ವೇದಜೀವನ ಬ್ಲಾಗಿಗೆ ಸ್ವಾಗತ. ಸುವಿಚಾರಗಳು ಎಲ್ಲಿಂದಲಾದರೂ ಬರಲಿ, ಯಾರಿಂದಲಾದರೂ ಬರಲಿ, ಪೂರ್ವಾಗ್ರಹ ಪೀಡಿತರಾಗದೆ ಸ್ವೀಕರಿಸೋಣ.

ಮಂಗಳವಾರ, ಮೇ 14, 2013

ಸಾಧನಾಪಂಚಕ




     ಆದಿ ಶಂಕರಾಚಾರ್ಯ ವಿರಚಿತ 'ಸಾಧನಾಪಂಚಕಮ್' ಒಬ್ಬ ಸಾಧಕ ಅನುಸರಿಸಬೇಕಾದ ರೀತಿ-ನೀತಿಗಳನ್ನು ತಿಳಿಸುವ ಅಪೂರ್ವ ರಚನೆ. ಪರಮ ಸತ್ಯದ ದರ್ಶನ ಮಾಡಿಸುವ ಶ್ರೇಯಸ್ಕರ, ಸನ್ಮಾರ್ಗದ ಪಥವಿದಾಗಿದೆ. 

ವೇದೋ ನಿತ್ಯಮಧೀಯತಾಂ ತದುದಿತಂ ಕರ್ಮ ಸ್ವನ್ಠುಯತಾಂ
ತೇನೇಶಸ್ಯ ವಿಧೀಯತಾಂ ಅಪಚಿತಿಃ ಕಾಮ್ಯೇ ಮತಿಸ್ತ್ಯಜತಾಮ್ |
ಪಾಪೌಘಃ ಪರುಧೂಯತಾಂ ಭವಸುಖೇ ದೋಷೋsನುಸಂಧೀಯತಾಂ
ಆತ್ಮೇಚ್ಛಾ ವ್ಯವಸೀಯತಾಂ ನಿಜಗೃಹಾತ್ ತೂರ್ಣಂ ವಿನಿರ್ಗಮ್ಯತಾಮ್ || ೧ ||

     ಪ್ರತಿನಿತ್ಯ ವೇದಾಧ್ಯಯನ ಮಾಡು; ವೇದ ವಿಧಿತ ಕರ್ಮಗಳನ್ನು ಶ್ರದ್ಧೆಯಿಂದ ನಿರ್ವಹಿಸು; ಮಾಡುವ ಎಲ್ಲಾ ಕೆಲಸಗಳನ್ನು ಭಗವದಾರಾಧನೆಯೆಂದು ಸಮರ್ಪಿಸು; ಕಾಮ್ಯ ಕರ್ಮಗಳನ್ನು (ಮನಸ್ಸಿನ ಸ್ವಾಧೀನ ತಪ್ಪಿಸುವ ಕಾಮನೆಗಳು) ತ್ಯಜಿಸು; ಅಂತರಂಗದಲ್ಲಿ ತುಂಬಿರುವ ಪಾಪರಾಶಿಯನ್ನು ತೊಳೆದುಹಾಕು; ಇಂದ್ರಿಯ ಸುಖಭೋಗಗಳು ದೋಷಪೂರಿತವೆಂದು ಗುರುತಿಸು; ಸ್ವಸ್ವರೂಪವನ್ನು ಅರಿಯಲು ಪ್ರಯತ್ನಿಸು; ಶರೀರ ಮೋಹದ ಸಂಕೋಲೆಯಿಂದ ಬಿಡಿಸಿಕೊಂಡು ಸಾಧನಾಪಥದಲ್ಲಿ ಸಾಗು.

ಸಂಗಃಸತ್ಸು ವಿಧೀಯತಾಂ ಭಗವತೋ ಭಕ್ತಿರ್ದೃಢಾsಧೀಯತಾಂ 
ಶಾಂತ್ಯಾದಿಃ ಪರಿಚೀಯತಾಂ ದೃಢತರಂ ಕರ್ಮಾಶು ಸನ್ತ್ಯಜ್ಯತಾಮ್ |
ಅದ್ವಿದ್ವಾಬುಪಸೃಪ್ಯತಾಂ ಪ್ರತಿದಿನಂ ತತ್ಪಾದುಕಾ ಸೇವ್ಯತಾಂ
ಬ್ರಹ್ಮೈಕಾಕ್ಷರಮರ್ಥ್ಯತಾಂ ಶ್ರುತಿಶಿರೋವಾಕ್ಯಂ ಸಮಾಕರ್ಣ್ಯತಾಮ್ || ೨ ||

     ಜ್ಞಾನಿಗಳ ಸಹವಾಸದಲ್ಲಿರು; ಭಗವಂತನಲ್ಲಿ ದೃಢ ಭಕ್ತಿಯಿರಿಸು; ಪ್ರಶಾಂತತೆ ಮುಂತಾದ ಗುಣಗಳನ್ನು ಬೆಳೆಸಿಕೋ; ಸ್ವಾರ್ಥಪರ ಕಾಮಕರ್ಮಗಳಲ್ಲಿ ಆಸಕ್ತಿ ತ್ಯಜಿಸು; ಸದ್ವಿದ್ವಾಂಸರ (ಗುರುಗಳ) ಆಶ್ರಯ ಪಡೆ; ಪ್ರತಿದಿನ ಸದ್ಗುರು ಪಾದಸೇವೆ ಮಾಡು; ಬ್ರಹ್ಮನನ್ನು ಸೂಚಿಸುವ ಏಕಾಕ್ಷರ 'ಓಂ'ಕಾರ ತಿಳಿಯಲು ಪ್ರಯತ್ನಿಸು; ಉಪನಿಷದ್ ವಾಕ್ಯಗಳನ್ನು ಸರಿಯಾಗಿ ಅರ್ಥ ಮಾಡಿಕೊಳ್ಳು.

ವಾಕ್ಯಾರ್ಥಶ್ಚ ವಿಚಾರ್ಯತಾಂ ಶ್ರುತಿಶಿರಃ ಪಕ್ಷಃ ಸಮಾಶ್ರೀಯತಾಂ
ದುಸ್ತರ್ಕಾತ್ ಸುವಿರಮ್ಯತಾಂ ಶ್ರುತಿಮತಸ್ತರ್ಕೋsನುಸಂಧೀಯತಾಮ್ |
ಬ್ರಹ್ಮಾಸ್ಮೀತಿ ವಿಭಾವ್ಯತಾಂ ಅಹರಹರ್ಗರ್ವಃ ಪರಿತ್ಯಜ್ಯತಾಂ
ದೇಹೇsಹಂ ಮತಿರುಝ್ಯುತಾಂ ಬುಧಜನೈರ್ವಾದಃ ಪರಿತ್ಯಜ್ಯತಾಮ್ || ೩ ||

     ಉಪನಿಷತ್ತಿನ ವಾಕ್ಯಗಳ ಅರ್ಥ ಕುರಿತು ಚಿಂತಿಸು; ಉಪನಿಷತ್ತಿನ ನಿಜಜ್ಞಾನವನ್ನು ಆಶ್ರಯಿಸು; ವಿತಂಡವಾದದಿಂದ ದೂರವಿರು; ಉಪನಿಷತ್ತಿಗೆ ಪೂರಕವಾದ ತರ್ಕದೊಂದಿಗೆ ಇರು; ಬ್ರಹ್ಮಾನುಭವದಲ್ಲಿ ಒಂದಾಗು; ಎಂದಿಗೂ ಗರ್ವಪಡದಿರು; ಶರೀರದೊಂದಿಗೆ ನಿನ್ನನ್ನು ಪರಿಭಾವಿಸಿಕೊಳ್ಳದಿರು ; ವಿದ್ವಾಂಸರೊಡನೆ ವಾದ ಮಾಡುವ ಪ್ರವೃತ್ತಿ ತೊರೆದುಬಿಡು.

ಕ್ಷುದ್ ವ್ಯಾಧಿಶ್ಚ ಚಿಕಿತ್ಸ್ಯತಾಂ ಪ್ರತಿದಿನಂ ಭಿಕ್ಷೌಷಧಂ ಭುಜ್ಯತಾಂ
ಸ್ವಾದ್ಯನ್ನಂ ನ ತು ಯಾಚ್ಯತಾಂ ವಿಧಿವಶಾತ್ ಪ್ರಾಪ್ತೇನ ಸಂತುಷ್ಟತಾಮ್ |
ಶೀತೋಷ್ಣಾದಿ ವಿಷಹ್ಯತಾಂ ನ ತು ವೃಥಾ ವಾಕ್ಯಂ ಸಮುಚ್ಚಾರ್ಯತಾಂ
ಔದಾಸೀನ್ಯಮಭೀಷ್ಟತಾಂ ಜನಕೃಪಾನೈಷ್ಠುರ್ಯಮುತ್ ಸೃಜ್ಯತಾಮ್ || ೪ ||

     ಹಸಿವಿದ್ದರೆ, ಅಸ್ವಸ್ಥತೆಯಿದ್ದರೆ ಪರಿಹರಿಸಿಕೋ; ಪ್ರತಿದಿನ ಭಿಕ್ಷೆಯನ್ನು (ಆಹಾರ) ಔಷಧಿಯಂತೆ ಸೇವಿಸು; ರುಚಿಕರವಾದ ಆಹಾರಕ್ಕೆ ಹಂಬಲಿಸದಿರು; ತಾನಾಗಿ ಒದಗಿ ಬಂದುದರಲ್ಲಿ ತೃಪ್ತಿಪಡು; ಶೀತ-ಉಷ್ಣ ಮುಂತಾದುವುಗಳನ್ನು ಸಹಿಸು; ಅನುಚಿತ ಮಾತುಗಳನ್ನು ಆಡದಿರು; ನಿರ್ಲಿಪ್ತಭಾವವನ್ನು ಹೊಂದು; ಜನರ ಕೃಪೆ ಮತ್ತು ನಿಷ್ಠುರಗಳನ್ನು ಗಮನಿಸದಿರು.  

ಏಕಾಂತೇ ಸುಖಮಾಸ್ಯತಾಂ ಪರತರೇ ಚೇತಃ ಸಮಾಧೀಯತಾಂ
ಪೂರ್ಣಾತ್ಮಾ ಸುಸಮೀಕ್ಷತಾಂ ಜಗದಿದಂ ತದ್ಭಾದಿತಂ ದೃಶ್ಯತಾಮ್ |
ಪ್ರಾಕ್ಕರ್ಮ ಪ್ರವಿಲಾಪ್ಯತಾಂ ಚಿತಿಬಲಾನ್ನಾಪ್ಯುತ್ತರೈಃ ಶ್ಲಿಷ್ಯತಾಂ
ಪ್ರಾರಬ್ಧಂ ತ್ವಿಹ ಭುಜ್ಯತಾಂ ಅಥ ಪರಬ್ರಹ್ಮಾತ್ಮನಾ ಸ್ಥೀಯತಾಮ್ || ೫ ||

     ಏಕಾಂತದಲ್ಲಿ ಸುಖವನ್ನು ಅರಸು; ಪರಮಾತ್ಮನಲ್ಲಿ ಚಿತ್ತವನ್ನು ಲೀನಗೊಳಿಸು (ಸಮಾಧಿ); ಸರ್ವವ್ಯಾಪಿ ಪೂರ್ಣಾತ್ಮನನ್ನು ಎಲ್ಲೆಡೆಯಲ್ಲೂ 'ದರ್ಶಿಸು'; ಕಾಣುವ ದೃಶ್ಯಗಳು, ಅನುಭವಗಳು ಮನಸ್ಸಿನ ಭ್ರಮೆಯೆಂಬುದನ್ನು ಮನಗಾಣು; ಹಿಂದಿನ ಕರ್ಮಗಳ ಫಲವನ್ನು ಅನುಭವಿಸು; ಮುಂದೊದಗಬಹುದಾದ ಫಲಗಳಿಂದ ಧೃತಿಗೆಡದಿರು; ಪ್ರಾರಬ್ಧದ ಕರ್ಮಫಲಗಳನ್ನು ಅನುಭವಿಸಿ ಕಳೆದುಕೋ; ಬ್ರಹ್ಮಾನುಭವದಲ್ಲಿ  ಸ್ಥಿತನಾಗಿರು. 

-ಕ.ವೆಂ.ನಾಗರಾಜ್.

