ವೇದಜೀವನ ಬ್ಲಾಗಿಗೆ ಸ್ವಾಗತ. ಸುವಿಚಾರಗಳು ಎಲ್ಲಿಂದಲಾದರೂ ಬರಲಿ, ಯಾರಿಂದಲಾದರೂ ಬರಲಿ, ಪೂರ್ವಾಗ್ರಹ ಪೀಡಿತರಾಗದೆ ಸ್ವೀಕರಿಸೋಣ.

ಸೋಮವಾರ, ಏಪ್ರಿಲ್ 21, 2014

ಕದಿಯದಿರುವುದು ಸುಲಭವಲ್ಲ!

     ಎಂದಿನಂತೆ ಫೇಸ್ ಬುಕ್ ತೆರೆದಾಗ ಯುವಬರಹಗಾರ್ತಿಯೊಬ್ಬರ ಕವನ ಗಮನ ಸೆಳೆಯಿತು. ಕವನಕ್ಕೆ ಲೈಕುಗಳ ಮೇಲೆ ಲೈಕುಗಳಿದ್ದವು. ವಾವ್, ಸೂಪರ್, ವಂಡರ್ ಫುಲ್, ಕೀಪಿಟಪ್, ನೀನು ಎಷ್ಟು ಚೆನ್ನಾಗಿ ಬರೆದಿದ್ದೀಯಾ!, ಮುಂದುವರೆಸು, ಎಂಬಂತಹ ಹಲವಾರು ಮೆಚ್ಚುಗೆಯ ಪ್ರತಿಕ್ರಿಯೆಗಳಿದ್ದವು. ಅದನ್ನು ನೋಡಿದವನು ನನ್ನ ಪುಟವನ್ನು ತೆರೆದು ನೋಡಿದೆ. ಅದೇ ಕವನ ಈಕೆಯ ಕವನ ಪ್ರಕಟವಾಗುವುದಕ್ಕಿಂತ ಕೆಲವು ದಿನಗಳ ಮೊದಲೇ ನನ್ನ ಹೆಸರಿನಲ್ಲಿ ಪ್ರಕಟವಾಗಿತ್ತು. ಕೇವಲ ನಾಲ್ಕೈದು ಲೈಕುಗಳಿದ್ದವು. ಮತ್ತೊಮ್ಮೆ ಆ ಬರಹಗಾರ್ತಿಯ ಪುಟ ವೀಕ್ಷಿಸಿದೆ. ನನ್ನ ಪುಟದ ಕವನದಲ್ಲಿದ್ದ ಸಣ್ಣ ಬೆರಳಚ್ಚಿನ ದೋಷ ಸಹ ಯಥಾವತ್ ಅಲ್ಲಿತ್ತು. ಅರ್ಥವಾಯಿತಲ್ಲವೇ? ನಾನು ನನ್ನ ಪ್ರತಿಕ್ರಿಯೆ ದಾಖಲಿಸಿದೆ, "ತುಂಬಾ ಚೆನ್ನಾಗಿದೆ. ಆಶ್ಚರ್ಯವೆಂದರೆ ನಿಮ್ಮ ಕವನ ಪ್ರಕಟವಾಗುವ ನಾಲ್ಕು ದಿನಗಳ ಮೊದಲೇ ನಾನು ಪ್ರಕಟಿಸಿದ ಕವನ ಸಹ ಒಂದಕ್ಷರವೂ ಬದಲಾವಣೆಯಾಗದೆ ಹೀಗೆಯೇ ಮೂಡಿಬಂದಿದೆ. ಇಬ್ಬರ ವಿಚಾರವೂ ಒಂದೇ ರೀತಿ ಇದೆ. ಗೊತ್ತಿಲ್ಲದವರು ಕೃತಿಚೌರ್ಯವೆಂದುಬಿಡುತ್ತಾರೆ. ನಿಮ್ಮ ಮುಂದಿನ ಕವನ ಪ್ರಕಟಿಸುವ ಮುನ್ನ ದಯವಿಟ್ಟು ಹುಷಾರಾಗಿರಿ. ಆ ಕವನವನ್ನೂ ಸಹ ನಾನೋ ಅಥವ ನನ್ನಂತಹವರು ಇನ್ನು ಯಾರೋ ಮೊದಲೇ ಪ್ರಕಟಿಸಿಬಿಟ್ಟಿರುವ ಸಾಧ್ಯತೆ ಇಲ್ಲದಿರುವುದನ್ನು ಖಚಿತಪಡಿಸಿಕೊಂಡು ಪ್ರಕಟಿಸಿ. ಶುಭವಾಗಲಿ". ಸುಮಾರು ಅರ್ಧ ಗಂಟೆಯ ನಂತರದಲ್ಲಿ ನೋಡಿದರೆ ನನ್ನ ಪ್ರತಿಕ್ರಿಯೆ ಡಿಲೀಟ್ ಆಗಿತ್ತು. ನಾನೂ ನನ್ನ ಗೆಳೆಯರ ಪಟ್ಟಿಯಿಂದ ಆ ಬರಹಗಾರ್ತಿಯ ಹೆಸರನ್ನು ಡಿಲೀಟ್ ಮಾಡಿದೆ. ನಂತರದ ಬೆಳವಣಿಗೆಯಲ್ಲಿ ಆಕೆ ಕ್ಷಮೆ ಕೋರಿ ಸಂದೇಶ ಕಳುಹಿಸಿದ್ದಳು. ವಿಷಯ ಮುಕ್ತಾಯವಾಯಿತು.
     ಅಸ್ತೇಯದ -ಅಂದರೆ ಕದಿಯದಿರುವುದರ- ಬಗ್ಗೆ ಬರೆಯಬೇಕೆಂದುಕೊಂಡವನಿಗೆ ಮೇಲಿನ ವಿಷಯದಿಂದಲೇ ಬರವಣಿಗೆ ಪ್ರಾರಂಭಿಸಲು ಅನುಕೂಲವಾಯಿತು. ಕದಿಯದಿರುವುದು ಎಂಬುದರಲ್ಲೇ ಅಸ್ತೇಯದ ಅರ್ಥ ಅಡಗಿದೆ. ಸ್ವಾಮಿ ಶಿವಾನಂದರು ಹೇಳುತ್ತಾರೆ, 'ಆಸೆಯೇ ಕಳ್ಳತನದ ಮೂಲ'! ಆಸೆ ದುಃಖಕ್ಕೆ ಮೂಲವೆಂಬುದು ಬುದ್ಧವಾಣಿ. ಇದೇ ಆಸೆಯೇ ಕಳ್ಳತನವೂ ಸೇರಿದಂತೆ ಹಲವು ದುಷ್ಟಸಂಗತಿಗಳಿಗೆ ಮತ್ತು ಆ ಮೂಲಕ ನಮ್ಮ ಕಷ್ಟಪರಂಪರೆಗಳಿಗೆ ಮೂಲವೆನ್ನಬಹುದು. ಕಳ್ಳತನಕ್ಕೆ ಸಂಬಂಧಿಸಿದಂತೆ ಗಾಂಧೀಜಿಯವರ ಬಾಲ್ಯದ ಘಟನೆಗಳನ್ನು ಇಲ್ಲಿ ಉಲ್ಲೇಖಿಸಬಹುದು. ಚಿಕ್ಕಂದಿನಲ್ಲಿ ಸಿಗರೇಟು ಸೇದಿ ಅಲೆ ಅಲೆಯಾಗಿ ಹೊಗೆ ಬಿಡುವುದನ್ನು ಕಂಡು ಆಕರ್ಷಿತರಾದ ಗಾಂಧಿ ಮತ್ತು ಆತನ ಗೆಳೆಯ ಮೊದಮೊದಲು ಸೇದಿ ಬಿಸಾಕಿದ ಸಿಗರೇಟು ತುಂಡುಗಳನ್ನು ಆಯ್ದು ಸೇದಿ ಹೊಗೆ ಬಿಡಲು ಪ್ರಯತ್ನಿಸಿದ್ದರು. ಆ ತುಂಡುಗಳಿಂದ ಅವರಿಗೆ ಮಜ ಸಿಗಲಿಲ್ಲ. ಅದಕ್ಕಾಗಿ ಅವರು ಮನೆಯ ಆಳಿನ ಜೇಬಿನಿಂದ ಕೆಲವು ಕಾಸುಗಳನ್ನು ಎಗರಿಸಿ ಸಿಗರೇಟು ಸೇದಿದ್ದರು. ಆದರೆ ಸಿಗರೇಟನ್ನು ಸೇದಲು ದುಡ್ಡನ್ನು ಹಿರಿಯರಿಂದ ಕೇಳುವಂತಿಲ್ಲ, ಅವರಿಗೆ ಕಾಣುವಂತೆ ಸೇದುವಂತಿಲ್ಲ. ಸೇದುವ ಆಸೆಯನ್ನೂ ಹತ್ತಿಕ್ಕುವಂತಿಲ್ಲ. ಹೀಗಾಗಿ ಬೇಸರವೆನಿಸಿ ದತ್ತೂರದ ಬೀಜಗಳನ್ನು ತಿಂದು ಆತ್ಮಹತ್ಯೆ ಮಾಡಿಕೊಳ್ಳಲು ಮನಸ್ಸು ಮಾಡಿದ್ದರಂತೆ. ಆದರೆ ಧೈರ್ಯ ಸಾಲದೆ ಆತ್ಮಹತ್ಯೆ ಮಾಡಿಕೊಳ್ಳಲಿಲ್ಲ. ಆತ್ಮಹತ್ಯೆ ಮಾಡಿಕೊಳ್ಳುವವರೆಗೂ ಮನಸ್ಸು ಮಾಡಿಸಿದ್ದ ಆ ಸಿಗರೇಟು ಸೇವನೆಯಿಂದ ದೂರವಿರಲು ನಿರ್ಧರಿಸಿ, ತುಂಡು ಸಿಗರೇಟುಗಳನ್ನು ಆಯುವುದು, ಕಾಸು ಕದಿಯುವುದನ್ನು ಆಗಿನಿಂದ ನಿಲ್ಲಿಸಿದ್ದರು. ಧೂಮಪಾನ ಕೆಟ್ಟದ್ದು, ಅಪಾಯಕಾರಿ ಎಂಬ ತೀರ್ಮಾನಕ್ಕೆ ಅವರು ಬಂದಿದ್ದರು.
     ಗಾಂಧಿ ಸುಮಾರು ೧೨ ವರ್ಷದವರಿದ್ದಾಗ ಮೇಲಿನ ಘಟನೆ ನಡೆದಿದ್ದರೆ, ಇನ್ನೊಂದು ಗಂಭೀರವಾದ ಘಟನೆ ಅವರು ೧೫ ವರ್ಷದವರಿದ್ದಾಗ ನಡೆದದ್ದು. ಹಣದ ಅಗತ್ಯವಿದ್ದುದರಿಂದ ತನ್ನ ಅಣ್ಣನ ಚಿನ್ನದ ತೋಳುಬಂದಿಯಿಂದ ಒಂದು ಚೂರು ಚಿನ್ನವನ್ನು ಅವರು ಕಳ್ಳತನ ಮಾಡಿದ್ದರು. ಆದರೆ ಈ ಕಳ್ಳತನದ ಬಗ್ಗೆ ಅವರ ಮನಸ್ಸಿನಲ್ಲಿ ದೊಡ್ಡ ಆಂದೋಲನ ಏರ್ಪಟ್ಟು ಮುಂದೆ ಕದಿಯದಿರಲು ನಿರ್ಧರಿಸಿದ್ದಲ್ಲದೆ ಪಶ್ಚಾತ್ತಾಪದಿಂದ ನೊಂದು ತಂದೆಯವರಿಗೆ ಘಟನೆಯ ವಿವರಗಳಿರುವ ಪತ್ರ ಬರೆದು ತಮ್ಮ ತಪ್ಪಿಗೆ ಶಿಕ್ಷೆ ಕೊಡಬೇಕೆಂದೂ, ಇನ್ನುಮುಂದೆ ಹೀಗೆ ಮಾಡುವುದಿಲ್ಲವೆಂದೂ ತಿಳಿಸಿ ಸ್ವತಃ ತಂದೆಯವರಿಗೆ ಪತ್ರ ಕೊಟ್ಟು ತಲೆ ತಗ್ಗಿಸಿ ನಿಂತಿದ್ದರು. ಫಿಸ್ತುಲದಿಂದ ನರಳುತ್ತಿದ್ದ ತಂದೆ ಹಾಸಿಗೆಯಲ್ಲಿ ಮಲಗಿದ್ದವರು ಪತ್ರ ಓದಲು ಎದ್ದು ಕುಳಿತಿದ್ದರು. ತಂದೆಯ ಕೋಪವನ್ನು ನಿರೀಕ್ಷಿಸಿದ್ದ ಗಾಂಧಿಗೆ ಅದಕ್ಕೆ ಬದಲಾಗಿ ಅವರು ಪತ್ರ ಓದಿದ ನಂತರ ಕಣ್ಣು ಮುಚ್ಚಿ ಒಂದು ನಿಮಿಷ ಕುಳಿತಿದ್ದು, ನಂತರ ಆ ಪತ್ರವನ್ನು ಚೂರು ಚೂರಾಗಿ ಹರಿದು ಹಾಕಿದ್ದರು ಮತ್ತು ಮತ್ತೆ ಹಾಸಿಗೆಯ ಮೇಲೆ ಮಲಗಿ ಕಣ್ಣೀರು ಸುರಿಸಿದ್ದರು. ಏನೂ ಮಾತಾಡಿರಲಿಲ್ಲ. ಗಾಂಧಿ ಸಹ ಕಣ್ಣೀರು ಸುರಿಸಿದ್ದರು. ತಂದೆಯ ಕಣ್ಣೀರ ಹನಿಗಳು ಮಗನ ಹೃದಯವನ್ನು ಶುದ್ಧಿಗೊಳಿಸಿದ್ದವು. ಅಹಿಂಸೆ ಮತ್ತು ಅಸ್ತೇಯದ ಮಹತ್ವ ಗಾಂಧಿಗೆ ಮನವರಿಕೆಯಾಗಿದ್ದು ಆಗಲೇ!
