ವೇದಜೀವನ ಬ್ಲಾಗಿಗೆ ಸ್ವಾಗತ. ಸುವಿಚಾರಗಳು ಎಲ್ಲಿಂದಲಾದರೂ ಬರಲಿ, ಯಾರಿಂದಲಾದರೂ ಬರಲಿ, ಪೂರ್ವಾಗ್ರಹ ಪೀಡಿತರಾಗದೆ ಸ್ವೀಕರಿಸೋಣ.

ಶನಿವಾರ, ಮಾರ್ಚ್ 26, 2011

ಪಂ. ಸುಧಾಕರ ಚತುರ್ವೇದಿಯವರ ಸತ್ಸಂಗದಲ್ಲಿ ಕಳೆದ ಒಂದು ಸಾರ್ಥಕ ಸಂಜೆ



 ಪಂ. ಸುಧಾಕರ ಚತುರ್ವೇದಿಯವರು
                           
     ಪಂ.ಸುಧಾಕರ ಚತುರ್ವೇದಿಯವರು ೧೮೯೭ರ ರಾಮನವಮಿಯಂದು ಬೆಂಗಳೂರಿನ ಬಳೇಪೇಟೆಯಲ್ಲಿ ಜನಿಸಿ, ೧೩ನೆಯ ವಯಸ್ಸಿನಲ್ಲಿ ಉತ್ತರ ಭಾರತದ ಪ್ರಸಿದ್ಧ ಕಾಂಗಡಿ ಗುರುಕುಲಕ್ಕೆ ಸೇರಿ ನಾಲ್ಕು ವೇದಗಳನ್ನು ಅಧ್ಯಯನ ಮಾಡಿ ನಿಜ ಅರ್ಥದಲ್ಲಿ ’ಚತುರ್ವೇದಿ’ಯಾದವರು. ಗಾಂಧೀಜಿಯವರ ಒಡನಾಡಿಯಾಗಿದ್ದವರು. ಸ್ವಾತಂತ್ರ್ಯಚಳುವಳಿಯಲ್ಲಿ ಸಕ್ರಿಯವಾಗಿ ಭಾಗಿಯಾಗಿ ೧೩ ವರ್ಷಗಳಿಗೂ ಹೆಚ್ಚುಕಾಲ ಸೆರೆವಾಸ ಅನುಭವಿಸಿದವರು. ಜಲಿಯನ್‌ವಾಲಾಬಾಗ್ ಹತ್ಯಾಕಾಂಡದ ಸಾಕ್ಷಿಯಾಗಿದ್ದವರು, ಗಾಂಧೀಜಿಯವರ ಸೂಚನೆಯಂತೆ ಅಲ್ಲಿ ಹತ್ಯೆಯಾದವರ ಸಾಮೂಹಿಕ ಶವಸಂಸ್ಕಾರ ಮಾಡಿದವರು. ಕ್ರಾಂತಿಕಾರಿ ಭಗತ್‌ಸಿಂಗರ ಗುರುವಾಗಿದ್ದವರು. ಅವರು ಹಿಂದೊಮ್ಮೆ ’ವಿಜಯ ಕರ್ನಾಟಕ’ ಪತ್ರಿಕೆಗೆ ಸಂದರ್ಶನದಲ್ಲಿ ಹೇಳಿದ್ದು: "ನಾನು ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗವಹಿಸಲು ಪ್ರೋತ್ಸಾಹ ಸ್ವಾಮಿ ಶ್ರದ್ಧಾನಂದರದಾದರೂ ಆಂತರಿಕವಾಗಿ ವೇದಗಳೇ ಪ್ರೇರಣೆ. ’ಅಧೀನಾಃ ಸ್ಯಾಮ ಶರದಃ ಶತಂ, ಭೂಯಶ್ಚ ಶರದಃ ಶತಾತ್’ - ನೂರು ವರ್ಷಕ್ಕೂ ಹೆಚ್ಚುಕಾಲ ಸ್ವಾತಂತ್ರ್ಯದಿಂದ ಬಾಳೋಣ ಎಂಬ ಅರ್ಥದ ಸಾಲು ಸಂಗ್ರಾಮಕ್ಕೆ ಕರೆತಂದಿತು. ಭಾರತೀಯರಿಗೆ ಗೌರವ ಕೊಡದೆ ಅವರು ಕೀಳಾಗಿ ಕಾಣುತ್ತಿದ್ದುದು ನಾವೆಲ್ಲಾ ಚಳುವಳಿಗೆ ಧುಮುಕಲು ಪ್ರೇರಣೆಯಾಯಿತು". ಬರಲಿರುವ ರಾಮನವಮಿಗೆ ೧೧೫ ವರ್ಷಗಳಿಗೆ ಕಾಲಿರಿಸಲಿರುವ ಇವರು ಬೆಂಗಳೂರಿನ ಜಯನಗರದ ೫ನೆಯ ಬ್ಲಾಕಿನಲ್ಲಿ ಶ್ರೀ ಕೃಷ್ಣಸೇವಾಶ್ರಮದ ಆಸ್ಪತ್ರೆಯ ಎದುರು ಸಾಲಿನಲ್ಲಿರುವ ಮನೆಯೊಂದರಲ್ಲಿ ವಾಸವಿದ್ದಾರೆ. ಪ್ರತಿ ಶನಿವಾರ ಸಾಯಂಕಾಲ ಇವರ ಮನೆಯಲ್ಲಿ ಸತ್ಸಂಗ ಇದ್ದು ಆಸಕ್ತರಿಗೆ ಮಾರ್ಗದರ್ಶನ ಮಾಡುತ್ತಿದ್ದಾರೆ. ಕಳೆದ ೧೯-೦೩-೨೦೧೧ರಂದು ನನ್ನ ಪತ್ನಿ ಮತ್ತು ಮಗನೊಂದಿಗೆ ಅಂತಹ ಒಂದು ಸತ್ಸಂಗದಲ್ಲಿ ಪಾಲುಗೊಂಡದ್ದು ನನ್ನ ಪುಣ್ಯವಿಶೇಷ.

ಪಂಡಿತರ ಸಾನ್ನಿಧ್ಯದ ಸಂತಸದಲ್ಲಿ ನಮ್ಮ ಕುಟುಂಬ
       
ಅಗ್ನಿಹೋತ್ರ


       

     ಸರಿಯಾಗಿ ಸಾಯಂಕಾಲ ೫-೩೦ಕ್ಕೆ ಪ್ರಾರಂಭವಾದ ಈ ಕಾರ್ಯಕ್ರಮದಲ್ಲಿ (೫-೨೫ರಲ್ಲಿ ಸಮಯ ವಿಚಾರಿಸಿದ ಅವರು, ಇನ್ನೂ ೫ ನಿಮಿಷವಿದೆ ಎಂದು ಹೇಳಿದ್ದರು) ಮೊದಲಿಗೆ ಸುಮಾರು ೧೫-೨೦ ನಿಮಿಷಗಳ ಕಾಲ ಬಂದಿದ್ದ ಮಹಿಳೆಯರ ಪೈಕಿ ನಾಲ್ವರು ಭಾಗವಹಿಸಿದ ಅಗ್ನಿಹೋತ್ರಕ್ಕೆ ನಾವು ಸಾಕ್ಷಿಯಾದೆವು. ನಂತರದಲ್ಲಿ ಸುಮಾರು ೪೫-೫೦ ನಿಮಿಷಗಳ ಕಾಲ ಪಂ. ಸುಧಾಕರ ಚತುರ್ವೇದಿಯವರು ಬಂದಿದ್ದವರಿಗೆ ತಮ್ಮ ವಿಚಾರಗಳನ್ನು ಮುಂದಿಟ್ಟರು. ವಯೋಮಾನದ ಕಾರಣ ಕೆಲವು ಪದಗಳು ಅಸ್ಪಷ್ಟವೆಂದೆನಿಸಿದರೂ ಗಮನವಿರಿಸಿದರೆ ಅರ್ಥವಾಗುತ್ತಿತ್ತು. ಅವರು ತಿಳಿಸಿದ ಸಂಗತಿಗಳನ್ನು ನಿಮ್ಮೊಡನೆ ಹಂಚಿಕೊಳ್ಳಬಯಸಿ ಈ ಲೇಖನ. ಅವರ ಅಂದಿನ ವಿಚಾರದ ತುಣುಕುಗಳು, ಇದೋ ನಿಮ್ಮ ಮುಂದೆ:

