ವೇದಜೀವನ ಬ್ಲಾಗಿಗೆ ಸ್ವಾಗತ. ಸುವಿಚಾರಗಳು ಎಲ್ಲಿಂದಲಾದರೂ ಬರಲಿ, ಯಾರಿಂದಲಾದರೂ ಬರಲಿ, ಪೂರ್ವಾಗ್ರಹ ಪೀಡಿತರಾಗದೆ ಸ್ವೀಕರಿಸೋಣ.

ಶನಿವಾರ, ಜನವರಿ 19, 2013

ದೇಶ ಮತ್ತು ಧರ್ಮರಕ್ಷಕ ವಿದ್ಯಾರಣ್ಯ



     ಕಲಿಕೆಯ ಕೊನೆಯ ಹಂತದಲ್ಲಿದ್ದಾಗ ಗುರು ವಿದ್ಯಾತೀರ್ಥರು ಇತರ ಶಿಷ್ಯರಿಗೆ ಕೇಳಿದಂತೆ ಪ್ರಿಯ ಶಿಷ್ಯ ಮಾಧವನಿಗೂ ಕೇಳಿದರು:
"ಮಾಧವ, ನೀನು ಮುಂದೆ ಏನಾಗಬೇಕೆಂದಿರುವೆ?"
ಮಾಧವ ಉತ್ತರಿಸಿದ್ದ:
"ಗುರುಗಳೇ, ಮನುಷ್ಯನಲ್ಲಿ ನಾನು ಎಂಬ ಅಹಮಿಕೆ ಇರುವವರೆಗೆ, ಏನನ್ನಾದರೂ ಸಾಧಿಸುವುದು ಕಷ್ಟ. ದೇವರ ಇಚ್ಛೆ ಇದ್ದರೆ, ಕಾಣುವ ದೇವರಾದ ಮನುಕುಲದ ಸೇವೆಗಾಗಿ, ಮೌಢ್ಯದ ಕಾರಣದಿಂದ ಮಲಗಿರುವ ದೇಶದ ಜಾಗೃತಿಗಾಗಿ ನನ್ನ ಜೀವನವನ್ನು ಉಪಯೋಗಿಸುವೆ. ನನ್ನ ದೇಶ ಮತ್ತು ಧರ್ಮದ ರಕ್ಷಣೆಗಾಗಿ, ದೇಶದ ಸ್ವಾತಂತ್ರ್ಯಕ್ಕಾಗಿ ನನ್ನ ಜೀವನ ಮುಡುಪಿಡಬೇಕೆಂದಿದ್ದೇನೆ."
ಈ ಉತ್ತರದಿಂದ ಆನಂದಿತರಾದ ಗುರುಗಳು ಅವನನ್ನು ಆಲಂಗಿಸಿಕೊಂಡು, 
"ಮಗು, ಇತರರ ಒಳಿತಿಗೆ ಕೆಲಸ ಮಾಡುವುದು, ದೇಶ, ಧರ್ಮ, ಸ್ವಾತಂತ್ರ್ಯದ ಸಲುವಾಗಿ ಜೀವನ ಮೀಸಲಿಡುವುದು ಪವಿತ್ರವಾದುದು. ನಿನ್ನ ಆದರ್ಶದ ಪಾಲನೆಯಲ್ಲಿ ಯಶಸ್ವಿಯಾಗು. ನಿನ್ನ ಸೇವೆಯಿಂದ ಜಗತ್ತಿಗೆ ಒಳಿತಾಗಲಿ" ಎಂದು ಹೃತ್ಪೂರ್ವಕವಾಗಿ ಆಶೀರ್ವದಿಸಿದರು.
     ಆ ಮಾಧವನೇ ಮುಂದೆ ವಿದ್ಯಾರಣ್ಯರೆಂಬ ಹೆಸರಿನಿಂದ ಪ್ರಸಿದ್ಧನಾಗಿ ವಿಜಯನಗರ ಸಂಸ್ಥಾನದ ಸ್ಥಾಪಕನೆನಿಸಿದ್ದು ಈಗ ಇತಿಹಾಸ. ಮಾಧವನ ಈ ನಿರ್ಧಾರಕ್ಕೆ ದೇಶದ ಅಂದಿನ ಸ್ಥಿತಿ ಗತಿಗಳೇ ಪ್ರಮುಖ ಕಾರಣವಾಗಿದ್ದಿರಬಹುದು. ಪಂಪಾಕ್ಷೇತ್ರದಲ್ಲಿ (ಈಗಿನ ಹಂಪೆ) ಮಾಯನಾಚಾರ್ಯ ಮತ್ತು ಶ್ರೀಮತೀದೇವಿಯವರ ಪುತ್ರನಾಗಿ ಕ್ರಿ.ಶ. ೧೨೬೮ರ ಸುಮಾರಿಗೆ ಜನಿಸಿದ ಮಾಧವನಿಗೆ, ಸಾಯಣ, ಭೋಗನಾಥ ಎಂಬ ತಮ್ಮಂದಿರು ಮತ್ತು ಸಿಂಗಲಾ ಎಂಬ ತಂಗಿಯೂ ಇದ್ದರು. ತುಂಗಭದ್ರಾ ತೀರದಲ್ಲಿದ್ದ ಶಂಕರಾನಂದ ಎಂಬ ಗುರುಗಳಲ್ಲಿ ಹಲವು ವರ್ಷಗಳ ಕಾಲ ಮಾಧವ, ಸಾಯಣ ಮತ್ತು ಭೋಗನಾಥರು ಶ್ರದ್ಧೆಯಿಂದ ವಿದ್ಯಾಭ್ಯಾಸ ಮಾಡಿದರು. ಶಂಕರಾನಂದರು ನಂತರ ಅವರನ್ನು ಉದ್ದೇಶಿಸಿ, "ಮಕ್ಕಳೇ, ನಾನು ಕಲಿಸಿದ್ದ ಎಲ್ಲವನ್ನೂ ನೀವು ಶ್ರದ್ಧೆಯಿಂದ ಕಲಿತಿರುವಿರಿ. ಇನ್ನು ನೀವು ಕಾಂಚಿಯಲ್ಲಿರುವ ನನ್ನ ಗುರುಗಳಾದ ಶ್ರೀ ವಿದ್ಯಾತೀರ್ಥರಲ್ಲಿ ವಿದ್ಯಾಭ್ಯಾಸ ಮುಂದುವರೆಸಿರಿ" ಎಂದು ಹೇಳಿ ಅವರನ್ನು ಶಿಷ್ಯರನ್ನಾಗಿ ಸ್ವೀಕರಿಸಲು ಕೋರಿ ಗುರುಗಳಿಗೆ ಪತ್ರ ಬರೆದು ಕೊಟ್ಟರು. 
     ಆ ಸಮಯದಲ್ಲಿ ಪಲ್ಲವರ ರಾಜಧಾನಿಯಾಗಿದ್ದ ಕಾಂಚಿಯು ದ್ವೈತ, ಅದ್ವೈತ ಮತ್ತು ವಿಶಿಷ್ಟಾದ್ವೈತ ತತ್ವಗಳನ್ನು ಕಲಿಸುವ ಪ್ರಸಿದ್ಧ ಕ್ಷೇತ್ರವಾಗಿತ್ತು. ವಿದ್ಯಾತೀರ್ಥರ ವಿಶ್ವಾಸ ಗಳಿಸುವಲ್ಲಿ ಮತ್ತು ಅವರನ್ನು ಗುರುವಾಗಿ ಹೊಂದುವಲ್ಲಿ ಮಾಧವ ಅದೃಷ್ಟಶಾಲಿಯಾಗಿದ್ದ. ಶಂಕರಾನಂದ, ಭಾರತೀಕೃಷ್ಣ, ಶ್ರೀಕಂಠನಾಥ, ಮೊದಲಾದ ಗುರುಗಳಿಂದಲೂ ಪಡೆದ ಮಾರ್ಗದರ್ಶನ ಅವನ ಮುಂದಿನ ನಿರ್ಧಾರ ರೂಪಿಸುವಲ್ಲಿ ಪಾತ್ರವಹಿಸಿತ್ತು. ದೇಶಪ್ರೇಮ, ಧೃಢತೆ, ಸೇವಾಮನೋಭಾವ, ಪರಧರ್ಮ ಸಹಿಷ್ಣುತೆ, ಸಮಯೋಚಿತ ನಿರ್ಧಾರ ಕೈಗೊಳ್ಳುವ ಶಕ್ತಿ, ತಾಳ್ಮೆ, ಪ್ರಚಲಿತ ವಿದ್ಯಮಾನಗಳ ಅರಿವು, ಜಗತ್ತಿನ ಒಳಿತಿಗೆ ಕೆಲಸ ಮಾಡುವ ಮನಸ್ಸುಗಳು ಆ ವೇಳೆಗಾಗಲೇ ಮಾಧವನಲ್ಲಿ ರಕ್ತಗತವಾಗಿದ್ದವು. ಇತರರಂತೆ ಕೇವಲ ವಿದ್ಯಾಭ್ಯಾಸ, ಮದುವೆ, ಸಾಮಾನ್ಯ ಜೀವನ ಸಾಗಿಸುವುದಕ್ಕೆ ಮಾತ್ರ ತಾನು ಹುಟ್ಟಿಲ್ಲವೆಂದು, ತಾನು ಸಾಧಿಸಬೇಕಾದುದು ಇನ್ನೂ ಹೆಚ್ಚಿನದೆಂದು ಅವನ ಒಳ ಮನಸ್ಸು ಹೇಳುತ್ತಿತ್ತು. ವೇದ, ಉಪನಿಷತ್ತುಗಳು, ತತ್ವಕಲೆ, ಸಾಹಿತ್ಯಗಳಲ್ಲಿ ಪ್ರಾವೀಣ್ಯತೆ ಪಡೆದ ಮಾಧವನೊಡನೆ ಗುರು ವಿದ್ಯಾತೀರ್ಥರು ಕೇಳಿದ್ದ ಪ್ರಶ್ನೆಯೇ ಲೇಖನದ ಪ್ರಾರಂಭದಲ್ಲಿ ಉಲ್ಲೇಖಿಸಿರುವ, "ಮಾಧವ, ನೀನು ಮುಂದೆ ಏನಾಗಬೇಕೆಂದಿರುವೆ?" ಎಂಬುದು! 'ಕನ್ನಡ ನೆಲದಲ್ಲಿ ತಾಯಿ ಭುವನೇಶ್ವರಿಯ ಕೃಪೆಯಿಂದ ಒಂದು ರಾಜ್ಯಸ್ಥಾಪನೆ ಮಾಡಿ ದಾಳಿಕೋರರನ್ನು ಓಡಿಸಬೇಕು, ಹಿಂದೂ ಧರ್ಮ ಮತ್ತು ಸಂಸ್ಕೃತಿಗೆ ಇರುವ ಅಪಾಯಗಳನ್ನು ನಿಗ್ರಹಿಸಬೇಕು. ಅದಕ್ಕಾಗಿ ಭುವನೇಶ್ವರಿಯನ್ನು ಕುರಿತು ತಪಸ್ಸು ಮಾಡಬೇಕು' ಎಂದು ಮನದೊಳಗೆ ಹುದುಗಿದ್ದ ಭಾವನೆಯನ್ನು ಗುರುಗಳ ಮುಂದೆ ವ್ಯಕ್ತಪಡಿಸಿದಾಗ ಗುರುಗಳು, "ನೀನು ಸಾಮಾನ್ಯನಲ್ಲಪ್ಪ. ನೀನು ಹುಟ್ಟಿರುವುದೇ ಸಾಧನೆ ಮಾಡುವ ಸಲುವಾಗಿ. ನೀನು ಈ ದೇಶ ಮತ್ತು ಧರ್ಮವನ್ನು ರಕ್ಷಿಸುತ್ತೀಯೆ" ಎಂದು ಮನತುಂಬಿ ಹೇಳಿದರು. 
     ಕಾಂಚಿಗೆ ಹೊರಟಿದ್ದ ಸಮಯದಲ್ಲೇ ಮಾಧವನ ತಂದೆ ಮಾಯನಾಚಾರ್ಯ ಸ್ವರ್ಗವಾಸಿಯಾಗಿದ್ದರು, ವಿದ್ಯಾಭ್ಯಾಸದ ನಂತರ ಪಂಪಾಕ್ಷೇತ್ರಕ್ಕೆ ವಾಪಸು ಬಂದ ಮಾಧವ ತನ್ನ ತಾಯಿ ಮತ್ತು ತಂಗಿಯನ್ನು ಸಲಹುವ ಜವಾಬ್ದಾರಿ ವಹಿಸಿಕೊಂಡು, ಅದಕ್ಕಾಗಿ ಪೌರೋಹಿತ್ಯವನ್ನು ಆಶ್ರಯಿಸಿದ. ತಂಗಿಯ ಮದುವೆ ನೆರವೇರಿಸಿದ. ವೀತಿಹೋತ್ರಿಯ ಮಗಳು ವೈತಿಹೋತ್ರಿಯೊಡನೆ ಅವನ ವಿವಾಹವಾತು. ಈ ರೀತಿಯ ಜೀವನದಲ್ಲಿ ಅವನಿಗೆ ಸಮಾಧಾನವಿರಲಿಲ್ಲ. ಗುರುಗಳೊಡನೆ ತಾನು ಹೇಳಿದ್ದ ಮಾತುಗಳು ಅವನನ್ನು ಸದಾ ಎಚ್ಚರಿಸುತ್ತಿದ್ದವು. ಆ ಸಮಯದಲ್ಲಿ ಶ್ರೀರಂಗಮ್ ಮೇಲೆ ದಾಳಿ ಮಾಡಿದ ಡೆಲ್ಲಿ ಸುಲ್ತಾನನ ದಳಪತಿ ಮಲ್ಲಿಕ್ ಕಾಫರ್ ಅಲ್ಲಿ ನಡೆಸಿದ ಭೀಭತ್ಸ ಅತ್ಯಾಚಾರ, ಕೊಲೆಗಳು, ಲೂಟಿ, ದೇವರ ವಿಗ್ರಹಗಳ ಧ್ವಂಸ ಕಾರ್ಯ ಮಾಧವನ ನಿರ್ಧಾರವನ್ನು ಮತ್ತಷ್ಟು ಗಟ್ಟಿಗೊಳಿಸಿತು. ಅಲ್ಲಿನ ಜನರು ಕೇವಲ ಕೆಲವು ದಿನ ಶಪಿಸಿ ಸುಮ್ಮನಾಗಿದ್ದಲ್ಲದೆ, ನಂತರದಲ್ಲಿ ಏನೂ ಆಗಿಲ್ಲವೆಂಬಂತೆ ದೈನಂದಿನ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದರು. ಪ್ರತಿಭಟಿಸಬೇಕೆಂಬ ಮನೋಭಾವವೇ ಅವರಲ್ಲಿ ಇರುತ್ತಿರಲಿಲ್ಲ. ಆಳುವವರೂ ಸಹ ಸ್ವಾರ್ಥಪ್ರೇರಿತರಾಗಿ, ಸ್ವಾಭಿಮಾನರಹಿತರಾಗಿದ್ದರು. ಜನರನ್ನು ಜಾಗೃತಿಗೊಳಿಸುವ ಕೆಲಸ ಅತ್ಯಂತ ಮಹತ್ವದ್ದೆಂದು ಮಾಧವನಿಗೆ ಅರಿವಾಯಿತು.  ಬಹುಷಃ ಅದೇ ಮನೋಭಾವ ಇಂದಿಗೂ ನಮ್ಮ ಜನರಲ್ಲಿ ಕಂಡು ಬರುತ್ತಿದೆ. ಉಗ್ರಗಾಮಿಗಳಿಂದ ಭಯೋತ್ಪಾದಕ ಚಟುವಟಿಕೆಗಳು ನಡೆದಾಗ ಕೆಲವು ಪ್ರತಿಭಟನಾತ್ಮಕ ಹೇಳಿಕೆಗಳನ್ನು ನೀಡಿ, ನಂತರದಲ್ಲಿ ಮರೆತೇ ಬಿಡುವ ಸ್ವಭಾವ ಕಂಡುಬರುತ್ತಿಲ್ಲವೇ?
     ದಕ್ಷಿಣ ಭಾರತದಲ್ಲಿ ಆಗ ಪರಿಸ್ಥಿತಿ ಕೆಟ್ಟದ್ದಾಗಿತ್ತು. ಜನರು ನರಸತ್ತವರಂತಿದ್ದರು. ದಾಳಿಕೋರರು ಎಗ್ಗಿಲ್ಲದೆ ಲೂಟಿ, ಆಕ್ರಮಣ, ಕೊಲೆ, ಅತ್ಯಾಚಾರ, ವಿಗ್ರಹಭಂಜನಗಳಲ್ಲಿ ತೊಡಗಿದ್ದರು. ಪ್ರತಿಭಟನೆ ಅತ್ಯಂತ ಕ್ಷೀಣ ಸ್ತರದಲ್ಲಿತ್ತು. ಬೆಂದ ಮನೆಯಲ್ಲಿ ಗಳ ಹಿರಿಯುವ ಮನೋಭಾವದವರಿಂದಾಗಿ ರಾಜಸತ್ತೆಗಳು ದುರ್ಬಲವಾಗಿದ್ದವು. ಇದ್ದಿದ್ದರಲ್ಲಿ ಕರ್ನಾಟಕದವರು ಪ್ರತಿರೋಧ ಒಡ್ಡಿದ್ದರು. ಒಂದು ಕಾಲದಲ್ಲಿ ಗಂಗರು, ರಾಷ್ಟ್ರಕೂಟರು, ಚಾಲುಕ್ಯರು, ಕದಂಬರು, ಹೊಯ್ಸಳರು ತಮ್ಮ ರಾಜ್ಯವನ್ನು ದಕ್ಷಿಣ ಭಾರತದಾದ್ಯಂತ ವಿಸ್ತರಿಸಿ ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಪಸರಿಸಿದ್ದರು. ಹೊಸ ರಾಜ್ಯ ಸ್ಥಾಪಿಸುವ ಮಾಧವನ ಕನಸಿಗೆ ಬೆಂಬಲಿಸುವ ಜನರ ಕೊರತೆ, ಸಂಪತ್ತಿನ ಕೊರತೆ ಇತ್ತು. ಸ್ಫೂರ್ತಿ ನೀಡುವ ಕೆಲಸಕ್ಕೆ ಜನರಿಂದ ಸೂಕ್ತ ಪ್ರತಿಕ್ರಿಯೆ ಸಿಗಲಿಲ್ಲ. ಅವರು ಹೇಳುವುದನ್ನು ಕೇಳಿಸಿಕೊಂಡು, ಅದು ತಮ್ಮ ಕೆಲಸವಲ್ಲವೆಂಬಂತೆ ಸುಮ್ಮನಾಗುತ್ತಿದ್ದರಷ್ಟೆ. ಆದರೆ ಮಾಧವ ನಿರಾಶನಾಗಲಿಲ್ಲ. ಗುರಿ ಸಾಧನೆಗಾಗಿ ಬಲ ಕ್ರೋಢೀಕರಿಸಲು ತಪಸ್ಸು ಮಾಡಬೇಕೆಂದುಕೊಂಡು, ಸೂಕ್ತ ಸ್ಥಳದ ಆಯ್ಕೆಗಾಗಿ ದೇಶದ ಹಲವೆಡೆ ಸುತ್ತಿ ಕೊನೆಗೆ ಪಂಪಾಕ್ಷೇತ್ರಕ್ಕೇ ವಾಪಸು ಬಂದ. ಈ ವೇಳೆಗೆ ಪತ್ನಿ ವೈತಿಹೋತ್ರಿ ಸಹ ನಿಧನಳಾದದ್ದು, ವಿಧಿಯೇ ಅವನನ್ನು ಪ್ರಾಪಂಚಿಕ ಸಂಗತಿಗಳಿಂದ ದೂರ ಮಾಡಿದಂತಾಗಿತ್ತು. ಪಂಪಾಕ್ಷೇತ್ರದ ವಿರೂಪಾಕ್ಷ ದೇವರಿಗೆ ಪೂಜೆ ಸಲ್ಲಿಸಿ, ಹೇಮಕೂಟದಲ್ಲಿ ತಪಸ್ಸಿಗೆ ತೊಡಗಿದ. ಆಹಾರದ ಪರಿವೆಯಿಲ್ಲದಂತೆ ನಡೆಸಿದ ತಪಸ್ಸಿನ ಫಲವಾಗಿ ತಾಯಿ ಭುವನೇಶ್ವರಿಯ ಅಭಯ ಸಿಕ್ಕಿತು. ಅಂತರಂಗಕ್ಕೆ ದೊರೆತ ಆದೇಶದಂತೆ ಸಂನ್ಯಾಸಿಯಾಗಲು ನಿರ್ಧರಿಸಿದ ಮಾಧವ ಶೃಂಗೇರಿಯ ೧೧ನೆಯ ಗುರುಗಳಾದ ಶ್ರೀ ಭಾರತೀಕೃಷ್ಣ ತೀರ್ಥರಿಂದ ದೀಕ್ಷೆ ಪಡೆದು ವಿದ್ಯಾರಣ್ಯರೆಂಬ ಹೆಸರು ಪಡೆದು ಕಾಷಾಯ ವಸ್ತ್ರಧಾರಿಯಾದರು. ನಂತರದಲ್ಲಿ ಪಂಪಾಕ್ಷೇತ್ರದಲ್ಲಿ ಪ್ರತಿನಿತ್ಯ ವಿರೂಪಾಕ್ಷನನ್ನು ಆರಾಧಿಸುತ್ತಾ ತಮ್ಮ ಕನಸು ನನಸು ಮಾಡಬಲ್ಲ ವ್ಯಕ್ತಿಗಳಿಗೆ ನಿರೀಕ್ಷಿಸುತ್ತಾ ದಿನ ಕಳೆಯುತ್ತಿದ್ದರು. ಒಂದೊಂದು ದಿನ ಕಳೆದಾಗಲೂ, 'ಇಂದಿನ ದಿನ ವ್ಯರ್ಥವಾಯಿತಲ್ಲಾ' ಎಂದು ಕೊರಗುತ್ತಿದ್ದರು. 