     ಅಸ್ತೇಯದ ಕಲ್ಪನೆಗೆ ಬಲ ಬರಬೇಕೆಂದರೆ ಪ್ರಾಮಾಣಿಕ ರೀತಿಯಲ್ಲಿ ಗಳಿಸಿದ್ದರಲ್ಲಿ ತೃಪ್ತಿಪಟ್ಟುಕೊಳ್ಳಬೇಕು. ನಮಗೆ ಇಲ್ಲದುದು ಅವರಲ್ಲಿ ಇದೆ ಎಂಬ ಬಗ್ಗೆಯೇ ಮನಸ್ಸನ್ನು ಹರಿಬಿಟ್ಟರೆ, ನಮ್ಮದಲ್ಲದುದನ್ನು ತೆಗೆದುಕೊಳ್ಳುವುದನ್ನು ಮನಸ್ಸು ಸ್ವೀಕರಿಸುತ್ತದೆ ಮತ್ತು ಅದು ಕಳ್ಳತನಕ್ಕೆ ಎಡೆ ಮಾಡಿಕೊಡುತ್ತದೆ. 'ಅವನಿಗೆ ಅಷ್ಟೊಂದು ಇದೆ, ಅದರಲ್ಲಿ ಸ್ವಲ್ಪ ತೆಗೆದುಕೊಂಡರೆ ಅವನಿಗೇನೂ ನಷ್ಟವಾಗುವುದಿಲ್ಲ'ವೆಂದುಕೊಂಡರೆ, ನಾವು ನಮಗೇ ಕದಿಯಲು ಅನುಮತಿಸಿದಂತೆ ಆಗುತ್ತದೆ. ಕ್ರಮೇಣ ಇದು ಅಭ್ಯಾಸವಾಗಿ ಇಂತಹ ಸಂಗತಿಗಳು ತಪ್ಪು ಎಂದು ಅನ್ನಿಸುವುದೇ ಇಲ್ಲ.  ನಾವು ಕೇಳಿರುವ ಹಾಸ್ಯ ಚಟಾಕಿಯೊಂದನ್ನು ಉದಾಹರಿಸುವೆ. ಪ್ರಾಥಮಿಕ ಶಾಲೆಗೆ ಹೋಗುತ್ತಿದ್ದ ಹುಡುಗನೊಬ್ಬ ಸಹಪಾಠಿಯೊಬ್ಬನ ನೋಟ್ ಪುಸ್ತಕ ಕದ್ದಿದ್ದುದನ್ನು ಗಮನಿಸಿದ ತಾಯಿ ಮಗನನ್ನು ಗದರಿಸಿದ್ದಲ್ಲದೆ ತಂದೆಯ ಗಮನಕ್ಕೂ ತರುತ್ತಾಳೆ. ಆ ತಂದೆ ಹೇಳುತ್ತಾನೆ, "ಆ ಪುಸ್ತಕ ಕದಿಯುವುದಕ್ಕೆ ಏಕೆ ಹೋದೆ? ಕಳ್ಳತನ ಮಾಡುವುದು ತಪ್ಪು ಮಗು. ನನಗೇ ಹೇಳಿದ್ದರೆ ನಾನೇ ಆಫೀಸಿನಿಂದ ಬೇಕಾದಷ್ಟು ಕಾಗದ ತಂದುಕೊಡುತ್ತಿರಲಿಲ್ಲವೇ?" ಇಂತಹುದನ್ನು ತಪ್ಪು ಎಂದು ಭಾವಿಸದಷ್ಟು ನಮ್ಮ ಮನಸ್ಸು ತಿದ್ದಲ್ಪಟ್ಟಿರುತ್ತದೆ.
     ಅಗತ್ಯಕ್ಕಿಂತ ಹೆಚ್ಚು ಹೊಂದುವುದೂ, ಅದು ಆಹಾರವಾಗಿರಬಹುದು, ಹಣವಾಗಿರಬಹುದು, ಆಸ್ತಿಯಾಗಿರಬಹುದು, ಒಂದು ರೀತಿಯ ಸ್ತೇಯವಾಗುತ್ತದೆ ಎಂಬುದು ಜ್ಞಾನಿಗಳ ಮಾತು. ನಮಗೆ, ನಮ್ಮ ಕುಟುಂಬದವರಿಗೆ ಎಷ್ಟು ಬೇಕು, ಏನು ಬೇಕು ಎಂದು ನಿರ್ಧರಿಸಿ ಅದಕ್ಕೆ ತಕ್ಕಷ್ಟು ಹೊಂದುವುದು ವಿವೇಕವಾದುದು ಎಂಬುದೂ ಅವರದೇ ವಿವೇಕದ ನುಡಿಗಳು. ಕಲಿತ ಜ್ಞಾನವನ್ನು ಇತರರಿಗೆ ಹಂಚದಿದ್ದರೆ ಅದೂ ಕಳ್ಳತನದಂತೆ ಎಂದು ಶತಾಯು ಪಂ. ಸುಧಾಕರ ಚತುರ್ವೇದಿಯವರು ಹೇಳುತ್ತಿರುತ್ತಾರೆ. ಇಂತಹ ಮಾತುಗಳು ರುಚಿಸುವುದು ಕಷ್ಟವೇ. ನಮ್ಮ ನಾಯಕರನ್ನೇ ನೋಡಿ, ಕೋಟಿ ಕೋಟಿ ಸಾರ್ವಜನಿಕರ ಹಣವನ್ನು ಬಾಚಿಕೊಂಡರೂ ಅವರುಗಳಿಗೆ ತೃಪ್ತಿ ಸಿಗುತ್ತದೆಯೇ? ಅಂತಹ ನುಂಗಣ್ಣರಿಗೆ ಅಸ್ತೇಯದ ಪಾಠ ಹೇಳಿದರೆ ಕೇಳುತ್ತಾರೆಯೇ? ಹೋಗಲಿ ಬಿಡಿ, ಏಕೆಂದರೆ ಅಂತಹವರನ್ನು ನಮ್ಮ ಪ್ರತಿನಿಧಿಗಳೆಂದು ಆರಿಸಿರುವವರು ನಾವೇ ಅಲ್ಲವೇ?
     ಕದಿಯದಿರುವುದು ಎಂಬುದು ಅತ್ಯಂತ ಸರಳ, ಆದರೆ ಪಾಲಿಸಲು ಬಹಳ ಕಷ್ಟವಾದ ಜೀವನದ ನಿಯಮ. ಪಾಲಿಸುವವರು ಶ್ರೇಷ್ಠರು, ಸಾಧಕರೇ ಸರಿ. ಅಸ್ತೇಯದಲ್ಲಿ ಮೂರು ವಿಧಗಳಿವೆ - ಕಾಯಾ, ವಾಚಾ, ಮನಸಾ. ಕಾಯಾ ಅಥವ ಭೌತಿಕ ಅಸ್ತೇಯವೆಂದರೆ, ನಮ್ಮದಲ್ಲದ ವಸ್ತುವನ್ನು ಬಲವಂತವಾಗಿ ಅಥವ ಮೋಸದಿಂದ ಅಥವ ಕಳ್ಳತನದಿಂದ ಅದರ ಮಾಲಿಕರ ಅನುಮತಿಲ್ಲದೆ ಹೊಂದದಿರುವುದು. ವಾಚಾ ಅಸ್ತೇಯವೆಂದರೆ, ಇನ್ನೊಬರಿಗೆ ಸೇರಬೇಕಾದ ಗೌರವ, ವೈಭವ, ಗುಣಗಳನ್ನು ಮಾತಿನಲ್ಲಾದರೂ ಹೊಂದದಿರುವುದು, ಇತರರ ಗುಣಗಳ ಬಗ್ಗೆ ಹಗುರವಾಗಿ ಮಾತನಾಡದಿರುವುದು ಸೇರುತ್ತದೆ. ಮಾನಸಿಕ ಅಥವ ಬೌದ್ಧಿಕ ಆಸ್ತೇಯ ಕ್ಲಿಷ್ಟಕರವಾದುದು. 'ಅವನಿಗೆ ಅಷ್ಟೊಂದು ಹಣವಿದೆ. ಅದರಲ್ಲಿ ಸ್ವಲ್ಪವಾದರೂ ನನಗೆ ಸಿಕ್ಕಿದ್ದರೆ' ಎಂದು ಮನಸ್ಸಿನಲ್ಲೂ ಯೋಚಿಸದಿರುವುದು. ಇದರ ಅರ್ಥ, ಸಂಪತ್ತು ಹೊಂದುವುದನ್ನು ಬಯಸಬಾರದೆಂದಲ್ಲ, ಅದಕ್ಕಾಗಿ ಶ್ರಮಿಸಬೇಕಷ್ಟೆ. 
     ನಾವು, ನೀವು ಸಾಮಾನ್ಯವಾಗಿ ಕಾಣಬಹುದಾದ ಪ್ರಸಂಗದ ಬಗ್ಗೆ ಗಮನ ಹರಿಸೋಣ. ಒಂದು ಡಿಪಾರ್ಟ್‌ಮೆಂಟಲ್ ಸ್ಟೋರಿಗೆ ಖರೀದಿಗೆ ಹೋಗುತ್ತೇವೆಂದುಕೊಳ್ಳೋಣ. ಒಂದು ವಸ್ತುವನ್ನು ಇತರರಿಗೆ ಕಾಣದಂತೆ ಕದ್ದು ಜೇಬಿನಲ್ಲೋ, ಮತ್ತೆಲ್ಲೋ ಇಟ್ಟುಕೊಂಡು ಅದಕ್ಕೆ ದುಡ್ಡು ಕೊಡದೆ ಹೊರಬಂದರೆ ಅದು ಕಳ್ಳತನವೆಂದು ನಮಗೇ ಗೊತ್ತಾಗುತ್ತದೆ. ಆದರೆ ಸಾಮಗ್ರಿಗಳನ್ನು ತೆಗೆದುಕೊಂಡು ಬಿಲ್ಲು ಮಾಡಿಸುವ ಸಂದರ್ಭದಲ್ಲಿ ಅಂಗಡಿಯವರು ಯಾವುದಾದರೂ ಒಂದು ವಸ್ತುವಿಗೆ ಬಿಲ್ಲು ಮಾಡುವುದನ್ನು ಮರೆತನೆಂದು ಇಟ್ಟುಕೊಳ್ಳಿ. ನಮಗೆ ಅದು ಗೊತ್ತಾದರೂ ಸುಮ್ಮನಿದ್ದರೆ, ನಾವು ಕದ್ದು ತೆಗೆದುಕೊಂಡು ಹೋಗುವ ವಸ್ತುವಿಗೂ ಇದಕ್ಕೂ ವ್ಯತ್ಯಾಸವಿದೆಯೇ? ಈ ಪ್ರಸಂಗದಲ್ಲಿ ತಪ್ಪು ನಮ್ಮದಲ್ಲ, ಆ ಅಂಗಡಿಯವನದು ಎಂದುಕೊಂಡುಬಿಡುತ್ತೇವೆ. ತುಂಬಾ ರೇಟು