                          
ವಿಚಾರ ಮಾಡೋಣ
     ನಾಲಿಗೆ ಎರಡು ಅಲಗಿನ ಕತ್ತಿಯಿದ್ದಂತೆ. ಆಡುವ ಮಾತಿನಲ್ಲಿ ನಿಯಂತ್ರಣವಿರಬೇಕು. ಇಲ್ಲದಿದ್ದರೆ ಅದು ಇತರರನ್ನು ಮಾತ್ರವಲ್ಲದೆ ಆಡಿದವರನ್ನೂ ಘಾತಿಸುತ್ತದೆ. ಪಿಪ್ಪಲಾದ ಎಂಬ ಋಷಿಗೆ ಆ ಹೆಸರು ಬಂದದ್ದು ಆತ ಕೆಳಗೆ ಬಿದ್ದಿದ್ದ ಫಲವನ್ನು ಮಾತ್ರ ತಿನ್ನುತ್ತಿದ್ದರಿಂದ. ಗೌತಮನಿಗೆ ಅಕ್ಷಪಾದ -ಅಂದರೆ ಕಾಲಿನಲ್ಲಿ ಕಣ್ಣಿದ್ದವನು- ಎಂಬ ಹೆಸರೂ ಇತ್ತು. ಆತ ನಡೆದಾಡುವಾಗ ಯಾವುದೇ ಕ್ರಿಮಿ, ಕೀಟಗಳಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸುತ್ತಿದ್ದ. ಅವರುಗಳು ಅಷ್ಟರಮಟ್ಟಿಗೆ ಇತರರನ್ನು ನೋಯಿಸಬಾರದೆಂಬ ಮನೋಭಾವ ಹೊಂದಿದ್ದರು. ಮಾತು ಅನ್ನುವುದು ಬಾಣವಿದ್ದಂತೆ. ಆಡಿದ ಮೇಲೆ ಮುಗಿಯಿತು. ಬಾಣ ತನ್ನ ಗುರಿಯನ್ನು ಛೇದಿಸುವಂತೆ ಪಾಪವನ್ನು ದೂರ ಮಾಡುವಂತಿರಬೇಕು, ಇತರರನ್ನು ಚುಚ್ಚುವಂತಿರಬಾರದು. ಮನಸ್ಸಿಗೆ ಹಿತ, ಸಂತೋಷ ತರಬೇಕು. ನಮಗೆ ಕೆಟ್ಟದಾದಾಗ, ತೊಂದರೆಯಾದಾಗ ಪರಮಾತ್ಮನನ್ನು ದೂಷಿಸುವುದು ಸರಿಯಲ್ಲ. ನಮಗೆ ಕೆಟ್ಟದಾಗಲು ಕಾರಣ ನಮ್ಮ ತಪ್ಪೇ ಹೊರತು ಪರಮಾತ್ಮನದಲ್ಲ ಎಂಬುದನ್ನು ಅರಿಯಬೇಕು. ನಮಗೆ ಕಷ್ಟವನ್ನು ಎದುರಿಸಲು ಶಕ್ತಿ ಕೊಡು ಎಂದು ಪ್ರಾರ್ಥಿಸಬೇಕೇ ಹೊರತು ಅವನನ್ನು ಬಯ್ಯಬಾರದು. ನಾವು ಹೊಗಳಿದರೂ ಅಷ್ಟೆ, ತೆಗಳಿದರೂ ಅಷ್ಟೆ, ಪರಮಾತ್ಮ ಪರಮಾತ್ಮನೇ. ಅವನು ನಿರ್ಲಿಪ್ತ. ಹೊಗಳುತ್ತಾರೆಂದು ಒಳ್ಳೆಯದು ಮಾಡುತ್ತಾನೆ, ತೆಗಳುತ್ತಾರೆಂದು ಕೆಟ್ಟದು ಮಾಡುತ್ತಾನೆ ಎಂದು ಭಾವಿಸುವುದು ಮೂರ್ಖತನ. ಎಲ್ಲಿ ನ್ಯಾಯ, ಸತ್ಯ, ಧರ್ಮ ಇರುತ್ತದೋ ಅಲ್ಲಿ ಭಗವಂತನಿರುತ್ತಾನೆ. ಇದರ ಅರಿವಾದರೆ ಪಾಪ ಮಾಡಲು ಧೈರ್ಯ ಬರುವುದಿಲ್ಲ.
     ಭಗವಂತ ಸರ್ವಶಕ್ತ, ಸರ್ವವ್ಯಾಪಕ, ನಿರಾಕಾರ. ಯಜುರ್ವೇದದ ಈ ಮಂತ್ರ ಕೇಳಿ:
ತದೇಜತಿ ತನ್ಮೈಜತಿ ತದ್ದೂರೇ ತದ್ವಂತಿಕೇ |
ತದಂತರಸ್ಯ ಸರ್ವಸ್ಯ ತದು ಸರ್ವಸ್ಯಾಸ್ಯ ಬಾಹ್ಯತಃ||
      [ತತ್ ಏಜತಿ] ಅದು ವಿಶ್ವಕ್ಕೆ ಗತಿ ನೀಡುತ್ತದೆ. [ತತ್ ನ ಏಜತಿ] ಅದು ಸ್ವತಃ ಚಲಿಸುವುದಿಲ್ಲ. [ತತ್ ದೂರೇ] ಅದು ದೂರದಲ್ಲಿದೆ. [ತತ್ ಉ ಅಂತಿಕೇ] ಅದೇ ಹತ್ತಿರದಲ್ಲಿಯೂ ಇದೆ. [ತತ್ ಅಸ್ಮ ಸರ್ವಸ್ಯ ಅಂತಃ] ಅದು ಇದೆಲ್ಲದರ ಒಳಗೂ ಇದೆ. [ತತ್ ಉ ಅಸ್ಯ ಸರ್ವಸ್ಯ ಬಾಹ್ಯತಃ] ಅದೇ ಇದೆಲ್ಲದರ ಹೊರಗೂ ಇದೆ. ಈ ಮಂತ್ರ ವಿಶ್ವಕ್ಕೆಲ್ಲಾ ಚಲನೆ ನೀಡುವ, ತಾನು ಮಾತ್ರ ಚಲಿಸದೆ ಧ್ರುವವಾಗಿ ನಿಂತಿರುವ, ಎಲ್ಲಾಕಡೆ ವ್ಯಾಪಿಸಿರುವ ಚೇತನಶಕ್ತಿಯನ್ನು ವರ್ಣಿಸುತ್ತದೆ. ಎಲ್ಲರ ಅಂತರ್ಯದಲ್ಲಿಯೂ ಇದೆ; ಎಲ್ಲರಿಗಿಂತ ಬಹು ದೂರದಲ್ಲಿಯೂ ಇದೆ; ವಿಶ್ವದೊಳಗೂ ಇದೆ; ವಿಶ್ವದಿಂದ ಹೊರಕ್ಕೂ ಹರಡಿದೆ. ಆ ಅನಂತ ಚೇತನ, ಸರ್ವಥಾ ನಿರಾಕಾರವೇ ಆಗಿರಬೇಕು. ನಿಜವಾಗಿ ಅದಿರುವುದು ಹಾಗೆಯೇ.
     ದಿಕ್ಕುಗಳು ಎನ್ನುವುದು ಸ್ಥಳ ಗುರುತಿಸುವುದು, ದಿಸೆ ತೋರಿಸುವ ಸಲುವಾಗಿ ನಮ್ಮ ಅನುಕೂಲಕ್ಕಾಗಿ ಮಾಡಿಕೊಂಡದ್ದೇ ಹೊರತು ಮತ್ತೇನಲ್ಲ. ಸೂರ್ಯ ಪೂರ್ವದಲ್ಲಿ ಉದಯಿಸುತ್ತಾನೆ, ಪಶ್ಚಿಮದಲ್ಲಿ ಮುಳುಗುತ್ತಾನೆ ಎಂಬುದು ಒಂದು ಅರ್ಥದಲ್ಲಿ ಸರಿಯಿರಬಹುದು. ಆ ಸೂರ್ಯನೂ ಸಹ ತನ್ನ ಚಲನೆಯ ಪಥವನ್ನು ಬದಲಿಸುತ್ತಾನೆ. ಬಳಕೆಯಲ್ಲಿ ನಾವು ಪೂರ್ವ, ಪಶ್ಚಿಮ, ಇತ್ಯಾದಿ ಎಂಟು ದಿಕ್ಕುಗಳನ್ನು ಬಳಸುತ್ತೇವೆ. ನಮಗೆ ಪೂರ್ವವೆನಿಸುವ ಒಂದು ಸ್ಥಳ ಇನ್ನೊಬ್ಬರಿಗೆ ಪಶ್ಚಿಮವಾಗಬಹುದು. ವಾಸ್ತವವಾಗಿ ನಮ್ಮ ಸುತ್ತಲೂ ಇರುವ ೩೬೦ ಡಿಗ್ರಿ ಪ್ರದೇಶದ ಒಂದೊಂದು ಡಿಗ್ರಿಯೂ ಒಂದೊಂದು ದಿಕ್ಕು. ಈಗ ಹೇಳಲಾಗುತ್ತಿರುವ ಜ್ಯೋತಿಷ್ಯ ಎಂಬುದಕ್ಕೆ ಅರ್ಥವಿಲ್ಲ. ಬ್ರಹ್ಮಾಂಡದ ಸೃಷ್ಟಿ ಕೇವಲ ಮಾನಸಿಕ ಕಲ್ಪನೆಯಲ್ಲ, ಒಂದು ನಿರಾಕರಿಸಲಾರದ ಸತ್ಯ. ವಿಜ್ಞಾನವಾದ, ಮಾಯಾವಾದ ಯಾವ ವಾದವನ್ನೇ ಮುಂದೊಡ್ಡಿದರೂ ಕೂಡ, ಜನರನ್ನು ಭ್ರಾಂತಿಗೆ ಸಿಕ್ಕಿಸಬಹುದೇ ಹೊರತು, ಜಗತ್ತಿಲ್ಲ ಎಂದು ಹೇಳಲಾಗುವುದಿಲ್ಲ. ಜಗತ್ತಿಲ್ಲ ಎನ್ನುವುದಾದರೆ ಹಾಗೆ ಹೇಳುವವನು ಎಲ್ಲಿ ಉಳಿದಾನು? ಕೇಳುವವನು ಯಾವನಿದ್ದಾನು? ಜಗತ್ತಿದೆ, ನಿಜವಾಗಿಯೂ ಇದೆ. ಭೌತವಿಜ್ಞಾನದ ಸಹಾಯದಿಂದ ಈ ಜಗತ್ತಿನ ಪ್ರತಿಯೊಂದು ಪರಮಾಣುವನ್ನೂ ಪ್ರತ್ಯೇಕಿಸಿ ನೋಡಬಹುದು. ಈ ವಿಶ್ವ ಜಡಪರಮಾಣುಗಳ ಸಂಘಾತದಿಂದ ರೂಪುಗೊಂಡುದು. ಸ್ವತಃ ಅವುಗಳೇ ನಿಯಮಪೂರ್ವಕವಾಗಿ ಒಟ್ಟುಗೂಡಿ ಈ ವಿಶ್ವವಾಗುವ ಶಕ್ತಿಯಿಲ್ಲ. ಅವುಗಳಲ್ಲಿ ನಿಯಮಪಾಲನೆ ಮಾಡಲು ಬೇಕಾದ ಜ್ಞಾನವಿಲ್ಲ. ಆದುದರಿಂದ ಈ ವಿಶ್ವದ ರಚಯಿತೃವಾದ ಯಾವುದೋ ಒಂದು ಶಕ್ತಿಯಿದೆ. ಕೇವಲ ಒಂದು ಭೂಮಿಯಲ್ಲ, ಒಂದು ಚಂದ್ರನಲ್ಲ, ಒಂದು ಸೂರ್ಯನೂ ಅಲ್ಲ, ಆ ಸೂರ್ಯನಿಗಿಂತಲೂ ಲಕ್ಷಾಂತರ ಪಾಲು ದೊಡ್ಡದಾಗಿದ್ದು, ಅನಂತ ಆಕಾಶದಲ್ಲಿ ಊಹಿಸಲಾಗದಷ್ಟು ದೂರದವರೆಗೆ ಹರಡಿಕೊಂಡು ಮೆರೆಯುತ್ತಿರುವ, ಎಣಿಕೆಗೆ ಸಿಕ್ಕದಂತಿರುವ ನಕ್ಷತ್ರಗಳ ಬೃಹತ್ಸಮೂಹವಿದೆ. ಇವನ್ನೆಲ್ಲಾ ರಚಿಸುವ ಸಾಮರ್ಥ್ಯ ಏಕದೇಶೀಯವಾದ, ಅಂದರೆ ಎಲ್ಲೋ ಒಂದು ಕಡೆ ಮಾತ್ರವಿರುವ ವ್ಯಕ್ತಿಗೆ ಅಥವಾ ಶಕ್ತಿಗೆ ಸಾಧ್ಯವಿಲ್ಲ. ಈ ವಿಶ್ವಬ್ರಹ್ಮಾಂಡ, ಕೇವಲ ಆಕಸ್ಮಿಕವಾಗಿ ಇರುವಿಕೆಗೆ ಬಂದಿದೆ ಎಂದು ಯಾವ ಬುದ್ಧಿಶಾಲಿಯೂ ತರ್ಕಿಸಲಾರನು. ಹೀಗೆ ಆಲೋಚನೆ ಮಾಡಿದಾಗ ಪ್ರತಿಯೊಬ್ಬ ವಿಚಾರಶೀಲನೂ ಈ ಅನಂತದಂತೆ ಗೋಚರಿಸುವ ವಿಶ್ವದ ಕರ್ತೃವಾದ ಯಾವುದೋ ಒಂದು ಸರ್ವವ್ಯಾಪಕ, ಜ್ಞಾನಮಯೀ ಶಕ್ತಿ ಇದ್ದೇ ಇದೆ ಎಂದು ಒಪ್ಪಲೇಬೇಕಾಗುತ್ತದೆ. ಅವನೇ ಭಗವಂತ. ಈ ವಿಶಾಲ ಬ್ರಹ್ಮಾಂಡವನ್ನು ಆ ಪರಮಾತ್ಮ ಇದ್ದಲ್ಲೇ ಇದ್ದು ನಿಯಂತ್ರಿಸುತ್ತಿದ್ದಾನೆ. ಇದನ್ನು ಅರಿಯದಿದ್ದರೆ ಅವನಿಗೆ ನಷ್ಟವೇನೂ ಇಲ್ಲ. ನಾನು ಎಷ್ಟೋ ವಿದ್ವಾಂಸರನ್ನು ನಕ್ಷತ್ರಗಳು ಎಷ್ಟಿವೆ ಎಂಬುದು ಗೊತ್ತೇ? ಎಂದು ಪ್ರಶ್ನಿಸಿದ್ದೇನೆ. ಯಾರಿಗೂ ಉತ್ತರಿಸಲು ಆಗಿಲ್ಲ. ಸರ್ ಸಿ.ವಿ. ರಾಮನ್‌ರವರನ್ನೂ ಕೇಳಿದ್ದೆ. ಅವರು 'ಪೋಯಾ, ಪೋಯಾ! ನಾನು ಸಣ್ಣವನು, ಇಷ್ಟು ದೊಡ್ಡ ಬ್ರಹ್ಮಾಂಡವನ್ನು ಅರಿಯುವ, ಅಳೆಯುವ ಶಕ್ತಿ ನನ್ನಂತಹವರಿಗೆ ಎಲ್ಲಿ ಬರಬೇಕು' ಎಂದು ಹೇಳಿದ್ದರು.
     ಭಗವಂತನ ಪ್ರಾರ್ಥನೆ, ಪೂಜೆಯನ್ನು ಯಾಂತ್ರಿಕವಾಗಿ ಮಾಡಿದರೆ ಫಲವಿಲ್ಲ. ನಮ್ಮ ಪ್ರಾರ್ಥನೆ ಮಾಡುವ ಮಂತ್ರದ ಅರ್ಥದ ಮನನ ಮಾಡಿಕೊಂಡು ಅಳವಡಿಸಿಕೊಂಡರೆ ಮಾತ್ರ ಅದರಲ್ಲಿ ಅರ್ಥವಿರುತ್ತದೆ. ಇಲ್ಲದಿದ್ದರೆ ಅದು ಕೇವಲ ನಾಲಿಗೆಗೆ ವ್ಯಾಯಾಮ ಅಷ್ಟೆ. ನಾವು ಈಗ ಅಗ್ನಿಹೋತ್ರ ಮಾಡುವಾಗ ಮೂರು ಸಲ ಗಾಯತ್ರಿ ಮಂತ್ರದ ಉಚ್ಛಾರ ಮಾಡಿದೆವು ಅದರ ಅರ್ಥ ನಮ್ಮ ಅರಿವಿಗೆ ಬಂತೇ, ನಮ್ಮ ಮನಸ್ಸನ್ನು ತಟ್ಟಿತೇ ಎಂಬುದನ್ನು ಅರಿಯೋಣ. ಇಲ್ಲದಿದ್ದರೆ ಸಾವಿರ ಸಲ ಗಾಯತ್ರಿ ಮಂತ್ರ ಹೇಳಿದರೂ ಫಲ ಮಾತ್ರ ಶೂನ್ಯ. ಸ್ನಾನ ಮಾಡಿದರೆ ದೇಹದ ಕೊಳಕು ಹೋಗುತ್ತದೆ. ಆತ್ಮಕ್ಕೆ ಅಂಟಿದ ಕೊಳಕು ಹೋಗಬೇಕೆಂದರೆ ಸತ್ಕರ್ಮದಿಂದ ಮಾತ್ರ ಸಾಧ್ಯ.
     ಬ್ರಹ್ಮಚರ್ಯ ಎಂದರೆ ಮದುವೆಯಾಗದಿರುವವರು ಎಂದು ಅರ್ಥವಲ್ಲ. ಬ್ರಹ್ಮನಲ್ಲಿ ಸಂಚಾರ ಮಾಡುವ ಶಕ್ತಿಯಿರುವವನು ಎಂದು ಅರ್ಥ. ಈ ಮನುಷ್ಯ ಜನ್ಮ ದೊಡ್ಡದು. ಅದನ್ನು ಭೌತಿಕ ಸುಖಭೋಗಕ್ಕಾಗಿ ಮಾತ್ರ ಎಳಸದೆ ಈ ಜನ್ಮದ ಅರ್ಥ ತಿಳಿದು ಸತ್ಕರ್ಮಕ್ಕಾಗಿ ಬಳಸಬೇಕು. ಹಾಗೆ ಮಾಡದಿದ್ದರೆ ನಂತರದಲ್ಲಿ ಮತ್ತೆ ಇನ್ನು ಯಾವಾಗಲೋ ಮನುಷ್ಯ ಸಿಕ್ಕುವುದು! ಮನುಷ್ಯಜನ್ಮ ಎಷ್ಟೋ ಜನ್ಮಗಳನ್ನು ದಾಟಿಬಂದ ನಂತರ ಸಿಕ್ಕಿದೆ. ಇದನ್ನು ಸಾರ್ಥಕಪಡಿಸಿಕೊಳ್ಳಬೇಕು. ನಿಜವಾದ ಅರ್ಥದಲ್ಲಿ ಬ್ರಹ್ಮಚಾರಿಗಳಾಗಬೇಕಾದುದು ಮನುಷ್ಯಜನ್ಮದ ಉದ್ದೇಶ. ಯಾರೋ ಹೇಳುತ್ತಿದ್ದರು,'ಲಕ್ಷಾಂತರ ಜನ್ಮಗಳ ನಂತರ ಮನುಷ್ಯನಾಗಿ ಹುಟ್ಟಿದ್ದೇವೆ, ಪುನಃ ಕೆಳಗೆ ಹೋಗುತ್ತೇವೆಯೇ? ಮೇಲೆ ಹತ್ತಿ ಬಂದಿದ್ದೇವೆ, ಕೆಳಗೆ ಇಳಿಯುತ್ತೇವೆಯೇ?' ಸರಿಯಾಗಿ ಮನುಷ್ಯನಂತೆ ನಡೆಯದಿದ್ದರೆ ಮನುಷ್ಯರಾಗೇ ಹುಟ್ಟುತ್ತೇವೆಂದು ಹೇಳಲಾಗುವುದಿಲ್ಲ. ನಾವು ಮಾಡಿದ ಕರ್ಮವನ್ನು ನಾವು ಭೋಗಿಸಲೇಬೇಕು. ಇದು ಭಗವಂತನ ನಿಯಮ. ನಾನು ಬಹಳಷ್ಟು ಸನ್ಯಾಸಿಗಳನ್ನು ನೋಡಿದ್ದೇನೆ - ಕಾವಿ ಬಟ್ಟೆ ಸನ್ಯಾಸಿಗಳು, ಬಿಳಿ ಬಟ್ಟೆ ಸನ್ಯಾಸಿಗಳು, ಹಳದಿ ಬಟ್ಟೆ ಸನ್ಯಾಸಿಗಳು, ಕಪ್ಪು ಬಟ್ಟೆ ಸನ್ಯಾಸಿಗಳು, ಹೀಗೆ. ಸನ್ಯಾಸಿಗಳು ಎಂದರೆ ಎಲ್ಲವನ್ನೂ ಬಿಟ್ಟವರು, ಅವರೇನು ಬಿಟ್ಟಿದ್ದಾರೆ? ಹಸಿವಾದಾಗ 'ಭವತಿ ಭಿಕ್ಷಾಂದೇಹಿ'ಅನ್ನುತ್ತಾರೆ, ಛಳಿಯಾದಾಗ ಬೆಚ್ಚಗೆ ಹೊದ್ದುಕೊಳ್ಳುತ್ತಾರೆ! ಸನ್ಯಾಸಿಗಳೆಂದರೆ ಭೌತಿಕ ಸುಖ ಭೋಗಗಳನ್ನು ತ್ಯಾಗ ಮಾಡಿದವರು, ಪರಮಾತ್ಮನ ಕುರಿತು ಧ್ಯಾನದಲ್ಲಿ ತೊಡಗಿಕೊಂಡವರು ಎನ್ನುತ್ತಾರೆ. ಅಂತಹ ನಿಜವಾದ ಸನ್ಯಾಸಿಗಳು ಎಷ್ಟು ಜನ ಇದ್ದಾರೆ? ಸ್ವಾಮಿ ಶ್ರದ್ಧಾನಂದರು ಹಾಸ್ಯವಾಗಿ ಹೇಳುತ್ತಿದ್ದರು - 'ದೇಶಕ್ಕೆ ಸ್ವಾತಂತ್ರ್ಯ ಬಂದು ನಾನು ಪ್ರಧಾನ ಮಂತ್ರಿಯಾದರೆ ಮಾಡುವ ಮೊದಲ ಕೆಲಸವೆಂದರೆ ಸಾಧು-ಸಂತರೆನಿಸಿಕೊಂಡವರನ್ನೆಲ್ಲಾ ಹಿಡಿದು ಮಿಲಿಟರಿಗೆ ಸೇರಿಸಿಬಿಡುತ್ತಿದ್ದೆ! ಮೊದಲೇ ಬಡ ದೇಶ, ಒಂದಿಷ್ಟು ಭಿಕ್ಷುಕರು ಕಡಿಮೆಯಾಗಲಿ!'
     ಪರಮಾತ್ಮನ ಸಾಕ್ಷಾತ್ಕಾರವಾಯಿತು ಎಂದು ಹೇಳುವವರನ್ನು ನೋಡಿದ್ದೇನೆ - ಅವರು ಕಂಡೆವೆಂದು ಹೇಳುವ ಪರಮಾತ್ಮ ಅಂದರೆ ಮೂರು ಕಣ್ಣಿನ ಶಿವ, ನಾಲ್ಕು ತಲೆಯ ಬ್ರಹ್ಮ, ಹೀಗೆ. ಇದೆಲ್ಲಾ ಬುರುಡೆ. ನಿರಾಕಾರ ಪರಮಾತ್ಮ ಎಂದೂ ಸಾಕಾರನಾಗಿರಲಿಲ್ಲ, ಆಗುವುದೂ ಇಲ್ಲ. ಕೃಷ್ಣನನ್ನು ವಿಷ್ಣುವಿನ ಅವತಾರ ಅನ್ನುತ್ತಾರೆ. ಅವತಾರ ಎಂದರೆ ಮೇಲಿನಿಂದ ಕೆಳಗೆ ಅವತರಿಸಿದವನು ಎಂದು. ಆ ಪರಮಾತ್ಮ ಮೇಲಿನಿಂದ ಕೆಳಗೆ ಇಳಿದು ಬಂದನೆಂದರೆ ಆತ ಮೊದಲು ಕೆಳಗೆ ಇರಲಿಲ್ಲವೇ? ಕೌಸಲ್ಯೆಯ ಮಗನಾಗಿ ಪರಮಾತ್ಮ ರಾಮನ ಅವತಾರದಲ್ಲಿ ಬಂದನೆಂದರೆ ಅದಕ್ಕೂ ಮೊದಲು ಭೂಮಿಯಲ್ಲಿ ದೇವರಿರಲಿಲ್ಲವೆ? ಸಾಕ್ಷಾತ್ಕಾರ ಎನ್ನುವ ಪದವನ್ನೇ ನಾನು ಬಳಸಲು ಇಚ್ಛಿಸುವುದಿಲ್ಲ. ಪರಮಾತ್ಮ ಎಂದೂ ಸಾಕಾರ ರೂಪಿ ಅಲ್ಲವೇ ಅಲ್ಲ, ಸಾಕಾರನೆಂದಾಕ್ಷಣ ಸರ್ವಶಕ್ತ, ಸರ್ವವ್ಯಾಪಕ ಭಗವಂತನನ್ನು ಮಿತಿಗೊಳಿಸಿದಂತೆ! ಆತ ಅನುಭವಗಮ್ಯನೇ ಹೊರತು ಕಣ್ಣಿನಿಂದ ಕಾಣಲಾಗುವುದಿಲ್ಲ. ಹೃದಯದಲ್ಲಿ ಕಾಣಬೇಕು, ಅನುಭವಿಸಬೇಕು! ಪರಮಾತ್ಮ ರಾಮನೆಂದರೆ ಹೃದಯದಲ್ಲಿ ನೆಲೆಸಿರುವ, ರಮಿಸುವ ಭಗವಂತನೇ ಹೊರತು ಕೌಸಲ್ಯಾಸುತನೆಂದಲ್ಲ. ರುದ್ರನೆಂದರೆ ಲಯಕಾರಕನೆಂದು ಬಿಂಬಿಸಲ್ಪಟ್ಟವನಲ್ಲ, ಪರರ ಸಂಕಷ್ಟಗಳನ್ನು ಕಂಡು ಕಣ್ಣೀರು ಸುರಿಸುವವನು, ಪರಿಹರಿಸಲು ಸಹಕರಿಸುವವನು! ಸ್ವರ್ಗ, ನರಕ ಅನ್ನುವುದು ಬೇರೆ ಇಲ್ಲ. ಇಲ್ಲೇ ಇದೆ. ಸ್ವರ್ಗ ಅಂದರೆ ಮೇಲೇರುವುದು, ನರಕ ಅಂದರೆ ಕೆಳಕ್ಕೆ ಇಳಿಯುವುದು. ನಮ್ಮ ನಡವಳಿಕೆಗಳು ಸರಿಯಿದ್ದರೆ, ಸತ್ಕರ್ಮ ಮಾಡಿದರೆ ನಾವು ಸ್ವರ್ಗ ಕಾಣುತ್ತೇವೆ, ಇಲ್ಲದಿದ್ದರೆ ಕೆಳಗೆ ಬೀಳುತ್ತೇವೆ. ನನ್ನನ್ನು ನಾಸ್ತಿಕನೆಂದು ದೂರುವವರೂ ಇದ್ದಾರೆ. ಆಸ್ತಿಕರೆಂದರೆ ಯಾರು, ನಾಸ್ತಿಕರು ಯಾರು? ಅರ್ಥರಹಿತ ಸಂಪ್ರದಾಯಗಳು, ಆಚರಣೆಗಳನ್ನು ಪೋಷಿಸುವ ಆಸ್ತಿಕರೆನಿಸಿಕೊಳ್ಳುವವರಿಗಿಂತ ನಾಸ್ತಿಕರೇ ಮೇಲು! ಜ್ಞಾನಿಗಳಾದವರು ವಿಚಾರ ತಿಳಿದವರಾಗಿದ್ದು ಯಾರು ಏನೇ ಹೇಳಿದರೂ ತಪ್ಪುದಾರಿಗೆ ಎಳೆಯಲ್ಪಡುವುದಿಲ್ಲ. ಆದರೆ ತಿಳುವಳಿಕೆ ಕಡಿಮೆಯಿದ್ದವರನ್ನು ದಾರಿ ತಪ್ಪಿಸುವವರ ಬಗ್ಗೆ ನಾನು ಹೇಳುತ್ತಿದ್ದೇನೆ. ಕ್ಷಮಿಸಬೇಕು, ನಾನು ಆಡಿದ ಮಾತುಗಳು ಕಟುವಾಗಿ ಕಾಣಬಹುದು, ಆದರೆ ಸತ್ಯ ಸತ್ಯವೇ. ನಾನು ಯಾರನ್ನೂ ನೋಯಿಸಲು ಉದ್ದೇಶಿಸಿಲ್ಲ, ಕೆಟ್ಟ ಭಾವನೆಯಿಂದ ಮಾತನಾಡಿಲ್ಲ, ಪಂಡಿತನೆಂದು ಭಾವಿಸಿ ಆಡಿಲ್ಲ. ಒಳ್ಳೆಯ ವಿಚಾರ ಮಾಡೋಣ, ವಿಮರ್ಶೆ ಮಾಡೋಣ, ಒಳ್ಳೆಯ ದಾರಿಯಲ್ಲಿ ನಡೆಯೋಣ!
-0-0-0-0-0-