   ಕೊನೆಗೊಮ್ಮೆ ನಿರೀಕ್ಷಿತ ಘಳಿಗೆ ಬಂದೇಬಿಟ್ಟಿತು. ಹರಿಹರ ಮತ್ತು ಬುಕ್ಕರೆಂಬ ಇಬ್ಬರು ಸೋದರರು ವಿದ್ಯಾರಣ್ಯರಲ್ಲಿ ರಕ್ಷಣೆ ಬಯಸಿಬಂದರು. ಕಮ್ಮಟದುರ್ಗದ ಅರಸ ಕಂಪಿಲರಾಯನ ಅಳಿಯನೂ, ಸಂಸ್ಥಾನದ ಕೋಶಾಧಿಕಾರಿಯೂ ಆಗಿದ್ದ ಸಂಗಮದೇವನ ಮಕ್ಕಳೇ ಆ ಹರಿಹರ ಮತ್ತು ಬುಕ್ಕರು. ಮಹಮದ್ ಬಿನ್ ತುಘಲಕ್ ರಾಜ್ಯವನ್ನು ಆಕ್ರಮಿಸಿ ಅಲ್ಲಿನ ನಿವಾಸಿಗಳನ್ನು ನಿರ್ದಯವಾಗಿ ಮತ್ತು ಬರ್ಬರವಾಗಿ ಹತ್ಯೆಗೈದು, ಅರಸೊತ್ತಿಗೆಯಲ್ಲಿ ಉಳಿದ ಹರಿಹರ, ಬುಕ್ಕರೂ ಸೇರಿದಂತೆ ಹನ್ನೊಂದು ಜನರನ್ನು ಸೆರೆ ಹಿಡಿದು ಡೆಲ್ಲಿಗೆ ಕರೆದೊಯ್ದು ಸೆರೆಮನೆಯಲ್ಲಿರಿಸಿದ್ದ. ತುಘಲಕನ ಹುಚ್ಚು ದರ್ಬಾರಿನಿಂದ ಅವನ ರಾಜ್ಯದಲ್ಲಿ ಅರಾಜಕತೆಯುಂಟಾದಾಗ ಸೆರೆಮನೆಯಲ್ಲಿದ್ದ ಯುವಕರನ್ನು ಬಿಡುಗಡೆಗೊಳಿಸಿ ತನ್ನ ಸೈನ್ಯಕ್ಕೆ ಸೇರಿಸಿಕೊಂಡು, ದಕ್ಷಿಣ ಭಾಗದಲ್ಲಿ ಮೂಡಿದ್ದ ಅಶಾಂತಿಯನ್ನು ಶಮನಗೊಳಿಸುವ ಪ್ರಯತ್ನವಾಗಿ ಸೈನ್ಯದೊಂದಿಗೆ ದಕ್ಷಿಣಕ್ಕೆ ಕಳಿಸಿದ ಸಂದರ್ಭವನ್ನು ಉಪಯೋಗಿಸಿಕೊಂಡು, ಹರಿಹರ ಮತ್ತು ಬುಕ್ಕರು ತಪ್ಪಿಸಿಕೊಂಡು ವಿದ್ಯಾರಣ್ಯರಲ್ಲಿ ರಕ್ಷಣೆ ಬಯಸಿ ಬಂದಿದ್ದರು. ಹರಿಹರ, ಬುಕ್ಕರನ್ನು ಇಸ್ಲಾಮ್ ಮತಕ್ಕೆ ಮತಾಂತರಿಸಲಾಗಿತ್ತಂದೂ, ವಿದ್ಯಾರಣ್ಯರು ಅವರನ್ನು ಮರಳಿ ಮಾತೃಧರ್ಮಕ್ಕೆ ಸೇರಿಸಿದರೆಂದೂ ಐತಿಹ್ಯವಿದೆ. ತುಘಲಕ್ ಆನೆಗೊಂದಿಯ ರಾಜ ಜಂಬುಕೇಶ್ವರರಾಯನನ್ನು ಸೋಲಿಸಿ, ಅವನನ್ನು ಅವನ ಅರಮನೆಯಲ್ಲೇ ಬಂದಿಯಾಗಿರಿಸಿ, ತನ್ನ ಪ್ರತಿನಿಧಿಯಾಗಿ ಮಲಿಕ್ ನಾಯಬ್ ಎನ್ನುವವನನ್ನು ನೇಮಿಸಿ ಅವನ ಮುಖಾಂತರ ಆನೆಗೊಂದಿಯ ರಾಜ್ಯಭಾರ ಮಾಡುತ್ತಿದ್ದನು. ವಿದ್ಯಾರಣ್ಯರ ಸೂಚನೆ ಅನುಸರಿಸಿ, ಹರಿಹರ, ಬುಕ್ಕರು ಕೆಲವು ದೇಶಪ್ರೇಮಿ ಯುವಕರನ್ನು ಜೊತೆ ಮಾಡಿಕೊಂಡು ಜಾಣತನದಿಂದ ಆನೆಗೊಂದಿಯ ಅರಮನೆ ಪ್ರವೇಶಿಸಿ ಮಲಿಕ್ ನಾಯಬ್ ಪಾನಮತ್ತನಾಗಿದ್ದ ಸಂದರ್ಭ ಉಪಯೋಗಿಸಿಕೊಂಡು, ಅವನನ್ನೇ ಸೆರೆಹಿಡಿದು ರಾಜ ಜಂಬುಕೇಶ್ವರರಾಯನನ್ನು ಬಂಧಮುಕ್ತಗೊಳಿಸಿದರು. ಯಾವುದೇ ರಕ್ತಪಾತವಿಲ್ಲದೆ ಆನೆಗೊಂದಿ ಸ್ವತಂತ್ರವಾಯಿತು. ಅರಮನೆಯ ಮೇಲೆ ಪುನಃ ವರಾಹಧ್ವಜ ಹಾರಾಡಿತು. 
ಚಿತ್ರಕೃಪೆ: ಶ್ರೀ ಹಂಪಿ ವಿರೂಪಾಕ್ಷೇಶ್ವರ ಮಹಾಸಂಸ್ಥಾನ
     ಈ ವಿಜಯದಿಂದ ಉತ್ತೇಜಿತರಾದ ವಿದ್ಯಾರಣ್ಯರು ಪಂಪಾಕ್ಷೇತ್ರದಲ್ಲಿ ಒಂದು ಸೂಕ್ತ ಸ್ಥಳವನ್ನು ಆರಿಸಿ ಕ್ರಿ.ಶ. ೧೩೩೬ರಲ್ಲಿ ಹೊಸ ನಗರದ ಸ್ಥಾಪನೆಗೆ ಭೂಮಿಪೂಜೆ ಮಾಡಿದರು. ೧೭ನೆಯ ಶತಮಾನದ ಕವಿ ಲಿಂಗಣ್ಣನ 'ಕೆಳದಿನೃಪ ವಿಜಯ'ದಲ್ಲಿ ಈ ಸ್ಥಳದ ಮಹಿಮೆ ಕುರಿತು ಹೀಗೆ ಹೇಳಲಾಗಿದೆ: 'ಪೂರ್ವದೊಳ್ ಸೂರ್ಯವಂಶಜನಾದ ತ್ರಿಶಂಕು ಮಹಾರಾಯಂ ಪಂಪಾಕ್ಷೇತ್ರಕ್ಕೆ ಬಂದು ಈ ವಿರೂಪಾಕ್ಷಲಿಂಗಂ ಪ್ರಾದುರ್ಭವಲಿಂಗವೋ ಪ್ರತಿಷ್ಠಾಲಿಂಗವೋ ಯೆಂದು ಕೇಳಿದಲ್ಲಿ ಈ ಲಿಂಗಂ ಜ್ಯೋತಿರ್ಮಯವಾದ ಲಿಂಗಂ, ಈ ಲಿಂಗದ ಮಹಿಮೆಯಂ ಪೇಳ್ವುದಕ್ಕೆ ಬ್ರಹ್ಮದೇವರಿಗಾದರೂ ಅಸಾಧ್ಯಮೆಮ್ಮಪಾಡೇನೆನಲಾಗಿ ಆ ಮಾತಂ ಕೇಳ್ದು, ಆ ತ್ರಿಶಂಕು ಮಹಾರಾಯಂ ಪ್ರತಿಷ್ಠಾಲಿಂಗವೋ ಯೆಂದು ಕೇಳ್ದ ದೋಷನಿವೃತ್ತಿಗೋಸುಗಂ ಕೃಷ್ಣವೇಣೀ ನದೀತೀರಮಾರಭ್ಯ ಸೇತುಪರ್ಯಂತಂ ಮೂರುವರೆ ಕೋಟಿರಾಜ್ಯವನೀ ವಿರೂಪಾಕ್ಷದೇವರ್ಗೆ ಧಾರೆಯನೆರೆದನೆಂದು ಸ್ಥಳದವರ್ಪೇಳಲ್ ಆ ಮಾತಂ ಕೇಳ್ದಾ ವಿದ್ಯಾರಣ್ಯರ್ ಹರಿಹರಬುಕ್ಕರಂ ಕರೆದು ಈ ರಾಜ್ಯಕ್ಕೆಲ್ಲಂ ವಿರೂಪಾಕ್ಷಸ್ವಾಮಿಯೇ ಕರ್ತಂ, ನೀಂ ಆ ದೇವರ ಭಕ್ತರಾಗಿ ವರ್ತಿಸುತ್ತುಂ ಶ್ರೀ ವಿರೂಪಾಕ್ಷನೆಂದೊಪ್ಪವಂ ಹಾಕಿ ನಡೆಕೊಂಡು ಸದ್ಧರ್ಮದಿಂ ರಾಜ್ಯವನಾಳಿಕೊಂಡಿರ್ಪುದೆಂದು ಕಟ್ಟಳೆಯಂ ರಚಿಸಿ ಆ ಹರಿಹರಗೆ ಹರಿಹರರಾಯನೆಂದು ಪೆಸರಿಟ್ಟು ವಿದ್ಯಾನಗರಮೆಂಬ ಪಟ್ಟಣಮಂ ನಿರ್ಮಾಣಂ ಮಾಡಿಸುವ ಕಾಲದಲ್ಲಿ. . '  ಆ ಸಂದರ್ಭದಲ್ಲಿ ಭೂಗತ ನಿಧಿಯೂ ದೊರಕಿ ಕೆಲಸ ಸುಸೂತ್ರವಾಗಿ ಮುಂದುವರೆಯಲು ಅನುಕೂಲವಾಯಿತು. ಹರಿಹರ, ಬುಕ್ಕರು ಆ ನಗರಕ್ಕೆ ವಿದ್ಯಾನಗರ ಎಂದು ಹೆಸರಿಡಬಯಸಿದರೂ, ವಿದ್ಯಾರಣ್ಯರು ಅದಕ್ಕೆ ವಿಜಯನಗರವೆಂಬ ಹೆಸರು ಕೊಟ್ಟರು. ವಿಜಯನಗರ ಸಂಸ್ಥಾನ ಚಿಗುರೊಡೆಯಿತು. ಶ್ರೀ ವಿರೂಪಾಕ್ಷ ಎಂಬ ಅಂಕಿತವಿರುವ ಕ್ರಿ.ಶ. ೧೩೩೬ರ ತಾಮ್ರದ ದತ್ತಿಶಾಸನದಲ್ಲಿ ವಿದ್ಯಾರಣ್ಯರ ಸೂಚನೆಯಂತೆ ಹರಿಹರನನ್ನು ಸಿಂಹಾಸನದ ಮೇಲೆ ಕೂರಿಸಿದ ಉಲ್ಲೇಖವಿದೆ. ಹರಿಹರನಿಗೆ ಆತ್ಮವಿದ್ಯೆ ಬೋಧಿಸಿದ ವಿದ್ಯಾರಣ್ಯರು ಅವನಿಗೆ ಶ್ರೀಮದ್ ರಾಜಾಧಿರಾಜ ಪರಮೇಶ್ವರ, ಅಪರಿಮಿತ ಪ್ರತಾಪವೀರ ಮತ್ತು ನರಪತಿ ಎಂಬ ಬಿರುದುಗಳನ್ನಿತ್ತರೆನ್ನಲಾಗಿದೆ. ಆಗಿನಿಂದ ಶೃಂಗೇರಿಯ ಗುರುಗಳನ್ನು 'ಕರ್ಣಾಟಕ ಸಿಂಹಾಸನ ಪ್ರತಿಷ್ಟಾಪನಾಚಾರ್ಯ' ಎಂದೂ ಸಂಬೋಧಿಸಲಾಗುತ್ತಿದೆ. ಈ ವಿಜಯನಗರ ಮುಂದೆ ೬೪ ಚದರ ಮೈಲುಗಳವರೆಗೆ ಬೆಳೆದಿದ್ದೇ ಅಲ್ಲದೆ ಮುಂದೆ ೨೫೦ ವರ್ಷಗಳವರೆಗೆ ಕರ್ನಾಟಕದ ಹೆಮ್ಮೆಯ ರಾಜಧಾನಿಯಾಗಿ ಮೆರೆಯಿತು.
     ವಿದ್ಯಾರಣ್ಯರು ಪಂಚಾದಶಿ, ಜೀವನ್ಮುಕ್ತಿ ವಿವೇಕ, ಅನುಭೂತಿ ಪ್ರಕಾಶಿಕಾ, ಪರಾಶರ ಮಾಧವೀಯ, ಸಂಗೀತಸಾರ, ಮುಂತಾದ ಕೃತಿಗಳನ್ನು ರಚಿಸಿದರು. ಪಂಚಾದಶಿ ಮತ್ತು ಜೀವನ್ಮುಕ್ತಿ ವಿವೇಕ ಕೃತಿಗಳು ಸಾಧಕರಿಗೆ ಉಪಯುಕ್ತ ಮತ್ತು ಮಾರ್ಗದರ್ಶಿಯಾಗಿವೆ. ಶೃಂಗೇರಿ ಶಾರದಾಪೀಠದ ಗುರುಗಳಾದ ಶ್ರೀ ಭಾರತೀ ಕೃಷ್ಣತೀರ್ಥರ ನಿಧನಾನಂತರದಲ್ಲಿ ಕ್ರಿ.ಶ. ೧೩೮೦ರಲ್ಲಿ ೧೨ನೆಯ ಗುರುಗಳಾಗಿ ೧೩೮೬ರವರೆಗೆ ಶಾರದಾ ಪೀಠದ ಮತ್ತು ಶ್ರೀ ಹಂಪಿ ವಿರೂಪಾಕ್ಷೇಶ್ವರ ಮಹಾಸಂಸ್ಥಾನದ ಮುಖ್ಯಸ್ಥರಾಗಿದ್ದರು. ೧೧೮ನೆಯ ವಯಸ್ಸಿನಲ್ಲಿ ಇಹಯಾತ್ರೆ ಮುಗಿಸಿದ ಅವರು ಜೀವನವನ್ನು ಸಾರ್ಥಕರೀತಿಯಲ್ಲಿ ನಡೆಸಿದ, ಆಧ್ಯಾತ್ಮಿಕ, ನೈತಿಕ, ಸಾಂಸ್ಕೃತಿಕ ಮೌಲ್ಯಗಳನ್ನು ಎತ್ತಿ ಹಿಡಿದ, ಅಂದುಕೊಂಡದ್ದನ್ನು ಸಾಧಿಸಿದ ಧೀರ ಸಂನ್ಯಾಸಿ. 
ಅವಿದ್ಯಾರಣ್ಯಕಾಂತಾರೇ ಭ್ರಮತಾಮ್ ಪ್ರಾಣಿನಾಂ ಸದಾ |
ವಿದ್ಯಾಮಾರ್ಗೋಪದೇಶ್ಟಂ ವಿದ್ಯಾರಣ್ಯಗುರುಮ್ ಶ್ರಯೇ ||
     ಮೌಢ್ಯದ ದಟ್ಟಕಾಡಿನಲ್ಲಿ ಗೊತ್ತುಗುರಿಯಿಲ್ಲದೆ ಅಲೆದಾಡುವ ಜೀವಾತ್ಮರಿಗೆ ಜ್ಞಾನದ ದಾರಿ ತೋರಿಸುವ ಗುರು ವಿದ್ಯಾರಣ್ಯರಿಗೆ ನಮನಗಳು.
     ಹಣಬಲ, ತೋಳ್ಬಲ, ಜಾತಿಬಲ, ಅಧಿಕಾರಬಲ, ಒಡೆದು ಆಳುವ ನೀತಿಯ ಬಲದಿಂದ ಅಧಿಕಾರಕ್ಕೇರಿದ, ಸ್ವಾರ್ಥವೇ ಪ್ರಧಾನವಾದ ರಾಜಕಾರಣಿಗಳಿಂದ, ನೈತಿಕ ಶಿಕ್ಷಣವನ್ನು ಇಲ್ಲವಾಗಿಸಿ ಮೌಲ್ಯಗಳನ್ನು ಗಾಳಿಗೆ ತೂರುವ ಕೇವಲ ಹಣಕೇಂದ್ರಿತ ಶಿಕ್ಷಣ ಪದ್ಧತಿಯಿಂದ, ಭ್ರಷ್ಟಾಚಾರದ ಕೂಪದಿಂದ, ಅನ್ಯಾಯ, ಅತ್ಯಾಚಾರಗಳಿಂದ ದೇಶವನ್ನು ರಕ್ಷಿಸಿ ಮೇಲೆತ್ತಬಲ್ಲ ವಿದ್ಯಾರಣ್ಯರಂತಹ ಧೀಮಂತ ಮಾರ್ಗದರ್ಶಕರ ಅಗತ್ಯ ದೇಶಕ್ಕೆ ಇಂದು ತುರ್ತಾಗಿ ಬೇಕಾಗಿದೆ. ನವಯುವಕ-ಯುವತಿಯರೇ, ನೀವೇ ಏಕೆ ಅಭಿನವ ವಿದ್ಯಾರಣ್ಯರುಗಳಾಗಬಾರದು? ವಿದ್ಯಾರಣ್ಯರು ವಿಜಯನಗರ ಸಂಸ್ಥಾನಕ್ಕೆ ನಾಂದಿ ಹಾಡಿದಂತೆ ನೀವೇ ಏಕೆ ನವಭಾರತ ನಿರ್ಮಾಣಕ್ಕೆ ಅಡಿಗಲ್ಲುಗಳಾಗಬಾರದು? 
-ಕ.ವೆಂ.ನಾಗರಾಜ್.
**********************
ಆಧಾರ ಮತ್ತು ಪೂರಕ ಮಾಹಿತಿಗಳ ಸಂಗ್ರಹ:
1. ಕವಿ ಲಿಂಗಣ್ಣನ 'ಕೆಳದಿನೃಪ ವಿಜಯ'
2. http://www.sringeri.net 
3.ಮೋಹಿನಿಪುರಾಣಿಕರ  http://narayankripa.blogspot.in/2012/04/swami-vidyaranya-inspiration-for-all.html 
4. http://www.freeindia.org/biographies/sages/vidyaranya/index.htm 
5. http://www.hampividyaranyamutt.org

