನರ*
ಕಂಡವರನು ಸುಡುವನೆ ಅಸೂಯಾಪರ|
ಶತಪಾಲು ಲೇಸು ಮಂಕರೊಡನೆ ಮೌನ
ಬೇಡ ಮಚ್ಚರಿಗರೊಡನೆ ಸಲ್ಲಾಪ ಮೂಢ||


ಸದ್ಗುಣಕಮಲಗಳು ಕಮರಿ ಕಪ್ಪಡರುವುವು
ಸರಿಯು ತಪ್ಪೆನಿಸಿ ತಪ್ಪು ಒಪ್ಪಾಗುವುದು|
ಅರಿವು ಬರುವ ಮುನ್ನಾವರಿಸಿ ಬರುವ ಮತ್ಸರವು
ನರರ ಕುಬ್ಜರಾಗಿಸುವುದು ಮೂಢ||
[* ವೈಶ್ವಾನರ ಎಂಬುದು ಹೊಟ್ಟೆಯೊಳಗೆ ಇರುವ ಕಿಚ್ಚು. ತಾಯಿಯ ಗರ್ಭದಲ್ಲಿರುವಾಗಲೇ ಹುಟ್ಟುವ ಈ ಕಿಚ್ಚು ತಿಂದ ಆಹಾರವನ್ನು ಜೀರ್ಣಿಸುತ್ತದೆ.]
********************
-ಕ.ವೆಂ.ನಾಗರಾಜ್.

ಭಾನುವಾರ, ಅಕ್ಟೋಬರ್ 3, 2010

ಮೂಢ ಉವಾಚ -19

ಮದಭರಿತ ಮನುಜನ ಪರಿಯೆಂತು ನೋಡು
ನಡೆಯುವಾ ಗತ್ತು ನುಡಿಯುವಾ ಗಮ್ಮತ್ತು|
ಮೇಲರಿಮೆಯಾ ಭೂತ ಅಡರಿಕೊಂಡಿಹುದು
ಭೂತಕಾಟವೇ ಬೇಡ ದೂರವಿರು ಮೂಢ||


ಕಣ್ಣೆತ್ತಿ ನೋಡರು ಪರರ ನುಡಿಗಳನಾಲಿಸರು
ದರ್ಪದಿಂ ವರ್ತಿಸುತ ಕೊಬ್ಬಿ ಮೆರೆಯುವರು|
ಮೂಲೋಕದೊಡೆಯರೇ ತಾವೆಂದು ಭಾವಿಸುತ
ಮದೋನ್ಮತ್ತರೋಲಾಡುವರು ಮೂಢ||


ಮದೋನ್ಮತ್ತನಾ ಮಹಿಮೆಯನೆಂತು ಬಣ್ಣಿಸಲಿ?
ಉದ್ಧಟತನವೆ ಮೈವೆತ್ತು ದರ್ಪದಿಂ ದಿಟ್ಟಿಸುವ|
ಎದುರು ಬಂದವರ ಕಡೆಗಣಿಸಿ ತುಳಿಯುವ
ಮದಾಂಧನದೆಂತ ಠೇಂಕಾರ ನೋಡು ಮೂಢ||


ಮದಸೊಕ್ಕಿ ಮೆರೆದವರೊಡನಾಡಬಹುದೆ?
ನಯ ವಿನಯ ಸನ್ನಡತೆಗವಕಾಶ ಕೊಡದೆ|
ವಿಕಟನರ್ತನಗೈವ ಮದವದವನತಿ ತರದೆ?|
ನರಾರಿ ಮದದೀಪರಿಯ ನೀನರಿ ಮೂಢ||
**************
-ಕವಿನಾಗರಾಜ್.