ಸೋಮವಾರ, ನವೆಂಬರ್ 8, 2010

ಹಿಂದುತ್ವ ಸಸ್ಯಾಹಾರಿಯಾಗಬೇಕೆಂದು ಬಯಸುತ್ತದೆಯೇ?

     ಇತ್ತೀಚೆಗೆ ಎರಡು ಪ್ರಶ್ನೆಗಳನ್ನು ಕೇಳಲಾಯಿತು: ಹಿಂದುತ್ವ ದೇವರನ್ನು ನಂಬಬೇಕೆಂದು ಬಯಸುತ್ತದೆಯೇ? ಹಿಂದುತ್ವ ಸಸ್ಯಾಹಾರಿಯಾಗಬೇಕೆಂದು ಬಯಸುತ್ತದೆಯೇ? ನನ್ನ ಇತ್ತೀಚಿನ ಲೇಖನದಲ್ಲಿ ಮೊದಲನೆಯ ಪ್ರಶ್ನೆಗೆ ಉತ್ತರಿಸಿದ್ದೇನೆ. ಎರಡನೆಯ ಪ್ರಶ್ನೆಗೆ ಕೆಲವು ಚಿಂತನಗಳನ್ನು ನಿಮ್ಮ ಮುಂದಿಡುತ್ತೇನೆ.
     ಮೊದಲನೆಯ ಪ್ರಶ್ನೆಗೆ ಸಂಬಂಧಿಸಿದಂತೆ, ನಾನು ಹಿಂದುತ್ವ ಎಂದರೇನು ಮತ್ತು ಯಾರು ನಿಜವಾಗಿಯೂ ಹಿಂದು ಎಂಬ ಕುರಿತು ಚರ್ಚಿಸಿದ್ದೇನೆ. ಸಾರಾಂಶ ರೂಪದಲ್ಲಿ ಹೇಳಬೇಕೆಂದರೆ, ಹಿಂದುತ್ವ ಎನ್ನುವುದು ಸನಾತನ ಧರ್ಮ ಮತ್ತು ಆ ಧರ್ಮ ಅನಾದಿ ಕಾಲದ್ದು - ಅದು ಮೋಕ್ಷ ಸಂಪಾದನೆಯ ಮಾರ್ಗ ಹುಡುಕುವುದನ್ನು ಒಳಗೊಂಡಿದೆ. ಆದ್ದರಿಂದ ಯಾರು ಮೋಕ್ಷ ಬಯಸುತ್ತಾರೋ ಅವರು- ಅವರು ಯಾವ ರಾಷ್ಟ್ರೀಯರು, ಜಾತಿಯವರು, ಜನಾಂಗದವರು ಅಥವ ಲಿಂಗದವರು ಎಂಬ ಭೇಧವಿಲ್ಲದೆ- ನಿಜವಾದ ಹಿಂದು. ಆ ರೀತಿಯ ವಿಶಾಲ ಮನೋಭಾವದ ತಿಳುವಳಿಕೆಯಲ್ಲಿ ಹಿಂದುತ್ವ ಅನ್ನುವುದು ಜೀವನದ ರೀತಿ ಆಗುತ್ತದೆ, ಏಕೆಂದರೆ ಜೀವನದ ಮುಖ್ಯ ಉದ್ದೇಶವಾದ ಹುಡುಕಾಟವೇ ಹಿಂದೂ ಜೀವನದ ಗುರಿ.
     ಮೇಲಿನ ಹಿನ್ನೆಲೆಯಲ್ಲಿ, ಎಲ್ಲಾ ಇತರ ಪ್ರಶ್ನೆಗಳನ್ನು, ಹಿಂದುತ್ವ ಸಸ್ಯಹಾರಿಯಾಗಿರಬೇಕೆಂದು ಬಯಸುತ್ತದೆಯೇ ಎಂಬ ಪ್ರಶ್ನೆ ಸೇರಿದಂತೆ, ಬಿಡಿಸಲು ಸುಲಭವೆನಿಸುತ್ತದೆ. ಜೀವನದ ಉದ್ದೇಶ ಮುಕ್ತಿ ಅಥವ ಮೋಕ್ಷವನ್ನು ಪಡೆಯುವುದಾದ್ದರಿಂದ ಅದನ್ನು ಪಡೆಯುವವರೆಗೆ ನಾವು ಬದುಕಿರಬೇಕು. ಸಾವು ಮಾತ್ರ ಮಾನಸಿಕ ಜಾಗೃತಿಯಾದಾಗ ಬರುವ ನಾನತ್ವದ ಸಾವು ತರಬಲ್ಲದು. ಆದ್ದರಿಂದ ದೇಹವನ್ನು ಸಧೃಢವಾಗಿ ಇಟ್ಟುಕೊಳ್ಳುವುದು ನಮ್ಮ ಧರ್ಮ. ಅದರ ಅರ್ಥ ಬದುಕಲಿಕ್ಕಾಗಿ ತಿನ್ನಬೇಕು (ಇನ್ನೊಂದು ರೀತಿಯಲ್ಲಿ ಅಲ್ಲ - ತಿನ್ನುವ ಸಲುವಾಗಿ ಬದುಕುವುದು!)
     ಜೀವನ ಜೀವದ ಮೇಲೆ ಜೀವಿಸಿದೆ. ಅದು ಪ್ರಕೃತಿಯ ನಿಯಮ. ನಾನು ಒಂದು ಪ್ರಾಣಿಯನ್ನು ತಿನ್ನುತ್ತೇನೋ ಅಥವ ಒಂದು ಸಸ್ಯವನ್ನು ತಿನ್ನುತ್ತೇನೋ, ಒಟ್ಟಿನಲ್ಲಿ ಒಂದು ಜೀವವನ್ನು ನಾಶಪಡಿಸಿದಂತೆಯೇ. ಎಲ್ಲಾ ಬಗೆಯ ಜೀವಮಾತ್ರರಲ್ಲಿ ಮಾನವ ಇತರ ಜೀವಿಗಳಿಗಿಂತ ಭಿನ್ನ. ಅವನಿಗೆ ಒಳ್ಳೆಯದು ಯಾವುದು, ಕೆಟ್ಟದು ಯಾವುದು ಎಂದು ತುಲನೆ ಮಾಡುವ ಶಕ್ತಿಯಿದೆ. ಅದು ಅವನಿಗೆ ಆಯ್ಕೆಯ ಸ್ವಾತಂತ್ರ್ಯವನ್ನೂ ಕೊಟ್ಟಿದೆ. ಸಸ್ಯಗಳು ಕೇವಲ ದೇಹ ಮತ್ತು ಬಹುಷಃ ಪ್ರಾರಂಭಿಕ ಹಂತದ ಮನಸ್ಸು ಹೊಂದಿರಬಹುದು. ಪ್ರಾಣಿಗಳು ದೇಹ ಮತ್ತು ಭಾವನೆಗಳು ಹಾಗೂ ನೋವನ್ನು ವ್ಯಕ್ತಪಡಿಸುವ ಮನಸ್ಸು ಹೊಂದಿರುವುದರ ಜೊತೆಗೆ ಪ್ರಾರಂಭಿಕ ಹಂತದ ಬುದ್ಧಿಶಕ್ತಿ ಹೊಂದಿರಬಹುದು. ಮಾನವ ದೇಹ ಮಾತ್ರವಲ್ಲ, ಮನಸ್ಸು ಮತ್ತು ಪರಿಶೀಲಿಸುವ, ನಿರ್ಧರಿಸುವ ಮತ್ತು ಆಯ್ಕೆ ಮಾಡುವ ಉತ್ತಮ ಬೆಳವಣಿಗೆ ಹೊಂದಿದ ಬುದ್ಧಿಶಕ್ತಿಯನ್ನೂ ಹೊಂದಿದ್ದಾನೆ. ಅವನಿಗೆ ಯಾವಾಗಲೂ ಮೂರು ಅವಕಾಶಗಳಿವೆ - ಕರ್ತುಂ ಶಖ್ಯಂ, ಅಕರ್ತುಂ ಶಖ್ಯಂ ತಥಾ ಅನ್ಯಥಾ ಕರ್ತುಂ ಶಖ್ಯಂ - ಅವನು ಬೇಕೆಂದರೆ ಮಾಡಬಹುದು, ಮಾಡದಿರಬಹುದು ಮತ್ತು ಬೇರೆ ರೀತಿಯಲ್ಲಿ ಮಾಡಬಹುದು. ಪ್ರಾಣಿಗಳಿಗೆ ಮತ್ತು ಸಸ್ಯಗಳಿಗೆ ಆಯ್ಕೆಯ ಸ್ವಾತಂತ್ರ್ಯವಿರುವುದಿಲ್ಲ. ಅವು ಸಹಜ ರೀತಿಯಲ್ಲಿ ವರ್ತಿಸುತ್ತವೆ. ಹಸು ಊಟದ ಮುಂದೆ ಕುಳಿತು ತಾನು ಸಸ್ಯಹಾರಿಯಾಗಿರಬೇಕೋ ಅಥವ ಮಾಂಸಾಹಾರಿಯಾಗಿರಬೇಕೋ ಎಂದು ವಿಚಾರಿಸುತ್ತಾ ಕುಳಿತುಕೊಳ್ಳುವುದಿಲ್ಲ. ಅದೇ ರೀತಿ ಹುಲಿ ಸಹಾ. ಮನುಷ್ಯನಿಗೆ ಅಂತಹ ವಿವೇಚಿಸುವ ಬುದ್ಧಿ, ಶಕ್ತಿ ಇದೆ. ಸಸ್ಯಗಳು ಮತ್ತು ಪ್ರಾಣಿಗಳು ತಮ್ಮ ಕ್ರಿಯೆಗಳಲ್ಲಿ ಪಾಪ ಮಾಡುವುದಿಲ್ಲ, ಏಕೆಂದರೆ ಅವುಗಳ ಕ್ರಿಯೆಗಳಲ್ಲಿ ಇಚ್ಛಾಶಕ್ತಿ ಇರುವುದಿಲ್ಲ. ಆದರೆ ಮನುಷ್ಯನ ವಿಷಯದಲ್ಲಿ ಕಥೆಯೇ ಬೇರೆ. ನಿಮಗೆ ಈ ಚರ್ಚೆಯಲ್ಲಿ ಪಾಪವನ್ನು ಏಕೆ ತಂದೆ ಎಂದು ನಿಮಗೆ ಆಶ್ಚರ್ಯವಾಗಬಹುದು. ಇರಲಿ, ವಿವರಿಸುತ್ತೇನೆ.
     ಪಾಪ ಎಂಬುದು ಮನಸ್ಸಿನ ತುಮುಲಗಳೇ ಹೊರತು ಮತ್ತೇನೂ ಅಲ್ಲ. ಈ ತುಮುಲಗಳೇ ಮೋಕ್ಷದೆಡೆಗಿನ ನನ್ನ ಪ್ರಯಾಣವನ್ನು ಅಡ್ಡಿಪಡಿಸುವುದು. ನಾನು ಸತ್ಯವನ್ನು ಸತ್ಯವಾಗೇ ಕಾಣಲು ಮನಸ್ಸು ಶುದ್ಧವಾಗಿರಬೇಕು (ಅಂದರೆ ತುಮುಲಗಳಿರಬಾರದು). (ಬೈಬಲ್ ಸಹ ಯಾರ ಮನಸ್ಸುಗಳು ಶುದ್ಧವಾಗಿದೆಯೋ ಅವರು ಅನುಗ್ರಹಿತರು ಎಂದು ಹೇಳುತ್ತದೆ.) ಪಾಪವನ್ನು ಹೆಚ್ಚು ವೈಜ್ಞಾನಿಕವಾಗಿ ವಿವರಿಸಬೇಕೆಂದರೆ - ಅದು ಮನಸ್ಸು ಮತ್ತು ಬುದ್ಧಿಶಕ್ತಿಗಳಲ್ಲಿನ ಅಂತರ. ಬುದ್ಧಿಶಕ್ತಿಗೆ ಯಾವುದು ಸರಿ, ಯಾವುದು ತಪ್ಪು ಎಂದು ಗೊತ್ತಿರುತ್ತದೆ - ಆದರೂ ನಮಗೆ ತಪ್ಪೆಂದು ಗೊತ್ತಿದ್ದರೂ ಅದನ್ನೇ ಮಾಡುವಂತೆ ಆಗುತ್ತದೆ - ಅಂದರೆ ಬುದ್ಧಿಶಕ್ತಿ ಒಂದು ಹೇಳುತ್ತದೆ, ಆದರೆ ಬುದ್ಧಿಶಕ್ತಿ ಹೇಳಿದಂತೆ ಕೇಳಬೇಕಾದ ಮನಸ್ಸು ಬಂಡೆದ್ದು ತನಗೆ ಬೇಕಾದಂತೆ ಮಾಡುತ್ತದೆ. ಈ ಅಂತರವೇ ಪಾಪ. ಆ ರೀತಿ ಮಾಡಿದ ನಂತರ ಏನೋ ತಪ್ಪು ಮಾಡಿದ ಭಾವ ಮೂಡುತ್ತದೆ, ಏಕೆಂದರೆ ಬುದ್ಧಿಶಕ್ತಿ ತಾನು ಸೋತಿದ್ದರೂ ಸುಮ್ಮನಿರುವುದಿಲ್ಲ, ಅದು ನಾನು ಅದು ತಪ್ಪು ಎಂದು ಹೇಳಿದೆ. ಆದರೂ ಅದನ್ನು ಏಕೆ ಮಾಡಿದೆ? ಎಂದು ಚುಚ್ಚುತ್ತಲೇ ಇರುತ್ತದೆ. ಮನಸ್ಸಿನ ಶಾಂತಿ ಹೋದ ಮೇಲೆ ಮನುಷ್ಯನಿಗೆ ನರಕದ ಅನುಭವವಾಗುತ್ತದೆ. ಮನುಷ್ಯ ಪಾಪಕ್ಕಾಗಿ ಶಿಕ್ಷಿಸಲ್ಪಡುವುದಿಲ್ಲ, ಪಾಪದಿಂದ ಶಿಕ್ಷಿಸಲ್ಪಡುತ್ತಾನೆ. ಅದರ ಕುರಿತು ಚಿಂತಿಸಿ.