ಸೋಮವಾರ, ಜನವರಿ 14, 2013

ಲಂಡನ್ ಮಕ್ಕಳ ಸಂಸ್ಕೃತ ಪ್ರೇಮ






"ಬೈ ಡ್ಯಾಡ್, ಬೈ ಮಾಮ್, ಬೈ ತಾತ್"
     ಒಂದನೆಯ ತರಗತಿಯಲ್ಲಿ ಓದುತ್ತಿರುವ ನನ್ನ ಮೊಮ್ಮಗಳು ಪುಸ್ತಕದ ಮೂಟೆಯನ್ನು ಹೊತ್ತುಕೊಂಡು ಶಾಲೆಯ ಬಸ್ಸಿಗೆ ಹತ್ತುವಾಗ ಕೈಬೀಸಿ ಹೇಳಿದ್ದು ಹೀಗೆ. ಅವಳು ನನ್ನನ್ನು 'ತಾತ್' ಎಂದು ಕರೆಯುವುದಕ್ಕೆ ಕೊಟ್ಟಿದ್ದ ವಿವರಣೆ: "ತಾತಾ, ಗ್ರ್ಯಾಂಡ್ ಫಾದರ್, ಗ್ರ್ಯಾಂಡ್ ಪಾ ಈಸ್ ಟೂ ಲಾಂಗ್. ಸೋ ಐ ಕಾಲ್ ಯು ತಾತ್!" ಲಕ್ಷಗಟ್ಟಲೆ ಡೊನೇಶನ್ ಕೊಟ್ಟು ಸೇರಿಸಿದ್ದ ಆ ಪ್ರತಿಷ್ಠಿತ  ಶಾಲೆಯಲ್ಲಿ ಕನ್ನಡ ಮಾತನಾಡುವಂತಿರಲಿಲ್ಲ. ಎಲ್ಲಾ ಇಂಗ್ಲಿಷಿನಲ್ಲೇ ಆಗಬೇಕು. ಬೆಂಗಳೂರಿನಲ್ಲಿ ಕೆಲವು ದಶಕಗಳ ಹಿಂದೆ ಮಕ್ಕಳು ಮಾತ್ರ ಇಂಗ್ಲಿಷಿನಲ್ಲಿ ಮಾತನಾಡುತ್ತಿದ್ದವು. ಈಗ ಆ ಮಕ್ಕಳೂ ದೊಡ್ಡವರಾಗಿದ್ದಾರೆ. ಈಗ ಎಲ್ಲರೂ, ಎಲ್ಲೆಲ್ಲೂ ಇಂಗ್ಲಿಷಿನಲ್ಲೇ ಮಾತನಾಡುತ್ತಾರೆ. ಬೆಂಗಳೂರಿನಲ್ಲಿ ಅವಿದ್ಯಾವಂತರೂ ಸಹ ಇಂಗ್ಲಿಷಿನಲ್ಲಿ ಸರಾಗವಾಗಿ ಮಾತನಾಡಬಲ್ಲರು. ಅದೇ ಕನ್ನಡ ಮಾತನಾಡಬೇಕಾದರೆ ಕನ್ನಡಿಗರೇ ಬಹಳ ಕಷ್ಟಪಡುತ್ತಾರೆ. ಕನ್ನಡ ಬಾರದಿದ್ದವರು ಮಾತನಾಡುವ ಕನ್ನಡದ ಉಚ್ಛಾರದಂತೆ ಕನ್ನಡಿಗರೇ ಮಾತನಾಡುವುದನ್ನು ಕಂಡು ಅಚ್ಚರಿಪಟ್ಟಿದ್ದೇನೆ. ಹಿಂದೆ ಲಾರ್ಡ್ ಮೆಕಾಲೆ ಹೇಳಿದ್ದ, "ಈ ರೀತಿಯ ವಿದ್ಯಾಭ್ಯಾಸ ಕ್ರಮದಿಂದ ಇನ್ನು ಕೆಲವು ದಶಕಗಳಲ್ಲಿ ಇಂಡಿಯಾದಲ್ಲಿ ಕರಿಚರ್ಮದ ಬ್ರಿಟಿಷರು ಇರುತ್ತಾರೆ" ಎಂಬ ಮಾತು ನಿಜವಾಗಿದೆ. ಆದರೆ ಯಾವ ದೇಶದ ಗುಲಾಮಗಿರಿಯ ಕಾಣಿಕೆಯಾದ ಇಂಗ್ಲಿಷನ್ನು ಹೆಮ್ಮೆಯಿಂದ ಆಡುತ್ತೇವೋ, ಆ ದೇಶದ ರಾಜಧಾನಿ ಲಂಡನ್ನಿಗೆ ಸಂಬಂಧಿಸಿದ ಸಂಗತಿಯನ್ನು ನಿಮ್ಮೊಡನೆ ಹಂಚಿಕೊಳ್ಳುವೆ.
     ಅದು ಲಂಡನ್ನಿನ ಸೈಂಟ್ ಜೇಮ್ಸ್ ಜೂನಿಯರ್ ಸ್ಕೂಲ್. ಅಲ್ಲಿ ೧೯೭೫ರಿಂದಲೂ ಸಂಸ್ಕೃತವನ್ನು ಕಲಿಸಲಾಗುತ್ತಿದೆ. ವರ್ಷದಿಂದ ವರ್ಷಕ್ಕೆ ಸಂಸ್ಕೃತ ಕಲಿಯುತ್ತಿರುವವರ ಸಂಖ್ಯೆ ಇಂಗ್ಲೆಂಡಿನಲ್ಲಿ ಮಿತಿಯನ್ನು ಮೀರಿ ಬೆಳೆಯುತ್ತಿದೆ ಎಂದರೆ ನಿಮಗೆ ಆಶ್ಚರ್ಯವಾಗಬಹುದು. ಇಂಗ್ಲಿಷ್ ಮಾತನಾಡುವವರಿಗೆ ಸಂಸ್ಕೃತದ ಉಚ್ಛಾರ ಕಷ್ಟವಾದರೂ ಅಲ್ಲಿ ಸಂಸ್ಕೃತ ಕಲಿಯಲು ಬರುತ್ತಿರುವ ಮಕ್ಕಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ವಾರ್ಷಿಕ ಸಂಸ್ಕೃತ ಸಂಭಾಷಣಾ ಸ್ಪರ್ಧೆಯಲ್ಲಿ ತಮ್ಮ ಪುಟಾಣಿಗಳು ಭಾಗವಹಿಸಿ, ವೇದ ಮಂತ್ರ, ಉಪನಿಷತ್ತಿನ ಶ್ಲೋಕಗಳನ್ನು ಹೇಳುತ್ತಿದ್ದರೆ ಅದನ್ನು ಕೇಳುವ ಪೋಷಕರು, ತಂದೆ-ತಾಯಿಗಳು ಹೆಮ್ಮೆಯಿಂದ ಚಪ್ಪಾಳೆ ತಟ್ಟಿ ಹುರಿದುಂಬಿಸುತ್ತಾರೆ. ಸಂಸ್ಕೃತ ವಿಭಾಗದ ಮುಖ್ಯಸ್ಥ ವಾರ್ವಿಕ್ ಜೆಸೊಪ್, "ಸಂಸ್ಕೃತ ಭಾಷೆ ಅದ್ಭುತವಾಗಿದೆ. ಸಂಸ್ಕೃತದ ಸಾಹಿತ್ಯ ಸ್ಫೂರ್ತಿದಾಯಕವಾಗಿದೆ ಮತ್ತು ತತ್ವಾದರ್ಶಗಳಿಂದ ಕೂಡಿದೆ. ಅದಕ್ಕಾಗಿ ಅದನ್ನು ಮಕ್ಕಳಿಗೆ ಕಲಿಸಿಕೊಡುತ್ತಿದ್ದೇವೆ" ಎನ್ನುತ್ತಾರೆ. ಇದೇ ಮಾತನ್ನು ಇಲ್ಲಿ ಯಾರಾದರೂ ಹೇಳಿದರೆ ವಿಚಾರವಂತರೆಂದು ಹಣೆಪಟ್ಟಿ ಹಚ್ಚಿಕೊಂಡವರು ಏನು ಹೇಳಬಹುದೆಂಬುದು ನಿಮಗೇ ಬಿಟ್ಟ ವಿಷಯ. ಸಂಸ್ಕೃತ ಕಲಿಯುವ ಮಕ್ಕಳನ್ನು ಕೇಳಿದರೆ ಅವರು ಹೇಳುವುದೇನೆಂದರೆ, "ಅದು ನಮಗೆ ಬಹಳ ಖುಷಿ ಕೊಡುತ್ತದೆ. ಅದು ನಮ್ಮ ಮೆಚ್ಚಿನ ಭಾಷೆ!"
     ಸಂಸ್ಕೃತ ಕಲಿಯುತ್ತಿದ್ದ ಒಬ್ಬ ವಿದ್ಯಾರ್ಥಿಯ ಹೃದಯದ ಮಾತಿದು: "ಸಂಸ್ಕೃತ ಕಲಿಯುವುದು ಒಂದು ವಿಶೇಷ ಅನುಭವ. ಅದನ್ನು ಕಲಿಯಲು ನನಗೆ ಬಹಳ ಆನಂದವಾಗುತ್ತದೆ, ಏಕೆಂದರೆ ಸಂಸ್ಕೃತ ಕಲಿಸುತ್ತಿರುವ ಕೆಲವೇ ಶಾಲೆಗಳಿದ್ದು, ಅದರ ಪೈಕಿ ನಾವೂ ಒಬ್ಬರು ಎಂಬುದು. ಅದು ನಮಗೆ ಹಲವಾರು ರೀತಿಯಲ್ಲಿ ಉಪಯೋಗವಾಗಿದೆ. ನಮ್ಮ ಉಚ್ಚಾರಣೆ ಸುಧಾರಿಸುತ್ತದೆ ಮತ್ತು ಪದಸಂಪತ್ತನ್ನು ಹೆಚ್ಚಿಸುತ್ತದೆ. ಪಾರಮಾರ್ಥಿಕ ಅನುಕೂಲಗಳೂ ಇವೆ. ರಾಮಾಯಣ ಮತ್ತು ಮಹಾಭಾರತದಂತಹ ಹಲವಾರು ಕಥೆಗಳಿದ್ದು, ಹಿಂದೆ ಪ್ರಪಂಚದಲ್ಲಿ ಏನೆಲ್ಲಾ ಆಯಿತು ಎಂಬುದನ್ನೂ ತಿಳಿಯಲು ಸಹಾಯ ಮಾಡುತ್ತದೆ."
     ಈ ಶಾಲೆಯಲ್ಲಿ ೪ ರಿಂದ ೧೮ ವರ್ಷಗಳವರೆಗೆ ಸಂಸ್ಕೃತ ಕಲಿಯಲು ಸೌಲಭ್ಯವಿದೆ. ನಂತರದಲ್ಲಿ ಪ್ರತಿಷ್ಠಿತ ಶಾಲೆಗಳಾದ ಆಕ್ಸ್ ಫರ್ಡ್, ಕೇಂಬ್ರಿಡ್ಜ್, ಎಡಿನ್ ಬರೋ ಮುಂತಾದ ಶಾಲೆಗಳಲ್ಲಿ ಮುಂದುವರೆದ ಸಂಸ್ಕೃತ ವಿದ್ಯಾಭಾಸ ಮಾಡಬಹುದಾಗಿದೆ. ಲಂಡನ್ ಶಾಲೆಗೆ ಸಂಬಂಧಿಸಿದ ಒಂದು ಕಿರುವಿಡಿಯೋ ಅನ್ನು ಈ ಲಿಂಕಿನಲ್ಲಿ ನೋಡಬಹುದು.
     ನಾನು ಕೇವಲ ಇಂಗ್ಲೆಂಡಿನ ಉದಾಹರಣೆ ನೀಡಿದ್ದರೂ, ಅಮೆರಿಕಾ ಸೇರಿದಂತೆ ಹಲವಾರು ವಿದೇಶಿ ರಾಷ್ಟ್ರಗಳಲ್ಲಿ ಸಂಸ್ಕೃತ ಕಲಿಕೆ ಗಣನೀಯವಾಗಿ ಹೆಚ್ಚಿದ್ದು, ಸಂಸ್ಕೃತದಲ್ಲಿ ಸ್ನಾತಕೋತ್ತರ ಪದವಿ ಪಡೆದು ಸಂಶೋಧನೆಯಲ್ಲಿ ತೊಡಗಿಸಿಕೊಂಡಿರುವವರ ಸಂಖ್ಯೆ ಕಡಿಮೆಯಲ್ಲ. ಊರು ಕೊಳ್ಳೆ ಹೋದ ನಂತರದಲ್ಲಿ ನಮ್ಮವರಿಗೆ ಎಚ್ಚರವಾಗಬಹುದು.
-ಕ.ವೆಂ.ನಾಗರಾಜ್.