ಬುಧವಾರ, ಸೆಪ್ಟೆಂಬರ್ 29, 2010

ಮೂಢ ಉವಾಚ -8

                 ನನ್ನದು?
ಇರುವುದು ನಿನದಲ್ಲ ಬರುವುದು ನಿನಗಲ್ಲ
ತರಲಾರದ ನೀನು ಹೊರುವೆಯೇನನ್ನು?
ಇದ್ದುದಕೆ ತಲೆಬಾಗಿ ಬಂದುದಕೆ ಋಣಿಯಾಗಿ
ಫಲಧಾರೆ ಹರಿಯಗೊಡು ಮರುಳು ಮೂಢ ||

               ದೀಪಾವಳಿ
ಒಡಲಗುಡಿಯ ರಜ-ತಮಗಳ ಗುಡಿಸಿ
ಒಳಗಣ್ಣಿನಲಿ ಕಂಡ ಸತ್ವವನು ಉರಿಸಿ |
ಮನದ ಕತ್ತಲ ಕಳೆದು ತಿಳಿವಿನ ಬೆಳಕ
ಪಸರಿಪುದೆ ದೀಪಾವಳಿ ತಿಳಿ ಮೂಢ ||

              ಸಮಪಾಲು
ಅಹುದಿಹುದು ಅಡೆತಡೆಯು ಬಾಳಹಾದಿಯಲಿ
ಸಾಗಬೇಕರಿತು ಪತಿ ಪತ್ನಿ ಜೊತೆಜೊತೆಯಲಿ |
ಸಮಪಾಲು ಪಡೆದಿರಲು ನೋವು ನಲಿವಿನಲಿ
ಬಾಳು ಬಂಗಾರ ಬದುಕು ಸಿಂಗಾರ ಮೂಢ ||

             ನೀತಿವಂತ
ನೀತಿವಂತರ ನಡೆಯು ನ್ಯಾಯಕಾಸರೆಯು
ನುಡಿದಂತೆ ನಡೆಯುವರು ಸವಿಯ ನೀಡುವರು |
ಪ್ರಾಣವನೆ ಪಣಕಿಟ್ಟು ಮಾತನುಳಿಸುವರು
ಜಗದ ಹಿತ ಕಾಯ್ವ ಧೀರರವರು ಮೂಢ ||
************
-ಕ.ವೆಂ.ನಾಗರಾಜ್

ಬುಧವಾರ, ಸೆಪ್ಟೆಂಬರ್ 22, 2010

ಮೂಢ ಉವಾಚ -7

ಸೂತ್ರ
ಸರಸರನೆ ಮೇಲೇರಿ ಗಿರಕಿ ತಿರುಗಿ
ಪರಪರನೆ ಹರಿದು ದಿಕ್ಕೆಟ್ಟು ತಲೆಸುತ್ತಿ
ಬೀಳುವುದು ಗಾಳಿಪಟ ಬಂಧ ತಪ್ಪಿದರೆ
ಸೂತ್ರ ಹರಿದರೆ ಎಚ್ಚರವಿರು ಮೂಢ


ನಾನತ್ವ
ತಾನೇ ಸರಿ ತನ್ನದೇ ಸರಿ ಕಾಣಿರಿ
ಎಂಬ ಸರಿಗರ ಸಿರಿಗರ ಬಡಿದ ಪರಿ
ಏನು ಪೇಳ್ವುದೋ ತಿಪ್ಪೆಯ ಒಡೆಯ
ತಾನೆಂಬ ಶುನಕದ ಹಿರಿಮೆಗೆ ಮೂಢ


ಹೆದರಿಕೆ
ಅವರಿಲ್ಲ ಇವರಿಲ್ಲ ನಿನ್ನವರು ಯಾರಿಲ್ಲ
ಹಿತವಿಲ್ಲದ ಕಹಿಪ್ರವರ ಜಗಕೆ ಬೇಕಿಲ್ಲ
ಬಿದ್ದೆದ್ದು ನಡೆಯದಿರೆ ಒಗೆಯುವರು ಕಲ್ಲ
ಹೆದರಿಕೆ ಸಲ್ಲ ದೇವನಿಹನಲ್ಲ ಮೂಢ

ತೃಪ್ತಿ
ಉಣ್ಣಲುಡಲಿರಬೇಕು ನೆರಳಿರಬೇಕು
ಮನವರಿತು ಅನುಸರಿಪ ಮಡದಿ ಬೇಕು
ಬೆಳಕಾಗಿ ಬಾಳುವ ಮಕ್ಕಳಿರಬೇಕು
ಇರುವುದೇ ಸಾಕೆಂಬ ಮನ ಬೇಕು ಮೂಢ
***********
-ಕ.ವೆಂ.ನಾಗರಾಜ್

ಭಾನುವಾರ, ಸೆಪ್ಟೆಂಬರ್ 12, 2010

ಮೂಢ ಉವಾಚ -6

ಅರಿವು
ಸೋತೆನೆಂದೆನಬೇಡ ಸೋಲು ನೀನರಿತೆ
ಬಿದ್ದೆನೆಂದೆನಬೇಡ ನೋವು ನೀನರಿತೆ
ಸೋಲರಿತು ನೋವರಿತು ಹಸಿವರಿತು
ಜಗವರಿಯೆ ನೀನೇ ಗೆಲುವೆ ಮೂಢ

ಕೊಂಬೆ
ರಸಭರಿತ ಫಲಮೂಲ ಕೊಂಬೆ ತಾನಲ್ಲ
ಫಲಸತ್ವ ಸಾಗಿಪ ಮಾರ್ಗ ತಾನಹುದು
ಮಾಡಿದೆನೆನಬೇಡ ನಿನ್ನದೆನಬೇಡ
ಜಗವೃಕ್ಷರಸ ಹರಿವ ಕೊಂಬೆ ನೀನು ಮೂಢ

ಯಾರು?
ಕೆಲಸವಿರೆ ಓಲೈಸುವರು ಇಲ್ಲದಿರೆ ಹೀನೈಸುವರು
ಎಲ್ಲರ ಸೇವೆ ಬಯಸುವರು ತಾನಾರಿಗೂ ಆಗರು
ಕಂಡರೂ ಕಾಣದೊಲು ನಟಿಸುವ ಚತುರರಿವರು
ಇವರೊಳು ನೀಯಾರು ನಾಯಾರು ಹೇಳು ಮೂಢ

ಯಾರು?
ಆಪತ್ತಿಗಾಗುವರಿಹರು ತಿರುಗಿ ನೋಡದವರಿಹರು
ಒಳಿತು ಹಾರೈಸುವರಿಹರು ಕೆಡಕು ಬಯಸುವರಿಹರು
ಒಳಿತು ಮಾಡದ ಕೆಡಕು ಎಣಿಸಲರಿಯರಿಹರು
ಇವರೊಳು ನೀಯಾರು ನಾಯಾರು ಹೇಳು ಮೂಢ
*************
-ಕವಿನಾಗರಾಜ್.

ಶುಕ್ರವಾರ, ಆಗಸ್ಟ್ 20, 2010

ಮೂಢ ಉವಾಚ -4

ಪ್ರೀತಿಯ ಶಕ್ತಿ
ವೈರಿಯ ಅಬ್ಬರಕೆ ಬರೆಯೆಳೆಯಬಹುದು
ಕಪಟಿಯಾಟವನು ಮೊಟಕಿಬಿಡಬಹುದು
ಮನೆಮುರುಕರನು ತರುಬಿಬಿಡಬಹುದು
ಪ್ರೀತಿಯ ಆಯುಧಕೆ ಎಣೆಯುಂಟೆ ಮೂಢ

ನಲ್ನುಡಿ
ನಿಂದನೆಯ ನುಡಿಗಳು ಅಡಿಯನೆಳೆಯುವುವು
ಮೆಚ್ಚುಗೆಯ ಸವಿಮಾತು ಪುಟಿದೆಬ್ಬಿಸುವುದು
ಪರರ ನಿಂದಿಪರ ಜಗವು ಹಿಂದಿಕ್ಕುವುದು
ವಂದಿತನಾಗು ನಲ್ನುಡಿಯೊಡೆಯನಾಗು ಮೂಢ