ಮಂಗಳವಾರ, ಏಪ್ರಿಲ್ 23, 2013

ಜೀವಂತ ಇತಿಹಾಸದ ನೈಜ ಪ್ರತಿನಿಧಿ ಪಂ. ಸುಧಾಕರ ಚತುರ್ವೇದಿಯವರಿಗೆ 117ನೆಯ ವರ್ಷದ ಜನ್ಮದಿನದ ಶುಭ ಹಾರೈಕೆಗಳು



     ಮರ್ಯಾದಾ ಪುರುಷೋತ್ತಮ ಶ್ರೀರಾಮನ ಜನ್ಮದಿನದಂದೇ ಪ್ರಖರ ಸತ್ಯವಾದಿ, ನಂಬಿದ ಧ್ಯೇಯಕ್ಕಾಗಿ ಟೀಕೆ, ಟಿಪ್ಪಣಿಗಳಿಗೆ ಅಂಜದೆ ಹಿಡಿದ ಹಾದಿಯಲ್ಲಿಯೇ ಅಳುಕದೆ ಮುಂದುವರೆದು, ಸತ್ಯಪ್ರಸಾರ ಮಾಡುತ್ತಿರುವ ಕರ್ಮಯೋಗಿ, ಶತಾಯುಷಿ ಪಂಡಿತ ಸುಧಾಕರ ಚತುರ್ವೇದಿಯವರ ಜನ್ಮದಿನವೂ ಆಗಿರುವುದು ವಿಶೇಷವೇ ಸರಿ. ಈ ರಾಮನವಮಿಗೆ (19-04-2013) 116 ವಸಂತಗಳನ್ನು ಕಂಡು 117ನೆಯ ವರ್ಷಕ್ಕೆ ಕಾಲಿರಿಸಿರುವ ಅವರಿಗೆ ಶಿರಬಾಗಿ ಪ್ರಣಾಮಗಳನ್ನು ಸಲ್ಲಿಸುತ್ತಾ ಈ ಕೆಲವು ಸಾಲುಗಳನ್ನು ನಿಮ್ಮೊಡನೆ ಹಂಚಿಕೊಳ್ಳುತ್ತಿದ್ದೇನೆ. 
     ಪಂಡಿತ ಸುಧಾಕರ ಚತುರ್ವೇದಿಯವರ ಪೂರ್ವಿಕರು ತುಮಕೂರಿನ ಕ್ಯಾತ್ಸಂದ್ರದವರಾದರೂ ಇವರು ಹುಟ್ಟಿದ್ದು, ಬೆಳೆದಿದ್ದು ಎಲ್ಲಾ  ಬೆಂಗಳೂರಿನಲ್ಲಿಯೇ. ಶಿಕ್ಷಣ ಇಲಾಖೆಯಲ್ಲಿ ಇನ್ಸ್‌ಪೆಕ್ಟರ್ ಆಗಿದ್ದ ಶ್ರೀ ಟಿ.ವಿ. ಕೃಷ್ಣರಾವ್ ಮತ್ತು  ಶ್ರೀಮತಿ ಲಕ್ಷ್ಮಮ್ಮನವರ ಮಗನಾಗಿ 1897ರ ರಾಮನವಮಿಯಂದು ಬಳೇಪೇಟೆಯಲ್ಲಿದ್ದ ಮನೆಯಲ್ಲಿ ಜನಿಸಿದ ಇವರು ಸಂಪ್ರದಾಯಸ್ಥ ಬ್ರಾಹ್ಮಣ ಕುಟುಂಬಕ್ಕೆ ಸೇರಿದವರಾಗಿದ್ದರೂ ಅರ್ಥವಿಲ್ಲದ ಕುರುಡು ಸಂಪ್ರದಾಯಗಳನ್ನು ಒಪ್ಪದಿದ್ದವರು, ಸರಿ ಅನ್ನಿಸಿದ್ದನ್ನು ಮಾತ್ರ ಮಾಡಿದವರು. ನಾನು ಹಾಸನದವನೆಂದು ತಿಳಿದಾಗ, ಪಂಡಿತರು ತಮ್ಮ ತಂದೆ ಹಾಸನದ ಶಿಕ್ಷಣ ಇಲಾಖೆಯಲ್ಲೂ ಕೆಲಸ ನಿರ್ವಹಿಸಿದ್ದು ತಾವು 6-7 ವರ್ಷದವರಾಗಿದ್ದಾಗ -ಅಂದರೆ ಸುಮಾರು 110 ವರ್ಷಗಳ ಹಿಂದೆ-  ಹಾಸನದ ದೇವಿಗೆರೆ ಸಮೀಪದಲ್ಲಿ ಬಾಡಿಗೆ ಮನೆಯೊಂದರಲ್ಲಿ ಕೆಲವು ಸಮಯ ಇದ್ದೆವೆಂದು ನೆನಪಿಸಿಕೊಂಡಿದ್ದರು.  ಅಪ್ಪಟ ಕನ್ನಡಿಗರಾದ ಪಂ. ಸುಧಾಕರ ಚತುರ್ವೇದಿಯವರು ತಮ್ಮ 13ನೆಯ ವಯಸ್ಸಿನಲ್ಲಿಯೇ  ಉತ್ತರ ಭಾರತದ ಹರಿದ್ವಾರದ ಹತ್ತಿರದ ಕಾಂಗಡಿ ಗುರುಕುಲಕ್ಕೆ ಸೇರಿ ಉಪನಿಷತ್ತು, ವ್ಯಾಕರಣ, ಛಂದಸ್ಸು, ಗಣಿತ, ಜ್ಯೋತಿಷ್ಯ, ಷಡ್ದರ್ಶನಗಳು ಸೇರಿದಂತೆ ವೇದಾಧ್ಯಯನ ಮಾಡಿದವರು. ಮಹರ್ಷಿ ದಯಾನಂದ ಸರಸ್ವತಿಯವರ ವಿಚಾರಗಳಿಂದ ಪ್ರಭಾವಿತರಾಗಿದ್ದು, ಸ್ವಾಮಿ ಶ್ರದ್ಧಾನಂದರ ಪ್ರೀತಿಯ ಶಿಷ್ಯರಾಗಿ ಬೆಳೆದವರು. ನಾಲ್ಕೂ ವೇದಗಳನ್ನು ಅಧ್ಯಯಿಸಿದ ಅವರು ನಿಜ ಅರ್ಥದಲ್ಲಿ ಚತುರ್ವೇದಿಯಾಗಿ, 'ಚತುರ್ವೇದಿ' ಎಂಬ ಸಾರ್ಥಕ ಹೆಸರು ಗಳಿಸಿದವರು.  ಜಾತಿ ಭೇದ ತೊಲಗಿಸಲು ಸಕ್ರಿಯವಾಗಿ ತೊಡಗಿಕೊಂಡವರು. ನೂರಾರು ಅಂತರ್ಜಾತೀಯ ವಿವಾಹಗಳನ್ನು ಮುಂದೆ ನಿಂತು ಮಾಡಿಸಿದವರು ಮತ್ತು ಅದಕ್ಕಾಗಿ ಬಂದ ವಿರೋಧಗಳನ್ನು ಎದುರಿಸಿದವರು. ವೇದದಲ್ಲಿ ವರ್ಣವ್ಯವಸ್ಥೆಯಿದೆಯೇ ಹೊರತು, ಹುಟ್ಟಿನಿಂದ ಬರುವ ಜಾತಿಪದ್ಧತಿ ಇಲ್ಲವೆಂದು ಪ್ರತಿಪಾದಿಸಿದವರು, ಮನುಷ್ಯರೆಲ್ಲಾ ಒಂದೇ ಜಾತಿ, ಬೇಕಾದರೆ ಗಂಡು ಜಾತಿ, ಹೆಣ್ಣುಜಾತಿ ಅನ್ನಬಹುದು ಎಂದವರು. ಸಾಹಿತಿಯಾಗಿಯೂ ಸಹ ಅನೇಕ ಕೃತಿಗಳನ್ನು ಜನಹಿತವನ್ನು ಮನದಲ್ಲಿ ಇಟ್ಟುಕೊಂಡೇ ಕನ್ನಡ, ಸಂಸ್ಕೃತ, ಇಂಗ್ಲಿಷ್, ಹಿಂದಿ ಭಾಷೆಗಳಲ್ಲಿ ರಚಿಸಿದವರು. 
     ಸ್ವಾತಂತ್ರ್ಯ ಹೋರಾಟದಲ್ಲಿ ತಮ್ಮನ್ನು ಸಕ್ರಿಯರಾಗಿ ತೊಡಗಿಸಿಕೊಂಡಿದ್ದ ಅವರು ಗಾಂಧೀಜಿಯವರ ಒಡನಾಟ ಹೊಂದಿದವರಾಗಿದ್ದರು. ಪಂಡಿತರು ಇದ್ದ ಗುರುಕುಲಕ್ಕೆ ಗಾಂಧೀಜಿಯವರು ಭೇಟಿ ಕೊಟ್ಟಿದ್ದ ಸಂದರ್ಭದಲ್ಲಿ ಇವರು ಗಾಂಧೀಜಿಯವರಿಂದ ಪ್ರಭಾವಿತರಾಗಿದ್ದಂತೆ, ಗಾಂಧೀಜಿಯವರೂ ಇವರಿಂದ ಪ್ರಭಾವಿತರಾಗಿದ್ದರು. ಗಾಂಧೀಜಿಯವರ ಹತ್ಯೆಯಾಗುವವರೆಗೂ ಇವರಿಬ್ಬರ ಸ್ನೇಹ ಮುಂದುವರೆದಿತ್ತು.  ಕುಪ್ರಸಿದ್ಧ ಜಲಿಯನ್ ವಾಲಾಬಾಗ್ ಹತ್ಯಾಕಾಂಡದ ಸಾಕ್ಷಿಯಾಗಿದ್ದ ಅವರು ಗಾಂಧೀಜಿಯವರ ಸೂಚನೆಯಂತೆ ಅಲ್ಲಿ ಹತರಾಗಿದ್ದವರ ನೂರಾರು ಶವಗಳ ಸಾಮೂಹಿಕ ಶವಸಂಸ್ಕಾರ ಮಾಡಿದವರು. ಕ್ರಾಂತಿಕಾರಿ ಭಗತ್ ಸಿಂಗರಿಗೆ ಗುರುವೂ ಆಗಿದ್ದವರು. ತಾವು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಲು ಸ್ವಾಮಿ ಶ್ರದ್ಧಾನಂದರ ಪ್ರೋತ್ಸಾಹ ಕಾರಣವಾದರೂ ವೇದದ 'ಅಧೀನಾಃ ಸ್ಯಾಮ ಶರದಃ ಶತಂ, ಭೂಯಶ್ಚ ಶರದಃ ಶತಾತ್' - 'ನೂರು ವರ್ಷಕ್ಕೂ ಹೆಚ್ಚುಕಾಲ ಸ್ವಾತಂತ್ರ್ಯದಿಂದ ಬಾಳೋಣ' ಎಂಬ ಅರ್ಥದ ಸಾಲು ಸಂಗ್ರಾಮಕ್ಕೆ ಪ್ರೇರಿಸಿತ್ತು ಎಂದು ಹೇಳುತ್ತಾರೆ. ಭಾರತೀಯರನ್ನು ಕೀಳಾಗಿ ಕಾಣುತ್ತಿದ್ದ ಆಂಗ್ಲರ ನಡವಳಿಕೆ ಇವರ ಮತ್ತು ಇವರಂತಹ ಸಾವಿರಾರು ಜನರ ಸ್ವಾಭಿಮಾನವನ್ನು ಕೆಣಕಿ ಹೋರಾಟ ಕಾವು ಪಡೆದಿತ್ತು. ಹೋರಾಟ ಕಾಲದಲ್ಲಿ ಕೃಶ ಶರೀರದವರಾದರೂ ಇವರ ಮನೋಬಲ ಮತ್ತು ಛಲದಿಂದಾಗಿ ಅನೇಕ ಪ್ರಾಣಾಂತಿಕ ಪೆಟ್ಟುಗಳನ್ನು ಹಲವಾರು ಬಾರಿ ತಿಂದರೂ ಸಹಿಸಿ ಅರಗಿಸಿಕೊಂಡವರು. ದಂಡಿ ಉಪ್ಪಿನ ಸತ್ಯಾಗ್ರಹ, ಕ್ವಿಟ್ ಇಂಡಿಯಾ ಚಳುವಳಿ ಸೇರಿದಂತೆ ಅನೇಕ ಸತ್ಯಾಗ್ರಹಗಳಲ್ಲಿ ಸಕ್ರಿಯರಾಗಿ ಭಾಗವಹಿಸಿದ್ದವರು. ಸುಮಾರು 15 ವರ್ಷಗಳ ಕಾಲ ಸೆರೆವಾಸ ಅನುಭವಿಸಿದವರು. ಭಾರತ-ಪಾಕಿಸ್ತಾನದ ವಿಭಜನೆಯ ಕಾಲದ ಭೀಕರ ಮಾರಣಹೋಮವನ್ನು ಕಂಡ ನೆನಪು ಮಾಸದೆ ಇರುವವರು. ಒಟ್ಟಿನಲ್ಲಿ ಹೇಳಬೇಕೆಂದರೆ ಇವರು ನಮ್ಮೊಡನಿರುವ ಜೀವಂತ ಇತಿಹಾಸದ ನೈಜ ಪ್ರತಿನಿಧಿ.