ಹಾಕುತ್ತಾನೆ, ಇದರಿಂದ ಅವನಿಗೇನೂ ನಷ್ಟವಾಗುವುದಿಲ್ಲವೆಂದು ಸಮಾಧಾನ ಮಾಡಿಕೊಂಡುಬಿಡುತ್ತೇವೆ. ಅಂಗಡಿಯಿಂದ ವಸ್ತುವನ್ನು ಕದಿಯದೆ ಇರುವುದಕ್ಕೆ ಎರಡು ಕಾರಣಗಳಿರುತ್ತವೆ: ಒಂದು, ಸಿಕ್ಕಿಹಾಕಿಕೊಂಡರೆ ಮರ್ಯಾದೆ ಹೋಗುತ್ತದೆ ಎಂಬ ಭಯ ಮತ್ತು ಇನ್ನೊಂದು, ಕದಿಯುವುದು ತಪ್ಪು ಎಂಬ ಅರಿವು. ಕದಿಯುವುದು ತಪ್ಪು ಎಂಬ ಮನೋಭಾವ ಇದ್ದರೆ ಬಿಲ್ಲು ಹಾಕದೆ ಇರುವ ವಸ್ತುವಿನ ಬಗ್ಗೆ ಅಂಗಡಿಯವರ ಗಮನ ಸೆಳೆಯುತ್ತೇವೆ. ಇಲ್ಲದಿದ್ದರೆ ಇಲ್ಲ. ಚಿಲ್ಲರೆ ವಾಪಸು ಕೊಡುವಾಗ ಕೊಡಬೇಕಾದ ಮೊತ್ತಕ್ಕಿಂತ ಹೆಚ್ಚು ಕೊಟ್ಟರೆ, ಹೆಚ್ಚಾಗಿ ಕೊಟ್ಟುದನ್ನು ಇಟ್ಟುಕೊಳ್ಳುತ್ತೇವೆಯೋ ಅಥವ ವಾಪಸು ಕೊಡುತ್ತೇವೆಯೋ ಎಂಬುದಕ್ಕೂ ಇದೇ ಮಾನದಂಡ ಅನ್ವಯಿಸುತ್ತದೆ. ಕದಿಯುವುದು ತಪ್ಪು ಎಂಬುದನ್ನು ಅರಿತರೆ ನಾವು ಕದಿಯುವುದಿಲ್ಲ. ಹಾಗೆಯೇ ಕದಿಯುವುದರಿಂದ ನಮ್ಮ ಮತ್ತು ಇತರರ ಅಶಾಂತಿಗೆ, ತಳಮಳಕ್ಕೆ, ಅಸಮಾಧಾನಗಳಿಗೆ ಕಾರಣವಾಗುತ್ತದೆ ಎಂದು ಭಾವಿಸುವುದಾದರೆ ಆಗಲೂ ಸಹ ಕದಿಯುವುದಿಲ್ಲ.
     ಸತ್ಯ, ಅಪರಿಗ್ರಹ ಮತ್ತು ಅಸ್ತೇಯ ಅವಿಭಾಜ್ಯ ಸಂಗತಿಗಳು. ಅಕ್ರಮ ಮತ್ತು ಅನೈತಿಕ ಸಂಬಂಧಗಳು, ಪತ್ನಿ/ಪತಿಗೆ ಗೊತ್ತಾಗುವಂತೆ ಆಗಲಿ, ಗೊತ್ತಾಗದಿರುವಂತೆ ಆಗಲಿ ಅದು ಕಳ್ಳತನವೇ ಸರಿ. ಪತಿ/ಪತ್ನಿಗೆ ಗೊತ್ತಾಗದಂತೆ ಅಕ್ರಮ ಸಂಬಂಧವಿಟ್ಟುಕೊಂಡಿದ್ದು, ನಾನು ಯಾರಿಗೂ ಮೋಸ ಮಾಡುತ್ತಿಲ್ಲವೆಂದರೆ ಅದನ್ನು ಒಪ್ಪಲಾಗುವುದಿಲ್ಲ. ಅಕ್ರಮ ಸಂಬಂಧದ ಬಗ್ಗೆ ಸಂಗಾತಿಗೆ ತಿಳಿದಾಗ ಅವರು ಮೊದಲಿನಂತೆ ವಿಶ್ವಾಸ/ಪ್ರೀತಿ ತೋರಿಸುತ್ತಾರೆಯೇ? ಇಲ್ಲವೆಂದಾದರೆ, ಅವರು ಅಕ್ರಮ ಸಂಬಂಧದ ಬಗ್ಗೆ ತಿಳಿಯದೆ ಇದ್ದಾಗ ತೋರಿಸುವ ಪ್ರ್ರೀತಿಯನ್ನು ಕಳ್ಳತನದಿಂದ, ಮೋಸದಿಂದ ಪಡೆಯುತ್ತಿದ್ದರು ಎಂದು ಆಗುವುದಿಲ್ಲವೇ? ಅಕ್ರಮ ಸಂಬಂಧವಿಲ್ಲದಿದ್ದರೂ ಅಕ್ರಮ ಸಂಬಂಧದ ಆರೋಪ ಮಾಡಿ ಒಬ್ಬರು ಇನ್ನೊಬ್ಬರ ನೆಮ್ಮದಿಯನ್ನು ಕದಿಯವುದನ್ನೂ ಕಾಣುತ್ತಿರುತ್ತೇವೆ, ಅಷ್ಟೇ ಏಕೆ, ಜೀವನವನ್ನೇ ಹಾಳು ಮಾಡುವುದನ್ನೂ (ದರೋಡೆ ಮಾಡುವುದು ಅನ್ನಬಹುದೇ?) ಕಾಣುತ್ತಿರುತ್ತೇವೆ.
     'ನಾನು ಏನು ಪಡೆಯಬಲ್ಲೆ' ಮತ್ತು 'ನಾನು ಏನು ಕೊಡಬಲ್ಲೆ' ಎಂಬುದರಲ್ಲಿನ ಮನೋಭಾವದ ವ್ಯತ್ಯಾಸ ಅಗಾಧವಾಗಿದೆ. 'ನಾನು ಏನು ಪಡೆಯಬಲ್ಲೆ' ಎಂಬುದರಲ್ಲಿ ಬಯಕೆಯ, ಕೊರತೆಯ ಭಾವ ಮತ್ತು ಕೂಡಿಡುವ ಮನಸ್ಥಿತಿ ಇರುತ್ತದೆ. 'ನಾನು ಏನು ಕೊಡಬಲ್ಲೆ' ಎಂಬುದರಲ್ಲಿ ಪ್ರೀತಿಯ ನೆರಳಿರುತ್ತದೆ. ಪ್ರೀತಿಯನ್ನು ನಮ್ಮ ದೇಹಕ್ಕೆ, ಸ್ವಂತಕ್ಕೆ, ಇತರರಿಗೆ ಮತ್ತು ಪ್ರಕೃತಿಗೆ ಕೊಡುವ, ಹಂಚುವ ಮನಸ್ಥಿತಿ ಇರುತ್ತದೆ. ಒಂದು ಗಾದೆ ಇದೆ, "ನಾವು ಕೊಟ್ಟರೆ ನಮಗೆ ಸಿಗುತ್ತದೆ". ಅಸ್ತೇಯ ಅನಗತ್ಯವಾಗಿ, ನಮ್ಮದಲ್ಲದ್ದನ್ನು ಪಡೆಯುವುದನ್ನು ತಡೆಯುತ್ತದೆ. ಇದು ಇನ್ನೊಂದು ರೀತಿಯಲ್ಲಿ ಸುತ್ತಲಿನವರಿಗೆ, ಸಮಾಜಕ್ಕೆ ಪ್ರೀತಿಯನ್ನು ತೋರಿಸುವ ಅದ್ಭುತ ನಡೆಯಾಗುತ್ತದೆ.
     ಉಳ್ಳವರು ಮಾಡುವ ಕಳ್ಳತನ ಕ್ಷಮಾರ್ಹವಲ್ಲ. ಆದರೆ ಹಸಿವಿನಿಂದ ನರಳುತ್ತಿರುವವರು ಬದುಕಲು ಆಹಾರ ಕಳವು ಮಾಡಿದರೆ ತಪ್ಪಾಗುವುದೆ? ಈ ವಿಷಯದಲ್ಲಿ ಅವರ ತಪ್ಪಿಗಿಂತ ಸಮಾಜದ ತಪ್ಪೇ ಹೆಚ್ಚು. ಹೀನರನ್ನು, ದೀನರನ್ನು ಪ್ರೀತಿಯಿಂದ ಕಾಣಬೇಕು, ಅವರನ್ನು ಮೇಲೆತ್ತಬೇಕು ಎಂಬುದು ಪ್ರತಿ ಧರ್ಮದ ಸಾರ. ಹಸಿದವರಿಗೆ ಅನ್ನವಿಕ್ಕುವುದು ಅತ್ಯಂತ ದೊಡ್ಡ ಧರ್ಮ. ಅವರು ಇತರರಂತೆ ಬಾಳಲು ಅನುಕೂಲ ಮಾಡಿಕೊಡುವುದು ಅದಕ್ಕಿಂತ ಹೆಚ್ಚಿನ ಧರ್ಮ. ಅಂತಹ ಪರಿಸ್ಥಿತಿ ನಿರ್ಮಾಣವಾದರೆ ಹಸಿವಿನಿಂದ ಬಳಲಿ ಆಹಾರ ಕದಿಯುವ ಪ್ರಮೇಯ ಬರಲಾರದು. 
     ನಮ್ಮ ಬಗ್ಗೆ ನಾವೇ ಮೋಸ ಮಾಡಿಕೊಳ್ಳುವುದೂ ಇದೆ. ನಾಲಿಗೆಗೆ ರುಚಿ ಎಂದು ತಿನ್ನಬಾರದುದನ್ನು ತಿಂದರೆ, ಚಪಲಕ್ಕಾಗಿ ಮಾದಕ ದ್ರವ್ಯಗಳನ್ನು ಸೇವಿಸಿದರೆ, ದೇಹ ಸುಸ್ಥಿತಿಯಲ್ಲಿರಲು ವ್ಯಾಯಾಮ ಮಾಡದಿದ್ದರೆ ನಾವು ನಮ್ಮದೇ ದೇಹದ ಆರೋಗ್ಯದ ಕಳವು ಮಾಡಿದಂತೆ ಆಗುವುದಿಲ್ಲವೇ? ಕೇವಲ ಕಳವು ಅಲ್ಲ, ದೇಹದ ವಿರುದ್ಧ ಹಿಂಸೆಯನ್ನೂ ಕೊಟ್ಟಂತೆ ಆಗುತ್ತದೆ. ನಾವು ಯಾರ ವಿರುದ್ಧವೋ ಕಿರುಚಾಡಿದರೆ, ನಿಂದಿಸಿದರೆ ನಮ್ಮದೇ ಮನಸ್ಸಿನ ಆರೋಗ್ಯವನ್ನು ಹಾಳು ಮಾಡಿಕೊಳ್ಳುವುದಲ್ಲದೆ, ಇತರರಲ್ಲೂ ಅಶಾಂತಿ ಉಂಟುಮಾಡಿ ಅವರ ಸಮಾಧಾನದ ಕಳುವನ್ನೂ ಮಾಡುತ್ತೇವೆ. ಆತ್ಮಾವಲೋಕನ ಮಾಡಿಕೊಂಡಾಗ ನನ್ನನ್ನೂ ಸೇರಿಸಿ ನಾವುಗಳು ಎಷ್ಟರಮಟ್ಟಿಗೆ ಅಸ್ತೇಯದ ಪಾಲನೆ ಮಾಡುತ್ತಿದ್ದೇವೆ ಎಂಬುದು ನಮಗೇ ಗೊತ್ತಾಗುತ್ತದೆ. ನಾವು ಏನು ಮಾಡಬಹುದು ಎಂಬುದು ಸಹ ನಮಗೇ ತಿಳಿಯುತ್ತದೆ. ಏನು ಮಾಡಬೇಕೆಂದು ನಾವೇ ನಿರ್ಧರಿಸಿಕೊಳ್ಳೋಣ. ಕದಿಯದಿರುವುದು ಸುಲಭವಲ್ಲ ಅಲ್ಲವೇ? 
-ಕ.ವೆಂ.ನಾಗರಾಜ್.
**************
[ಜನಮಿತ್ರದಲ್ಲಿನ  'ಚಿಂತನ' ಅಂಕಣದಲ್ಲಿ 21-04-2014ರಲ್ಲಿ ಪ್ರಕಟಿತ]