ಯಾರು?
ಸಂಬಂಧ ಬೇಕೆಂಬರಿಹರು ಯಾಕೆಂಬರಿಹರು
ಬೆಸೆಯುವರಿಹರು ಬೆಸೆದುಕೊಂಬವರಿಹರು
ಮುರಿಯುವವರಿಹರು ಮುರಿದುಕೊಂಬವರಿಹರು
ಇವರೊಳು ನೀಯಾರು ನಾಯಾರು ಹೇಳು ಮೂಢ

ಜಗದ ಪರಿ
ಗಂಟಿರಲು ನಂಟಿಹುದು ಇಲ್ಲದಿರೆ ಏನಹುದು
ಕಸುವಿರಲು ಬಂಧುಗಳು ಇಲ್ಲದಿರೆ ಉಂಡೆಲೆಯು
ನಗುವಿರಲು ನೆಂಟತನ ಇಲ್ಲದಿರೆ ಒಂಟಿತನ
ಜಗದ ಪರಿಯಿದು ಏನೆನುವಿಯೋ ಮೂಢ
**************
-ಕವಿನಾಗರಾಜ್.

ಭಾನುವಾರ, ಆಗಸ್ಟ್ 15, 2010

ಮೂಢ ಉವಾಚ -3

ಏಕೆ ಹೀಗೆ?
ಅದರದು ಮನ ಕುಹಕಿಗಳ ಕುಟುಕಿಗೆ
ಬೆದರದು ತನು ಪಾತಕಿಗಳ ಧಮಕಿಗೆ|
ಮುದುಡುವುದು ಮನವು ಕದಡುವುದು
ಪ್ರಿಯರ ಹೀನೈಕೆಗೆ ಹೀಗೇಕೋ ಮೂಢ||

ಕೋಪ
ಅಡಿಗಡಿಗೆ ಕಾಡಿ ಶಿರನರವ ತೀಡಿ
ಮಿಡಿದಿಹುದು ಉಡಿಯೊಳಗಿನ ಕಿಡಿಯು|
ಗಡಿಬಿಡಿಯಡಲಡಿಯಿಡದೆ ತಡೆತಡೆದು
ಸಿಡಿನುಡಿಯ ನೀಡು ಸಿಹಿಯ ಮೂಢ||

ಯಶದ ಹಾದಿ
ಒಲವೀವುದು ಗೆಲುವು ಬಲವೀವುದು
ಜೊತೆಜೊತೆಗೆ ಮದವು ಮತ್ತೇರಿಸುವುದು|
ಸೋಲಿನವಮಾನ ಛಲ ಬೆಳೆಸುವುದು
ಯಶದ ಹಾದಿ ತೋರುವುದೋ ಮೂಢ|

ಬಿರುಕು
ಆತುರದ ಮಾತು ಮಾನ ಕಳೆಯುವುದು
ಕೋಪದ ನಡೆನುಡಿ ಸಂಬಂಧ ಕೆಡಿಸುವುದು|
ತಪ್ಪರಿತು ಒಪ್ಪಿದೊಡೆ ಬಿರುಕು ಮುಚ್ಚುವುದು
ಬಿರುಕು ಕಂದರವಾದೀತು ಜೋಕೆ ಮೂಢ||


-ಕ.ವೆಂ.ನಾಗರಾಜ್.