ಶುಕ್ರವಾರ, ಜನವರಿ 11, 2013

ನವಯುಗಾಚಾರ್ಯ ವಿವೇಕಾನಂದರಿಗೆ 150 ವರ್ಷಗಳು




ಶ್ರೀ ವಿವೇಕಾನಂದ ಗುರುವರ ನವಯುಗಾಚಾರ್ಯ

ರಾಮಕೃಷ್ಣರ ಭೀಮ ಶಿಷ್ಯನೆ ವೀರವೇದಾಂತೀ

ಭಾರತಾಂಬೆಯ ಧೀರಪುತ್ರನೆ ಸಾಧು ಭೈರವನೇ

ಸ್ಥೈರ್ಯದಚಲನೆ ಧೈರ್ಯದಂಬುಧಿ ಜಯತು ಜಯ ಜಯತು ||

-ಕುವೆಂಪು.


ಇಂದಿಗೆ ಶ್ರೀ ವಿವೇಕಾನಂದರು ಜನಿಸಿ ೧೫೦ ವರ್ಷಗಳಾಗಿವೆ. ೩೨ನೆಯ ಕಿರಿ 


ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಅವರು ತಮ್ಮ ನಡೆ-ನುಡಿಗಳಿಂದ ಇಂದಿಗೂ


ನಮ್ಮೊಡನಿದ್ದಾರೆ. ಅವರ ಕನಸಿನ ಭವ್ಯ ಭಾರತ ನಿರ್ಮಾಣವನ್ನು


ಸಾಕಾರಗೊಳಿಸಲು ಸಂಕಲ್ಪಿಸೋಣ.




ವಿವೇಕವಾಣಿ 





ಎಲ್ಲಕ್ಕಿಂತ ಹೆಚ್ಚಾಗಿ, ರಾಜಿಯಾಗುವ ವಿಚಾರದಲ್ಲಿ ಎಚ್ಚರಿಕೆಯಿಂದಿರಿ. ನಿಮ್ಮ 


ತತ್ವ, ಧ್ಯೇಯಗಳಿಗೆ ಅಂಟಿಕೊಂಡಿರಿ ಮತ್ತು ಬೆಂಬಲಿಗರನ್ನು ಗಳಿಸುವ 


ಆಸೆಯಿಂದ, ಇತರರ "ಹುಚ್ಚು ಭ್ರಮೆ"ಗಳೊಡನೆ ಹೊಂದಾಣಿಕೆ 


ಮಾಡಿಕೊಳ್ಳಬೇಡಿ. ನಿಮ್ಮ ಆತ್ಮವೇ ವಿಶ್ವಕ್ಕೆ ಆಧಾರವಾಗಿದೆ, ನಿಮಗೆ ಇನ್ನು


ಯಾವ ಆಧಾರದ ಅಗತ್ಯವಿದೆ? 

-ಸ್ವಾಮಿ ವಿವೇಕಾನಂದ.

ಮಂಗಳವಾರ, ಡಿಸೆಂಬರ್ 18, 2012

ಸಮನ್ವಯದ ಕೊಂಡಿಗಳಾಗೋಣ


     ಲಭ್ಯ ಸಾಹಿತ್ಯಗಳಲ್ಲಿ ಅತಿ ಪುರಾತನವೆಂದು ಪರಿಗಣಿಸಲ್ಪಟ್ಟಿರುವ ವೇದಗಳಲ್ಲಿ ಒಟ್ಟು 20,379 ಮಂತ್ರಗಳಿವೆಯೆಂದು ಹೇಳಲಾಗಿದೆ. ಋಗ್ವೇದ ಸಂಹಿತೆಯಲ್ಲಿ 10,552 ಮಂತ್ರಗಳು, ಯಜುರ್ವೇದ ಸಂಹಿತೆಯಲ್ಲಿ 1,975 ಮಂತ್ರಗಳು, ಸಾಮವೇದ ಸಂಹಿತೆಯಲ್ಲಿ 1,875 ಮಂತ್ರಗಳು ಮತ್ತು ಅಥರ್ವವೇದ ಸಂಹಿತೆಯಲ್ಲಿ 5,977 ಮಂತ್ರಗಳಿವೆ. ನಂತರದಲ್ಲಿ ರಚಿತಗೊಂಡ ಪುರಾಣಗಳು, ಪುಣ್ಯ ಕಥೆಗಳು, ರಾಮಾಯಣ, ಮಹಾಭಾರತಗಳನ್ನು ವೇದ ಸಾಹಿತ್ಯದೊಡನೆ ಥಳುಕು ಹಾಕಿ ಚರ್ಚೆ, ವಿಮರ್ಶೆ ಮಾಡುವುದು ಸೂಕ್ತವಾಗಲಾರದು. ಅವುಗಳಿಗೆ ವೇದವೇ ಆಧಾರವೆನಿಸಿದರೂ, ಅವುಗಳಲ್ಲಿ ಕಂಡು ಬರುವ ಎಲ್ಲಾ ಸಂಗತಿಗಳೂ ವೇದದ ಆಶಯವೇ ಆಗಿವೆ ಎನ್ನಲಾಗದು. ವೇದದ 20,379 ಮಂತ್ರಗಳಲ್ಲಿ ಎಲ್ಲಿಯೂ, ಹುಟ್ಟಿನಿಂದ ಬರುವ ಜಾತಿಯ ಕುರಿತು ಉಲ್ಲೇಖಗಳು, ಪ್ರಮಾಣಗಳು ಕಾಣಲಾರದು. ಮಂತ್ರಗಳಲ್ಲಿ ಬ್ರಾಹ್ಮಣ, ವೈಶ್ಯ, ಶೂದ್ರ, ಕ್ಷತ್ರಿಯ, ದಾಸ, ದಸ್ಯು ಇಂತಹ ಪದಗಳ ಬಳಕೆಯಾಗಿರುವುದು ಕಂಡು ಬಂದರೂ ಅವು ಹುಟ್ಟಿನಿಂದ ಬಂದ ಜಾತಿ ಸೂಚಕ ಪದಗಳಾಗಿವೆಯೆಂದು ಹೇಳಲಾಗುವುದಿಲ್ಲ. ನಮ್ಮ ಕಲ್ಪನೆಗೆ ಮೀರಿದ ಹಿಂದಿನ ಯಾವುದೋ ಒಂದು ಕಾಲಘಟ್ಟದಲ್ಲಿ ವರ್ಣ ವ್ಯವಸ್ಥೆ ವಿರೂಪಗೊಂಡು ಪ್ರಚಲಿತ ಜಾತಿ ಪದ್ಧತಿ ಮೈತಳೆದು ಬಂದಿರಬಹುದು. ವೇದಸಾಹಿತ್ಯದ ಮೂಲಪುರುಷನೆಂದು, ಗುರುಗಳ ಗುರುವೆಂದು ಕರೆಯಲ್ಪಡುವ ವ್ಯಾಸ ಮಹರ್ಷಿಯೇ ಹುಟ್ಟಿನಿಂದ ಬ್ರಾಹ್ಮಣನಲ್ಲ, ಅದು ಗಳಿಸಿದ ಬ್ರಾಹ್ಮಣಿಕೆ. ಸಪ್ತರ್ಷಿಗಳೂ  ಸಹ ಹುಟ್ಟಿನ ಬ್ರಾಹ್ಮಣರಲ್ಲವೆಂಬುದು ವಿಶೇಷ. ಇವಲ್ಲದೆ ಇಂತಹ ಅನೇಕಾನೇಕ ದೃಷ್ಟಾಂತಗಳು ಕಾಣಸಿಗುತ್ತವೆ.  'ಶಾಸ್ತ್ರಾದ್ರೂಢಿರ್ಬಲೀಯಸಿ' ಎಂಬ ಮಾತು ಸತ್ಯ. ಶಾಸ್ತ್ರಗಳಿಗಿಂತ ರೂಢಿಗತ ಸಂಪ್ರದಾಯ ಹೆಚ್ಚು ಬಲಶಾಲಿಯಂತೆ. ಇಂತಹ ರೂಢಿಗತವಾಗಿ ಬಂದ ಜಾತಿ ಪದ್ಧತಿ ಕೇವಲ ಹಿಂದೂಗಳಿಗೆ ಮಾತ್ರ ಸೀಮಿತವಲ್ಲ. ಇತರ ಧರ್ಮಗಳಲ್ಲೂ ಇವು ಪ್ರಚಲಿತವಿವೆ. ರೂಢಿಗತವಾಗಿ ಬಂದ ಸಂಪ್ರದಾಯಗಳನ್ನೇ ಧರ್ಮವೆನ್ನುತ್ತಾ, ಅದಕ್ಕೆ ಪೋಷಕ ಅಂಶಗಳನ್ನು ಸೇರಿಸುತ್ತಾ ಬಂದ ಸಂಪ್ರದಾಯವಾದಿಗಳು ಈ ಸ್ಥಿತಿಗೆ ಕಾರಣವೆಂದರೆ ತಪ್ಪಾಗಲಾರದು. ಹೊಸ ಹೊಸ ಸಂಪ್ರದಾಯಗಳು ದಿನೇ ದಿನೇ ಜಾರಿಗೆ ಬರುತ್ತಲೇ ಇವೆ, ಪ್ರಬಲವಾಗುತ್ತಲೂ ಇವೆ. ಪ್ರತಿ ತಿಂಗಳ ಚತುರ್ಥಿ ದಿನದಂದು ಮಾಡಲಾಗುತ್ತಿರುವ ಸಂಕಷ್ಟಹರ ಗಣಪತಿ ಪೂಜೆ ಇದಕ್ಕೆ ತಾಜಾ ಉದಾಹರಣೆ. ಈ ಸಂಪ್ರದಾಯ ಆರಂಭವಾದ ನಂತರದಲ್ಲಿ ಅನೇಕ ಸಂಕಷ್ಟಹರ ಗಣಪತಿ ದೇವಾಲಯಗಳು ನಿರ್ಮಾಣಗೊಂಡಿವೆ/ಗೊಳ್ಳುತ್ತಿವೆ. ಒಬ್ಬೊಬ್ಬ ದೇವಮಾನವರು/ದೇವಮಾನವರೆನಿಸಿಕೊಂಡವರು  ಪ್ರಬುದ್ಧಮಾನಕ್ಕೆ ಬರುತ್ತಿದ್ದಂತೆ ಅವರ ವಿಚಾರಗಳಿಗನುಗುಣವಾಗಿ ಹೊಸ ಹೊಸ  ಸಂಪ್ರದಾಯಗಳು, ಹೊಸ ಹೊಸ ಜಾತಿಗಳು, ಹೊಸ ಹೊಸ ದೇವಾಲಯಗಳು ಹುಟ್ಟಿವೆ, ಹುಟ್ಟುತ್ತಲಿವೆ, ಮುಂದೆಯೂ ಹುಟ್ಟುತ್ತವೆ. ಇವು ಎಲ್ಲಾ ಮತ/ಧರ್ಮಗಳಿಗೂ ಅನ್ವಯಿಸುವ ವಿಚಾರ. ಸಮಾಜ ಸುಧಾರಣೆಯ ದೃಷ್ಟಿಯಿಂದ ಹೊಸ ಸಂಪ್ರದಾಯಗಳು, ಜಾತಿಗಳು ಜನಿಸಿದರೂ, ಅನುಸರಿಸುವವರು ವಿಚಾರಕ್ಕೆ ಪ್ರಾಧಾನ್ಯತೆ ಕೊಡದೆ ಕೇವಲ ಆಚಾರಕ್ಕೆ ಪ್ರಾಧಾನ್ಯತೆ ಕೊಡುವ ಪರಿಸ್ಥಿತಿ ಇರುವವರೆಗೂ ಸುಧಾರಣೆ ಕನಸಿನ ಮಾತಾಗಿ ಉಳಿಯುತ್ತದೆ. 
      ಇಂದಿನ ಪರಿಸ್ಥಿತಿ ಸರಿಪಡಿಸಲು ದೂಷಿಸುವವರೊಂದಿಗೆ, ದೂಷಿಸಲ್ಪಡುವವರೂ ಪೂರ್ವಾಗ್ರಹ ಪೀಡಿತರಾಗದೆ ಒಳ್ಳೆಯ ರೀತಿ-ನೀತಿಗಳ ವ್ಯವಸ್ಥೆ ತರಲು ಕೈಜೋಡಿಸುವುದು ಅಗತ್ಯವಾಗಿದೆ. ಏಕೆಂದರೆ ಈಗಿರುವ ಈ ಇಬ್ಬರೂ ಇಂದಿನ ಈ ಸ್ಥಿತಿಗೆ ಕಾರಣರಲ್ಲ. ಯಾರೋ ಮಾಡಿದ ತಪ್ಪಿಗೆ ಇನ್ನು ಯಾರೋ ಮತ್ಯಾರನ್ನೋ ದೂಷಿಸುವುದರಿಂದ ಪರಿಸ್ಥಿತಿ ಸುಧಾರಿಸಬಹುದೆಂದು ನಿರೀಕ್ಷಿಸಲಾಗದು. ಪರಸ್ಪರರ ದೂಷಣೆಯಿಂದ ದೊರಕುವ ಫಲವೆಂದರೆ ಮನಸ್ಸುಗಳು ಕಹಿಯಾಗುವುದು, ಕಲುಷಿತಗೊಳ್ಳುವುದು ಅಷ್ಟೆ. ಸೈದ್ಧಾಂತಿಕವಾಗಿ ಯಾವುದೇ ವಿಚಾರವನ್ನು ಒಪ್ಪಬೇಕು ಅಥವ ವಿರೋಧಿಸಬೇಕೇ ಹೊರತು, ಅದು ವ್ಯಕ್ತಿಗಳ ನಡುವಣ ದ್ವೇಷವಾಗಿ ತಿರುಗಬಾರದು. ಎಲ್ಲರೂ ಒಂದೇ ರೀತಿಯಲ್ಲಿ ಯೋಚಿಸುವವರಾದರೆ, ನಡೆಯುವುದಾದರೆ ಈ ಜಗತ್ತು ನಡೆಯುವುದಾದರೂ ಹೇಗೆ? ನಮ್ಮ ನಮ್ಮ ವಿಚಾರಗಳನ್ನು ಬಿಟ್ಟುಕೊಡಬೇಕಿಲ್ಲ, ಇತರರ ವಿಚಾರಗಳನ್ನು ಒಪಲೇಬೇಕೆಂದಿಲ್ಲ. ಅವರವರ ವಿಚಾರ ಅವರಿಗಿರಲಿ. ನನ್ನ ವಿಚಾರವೇ ಸರಿ, ಅದನ್ನು ಎಲ್ಲರೂ ಒಪ್ಪಲೇಬೇಕೆಂಬ ಆಗ್ರಹ ಮಾತ್ರ ಸರಿಯೆನಿಸುವುದಿಲ್ಲ. ಕರುಣಾಮಯಿ ಪರಮಾತ್ಮ ಜೀವಜಗತ್ತಿನ ವಿಚಾರದಲ್ಲಿ ಯಾವುದೇ ರೀತಿಯ ತಾರತಮ್ಯ ಮಾಡಿಲ್ಲ. ಇವನು ಆಸ್ತಿಕ, ನನ್ನನ್ನು ಹಾಡಿ ಹೊಗಳುತ್ತಾನೆ, ಪೂಜಿಸುತ್ತಾನೆ ಎಂದು ಅವನಿಗೆ ವಿಶೇಷ ಅನುಗ್ರಹ ಕೊಡುವುದಿಲ್ಲ. ಅವನು ನಾಸ್ತಿಕ, ನನ್ನನ್ನು ನಂಬುವುದಿಲ್ಲ, ಹೀಗಳೆಯುತ್ತಾನೆ ಎಂದುಕೊಂಡು ಅವನಿಗೆ ಅನ್ನ, ನೀರು ಸಿಗದಂತೆ ಮಾಡುವುದೂ ಇಲ್ಲ. ಬಿಸಿಲು, ಮಳೆ, ಗಾಳಿ, ಬೆಂಕಿ, ಆಕಾಶಗಳೂ ಸಹ ಅನುಸರಿಸುವುದು ಪರಮಾತ್ಮನ ತಾರತಮ್ಯವಿಲ್ಲದ ಭಾವಗಳನ್ನೇ ಅಲ್ಲವೇ? ಹೀಗಿರುವಾಗ ಯಾವುದೇ ವಿಷಯಕ್ಕೆ ಸಂಬಂಧಿಸಿದಂತೆ ಸರಿ, ತಪ್ಪುಗಳ ವಿವೇಚನೆ ಮಾಡಿ ನಿರ್ಧಾರ ತೆಗೆದುಕೊಳ್ಳುವ, ಪೂರ್ವಾಗ್ರಹಗಳನ್ನು ಬದಿಗಿಟ್ಟು ಚಿಂತನೆ ಮಾಡುವ ಮನೋಭಾವ ಮೂಡಿದರೆ ಅದು ನಿಜಕ್ಕೂ ಒಂದು ವೈಚಾರಿಕ ಕ್ರಾಂತಿಯೆನಿಸುತ್ತದೆ. ಒಂದು ನಾಣ್ಯಕ್ಕೆ ಎರಡು ಮುಖಗಳಿರುತ್ತವೆ. ಎರಡು ಮುಖಗಳೂ ವಿರುದ್ಧ ದಿಕ್ಕಿನಲ್ಲಿದ್ದರೂ ಪರಸ್ಪರ ಪೂರಕವಾಗಿರುತ್ತವೆ.  ದೂಷಿಸುವವರು ಮತ್ತು ದೂಷಿಸಲ್ಪಡುವವರ ನಡುವಣ ಸಮನ್ವಯದ ಕೊಂಡಿಗಳಾಗೋಣ. ಇದು ಬಹಳ ಕಷ್ಟದ ಕೆಲಸ, ಧೈರ್ಯವೂ ಇರಬೇಕು. ಏಕೆಂದರೆ ಇಂತಹವರು ಎರಡೂ ಕಡೆಗಳಿಂದ ಪೆಟ್ಟು ತಿನ್ನುತ್ತಾರೆ, ದೂಷಣೆಗೊಳಗಾಗುತ್ತಾರೆ. ಆದರೆ ಒಂದೊಮ್ಮೆ ಇಂತಹ ಕೊಂಡಿಗಳು ಬಲಶಾಲಿಯಾದರೆ ಎರಡೂ ಕಡೆಯವರು ಇವರ ಮಾತು ಕೇಳುತ್ತಾರೆ, ಸಮಾಜದಲ್ಲಿ ಸಾಮರಸ್ಯದ ವಾತಾವರಣ ನಿರ್ಮಾಣವಾಗುತ್ತದೆ. ವೈಚಾರಿಕ ಸಂಘರ್ಷವಿದ್ದರೂ ಅದು ವ್ಯಕ್ತಿಗತ ಸಂಘರ್ಷಕ್ಕೆ ತಿರುಗದಂತೆ ಎಚ್ಚರ ವಹಿಸುವುದು ಆರೋಗ್ಯಕರ ಸಮಾಜದ ಲಕ್ಷಣ. ಯಾವುದು ಒಳ್ಳೆಯದೋ ಅದನ್ನು ಸೀಕರಿಸುವ ಮನಸ್ಸು ಹೊಂದೋಣ. ಪೂರ್ವಾಗ್ರಹ ಪೀಡಿತರಾಗದಿರೋಣ. ಒಳ್ಳೆಯ ಸಂಗತಿಗಳು, ವಿಚಾರಗಳು ಯಾರಿಂದಲೇ ಬರಲಿ, ಎಲ್ಲಿಂದಲೇ ಬರಲಿ ಅದನ್ನು ಸ್ವಾಗತಿಸೋಣ.
     ಸಮಾನತೆಯ ಅಂಶವನ್ನು ಒತ್ತಿ ಹೇಳುವ ಕೆಲವು ವೇದಮಂತ್ರಗಳನ್ನು ಉದಾಹರಿಸುವೆ. ಮಂತ್ರಗಳ ಅರ್ಥ ವಿವರಣೆ ಪಂ. ಸುಧಾಕರ ಚತುರ್ವೇದಿಯವರದು.


ತೇ ಅಜ್ಯೇಷ್ಠಾ ಅಕನಿಷ್ಠಾಸ ಉದ್ಭಿದೋ | ಮಧ್ಯಮಾಸೋ ಮಹಸಾ ವಿವಾವೃಧುಃ || ಸುಜಾತಾಸೋ ಜನುಷಾ ಪೃಶ್ನಿಮಾತರೋ | ದಿವೋ ಮರ್ಯಾ ಆ ನೋ ಅಚ್ಛಾ ಜಿಗಾತನ || [ಋಗ್. ೫.೫೯.೬]
     ಮಾನವರಲ್ಲಿ ಯಾರೂ ಜನ್ಮತಃ ಜ್ಯೇಷ್ಠರೂ ಅಲ್ಲ, ಕನಿಷ್ಠರೂ ಅಲ್ಲ, ಮಧ್ಯಮರೂ ಅಲ್ಲ. ಎಲ್ಲರೂ ಉತ್ತಮರೇ. ತಮ್ಮ ತಮ್ಮ ಶಕ್ತಿಯಿಂದ ಮೇಲೇರಬಲ್ಲವರಾಗಿದ್ದಾರೆ.


ಅಜ್ಯೇಷ್ಠಾಸೋ ಅಕನಿಷ್ಠಾಸ ಏತೇ | ಸಂ ಭ್ರಾತರೋ ವಾವೃಧುಃ 
ಸೌಭಗಾಯ || ಯುವಾ ಪಿತಾ ಸ್ವಪಾ ರುದ್ರ ಏಷಾಂ | ಸುದುಘಾ ಪೃಶ್ನಿಃ ಸುದಿನಾ  ಮರುದ್ಭ್ಯಃ || [ಋಗ್. ೫.೬೦.೫]
     ಈ ಮಾನವರು ತಮಗಿಂತ ಉಚ್ಛರನ್ನು ಹೊಂದಿಲ್ಲ, ನೀಚರನ್ನೂ ಹೊಂದಿಲ್ಲ, ಇವರು ಪರಸ್ಪರ ಅಣ್ಣ ತಮ್ಮಂದಿರು, ಸೌಭಾಗ್ಯಕ್ಕಾಗಿ ಮುಂದೆ ಸಾಗುತ್ತಾರೆ. ಆತ್ಮರಕ್ಷಕನೂ, ಅಜರನೂ ಆದ, ಪಾಪಿಗಳಿಗೆ ದಂಡ ವಿಧಿಸುವ ಭಗವಂತನು, ಇವರೆಲ್ಲರ ತಂದೆ. ಭೂಮಿದೇವಿ, ಮರ್ತ್ಯರಾದ ಈ ಮಾನವರಿಗಾಗಿ ಶುಭದಿನಗಳನ್ನು ತೋರಿಸುವವಳೂ, ಉತ್ತಮ ಜೀವನಪ್ರದ ರಸಗಳನ್ನು ಕರೆಯುವವಳೂ ಆಗಿದ್ದಾಳೆ.


ಸಮಾನೋ ಮಂತ್ರಃ ಸಮಿತಿಃ ಸಮಾನಂ ವ್ರತಂ ಸಹ ಚಿತ್ತಮೇಷಾಂ | ಸಮಾನೇನ ವೋ ಹವಿಷಾ ಜುಹೋಮಿ ಸಮಾನಂ ಚೇತೋ ಅಭಿಸಂವಿಶದ್ವಮ್ || [ಅಥರ್ವ.೬.೬೪.೨]
     ಈ ನಿಮ್ಮೆಲ್ಲರಿಗೂ ಮಂತ್ರವು ಸಮಾನವಾಗಿದೆ. ಸಮಿತಿಯೂ ಸಮಾನವಾಗಿದೆ. ವ್ರತವೂ ಸಮಾನವೇ. ನಿಮ್ಮ ಮನಸ್ಸು ಸಹಕರಿಸುವಂತಹುದಾಗಲಿ. ನಿಮ್ಮೆಲ್ಲರನ್ನೂ ಸಮಾನವಾದ ಭೋಗ್ಯವಸ್ತುವಿನೊಂದಿಗೆ ಯುಕ್ತರನ್ನಾಗಿ ಮಾಡುತ್ತೇನೆ. ಸಮಾನವಾದ ಆಹಾರ-ಪಾನೀಯಗಳನ್ನೇ ನೀಡುತ್ತೇನೆ. 


ನಮೋ ಜ್ಯೇಷ್ಠಾಯ ಚ ಕನಿಷ್ಠಾಯ ಚ ನಮಃ ಪೂರ್ವಜಾಯ ಚಾಪರಜಾಯ ಚ ನಮೋ ಮಧ್ಯಮಾಯ ಚಾಪಗಲ್ಫಾಯ ಚ ನಮೋ ಜಘನ್ಯಾಯ ಚ ಬುದ್ಧ್ಯಾಯ ಚ || [ಯಜು. ೧೬-೩೨]
     ಗುಣ-ಕರ್ಮ ಸ್ವಭಾವಗಳಿಂದ ದೊಡ್ಡವನಾಗಿರುವವನಿಗೆ ನಮಸ್ಕಾರ. ಹಾಗೆಯೇ ಗುಣ-ಕರ್ಮ ಸ್ವಭಾವಗಳಿಂದ ಚಿಕ್ಕವನಾಗಿರುವವನಿಗೂ ನಮಸ್ಕಾರ. ಮತ್ತು, ವಯಸ್ಸಿನಲ್ಲಿ ಹಿರಿಯನಿಗೆ ನಮಸ್ಕಾರ. ಹಾಗೂ ವಯಸ್ಸಿನಲ್ಲಿ ಕಿರಿಯನಿಗೂ ನಮಸ್ಕಾರ. ಅಂತೆಯೇ ನಡುವಯಸ್ಕನಿಗೆ ನಮಸ್ಕಾರ. ಅದೇ ರೀತಿ, ಅವಿಕಸಿತ ಶಕ್ತಿಯುಳ್ಳವನಿಗೆ ನಮಸ್ಕಾರ. ಹೀನ ಸ್ಥಿತಿಯಲ್ಲಿರುವವನಿಗೂ, ವಿಶಾಲ ಮನಸ್ಕನಿಗೂ ನಮಸ್ಕಾರ.


ಸಮಾನೀ ವ ಆಕೂತಿಃ ಸಮಾನಾ ಹೃದಯಾನಿ ವಃ | ಸಮಾನಮಸ್ತು ವೋ ಮನೋ ಯಥಾ ವಃ ಸುಸಹಾಸತಿ || [ಅಥರ್ವ.೬.೬೪.೩]
     ನಿಮ್ಮ ಹಿತವು ಒಂದಿಗೇ ಆಗುವಂತೆ, ನಿಮ್ಮ ಮನಃಕಾಮನೆ ಸಮಾನವಾಗಿರಲಿ. ನಿಮ್ಮ ಹೃದಯಗಳು ಸಮಾನವಾಗಿರಲಿ. ನಿಮ್ಮ ಮನಸ್ಸುಗಳು ಸಮಾನವಾಗಿರಲಿ.


ಅಯಂ ನಾಭಾ ವದತಿ ವಲ್ಗು ವೋ ಗೃಹೇ | ದೇವಪುತ್ರಾ ಋಷಯಸ್ತಚ್ಛೃಣೋತನ || ಸುಬ್ರಹ್ಮಣ್ಯಮಂಗೀರಸೋ ವೋ ಅಸ್ತು | ಪ್ರತಿಗೃಭ್ಣೀತ ಮಾನವಂ ಸುಮೇಧಸಃ || [ಋಗ್.೧೦.೬೨.೪]
     ಭಗವಂತನ ಮಕ್ಕಳೇ, ಪ್ರಗತಿಶೀಲರೇ, ತತ್ತ್ವದರ್ಶನಸಮರ್ಥರೇ, ಉತ್ತಮ ಬುದ್ಧಿಸಂಪನ್ನರೇ, ಆತ್ಮನಲ್ಲಿ ರಮಿಸುವವರೇ, ದೇಹಧಾರಿಗಳಿಗೆ ದಾನ ಮಾಡುವ ಉದಾರಾತ್ಮರೇ, ವಿಶ್ವಬ್ರಹ್ಮಾಂಡಕ್ಕೆ ಕೇಂದ್ರಭೂತನಾದ ಈ ಪ್ರಭುವು, ನಿಮ್ಮ ಗೃಹಗಳಲ್ಲಿ/ಗ್ರಾಹ್ಯನಾದ ಆತ್ಮನಲ್ಲಿ ವ್ಯಾಪಕನಾಗಿ ಒಳ್ಳೆಯದನ್ನು ಪ್ರೇರಿಸುತ್ತಿದ್ದಾನೆ. ಆ ಒಳಕರೆಯನ್ನು ಆಲಿಸಿರಿ. ನಿಮ್ಮ ವೇದಜ್ಞಾನ ಕಲ್ಯಾಣಕಾರಿಯಾಗಲಿ. ಮಾನವೀಯ ಜ್ಞಾನ ಗ್ರಹಿಸಿರಿ.


ದ್ಯೌರ್ವಃ ಪಿತಾ ಪೃಥಿವಿ ಮಾತಾ ಸೋಮೋ ಭ್ರಾತಾದಿತಿ ಸ್ವಸಾ | ಅದೃಷ್ಟಾ ವಿಶ್ವದೃಷ್ಟಾಸ್ತಿಷ್ಟತೇಳಯತಾ ಸು ಕಮ್ || 
[ಋಗ್.೧.೧೯೧.೬]
     ಮಾನವರೇ, ಜ್ಯೋತಿರ್ಮಯ ಪರಮಾತ್ಮನು ತಂದೆ, ಭೂಮಿಯೇ ತಾ, ವಿವೇಕವೇ ಸೋದರ, ಅಖಂಡತೆ/ಪ್ರಾಮಾಣಿಕತೆ ಬಾಳಿಗೊದಗಿದ ಸೋದರಿ, ಕಣ್ಣಿಗೆ ಕಾಣುವವರೂ, ಕಾಣದಿರುವವರೂ ಸುಖದಿಂದ ಉಪಭೋಗಿಸಿರಿ, ಒಳ್ಳೆಯ ರೀತಿಯಲ್ಲಿ ಬಾಳಿರಿ.


ಯಸ್ತು ಸರ್ವಾಣಿ ಭೂತಾನ್ಯಾತ್ಮನ್ಯೇವಾನುಪಶ್ಯತಿ | ಸರ್ವಭೂತೇಷು ಚಾತ್ಮಾನಂ ತತೋ ನ ವಿ ಚಿಕಿತ್ಸತಿ || [ಯಜು.೪೦.೬.]
     ಯಾರು ಸಮಸ್ತ ಪ್ರಾಣಿಗಳೂ ತಮ್ಮಂತೆಯೇ ಇಚ್ಛಾ-ದ್ವೇಷ-ಪ್ರಯತ್ನ-ಸುಖ-ದುಃಖ-ಜ್ಞಾನಗಳನ್ನು ಹೊಂದಿದ ಆತ್ಮಗಳೇ ಎಂದು ಭಾವಿಸುವರೋ, ತಮ್ಮಂತೆಯೇ ಎಂದು ಕಂಡುಕೊಳ್ಳುವರೋ ಅವರು ಸಂದೇಹಗಳಿಗೆ ಸಿಲುಕುವುದಿಲ್ಲ.


ಯೇನ ದೇವಾ ನ ವಿಯಂತಿ ನೋ ಚ ವಿದ್ವಿಷತೇ ಮಿಥಃ | ತತ್ಕೃಣ್ಮೋ ಬ್ರಹ್ಮ ವೋ ಗೃಹೇ ಸಂಜ್ಞಾನಂ ಪುರುಷೇಭ್ಯಃ || 
[ಅಥರ್ವ.೩.೩೦.೪.]
     ಯಾವುದರಿಂದ ಉದಾರಾತ್ಮರಾದ ವಿದ್ವಾಂಸರು, ಒಡೆದು ಬೇರೆ ಬೇರೆಯಾಗುವುದಿಲ್ಲವೋ ಮತ್ತು ಪರಸ್ಪರ ವೈರ ಕಟ್ಟಿಕೊಳ್ಳುವುದಿಲ್ಲವೋ ಅಂತಹ ಅರಿವು ಕೊಡುವ ವೇದಜ್ಞಾನವನ್ನು ಮಾನವರಾದ ನಿಮ್ಮ ಸಲುವಾಗಿ ಉಂಟುಮಾಡುತ್ತೇವೆ.