     ವೇದ ಇವರ ಉಸಿರಾಗಿದೆ. ಸಾರ್ವಕಾಲಿಕ ಮೌಲ್ಯ ಸಾರುವ ವೇದಗಳ ಸಂದೇಶ ಸಾರುವುದೇ ಅವರ ಜೀವನ ಧ್ಯೇಯವಾಗಿದೆಯೆಂದರೆ ತಪ್ಪಿಲ್ಲ. ವೇದದ ಹೆಸರಿನಲ್ಲಿ ನಡೆಯುತ್ತಿರುವ ಅನೇಕ ಆಚರಣೆಗಳು ಅವೈದಿಕವಾಗಿರುವ ಬಗ್ಗೆ ಅಸಮಾಧಾನಿಯಾಗಿರುವ ಅವರು ಅಂತಹ ಆಚರಣೆಗಳನ್ನು ಖಂಡಿಸಿ ತಿಳುವಳಿಕೆ ನೀಡುವ ಕಾಯಕ ಮುಂದುವರೆಸಿದ್ದಾರೆ. 'ವೇದೋಕ್ತ ಜೀವನ ಪಥ'ವೆಂಬ ಕಿರು ಪುಸ್ತಕದಲ್ಲಿ ಜೀವನದ ಮೌಲ್ಯಗಳು, ಜೀವಾತ್ಮ, ಪರಮಾತ್ಮ, ಪ್ರಕೃತಿಗಳ ಸ್ವರೂಪ, ಮಾನವ ಧರ್ಮ, ಚತುರ್ವರ್ಣಗಳು, ಬ್ರಹ್ಮಚರ್ಯಾದಿ ಚತುರಾಶ್ರಮಗಳು, ದೈನಂದಿನ ಕರ್ಮಗಳು, ಷೋಡಶ ಸಂಸ್ಕಾರಗಳು, ರಾಜನೀತಿ, ಸಾಮಾಜಿಕ ಜೀವನ, ಚತುರ್ವಿಧ ಪುರುಷಾರ್ಥಗಳನ್ನು ವೇದದ ಹಿನ್ನೆಲೆಯಲ್ಲಿ ವಿಶ್ಲೇಷಿಸಿದ್ದು, ಅದರಂತೆ ನಡೆದದ್ದೇ ಆದಲ್ಲಿ ಜೀವನ ಸಾರ್ಥಕವಾಗುವುದು. 'ಅರವತ್ತಕ್ಕೆ ಅರಳು-ಮರಳು' ಎಂಬ ಪ್ರಚಲಿತ ಗಾದೆ ಮಾತಿಗೆ ವಿರುದ್ಧವಾಗಿ ಇಂದಿಗೂ 117 ವರ್ಷಗಳ ಪಂಡಿತರ ವೈಚಾರಿಕ ಪ್ರಖರತೆಯ ಹೊಳಪು ಮಾಸಿಲ್ಲ, ನೆನಪು ಕುಂದಿಲ್ಲ. ಇವರ ಜೀವನೋತ್ಸಾಹ ಬತ್ತದ ಚಿಲುಮೆಯಾಗಿದ್ದು ದೇಹ, ಮನಸ್ಸು, ಬುದ್ಧಿಗಳನ್ನು ಹಿಡಿತದಲ್ಲಿಟ್ಟುಕೊಂಡಿರುವುದೇ ಇದಕ್ಕೆ ಕಾರಣವಿರಬಹುದು. ಪ್ರಶಸ್ತಿ, ಸನ್ಮಾನಗಳಿಗಾಗಿ ಲಾಬಿ ನಡೆಸುವವರೇ ತುಂಬಿರುವ, ಅದಕ್ಕಾಗಿ ತಮ್ಮತನವನ್ನೇ ಮಾರಿಕೊಳ್ಳುವವರಿರುವ ಈ ದೇಶದಲ್ಲಿ ಪ್ರಚಾರದಿಂದ ದೂರವಿರುವ ಇವರು ನಿಜವಾದ ಭಾರತರತ್ನರೆಂದರೆ ತಪ್ಪಿಲ್ಲ. ಕಳೆದ ವರ್ಷದ ಕನ್ನಡ ರಾಜ್ಯೋತ್ಸವದಂದು ರಾಜ್ಯಸರ್ಕಾರ ಇವರನ್ನು ರಾಜ್ಯಪ್ರಶಸ್ತಿ ನೀಡಿ ಗೌರವಿಸಿದೆ. ಇಂತಹವರು ನಮ್ಮೊಡನೆ ಇರುವುದೇ ನಮ್ಮ ಸೌಭಾಗ್ಯ, ಪುಣ್ಯವೆನ್ನಬೇಕು. ಬೆಂಗಳೂರಿನ ಜಯನಗರದ 5ನೆಯ ಬ್ಲಾಕಿನ ಶ್ರೀ ಕೃಷ್ಣಸೇವಾಶ್ರಮ ರಸ್ತ್ರೆಯ ಮನೆ ನಂ. 286/ಸಿಯಲ್ಲಿ ವಾಸವಿರುವ ಇವರ ಮನೆಯಲ್ಲಿ ಪ್ರತಿ ಶನಿವಾರ ಸಾಯಂಕಾಲ 5.30ಕ್ಕೆ ಸರಿಯಾಗಿ ಸತ್ಸಂಗ ನಡೆಯುತ್ತಿದ್ದು, ಆಸಕ್ತರಿಗೆ ಮಾರ್ಗದರ್ಶನ ಮಾಡುತ್ತಿದ್ದಾರೆ. ಅವರ ವಿಚಾರಗಳನ್ನು ಒಪ್ಪಲೇಬೇಕೆಂದಿಲ್ಲ. ಎಲ್ಲವನ್ನೂ ಆಲೋಚಿಸಿ, ವಿಮರ್ಶಿಸಿಯೇ ಒಪ್ಪಬೇಕೆಂಬುದೇ ಅವರ ಆಗ್ರಹ. 
     ವೇದದ ಬೆಳಕಿನಲ್ಲಿ ಸತ್ಯ ವಿಚಾರಗಳನ್ನು ಪ್ರಸರಿಸುವ ಧ್ಯೇಯದಲ್ಲಿ ಅವಿರತ ತೊಡಗಿರುವ ಮಹಾನ್ ವ್ಯಕ್ತಿಯ ಮಾರ್ಗದರ್ಶನ ಹೀಗೆಯೇ ಮುಂದುವರೆಯುತ್ತಿರಲಿ ಎಂದು ಪ್ರಾರ್ಥಿಸೋಣ. ಕರ್ಮಯೋಗಿ ಸಾಧಕರಿಗೆ ಸಾಷ್ಟಾಂಗ ಪ್ರಣಾಮಗಳು.
-ಕ.ವೆಂ.ನಾಗರಾಜ್.