ಶುಕ್ರವಾರ, ಏಪ್ರಿಲ್ 18, 2014

ನಿಜರಸಿಕರಾಗೋಣ!

      ರಸಿಕರಾಗೋಣ!
      ಈ ಮಾತು ಹೇಳಿದರೆ ಈ ವಯಸ್ಸಿನಲ್ಲಿ ಇದೇನು ಹೇಳುತ್ತಿದ್ದಾನೆ ಎಂದು ಅನ್ನಿಸಬಹುದು. ಹೀಗೆ ಅನ್ನಿಸುವುದು ಸಹಜವೇ ಸರಿ. ಏಕೆಂದರೆ ರಸಿಕತೆ ಎಂದರೆ ವಿಲಾಸಪ್ರಿಯತೆ, ಸರಸವಾಗಿರುವಿಕೆ ಎಂಬ ಅರ್ಥವಿದೆ. ರಸಿಕನೆಂದರೆ ವಿಷಯಲಂಪಟನೆಂದೇ ತಿಳಿಯುವವರು ಹೆಚ್ಚು.  ೯೦ ವರ್ಷದ ಮುದುಕ ೧೮ ವರ್ಷದ ಹುಡುಗಿಯನ್ನು ಮದುವೆಯಾಗುವ ಸುದ್ದಿ, ಕಪಟ ಸಂನ್ಯಾಸಿಗಳ ಕುರಿತು ಅಗತ್ಯಕ್ಕಿಂತ ಹೆಚ್ಚು ಅಬ್ಬರದ ಕುಪ್ರಚಾರ, ಅನ್ಶೆತಿಕ ಸಂಬಂಧಗಳ ವರ್ಣರಂಜಿತ, ವೈಭವೀಕರಿಸಿದ ಸುದ್ದಿಗಳು ದೃಷ್ಯಮಾಧ್ಯಮಗಳಲ್ಲಿ ಪ್ರಧಾನವಾಗಿ ಕಾಣಿಸಿಕೊಳ್ಳುತ್ತವೆ. ವಿಷಯಲಂಪಟತೆಯನ್ನು ಕೃಷ್ಣಲೀಲೆ ಎನ್ನುವುದು, ವಿಷಯಲಂಪಟರನ್ನು 'ಕೃಷ್ಣಪರಮಾತ್ಮ' ಎಂದು ವ್ಯಂಗ್ಯವಾಗಿ ಹೋಲಿಸುವುದು, ಇತ್ಯಾದಿಗಳು 'ರಸಿಕತೆ' ಎಂಬ ಪದ ಈಗ ಯಾವ ಅರ್ಥ ಪಡೆದುಕೊಂಡಿದೆಯೆಂಬುದರ ದ್ಯೋತಕ. ಧನಾತ್ಮಕ ವಿಷಯಗಳಿಗೆ, ಸುಕೃತಿಗಳಿಗೆ ಪ್ರಾಧಾನ್ಯತೆ ಸಿಗದಿರುವುದು, ಕೇವಲ ಋಣಾತ್ಮಕ ಸಂಗತಿಗಳಿಗೆ, ವಿಕೃತಿಗಳಿಗೆ ಸಿಗಬೇಕಾದಕ್ಕಿಂತ ಹೆಚ್ಚು ಪ್ರಾಧಾನ್ಯತೆ ಸಿಗುತ್ತಿರುವುದರಿಂದ 'ರಸಿಕತೆ'ಯ ನಿಜವಾದ ಅರ್ಥ ಕಣ್ಮರೆಯಾಗಿದೆಯೇನೋ ಎಂದು ಭಾಸವಾಗುತ್ತಿದೆ. ಈ ಕಾರಣದಿಂದ ರಸಿಕತೆಯ ಕೆಲವು ಮಗ್ಗಲುಗಳನ್ನು ವಿವೇಚಿಸುವುದು ಈ ಬರಹದ ಉದ್ದೇಶ.
     ರಸವೆಂದರೆ 'ಸಾರ', ರಸಿಕನೆಂದರೆ ರಸಾಸ್ವಾದ ಮಾಡುವವನು ಎಂದಷ್ಟೇ ಅರ್ಥ. ರಸಿಕತೆಯೆಂದರೆ ಅದರಲ್ಲಿ ನಿಜವಾದ ಸುಖ, ಸಂತೋಷ ಸಿಗುವಂತಿರಬೇಕು. ಇಲ್ಲದಿದ್ದರೆ ಅದು ನ್ಶೆಜ ರಸಿಕತೆಯೆನಿಸಲಾರದು. ಚಾಕೊಲೇಟು, ಪೆಪ್ಪರಮೆಂಟುಗಳನ್ನು ಸವಿಯುವ ಮಕ್ಕಳನ್ನು ಗಮನಿಸಿದ್ದೀರಾ? ಎಲ್ಲಿ ಚಾಕೊಲೇಟು ಬೇಗ ಮುಗಿದು ಹೋಗುವುದೋ ಎಂದು ನಿಧಾನವಾಗಿ ರಸವನ್ನು ಚಪ್ಪರಿಸುತ್ತಾ ಆಗಾಗ್ಗೆ ಅದನ್ನು ಬಾಯಿಂದ ಹೊರತೆಗೆದು ನೋಡಿ ಖುಷಿಪಡುವ ಮಕ್ಕಳನ್ನು 'ಕೈ, ಬಾಯಿ ಎಲ್ಲವನ್ನೂ ಅಂಟು ಮಾಡಿಕೊಳ್ಳಬೇಡ'ವೆಂದು ದೊಡ್ಡವರು ಗದರಿಸುತ್ತಾರಲ್ಲವೇ? ಆದರೆ, ಯಾವುದನ್ನೂ ಲೆಕ್ಕಿಸದ ಮಗು ತನ್ನ ಪಾಡಿಗೆ ತಾನು ರಸಾಸ್ವಾದ ಮಾಡುತ್ತಿರುತ್ತದೆ, ಆನಂದಿಸುತ್ತಿರುತ್ತದೆ. ತನಗೆ ಖುಷಿ ಕೊಡುವ ಚಾಕೋಲೇಟನ್ನು ತೆಗೆತೆಗದು ನೋಡಿ ಕಣ್ತುಂಬಿಕೊಳ್ಳುತ್ತಿರುತ್ತದೆ. ಅದು ರಸಿಕತೆ! ಎಳೆಯ ಕಂದಮ್ಮಗಳನ್ನು ಆಡಿಸಿದಾಗ ಅವು ಬೊಚ್ಚುಬಾಯಿ ಬಿಟ್ಟು ಕೇಕೆ ಹಾಕಿ ನಗುವುದರಲ್ಲಿ ರಸಿಕತೆಯಿದೆ, ಏಕೆಂದರೆ ಅಲ್ಲಿ ಕೃತಕತೆಯ ಸೋಂಕಿಲ್ಲ. ನಾವೂ ಅಷ್ಟೆ, ರುಚಿರುಚಿಯಾದ ಪದಾರ್ಥಗಳನ್ನು ಗಬಗಬನೆ ತಿನ್ನುವುದಿಲ್ಲ, ಕುಡಿಯುವುದಿಲ್ಲ. ಅದರ ಸವಿಯನ್ನು ಅನುಭವಿಸುತ್ತಾ ಸ್ವಲ್ಪ ಸ್ವಲ್ಪವಾಗಿ ತಿನ್ನುತ್ತೇವಲ್ಲಾ, ಕುಡಿಯುತ್ತೇವಲ್ಲಾ, ಅದರಲ್ಲಿ ರಸಿಕತೆಯಿದೆ. ಟಿವಿಯನ್ನು ನೋಡುತ್ತಾ ರುಚಿಯನ್ನು ಅನುಭವಿಸದೆ ತಿಂದು, ಕುಡಿದು ಮಾಡುವವರು ನೈಜಸ್ವಾದವನ್ನು ಅನುಭವಿಸಲಾರರು. ನ್ಶೆಜಸವಿಯನ್ನು ಸವಿಯೋಣ, ನಿಜರಸಿಕರಾಗೋಣ.
     ರಸಿಕತೆಯಲ್ಲಿ ತನ್ಮಯತೆಯಿದೆ. ಧಾರ್ಮಿಕ ಸಮಾರಂಭದಲ್ಲಿ, ದೇವಸ್ಥಾನಗಳಲ್ಲಿ ಸಾಮೂಹಿಕ ಭಜನೆ ನಡೆಯುವ ಸಂದರ್ಭದಲ್ಲಿ ಕೆಲವರು ತಮ್ಮನ್ನೇ ಮರೆತು ತನ್ಮಯರಾಗಿ ಭಾವಪರವಶತೆಯಿಂದ, ಆನಂದಾನುಭವ ಹೊಂದುವುದನ್ನು  ಗಮನಿಸಿರಬಹುದು, ಆನಂದಾನುಭವ ನೀಡುವ ಆ ತನ್ಮಯತೆಯೇ ರಸಿಕತೆ! ಮನಸ್ಸಿಗೆ ಹಿತವಾಗುವ ಸಂಗೀತ, ಕಾರ್ಯಕ್ರಮಗಳೂ ಸಹ ಇಂತಹ ರಸಾನುಭೂತಿಗೆ ನೆರವಾಗುತ್ತವೆ. ಒಬ್ಬ ಚಿತ್ರಕಾರ, ಒಬ್ಬ ಬರಹಗಾರ, ಒಬ್ಬ ಶಿಲ್ಪಿ ತಮ್ಮ ಕೃತಿಯನ್ನು ಶ್ರದ್ಧೆಯಿಂದ ಪೂರ್ಣಗೊಳಿಸಿದ ನಂತರ ಅದನ್ನು ಮತ್ತೆ ಮತ್ತೆ ನೋಡಿ ಕಣ್ತುಂಬಿಕೊಳ್ಳುತ್ತಾರಲ್ಲಾ, ಆನಂದಿಸುತ್ತಾರಲ್ಲಾ, ಅದು ರಸಿಕತೆ! ಹೊಟ್ಟೆಪಾಡಿಗೆ ಮಾಡುವ ಕೆಲಸದಲ್ಲೂ ಆನಂದ ಕಾಣುವ ರಸಿಕರಿದ್ದಾರೆ. ಅಂತಹ ರಸಿಕರೇ ತಾವು ಮಾಡುವ ಕೆಲಸವನ್ನು ಅಚ್ಚುಕಟ್ಟಾಗಿ, ಚೊಕ್ಕವಾಗಿ ಮಾಡುವವರೆಂದರೆ ಅದರಲ್ಲಿ ಅತಿಶಯೋಕ್ತಿಲ್ಲ. ಇಂತಹವರಿಂದಲೇ ಏನನ್ನಾದರೂ ಸಾಧಿಸಲು ಸಾಧ್ಯ. ಸ್ವಾಮಿ ವಿವೇಕಾನಂದರ ಈ ಮಾತು ಮನನೀಯ: "ಒಂದು ವಿಚಾರವನ್ನು ತೆಗೆದುಕೊಳ್ಳಿ. ಆ ವಿಚಾರವನ್ನು ನಿಮ್ಮ ಜೀವನವನ್ನಾಗಿಸಿಕೊಳ್ಳಿ, ಅದರ ಬಗ್ಗೆ ಕನಸು ಕಾಣಿ, ಅದರಲ್ಲೇ ಜೀವಿಸಿ. ನಿಮ್ಮ ಮೆದುಳು, ಸ್ನಾಯು, ನರಮಂಡಲ ಮತ್ತು ದೇಹದ ಎಲ್ಲಾ ಭಾಗಗಳೂ ಆ ವಿಚಾರದಲ್ಲೇ ಮುಳುಗಿರಲಿ. ಇತರ ಎಲ್ಲಾ ವಿಚಾರಗಳನ್ನೂ ಬದಿಗೆ ಸರಿಸಿ. ಅದು ಯಶಸ್ಸಿಗೆ ದಾರಿ. ದೊಡ್ಡ ಸಾಧಕರುಗಳು ಸಿದ್ಧಗೊಳ್ಳುವುದು ಹೀಗೆಯೇ." ಶ್ರದ್ಧಾಪೂರ್ವಕವಾಗಿ ಮನವೊಪ್ಪುವ ಕೆಲಸಗಳಲ್ಲಿ ತೊಡಗಿಕೊಂಡು, ಅದರಿಂದ ಸಿಗುವ ಹಿತಾನಂದವನ್ನು ಅನುಭವಿಸುವ ರಸಿಕರಾಗೋಣ.