     ಎಲ್ಲಾ ಯೋಗಗಳೂ, ನೀವು ಸ್ಪಷ್ಟವಾಗಿ ವಿಮರ್ಶಿಸಿದರೆ, ದೇಹ, ಮನಸ್ಸು ಮತ್ತು ಬುದ್ಧಿಶಕ್ತಿಯನ್ನು ಒಗ್ಗೂಡಿಸುವ ಕ್ರಿಯೆಗಳೇ ಆಗಿವೆ. ಒಬ್ಬ ಯೋಗಿಗೆ - ಆತ ಏನು ಯೋಚಿಸುತ್ತಾನೆ, ಏನು ಮಾತನಾಡುತ್ತಾನೆ ಮತ್ತು ಏನು ಮಾಡುತ್ತಾನೆ ಎಲ್ಲವೂ ಒಂದೇ ರೀತಿಯದಾಗಿರುತ್ತದೆ, ಹೊಂದಾಣಿಕೆಯಿರುತ್ತದೆ (ಮನಸಾ -ವಾಚಾ - ಕರ್ಮಣಾ). ನಮ್ಮ ವಿಷಯದಲ್ಲಿ, ನಾವು ಯೋಚಿಸುವುದೇ ಒಂದು, ಆದರೆ ನಾವು ಏನು ಯೋಚಿಸುತ್ತೇವೆಯೋ ಅದನ್ನು ಹೇಳುವ ಧೈರ್ಯವಿರುವುದಿಲ್ಲ, ನಮ್ಮ ತುಟಿಗಳು ನಾವು ಯೋಚಿಸಿದ್ದಕ್ಕಿಂತ ಭಿನ್ನವಾಗಿ ಬೇರೇನನ್ನೋ ಹೇಳುತ್ತವೆ; ನಾವು ಆಡಿದ ಮಾತು ಮತ್ತು ನಂತರ ನಾವು ಮಾಡುವ ಕೆಲಸ, ಮತ್ತೆ ಅಲ್ಲಿ ವ್ಯತ್ಯಾಸ! - ಎಲ್ಲೂ ಸಮನ್ವಯತೆ ಇಲ್ಲವೇ ಇಲ್ಲ. ನಾವು ಗೊಂದಲದ ಜೀವನ ನಡೆಸುತ್ತಿದ್ದೇವೆ. ನಾವು ಇನ್ನೊಬ್ಬರನ್ನು ಮೋಸ ಮಾಡುವುದರ ಜೊತೆಗೆ ಇನ್ನೂ ಶೋಚನೀಯವೆಂದರೆ ನಮ್ಮನ್ನು ನಾವೇ ಮೋಸಪಡಿಸಿಕೊಳ್ಳುತ್ತಿದ್ದೇವೆ, ಮತ್ತೂ ಶೋಚನೀಯವೆಂದರೆ ನಮಗೆ ಅದರ ಅರಿವೇ ಬರುವುದಿಲ್ಲ!
     ಈಗ ಒಂದು ಹುಲಿ ಬೇಟೆಯಾಡಿ ತಿಂದರೆ ಅದು ಪಾಪ ಮಾಡಿದಂತೆ ಆಗುವುದಿಲ್ಲ. ಏಕೆಂದರೆ ಅದರ ಬುದ್ಧಿಶಕ್ತಿ ಪ್ರಾರಂಭಿಕ ಹಂತದಲ್ಲಿದ್ದು, ಅದು ಕೊಲ್ಲುವ ಮುನ್ನ - ಕೊಲ್ಲಬೇಕೋ ಅಥವಾ ಬೇಡವೋ, ನಾನು ಮಾಂಸಾಹಾರಿಯಾಗಿರಬೇಕೋ ಅಥವ ಸಸ್ಯಾಹಾರಿಯಾಗಿರಬೇಕೋ - ಎಂದು ವಿಮರ್ಶಿಸುತ್ತಾ ಕೂರುವುದಿಲ್ಲ. ಅದಕ್ಕೆ ಹಸಿವಾದಾಗ, ಪ್ರಾಕೃತಿಕ ಬೇಡಿಕೆ ಈಡೇರಿಸಿಕೊಳ್ಳಲು ತನ್ನ ಬೇಟೆಯನ್ನು ಕೊಲ್ಲುತ್ತದೆ ಮತ್ತು ತಿನ್ನುತ್ತದೆ ಮತ್ತು ಅಗತ್ಯವಿರುವಷ್ಟು ತಿಂದ ನಂತರ ಉಳಿದುದನ್ನು ಬಿಡುತ್ತದೆ. ಅದಕ್ಕೆ ಹೊಟ್ಟೆಬಾಕತನ ಇಲ್ಲ. ಅದು ಅದರ ಸ್ವಧರ್ಮ. ಅದು ಸುಂದರ ಪರಿಸರ ವ್ಯವಸ್ಥೆಯನ್ನು ಪಾಲಿಸುತ್ತದೆ. ಮನುಷ್ಯನೊಬ್ಬ ಮಾತ್ರ ತನ್ನ ಹೊಟ್ಟೆಬಾಕತನದಿಂದ ಪರಿಸರ ವ್ಯವಸ್ಥೆಯನ್ನು ನಾಶ ಮಾಡುತ್ತಿದ್ದಾನೆ. ನಾನು ಸಸ್ಯಾಹಾರಿಯಾಗಿರಬೇಕೆ ಅಥವ ಮಾಂಸಾಹಾರಿಯಾಗಬೇಕೆ? ಎಂಬ ಪ್ರಶ್ನೆ ಅವನೊಬ್ಬನಿಂದ ಮಾತ್ರ ಬರಲು ಸಾಧ್ಯ. ಆ ಪ್ರಶ್ನೆ ಏಕೆ ಬರುತ್ತದೆ? ಏಕೆಂದರೆ ಅವನಿಗೆ ವಿವೇಚನೆ ಮಾಡುವ ಬುದ್ಧಿಶಕ್ತಿ ಇದೆ ಮತ್ತು ಅವನು ತನ್ನ ಹೊಟ್ಟೆ ತುಂಬಿಸಿಕೊಳ್ಳಲು ಇತರರನ್ನು ನೋಯಿಸಲು ಬಯಸದಿರುವುದರಿಂದ. ಆತನಿಗೆ ನೋವು ಎಂದರೆ ಏನೆಂದು ಗೊತ್ತಿದೆ, ಏಕೆಂದರೆ ಆತ ಇತರರು ಅವನಿಗೆ ನೋವುಂಟುಮಾಡಬಾರದೆಂದು ಬಯಸುತ್ತಾನೆ. ಸಸ್ಯಗಳೂ ಸಹ ಜೀವಿಗಳೇ, ಅವುಗಳಿಗೆ ನೋವುಂಟು ಮಾಡಬಹುದೇ? ಎಂದು ನೀವು ಕೇಳಬಹುದು. ಯಾವುದೇ ಜೀವ ವೈವಿಧ್ಯಕ್ಕೆ ಹಾನಿಯುಂಟು ಮಾಡದೆ ಬದುಕಲು ಸಾಧ್ಯವಿದ್ದರೆ ಅದು ಅತ್ಯುತ್ತಮ, ಆದರೆ ಅದು ಸಾಧ್ಯವಿಲ್ಲ. ಜೀವನ ಜೀವದ ಮೇಲೆ ಜೀವಿಸಿದೆ - ಅದು ಪ್ರಕೃತಿಯ ನಿಯಮ. ವಿವೇಚನಾಶಕ್ತಿಯುಳ್ಳ ಮನುಷ್ಯನಾಗಿ ನನ್ನ ಪಾತ್ರವೆಂದರೆ ನಾನು ಬದುಕಿರುವ ಸಲುವಾಗಿ ಪ್ರಕೃತಿಗೆ ಕನಿಷ್ಠ ಹಾನಿಯಾಗುವಂತೆ ನೋಡಿಕೊಳ್ಳುವುದು. ಸಸ್ಯಗಳ ನೋವಿನ ಬಗ್ಗೆ ನನಗೆ ಸ್ಪಷ್ಟ ತಿಳುವಳಿಕೆಯಿಲ್ಲ. ಆದ್ದರಿಂದ ಬದುಕಲಿಕ್ಕಾಗಿ ತಿನ್ನುವುದು ಮತ್ತು ತಿನ್ನಲಿಕ್ಕಾಗಿ ಬದುಕದಿರುವುದು ನಿರ್ಣಾಯಕ ಅಂಶವಾಗುತ್ತದೆ.
      ಭಗವದ್ಗೀತೆಯಲ್ಲಿ ಕೃಷ್ಣ ಒತ್ತಿ ಹೇಳುವುದೇನೆಂದರೆ ಒಬ್ಬ ಸಾಧಕ (ಮೋಕ್ಷಕ್ಕಾಗಿ ಹಂಬಲಿಸುವವನು) ಎಲ್ಲಾ ಜೀವಿಗಳ ವಿಷಯದಲ್ಲಿ ಅನುಕಂಪ ಹೊಂದಿರಬೇಕೆಂದು (ಸರ್ವ ಭೂತ ಹಿತೇರಥಾಃ). ಆಧ್ಯಾತ್ಮಿಕ ಬೆಳವಣಿಗೆಯಲ್ಲಿ ಬುದ್ಧಿಶಕ್ತಿ ಹರಿತವಾಗುತ್ತಾ ಹೋಗುತ್ತದೆ - ತೀಕ್ಷ್ಣ ಬುದ್ಧಿ ಸೂಕ್ಷ್ಮ ಬುದ್ಧಿಯಾಗುತ್ತಾ ಹೋಗುತ್ತದೆ. ಅಂದರೆ, ಮನಸ್ಸು ತಳಮಳರಹಿತ, ಶಾಂತ ಮತ್ತು ಸ್ವ-ನಿಯಂತ್ರಿತವಾಗುತ್ತದೆ. ಇತರರ ನೋವುಗಳಿಗೆ ಸ್ಪಂದಿಸುವ ಗುಣ ಸಹ ಬೆಳೆಯುತ್ತಾ ಹೋಗುತ್ತದೆ. ಆದ್ದರಿಂದ ಸಸ್ಯಾಹಾರಿಯಾಗುವುದು ಸೂಕ್ತ.
     ಸಾಂಪ್ರದಾಯಿಕ ಮಾಂಸಾಹಾರಿಗಳೂ ಸಹ ನಾಯಿಗಳು ಮತ್ತು ಬೆಕ್ಕುಗಳು ಅಥವ ಇತರ ಮಾನವ ಪ್ರಾಣಿಗಳನ್ನು ತಿನ್ನಲು ಇಷ್ಟಪಡುವುದಿಲ್ಲ! ಏಕೆ? ಎಷ್ಟೇ ಆದರೂ ಮಾಂಸ ಅಂದರೆ ಮಾಂಸವೇ! ಆದರೆ ಬಳಕೆಯಿಂದ ಅನುಕಂಪ ಬೆಳೆದಿರುತ್ತದೆ. ಮಾನವನನ್ನೇ ಹೋಲುವ ಆದರೆ ಪ್ರಾರಂಭಿಕ ಬುದ್ಧಿಶಕ್ತಿ ಹೊಂದಿರುವ ಹಲವು ಎರಡು ಕಾಲಿನ ಪ್ರಾಣಿಗಳಿವೆ. ಅವು ಪ್ರಾಣಿಗಳಂತೆ ವರ್ತಿಸುತ್ತವೆ. ಆದರೆ ವಿಕಸನವಾಗುತ್ತಾ ಹೋದಂತೆ ಅವುಗಳ ಬುದ್ಧಿಶಕ್ತಿ ಬೆಳೆಯುತ್ತಾ ಹೋಗುತ್ತದೆ ಎಂಬುದನ್ನು ಗಮನಿಸಿದರೆ ಪ್ರಕೃತಿಯಿಂದ ಎಷ್ಟು ಬೇಕೋ ಅಷ್ಟನ್ನು ಪಡೆದು ಸಸ್ಯಾಹಾರಿಯಾಗಿರುವುದು ಸೂಕ್ತವೆನಿಸುತ್ತದೆ. ಕೇವಲ ನಾಲಗೆಯ ಚಪಲವನ್ನು ತೃಪ್ತಿ ಪಡಿಸುವ ಸಲುವಾಗಿ ಯಾವುದೇ ಜೀವವಿಧಗಳನ್ನು ಘಾಸಿಗೊಳಿಸಬಾರದು.