ಗುರುವಾರ, ಏಪ್ರಿಲ್ 18, 2013

ಬಾಲ ಸಂಸ್ಕಾರ ಶಿಬಿರ - ಒಂದು ಯಶಸ್ವೀ ಪ್ರಯೋಗ


     ವೇದಭಾರತೀ ಆಶ್ರಯದಲ್ಲಿ ಹಾಸನದಲ್ಲಿ ದಿನಾಂಕ 07-04-2013ರಿಂದ 17-04-2013ರವರೆಗೆ ನಡೆದ ಬಾಲ ಸಂಸ್ಕಾರ ಶಿಬಿರದ ಉದ್ದೇಶ ನಿರೀಕ್ಷೆಗೂ ಮೀರಿ ಯಶಸ್ವಿಯೆನಿಸಿತು. ಜಾತಿ, ಮತ, ಪಂಥ, ಲಿಂಗ, ವಯಸ್ಸಿನ ಭೇದವಿಲ್ಲದೆ ವೇದಾಭ್ಯಾಸದಲ್ಲಿ ತೊಡಗಿರುವ ವೇದಾಧ್ಯಾಯಿಗಳ ಸಂಘಟಿತ ಶ್ರಮ ಫಲ ನೀಡಿದೆ. ಮಕ್ಕಳಲ್ಲೂ ವೇದಾಧ್ಯಯನದ ಕಡೆಗೆ ಆಸಕ್ತಿ, ಅವರಲ್ಲಿ ದೇಶಭಕ್ತಿ, ಸಾಮಾಜಿಕ ಪ್ರಜ್ಞೆ ಜಾಗೃತಿಗೊಳಿಸುವುದರೊಂದಿಗೆ ಉತ್ತಮ ಸಂಸ್ಕಾರ ನೀಡಲು ಶಿಬಿರದಲ್ಲಿ ಒತ್ತು ನೀಡಲಾಯಿತು. ಕೇವಲ 40 ಮಕ್ಕಳಿಗೆ ಪ್ರವೇಶಾವಕಾಶ ಕೊಡಬೇಕೆಂದು ನಿರ್ಧರಿಸಿದ್ದರೂ, ಪೋಷಕರ ಒತ್ತಾಯಕ್ಕೆ ಮಣಿದು 80 ಮಕ್ಕಳನ್ನು ಶಿಬಿರಕ್ಕೆ ಸೇರಿಸಿಕೊಳ್ಳಬೇಕಾಯಿತು.
     ದೇಶಭಕ್ತರ, ಸಾಧು-ಸಂತರ, ಉತ್ತಮ ನೀತಿ ಸಾರುವ ಸುಭಾಷ ಚಂದ್ರ ಬೋಸ್, ಮದನ ಲಾಲ್ ಧಿಂಗ್ರಾ, ಶಿವಾಜಿ, ವಿವೇಕಾನಂದ, ಧ್ರುವ, ನಚಿಕೇತ ಮುಂತಾದವರ ಕಥೆಗಳನ್ನು ಹೇಳಲಾಯಿತು. ಪ್ರತಿನಿತ್ಯ ವಿವಿಧ ರೀತಿಯ ಆಟಗಳನ್ನು ಆಡಿಸಲಾಯಿತು. ದೇಶಭಕ್ತಿ ಗೀತೆಗಳನ್ನು ಹೇಳಿಕೊಡಲಾಯಿತು. ತಮ್ಮಲ್ಲಿನ ಪ್ರತಿಭೆಗಳನ್ನು ಮಕ್ಕಳು ಹಾಡು ಹೇಳುವ, ನೃತ್ಯ ಮಾಡುವ, ಏಕಪಾತ್ರಾಭಿನಯ ಮಾಡುವ, ಆಶುಭಾಷಣದಲ್ಲಿ ಭಾಗವಹಿಸುವ ಮೂಲಕ ವ್ಯಕ್ತಪಡಿಸಿದರು. ಚಿತ್ರಗಳನ್ನು ಬಿಡಿಸುವ ಮೂಲಕ ಮಕ್ಕಳು ತಮ್ಮ ಪ್ರತಿಭೆ ಮೆರೆದರು. ಕಾಗದದಿಂದ ಕರಕುಶಲಕಲೆಗಳನ್ನು ಅವರಿಂದ ಮಾಡಿಸಲಾಯಿತು. ಅಂತ್ಯಾಕ್ಷರಿ, ಹಾಡು, ಭಜನೆ, ಸಂವಾದಗಳಲ್ಲೂ ಅವರನ್ನು ತೊಡಗಿಸಲಾಯಿತು. ಇಷ್ಟೆಲ್ಲಾ ಆಸಕ್ತಿಕರ ಚಟುವಟಿಕೆಗಳಲ್ಲಿ ಅವರನ್ನು ತೊಡಗಿಸಿ ಪ್ರತಿನಿತ್ಯ ಸುಮಾರು ಒಂದು ಗಂಟೆಯ ಕಾಲ ಅವರಿಗೆ ಸರಳ ವೇದ ಮಂತ್ರಗಳನ್ನು ವೇದಾಧ್ಯಾಯಿಗಳಾದ ಶ್ರೀಯುತ ಅನಂತನಾರಾಯಣ, ಪ್ರಸಾದ್ ಮತ್ತು ವಿಶ್ವನಾಥ ಶರ್ಮರವರು ಅರ್ಥಸಹಿತ ಹೇಳಿಕೊಟ್ಟರು.  ಸುಮಾರು 25 ಮಂತ್ರಗಳನ್ನು ಕಲಿತ ಮಕ್ಕಳು ಸಮಾರೋಪ ದಿನದಂದು ಸಾಮೂಹಿಕವಾಗಿ ವೇದಮಂತ್ರಗಳನ್ನು ಸ್ವರಸಹಿತ ಹೇಳಿದಾಗ ಪೋಷಕರು, ಕಾರ್ಯಕ್ರಮದಲ್ಲಿ ಹಾಜರಿದ್ದವರು ಬೆರಗಾಗಿದ್ದರು.
     14-04-2013ರಂದು ಮಕ್ಕಳು ತಮ್ಮ ತಾಯಿ-ತಂದೆ, ಪೋಷಕರನ್ನು ನಮಸ್ಕರಿಸಿ ಗೌರವಿಸುವ ಮತ್ತು ಭಾರತಮಾತೆಯ ಪೂಜೆ ಮಾಡುವ ವಿಶೇಷ ಕಾರ್ಯಕ್ರಮ ಜೋಡಿಸಲಾಗಿತ್ತು. ಇದು ಮಕ್ಕಳ, ಪೋಷಕರ ಮತ್ತು ಕಾರ್ಯಕ್ರಮ ವೀಕ್ಷಿಸಿದವರ ಮೇಲೆ ಉತ್ತಮ ಪ್ರಭಾವ ಬೀರಿತು. ಪತ್ರಿಕೆಗಳು, ದೃಷ್ಯಮಾಧ್ಯಮಗಳಲ್ಲಿ ಪ್ರಶಂಸೆ ವ್ಯಕ್ತವಾಯಿತು. ಸಮಾರೋಪ ದಿನದಂದು ಮಕ್ಕಳು ಮತ್ತು ಅವರ ಪೋಷಕರು ವ್ಯಕ್ತಪಡಿಸಿದ ಅನಿಸಿಕೆಗಳು ಶಿಬಿರದ ಯಶಸ್ಸಿಗೆ ಕನ್ನಡಿಯಾಗಿತ್ತು. ಉದ್ಘಾಟನೆಯ ದಿನ, ಮಾತೃವಂದನಾ ಕಾರ್ಯಕ್ರಮದ ದಿನ ಮತ್ತು ಸಮಾರೋಪದ ದಿನಗಳಂದು ಪೋಷಕರನ್ನೂ ಆಹ್ವಾನಿಸಿ ಮಕ್ಕಳನ್ನು ಸುಸಂಸ್ಕಾರದಿಂದ ಬೆಳೆಸುವ ಹೊಣೆಗಾರಿಕೆ ಕುರಿತು ಹಾಗೂ ಮನೆಯೇ ಮೂಲತಃ ಸಂಸ್ಕಾರಗಳನ್ನು ಪೋಷಿಸುವ ಕೇಂದ್ರಗಳಾಗಬೇಕಾದ ಅಗತ್ಯತೆ ಕುರಿತು ಅವರ ಗಮನ ಸೆಳೆಯಲಾಯಿತು. 40 ಮಕ್ಕಳೂ ಸೇರಿದಂತೆ ಸುಮಾರು 80-100 ಪೋಷಕರೂ ಸಹ ವೇದಭಾರತೀ ವತಿಯಿಂದ ನಡೆಸಲಾಗುತ್ತಿರುವ ನಿತ್ಯ ವೇದಾಭ್ಯಾಸ ಕಾರ್ಯಕ್ರಮಕ್ಕೆ ಇನ್ನು ಮುಂದೆ ಬರುವುದಾಗಿ ನಿರ್ಧರಿಸಿ ತಿಳಿಸಿದ್ದು ವಿಶೇಷ. ಉತ್ತಮ ರೀತಿಯಲ್ಲಿ ಶಿಬಿರ ಯಶಸ್ವಿಯಾಗಿ ಸಂಪನ್ನಗೊಳ್ಳಲು ಶ್ರೀ ಹರಿಹರಪುರ ಶ್ರೀಧರ ಮತ್ತು ಶ್ರೀ ಕ.ವೆಂ.ನಾಗರಾಜರ ಮಾರ್ಗದರ್ಶನದಲ್ಲಿ ಉತ್ತಮ ಸಹಕಾರ ನೀಡಿದ ವೇದಭಾರತಿಯ ಎಲ್ಲಾ ವೇದಾಭ್ಯಾಸಿಗಳೂ, ಸಂಪನ್ಮೂಲ ವ್ಯಕ್ತಿಗಳಾಗಿ ಸಹಕರಿಸಿದ ಎಲ್ಲಾ ಮಿತ್ರರುಗಳೂ ಕಾರಣರಾಗಿದ್ದು, ಅವರೆಲ್ಲರೂ ಅಭಿನಂದನಾರ್ಹರಾಗಿದ್ದಾರೆ.
     ಶಿಬಿರದ ಕೆಲವು ದೃಷ್ಯಗಳು:

ಶಿಬಿರಾರ್ಥಿಗಳು
ದೇಶಭಕ್ತಿ ಗೀತೆಗಳ ಕಲಿಕೆ
 ಮೊಳಗಿತು ಓಂಕಾರ - ವೇದಾಧ್ಯಾಯಿಗಳ ಮಾರ್ಗದರ್ಶನದಲ್ಲಿ
  ಸಹಕಾರಿಗಳು, ಸಂಪನ್ಮೂಲ ವ್ಯಕ್ತಿಗಳು - ಇವರಷ್ಟೇ ಅಲ್ಲ!
 ತಾಯಿ-ತಂದೆ, ಪೋಷಕರಿಗೆ ಗೌರವಾರ್ಪಣೆ

 ಪೋಷಕರು
 ಭಾರತ ಮಾತೆಗೆ ನಮನ

 ಶಿಬಿರಾರ್ಥಿಗಳ, ಪೋಷಕರ ಅನಿಸಿಕೆ
 ಒಂದು ಚಮತ್ಕಾರ ಪ್ರದರ್ಶನ - ಶಿಬಿರಾರ್ಥಿಗಳಿಂದ
 ಅಗ್ನಿಹೋತ್ರ -  ಪ್ರಾತ್ಯಕ್ಷಿಕೆ
 ನಿತ್ಯ ಮಕ್ಕಳಿಗೆ ಉಪಾಹಾರ, ಪಾನೀಯ ವಿತರಣೆ

ಹರಿಹರಪುರ ಶ್ರೀಧರರ ಸಾಂದರ್ಭಿಕ ನುಡಿ, ವೇದಿಕೆಯಲ್ಲಿ ಕವಿನಾಗರಾಜ್, 
ಸಿ.ಎಸ್.ಕೃಷ್ಣಸ್ವಾಮಿ ಮತ್ತು ಡಾ. ವಾಮನರಾವ್ ಬಾಪಟ್.


ಬುಧವಾರ, ಫೆಬ್ರವರಿ 6, 2013

ದೂರವಾಣಿ ಮೂಲಕ ವೇದ ಮಂತ್ರ ಕಲಿಕೆ

ದೂರವಾಣಿ ಮೂಲಕ ಹಾಸನದ ತಾತನಿಂದ ಕಲಿತ ವೇದ ಮಂತ್ರಗಳನ್ನು ಹೇಳುತ್ತಿರುವ ಮೊಮ್ಮಗಳು ಅಕ್ಷಯ:



-ಬಿಂದು ರಾಘವೇಂದ್ರ, ಬೆಂಗಳೂರು.