ದೇಹ ದೇಹದ ಬೆಸುಗೆಯೆನಿಸುವುದು ಕಾಮ
ಹೃದಯಗಳ ಮಿಲನದಿಂದರಳುವುದು ಪ್ರೇಮ |
ಆತ್ಮ ಆತ್ಮಗಳೊಂದಾಗೆ ಆತ್ಮಾಮೃತಾನಂದ
ಅಂತರಂಗದ ಸುಖವೆ ಸುಖವು ಮೂಢ ||
     ರಸಿಕತೆಯೆಂದರೆ ಪ್ರೀತಿಸುವುದು, ಅದರಲ್ಲಿ ಪೂರ್ಣ ಸಂತೋಷ ಪಡೆಯುವುದು. ಕಳ್ಳತನದ ಕಾಮದಾಟವನ್ನು ರಸಿಕತೆಯೆನ್ನುವುದಾದರೆ ಅದು ಆ ಪದಕ್ಕೆ ಮಾಡುವ ಅಪಚಾರವೇ ಸರಿ. ಏಕೆಂದರೆ ಅಂತಹ ಕ್ರಿಯೆಯಲ್ಲಿ ಪೂರ್ಣ ಸಂತೋಷ ಸಿಗುವುದೆಂಬುದು ಭ್ರಮೆ. ಅಂತಹ ಕ್ರಿಯೆಯಲ್ಲಿ ಅಳುಕಿದೆ, ಆತಂಕವಿದೆ, ಭಯವಿದೆ. ಇನ್ನು ಆನಂದಕ್ಕೆ ಅರ್ಥವೆಲ್ಲಿ? ಯಾವ ಕ್ರಿಯೆಯಿಂದ ಅಳುಕಿಲ್ಲದ, ಆತಂಕವಿಲ್ಲದ ಆನಂದ ದೊರೆಯುವುದೋ ಅದನ್ನು ಮಾತ್ರ ರಸಿಕತೆಯೆನ್ನಬಹುದು. ನಿಜವಾದ ರಸಿಕ ಬಲವಂತ ಮಾಡಲಾರ. ರಾವಣ ಸಹ ಸಮಾಗಮಕ್ಕಾಗಿ ಸೀತೆಯ ಒಪ್ಪಿಗೆ ಪಡೆಯಲು ಪ್ರಯತ್ನಿಸಿದನೇ ಹೊರತು ಬಲಾತ್ಕಾರ ಮಾಡಲಿಲ್ಲ. ಪ್ರೀತಿಯೆಂದರೆ ಕೇವಲ ಗಂಡು-ಹೆಣ್ಣಿನ ಮಿಲನಕ್ಕೆ ಸೀಮಿತವಾಗಿರದೆ, ಅದಕ್ಕೂ ಮೀರಿರಬೇಕು.  ಗಂಡು-ಹೆಣ್ಣಿನ ಮಿಲನ ಸಹ ಪ್ರೀತಿಪೂರ್ವಕವಾಗಿರಬೇಕು. ಇಲ್ಲದಿದ್ದರೆ ಅದನ್ನು ಕಾಮವೆಂದು ಮಾತ್ರ ಹೇಳಬಹುದು. ಪಾಶ್ಚಾತ್ಯರಲ್ಲಿ ಕಂಡು ಬರುವ ಮುಕ್ತಕಾಮವನ್ನು, ಗುತ್ತಿಗೆಯ ಪ್ರೇಮದಾಟಗಳು, ಕರಾರಿನ ವಿವಾಹಗಳು, ಇತ್ಯಾದಿಗಳನ್ನು  ಸ್ವೇಚ್ಛಾಚಾರದ ಸಾಲಿಗೆ ಸೇರಿಸಬಹುದೇ ಹೊರತು ರಸಿಕತೆಯೆನ್ನಲಾಗದು. ಅಲ್ಲಿ ದೈಹಿಕ ಕಾಮನೆಗಳನ್ನು ತೀರಿಸಿಕೊಳ್ಳುವ ಕ್ರಿಯೆಯಿದೆಯೇ ಹೊರತು ಪ್ರೀತಿಯ ಅಂಶ ಕಾಣಲಾಗದು. ನಿಜರಸಿಕರಾಗೋಣ.
     ತಾಯಿ-ಮಕ್ಕಳ ಪ್ರೀತಿ, ಮಕ್ಕಳನ್ನು ಮುದ್ದು ಮಾಡುವ ಹಿರಿಯರ ಪ್ರೀತಿ, ಮಕ್ಕಳು ದೊಡ್ಡವರನ್ನು ಪ್ರೀತಿಸುವ, ಗೌರವಿಸುವ ರೀತಿಯೂ ರಸಿಕತೆಯೇ! ನಾನು ಹೇಗಿದ್ದೇನೆ, ನನ್ನ ಆಕಾರ ಈಗ ಹೇಗಿದೆಯೆಂದು ನನಗೆ ಗೊತ್ತು. ಒಂದಾನೊಂದು ಕಾಲದಲ್ಲಿ ಸುಂದರನಾಗಿದ್ದೆನೇನೋ! ಆದರೂ ನನ್ನ ಮೊಮ್ಮಗಳು 'ಮೈ ತಾತಾ ಈಸ್ ವೆರಿ ವೆರಿ ಕ್ಯೂಟ್" ಅನ್ನುತ್ತಾಳೆ! ಸುಂದರತೆ ಅನ್ನುವುದು ಹೊರರೂಪದಲ್ಲಿ ಕಾಣುವುದಾಗಿದ್ದರೆ ಅವಳು ನನ್ನನ್ನು ಕ್ಯೂಟ್ ಅನ್ನಲು ಸಾಧ್ಯವಿರಲಿಲ್ಲ. ನಾನು ಅವಳನ್ನು ತುಂಬಾ ಹಚ್ಚಿಕೊಂಡಿದ್ದೇನೆ, ಮುದ್ದಿಸುತ್ತೇನೆ, ಪ್ರೀತಿಸುತ್ತೇನೆ, ಅದಕ್ಕೇ ಹಾಗೆ ಹೇಳಿರಬಹುದು. ನಿಷ್ಕಳಂಕವಾಗಿ ಪ್ರೀತಿಸುವ ಮತ್ತು ಆ ಮೂಲಕ ಸಿಗುವ ಅದ್ಭುತ ಆನಂದವನ್ನು ಪಡೆಯುವಂತಹ ರಸಿಕರಾಗೋಣ.
ಸುಖವನಾಳೆ ಭೋಗಿ ಮನವನಾಳೆ ಯೋಗಿ 
ಸುಖವನುಂಡೂ ದುಃಖಪಡುವವನೆ ರೋಗಿ |
ಸುಖವಿಮುಖಿಯಾದರೂ ಸದಾಸುಖಿ ಯೋಗಿ
ನಿಜರಸಿಕನವನೆ ತಿಳಿಯೊ ನೀ ಮೂಢ ||
      ನಿಜವಾದ ರಸಿಕರೆಂದರೆ ವಿರಾಗಿಗಳೇ! ಆಶ್ಚರ್ಯಪಡಬೇಡಿ. ಕಪಟಿ ಸನ್ಯಾಸಿಗಳನ್ನೂ ನೆನಪಿಸಿಕೊಳ್ಳಬೇಡಿ! ವಿರಾಗಿಗಳು, ಸನ್ಯಾಸಿಗಳು ಬಯಕೆಗಳನ್ನು, ಆಸೆಗಳನ್ನು ಬಿಟ್ಟವರು ಎಂದು ಹೇಳಲಾಗದು. ಅವರು ಸಾಮಾನ್ಯರು ಬಯಸುವಂತಹ ಸಂಗತಿಗಳು, ಆಸೆಗಳನ್ನು ಬಯಸುವವರಲ್ಲ. ಅವರದು ಅತ್ಯುನ್ನತ ಬಯಕೆ, ಆಸೆ. ಅವರು ಅತ್ಯುನ್ನತ ಬಯಕೆಯಾದ ಆತ್ಮವನ್ನು  ಅರಿಯುವ, ಆ ಮೂಲಕ ಪರಮಾತ್ಮನನ್ನು ಅರಿಯುವ ಹಾಗೂ ಅದರಿಂದ ಅತ್ಯುನ್ನತ ಆನಂದಸ್ಥಿತಿಯಾದ ಸಚ್ಚಿದಾನಂದಭಾವವನ್ನು ಹೊಂದುವ ಹೆಬ್ಬಯಕೆ ಹೊಂದಿದವರು. ಧ್ಯಾನದಿಂದ ಇಂತಹ ಸ್ಥಿತಿಯನ್ನು ತಲುಪಬಹುದೆನ್ನುತ್ತಾರೆ. ಹಿತವಾದ ಆನಂದಾನುಭವ ನೀಡುವ ಇದನ್ನೇ ಭಾವಸಮಾಧಿ ಅನ್ನುತ್ತಾರೆ. ಇದು ರಸಿಕತೆಯ ಉತ್ಕಟ ಸ್ಥಿತಿ. ಇಂತಹ ಸ್ಥಿತಿಯಲ್ಲಿ ಆನಂದಾನುಭವ ಹೊರತುಪಡಿಸಿ ಬೇರೆ ಏನೂ ಬೇಕೆನ್ನಿಸುವುದಿಲ್ಲ. ಆ ಸಂದರ್ಭದಲ್ಲಿ ಏನೇ ಆದರೂ ಪರವಾಗಿಲ್ಲವೆಂಬ ಸ್ಥಿತಿ ತಲುಪಿರುತ್ತಾರೆ, ದೇಹದ ಪರಿವೆಯೂ ಇರುವುದಿಲ್ಲ. ದೈವಿಕ ಆನಂದದ ಸ್ಥಿತಿಯಲ್ಲಿ ತತ್ತ ಬೇಕಿರುವುದಿಲ್ಲ, ಸಿದ್ಧಾಂತಗಳ ಅಗತ್ಯವಿರುವುದಿಲ್ಲ, ಮುಕ್ತಿ, ಮೋಕ್ಷ ಇತ್ಯಾದಿಗಳೂ ಬೇಕೆನ್ನಿಸುವುದಿಲ್ಲ. ಇದು ರಸಿಕತೆಯ ಮಹತ್ವ. ರಸಿಕರಾಗಲು ಪ್ರಯತ್ನಿಸೋಣ, ರಸಿಕರಾಗೋಣ!