     ಸದ್ವಿಚಾರಿಗಳಾಗೋಣ, ಸರಿಯೆಂದು ಕಂಡುದನ್ನು ಅನುಸರಿಸೋಣ, ನಿಜಮಾನವರಾಗೋಣ.
-ಕ.ವೆಂ. ನಾಗರಾಜ್.
[ಚಿತ್ರಕೃಪೆ: ರಾಯಲ್ಟಿ ಮುಕ್ತ ಕ್ಲಿಪ್ ಕಲೆ: www.dreamstime.com]

ಮಂಗಳವಾರ, ಡಿಸೆಂಬರ್ 11, 2012

ಚನ್ನರಾಯಪಟ್ಟಣದಲ್ಲಿ ವೇದಾಭ್ಯಾಸ

ಚನ್ನರಾಯಪಟ್ಟಣದ ವೇದಾಭ್ಯಾಸಿಗಳು ಪಠಿಸುತ್ತಿರುವ ಪುರುಷ ಸೂಕ್ತ


     ಹಿರಿಯರೊಡನೆ ಪುಟಾಣಿಗಳೂ ಸ್ವರಬದ್ಧವಾಗಿ ಮಂತ್ರಪಠಣ ಮಾಡುತ್ತಿದ್ದುದು ಮನಸ್ಸಿಗೆ ಮುದ ನೀಡಿತು. ಈ ವಿಡಿಯೋ ಚಿತ್ರೀಕರಿಸಿದ ಮಿತ್ರ ಹರಿಹರಪುರ ಶ್ರೀಧರರಿಗೆ ಧನ್ಯವಾದ.

ಭಾನುವಾರ, ಡಿಸೆಂಬರ್ 9, 2012

ಸಾಪ್ತಾಹಿಕ ವೇದಪಾಠ - 18.11.2012


     ದಿನಾಂಕ 18.11.2012 ರಂದು ನಡೆದ ವೇದಪಾಠವನ್ನು ಇಲ್ಲಿ ಪ್ರಕಟಿಸಲಾಗಿದೆ. ಮೇಲ್ ಮೂಲಕ ವಿಳಾಸ ನೀಡಿರುವ    ಎಲ್ಲರಿಗೂ ಪಾಠವನ್ನು ಕಳಿಸಲಾಗಿದೆ. ತಲುಪದಿದ್ದವರು ತಿಳಿಸಿದರೆ ಪುನ: ಕಳಿಸಿಕೊಡಲಾಗುವುದು. ಹೊಸದಾಗಿ  ಸಾಪ್ತಾಹಿಕ ವೇದ ಪಾಠವನ್ನು ವೆಬ್ ಸೈಟ್ ಮೂಲಕ ಕಲಿಯಬಯಸುವವರು " ವೇದಪಾಠ" ಲೇಬಲ್ ಮೇಲೆ ಕ್ಲಿಕ್ ಮಾಡಿ ಮೊದಲ ಪಾಠದಿಂದ ಅನುಸರಿಸಬಹುದು. ಆರಂಭದಲ್ಲಿರುವ ಪರಿಚಯ ಉಪನ್ಯಾಸವನ್ನು ಕೇಳಿ ವೇದಪಾಠವನ್ನು ಆರಂಭಿಸುವುದು ಸೂಕ್ತ. ಹಾಸನದಲ್ಲಿ ನಡೆಯುತ್ತಿರುವ "ಎಲ್ಲರಿಗಾಗಿ ವೇದ ಪಾಠವು" ಪೂರ್ಣ ಉಚಿತವಾಗಿದ್ದು ಹಾಸನಕ್ಕೆ ಸಮೀಪ ಇರುವ ನಿಮ್ಮ ಮಿತ್ರರನ್ನು  ಪ್ರತ್ಯಕ್ಷ ವೇದಪಾಠದಲ್ಲಿ ಪಾಲ್ಗೊಳ್ಳುವಂತೆ ಮಾಡಿ. ನಮ್ಮ ವಿಳಾಸ:
ಈಶಾವಾಸ್ಯಮ್, ಶಕ್ತಿ ಗಣಪತಿ ದೇವಾಲಯ ರಸ್ತೆ, ಹೊಯ್ಸಳನಗರ ಪೋಲೀಸ್ ಕಾಲೊನಿ, ಹಾಸನ.
ಸಂಪರ್ಕ ದೂರವಾಣಿ: 08172-250566/9663572406













-ಹರಿಹರಪುರ ಶ್ರೀಧರ್.