ಶನಿವಾರ, ಜನವರಿ 19, 2013

ದೇಶ ಮತ್ತು ಧರ್ಮರಕ್ಷಕ ವಿದ್ಯಾರಣ್ಯ



     ಕಲಿಕೆಯ ಕೊನೆಯ ಹಂತದಲ್ಲಿದ್ದಾಗ ಗುರು ವಿದ್ಯಾತೀರ್ಥರು ಇತರ ಶಿಷ್ಯರಿಗೆ ಕೇಳಿದಂತೆ ಪ್ರಿಯ ಶಿಷ್ಯ ಮಾಧವನಿಗೂ ಕೇಳಿದರು:
"ಮಾಧವ, ನೀನು ಮುಂದೆ ಏನಾಗಬೇಕೆಂದಿರುವೆ?"
ಮಾಧವ ಉತ್ತರಿಸಿದ್ದ:
"ಗುರುಗಳೇ, ಮನುಷ್ಯನಲ್ಲಿ ನಾನು ಎಂಬ ಅಹಮಿಕೆ ಇರುವವರೆಗೆ, ಏನನ್ನಾದರೂ ಸಾಧಿಸುವುದು ಕಷ್ಟ. ದೇವರ ಇಚ್ಛೆ ಇದ್ದರೆ, ಕಾಣುವ ದೇವರಾದ ಮನುಕುಲದ ಸೇವೆಗಾಗಿ, ಮೌಢ್ಯದ ಕಾರಣದಿಂದ ಮಲಗಿರುವ ದೇಶದ ಜಾಗೃತಿಗಾಗಿ ನನ್ನ ಜೀವನವನ್ನು ಉಪಯೋಗಿಸುವೆ. ನನ್ನ ದೇಶ ಮತ್ತು ಧರ್ಮದ ರಕ್ಷಣೆಗಾಗಿ, ದೇಶದ ಸ್ವಾತಂತ್ರ್ಯಕ್ಕಾಗಿ ನನ್ನ ಜೀವನ ಮುಡುಪಿಡಬೇಕೆಂದಿದ್ದೇನೆ."
ಈ ಉತ್ತರದಿಂದ ಆನಂದಿತರಾದ ಗುರುಗಳು ಅವನನ್ನು ಆಲಂಗಿಸಿಕೊಂಡು, 
"ಮಗು, ಇತರರ ಒಳಿತಿಗೆ ಕೆಲಸ ಮಾಡುವುದು, ದೇಶ, ಧರ್ಮ, ಸ್ವಾತಂತ್ರ್ಯದ ಸಲುವಾಗಿ ಜೀವನ ಮೀಸಲಿಡುವುದು ಪವಿತ್ರವಾದುದು. ನಿನ್ನ ಆದರ್ಶದ ಪಾಲನೆಯಲ್ಲಿ ಯಶಸ್ವಿಯಾಗು. ನಿನ್ನ ಸೇವೆಯಿಂದ ಜಗತ್ತಿಗೆ ಒಳಿತಾಗಲಿ" ಎಂದು ಹೃತ್ಪೂರ್ವಕವಾಗಿ ಆಶೀರ್ವದಿಸಿದರು.
     ಆ ಮಾಧವನೇ ಮುಂದೆ ವಿದ್ಯಾರಣ್ಯರೆಂಬ ಹೆಸರಿನಿಂದ ಪ್ರಸಿದ್ಧನಾಗಿ ವಿಜಯನಗರ ಸಂಸ್ಥಾನದ ಸ್ಥಾಪಕನೆನಿಸಿದ್ದು ಈಗ ಇತಿಹಾಸ. ಮಾಧವನ ಈ ನಿರ್ಧಾರಕ್ಕೆ ದೇಶದ ಅಂದಿನ ಸ್ಥಿತಿ ಗತಿಗಳೇ ಪ್ರಮುಖ ಕಾರಣವಾಗಿದ್ದಿರಬಹುದು. ಪಂಪಾಕ್ಷೇತ್ರದಲ್ಲಿ (ಈಗಿನ ಹಂಪೆ) ಮಾಯನಾಚಾರ್ಯ ಮತ್ತು ಶ್ರೀಮತೀದೇವಿಯವರ ಪುತ್ರನಾಗಿ ಕ್ರಿ.ಶ. ೧೨೬೮ರ ಸುಮಾರಿಗೆ ಜನಿಸಿದ ಮಾಧವನಿಗೆ, ಸಾಯಣ, ಭೋಗನಾಥ ಎಂಬ ತಮ್ಮಂದಿರು ಮತ್ತು ಸಿಂಗಲಾ ಎಂಬ ತಂಗಿಯೂ ಇದ್ದರು. ತುಂಗಭದ್ರಾ ತೀರದಲ್ಲಿದ್ದ ಶಂಕರಾನಂದ ಎಂಬ ಗುರುಗಳಲ್ಲಿ ಹಲವು ವರ್ಷಗಳ ಕಾಲ ಮಾಧವ, ಸಾಯಣ ಮತ್ತು ಭೋಗನಾಥರು ಶ್ರದ್ಧೆಯಿಂದ ವಿದ್ಯಾಭ್ಯಾಸ ಮಾಡಿದರು. ಶಂಕರಾನಂದರು ನಂತರ ಅವರನ್ನು ಉದ್ದೇಶಿಸಿ, "ಮಕ್ಕಳೇ, ನಾನು ಕಲಿಸಿದ್ದ ಎಲ್ಲವನ್ನೂ ನೀವು ಶ್ರದ್ಧೆಯಿಂದ ಕಲಿತಿರುವಿರಿ. ಇನ್ನು ನೀವು ಕಾಂಚಿಯಲ್ಲಿರುವ ನನ್ನ ಗುರುಗಳಾದ ಶ್ರೀ ವಿದ್ಯಾತೀರ್ಥರಲ್ಲಿ ವಿದ್ಯಾಭ್ಯಾಸ ಮುಂದುವರೆಸಿರಿ" ಎಂದು ಹೇಳಿ ಅವರನ್ನು ಶಿಷ್ಯರನ್ನಾಗಿ ಸ್ವೀಕರಿಸಲು ಕೋರಿ ಗುರುಗಳಿಗೆ ಪತ್ರ ಬರೆದು ಕೊಟ್ಟರು. 
     ಆ ಸಮಯದಲ್ಲಿ ಪಲ್ಲವರ ರಾಜಧಾನಿಯಾಗಿದ್ದ ಕಾಂಚಿಯು ದ್ವೈತ, ಅದ್ವೈತ ಮತ್ತು ವಿಶಿಷ್ಟಾದ್ವೈತ ತತ್ವಗಳನ್ನು ಕಲಿಸುವ ಪ್ರಸಿದ್ಧ ಕ್ಷೇತ್ರವಾಗಿತ್ತು. ವಿದ್ಯಾತೀರ್ಥರ ವಿಶ್ವಾಸ ಗಳಿಸುವಲ್ಲಿ ಮತ್ತು ಅವರನ್ನು ಗುರುವಾಗಿ ಹೊಂದುವಲ್ಲಿ ಮಾಧವ ಅದೃಷ್ಟಶಾಲಿಯಾಗಿದ್ದ. ಶಂಕರಾನಂದ, ಭಾರತೀಕೃಷ್ಣ, ಶ್ರೀಕಂಠನಾಥ, ಮೊದಲಾದ ಗುರುಗಳಿಂದಲೂ ಪಡೆದ ಮಾರ್ಗದರ್ಶನ ಅವನ ಮುಂದಿನ ನಿರ್ಧಾರ ರೂಪಿಸುವಲ್ಲಿ ಪಾತ್ರವಹಿಸಿತ್ತು. ದೇಶಪ್ರೇಮ, ಧೃಢತೆ, ಸೇವಾಮನೋಭಾವ, ಪರಧರ್ಮ ಸಹಿಷ್ಣುತೆ, ಸಮಯೋಚಿತ ನಿರ್ಧಾರ ಕೈಗೊಳ್ಳುವ ಶಕ್ತಿ, ತಾಳ್ಮೆ, ಪ್ರಚಲಿತ ವಿದ್ಯಮಾನಗಳ ಅರಿವು, ಜಗತ್ತಿನ ಒಳಿತಿಗೆ ಕೆಲಸ ಮಾಡುವ ಮನಸ್ಸುಗಳು ಆ ವೇಳೆಗಾಗಲೇ ಮಾಧವನಲ್ಲಿ ರಕ್ತಗತವಾಗಿದ್ದವು. ಇತರರಂತೆ ಕೇವಲ ವಿದ್ಯಾಭ್ಯಾಸ, ಮದುವೆ, ಸಾಮಾನ್ಯ ಜೀವನ ಸಾಗಿಸುವುದಕ್ಕೆ ಮಾತ್ರ ತಾನು ಹುಟ್ಟಿಲ್ಲವೆಂದು, ತಾನು ಸಾಧಿಸಬೇಕಾದುದು ಇನ್ನೂ ಹೆಚ್ಚಿನದೆಂದು ಅವನ ಒಳ ಮನಸ್ಸು ಹೇಳುತ್ತಿತ್ತು. ವೇದ, ಉಪನಿಷತ್ತುಗಳು, ತತ್ವಕಲೆ, ಸಾಹಿತ್ಯಗಳಲ್ಲಿ ಪ್ರಾವೀಣ್ಯತೆ ಪಡೆದ ಮಾಧವನೊಡನೆ ಗುರು ವಿದ್ಯಾತೀರ್ಥರು ಕೇಳಿದ್ದ ಪ್ರಶ್ನೆಯೇ ಲೇಖನದ ಪ್ರಾರಂಭದಲ್ಲಿ ಉಲ್ಲೇಖಿಸಿರುವ, "ಮಾಧವ, ನೀನು ಮುಂದೆ ಏನಾಗಬೇಕೆಂದಿರುವೆ?" ಎಂಬುದು! 'ಕನ್ನಡ ನೆಲದಲ್ಲಿ ತಾಯಿ ಭುವನೇಶ್ವರಿಯ ಕೃಪೆಯಿಂದ ಒಂದು ರಾಜ್ಯಸ್ಥಾಪನೆ ಮಾಡಿ ದಾಳಿಕೋರರನ್ನು ಓಡಿಸಬೇಕು, ಹಿಂದೂ ಧರ್ಮ ಮತ್ತು ಸಂಸ್ಕೃತಿಗೆ ಇರುವ ಅಪಾಯಗಳನ್ನು ನಿಗ್ರಹಿಸಬೇಕು. ಅದಕ್ಕಾಗಿ ಭುವನೇಶ್ವರಿಯನ್ನು ಕುರಿತು ತಪಸ್ಸು ಮಾಡಬೇಕು' ಎಂದು ಮನದೊಳಗೆ ಹುದುಗಿದ್ದ ಭಾವನೆಯನ್ನು ಗುರುಗಳ ಮುಂದೆ ವ್ಯಕ್ತಪಡಿಸಿದಾಗ ಗುರುಗಳು, "ನೀನು ಸಾಮಾನ್ಯನಲ್ಲಪ್ಪ. ನೀನು ಹುಟ್ಟಿರುವುದೇ ಸಾಧನೆ ಮಾಡುವ ಸಲುವಾಗಿ. ನೀನು ಈ ದೇಶ ಮತ್ತು ಧರ್ಮವನ್ನು ರಕ್ಷಿಸುತ್ತೀಯೆ" ಎಂದು ಮನತುಂಬಿ ಹೇಳಿದರು. 
     ಕಾಂಚಿಗೆ ಹೊರಟಿದ್ದ ಸಮಯದಲ್ಲೇ ಮಾಧವನ ತಂದೆ ಮಾಯನಾಚಾರ್ಯ ಸ್ವರ್ಗವಾಸಿಯಾಗಿದ್ದರು, ವಿದ್ಯಾಭ್ಯಾಸದ ನಂತರ ಪಂಪಾಕ್ಷೇತ್ರಕ್ಕೆ ವಾಪಸು ಬಂದ ಮಾಧವ ತನ್ನ ತಾಯಿ ಮತ್ತು ತಂಗಿಯನ್ನು ಸಲಹುವ ಜವಾಬ್ದಾರಿ ವಹಿಸಿಕೊಂಡು, ಅದಕ್ಕಾಗಿ ಪೌರೋಹಿತ್ಯವನ್ನು ಆಶ್ರಯಿಸಿದ. ತಂಗಿಯ ಮದುವೆ ನೆರವೇರಿಸಿದ. ವೀತಿಹೋತ್ರಿಯ ಮಗಳು ವೈತಿಹೋತ್ರಿಯೊಡನೆ ಅವನ ವಿವಾಹವಾತು. ಈ ರೀತಿಯ ಜೀವನದಲ್ಲಿ ಅವನಿಗೆ ಸಮಾಧಾನವಿರಲಿಲ್ಲ. ಗುರುಗಳೊಡನೆ ತಾನು ಹೇಳಿದ್ದ ಮಾತುಗಳು ಅವನನ್ನು ಸದಾ ಎಚ್ಚರಿಸುತ್ತಿದ್ದವು. ಆ ಸಮಯದಲ್ಲಿ ಶ್ರೀರಂಗಮ್ ಮೇಲೆ ದಾಳಿ ಮಾಡಿದ ಡೆಲ್ಲಿ ಸುಲ್ತಾನನ ದಳಪತಿ ಮಲ್ಲಿಕ್ ಕಾಫರ್ ಅಲ್ಲಿ ನಡೆಸಿದ ಭೀಭತ್ಸ ಅತ್ಯಾಚಾರ, ಕೊಲೆಗಳು, ಲೂಟಿ, ದೇವರ ವಿಗ್ರಹಗಳ ಧ್ವಂಸ ಕಾರ್ಯ ಮಾಧವನ ನಿರ್ಧಾರವನ್ನು ಮತ್ತಷ್ಟು ಗಟ್ಟಿಗೊಳಿಸಿತು. ಅಲ್ಲಿನ ಜನರು ಕೇವಲ ಕೆಲವು ದಿನ ಶಪಿಸಿ ಸುಮ್ಮನಾಗಿದ್ದಲ್ಲದೆ, ನಂತರದಲ್ಲಿ ಏನೂ ಆಗಿಲ್ಲವೆಂಬಂತೆ ದೈನಂದಿನ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದರು. ಪ್ರತಿಭಟಿಸಬೇಕೆಂಬ ಮನೋಭಾವವೇ ಅವರಲ್ಲಿ ಇರುತ್ತಿರಲಿಲ್ಲ. ಆಳುವವರೂ ಸಹ ಸ್ವಾರ್ಥಪ್ರೇರಿತರಾಗಿ, ಸ್ವಾಭಿಮಾನರಹಿತರಾಗಿದ್ದರು. ಜನರನ್ನು ಜಾಗೃತಿಗೊಳಿಸುವ ಕೆಲಸ ಅತ್ಯಂತ ಮಹತ್ವದ್ದೆಂದು ಮಾಧವನಿಗೆ ಅರಿವಾಯಿತು.  