-ಕ.ವೆಂ.ನಾಗರಾಜ್.

ಮಂಗಳವಾರ, ಏಪ್ರಿಲ್ 8, 2014

ಇತಿಹಾಸದ ನೈಜ, ಜೀವಂತ ಪ್ರತಿನಿಧಿ: ೧೧೮ನೆಯ ವರ್ಷಕ್ಕೆ ಕಾಲಿರಿಸಿರುವ ಪಂ. ಸುಧಾಕರ ಚತುರ್ವೇದಿ

     ಮರ್ಯಾದಾ ಪುರುಷೋತ್ತಮ ಶ್ರೀರಾಮನ ಜನ್ಮದಿನದಂದೇ ಪ್ರಖರ ಸತ್ಯವಾದಿ, ನಂಬಿದ ಧ್ಯೇಯಕ್ಕಾಗಿ ಟೀಕೆ, ಟಿಪ್ಪಣಿಗಳಿಗೆ ಅಂಜದೆ ಹಿಡಿದ ಹಾದಿಯಲ್ಲಿಯೇ ಅಳುಕದೆ ಮುಂದುವರೆದು, ಸತ್ಯಪ್ರಸಾರ ಮಾಡುತ್ತಿರುವ ಕರ್ಮಯೋಗಿ, ಶತಾಯು ಪಂಡಿತ ಸುಧಾಕರ ಚತುರ್ವೇದಿಯವರ ಜನ್ಮದಿನವೂ ಆಗಿರುವುದು ವಿಶೇಷವೇ ಸರಿ. ಈ ರಾಮನವಮಿಗೆ (೮-೦೪-೨೦೧೪) ೧೧೭ ವಸಂತಗಳನ್ನು ಕಂಡು ೧೧೮ನೆಯ ವರ್ಷಕ್ಕೆ ಕಾಲಿರಿಸಿರುವ ಅವರಿಗೆ ಶಿರಬಾಗಿ ಪ್ರಣಾಮಗಳನ್ನು ಸಲ್ಲಿಸುತ್ತಾ ಈ ಕೆಲವು ಸಾಲುಗಳನ್ನು ನಿಮ್ಮೊಡನೆ ಹಂಚಿಕೊಳ್ಳುತ್ತಿದ್ದೇನೆ. 
     ಪಂಡಿತ ಸುಧಾಕರ ಚತುರ್ವೇದಿಯವರ ಪೂರ್ವಿಕರು ತುಮಕೂರಿನ ಕ್ಯಾತ್ಸಂದ್ರದವರಾದರೂ ಇವರು ಹುಟ್ಟಿದ್ದು, ಬೆಳೆದಿದ್ದು ಎಲ್ಲಾ  ಬೆಂಗಳೂರಿನಲ್ಲಿಯೇ. ಶಿಕ್ಷಣ ಇಲಾಖೆಯಲ್ಲಿ ಇನ್ಸ್‌ಪೆಕ್ಟರ್ ಆಗಿದ್ದ ಶ್ರೀ ಟಿ.ವಿ. ಕೃಷ್ಣರಾವ್ ಮತ್ತು  ಶ್ರೀಮತಿ ಲಕ್ಷ್ಮಮ್ಮನವರ ಮಗನಾಗಿ ೧೮೯೭ರ ರಾಮನವಮಿಯಂದು ಬಳೇಪೇಟೆಯಲ್ಲಿದ್ದ ಮನೆಯಲ್ಲಿ ಜನಿಸಿದ ಇವರು ಸಂಪ್ರದಾಯಸ್ಥ ಬ್ರಾಹ್ಮಣ ಕುಟುಂಬಕ್ಕೆ ಸೇರಿದವರಾಗಿದ್ದರೂ ಅರ್ಥವಿಲ್ಲದ ಕುರುಡು ಸಂಪ್ರದಾಯಗಳನ್ನು ಒಪ್ಪದಿದ್ದವರು, ಸರಿ ಅನ್ನಿಸಿದ್ದನ್ನು ಮಾತ್ರ ಮಾಡಿದವರು. ನಾನು ಹಾಸನದವನೆಂದು ತಿಳಿದಾಗ, ಪಂಡಿತರು ತಮ್ಮ ತಂದೆ ಹಾಸನದ ಶಿಕ್ಷಣ ಇಲಾಖೆಯಲ್ಲೂ ಕೆಲಸ ನಿರ್ವಹಿಸಿದ್ದು ತಾವು ೬-೭ ವರ್ಷದವರಾಗಿದ್ದಾಗ -ಅಂದರೆ ಸುಮಾರು ೧೧೦ ವರ್ಷಗಳ ಹಿಂದೆ-  ಹಾಸನದ ದೇವಿಗೆರೆ ಸಮೀಪದಲ್ಲಿ ಬಾಡಿಗೆ ಮನೆಯೊಂದರಲ್ಲಿ ಕೆಲವು ಸಮಯ ಇದ್ದೆವೆಂದು ನೆನಪಿಸಿಕೊಂಡಿದ್ದರು.  ಅಪ್ಪಟ ಕನ್ನಡಿಗರಾದ ಪಂ. ಸುಧಾಕರ ಚತುರ್ವೇದಿಯವರು ತಮ್ಮ ೧೩ನೆಯ ವಯಸ್ಸಿನಲ್ಲಿಯೇ  ಉತ್ತರ ಭಾರತದ ಹರಿದ್ವಾರದ ಹತ್ತಿರದ ಕಾಂಗಡಿ ಗುರುಕುಲಕ್ಕೆ ಸೇರಿ ಉಪನಿಷತ್ತು, ವ್ಯಾಕರಣ, ಛಂದಸ್ಸು, ಗಣಿತ, ಜ್ಯೋತಿಷ್ಯ, ಷಡ್ದರ್ಶನಗಳು ಸೇರಿದಂತೆ ವೇದಾಧ್ಯಯನ ಮಾಡಿದವರು. ಮಹರ್ಷಿ ದಯಾನಂದ ಸರಸ್ವತಿಯವರ ವಿಚಾರಗಳಿಂದ ಪ್ರಭಾವ9ತರಾಗಿದ್ದು, ಸ್ವಾಮಿ ಶ್ರದ್ಧಾನಂದರ ಪ್ರೀತಿಯ ಶಿಷ್ಯರಾಗಿ ಬೆಳೆದವರು. ನಾಲ್ಕೂ ವೇದಗಳನ್ನು ಅಧ್ಯಯಿಸಿದ ಅವರು ನಿಜ ಅರ್ಥದಲ್ಲಿ ಚತುರ್ವೇದಿಯಾಗಿ, 'ಚತುರ್ವೇದಿ' ಎಂಬ ಸಾರ್ಥಕ ಹೆಸರು ಗಳಿಸಿದವರು.  ಜಾತಿ ಭೇದ ತೊಲಗಿಸಲು ಸಕ್ರಿಯವಾಗಿ ತೊಡಗಿಕೊಂಡವರು. ನೂರಾರು ಅಂತರ್ಜಾತೀಯ ವಿವಾಹಗಳನ್ನು ಮುಂದೆ ನಿಂತು ಮಾಡಿಸಿದವರು ಮತ್ತು ಅದಕ್ಕಾಗಿ ಬಂದ ವಿರೋಧಗಳನ್ನು ಎದುರಿಸಿದವರು. ವೇದದಲ್ಲಿ ವರ್ಣವ್ಯವಸ್ಥೆಯಿದೆಯೇ ಹೊರತು, ಹುಟ್ಟಿನಿಂದ ಬರುವ ಜಾತಿಪದ್ಧತಿ ಇಲ್ಲವೆಂದು ಪ್ರತಿಪಾದಿಸಿದವರು, ಮನುಷ್ಯರೆಲ್ಲಾ ಒಂದೇ ಜಾತಿ, ಬೇಕಾದರೆ ಗಂಡು ಜಾತಿ, ಹೆಣ್ಣುಜಾತಿ ಅನ್ನಬಹುದು ಎಂದವರು. ಸಾಹಿತಿಯಾಗಿಯೂ ಸಹ ಅನೇಕ ಕೃತಿಗಳನ್ನು ಜನಹಿತವನ್ನು ಮನದಲ್ಲಿ ಇಟ್ಟುಕೊಂಡೇ ಕನ್ನಡ, ಸಂಸ್ಕೃತ, ಇಂಗ್ಲಿಷ್, ಹಿಂದಿ ಭಾಷೆಗಳಲ್ಲಿ ರಚಿಸಿದವರು. 
     ಸ್ವಾತಂತ್ರ್ಯ ಹೋರಾಟದಲ್ಲಿ ತಮ್ಮನ್ನು ಸಕ್ರಿಯರಾಗಿ ತೊಡಗಿಸಿಕೊಂಡಿದ್ದ ಅವರು ಗಾಂಧೀಜಿಯವರ ಒಡನಾಟ ಹೊಂದಿದವರಾಗಿದ್ದರು. ಪಂಡಿತರು ಇದ್ದ ಗುರುಕುಲಕ್ಕೆ ಗಾಂಧೀಜಿಯವರು ಭೇಟಿ ಕೊಟ್ಟಿದ್ದ ಸಂದರ್ಭದಲ್ಲಿ ಇವರು ಗಾಂಧೀಜಿಯವರಿಂದ ಪ್ರಭಾವಿತರಾಗಿದ್ದಂತೆ, ಗಾಂಧೀಜಿಯವರೂ ಇವರಿಂದ ಪ್ರಭಾವಿತರಾಗಿದ್ದರು. ಗಾಂಧೀಜಿಯವರ ಹತ್ಯೆಯಾಗುವವರೆಗೂ ಇವರಿಬ್ಬರ ಸ್ನೇಹ ಮುಂದುವರೆದಿತ್ತು.  ಕುಪ್ರಸಿದ್ಧ ಜಲಿಯನ್ ವಾಲಾಬಾಗ್ ಹತ್ಯಾಕಾಂಡದ ಸಾಕ್ಷಿಯಾಗಿದ್ದ ಅವರು ಗಾಂಧೀಜಿಯವರ ಸೂಚನೆಯಂತೆ ಅಲ್ಲಿ ಹತರಾಗಿದ್ದವರ ನೂರಾರು ಶವಗಳ ಸಾಮೂಹಿಕ ಶವಸಂಸ್ಕಾರ ಮಾಡಿದವರು. ಕ್ರಾಂತಿಕಾರಿ ಭಗತ್ ಸಿಂಗರಿಗೆ ಗುರುವೂ ಆಗಿದ್ದವರು. ತಾವು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಲು ಸ್ವಾಮಿ ಶ್ರದ್ಧಾನಂದರ ಪ್ರೋತ್ಸಾಹ ಕಾರಣವಾದರೂ ವೇದದ 'ಅಧೀನಾಃ ಸ್ಯಾಮ ಶರದಃ ಶತಂ, ಭೂಯಶ್ಚ ಶರದಃ ಶತಾತ್' - 'ನೂರು ವರ್ಷಕ್ಕೂ ಹೆಚ್ಚುಕಾಲ ಸ್ವಾತಂತ್ರ್ಯದಿಂದ, ಆತ್ಮಗೌರವದಿಂದ ಬಾಳೋಣ' ಎಂಬ ಅರ್ಥದ ಸಾಲು ಸಂಗ್ರಾಮಕ್ಕೆ ಪ್ರೇರಿಸಿತ್ತು ಎಂದು ಹೇಳುತ್ತಾರೆ. ಭಾರತೀಯರನ್ನು ಕೀಳಾಗಿ ಕಾಣುತ್ತಿದ್ದ ಆಂಗ್ಲರ ನಡವಳಿಕೆ ಇವರ ಮತ್ತು ಇವರಂತಹ ಸಾವಿರಾರು ಜನರ ಸ್ವಾಭಿಮಾನವನ್ನು ಕೆಣಕಿ ಹೋರಾಟ ಕಾವು ಪಡೆದಿತ್ತು. ಹೋರಾಟ ಕಾಲದಲ್ಲಿ ಕೃಶ ಶರೀರದವರಾದರೂ ಇವರ ಮನೋಬಲ ಮತ್ತು ಛಲದಿಂದಾಗಿ ಅನೇಕ ಪ್ರಾಣಾಂತಿಕ ಪೆಟ್ಟುಗಳನ್ನು ಹಲವಾರು ಬಾರಿ ತಿಂದರೂ ಸಹಿಸಿ ಅರಗಿಸಿಕೊಂಡವರು. ದಂಡಿ ಉಪ್ಪಿನ ಸತ್ಯಾಗ್ರಹ, ಕ್ವಿಟ್ ಇಂಡಿಯಾ ಚಳುವಳಿ ಸೇರಿದಂತೆ ಅನೇಕ ಸತ್ಯಾಗ್ರಹಗಳಲ್ಲಿ ಸಕ್ರಿಯರಾಗಿ ಭಾಗವಹಿಸಿದ್ದವರು. ಸುಮಾರು ೧೫ ವರ್ಷಗಳ ಕಾಲ ಸೆರೆವಾಸ ಅನುಭವಿಸಿದವರು. ಭಾರತ-ಪಾಕಿಸ್ತಾನದ ವಿಭಜನೆಯ ಕಾಲದ ಭೀಕರ ಮಾರಣಹೋಮವನ್ನು ಕಂಡ ನೆನಪು ಮಾಸದೆ ಇರುವವರು. ಒಟ್ಟಿನಲ್ಲಿ ಹೇಳಬೇಕೆಂದರೆ ಇವರು ನಮ್ಮೊಡನಿರುವ  ಇತಿಹಾಸದ ನೈಜ ಜೀವಂತ ಪ್ರತಿನಿಧಿ.
     ವೇದ ಇವರ ಉಸಿರಾಗಿದೆ. ಸಾರ್ವಕಾಲಿಕ ಮೌಲ್ಯ ಸಾರುವ ವೇದಗಳ ಸಂದೇಶ ಸಾರುವುದೇ ಅವರ ಜೀವನ ಧ್ಯೇಯವಾಗಿದೆಯೆಂದರೆ ತಪ್ಪಿಲ್ಲ. ವೇದದ ಹೆಸರಿನಲ್ಲಿ ನಡೆಯುತ್ತಿರುವ ಅನೇಕ ಆಚರಣೆಗಳು ಅವೈದಿಕವಾಗಿರುವ ಬಗ್ಗೆ ಅಸಮಾಧಾನಿಯಾಗಿರುವ ಅವರು ಅಂತಹ ಆಚರಣೆಗಳನ್ನು ಖಂಡಿಸಿ ತಿಳುವಳಿಕೆ ನೀಡುವ ಕಾಯಕ ಮುಂದುವರೆಸಿದ್ದಾರೆ. 'ವೇದೋಕ್ತ ಜೀವನ ಪಥ'ವೆಂಬ ಕಿರು ಪುಸ್ತಕದಲ್ಲಿ ಜೀವನದ ಮೌಲ್ಯಗಳು, ಜೀವಾತ್ಮ, ಪರಮಾತ್ಮ, ಪ್ರಕೃತಿಗಳ ಸ್ವರೂಪ, ಮಾನವ ಧರ್ಮ, ಚತುರ್ವರ್ಣಗಳು, ಬ್ರಹ್ಮಚರ್ಯಾದಿ ಚತುರಾಶ್ರಮಗಳು, ದೈನಂದಿನ ಕರ್ಮಗಳು, ಷೋಡಶ ಸಂಸ್ಕಾರಗಳು, ರಾಜನೀತಿ, ಸಾಮಾಜಿಕ ಜೀವನ, ಚತುರ್ವಿಧ ಪುರುಷಾರ್ಥಗಳನ್ನು ವೇದದ ಹಿನ್ನೆಲೆಯಲ್ಲಿ ವಿಶ್ಲೇಷಿಸಿದ್ದು, ಅದರಂತೆ ನಡೆದದ್ದೇ ಆದಲ್ಲಿ ಜೀವನ ಸಾರ್ಥಕವಾಗುವುದು. 'ಅರವತ್ತಕ್ಕೆ ಅರಳು-ಮರಳು' ಎಂಬ ಪ್ರಚಲಿತ ಗಾದೆ ಮಾತಿಗೆ ವಿರುದ್ಧವಾಗಿ ಇಂದಿಗೂ ಪಂಡಿತರ ವೈಚಾರಿಕ ಪ್ರಖರತೆಯ ಹೊಳಪು ಮಾಸಿಲ್ಲ, ನೆನಪು ಕುಂದಿಲ್ಲ. ಇವರ ಜೀವನೋತ್ಸಾಹ ಬತ್ತದ ಚಿಲುಮೆಯಾಗಿದ್ದು ದೇಹ, ಮನಸ್ಸು, ಬುದ್ಧಿಗಳನ್ನು ಹಿಡಿತದಲ್ಲಿಟ್ಟುಕೊಂಡಿರುವುದೇ ಇದಕ್ಕೆ ಕಾರಣವಿರಬಹುದು. ಪ್ರಶಸ್ತಿ, ಸನ್ಮಾನಗಳಿಗಾಗಿ ಲಾಬಿ ನಡೆಸುವವರೇ ತುಂಬಿರುವ, ಅದಕ್ಕಾಗಿ ತಮ್ಮತನವನ್ನೇ ಮಾರಿಕೊಳ್ಳುವವರಿರುವ ಈ ದೇಶದಲ್ಲಿ ಪ್ರಚಾರದಿಂದ ದೂರವಿರುವ ಇವರು ನಿಜವಾದ ಭಾರತರತ್ನರೆಂದರೆ ತಪ್ಪಿಲ್ಲ. ಎರಡು ವರ್ಷಗಳ ಹಿಂದೆ ಕನ್ನಡ ರಾಜ್ಯೋತ್ಸವದಂದು ರಾಜ್ಯಸರ್ಕಾರ ಇವರನ್ನು ರಾಜ್ಯಪ್ರಶಸ್ತಿ ನೀಡಿ ಗೌರವಿಸಿದೆ. ಇಂತಹವರು ನಮ್ಮೊಡನೆ ಇರುವುದೇ ನಮ್ಮ ಸೌಭಾಗ್ಯ, ಪುಣ್ಯವೆನ್ನಬೇಕು. ಬೆಂಗಳೂರಿನ ಜಯನಗರದ ೫ನೆಯ ಬ್ಲಾಕಿನ ಶ್ರೀ ಕೃಷ್ಣಸೇವಾಶ್ರಮ ರಸ್ತ್ರೆಯ ಮನೆ ನಂ. ೨೮೬/ಸಿಯಲ್ಲಿ ವಾಸವಿರುವ ಇವರ ಮನೆಯಲ್ಲಿ ಪ್ರತಿ ಶನಿವಾರ ಸಾಯಂಕಾಲ ೫-೩೦ಕ್ಕೆ ಸರಿಯಾಗಿ ಸತ್ಸಂಗ ನಡೆಯುತ್ತಿದ್ದು, ಆಸಕ್ತರಿಗೆ ಮಾರ್ಗದರ್ಶನ ಮಾಡುತ್ತಿದ್ದಾರೆ. ಅವರ ವಿಚಾರಗಳನ್ನು ಒಪ್ಪಲೇಬೇಕೆಂದಿಲ್ಲ. ಎಲ್ಲವನ್ನೂ ಆಲೋಚಿಸಿ, ವಿಮರ್ಶಿಸಿಯೇ ಒಪ್ಪಬೇಕೆಂಬುದೇ ಅವರ ಆಗ್ರಹ. 
     ವೇದದ ಬೆಳಕಿನಲ್ಲಿ ಸತ್ಯ ವಿಚಾರಗಳನ್ನು ಪ್ರಸರಿಸುವ ಧ್ಯೇಯದಲ್ಲಿ ಅವಿರತ ತೊಡಗಿರುವ ಮಹಾನ್ ವ್ಯಕ್ತಿಯ ಮಾರ್ಗದರ್ಶನ ಹೀಗೆಯೇ ಮುಂದುವರೆಯುತ್ತಿರಲಿ ಎಂದು ಪ್ರಾರ್ಥಿಸೋಣ. ಕರ್ಮಯೋಗಿ ಸಾಧಕರಿಗೆ ಸಾಷ್ಟಾಂಗ ಪ್ರಣಾಮಗಳು.
-ಕ.ವೆಂ.ನಾಗರಾಜ್.
[8-04-2014ರ ಜನಮಿತ್ರ ಪತ್ರಿಕೆಯಲ್ಲಿ ಪ್ರಕಟಿತ ಲೇಖನ]

ಪಂಡಿತರೊಡನೆ: 
ಮಾಹಿತಿಗೆ: ಎರಡು ವರ್ಷಗಳ ಹಿಂದಿನ ಫೋಟೋಗಳಿವು.

ಸಂಪದಿಗ ಗಣೇಶರು ಒದಗಿಸಿದ ಮಾಹಿತಿ:

The Times of India
Bangalore



I have no desire for death: Pt Sudhakar Chaturvedi


BANGALORE: At the World Elders Day celebrations, Pandit Sudhakar Chaturvedi, who claims to be 121 years and wants to live to be 300 years, said he had no time for death. 

"I have no desire for death. Marne ko fursat nahin (no time for death)," he said, adding, "For longevity, one has to practise celibacy (brahmacharya) and also eat less so that the stomach doesn't bend." 