ಶನಿವಾರ, ಡಿಸೆಂಬರ್ 8, 2012

ವಾನಪ್ರಸ್ಥ - ಒಂದು ಚಿಂತನೆ


      'ಊರು ಹೋಗು ಎನ್ನುತ್ತಿದೆ, ಕಾಡು ಬಾ ಎನ್ನುತ್ತಿದೆ' ಅನ್ನುವ ಮಾತನ್ನು ವಯಸ್ಸಾದವರು ಹೇಳುವುದನ್ನು ಕೇಳುತ್ತಿರುತ್ತೇವೆ. ಆದರೆ ಹೋಗು ಎಂದರೂ ಹೋಗಲೊಲ್ಲದವರೇ ಹೆಚ್ಚು. ಅಷ್ಟಕ್ಕೂ ಒಂದು ವೇಳೆ ಹೋಗಬೇಕೆಂದರೂ ಈಗ ಕಾಡಾದರೂ ಎಲ್ಲಿದೆ? ಇರುವ ಕಾಡುಗಳನ್ನೆಲ್ಲಾ ಮನುಷ್ಯನೇ ಆಕ್ರಮಿಸಿಕೊಂಡು ಕಾಡಿನ ಪ್ರಾಣಿಗಳಿಗೇ ಇರಲು ಜಾಗವಿಲ್ಲದಾಗಿದೆ. ವಿಧಿಯಿಲ್ಲದೆ ನಾಡಿಗೆ ಬರುತ್ತಿರುವ ಆ ಕಾಡುಪ್ರಾಣಿಗಳೂ ಈಗ ನಾಶದ ಅಂಚಿಗೆ ಬರುತ್ತಿವೆ. ಏಕೋ ಏನೋ ಇತ್ತೀಚೆಗೆ ನನ್ನ ಮನಸ್ಸು ವಾನಪ್ರಸ್ಥದ ಕುರಿತು ತಲೆ ಕೆಡಿಸಿಕೊಂಡಿದೆ. ಪ್ರಾಯಶಃ ವಯೋಸಹಜವಿರಬಹುದು. ನನ್ನ 6 ವರ್ಷದ ಮೊಮ್ಮಗಳೊಡನೆ ಆಟವಾಡುತ್ತಾ ನನ್ನಷ್ಟಕ್ಕೆ ನಾನೇ ಸ್ವಗತವೆಂಬಂತೆ ಮಾತನಾಡಿಕೊಳ್ಳುತ್ತಾ, 'ನನಗೆ ಸಾಕಾಗಿದೆ ಕಣಮ್ಮಾ, ವಾನಪ್ರಸ್ಥಕ್ಕೆ ಹೋಗಿಬಿಡ್ತೀನಿ' ಅಂದಿದ್ದೆ. ಪಾಪ, ಅವಳಿಗೆ ವಾನಪ್ರಸ್ಥ ಅಂದರೆ ಏನು ಅರ್ಥವಾದೀತು? ಅವಳು ಆಟ ಆಡುವುದನ್ನು ನಿಲ್ಲಿಸಿ, "ತಾತಾ, ಪ್ಲೀಸ್, ವಾನಾಸ್ಪತ್ರೆಗೆ ಹೋಗಬೇಡ, ಪ್ಲೀಸ್, ಪ್ಲೀಸ್" ಎಂದು ಗೋಗರೆದಿದ್ದಳು. ವಾನಪ್ರಸ್ಥ ಅವಳ ಬಾಯಲ್ಲಿ ವಾನಾಸ್ಪತ್ರೆ ಆಗಿತ್ತು. 'ಹೂಂ, ಆಯಿತು, ಹೋಗಲ್ಲ' ಅಂದ ಮೇಲೆಯೇ ನಮ್ಮ ಆಟ ಮುಂದುವರೆದಿದ್ದು.   ವಾನಪ್ರಸ್ಥ(ವನಪ್ರಸ್ಥ)ವೆಂದರೆ ಕಾಡಿನೆಡೆಗೆ ತೆರಳುವುದು ಎಂಬ ಅರ್ಥವೂ ಇದೆ. ಕಾಡುಗಳು ನಾಶವಾಗಿರುವ, ಆಗುತ್ತಿರುವ ಇಂದಿನ ದಿನಗಳಲ್ಲಿ ಇದು ಅರ್ಥ ಕಳೆದುಕೊಂಡಿದೆ. ಮಾನವಸಹಜ ಆಸೆ, ಆಕಾಂಕ್ಷೆಗಳಿಗೆ ಕಡಿವಾಣ ಹಾಕಿಕೊಂಡು ಪ್ರಾಪಂಚಿಕತೆಯಿಂದ ಕ್ರಮೇಣ ದೂರ ಸರಿಯುವ, ಲೋಕಹಿತ ಬಯಸುವ ಎಡೆಗೆ ಕಾಲಿಡುವುದು ವಾನಪ್ರಸ್ಥದ ಆರಂಭಿಕ ನಡೆರಬಹುದು. ಗೃಹಸ್ಥರಿಗೆ ಈ ಕಾಲ ಕೌಟುಂಬಿಕ ಜವಾಬ್ದಾರಿಗಳನ್ನು ನಿರ್ವಹಿಸಿದ ನಂತರ ಬರುತ್ತದೆ. ಚತುರಾಶ್ರಮಗಳಲ್ಲಿ ಎರಡನೆಯದಾದ ಬ್ರಹ್ಮಚರ್ಯದ ನಂತರವೂ ನೇರವಾಗಿ ಈ ಆಶ್ರಮಕ್ಕೆ ಸಾಗಬಹುದಾಗಿದೆ, ಸಾಗಿದವರಿದ್ದಾರೆ. 
     ಮಾನವನ ಆಯಸ್ಸನ್ನು ಒಂದು ನೂರು ವರ್ಷಗಳು ಎಂದಿಟ್ಟುಕೊಂಡರೆ ಮೊದಲ 25 ವರ್ಷಗಳು ಬ್ರಹ್ಮಚರ್ಯ, ನಂತರದ 25 ವರ್ಷಗಳನ್ನು ಗೃಹಸ್ಥರಾಗಿ ಕಳೆದು, ನಂತರದ 51 ರಿಂದ 75 ವರ್ಷಗಳು ವಾನಪ್ರಸ್ಥದ ಕಾಲ. ಅದರ ನಂತರ ಸಂನ್ಯಾಸಾಶ್ರಮ. ಇರುವ ಬಂಧಗಳು, ಬಂಧನಗಳನ್ನು ಕಳೆದುಕೊಂಡು ಜೀವಿಸಲು ಅತಿ ಅಗತ್ಯವಾದಷ್ಟನ್ನು ಮಾತ್ರ ಹೊಂದಿ ಆಧ್ಯಾತ್ಮಿಕ ಸಾಧನೆಗೆ ತೊಡಗುವ ಕಾಲವೇ ವಾನಪ್ರಸ್ಥವೆನಿಸುವುದು. ಇದು ಪರಿವರ್ತನಾ ಕಾಲ. 
     ಗೃಹಸ್ಥನಿಗೆ ವಯಸ್ಸಾದ ನಂತರ ಅವನ ಚರ್ಮ ಸುಕ್ಕುಗಟ್ಟುತ್ತದೆ, ತಲೆಯ ಕೂದಲು ಬೆಳ್ಳಗಾಗುತ್ತದೆ ಅಥವ ಉದುರಿ ಬೋಳಾಗುತ್ತದೆ. ಮೊಮ್ಮಕ್ಕಳು ಜನಿಸಿರುತ್ತಾರೆ. ಆಗ ವಾನಪ್ರಸ್ಥಕ್ಕೆ ತೆರಳಲು ಸಮಯ ಪ್ರಶಸ್ತವಾಗಿರುತ್ತದೆ. ಕೌಟುಂಬಿಕ ಬಂಧನಗಳನ್ನು ಕಳಚಿಕೊಂಡು ಈ ಹಾದಿಯಲ್ಲಿ ಕ್ರಮಿಸುವ ಸಮಯದಲ್ಲಿ ಪತ್ನಿ ಬಯಸಿದರೆ ಅವನ ಜೊತೆಗೆ ಹೋಗಬಹುದು, ಆದರೆ ಸಹಚಾರಿಣಿಯಾಗಿ ಮತ್ತು ಸಹಸಾಧಕಿಯಾಗಿ ಮಾತ್ರ. ಹಾಗೆ ಹೊರಡುವಾಗ ಮನಸ್ಸು ಶಾಂತವಿರಬೇಕು. ಅತಿ ಕಡಿಮೆ ವಸ್ತ್ರಗಳನ್ನು ಧರಿಸುವುದು, ಕಾಡಿನಲ್ಲಿ ದೊರೆಯುವ ಸೊಪ್ಪು-ಸದೆಗಳು, ಗೆಡ್ಡೆ-ಗೆಣಸುಗಳನ್ನು  ಜೀವಾಧಾರಕ್ಕೆ ಸೇವಿಸುವುದು, ದೈಹಿಕ ಕಾಮನೆಗಳಿಂದ ದೂರವಿರುವುದು ಹಿಂದೆ ವಾನಪ್ರಸ್ಥಿಗಳು ಅನುಸರಿಸುತ್ತಿದ್ದ ಕ್ರಮವೆಂದು ಕೇಳಿದ್ದೇವೆ. ಪುಣ್ಯಕ್ಷೇತ್ರಗಳಿಗೆ ಪ್ರವಾಸವನ್ನೂ ಸಹ ಸಾಧನೆಯ ಅಂಗವಾಗಿ ಮಾಡುತ್ತಾರೆಂದು ಹೇಳುತ್ತಾರೆ. ಈಗಲೂ ಹಿಮಾಲಯದ ತಪ್ಪಲಿನಲ್ಲಿ ಇಂತಹವರು ಸಿಗಬಹುದು. ಆತ್ಮಾನುಸಂಧಾನ, ಆತ್ಮಚಿಂತನೆಗಳನ್ನು ನಡೆಸುತ್ತಾ ಕೊನೆಗೊಮ್ಮೆ ಅವರು ಸಂನ್ಯಾಸಿಯ ಅರ್ಹತೆ ಪಡೆಯುವರು. 
     ವಾನಪ್ರಸ್ಥಿಗಳು ಅನುಸರಿಸಬೇಕಾದ ಕ್ರಮಗಳ ಕುರಿತು ಕೆಲವು ನಿಬಂಧನೆಗಳೂ ಇವೆಯೆನ್ನುತ್ತಾರೆ. ಭೂಮಿಯನ್ನು ಉತ್ತಿ. ಬಿತ್ತಿ ಬೆಳೆದ ಧಾನ್ಯಗಳು, ಪೂರ್ಣ ಕಳಿಯದ ಹಣ್ಣುಗಳು ಮತ್ತು ಬೇಯಿಸಿದ ಪದಾರ್ಥಗಳನ್ನು ಅವರು ಸೇವಿಸಬಾರದೆನ್ನುತ್ತಾರೆ. ತಿನ್ನುವ ಪದಾರ್ಥಗಳನ್ನು ಸಂಗ್ರಹಿಸಿಡಬಾರದು. ಸಮಯ, ಸ್ಥಳ ಮತ್ತು ತನ್ನ ಶಕ್ತಿ ಅನುಸರಿಸಿ ಜೀವಾಧಾರಕ್ಕೆ ಅವಶ್ಯಕ ಸಂಗತಿಗಳನ್ನು ಮಾತ್ರ ಪಡೆಯಬೇಕು. ಯಾವ ಕಾರಣಕ್ಕೂ ಅಗತ್ಯಕ್ಕಿಂತ ಹೆಚ್ಚು ತೆಗೆದುಕೊಳ್ಳಬಾರದು. ಬಿಸಿಲಿನಲ್ಲಿ ಪೂರ್ಣವಾಗಿ ಮಾಗಿದ ಫಲಗಳನ್ನು ಮಾತ್ರ ಸೇವಿಸಬೇಕು. ಒಂದು ಗುಡಿಸಲು ನಿರ್ಮಿಸಿಕೊಂಡು ಅಲ್ಲಿ ಅಥವ ಬೆಟ್ಟದ ಗುಹೆಯಲ್ಲಿ ವಾಸವಿದ್ದು ಪವಿತ್ರಾಗ್ನಿಯನ್ನು ರಕ್ಷಿಸಬೇಕು. ಗಾಳಿ, ಬೆಂಕಿ, ಮಳೆ, ಬಿಸಿಲು, ಹಿಮ, ಇತ್ಯಾದಿಗಳನ್ನು ಸಹಿಸುವುದನ್ನು ರೂಢಿ ಮಾಡಿಕೊಳ್ಳಬೇಕು. ಇದಕ್ಕಾಗಿ ಸುಡುಬೇಸಿಗೆಯಲ್ಲಿ ಸುತ್ತಲೂ ಬೆಂಕಿ ಉರಿಸಿ ಮಧ್ಯದಲ್ಲಿ ಕುಳಿತು ಧ್ಯಾನ(ತಪಸ್ಸು) ಮಾಡಬೇಕು. ಮಳೆಗಾಲದಲ್ಲಿ ಸುರಿಯುವ ಮಳೆಯಲ್ಲಿ ಅದರ ಆರ್ಭಟವನ್ನು ಸಹಿಸಿ ಹೊರಗೆ ಇದ್ದು, ಚಳಿಗಾಲದಲ್ಲಿ ಕೊರೆಯುವ ಹೆಪ್ಪುಗಟ್ಟಿದ ನೀರಿನಲ್ಲಿ ಕತ್ತಿನವರೆಗೆ ನೀರಿನಲ್ಲಿ ಮುಳುಗಿದ್ದು ಧ್ಯಾನಸ್ಥರಾಗಬೇಕು. ಕೂದಲು, ಮೀಸೆ, ಉಗುರುಗಳನ್ನು ಕತ್ತರಿಸಬಾರದು, ಜಟೆಗಟ್ಟಿದ ಕೂದಲನ್ನು ತಲೆಯ ಮೇಲೆ ಎತ್ತಿಕಟ್ಟಬೇಕು. ಅಕಾಲಿಕವಾಗಿ ಮಲ, ಮೂತ್ರ ವಿಸರ್ಜಿಸಬಾರದು. ಮಲಿನವಾದ ಶರೀರದ ಶುದ್ಧತೆ ಬಗ್ಗೆ ಚಿಂತಿಸಬಾರದು. ದಿನಕ್ಕೆ 3 ಸಲ ಸ್ನಾನ ಮಾಡುವುದರಿಂದ ತೃಪ್ತನಾಗಬೇಕು. ನೆಲದ ಮೇಲೆ ಮಲಗಬೇಕು. ಒಂದು ಕುಡಿಯುವ ನೀರಿನ ಮಡಿಕೆ ಮತ್ತು ಒಂದು ದಂಡ ಹಿಡಿದಿರಬೇಕು. ವಾನಪ್ರಸ್ಥಿ 12 ವರ್ಷಗಳು ಅಥವ 8 ವರ್ಷಗಳು ಅಥವ 4 ವರ್ಷಗಳು ಅಥವ 2 ವರ್ಷಗಳು ಅಥವ ಕನಿಷ್ಠ 1 ವರ್ಷವಾದರೂ ಕಾಡಿನಲ್ಲಿ ವಾಸಿಸಬೇಕೆನ್ನುತ್ತಾರೆ. ಅತಿ ಸರಳವಾಗಿ ತೋರಿದರೂ ಕಠಿಣವಾದ ನಿಯಮಗಳಿಂದ ವಿಚಲಿತನಾಗಬಾರದು. ಸಾಮಯಿಕವಾಗಿ ಅಕ್ಕಿ ಅಥವ ಕಾಡಿನಲ್ಲಿ ದೊರೆತ ಧಾನ್ಯಗಳನ್ನು ಅರ್ಪಿಸಿ ಹೋಮ, ಹವನ, ಅಗ್ನಿಹೋತ್ರ ಮಾಡಬೇಕು. ಯಾವ ಕಾರಣಕ್ಕೂ ಪ್ರಾಣಿಬಲಿ ಕೊಡಬಾರದು.  
     ವಯಾಧಿಕ್ಯದಿಂದ ಅಥವ ಕಾಯಿಲೆಗಳಿಂದ ಅನುಷ್ಠಾನ ಕಷ್ಟವೆನಿಸಿದಾಗ ಆಹಾರ ಸೇವಿಸದೆ ಉಪವಾಸವಿರುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು. ಅಂತಹ ಸಂದರ್ಭದಲ್ಲಿ ನಡುಗುವ ಶರೀರದ ಕಾರಣದಿಂದ ಅನುಷ್ಠಾನ ಮಾಡಲಾಗದವರು, ಶರೀರಧಾರಣೆ ಕಷ್ಟವಾದಾಗ ಅಗ್ನಿಯನ್ನು ಧ್ಯಾನದ ಮೂಲಕ ಹೃದಯಸ್ಥ ಮಾಡಿಕೊಂಡು ಅದರೊಳಗೆ ಪ್ರವೇಶಿಸಿ ಶರೀರ ತ್ಯಾಗ ಮಾಡುವರು. ಕೆಲವು ಸಂತ ವಾನಪ್ರಸ್ಥಿಗಳು ಕಠಿಣ ವ್ರತಗಳನ್ನು ಆಚರಿಸುತ್ತಾ ಸೊರಗಿ ಕೇವಲ ಚರ್ಮ ಮತ್ತು ಮೂಳೆಗಳ ಹಂದರದಂತೆ ತೋರುತ್ತಾರೆ. ಇಂತಹ ಕಠಿಣ ಮತ್ತು ದೀರ್ಘವಾದ ಸಾಧನೆ ಮಾಡಿ ಮೋಕ್ಷಕ್ಕೆ ಹಂಬಲಿಸುವ ಬದಲು, ಪ್ರಾಪಂಚಿಕ ಸಂಗತಿಗಳನ್ನು ಪಡೆಯಲು ಹಂಬಲಿಸುವವರು ದೊಡ್ಡ ಮೂರ್ಖರೇ ಸರಿ. ಅಸುರರು ದೀರ್ಘ ತಪಸ್ಸು ಮಾಡಿ ಪಡೆದರೆಂದು ಹೇಳಲಾಗುವ ಅಸುರೀ ಸಾಧನೆಗಳನ್ನು ಈ ಸಾಲಿಗೆ ಸೇರಿಸಬಹುದು. ತಾನು ಯಾವುದಕ್ಕಾಗಿ ಸಾಧನೆ ಮಾಡುತ್ತಿದ್ದಾನೋ ಅದರ ಫಲವನ್ನೂ ಬಯಸದ ಸ್ಥಿತಿ ತಲುಪಿದಾಗ, ಅಂದರೆ ಮನಸ್ಸಿನ ಹಿಡಿತದಿಂದ ಪೂರ್ಣವಾಗಿ ಹೊರಬಂದಾಗ ಸಂನ್ಯಾಸಾಶ್ರಮಕ್ಕೆ ಕಾಲಿಡಬಹುದಾಗಿದೆ. ವಾನಪ್ರಸ್ಥಿ ತನ್ನತನದ ಹಿರಿಮೆಯಿಂದ ಹೊರಬಂದು ವಿನೀತಭಾವ ಹೊಂದಲು ಇತರರ ಕರುಣೆಯಿಂದ, ದೀನ ರೀತಿಯಲ್ಲಿ ಪಡೆದ ಧಾನ್ಯದಿಂದ ಜೀವಿಸುತ್ತಾನೆ. ವಾನಪ್ರಸ್ಥದ ಕುರಿತ ಈ ಕೆಲವು ವಿವರಗಳನ್ನು ಶ್ರೀಮದ್ಭಾಗವತದಲ್ಲಿ ಇರುವ ಅಂಶಗಳನ್ನು ಆಧರಿಸಿ ಬರೆದಿರುವೆ.
     ವೇದದ ನಾಲ್ಕು ಅಂಗಗಳಾದ ಬ್ರಾಹ್ಮಣ, ಸಂಹಿತಾ, ಅರಣ್ಯಕ ಮತ್ತು ಉಪನಿಷತ್ತುಗಳಲ್ಲಿ ಅರಣ್ಯಕವು ವಾನಪ್ರಸ್ಥಕ್ಕೆ ಸಂಬಂಧಿಸಿದೆ. ವಾನಪ್ರಸ್ಥ ಮತ್ತು ಸಂನ್ಯಾಸಗಳು ಎರಡೂ ವೈರಾಗ್ಯ ಪ್ರಾಧಾನ್ಯ ಆಶ್ರಮಗಳು. ವಾನಪ್ರಸ್ಥಿ ಸಮಾಜದ ಸೇವೆ ಮಾಡುತ್ತಾ ಮುಕ್ತಿ ಹೊಂದುವ ಸಿದ್ಧತೆ ಮಾಡಿಕೊಳ್ಳಬೇಕು. ಧರ್ಮ, ಅರ್ಥ, ಕಾಮ, ಮೋಕ್ಷಗಳು ಬ್ರಹ್ಮಚರ್ಯ, ಗಾರ್ಹಸ್ಥ್ಯ, ವಾನಪ್ರಸ್ಥ, ಸಂನ್ಯಾಸಗಳಲ್ಲಿ ಹಾಸುಹೊಕ್ಕಾಗಿವೆ. ಸಂನ್ಯಾಸಿಯು ಬ್ರಹ್ಮಚಾರಿ, ಗೃಹಸ್ಥ ಅಥವ ವಾನಪ್ರಸ್ಥಿಯಿಂದ ಹೊರತಾದವನಲ್ಲ/ ಬೇರ್ಪಟ್ಟವನಲ್ಲ. ಬ್ರಹ್ಮಚರ್ಯವು ಬೀಜರೂಪವಾಗಿದ್ದು ಗೃಹಸ್ಥಾಶ್ರಮದ ವಾಸ್ತವಿಕ ಅನುಭವವಾಗಿ ಬೆಳೆಯುತ್ತದೆ ಮತ್ತು ಅದು ವಾನಪ್ರಸ್ಥದ ವೈರಾಗ್ಯವಾಗಿ ಮುಂದುವರೆಯುತ್ತದೆ. ಹಾಗೂ, ಅದು ಮುಂದುವರೆದು ಸಂನ್ಯಾಸದ ಸಾರವಾಗಿ ಫಲಿತಗೊಳ್ಳುತ್ತದೆ.
     ಸನಾತನ ಧರ್ಮದ ಮಹತ್ವ ಅರಿವಾಗುವುದು ಈ ಆಶ್ರಮಗಳ ಸರಿಯಾದ ಅನುಷ್ಠಾನದಿಂದ. ಬ್ರಹ್ಮಚರ್ಯದಲ್ಲಿ ಒಬ್ಬ ಬಾಲಕ/ಬಾಲಿಕೆ ಗುರುಕುಲಕ್ಕೆ ಸೇರಿ ತನಗೆ ಬೇಕೆನಿಸಿದ ಜ್ಞಾನದ ಅರಿವನ್ನು ತಾನು ಯಾವ ಸಮಾಜಕ್ಕೆ ಸೇರಿದ್ದಾನೋ ಆ ಸಮಾಜದ ಹಿತವನ್ನು ಗಮನದಲ್ಲಿರಿಸಿ ಪಡೆಯುತ್ತಾನೆ/ಳೆ. ಈ ಹಂತದಲ್ಲಿ ಪಡೆಯುವ ಜ್ಞಾನ ಮುಂದಿನ ಗೃಹಸ್ಥ, ವಾನಪ್ರಸ್ಥ ಮತ್ತು ಸಂನ್ಯಾಸಾಶ್ರಮಗಳಿಗೆ ತಳಹದಿಯಂತಿರುತ್ತದೆ. ವಾನಪ್ರಸ್ತವು ಪ್ರಾಪಂಚಿಕ ಆಕರ್ಷಣೆಗಳಿಂದ ದೂರವಿರಲು ಮಾಡುವ ಸಾಧನೆಯ ಅವಧಿಯೆನ್ನಬಹುದು. 