ಬಹುಷಃ ಅದೇ ಮನೋಭಾವ ಇಂದಿಗೂ ನಮ್ಮ ಜನರಲ್ಲಿ ಕಂಡು ಬರುತ್ತಿದೆ. ಉಗ್ರಗಾಮಿಗಳಿಂದ ಭಯೋತ್ಪಾದಕ ಚಟುವಟಿಕೆಗಳು ನಡೆದಾಗ ಕೆಲವು ಪ್ರತಿಭಟನಾತ್ಮಕ ಹೇಳಿಕೆಗಳನ್ನು ನೀಡಿ, ನಂತರದಲ್ಲಿ ಮರೆತೇ ಬಿಡುವ ಸ್ವಭಾವ ಕಂಡುಬರುತ್ತಿಲ್ಲವೇ?
     ದಕ್ಷಿಣ ಭಾರತದಲ್ಲಿ ಆಗ ಪರಿಸ್ಥಿತಿ ಕೆಟ್ಟದ್ದಾಗಿತ್ತು. ಜನರು ನರಸತ್ತವರಂತಿದ್ದರು. ದಾಳಿಕೋರರು ಎಗ್ಗಿಲ್ಲದೆ ಲೂಟಿ, ಆಕ್ರಮಣ, ಕೊಲೆ, ಅತ್ಯಾಚಾರ, ವಿಗ್ರಹಭಂಜನಗಳಲ್ಲಿ ತೊಡಗಿದ್ದರು. ಪ್ರತಿಭಟನೆ ಅತ್ಯಂತ ಕ್ಷೀಣ ಸ್ತರದಲ್ಲಿತ್ತು. ಬೆಂದ ಮನೆಯಲ್ಲಿ ಗಳ ಹಿರಿಯುವ ಮನೋಭಾವದವರಿಂದಾಗಿ ರಾಜಸತ್ತೆಗಳು ದುರ್ಬಲವಾಗಿದ್ದವು. ಇದ್ದಿದ್ದರಲ್ಲಿ ಕರ್ನಾಟಕದವರು ಪ್ರತಿರೋಧ ಒಡ್ಡಿದ್ದರು. ಒಂದು ಕಾಲದಲ್ಲಿ ಗಂಗರು, ರಾಷ್ಟ್ರಕೂಟರು, ಚಾಲುಕ್ಯರು, ಕದಂಬರು, ಹೊಯ್ಸಳರು ತಮ್ಮ ರಾಜ್ಯವನ್ನು ದಕ್ಷಿಣ ಭಾರತದಾದ್ಯಂತ ವಿಸ್ತರಿಸಿ ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಪಸರಿಸಿದ್ದರು. ಹೊಸ ರಾಜ್ಯ ಸ್ಥಾಪಿಸುವ ಮಾಧವನ ಕನಸಿಗೆ ಬೆಂಬಲಿಸುವ ಜನರ ಕೊರತೆ, ಸಂಪತ್ತಿನ ಕೊರತೆ ಇತ್ತು. ಸ್ಫೂರ್ತಿ ನೀಡುವ ಕೆಲಸಕ್ಕೆ ಜನರಿಂದ ಸೂಕ್ತ ಪ್ರತಿಕ್ರಿಯೆ ಸಿಗಲಿಲ್ಲ. ಅವರು ಹೇಳುವುದನ್ನು ಕೇಳಿಸಿಕೊಂಡು, ಅದು ತಮ್ಮ ಕೆಲಸವಲ್ಲವೆಂಬಂತೆ ಸುಮ್ಮನಾಗುತ್ತಿದ್ದರಷ್ಟೆ. ಆದರೆ ಮಾಧವ ನಿರಾಶನಾಗಲಿಲ್ಲ. ಗುರಿ ಸಾಧನೆಗಾಗಿ ಬಲ ಕ್ರೋಢೀಕರಿಸಲು ತಪಸ್ಸು ಮಾಡಬೇಕೆಂದುಕೊಂಡು, ಸೂಕ್ತ ಸ್ಥಳದ ಆಯ್ಕೆಗಾಗಿ ದೇಶದ ಹಲವೆಡೆ ಸುತ್ತಿ ಕೊನೆಗೆ ಪಂಪಾಕ್ಷೇತ್ರಕ್ಕೇ ವಾಪಸು ಬಂದ. ಈ ವೇಳೆಗೆ ಪತ್ನಿ ವೈತಿಹೋತ್ರಿ ಸಹ ನಿಧನಳಾದದ್ದು, ವಿಧಿಯೇ ಅವನನ್ನು ಪ್ರಾಪಂಚಿಕ ಸಂಗತಿಗಳಿಂದ ದೂರ ಮಾಡಿದಂತಾಗಿತ್ತು. ಪಂಪಾಕ್ಷೇತ್ರದ ವಿರೂಪಾಕ್ಷ ದೇವರಿಗೆ ಪೂಜೆ ಸಲ್ಲಿಸಿ, ಹೇಮಕೂಟದಲ್ಲಿ ತಪಸ್ಸಿಗೆ ತೊಡಗಿದ. ಆಹಾರದ ಪರಿವೆಯಿಲ್ಲದಂತೆ ನಡೆಸಿದ ತಪಸ್ಸಿನ ಫಲವಾಗಿ ತಾಯಿ ಭುವನೇಶ್ವರಿಯ ಅಭಯ ಸಿಕ್ಕಿತು. ಅಂತರಂಗಕ್ಕೆ ದೊರೆತ ಆದೇಶದಂತೆ ಸಂನ್ಯಾಸಿಯಾಗಲು ನಿರ್ಧರಿಸಿದ ಮಾಧವ ಶೃಂಗೇರಿಯ ೧೧ನೆಯ ಗುರುಗಳಾದ ಶ್ರೀ ಭಾರತೀಕೃಷ್ಣ ತೀರ್ಥರಿಂದ ದೀಕ್ಷೆ ಪಡೆದು ವಿದ್ಯಾರಣ್ಯರೆಂಬ ಹೆಸರು ಪಡೆದು ಕಾಷಾಯ ವಸ್ತ್ರಧಾರಿಯಾದರು. ನಂತರದಲ್ಲಿ ಪಂಪಾಕ್ಷೇತ್ರದಲ್ಲಿ ಪ್ರತಿನಿತ್ಯ ವಿರೂಪಾಕ್ಷನನ್ನು ಆರಾಧಿಸುತ್ತಾ ತಮ್ಮ ಕನಸು ನನಸು ಮಾಡಬಲ್ಲ ವ್ಯಕ್ತಿಗಳಿಗೆ ನಿರೀಕ್ಷಿಸುತ್ತಾ ದಿನ ಕಳೆಯುತ್ತಿದ್ದರು. ಒಂದೊಂದು ದಿನ ಕಳೆದಾಗಲೂ, 'ಇಂದಿನ ದಿನ ವ್ಯರ್ಥವಾಯಿತಲ್ಲಾ' ಎಂದು ಕೊರಗುತ್ತಿದ್ದರು. 
   ಕೊನೆಗೊಮ್ಮೆ ನಿರೀಕ್ಷಿತ ಘಳಿಗೆ ಬಂದೇಬಿಟ್ಟಿತು. ಹರಿಹರ ಮತ್ತು ಬುಕ್ಕರೆಂಬ ಇಬ್ಬರು ಸೋದರರು ವಿದ್ಯಾರಣ್ಯರಲ್ಲಿ ರಕ್ಷಣೆ ಬಯಸಿಬಂದರು. ಕಮ್ಮಟದುರ್ಗದ ಅರಸ ಕಂಪಿಲರಾಯನ ಅಳಿಯನೂ, ಸಂಸ್ಥಾನದ ಕೋಶಾಧಿಕಾರಿಯೂ ಆಗಿದ್ದ ಸಂಗಮದೇವನ ಮಕ್ಕಳೇ ಆ ಹರಿಹರ ಮತ್ತು ಬುಕ್ಕರು. ಮಹಮದ್ ಬಿನ್ ತುಘಲಕ್ ರಾಜ್ಯವನ್ನು ಆಕ್ರಮಿಸಿ ಅಲ್ಲಿನ ನಿವಾಸಿಗಳನ್ನು ನಿರ್ದಯವಾಗಿ ಮತ್ತು ಬರ್ಬರವಾಗಿ ಹತ್ಯೆಗೈದು, ಅರಸೊತ್ತಿಗೆಯಲ್ಲಿ ಉಳಿದ ಹರಿಹರ, ಬುಕ್ಕರೂ ಸೇರಿದಂತೆ ಹನ್ನೊಂದು ಜನರನ್ನು ಸೆರೆ ಹಿಡಿದು ಡೆಲ್ಲಿಗೆ ಕರೆದೊಯ್ದು ಸೆರೆಮನೆಯಲ್ಲಿರಿಸಿದ್ದ. ತುಘಲಕನ ಹುಚ್ಚು ದರ್ಬಾರಿನಿಂದ ಅವನ ರಾಜ್ಯದಲ್ಲಿ ಅರಾಜಕತೆಯುಂಟಾದಾಗ ಸೆರೆಮನೆಯಲ್ಲಿದ್ದ ಯುವಕರನ್ನು ಬಿಡುಗಡೆಗೊಳಿಸಿ ತನ್ನ ಸೈನ್ಯಕ್ಕೆ ಸೇರಿಸಿಕೊಂಡು, ದಕ್ಷಿಣ ಭಾಗದಲ್ಲಿ ಮೂಡಿದ್ದ ಅಶಾಂತಿಯನ್ನು ಶಮನಗೊಳಿಸುವ ಪ್ರಯತ್ನವಾಗಿ ಸೈನ್ಯದೊಂದಿಗೆ ದಕ್ಷಿಣಕ್ಕೆ ಕಳಿಸಿದ ಸಂದರ್ಭವನ್ನು ಉಪಯೋಗಿಸಿಕೊಂಡು, ಹರಿಹರ ಮತ್ತು ಬುಕ್ಕರು ತಪ್ಪಿಸಿಕೊಂಡು ವಿದ್ಯಾರಣ್ಯರಲ್ಲಿ ರಕ್ಷಣೆ ಬಯಸಿ ಬಂದಿದ್ದರು. ಹರಿಹರ, ಬುಕ್ಕರನ್ನು ಇಸ್ಲಾಮ್ ಮತಕ್ಕೆ ಮತಾಂತರಿಸಲಾಗಿತ್ತಂದೂ, ವಿದ್ಯಾರಣ್ಯರು ಅವರನ್ನು ಮರಳಿ ಮಾತೃಧರ್ಮಕ್ಕೆ ಸೇರಿಸಿದರೆಂದೂ ಐತಿಹ್ಯವಿದೆ. ತುಘಲಕ್ ಆನೆಗೊಂದಿಯ ರಾಜ ಜಂಬುಕೇಶ್ವರರಾಯನನ್ನು ಸೋಲಿಸಿ, ಅವನನ್ನು ಅವನ ಅರಮನೆಯಲ್ಲೇ ಬಂದಿಯಾಗಿರಿಸಿ, ತನ್ನ ಪ್ರತಿನಿಧಿಯಾಗಿ ಮಲಿಕ್ ನಾಯಬ್ ಎನ್ನುವವನನ್ನು ನೇಮಿಸಿ ಅವನ ಮುಖಾಂತರ ಆನೆಗೊಂದಿಯ ರಾಜ್ಯಭಾರ ಮಾಡುತ್ತಿದ್ದನು. ವಿದ್ಯಾರಣ್ಯರ ಸೂಚನೆ ಅನುಸರಿಸಿ, ಹರಿಹರ, ಬುಕ್ಕರು ಕೆಲವು ದೇಶಪ್ರೇಮಿ ಯುವಕರನ್ನು ಜೊತೆ ಮಾಡಿಕೊಂಡು ಜಾಣತನದಿಂದ ಆನೆಗೊಂದಿಯ ಅರಮನೆ ಪ್ರವೇಶಿಸಿ ಮಲಿಕ್ ನಾಯಬ್ ಪಾನಮತ್ತನಾಗಿದ್ದ ಸಂದರ್ಭ ಉಪಯೋಗಿಸಿಕೊಂಡು, ಅವನನ್ನೇ ಸೆರೆಹಿಡಿದು ರಾಜ ಜಂಬುಕೇಶ್ವರರಾಯನನ್ನು ಬಂಧಮುಕ್ತಗೊಳಿಸಿದರು. ಯಾವುದೇ ರಕ್ತಪಾತವಿಲ್ಲದೆ ಆನೆಗೊಂದಿ ಸ್ವತಂತ್ರವಾಯಿತು. ಅರಮನೆಯ ಮೇಲೆ ಪುನಃ ವರಾಹಧ್ವಜ ಹಾರಾಡಿತು. 