He went on: "Now you don't find brahmacharis — there are only brashtacharis (corrupt people)."
************

ಬುಧವಾರ, ಏಪ್ರಿಲ್ 2, 2014

ಪರಮಾತ್ಮ ಸ್ತುತಿ

ಸ್ವಾಮಿ ದೇವನೆ ಸರ್ವದಾತನೆ ವಂದನೆ ಶತವಂದನೆ |
ದುರಿತವೆಲ್ಲವ ದೂರಮಾಡಿ ಒಳಿತುಗೊಳಿಸಲು ಪ್ರಾರ್ಥನೆ || ಪ ||

ಜಗವ ಸಲಹುವ ಸ್ವಾಮಿ ನೀನೇ ಒಬ್ಬನೇ ನೀನೊಬ್ಬನೇ
ಸರ್ವ ಗ್ರಹಗಳ ಶಕ್ತಿ ನೀನೆ ಲೋಕದೊಡೆಯನೆ ವಂದನೆ |
ಜ್ಯೋತಿ ನೀನೇ ಶಕ್ತಿ ನೀನೇ ಸಚ್ಚಿದಾನಂದನೊಬ್ಬನೇ
ಸಕಲವೆಲ್ಲವು ನಿನ್ನದಾಗಿರೆ ನಮ್ಮತನವಿದು ಅರ್ಪಣೆ || ೧ ||

ಆತ್ಮದಾತನೆ ಶಕ್ತಿದಾತನೆ ಜಗದ್ವಂದ್ಯನೆ ಪರಮನೆ
ಸತ್ಯಮಾರ್ಗದಿ ನಡೆಸುವಾತನೆ ದೇವದೇವನೆ ವಂದನೆ |
ಸತ್ಯ ಸುಂದರ ಶಿವನು ನೀನೆ ಹುಟ್ಟು ಸಾವಿನ ಒಡೆಯನೆ 
ಸಕಲವೆಲ್ಲವು ನಿನ್ನದಾಗಿರೆ ನಮ್ಮತನವಿದು ಅರ್ಪಣೆ || ೨ ||

ಪಶುಗಳೊಡೆಯನೆ ಪಕ್ಷಿಪಿತನೆ ಸಕಲ ಜೀವರ ರಾಜನೆ
ಜೀವರಾಶಿಯ ಕಾರ್ಯಕೊಡೆಯ ನ್ಯಾಯದೇವಗೆ ವಂದನೆ |
ಪ್ರಾಣದಾತನೆ ತ್ರಾಣದಾತನೆ ಹರುಷರೂಪಕೆ ತಿಲಕನೆ
ಸಕಲವೆಲ್ಲವು ನಿನ್ನದಾಗಿರೆ ನಮ್ಮತನವಿದು ಅರ್ಪಣೆ || ೩ ||

ಭುವಿಗೆ ಆಸರೆ ನಿನ್ನ ಕರುಣೆ ಪರಮ ಬೆಳಕಿನ ಲೋಕಕೆ
ಮುಕ್ತ ಸ್ಥಿತಿಗೆ ನೆಲೆಯ ನೀಡಿಹ ಕರುಣದೇವಗೆ ವಂದನೆ |
ಅಂತರಿಕ್ಷದ ಗ್ರಹಸಮೂಹಕೆ ಗತಿಯ ನೀಡಿಹ ಮಾನ್ಯನೆ
ಸಕಲವೆಲ್ಲವು ನಿನ್ನದಾಗಿರೆ ನಮ್ಮತನವಿದು ಅರ್ಪಣೆ || ೪ ||

ನಿನ್ನ ಬಿಟ್ಟು ಅನ್ಯರರಿಯೆವು  ಜೀವಕುಲದ ಸ್ವಾಮಿಯೆ
ಸರ್ವ ಸೃಷ್ಟಿಯ ಜನಕ ನೀನೆ ಒಡೆಯ ನಿನಗೆ ವಂದನೆ |
ದಾಸರಾಗದೆ ಸಿರಿಗೆ ನಾವು ಒಡೆಯರಾಗಿ ಬಾಳುವ 
ಕಾಮಿತಾರ್ಥದ ಫಲವು ಸಿಗಲಿ ನಿನ್ನ ಪೂಜಿಪ ಜೀವಗೆ || ೫ ||

ತೃಪ್ತಭಾವದ ಮುಕ್ತ ಸ್ಥಿತಿಯ ನಿನ್ನ ನೆಲೆಯಲಿ ಅರಸುವ
ವಿದ್ವಜ್ಜನರಿಗೆ ಜ್ಯೋತಿಯಾಗಿ ಮಾರ್ಗ ತೋರುವ ದೇವನೆ |
ನೀನೆ ಬಂಧು ನೀನೆ ದಾರಿ ನೀನೆ ಭಾಗ್ಯವಿಧಾತನು
ನಿನ್ನ ಸೃಷ್ಟಿಯ ನೀನೆ ಬಲ್ಲೆ ವಂದನೆ ಜಗದೊಡೆಯನೆ || ೬ ||

ಸತ್ಯಪಥದಿ ಮುಂದೆ ಸಾಗಲು ಮತಿಯ ಕರುಣಿಸು ದೇವನೆ
ಸಂಪತ್ತು ಬರಲಿ ನ್ಯಾಯ ಮಾರ್ಗದಿ ನಿನ್ನ ಕರುಣೆಯ ಬಲದಲಿ |
ರಜವ ತೊಳೆದು ತಮವ ಕಳೆದು ಸತ್ತ್ವ ತುಂಬಲು ಬೇಡುವೆ
ಬಾಳ ಬೆಳಗುವ ಜ್ಯೋತಿ ನೀನೆ ವಂದನೆ ಶತ ವಂದನೆ || ೭ ||
-ಕ.ವೆಂ.ನಾ.
*********
ಪ್ರೇರಣೆ:
     ಈ ಕೆಳಕಂಡ ವೇದಮಂತ್ರಗಳ ಪ್ರೇರಣೆಯಿಂದ ಇದನ್ನು ರಚಿಸಿದ್ದು, ಇದು ಪದಶಃ ಅನುವಾದವಲ್ಲ. ಮಂತ್ರದ ಸಾರವನ್ನು, ಭಾವವನ್ನು ಕನ್ನಡದಲ್ಲಿ ಮೂಡಿಸುವ ಸಣ್ಣ ಪ್ರಯತ್ನವಷ್ಟೆ.

ಓಂ ವಿಶ್ವಾನಿ ದೇವ ಸವಿತರ್ದುರಿತಾನಿ ಪರಾ ಸುವ| ಯದ್ಭದ್ರಂ ತನ್ನ ಆ ಸುವ|| (ಯಜು.೩೦.೩.)

ಓಂ ಹಿರಣ್ಯಗರ್ಭಃ ಸಮವರ್ತತಾಗ್ರೇ ಭೂತಸ್ಯ ಜಾತಃ ಪತಿರೇಕ ಆಸೀತ್| ಸ ದಾಧಾರ ಪೃಥಿವೀಂ ದ್ಯಾಮುತೇಮಾಂ ಕಸ್ಮೈ ದೇವಾಯ ಹವಿಷಾ ವಿಧೇಮ|| (ಯಜು.೧೩.೪.)

ಓಂ ಯ ಆತ್ಮದಾ ಬಲದಾ ಯಸ್ಯ ವಿಶ್ವ ಉಪಾಸತೇ ಪ್ರಶಿಷಂ ಯಸ್ಯ ದೇವಾಃ| ಯಸ್ಯ ಚ್ಛಾಯಾಮೃತಂ ಯಸ್ಯ ಮೃತ್ಯುಃ ಕಸ್ಮೈಃ ದೇವಾಯ ಹವಿಷಾ ವಿಧೇಮ|| (ಯಜು.೨೫.೧೩.)

ಓಂ ಯಃ ಪ್ರಾಣತೋ ನಿಮಿಷತೋ ಮಹಿತ್ವೈಕ ಇದ್ರಾಜಾ ಜಗತೋ ಬಭೂವ| ಯ ಈಶೇ ಅಸ್ಯ ದ್ವಿಪದಶ್ಚತುಷ್ಪದಃ ಕಸ್ಮೈ ದೇವಾಯ ಹವಿಷಾ ವಿಧೇಮ|| (ಯಜು.೨೫.೧೧.)

ಓಂ ಯೇನ ದ್ಯೌರುಗ್ರಾ ಪೃಥಿವೀ ಚ ಧೃಢಾ ಯೇನ ಸ್ವ ಸ್ತಭಿತಂ ಯೇನ ನಾಕಃ| ಯೋ ಅಂತರಿಕ್ಷೇ ರಜಸೋ ವಿಮಾನಃ ಕಸ್ಮೈ ದೇವಾಯ ಹವಿಷಾ ವಿಧೇಮ|| (ಯಜು.೩೨.೬.)

ಓಂ ಪ್ರಜಾಪತೇ ನ ತ್ವದೇತಾನ್ಯನ್ಯೋ ವಿಶ್ವಾ ಜಾತಾನಿ ಪರಿ ತಾ ಬಭೂವ| ಯತ್ ಕಾಮಾಸ್ತೇ ಜುಹುಮಸ್ತನ್ನೋ ಅಸ್ತು ವಯಂ ಸ್ಯಾಮ ಪತಯೋ ರಯೀಣಾಮ್|| (ಋಕ್.೧೦.೧೨೧.೧೦.)

ಓಂ ಸ ನೋ ಬಂಧುರ್ಜನಿತಾ ಸ ವಿಧಾತಾ ಧಾಮಾನಿ ವೇದ ಭುವನಾನಿ ವಿಶ್ವಾ| ಯತ್ರ ದೇವಾ ಅಮೃತಮಾನಶಾನಾಸ್ತೃತೀಯೇ ಧಾಮನ್ನಧ್ಯೈರಯಂತ|| (ಯಜು.೩೨.೧೦.)

ಓಂ ಅಗ್ನೇ ನಯ ಸುಪಥಾ ರಾಯೇ ಅಸ್ಮಾನ್ ವಿಶ್ವಾನಿ ದೇವ ವಯುನಾನಿ ವಿದ್ವಾನ್| ಯುಯೋಧ್ಯಸ್ಮಜ್ಜುಹುರಾಣಮೇನೋ ಭೂಯಿಷ್ಠಾಂ ತೇ ನಮ ಉಕ್ತಿಂ ವಿಧೇಮ|| (ಯಜು.೪೦.೧೬.)

   

ಬುಧವಾರ, ಮಾರ್ಚ್ 26, 2014

ಹುಟ್ಟಿದರು ಎನಲವರು ಸತ್ತಿರಲೇ ಇಲ್ಲ!

ಹುಟ್ಟದೇ ಇರುವವರು ಸಾಯುವುದೆ ಇಲ್ಲ
ಹುಟ್ಟಿದರು ಎನಲವರು ಸತ್ತಿರಲೆ ಇಲ್ಲ |
ಸತ್ತರು ಎನಲವರು ಹುಟ್ಟಿರಲೆ ಇಲ್ಲ
ಹುಟ್ಟುಸಾವುಗಳೆರಡು ಮಾಯೆ ಮೂಢ ||