     ಹಿಂದೂ ಒಬ್ಬ ಸಸ್ಯಾಹಾರಿಯಾಗಿರಬೇಕೇ? ಈ ಪ್ರಶ್ನೆ ನಿಮ್ಮ ಮನಸ್ಸಿನಲ್ಲಾಗಲೇ ಉದ್ಭವಿಸಿರಬಹುದು, ನಿಮ್ಮ ಹೊಟ್ಟೆಯನ್ನು ತೃಪ್ತಿಪಡಿಸಲು ಇತರ ಜೀವಗಳನ್ನು ನೋಯಿಸಬಾರದೆಂಬ ಸೂಕ್ಷ್ಮತೆ ನಿಮಗೆ ಇದೆಯೆಂದು ಭಾವಿಸುವೆ. ಹಾಗಿದ್ದಲ್ಲಿ ನೀವು ಮಾಂಸಾಹಾರದಿಂದ ದೂರವಿರುವುದು ಉತ್ತಮ ಮತ್ತು ಆಗ ನೀವು ನಿಮ್ಮ ಬುದ್ಧಿಶಕ್ತಿಯೊಂದಿಗೆ ಶಾಂತವಾಗಿರಬಹುದು. ನೀವು ಸೂಕ್ಷ್ಮ ಭಾವನೆಯುಳ್ಳವರಾಗಿದ್ದರೆ, ನಿಮ್ಮ ಬುದ್ಧಿಶಕ್ತಿ ಹೇಳುವುದೇ ಒಂದಾದರೆ ಮತ್ತು ನಿಮ್ಮ ಮನಸ್ಸು ಕೆಳ ಸಂತೋಷಗಳನ್ನು ಬಯಸಿ ಬೇರೆ ದಾರಿಯಲ್ಲಿ ನಿರ್ದೇಶಿಸಿದರೆ ಮತ್ತು ನೀವು ನಿಮ್ಮ ಬುದ್ಧಿ ಹೇಳಿದ ದಾರಿ ಬಿಟ್ಟು ನಡೆದರೆ ನೀವು ಪಾಪ ಮಾಡಿದಂತೆ ಆಗುತ್ತದೆ. ಕೃಷ್ಣ ಹೇಳಿದಂತೆ ಅದು ನಿಮ್ಮ ಸ್ವಧರ್ಮದ ವಿರುದ್ಧವಾಗುತ್ತದೆ. ಜೊತೆಗೆ, ಈಗ ಸಾಂಪ್ರದಾಯಿಕ ಮಾಂಸಾಹಾರಿಗಳೂ ಸಸ್ಯಾಹಾರ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ, ಇತರ ಪ್ರಾಣಿಗಳ ಬಗ್ಗೆ ಅನುಕಂಪದಿಂದಲ್ಲ, ಆದರೆ ಅದು ತಮ್ಮ ಆರೋಗ್ಯಕ್ಕೆ ಒಳ್ಳೆಯದಲ್ಲವೆಂಬ ಕಾರಣಕ್ಕಾಗಿ.
     ನಾನಾಗಲೇ ತಿಳಿಸಿದ್ದೇನೆ, ಹಿಂದುತ್ವದಲ್ಲಿ ಹೀಗೆ ಮಾಡಿ ಮತ್ತು ಹೀಗೆ ಮಾಡಬೇಡಿ ಎಂಬುದಿಲ್ಲ, ಆದರೆ ನೀವು ನಿಮ್ಮ ಸ್ವಂತದ ಮಾಡಬಹುದಾದ ಮತ್ತು ಮಾಡಬಾರದ ಸಂಗತಿಗಳನ್ನು ನಿಮ್ಮ ಬುದ್ಧಿಶಕ್ತಿಯ ಮೌಲ್ಯ, ಸಂಸ್ಕೃತಿ, ಶಿಕ್ಷಣ ಮತ್ತು ಬದುಕಿನ ಪ್ರಾಥಮಿಕ ಗುರಿ ಆಧರಿಸಿ ನಿರ್ಧರಿಸಿಕೊಳ್ಳಿ. ನಿಮ್ಮ ಸ್ವಧರ್ಮವನ್ನು ನೀವು ಪಾಲಿಸುವುದರಿಂದ ನೀವು ನಿಮ್ಮೊಂದಿಗೆ ಸಮಾಧಾನದಿಂದಿರುವುದನ್ನು ಕಂಡುಕೊಳ್ಳುವಿರಿ. ಅದನ್ನು ಬೇರೆಯವರು ನಿರ್ಣಯಿಸುವುದಲ್ಲ, ನೀವೇ ನಿರ್ಣಯಿಸಿಕೊಳ್ಳುವುದು. ನೀವು ತಳಮಳಕ್ಕೆ ಒಳಗಾದಿರೆಂದರೆ ಅದರ ಅರ್ಥ ನೀವು ಅದರಿಂದ ಮನಸ್ಸಿನ ಶಾಂತಿ ಕಳೆದುಕೊಳ್ಳುತ್ತಿರುವಿರೆಂದು ಮತ್ತು ಅದೇ ಪಾಪ. ನಿಮ್ಮನ್ನು ನೀವೇ ನೀವು ತಿನ್ನುವ ಕೋಳಿ ಅಥವ ಹಸು ಎಂದಿಟ್ಟುಕೊಳ್ಳಿ. ನೀವು ನಿಮ್ಮನ್ನು ತಿನ್ನುವವರನ್ನು ಸಸ್ಯಾಹಾರಿಗಳಾಗಲು ಮತ್ತು ನಿಮ್ಮ ಜೀವ ಉಳಿಸಲು ಹೇಳುವುದಿಲ್ಲವೇ? ನೀವು ಪ್ರಾಣಿಯನ್ನು ನೀವೇ ಕೊಲ್ಲುತ್ತಿಲ್ಲವೆಂದೂ ಮತ್ತು ನೀವು ತಿಂದರೂ, ತಿನ್ನದಿದ್ದರೂ ಪ್ರಾಣಿಗಳು ಕೊಲೆಯಾಗುವುವು ಎಂದು ಹೇಳದಿರಿ. ನೀವು ತಿನ್ನದಿದ್ದರೆ ಒಂದು ಪ್ರಾಣಿ ಉಳಿಯುತ್ತದೆ. ಅದೇ ಬೇಡಿಕೆ ಮತ್ತು ಪೂರೈಕೆ. ನಾನು ಸ್ವತಃ ಕದಿಯದಿರಬಹುದು, ಆದರೆ ಕದ್ದ ಮಾಲನ್ನು ಅದು ಕದ್ದಮಾಲು ಎಂದು ಗೊತ್ತಿದ್ದೂ ಕೊಂಡರೆ, ಅದು ಅಪರಾಧ! ಅಲ್ಲವೇ? ಈಗ ಕೃತಕ ಮಾಂಸಗಳೂ ದೊರೆಯುತ್ತವೆ - ಆದ್ದರಿಂದ ಸತ್ತ ಮಾಂಸಕ್ಕೇಕೆ ಹಂಬಲಿಸಬೇಕು? ನಿಮ್ಮ ಹೊಟ್ಟೆಯನ್ನು ಸತ್ತ ಪ್ರಾಣಿಯ ಸ್ಮಶಾನವಾಗಬೇಕೆಂದು ಏಕೆ ಬಯಸುವಿರಿ?
     ಹಿಂದುತ್ವದ ದೃಷ್ಟಿಯಿಂದ ನೋಡಿದರೆ ಅದು ಇದನ್ನೆಲ್ಲಾ ಗಮನಿಸುವುದೇ ಇಲ್ಲ. ಅದು ಬಯಸುವುದೇನೆಂದರೆ ಸನಾತನ ಧರ್ಮದ ದಾರಿಯಲ್ಲಿ ನಡೆಯಬೇಕೆಂದಷ್ಟೆ. ಆದ್ದರಿಂದ ನಿಮ್ಮ ಮನಸ್ಸನ್ನು ಶಾಂತವಾಗಿ ಮತ್ತು ತಳಮಳರಹಿತವಾಗಿರುವಂತೆ ನೋಡಿಕೊಳ್ಳಲು ಏನು ಮಾಡಬೇಕೋ ಅದನ್ನು ಮಾಡಿ. ಮನಸ್ಸಿನ ಶುದ್ಧತೆಯೇ ಮೋಕ್ಷ ಪಡೆಯುವ ದಾರಿ ಮತ್ತು ಅದು ಮಾನವ ಜೀವನದ ಗುರಿ. ನಾವು ಇಷ್ಟಪಟ್ಟು ಮಾಡಿದ ಕ್ರಿಯೆಗಳಿಂದ ಈ ಸಂಸಾರದ ಜಂಜಾಟಕ್ಕೆ ಸಿಲುಕಿದ್ದು, ನಾವು ಇಷ್ಟಪಟ್ಟು ಮಾಡುವ ಸಾಧನೆಯೊಂದೇ ಅದರಿಂದ ಹೊರಬರಲು ಸಾಧ್ಯ. ಭಗವಂತ ನಮಗೆ ಇದನ್ನು ಸಾಧಿಸಲು ಬುದ್ಧಿಶಕ್ತಿ ಕೊಟ್ಟಿದ್ದಾನೆ. ಕೃಷ್ಣ ಘೋಷಿಸಿದ್ದಾನೆ -ಪರಧರ್ಮಕ್ಕಿಂತ ಸ್ವಧರ್ಮದಲ್ಲಿ ಸಾಯುವುದು ಮೇಲು. ಸ್ವಧರ್ಮ (ಅದು ನೀವು ಯಾವ ಜಾತಿ ಅಥವ ಧರ್ಮಕ್ಕೆ ಸೇರಿರುವಿರಿ ಎಂಬುದಲ್ಲ) ಎಂದರೆ ಅಂತಿಮವಾಗಿ ನಿಮ್ಮ ಬುದ್ಧಿಶಕ್ತಿ ಅಥವ ಅಂತಃಸಾಕ್ಷಿ ಏನು ಹೇಳುತ್ತದೆಯೋ ಅದು. ಏಕೆಂದರೆ, ಕ್ರಿಯೆ ಮಾಡಿದ ನಂತರ ನಿಮ್ಮ ಮನಸ್ಸೇ ನಿಮ್ಮ ಬುದ್ಧಿಶಕ್ತಿಯೊಂದಿಗೆ ಲೆಕ್ಕ ಇತ್ಯರ್ಥ ಮಾಡಿಕೊಳ್ಳಬೇಕಿರುವುದು.
     ನಿಮಗೆ ನೀವೇ ಒಂದು ಉಪಕಾರ ಮಾಡಿಕೊಳ್ಳಿರಿ - ನಿಮಗೆ ಯಾವುದು ಅಗತ್ಯವಿದೆಯೋ ಅದನ್ನು ತಿನ್ನಿ ಮತ್ತು ಯಾವುದು ನಿಜವಾಗಿಯೂ ಅಗತ್ಯವಿಲ್ಲವೋ ಅದನ್ನು ಬಿಟ್ಟುಬಿಡಿ. ಆ ರೀತಿಯಲ್ಲಿ ನಿಮ್ಮ ಜೀವನವನ್ನು ಸರಳ, ಶಾಂತ ಮತ್ತು ಕಡಿಮೆ ಕೊಲೆಸ್ಟರಾಲ್ ನೊಂದಿಗೆ ಆರೋಗ್ಯವಂತವಾಗಿ ಮಾಡಿಕೊಳ್ಳಿ.
*********
     ಮೂರ್ಖ ಮಾತ್ರ ಜೀವನವನ್ನು ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ. ಬುದ್ಧಿವಂತ ಗಂಭೀರವಾಗಿ ಜೀವನವನ್ನು ಗಂಭೀರವಾಗಿ ತೆಗೆದುಕೊಳ್ಳುತ್ತಾನೆ.
ಜಾಣ ಗಂಭೀರವಾಗಿ ಜೀವನವನ್ನು ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ. ಆತನಿಗೆ ಜೀವನವೆಂದರೆ ಅತ್ಯುತ್ತಮವಾಗಿ ಆಡಬೇಕಾದ ಆಟ! ಗೆಲ್ಲಲಿ ಅಥವ ಸೋಲಲಿ, ಆಡುವುದರಲ್ಲಿ ಖುಷಿಯಿದೆ.
*********
ಮೂಲ ಇಂಗ್ಲಿಷ್ ಲೇಖನ: ಡಾ. ಕೆ. ಸದಾನಂದ, ವಾಷಿಂಗ್ಟನ್, ಡಿ.ಸಿ. ೨೦೩೭೫.
ಕನ್ನಡ ಅನುವಾದ :        ಕವಿ ನಾಗರಾಜ್.