ಚಿತ್ರಕೃಪೆ: ಶ್ರೀ ಹಂಪಿ ವಿರೂಪಾಕ್ಷೇಶ್ವರ ಮಹಾಸಂಸ್ಥಾನ
     ಈ ವಿಜಯದಿಂದ ಉತ್ತೇಜಿತರಾದ ವಿದ್ಯಾರಣ್ಯರು ಪಂಪಾಕ್ಷೇತ್ರದಲ್ಲಿ ಒಂದು ಸೂಕ್ತ ಸ್ಥಳವನ್ನು ಆರಿಸಿ ಕ್ರಿ.ಶ. ೧೩೩೬ರಲ್ಲಿ ಹೊಸ ನಗರದ ಸ್ಥಾಪನೆಗೆ ಭೂಮಿಪೂಜೆ ಮಾಡಿದರು. ೧೭ನೆಯ ಶತಮಾನದ ಕವಿ ಲಿಂಗಣ್ಣನ 'ಕೆಳದಿನೃಪ ವಿಜಯ'ದಲ್ಲಿ ಈ ಸ್ಥಳದ ಮಹಿಮೆ ಕುರಿತು ಹೀಗೆ ಹೇಳಲಾಗಿದೆ: 'ಪೂರ್ವದೊಳ್ ಸೂರ್ಯವಂಶಜನಾದ ತ್ರಿಶಂಕು ಮಹಾರಾಯಂ ಪಂಪಾಕ್ಷೇತ್ರಕ್ಕೆ ಬಂದು ಈ ವಿರೂಪಾಕ್ಷಲಿಂಗಂ ಪ್ರಾದುರ್ಭವಲಿಂಗವೋ ಪ್ರತಿಷ್ಠಾಲಿಂಗವೋ ಯೆಂದು ಕೇಳಿದಲ್ಲಿ ಈ ಲಿಂಗಂ ಜ್ಯೋತಿರ್ಮಯವಾದ ಲಿಂಗಂ, ಈ ಲಿಂಗದ ಮಹಿಮೆಯಂ ಪೇಳ್ವುದಕ್ಕೆ ಬ್ರಹ್ಮದೇವರಿಗಾದರೂ ಅಸಾಧ್ಯಮೆಮ್ಮಪಾಡೇನೆನಲಾಗಿ ಆ ಮಾತಂ ಕೇಳ್ದು, ಆ ತ್ರಿಶಂಕು ಮಹಾರಾಯಂ ಪ್ರತಿಷ್ಠಾಲಿಂಗವೋ ಯೆಂದು ಕೇಳ್ದ ದೋಷನಿವೃತ್ತಿಗೋಸುಗಂ ಕೃಷ್ಣವೇಣೀ ನದೀತೀರಮಾರಭ್ಯ ಸೇತುಪರ್ಯಂತಂ ಮೂರುವರೆ ಕೋಟಿರಾಜ್ಯವನೀ ವಿರೂಪಾಕ್ಷದೇವರ್ಗೆ ಧಾರೆಯನೆರೆದನೆಂದು ಸ್ಥಳದವರ್ಪೇಳಲ್ ಆ ಮಾತಂ ಕೇಳ್ದಾ ವಿದ್ಯಾರಣ್ಯರ್ ಹರಿಹರಬುಕ್ಕರಂ ಕರೆದು ಈ ರಾಜ್ಯಕ್ಕೆಲ್ಲಂ ವಿರೂಪಾಕ್ಷಸ್ವಾಮಿಯೇ ಕರ್ತಂ, ನೀಂ ಆ ದೇವರ ಭಕ್ತರಾಗಿ ವರ್ತಿಸುತ್ತುಂ ಶ್ರೀ ವಿರೂಪಾಕ್ಷನೆಂದೊಪ್ಪವಂ ಹಾಕಿ ನಡೆಕೊಂಡು ಸದ್ಧರ್ಮದಿಂ ರಾಜ್ಯವನಾಳಿಕೊಂಡಿರ್ಪುದೆಂದು ಕಟ್ಟಳೆಯಂ ರಚಿಸಿ ಆ ಹರಿಹರಗೆ ಹರಿಹರರಾಯನೆಂದು ಪೆಸರಿಟ್ಟು ವಿದ್ಯಾನಗರಮೆಂಬ ಪಟ್ಟಣಮಂ ನಿರ್ಮಾಣಂ ಮಾಡಿಸುವ ಕಾಲದಲ್ಲಿ. . '  ಆ ಸಂದರ್ಭದಲ್ಲಿ ಭೂಗತ ನಿಧಿಯೂ ದೊರಕಿ ಕೆಲಸ ಸುಸೂತ್ರವಾಗಿ ಮುಂದುವರೆಯಲು ಅನುಕೂಲವಾಯಿತು. ಹರಿಹರ, ಬುಕ್ಕರು ಆ ನಗರಕ್ಕೆ ವಿದ್ಯಾನಗರ ಎಂದು ಹೆಸರಿಡಬಯಸಿದರೂ, ವಿದ್ಯಾರಣ್ಯರು ಅದಕ್ಕೆ ವಿಜಯನಗರವೆಂಬ ಹೆಸರು ಕೊಟ್ಟರು. ವಿಜಯನಗರ ಸಂಸ್ಥಾನ ಚಿಗುರೊಡೆಯಿತು. ಶ್ರೀ ವಿರೂಪಾಕ್ಷ ಎಂಬ ಅಂಕಿತವಿರುವ ಕ್ರಿ.ಶ. ೧೩೩೬ರ ತಾಮ್ರದ ದತ್ತಿಶಾಸನದಲ್ಲಿ ವಿದ್ಯಾರಣ್ಯರ ಸೂಚನೆಯಂತೆ ಹರಿಹರನನ್ನು ಸಿಂಹಾಸನದ ಮೇಲೆ ಕೂರಿಸಿದ ಉಲ್ಲೇಖವಿದೆ. ಹರಿಹರನಿಗೆ ಆತ್ಮವಿದ್ಯೆ ಬೋಧಿಸಿದ ವಿದ್ಯಾರಣ್ಯರು ಅವನಿಗೆ ಶ್ರೀಮದ್ ರಾಜಾಧಿರಾಜ ಪರಮೇಶ್ವರ, ಅಪರಿಮಿತ ಪ್ರತಾಪವೀರ ಮತ್ತು ನರಪತಿ ಎಂಬ ಬಿರುದುಗಳನ್ನಿತ್ತರೆನ್ನಲಾಗಿದೆ. ಆಗಿನಿಂದ ಶೃಂಗೇರಿಯ ಗುರುಗಳನ್ನು 'ಕರ್ಣಾಟಕ ಸಿಂಹಾಸನ ಪ್ರತಿಷ್ಟಾಪನಾಚಾರ್ಯ' ಎಂದೂ ಸಂಬೋಧಿಸಲಾಗುತ್ತಿದೆ. ಈ ವಿಜಯನಗರ ಮುಂದೆ ೬೪ ಚದರ ಮೈಲುಗಳವರೆಗೆ ಬೆಳೆದಿದ್ದೇ ಅಲ್ಲದೆ ಮುಂದೆ ೨೫೦ ವರ್ಷಗಳವರೆಗೆ ಕರ್ನಾಟಕದ ಹೆಮ್ಮೆಯ ರಾಜಧಾನಿಯಾಗಿ ಮೆರೆಯಿತು.
     ವಿದ್ಯಾರಣ್ಯರು ಪಂಚಾದಶಿ, ಜೀವನ್ಮುಕ್ತಿ ವಿವೇಕ, ಅನುಭೂತಿ ಪ್ರಕಾಶಿಕಾ, ಪರಾಶರ ಮಾಧವೀಯ, ಸಂಗೀತಸಾರ, ಮುಂತಾದ ಕೃತಿಗಳನ್ನು ರಚಿಸಿದರು. ಪಂಚಾದಶಿ ಮತ್ತು ಜೀವನ್ಮುಕ್ತಿ ವಿವೇಕ ಕೃತಿಗಳು ಸಾಧಕರಿಗೆ ಉಪಯುಕ್ತ ಮತ್ತು ಮಾರ್ಗದರ್ಶಿಯಾಗಿವೆ. ಶೃಂಗೇರಿ ಶಾರದಾಪೀಠದ ಗುರುಗಳಾದ ಶ್ರೀ ಭಾರತೀ ಕೃಷ್ಣತೀರ್ಥರ ನಿಧನಾನಂತರದಲ್ಲಿ ಕ್ರಿ.ಶ. ೧೩೮೦ರಲ್ಲಿ ೧೨ನೆಯ ಗುರುಗಳಾಗಿ ೧೩೮೬ರವರೆಗೆ ಶಾರದಾ ಪೀಠದ ಮತ್ತು ಶ್ರೀ ಹಂಪಿ ವಿರೂಪಾಕ್ಷೇಶ್ವರ ಮಹಾಸಂಸ್ಥಾನದ ಮುಖ್ಯಸ್ಥರಾಗಿದ್ದರು. ೧೧೮ನೆಯ ವಯಸ್ಸಿನಲ್ಲಿ ಇಹಯಾತ್ರೆ ಮುಗಿಸಿದ ಅವರು ಜೀವನವನ್ನು ಸಾರ್ಥಕರೀತಿಯಲ್ಲಿ ನಡೆಸಿದ, ಆಧ್ಯಾತ್ಮಿಕ, ನೈತಿಕ, ಸಾಂಸ್ಕೃತಿಕ ಮೌಲ್ಯಗಳನ್ನು ಎತ್ತಿ ಹಿಡಿದ, ಅಂದುಕೊಂಡದ್ದನ್ನು ಸಾಧಿಸಿದ ಧೀರ ಸಂನ್ಯಾಸಿ. 
ಅವಿದ್ಯಾರಣ್ಯಕಾಂತಾರೇ ಭ್ರಮತಾಮ್ ಪ್ರಾಣಿನಾಂ ಸದಾ |
ವಿದ್ಯಾಮಾರ್ಗೋಪದೇಶ್ಟಂ ವಿದ್ಯಾರಣ್ಯಗುರುಮ್ ಶ್ರಯೇ ||
     ಮೌಢ್ಯದ ದಟ್ಟಕಾಡಿನಲ್ಲಿ ಗೊತ್ತುಗುರಿಯಿಲ್ಲದೆ ಅಲೆದಾಡುವ ಜೀವಾತ್ಮರಿಗೆ ಜ್ಞಾನದ ದಾರಿ ತೋರಿಸುವ ಗುರು ವಿದ್ಯಾರಣ್ಯರಿಗೆ ನಮನಗಳು.
     ಹಣಬಲ, ತೋಳ್ಬಲ, ಜಾತಿಬಲ, ಅಧಿಕಾರಬಲ, ಒಡೆದು ಆಳುವ ನೀತಿಯ ಬಲದಿಂದ ಅಧಿಕಾರಕ್ಕೇರಿದ, ಸ್ವಾರ್ಥವೇ ಪ್ರಧಾನವಾದ ರಾಜಕಾರಣಿಗಳಿಂದ, ನೈತಿಕ ಶಿಕ್ಷಣವನ್ನು ಇಲ್ಲವಾಗಿಸಿ ಮೌಲ್ಯಗಳನ್ನು ಗಾಳಿಗೆ ತೂರುವ ಕೇವಲ ಹಣಕೇಂದ್ರಿತ ಶಿಕ್ಷಣ ಪದ್ಧತಿಯಿಂದ, ಭ್ರಷ್ಟಾಚಾರದ ಕೂಪದಿಂದ, ಅನ್ಯಾಯ, ಅತ್ಯಾಚಾರಗಳಿಂದ ದೇಶವನ್ನು ರಕ್ಷಿಸಿ ಮೇಲೆತ್ತಬಲ್ಲ ವಿದ್ಯಾರಣ್ಯರಂತಹ ಧೀಮಂತ ಮಾರ್ಗದರ್ಶಕರ ಅಗತ್ಯ ದೇಶಕ್ಕೆ ಇಂದು ತುರ್ತಾಗಿ ಬೇಕಾಗಿದೆ. ನವಯುವಕ-ಯುವತಿಯರೇ, ನೀವೇ ಏಕೆ ಅಭಿನವ ವಿದ್ಯಾರಣ್ಯರುಗಳಾಗಬಾರದು? ವಿದ್ಯಾರಣ್ಯರು ವಿಜಯನಗರ ಸಂಸ್ಥಾನಕ್ಕೆ ನಾಂದಿ ಹಾಡಿದಂತೆ ನೀವೇ ಏಕೆ ನವಭಾರತ ನಿರ್ಮಾಣಕ್ಕೆ ಅಡಿಗಲ್ಲುಗಳಾಗಬಾರದು? 
-ಕ.ವೆಂ.ನಾಗರಾಜ್.
**********************
ಆಧಾರ ಮತ್ತು ಪೂರಕ ಮಾಹಿತಿಗಳ ಸಂಗ್ರಹ:
1. ಕವಿ ಲಿಂಗಣ್ಣನ 'ಕೆಳದಿನೃಪ ವಿಜಯ'
2. http://www.sringeri.net 
3.ಮೋಹಿನಿಪುರಾಣಿಕರ  http://narayankripa.blogspot.in/2012/04/swami-vidyaranya-inspiration-for-all.html 
4. http://www.freeindia.org/biographies/sages/vidyaranya/index.htm 
5. http://www.hampividyaranyamutt.org