ಮಂಗಳವಾರ, ಆಗಸ್ಟ್ 10, 2010

ಮೂಢ ಉವಾಚ -2

ಲೋಭ
ಸ್ನೇಹ ಪ್ರೀತಿಯಲು ಲಾಭವನೆ ಅರಸುವರು 
ಕಿಂಚಿತ್ತು ಪಡೆಯಲು ಶಾಶ್ವತವ ಕಳೆಯುವರು |
ವಿಶ್ವಾಸದಮೃತಕೆ ವಿಷವ ಬೆರೆಸುವರಿಹರು 
ಇಂಥವರ ಸಂಗದಿಂ ದೂರವಿರು ಮೂಢ||

ನಾನತ್ವ
ತಾವೆ ಮೇಲೆಂಬರು ಇತರರನು ಹಳಿಯುವರು 
ಪರರೇಳಿಗೆಯ ಸಹಿಸರು ಕಟುಕಿ ಮಾತಾಡುವರು |
ಅರಿಯರವರು ಇತರರಿಗೆ ಬಯಸುವ ಕೇಡದು 
ಎರಡಾಗಿ ಬಂದೆರಗುವುದೆಂಬುದನು ಎಲೆ ಮೂಢ ||

ಬಯಕೆ
ಬಯಕೆಗೆ ಕೊನೆಯಿಲ್ಲ ಬಯಕೆಗೆ ಮಿತಿಯಿಲ್ಲ 
ಬಯಕೆ ಬೀಜಾಸುರನ ಸಂತತಿಗೆ ಸಾವಿಲ್ಲ |
ಬಯಕೆ ಜೀವನವು ಬಯಸುವುದು ತಪ್ಪಲ್ಲ 
ಸ್ವಬಲವೇ ಹಂಬಲಕೆ ಬೆಂಬಲವು ಮೂಢ ||
-ಕ.ವೆಂ.ನಾಗರಾಜ್.

ಶನಿವಾರ, ಆಗಸ್ಟ್ 7, 2010

ಮೂಢ ಉವಾಚ -1

ನಿಜಮುಖ
ಅತ್ತಮುಖ ಇತ್ತಮುಖ ಎತ್ತೆತ್ತಲೋ ಮುಖ 
ಏಕಮುಖ ಬಹುಮುಖ ಸುಮುಖ ಕುಮುಖ !
ಮುಖದೊಳಗೊಂದು ಮುಖ ಹಿಮ್ಮುಖ ಮುಮ್ಮುಖ 
ಮುಖಾಮುಖಿಯಲ್ಲಿ ನಿಜಮುಖವೆಲ್ಲೋ ಮೂಢ ||

ಒಳಿತು - ಕೆಡುಕು
ಸಜ್ಜನನು ಬೇರಲ್ಲ ದುರ್ಜನನು ಬೇರಿಲ್ಲ 
ಬುದ್ಧನೂ ಬೇರಲ್ಲ ಹಿಟ್ಲರನೂ ಬೇರಿಲ್ಲ |
ಕೆಡುಕದು ಬೇರಲ್ಲ ಒಳ್ಳಿತದು ಬೇರಿಲ್ಲ 
ಎಲ್ಲ ನೀನೆ ಎಲ್ಲವೂ ನಿನ್ನೊಳಗೆ ಮೂಢ ||

ಮಹಿಮೆ
ಅತಿವಿನಯ ತೋರುವರು ಸುಮ್ಮನೆ ಹೊಗಳುವರು 
ಸೇವೆಯನು ಗೈಯುವರು ನಂಬಿಕೆಯ ನಟಿಸುವರು |
ನೀನೆ ಗತಿ ನೀನೆ ಮತಿ ಪರದೈವವೆನ್ನುವರು 
ಕುರ್ಚಿಯಾ ಮಹಿಮೆಯದು ಉಬ್ಬದಿರು ಮೂಢ ||

ಹಣ - ಗುಣ
ಗತಿಯು ತಿರುಗುವುದು ಮತಿಯು ಅಳಿಯುವುದು
ಬಂಧುತ್ವ ಮರೆಸುವುದು ಸ್ನೇಹಿತರು ಕಾಣಿಸರು |
ನಾನತ್ವ ಮೆರೆಯುವುದು ಪೊರೆಯು ಮುಸುಕುವುದು 
ಹಣವು ಗುಣವ ಹಿಂದಿಕ್ಕುವುದು ಕಾಣೋ ಮೂಢ ||
-ಕ.ವೆಂ.ನಾಗರಾಜ್.