ಏನಂತೆ? ? . . . . ! !

ಏನಂತೆ? ಸೋತರೇನಂತೆ?
ಸೋಲೆಂಬುದೇನೆಂದು ತಿಳಿಯಿತಂತೆ !
ಗೆಲುವಿನ ದಾರಿಯದು ಕಂಡಿತಂತೆ !!

ಏನಂತೆ? ಬಿದ್ದರೇನಂತೆ ?
ನೋವೆಂಬುದೇನೆಂದು ತಿಳಿಯಿತಂತೆ !
ನೋಡಿ ನಡೆಯಲು ಕಲಿತೆನಂತೆ !!

ಏನಂತೆ? ಹಸಿವಾದರೇನಂತೆ ?
ದುಡಿದು ಉಣ್ಣಲು ಮಾರ್ಗವಂತೆ !
ಹಳಸಿದ ಅನ್ನವೂ ರುಚಿಯಂತೆ !!

ಏನಂತೆ? ದುಃಖವಾದರೇನಂತೆ ?
ಸಂತೋಷದ ದಾರಿ ಸಿಕ್ಕಿತಂತೆ !
ಸುಖವೆಂಬುದೊಳಗೇ ಇದೆಯಂತೆ !!

ಏನಂತೆ? ತಪ್ಪಾದರೇನಂತೆ ?
ನಡೆ ತಿದ್ದಿ ಸಾಗುವ ಮನಸಂತೆ !
ತಲೆ ಎತ್ತಿ ನಡೆಯುವ ಕನಸಂತೆ !!

ಏನಂತೆ? ನಿಂದಿಸಿದರೇನಂತೆ ?
ನಿಂದಕರ ಬಾಯಿ ಹೊಲಸಂತೆ !
ನಾನಾರೆಂದು ನನಗೆ ತಿಳಿಯಿತಂತೆ !!

ಏನಂತೆ? ಸೂರಿಲ್ಲದಿರೇನಂತೆ ?
ಲೋಕವೆ ನನ್ನ ಮನೆಯಂತೆ !
ಬಹು ದೊಡ್ಡ ಮನೆಯೇ ನನ್ನದಂತೆ !!

ಏನಂತೆ? ದಿಕ್ಕಿಲ್ಲದಿರೇನಂತೆ ?
ಜನರೆಲ್ಲ ನನ್ನ ಬಂಧುಗಳಂತೆ !
ಬಲು ದೊಡ್ಡ ಸಂಸಾರ ನನ್ನದಂತೆ !!

-ಕ.ವೆಂ.ನಾಗರಾಜ್.

ಭಾನುವಾರ, ನವೆಂಬರ್ 7, 2010

ಮೂಢ ಉವಾಚ -21

ಭಯದ ಮಹಿಮೆಯನರಿಯದವರಾರಿಹರು?
ಭಯವಿಲ್ಲದಾ ಜೀವಿಯದಾವದಿರಬಹುದು?|
ನಿಶಾಭಯ ಏಕಾಂತಭಯ ಅಭದ್ರತೆಯ ಭಯ
ಭಯದಿಂದ ಮೂಡಿಹನೆ ಭಗವಂತ ಮೂಢ?||


ಭೋಗಿಯಾದವಗೆ ರೋಗಿಯಾಗುವ ಭಯ
ರೋಗಿಯಾದವಗೆ ಸಾವು ಬಂದೆರಗುವ ಭಯ|
ಅಭಿಮಾನಧನನಿಗೆ ಮಾನಹಾನಿಯ ಭಯ
ಭಯದ ಕಲ್ಪನೆಯೇ ಭಯಾನಕವು ಮೂಢ||


ಸತ್ಕುಲಜಾತನಿಗೆ ಹೆಸರು ಕೆಡುವ ಭಯ
ಧನವಿರಲು ಚೋರಭಯ ಮೇಣ್ ರಾಜಭಯ|
ಸಜ್ಜನರಿಂಗೆ ಕುಜನರು ಕಾಡುವ ಭಯ
ಭಯ ಭಯ ಭಯಮಯವೀ ಲೋಕ ಮೂಢ||


ಸಿರಿವಂತನಿಗೆ ದಾರಿದ್ರ್ಯ ಬಂದೀತೆಂಬ ಭಯ
ಬಲಶಾಲಿಯಾದವಗೆ ಶತ್ರು ಸಂಚಿನ ಭಯ|
ಮೇಲೇರಿದವಗೆ ಕೆಳಗೆ ಬಿದ್ದೇನೆಂಬ ಭಯ
ಭಯಮುಕ್ತನವನೊಬ್ಬನೇ ವಿರಾಗಿ ಮೂಢ||
*************
-ಕವಿನಾಗರಾಜ್.

ಗುರುವಾರ, ಅಕ್ಟೋಬರ್ 28, 2010

ಮೊರೆ






ಸರಿಸಿಬಿಡು ಮೂಢಮನ ಆವರಿತ ಪೊರೆಯಾ|
ತೆರೆದುಬಿಡು ಕಿಟಕಿಯನು ಒಳಬರಲಿ ಬೆಳಕು||
ರೂಢಿರಾಡಿಯಲಿ ಸಿಲುಕಿ ತೊಳಲಾಡುತಿಹೆ ನಾನು|
ಕರುಣೆದೋರೈ ದೇವ ಸತ್ಪಥದಿ ಮುನ್ನಡೆಸು||

ಸರ್ವರೊಳ್ಳಿತ ಬಯಸಿ ಸ್ವಂತಹಿತ ಕಡೆಗಿಟ್ಟೆ|
ಸರ್ವದೂಷಿತನಾಗಿ ನೆಲೆಗಾಣದಿದೆ ಮನವು||
ಅರಿಗಳಾರರ ಬಂದಿ ದಿಕ್ಕೆಟ್ಟು ಕುಳಿತಿರುವೆ|
ಸದ್ಗುರುವೆ ಕೃಪೆದೋರಿ ಹಿಡಿದೆತ್ತಿ ಸಂತಯಿಸು||


ಪಂಡಿತನು ನಾನಲ್ಲ ಪಾಂಡಿತ್ಯವೆನಗಿಲ್ಲ|
ಒಳಮನದ ನುಡಿಯೊಂದೆ ಆಸರೆಯು ನನಗೆಲ್ಲ||
ಹುಲುಮನುಜ ನಾನಾಗಿ ಭಾವಬಂಧಿಯು ನಾನು|
ಸಮಚಿತ್ತ ಕರುಣಿಸೈ ನೆಮ್ಮದಿಯ ನೀನೀಡು||
**********************
-ಕವಿನಾಗರಾಜ್.

ಬುಧವಾರ, ಅಕ್ಟೋಬರ್ 20, 2010

ಮೂಢ ಉವಾಚ -20

ಕೋಪಿಷ್ಠರೊಡನೆ ಬಡಿದಾಡಬಹುದು
ಅಸಹನೀಯವದು ಮಚ್ಚರಿಗರ ಪ್ರೇಮ|
ಪರರುತ್ಕರ್ಷ ಸಹಿಸರು ಕರುಬಿಯುರಿಯುವರು
ಉದರದುರಿಯನಾರಿಸುವರಾರೋ ಮೂಢ||


ಭುಕ್ತಾಹಾರ ಜೀರ್ಣಿಸುವ ವೈಶ್ವಾನರ*
ಕಂಡವರನು ಸುಡುವನೆ ಅಸೂಯಾಪರ|
ಶತಪಾಲು ಲೇಸು ಮಂಕರೊಡನೆ ಮೌನ
ಬೇಡ ಮಚ್ಚರಿಗರೊಡನೆ ಸಲ್ಲಾಪ ಮೂಢ||


ಸದ್ಗುಣಕಮಲಗಳು ಕಮರಿ ಕಪ್ಪಡರುವುವು
ಸರಿಯು ತಪ್ಪೆನಿಸಿ ತಪ್ಪು ಒಪ್ಪಾಗುವುದು|
ಅರಿವು ಬರುವ ಮುನ್ನಾವರಿಸಿ ಬರುವ ಮತ್ಸರವು
ನರರ ಕುಬ್ಜರಾಗಿಸುವುದು ಮೂಢ||
[* ವೈಶ್ವಾನರ ಎಂಬುದು ಹೊಟ್ಟೆಯೊಳಗೆ ಇರುವ ಕಿಚ್ಚು. ತಾಯಿಯ ಗರ್ಭದಲ್ಲಿರುವಾಗಲೇ ಹುಟ್ಟುವ ಈ ಕಿಚ್ಚು ತಿಂದ ಆಹಾರವನ್ನು ಜೀರ್ಣಿಸುತ್ತದೆ.]
********************
-ಕ.ವೆಂ.ನಾಗರಾಜ್.

ಭಾನುವಾರ, ಅಕ್ಟೋಬರ್ 3, 2010

ಮೂಢ ಉವಾಚ -19

ಮದಭರಿತ ಮನುಜನ ಪರಿಯೆಂತು ನೋಡು
ನಡೆಯುವಾ ಗತ್ತು ನುಡಿಯುವಾ ಗಮ್ಮತ್ತು|
ಮೇಲರಿಮೆಯಾ ಭೂತ ಅಡರಿಕೊಂಡಿಹುದು
ಭೂತಕಾಟವೇ ಬೇಡ ದೂರವಿರು ಮೂಢ||


ಕಣ್ಣೆತ್ತಿ ನೋಡರು ಪರರ ನುಡಿಗಳನಾಲಿಸರು
ದರ್ಪದಿಂ ವರ್ತಿಸುತ ಕೊಬ್ಬಿ ಮೆರೆಯುವರು|
ಮೂಲೋಕದೊಡೆಯರೇ ತಾವೆಂದು ಭಾವಿಸುತ
ಮದೋನ್ಮತ್ತರೋಲಾಡುವರು ಮೂಢ||


ಮದೋನ್ಮತ್ತನಾ ಮಹಿಮೆಯನೆಂತು ಬಣ್ಣಿಸಲಿ?
ಉದ್ಧಟತನವೆ ಮೈವೆತ್ತು ದರ್ಪದಿಂ ದಿಟ್ಟಿಸುವ|
ಎದುರು ಬಂದವರ ಕಡೆಗಣಿಸಿ ತುಳಿಯುವ
ಮದಾಂಧನದೆಂತ ಠೇಂಕಾರ ನೋಡು ಮೂಢ||


ಮದಸೊಕ್ಕಿ ಮೆರೆದವರೊಡನಾಡಬಹುದೆ?
ನಯ ವಿನಯ ಸನ್ನಡತೆಗವಕಾಶ ಕೊಡದೆ|
ವಿಕಟನರ್ತನಗೈವ ಮದವದವನತಿ ತರದೆ?|
ನರಾರಿ ಮದದೀಪರಿಯ ನೀನರಿ ಮೂಢ||
**************
-ಕವಿನಾಗರಾಜ್.