ಸೋಮವಾರ, ಜನವರಿ 14, 2013

ಲಂಡನ್ ಮಕ್ಕಳ ಸಂಸ್ಕೃತ ಪ್ರೇಮ






"ಬೈ ಡ್ಯಾಡ್, ಬೈ ಮಾಮ್, ಬೈ ತಾತ್"
     ಒಂದನೆಯ ತರಗತಿಯಲ್ಲಿ ಓದುತ್ತಿರುವ ನನ್ನ ಮೊಮ್ಮಗಳು ಪುಸ್ತಕದ ಮೂಟೆಯನ್ನು ಹೊತ್ತುಕೊಂಡು ಶಾಲೆಯ ಬಸ್ಸಿಗೆ ಹತ್ತುವಾಗ ಕೈಬೀಸಿ ಹೇಳಿದ್ದು ಹೀಗೆ. ಅವಳು ನನ್ನನ್ನು 'ತಾತ್' ಎಂದು ಕರೆಯುವುದಕ್ಕೆ ಕೊಟ್ಟಿದ್ದ ವಿವರಣೆ: "ತಾತಾ, ಗ್ರ್ಯಾಂಡ್ ಫಾದರ್, ಗ್ರ್ಯಾಂಡ್ ಪಾ ಈಸ್ ಟೂ ಲಾಂಗ್. ಸೋ ಐ ಕಾಲ್ ಯು ತಾತ್!" ಲಕ್ಷಗಟ್ಟಲೆ ಡೊನೇಶನ್ ಕೊಟ್ಟು ಸೇರಿಸಿದ್ದ ಆ ಪ್ರತಿಷ್ಠಿತ  ಶಾಲೆಯಲ್ಲಿ ಕನ್ನಡ ಮಾತನಾಡುವಂತಿರಲಿಲ್ಲ. ಎಲ್ಲಾ ಇಂಗ್ಲಿಷಿನಲ್ಲೇ ಆಗಬೇಕು. ಬೆಂಗಳೂರಿನಲ್ಲಿ ಕೆಲವು ದಶಕಗಳ ಹಿಂದೆ ಮಕ್ಕಳು ಮಾತ್ರ ಇಂಗ್ಲಿಷಿನಲ್ಲಿ ಮಾತನಾಡುತ್ತಿದ್ದವು. ಈಗ ಆ ಮಕ್ಕಳೂ ದೊಡ್ಡವರಾಗಿದ್ದಾರೆ. ಈಗ ಎಲ್ಲರೂ, ಎಲ್ಲೆಲ್ಲೂ ಇಂಗ್ಲಿಷಿನಲ್ಲೇ ಮಾತನಾಡುತ್ತಾರೆ. ಬೆಂಗಳೂರಿನಲ್ಲಿ ಅವಿದ್ಯಾವಂತರೂ ಸಹ ಇಂಗ್ಲಿಷಿನಲ್ಲಿ ಸರಾಗವಾಗಿ ಮಾತನಾಡಬಲ್ಲರು. ಅದೇ ಕನ್ನಡ ಮಾತನಾಡಬೇಕಾದರೆ ಕನ್ನಡಿಗರೇ ಬಹಳ ಕಷ್ಟಪಡುತ್ತಾರೆ. ಕನ್ನಡ ಬಾರದಿದ್ದವರು ಮಾತನಾಡುವ ಕನ್ನಡದ ಉಚ್ಛಾರದಂತೆ ಕನ್ನಡಿಗರೇ ಮಾತನಾಡುವುದನ್ನು ಕಂಡು ಅಚ್ಚರಿಪಟ್ಟಿದ್ದೇನೆ. ಹಿಂದೆ ಲಾರ್ಡ್ ಮೆಕಾಲೆ ಹೇಳಿದ್ದ, "ಈ ರೀತಿಯ ವಿದ್ಯಾಭ್ಯಾಸ ಕ್ರಮದಿಂದ ಇನ್ನು ಕೆಲವು ದಶಕಗಳಲ್ಲಿ ಇಂಡಿಯಾದಲ್ಲಿ ಕರಿಚರ್ಮದ ಬ್ರಿಟಿಷರು ಇರುತ್ತಾರೆ" ಎಂಬ ಮಾತು ನಿಜವಾಗಿದೆ. ಆದರೆ ಯಾವ ದೇಶದ ಗುಲಾಮಗಿರಿಯ ಕಾಣಿಕೆಯಾದ ಇಂಗ್ಲಿಷನ್ನು ಹೆಮ್ಮೆಯಿಂದ ಆಡುತ್ತೇವೋ, ಆ ದೇಶದ ರಾಜಧಾನಿ ಲಂಡನ್ನಿಗೆ ಸಂಬಂಧಿಸಿದ ಸಂಗತಿಯನ್ನು ನಿಮ್ಮೊಡನೆ ಹಂಚಿಕೊಳ್ಳುವೆ.
     ಅದು ಲಂಡನ್ನಿನ ಸೈಂಟ್ ಜೇಮ್ಸ್ ಜೂನಿಯರ್ ಸ್ಕೂಲ್. ಅಲ್ಲಿ ೧೯೭೫ರಿಂದಲೂ ಸಂಸ್ಕೃತವನ್ನು ಕಲಿಸಲಾಗುತ್ತಿದೆ. ವರ್ಷದಿಂದ ವರ್ಷಕ್ಕೆ ಸಂಸ್ಕೃತ ಕಲಿಯುತ್ತಿರುವವರ ಸಂಖ್ಯೆ ಇಂಗ್ಲೆಂಡಿನಲ್ಲಿ ಮಿತಿಯನ್ನು ಮೀರಿ ಬೆಳೆಯುತ್ತಿದೆ ಎಂದರೆ ನಿಮಗೆ ಆಶ್ಚರ್ಯವಾಗಬಹುದು. ಇಂಗ್ಲಿಷ್ ಮಾತನಾಡುವವರಿಗೆ ಸಂಸ್ಕೃತದ ಉಚ್ಛಾರ ಕಷ್ಟವಾದರೂ ಅಲ್ಲಿ ಸಂಸ್ಕೃತ ಕಲಿಯಲು ಬರುತ್ತಿರುವ ಮಕ್ಕಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ವಾರ್ಷಿಕ ಸಂಸ್ಕೃತ ಸಂಭಾಷಣಾ ಸ್ಪರ್ಧೆಯಲ್ಲಿ ತಮ್ಮ ಪುಟಾಣಿಗಳು ಭಾಗವಹಿಸಿ, ವೇದ ಮಂತ್ರ, ಉಪನಿಷತ್ತಿನ ಶ್ಲೋಕಗಳನ್ನು ಹೇಳುತ್ತಿದ್ದರೆ ಅದನ್ನು ಕೇಳುವ ಪೋಷಕರು, ತಂದೆ-ತಾಯಿಗಳು ಹೆಮ್ಮೆಯಿಂದ ಚಪ್ಪಾಳೆ ತಟ್ಟಿ ಹುರಿದುಂಬಿಸುತ್ತಾರೆ. ಸಂಸ್ಕೃತ ವಿಭಾಗದ ಮುಖ್ಯಸ್ಥ ವಾರ್ವಿಕ್ ಜೆಸೊಪ್, "ಸಂಸ್ಕೃತ ಭಾಷೆ ಅದ್ಭುತವಾಗಿದೆ. ಸಂಸ್ಕೃತದ ಸಾಹಿತ್ಯ ಸ್ಫೂರ್ತಿದಾಯಕವಾಗಿದೆ ಮತ್ತು ತತ್ವಾದರ್ಶಗಳಿಂದ ಕೂಡಿದೆ. ಅದಕ್ಕಾಗಿ ಅದನ್ನು ಮಕ್ಕಳಿಗೆ ಕಲಿಸಿಕೊಡುತ್ತಿದ್ದೇವೆ" ಎನ್ನುತ್ತಾರೆ. ಇದೇ ಮಾತನ್ನು ಇಲ್ಲಿ ಯಾರಾದರೂ ಹೇಳಿದರೆ ವಿಚಾರವಂತರೆಂದು ಹಣೆಪಟ್ಟಿ ಹಚ್ಚಿಕೊಂಡವರು ಏನು ಹೇಳಬಹುದೆಂಬುದು ನಿಮಗೇ ಬಿಟ್ಟ ವಿಷಯ. ಸಂಸ್ಕೃತ ಕಲಿಯುವ ಮಕ್ಕಳನ್ನು ಕೇಳಿದರೆ ಅವರು ಹೇಳುವುದೇನೆಂದರೆ, "ಅದು ನಮಗೆ ಬಹಳ ಖುಷಿ ಕೊಡುತ್ತದೆ. ಅದು ನಮ್ಮ ಮೆಚ್ಚಿನ ಭಾಷೆ!"
     ಸಂಸ್ಕೃತ ಕಲಿಯುತ್ತಿದ್ದ ಒಬ್ಬ ವಿದ್ಯಾರ್ಥಿಯ ಹೃದಯದ ಮಾತಿದು: "ಸಂಸ್ಕೃತ ಕಲಿಯುವುದು ಒಂದು ವಿಶೇಷ ಅನುಭವ. ಅದನ್ನು ಕಲಿಯಲು ನನಗೆ ಬಹಳ ಆನಂದವಾಗುತ್ತದೆ, ಏಕೆಂದರೆ ಸಂಸ್ಕೃತ ಕಲಿಸುತ್ತಿರುವ ಕೆಲವೇ ಶಾಲೆಗಳಿದ್ದು, ಅದರ ಪೈಕಿ ನಾವೂ ಒಬ್ಬರು ಎಂಬುದು. ಅದು ನಮಗೆ ಹಲವಾರು ರೀತಿಯಲ್ಲಿ ಉಪಯೋಗವಾಗಿದೆ. ನಮ್ಮ ಉಚ್ಚಾರಣೆ ಸುಧಾರಿಸುತ್ತದೆ ಮತ್ತು ಪದಸಂಪತ್ತನ್ನು ಹೆಚ್ಚಿಸುತ್ತದೆ. ಪಾರಮಾರ್ಥಿಕ ಅನುಕೂಲಗಳೂ ಇವೆ. ರಾಮಾಯಣ ಮತ್ತು ಮಹಾಭಾರತದಂತಹ ಹಲವಾರು ಕಥೆಗಳಿದ್ದು, ಹಿಂದೆ ಪ್ರಪಂಚದಲ್ಲಿ ಏನೆಲ್ಲಾ ಆಯಿತು ಎಂಬುದನ್ನೂ ತಿಳಿಯಲು ಸಹಾಯ ಮಾಡುತ್ತದೆ."
     ಈ ಶಾಲೆಯಲ್ಲಿ ೪ ರಿಂದ ೧೮ ವರ್ಷಗಳವರೆಗೆ ಸಂಸ್ಕೃತ ಕಲಿಯಲು ಸೌಲಭ್ಯವಿದೆ. ನಂತರದಲ್ಲಿ ಪ್ರತಿಷ್ಠಿತ ಶಾಲೆಗಳಾದ ಆಕ್ಸ್ ಫರ್ಡ್, ಕೇಂಬ್ರಿಡ್ಜ್, ಎಡಿನ್ ಬರೋ ಮುಂತಾದ ಶಾಲೆಗಳಲ್ಲಿ ಮುಂದುವರೆದ ಸಂಸ್ಕೃತ ವಿದ್ಯಾಭಾಸ ಮಾಡಬಹುದಾಗಿದೆ. ಲಂಡನ್ ಶಾಲೆಗೆ ಸಂಬಂಧಿಸಿದ ಒಂದು ಕಿರುವಿಡಿಯೋ ಅನ್ನು ಈ ಲಿಂಕಿನಲ್ಲಿ ನೋಡಬಹುದು.
     ನಾನು ಕೇವಲ ಇಂಗ್ಲೆಂಡಿನ ಉದಾಹರಣೆ ನೀಡಿದ್ದರೂ, ಅಮೆರಿಕಾ ಸೇರಿದಂತೆ ಹಲವಾರು ವಿದೇಶಿ ರಾಷ್ಟ್ರಗಳಲ್ಲಿ ಸಂಸ್ಕೃತ ಕಲಿಕೆ ಗಣನೀಯವಾಗಿ ಹೆಚ್ಚಿದ್ದು, ಸಂಸ್ಕೃತದಲ್ಲಿ ಸ್ನಾತಕೋತ್ತರ ಪದವಿ ಪಡೆದು ಸಂಶೋಧನೆಯಲ್ಲಿ ತೊಡಗಿಸಿಕೊಂಡಿರುವವರ ಸಂಖ್ಯೆ ಕಡಿಮೆಯಲ್ಲ. ಊರು ಕೊಳ್ಳೆ ಹೋದ ನಂತರದಲ್ಲಿ ನಮ್ಮವರಿಗೆ ಎಚ್ಚರವಾಗಬಹುದು.
-ಕ.ವೆಂ.ನಾಗರಾಜ್.