     ಗೃಹಸ್ಥಾಶ್ರಮವು ಸಮಾಜದ ತಳಪಾಯವಿದ್ದಂತೆ. ಇತರ ಮೂರು ಆಶ್ರಮಗಳಿಗೆ ತಾಯಿಬೇರು ಇದೇ ಆಗಿದೆ. ಮಕ್ಕಳು ಬ್ರಹ್ಮಚಾರಿಗಳಾಗುತ್ತಾರೆ, ಪೋಷಕರು ವಾನಪ್ರಸ್ಥಕ್ಕೆ ಪ್ರವೇಶಿಸುತ್ತಾರೆ ಮತ್ತು ಅವರು ಲೋಕಹಿತ ಬಯಸುವ ಸಂನ್ಯಾಸಿಗಳಿಗೆ ಆಶ್ರಯ ಕೊಡುವವರೂ ಆಗಿರುತ್ತಾರೆ. ವಾನಪ್ರಸ್ಥದ ಅವಧಿಯಲ್ಲಿ ಮಕ್ಕಳು ಬೆಳೆದವರಾಗಿರುತ್ತಾರೆ ಮತ್ತು ಕೌಟುಂಬಿಕ ಜವಾಬ್ದಾರಿ ಕಡಿಮೆಯಾಗುತ್ತದೆ. ಸಾಮಾಜಿಕ ಹಿತದ ಕೆಲಸಗಳನ್ನು ಮಾಡಲು ಅವಕಾಶವಿರುತ್ತದೆ. ಈ ಅವದಿಯು ಕಿರಿಯರಿಗೆ, ಗೃಹಸ್ಥರಿಗೆ ಮತ್ತು ಸಂನ್ಯಾಸಿಗಳಿಗೆ ಬಲವಾದ ಆಧಾರರೂಪಿಯಾಗಿರಲು ಸೂಕ್ತವಾಗಿರುತ್ತದೆ. ಜ್ಞಾನವನ್ನು ಸಂಪಾದಿಸಿ ದೇಶಕ್ಕೆ, ಸಮಾಜಕ್ಕೆ ಉಪಕಾರಿಯಾಗಿರಬೇಕಾದ ಹಂತವಿದು. ಕೆಲವರು ನೇರವಾಗಿ ಸಂನ್ಯಾಸಾಶ್ರಮಕ್ಕೆ ಪ್ರವೇಶಿಸಿ ನಂತರದಲ್ಲಿ ಪ್ರಾಪಂಚಿಕ ಆಕರ್ಷಣೆಗಳಿಗೆ ಒಳಗಾಗಿ ಕೆಳಗೆ ಬಿದ್ದಿರುವುದನ್ನೂ ಕಂಡಿದ್ದೇವೆ. ಹಾಗಾಗಿ ಗೃಹಸ್ಥ, ವಾನಪ್ರಸ್ಥದ ಅವಧಿಯನ್ನು ಪೂರ್ಣಗೊಳಿಸಿ ಪ್ರಾಪಂಚಿಕ ಆಕರ್ಷಣೆಗಳಿಂದ ಮುಕ್ತರಾದ ನಂತರವೇ ಸಂನ್ಯಾಸಿಗಳಾಗುವುದು ಸಮಾಜದ ಮತ್ತು ಸ್ವಂತದ ಹಿತದಿಂದ ಒಳ್ಳೆಯದು. ವಾನಪ್ರಸ್ಥಕ್ಕೆ ತೆರಳುವವರಿಂದ ಇನ್ನೊಂದು ಲಾಭವೂ ಇದೆ. ವೃದ್ಧರ ನಿವೃತ್ತಿಯಿಂದ ಯುವಕರಿಗೆ ಸಹಜವಾಗಿ ಅಧಿಕಾರ, ಸಾಧನ ಸೌಲಭ್ಯಗಳು ಸಿಗುತ್ತವೆ. ಅಥರ್ವ ವೇದದ ಈ ಮಂತ್ರ ಹೀಗೆ ಹೇಳುತ್ತದೆ:
ಆ ನಯೈತಮಾ ರಭಸ್ಯ ಸುಕೃತಾಂ ಲೋಕಮಪಿ ಗಚ್ಛತು ಪ್ರಜಾನನ್ |
ತೀರ್ತ್ವಾ ತಮಾಂಸಿ ಬಹುಧಾ ಮಹಾಂತ್ಯಜೋ ನಾಕಮಾ ಕ್ರಮತಾಂ ತೃತೀಯಮ್ || (ಅಥರ್ವ.೯.೫.೧.)
     ಅರ್ಥ: ಓ ಗೃಹಸ್ಥ! ಈ ನಿನ್ನ ಆತ್ಮನನ್ನು ಮುನ್ನಡೆಸು. ಸಾಧನೆಯನ್ನಾರಂಭಿಸು. ನಿನ್ನ ಆತ್ಮನು, ಚೆನ್ನಾಗಿ ಜ್ಞಾನ ಗಳಿಸಿ, ಪುಣ್ಯವಂತರ ಸ್ಥಿತಿಯನ್ನು ಮುಟ್ಟಲಿ. ಆಜನ್ಮನಾದ, ನಿತ್ಯನಾದ ನಿನ್ನ ಅತ್ಮನು ಅನ್ಯ ಸಾಧನೆಗಳಿಂದ, ಮಹಾ ಅಂಧಕಾರಗಳನ್ನು ದಾಟಿ, ಮೂರನೆಯದಾದ ವಾನಪ್ರಸ್ಥದ ಸುಖಮಯ ಆಶ್ರಮವನ್ನು ಆಕ್ರಮಿಸಲಿ.
     ಎಲ್ಲಾ ವಯೋವೃದ್ಧರಿಗೂ ಜೀವನದ ಅಂತಿಮ ದಿನಗಳನ್ನು ಪ್ರಾಪಂಚಿಕ ಆಕರ್ಷಣೆಗಳಿಂದ ದೂರವಾಗಿ ಕಳೆಯುವ ಮನಸ್ಸು ಬರಲಾರದು. ಒಂದು ಹಾಸ್ಯಪ್ರಸಂಗ ಇಲ್ಲಿ ನೆನಪಾಗುತ್ತಿದೆ. ಒಬ್ಬ ವ್ಯಾಪಾರಿ ಇನ್ನೇನು ಆಗಲೋ, ಈಗಲೋ ಎಂಬಂತೆ ಸಾಯುವ ಸ್ಥಿತಿಯಲ್ಲಿದ್ದಾಗ, ಅವನ ಹತ್ತಿರವಿರಲು ಮಗ ಮನೆಗೆ ಧಾವಿಸಿಬರುತ್ತಾನೆ. ಅವನಿಗೆ ಏನೋ ಹೇಳಬೇಕೆಂದು ಆ ವ್ಯಾಪಾರಿ ಬಯಸಿದರೂ ಗಂಟಲಿನಿಂದ ಸ್ವರ ಹೊರಡದೆ ಗೊರಗೊರ ಶಬ್ದ ಬರುತ್ತಿದೆ. ವೈದ್ಯರ ಶತಪ್ರಯತ್ನದಿಂದ ಕೊನೆಗೆ ಮಾತನಾಡಿದ ಅವನು ಮಗನಿಗೆ "ಇಷ್ಟು ಬೇಗ ಏಕೆ ಅಂಗಡಿ ಬಾಗಿಲು ಹಾಕಿದೆ?" ಎಂದು ಕೇಳಿದ್ದೇ ಅವನ ಜೀವನದ ಕೊನೆಯ ಮಾತಾಗಿತ್ತು! ಗೋಂದಾವಲೀ ಮಹಾರಾಜರು ಉಪನ್ಯಾಸವೊಂದರಲ್ಲಿ ಹೇಳಿದ ಪ್ರಸಂಗ (ಧ್ವನಿಮುದ್ರಿಕೆಯಲ್ಲಿ ಕೇಳಿದ್ದು) ಇಲ್ಲಿ ಉಲ್ಲೇಖಿಸಬಹುದು. ಒಬ್ಬ ಭಕ್ತರ ಮನೆಗೆ ಅವರು ಹೋಗಿದ್ದಾಗ ಆ ಮನೆಯಲ್ಲಿದ್ದ 90 ವರ್ಷ ದಾಟಿದ್ದ ವೃದ್ಧೆಯೊಬ್ಬರು ಅವರನ್ನು ಉದ್ದೇಶಿಸಿ, "ಸ್ವಾಮಿ, ನನಗೆ ಇನ್ನು ಯಾವ ಆಸೆಯೂ ಇಲ್ಲ. ನಿಮ್ಮ ಪಾದದ ಕೆಳಗೆ ತಲೆಯಿಟ್ಟು ಈ ಜೀವನ ಮುಗಿಸಬೇಕು ಎಂಬುದೊಂದೇ ಆಸೆ" ಎಂದಳು. ಅದಕ್ಕೆ ಅವರು, "ಆಗಲಿ, ಅದಕ್ಕೇನಂತೆ? ಹಾಗೇ ಮಾಡಿ" ಎಂದು ಚಕ್ಕಳ ಮಕ್ಕಳ ಹಾಕಿಕೊಂಡು ಕುಳಿತಾಗ ಗಾಬರಿಯಾದ ಆ ವೃದ್ಧೆ, "ಅಯ್ಯೋ, ಸ್ವಾಮಿ, ಈಗಲೇ ಅಲ್ಲ. ನನ್ನ ಮೊಮ್ಮಗಳ ಮದುವೆ ಆಗಬೇಕು. ಅವಳ ಮಗುವನ್ನು ಎತ್ತಿ ಮುದ್ದಾಡಬೇಕು. ನಾಮಕರಣ ಆಗಬೇಕು. ನಂತರ ನನ್ನ ಈ ಆಸೆ ಈಡೇರಿಸಿಕೊಳ್ಳುತ್ತೇನೆ" ಅಂದಳಂತೆ! ಸಾಯುವ ಕೊನೆಯ ಕ್ಷಣದವರೆಗೂ ರಾಜಕೀಯ ಮಾಡುತ್ತಾ ಅಧಿಕಾರಕ್ಕಾಗಿ ಹಪಹಪಿಸುವ ಇಂದಿನ ರಾಜಕಾರಣಿಗಳೂ ಇದೇ ವರ್ಗಕ್ಕೆ ಸೇರಿದವರು. ಹಾಗಾಗಿ ಏನು ಬದಲಾವಣೆ ನಿರೀಕ್ಷಿಸಲಾದೀತು? ಇರಲಿ ಬಿಡಿ, ವಾನಪ್ರಸ್ಥ ಬಯಸದವರ ಮಾತನ್ನು ಮುಂದುವರೆಸುವುದಿಲ್ಲ. 
     ಇಂದಿನ ಕಾಲಮಾನದ ಪರಿಸ್ಥಿತಿಯಲ್ಲಿ ವಾನಪ್ರಸ್ಥದ ಮೂಲ ಪರಿಕಲ್ಪನೆಯನ್ನು ಸೂಕ್ತವಾಗಿ ಪರಿವರ್ತಿಸಿ ಅಳವಡಿಸಿಕೊಳ್ಳುವುದು ಅಗತ್ಯವಾಗಿದೆ. 45-50ರ ವಯಸ್ಸಿನಲ್ಲಿ ಇರುವವರು ರಚನಾತ್ಮಕ ಕಾರ್ಯಗಳಲ್ಲಿ ತೊಡಗಿಕೊಳ್ಳಲು ಮುಂಚಿತವಾಗಿ ಯೋಜನೆ ಮಾಡಿಕೊಂಡು, ಮಾನಸಿಕವಾಗಿ ಸಿದ್ಧರಾಗಿದ್ದಲ್ಲಿ ನಿವೃತ್ತರಾದ ಕೂಡಲೇ ಉಂಟಾಗಬಹುದಾದ ಶೂನ್ಯಭಾವದಿಂದ ಹೊರಬರಬಹುದು. ನಿವೃತ್ತ ಜೀವನವನ್ನು ಒಳ್ಳೆಯ ರೀತಿಯಲ್ಲಿ ಕಳೆಯುವ ಸಾಧನವಾಗಿ ಮಾಡಿಕೊಳ್ಳುವುದನ್ನು ವಾನಪ್ರಸ್ಥವೆನ್ನೋಣ. ಪ್ರತಿಯೊಂದರಲ್ಲಿ, ಪ್ರತಿಯೊಬ್ಬರಲ್ಲಿ ಒಳಿತನ್ನು ಕಾಣುವ ಮನೋಭಾವ ಬೆಳೆಸಿಕೊಂಡು, ಅಂತರಂಗ, ಬಹಿರಂಗಗಳಲ್ಲಿ ಸಾಮ್ಯತೆ ಸಾಧಿಸುವ ಕ್ರಿಯೆಯಲ್ಲಿ ತೊಡಗುವುದು ಕಡಿಮೆ ಸಾಧನೆಯಲ್ಲ. ಪ್ರಾಪಂಚಿಕ ಆಕರ್ಷಣೆಗಳಿಂದ ವಿಮುಕ್ತರಾಗಿ ಸರಳ ವಸ್ತ್ರಗಳನ್ನು ಧರಿಸಿ, ಸರಳ ಜೀವನವನ್ನು ನಡೆಸಿ ಆತ್ಮಚಿಂತನೆಯಲ್ಲಿ ತೊಡಗಬಹುದಾಗಿದೆ. ತನ್ನ ಚಿಂತನೆ, ಜ್ಞಾನಾಭಿವೃದ್ಧಿಗಳಿಗೆ ಪೂರಕವಾಗುವ ಸತ್ಸಂಗಗಳಲ್ಲಿ ಪಾಲುಗೊಳ್ಳುವುದು, ಅಂತಹ ಆದರ್ಶದ ಜೀವನ ಸಾಗಿಸುತ್ತಿರುವ ಧೀಮಂತರ ಮಾರ್ಗದರ್ಶನ ಪಡೆಯುವುದು ಸಹಕಾರಿಯಾಗುತ್ತದೆ. ಇಂತಹವರು ಸಹಜವಾಗಿ ದೇಶಾತೀತ, ಭಾಷಾತೀತ, ಜನಾಂಗಾತೀತ, ಮತಾತೀತ ಮಾನವರಾಗುತ್ತಾರೆ. ಕೌಟುಂಬಿಕ ಜವಾಬ್ದಾರಿಗಳನ್ನು ಮಕ್ಕಳಿಗೆ ವಹಿಸಿ ನಿರ್ಲಿಪ್ತ, ನಿಶ್ಚಿಂತರಾಗುವುದು ಮೊದಲ ಕ್ರಮವಾಗಬೇಕು. ನಂತರದಲ್ಲಿ ಸಾಧ್ಯವಾದಷ್ಟು ಪ್ರಶಾಂತ ಕೊಠಡಿ ಅಥವ ಸ್ಥಳದಲ್ಲಿ ಇರಬೇಕು. ಕುಟುಂಬದವರು ಕೌಟುಂಬಿಕ ಸಮಸ್ಯೆ ಅಥವ ವಿಚಾರಗಳಿಗೆ ಸಲಹೆ, ಸಹಕಾರ ಬಯಸಿದಲ್ಲಿ ಕೊಡಬೇಕು. ಆದರೆ ಅವುಗಳಲ್ಲಿ ವ್ಯಸ್ತರಾಗಬಾರದು. ಕೌಟುಂಬಿಕ ಸಾಮರಸ್ಯ, ಬಂಧುಗಳ ಸಾಮರಸ್ಯ, ಜನಾಂಗದ ಸಾಮರಸ್ಯ, ಸಕಲ ಜೀವಕೋಟಿಯ ಸಾಮರಸ್ಯದ ಗುರಿಯಿರಬೇಕು. ಈ ದಿಸೆಯಲ್ಲಿ ಎಷ್ಟು ಸಾಧಿಸಲು ಸಾಧ್ಯ, ಸಾಧಿಸಿದೆವು ಎಂಬುದು ಮಹತ್ವದ್ದಲ್ಲ. ಒಂದು ಗಾದೆಯಿದೆ, ಸಾವಿರ ಮೈಲುಗಳ ಪಯಣ ಪ್ರಾರಂಭವಾಗುವುದು ಒಂದು ಹೆಜ್ಜೆ ಮುಂದಿಡುವುದರಿಂದ. ಸಣ್ಣ ಕೌಟುಂಬಿಕ ವ್ಯಾಪ್ತಿಯಿಂದ ಹೊರಬಂದು ವಿಶ್ವವೇ ಒಂದು ಕುಟುಂಬವಾಗಿದ್ದು ತಾನು ಅದರ ಭಾಗವೆಂದು ಭಾವಿಸುವ ಮನೋವೃತ್ತಿ ಬೆಳೆಸಿಕೊಳ್ಳಬೇಕು. ಸರ್ವರ ಹಿತ ಬಯಸುವ ಕೆಲಸ, ಕಾರ್ಯಗಳಲ್ಲಿ ತೊಡಗಿಕೊಳ್ಳಬೇಕು, ಬೆಂಬಲಿಸಬೇಕು. ಮನೋವಿಕಾರಗಳನ್ನು ನಿಯಂತ್ರಿಸಲು ಸಾಧನೆ ನಡೆಸಬೇಕು. ದುಷ್ಟ ವಿಚಾರಗಳಿಂದ ದೂರವಿದ್ದು, ಸದ್ವಿಚಾರಗಳ ಅನುಸರಣೆ, ಪ್ರಸರಣೆಗೆ ಗಮನ ಕೊಡಬೇಕು. ಒಳಿತನ್ನು, ಒಳ್ಳೆಯ ಸಂಗತಿಗಳನ್ನು ಗುರುತಿಸಿ ಗೌರವಿಸಬೇಕು. ಸಾಧ್ಯವಾದಷ್ಟೂ ಇತರರಿಗೆ ಹೊರೆಯಾಗದಂತೆ ಬಾಳಬೇಕು. 
     ಸಾಮಾನ್ಯವಾಗಿ ಒಬ್ಬೊಬ್ಬರಿಗೆ ಒಂದೊಂದು ವೃತ್ತಿ, ಪ್ರವೃತ್ತಿ, ಹವ್ಯಾಸಗಳು ತೃಪ್ತಿ, ಸಂತೋಷ ಕೊಡುವ ಸಂಗತಿಯಾಗಿರುತ್ತದೆ. ನಿವೃತ್ತಿಯೆಂದರೆ ಅಂತಹ ಹವ್ಯಾಸಗಳನ್ನು ನಿಲ್ಲಿಸುವುದಲ್ಲ. ಬದಲಾಗಿ ಅವುಗಳನ್ನು ಇತರರ ಹಿತಕ್ಕಾಗಿ ಬಳಸುವುದು. ಆದರೆ ಅದು ಹಣಗಳಿಕೆಯ ಸಾಧನವಾಗಬಾರದಷ್ಟೆ. ಒಬ್ಬ ನಿವೃತ್ತ ಶಿಕ್ಷಕ ಬಡ ಮಕ್ಕಳಿಗೆ ಉಚಿತವಾಗಿ ಪಾಠ ಹೇಳಬಹುದು, ಸಂಗೀತಗಾರ ತನ್ನ ಸಾಧನೆಯನ್ನು ಉತ್ತುಂಗಕ್ಕೇರಿಸುವುದರ ಜೊತೆಗೆ ಇತರರಿಗೆ ಸಂಗೀತ ಹೇಳಿಕೊಡಬಹುದು, ಬರಹಗಾರ ತನ್ನ ಅನುಭವದ ಸಾರಗಳನ್ನು ಬರಹದ ಮೂಲಕ ಅಭಿವ್ಯಕ್ತಿಸಬಹುದು ಮತ್ತು ಆ ಮೂಲಕ ಪರಿಣಾಮ ಬೀರಬಹುದು. ಇವೆಲ್ಲಾ ಉದಾಹರಣೆಗಳಷ್ಟೆ. ಕೇವಲ ಆತ್ಮತೃಪ್ತಿ ಮತ್ತು ಇತರರಿಗೆ ಮಾರ್ಗದರ್ಶಿಯಾಗಿರಲು ಮಾತ್ರ ಇವುಗಳ ಬಳಕೆಯಾಗಬೇಕು. ಪಡೆಯುವುದಕ್ಕಿಂತ ಕೊಡುವುದಕ್ಕೆ ಆದ್ಯತೆಯಿರಬೇಕು. ಅಷ್ಟಕ್ಕೂ ನಮ್ಮಲ್ಲಿರುವುದೆಲ್ಲಾ ನಾವು ಪಡೆದಿದ್ದೇ ಅಲ್ಲವೇ? ಬದುಕಿನ ಜಂಜಾಟದಲ್ಲಿ ತನ್ನತನಕ್ಕೆ ಅದುವರೆಗೆ ಸಿಕ್ಕದ ಆದ್ಯತೆಯನ್ನು ಜೀವನದ ಅಂತಿಮ ಘಟ್ಟದಲ್ಲಾದರೂ ಸಿಕ್ಕುವಂತೆ ನೋಡಿಕೊಂಡು 'ತಾನು ತಾನಾಗಿರಬೇಕು', ಅರ್ಥಾತ್ 'ತನಗಾಗಿ' ಬಾಳಬೇಕು. 'ತನಗಾಗಿ' ಬಾಳುವ ಈ ರೀತಿಯ ಬಾಳು"ಕೆಯಲ್ಲಿ ಸ್ವಾರ್ಥವಿರಲಾರದು. ಏಕೆಂದರೆ, ಅದು ಆತ್ಮತೃಪ್ತಿಯ, ಆತ್ಮ ಚಿಂತನೆಯ, ಆತ್ಮಾನುಸಂಧಾನದ ಮಾರ್ಗ. ಒಂದು ರೀತಿಯಲ್ಲಿ ಅದು ಹಿಂದೆ ಮಾಡಿರಬಹುದಾದ ತಪ್ಪುಗಳಿಗೆ ಪ್ರಾಯಶ್ಚಿತ್ತವೂ ಆದೀತು. ಇಂತಹ ಚಿಂತನೆಗಳನ್ನು ಹೊಂದಿದವರ ಭಾವನೆಯನ್ನು ಗೌರವಿಸಿ ಸಹಕರಿಸುವ ಕುಟುಂಬದ ಇತರ ಸದಸ್ಯರೂ ಅಭಿನಂದನಾರ್ಹರಾಗುತ್ತಾರೆ. ಇಂತಹ ಕ್ರಿಯೆಯಿಂದ ಯುವಕರಿಗೆ ಸಹಜವಾಗಿ ನಾಯಕತ್ವ ಸಿಗುವುದಲ್ಲದೇ, ಅವರಿಗೆ ಸುಯೋಗ್ಯ ಮಾರ್ಗದರ್ಶನ ಸಹ ನೀಡಿದಂತಾಗುತ್ತದೆ. 'ಯಾರಂತೆ ಅಂದರೆ ಊರಂತೆ' ಎಂದುಕೊಂಡು ಅದುವರೆಗೆ ಹೇಗೆ ಹೇಗೋ ಸಾಗಿಸಿದ ಜೀವನವನ್ನು ಮರೆತು, ಮೌಲ್ಯಗಳನ್ನು ಕಡೆಗಣಿಸಿ ಬಾಳಿದ ಹಿಂದಿನ ದಿನಗಳನ್ನು ಮರೆತು, ಕಷ್ಟವಾದರೂ ಸರಿ, ಜೀವನದ ಉಳಿದ ಕೊನೆಯ ದಿನಗಳಲ್ಲಿ ಮೌಲ್ಯಗಳಿಗೆ ಅಂಟಿಕೊಂಡು ಬಾಳಿದರೆ ಅದು ಜೀವಕೋಟಿಗೆ ನೀಡುವ, ಭಗವಂತ ಮೆಚ್ಚುವ ಅತಿ ದೊಡ್ಡ ಕಾಣಿಕೆಯಾಗುತ್ತದೆ.
-ಕ.ವೆಂ.ನಾಗರಾಜ್.