     "ಶ್ರೀ. . . . . . . . . . . . ರವರು ಅತ್ಯಂತ ಜನಾನುರಾಗಿಯಾಗಿದ್ದು, ನಮಗೆಲ್ಲಾ ತುಂಬಾ ಬೇಕಾದವರಾಗಿದ್ದರು. ಅವರನ್ನು ಕಳೆದುಕೊಂಡು ನಾವು ಅನಾಥರಾಗಿದ್ದೇವೆ. ಅವರ ಅಗಲಿಕೆಯ ದುಃಖವನ್ನು ಸಹಿಸುವುದು ನಮಗೇ ಇಷ್ಟು ಕಷ್ಟವಾಗಿರುವಾಗ ಅವರ ಕುಟುಂಬದವರಿಗೆ ಇನ್ನು ಹೇಗಾಗಿರಬೇಕು? ಅವರ ಕುಟುಂಬದವರೆಲ್ಲರಿಗೂ ದುಃಖವನ್ನು ಸಹಿಸುವ ಶಕ್ತಿಯನ್ನು ಆ ದಯಾಮಯನಾದ ಭಗವಂತ ಕೊಡಲಿ ಎಂದು ಪ್ರಾರ್ಥಿಸೋಣ. ಅವರ ಆತ್ಮಕ್ಕೆ ಸದ್ಗತಿ ಸಿಗಲಿ ಎಂದು ನಾವೆಲ್ಲರೂ ಎದ್ದುನಿಂತು ಎರಡು ನಿಮಿಷ ಮೌನ ಶ್ರದ್ಧಾಂಜಲಿ ಸಲ್ಲಿಸೋಣ" - ಗಣ್ಯರೊಬ್ಬರ ನಿಧನದ ಸಂದರ್ಭದಲ್ಲಿ ಏರ್ಪಡಿಸಿದ್ದ ಸಂತಾಪ ಸೂಚಕ ಸಭೆಯಲ್ಲಿ ವೇದಿಕೆಯಲ್ಲಿದ್ದವರೊಬ್ಬರು ಈ ರೀತಿಯಲ್ಲಿ ಕರೆ ಕೊಡುತ್ತಿದ್ದರು. ಮೃತ ಗಣ್ಯರ ಅಂತ್ಯಸಂಸ್ಕಾರ ಅದಾಗಲೇ ಆಗಿಹೋಗಿತ್ತು. ಅಗ್ನಿಯಲ್ಲಿ ಅರ್ಪಿತವಾದ ಶರೀರ ಪಂಚಭೂತಗಳಲ್ಲಿ ಲೀನವಾಗಿತ್ತು. ಹಾಗಾದರೆ ಆ ಶರೀರದೊಂದಿಗೆ ಗುರುತಿಸಿಕೊಂಡಿದ್ದ ಆತ್ಮ ಇನ್ನೂ ಇತ್ತೇ? ಶರೀರ ಹೋದರೂ ಆತ್ಮ ಇರುತ್ತದೆಯೇ? ಸದ್ಗತಿ ಸಿಗುವುದು ಅಂದರೆ ಏನು? . . ಇತ್ಯಾದಿ ಪ್ರಶ್ನೆಗಳು ಕಾಡತೊಡಗಿದವು. ಶರೀರಕ್ಕೆ ಹೊರತಾದ ಆತ್ಮ ಒಂದು ಇದೆ ಅನ್ನುವುದನ್ನು ಒಪ್ಪಿ, ಅದಕ್ಕೆ ಸದ್ಗತಿ ಬಯಸಿ ಮಾಡುವ ಕ್ರಿಯೆಯೇ ಉತ್ತರಕ್ರಿಯಾದಿ ಸಂಸ್ಕಾರಗಳು. ಶರೀರವನ್ನು ಹೂಳುವುದಿರಬಹುದು, ಸುಡುವುದಿರಬಹುದು, ಪಾರ್ಸಿಗಳು ಮಾಡುವಂತೆ ರಣಹದ್ದುಗಳಿಗೆ ದೇಹವನ್ನು ಆಹಾರವಾಗಿ ಉಣಿಸುವುದಿರಬಹುದು, ಏನಾದರೂ ಇರಬಹುದು. ಇಂತಹ ಕ್ರಿಯೆಗಳಿಂದ ಮೃತಶರೀರ ಪಂಚಭೂತಗಳಲ್ಲಿ ವಿಲೀನವಾಗಲು ಸಹಕಾರಿಯಾಗುತ್ತದೆ.
     'ಜೀವಾತ್ಮ ಅನ್ನುವ ವಸ್ತು ಇರುವುದಿಲ್ಲ. ಅದು ಶರೀರದೊಂದಿಗೆ ಸಹಜವಾಗಿ ಉಂಟಾಗುವ ಚೈತನ್ಯವಿಶೇಷ. ಶರೀರ ನಷ್ಟವಾದೊಡನೆ ಅದೂ ನಾಶವಾಗುತ್ತದೆ' ಎಂಬ ವಾದವೂ ಇದೆ. ವಿಚಾರ ಮಾಡೋಣ. ಈ ಶರೀರ ಅನ್ನುವುದು ಜಡವಸ್ತುಗಳಿಂದ ಕೂಡಿದ ಒಂದು ಸುಂದರ ನಿರ್ಮಾಣ. ಪರಮಾತ್ಮ ನಿರ್ಮಿಸಿದ ನವರಸದ ಅರಮನೆ. ಅದಕ್ಕೆ ಚೈತನ್ಯ ಬಂದಿರುವುದು ಅದರೊಳಗಿರುವ ಪ್ರಾಣ/ಚೈತನ್ಯ/ಜೀವಾತ್ಮ/ಯಾವುದೋ ಶಕ್ತಿಯಿಂದ ಎಂದು ಒಪ್ಪಬಹುದಲ್ಲವೇ? ವೈಜ್ಞಾನಿಕ ದೃಷ್ಟಿಯಿಂದ ನೋಡಿದರೆ ಯಾವುದೇ ಮೂಲವಸ್ತುವಿಗೆ ನಾಶವಿರುವುದಿಲ್ಲ. ಅದು ರೂಪಾಂತರ ಹೊಂದಿದರೂ ಒಂದಲ್ಲಾ ಒಂದು ರೂಪದಲ್ಲಿ ಅಸ್ತಿತ್ವದಲ್ಲಿರುತ್ತದೆ. ಮೃತ ಶರೀರವನ್ನು ಸುಟ್ಟಾಗ ಅಥವ ಯಾವುದೇ ರೀತಿಯಲ್ಲಿ ಅಂತ್ಯ ಸಂಸ್ಕಾರ ಮಾಡಿದಾಗ ಅದು ಬೂದಿಯಾಗಿಯೋ, ಆವಿಯಾಗಿಯೋ, ಮಣ್ಣಾಗಿಯೋ, ನೀರಾಗಿಯೋ ರೂಪಾಂತರ ಹೊಂದುತ್ತದೆ. ಆ ಶರೀರದೊಳಗಿದ್ದ ಜೀವ ಚೈತನ್ಯ ಏನಾಗುತ್ತದೆ? ನಾಶವಾಗುತ್ತದೆ ಎಂದರೆ ಅದು ಇನ್ನೂ ಯಾವುದೋ ರೀತಿಯಲ್ಲಿ ಇರಲೇಬೇಕಲ್ಲವೇ? ಮೊದಲು ಅದು ಯಾವ ರೂಪದಲ್ಲಿತ್ತು? ಅಂತ್ಯ ಸಂಸ್ಕಾರದ ನಂತರ ಯಾವ ರೂಪ ಹೊಂದುತ್ತದೆ ಎಂಬುದು ಯಾರಿಗೆ ಗೊತ್ತಿದೆ? ಶರೀರದೊಂದಿಗೆ ಸಹಜವಾಗಿ ಉಂಟಾಗುವ ಜೀವ ಚೈತನ್ಯವೆಂದರೆ ಅದನ್ನು ಸ್ಟೃಸಿದವರು ಯಾರು? ಜಡವಸ್ತು ತನ್ನಿಂದ ತಾನೇ ಏನಾದರೂ ಸ್ಟೃಸಲು ಸಾಧ್ಯವಿದೆಯೇ? ಇಲ್ಲ ಅನ್ನುತ್ತದೆ ವಿಜ್ಞಾನ. ಆದ್ದರಿಂದ ಶರೀರ ಜೀವ ಚೈತನ್ಯವನ್ನು ಉತ್ಪಾದಿಸಲಾರದು. ಒಂದು ವೇಳೆ ಜಡವಸ್ತು ಏನಾದರೂ ಸೃಷ್ಟಿಸಲು ಸಾಧ್ಯ ಎಂದು ವಾದಕ್ಕೋಸ್ಕರವಾಗಿ ಒಪ್ಪಿಕೊಂಡರೂ ಅದರಿಂದ ಮತ್ತೊಂದು ಜಡವಸ್ತು ನಿರ್ಮಾಣ ಸಾಧ್ಯವೇ ಹೊರತು ಚೈತನ್ಯದಿಂದ ಕೂಡಿದ ವಸ್ತು ನಿರ್ಮಾಣ ಆಗಲಾರದು. ಇರುವ ವಸ್ತುಗಳಿಂದ ಇಲ್ಲದ ವಸ್ತುವಿನ ಸೃಷ್ಟಿ ಹೇಗೆ ಸಾಧ್ಯ? ಆದ್ದರಿಂದ ಶರೀರ ಜೀವ ಚೈತನ್ಯವನ್ನು ಉತ್ಪಾದಿಸಲು ಸಾಧ್ಯವಿಲ್ಲ. ಶರೀರದೊಳಗೆ ಜೀವ ಚೈತನ್ಯ ಸೇರಿದೆಯೇ ಹೊರತು, ಶರೀರದಿಂದ ಚೈತನ್ಯ ಉಂಟಾಗಿಲ್ಲ ಅನ್ನುವುದು ಹೆಚ್ಚು ತಾರ್ಕಿಕ. ಹೀಗೆಯೇ ಮುಂದುವರೆಸೋಣ. ಆ ಚೈತನ್ಯ ಮೊದಲು ಶರೀರದೊಳಗಿದ್ದಾಗ ವ್ಯಕ್ತಿ ಜೀವಂತನಾಗಿದ್ದ, ಇಲ್ಲದಾದಾಗ ಮೃತನಾದ ಅನ್ನಬಹುದು. ಹೊರಗಿನಿಂದ ವ್ಯಕ್ತಿಯ ಶರೀರದೊಳಗೆ ಬಂದು ಸೇರಿದ್ದ ಆ ಚೈತನ್ಯ ವ್ಯಕ್ತಿಯ ಮರಣಾನಂತರ ಶರೀರದ ಹೊರಗೆ ಇರುತ್ತದೆ. ಬದುಕಿದ್ದಾಗ ಒಂದು ರೂಪದಲ್ಲಿ, ಸತ್ತಾಗ ಇನ್ನೊಂದು ರೂಪದಲ್ಲಿ ಇರುತ್ತದೆ ಎಂದಾದರೆ ಯಾವ ರೂಪದಲ್ಲಿ ಇದ್ದೀತು ಅನ್ನುವುದು ಯಾರಿಗೆ ತಿಳಿದಿದೆ? ಇಂತಹ ವಿಶಿಷ್ಟ ಚೈತನ್ಯವನ್ನೇ ಜ್ಞಾನಿಗಳು ಜೀವಾತ್ಮ ಎನ್ನುತ್ತಾರೆ. ಜೀವಾತ್ಮಕ್ಕೆ ಹುಟ್ಟೂ ಇಲ್ಲ, ಸಾವೂ ಇಲ್ಲ ಅನ್ನುವುದು ಈ ಅರ್ಥದಲ್ಲೇ ಇರಬೇಕು. 
     'ಪುನರಪಿ ಜನನಂ ಪುನರಪಿ ಮರಣಂ, ಪುನರಪಿ ಜನನೀ ಜಠರೇ ಶಯನಂ' - ಶ್ರೀ ಶಂಕರಾಚಾರ್ಯರ ಈ ಉಕ್ತಿ ಪುನರ್ಜನ್ಮವನ್ನು ಸಮರ್ಥಿಸುವುದರೊಂದಿಗೆ ಜೀವಚೈತನ್ಯದ ಅಮರತ್ವವನ್ನೂ ಸಾರುತ್ತಿದೆ. ಭಾರತೀಯ ವೈಚಾರಿಕರು ಪುನರ್ಜನ್ಮವನ್ನು ನಂಬುತ್ತಾರೆ. ಭಾರತೀಯ ಧರ್ಮಶಾಸ್ತ್ರಗಳೂ ಪುನರ್ಜನ್ಮ ಸಿದ್ಧಾಂತವನ್ನು ಎತ್ತಿ ಹಿಡಿದಿವೆ. ಪುನರ್ಜನ್ಮವಿದ್ದಲ್ಲಿ ಹಳೆಯ ಶರೀರ ನಷ್ಟವಾದ ಮೇಲೆ, ಅದು ಪಂಚಭೂತಗಳಲ್ಲಿ ಸೇರಿಹೋದಮೇಲೆ ಹಿಂದಿನ ಶರೀರದಲ್ಲಿದ್ದ ಜೀವಚೈತನ್ಯ ಬೇರೆ ಶರೀರದ ಮೂಲಕವೇ ಪ್ರಕಟಗೊಳ್ಳಬೇಕು/ಪುನರ್ಜನ್ಮ ಹೊಂದಬೇಕು.
     ಸಕಲ ಜೀವಿಗಳನ್ನು ಸೃಷ್ಟಿಸಿದವನು ಭಗವಂತ ಎಂದೂ ಸಹ ವಾದವಿದೆ. ಯಾವುದರಿಂದ ಸೃಷ್ಟಿಸಿದ? ಶೂನ್ಯದಿಂದಂತೂ ಆಗಿರಲಾರದು. ಶೂನ್ಯದಿಂದ ಸೃಷ್ಟಿ ಅನ್ನುವುದನ್ನು ವಿಜ್ಞಾನ ಸಹ ಒಪ್ಪುವುದಿಲ್ಲ. ಎಲ್ಲಾ ಜೀವಿಗಳೂ ಪರಮಾತ್ಮನ ಅಂಶಗಳೇ ಅಂದರೆ, ಇಷ್ಟೊಂದು ಜೀವಜಂತುಗಳು ಇರುವಾಗ ಅವೆಲ್ಲವನ್ನೂ ಪರಮಾತ್ಮ ತನ್ನ ಅಂಶದಿಂದಲೇ ಸೃಷ್ಟಿಸಿದ ಅಂದರೆ, ಸೃಷ್ಟಿಯ ನಂತರ ಅವನು  ಪರಿಪೂರ್ಣ ಎಂದೆನಿಸಿಕೊಳ್ಳಲಾರನು. ಭಗವಂತ ಸೃಷ್ಟಿಸಿದ ಅಂದರೆ ಏಕೆ  ಸೃಷ್ಟಿಸಿದ ಎಂಬ ಪ್ರಶ್ನೆ ಬರುತ್ತದೆ. ಅವನಿಗೆ ಬೇಕಾಗಿತ್ತು, ಅದಕ್ಕಾಗಿ  ಸೃಷ್ಟಿಸಿದ ಅಂದರೆ 'ಬೇಕು' ಅನ್ನುವ ಭಾವನೆ ಬಂದ ತಕ್ಷಣ ಪರಮಾತ್ಮನಿಗೆ ಏನೂ ಬೇಕಿಲ್ಲದಾಗ, ಯಾವುದರ ಅಗತ್ಯವೂ ಇಲ್ಲದಿರುವಾಗ, ಇಂತಹ ಸೃಷ್ಟಿಗೆ ಅರ್ಥವೇ ಉಳಿಯುವುದಿಲ್ಲ, ಅಲ್ಲದೆ ಪರಮಾತ್ಮ ಪರಿಪೂರ್ಣ ಎಂಬ ಗುಣವಿಶೇಷತೆಗೆ ಧಕ್ಕೆ ಬರುತ್ತದೆ. ಸೂಕ್ತವಾದ ವಾದವೆಂದರೆ ಎಷ್ಟು ಜೀವಜಂತುಗಳಿವೆಯೋ ಅಷ್ಟು ಜೀವಾತ್ಮಗಳಿವೆ ಅನ್ನುವುದು, ಆ ಜೀವಾತ್ಮಗಳೂ ಪರಮಾತ್ಮನಂತೆ ಹುಟ್ಟು-ಸಾವುಗಳಿಲ್ಲದವು, ಪರಮಾತ್ಮನ ಪ್ರಜೆಗಳು ಅನ್ನುವುದು! ಶರೀರದೊಡನೆ ಇದ್ದಾಗ ಆತ್ಮಗಳು ಮಾಡುವ ಕರ್ಮವನ್ನನುಸರಿಸಿ ಹೊಸ ಜನ್ಮ ಪಡೆಯುವುವು. ಆ ಜನ್ಮ ಮಾನವಜನ್ಮವೇ ಆಗಬೇಕೆಂದಿಲ್ಲ, ಇಂತಹ ಲಿಂಗವೇ ಆಗಬೇಕೆಂದಿಲ್ಲ. ಅಥರ್ವವೇದ ಹೇಳುತ್ತದೆ: 
ತ್ವಂ ಸ್ತ್ರೀ ತ್ವಂ ಪುಮಾನಸಿ ತ್ವಂ ಕುಮಾರ ಉತ ವಾ ಕುಮಾರೀ |
ತ್ವಂ ಜೀರ್ಣೋ ದಂಡೇನ ವಂಚಸಿ ತ್ವಂ ಜಾತೋ ಭವಸಿ ವಿಶ್ವತೋಮುಖಃ ||  ಅಥರ್ವ: ೧೦.೮.೨೭)
     ಇದರ ಅರ್ಥ ಜೀವಾತ್ಮನೇ, ನೀನು ಸ್ತ್ರೀ, ನೀನು ಪುರುಷ, ನೀನು ಕುಮಾರ ಮತ್ತು ನೀನು ಕುಮಾರಿ. ವೃದ್ಧನಾಗಿ, ನಂತರ ಮತ್ತೆ ಜನಿಸಿ ಎಲ್ಲೆಡೆಯೂ ಮುಖ ಮಾಡುವೆ. ಭಗವಂತನಂತೆ ಜೀವಾತ್ಮನೂ ಲಿಂಗರಹಿತನಾಗಿದ್ದು ಧರಿಸಿದ ಶರೀರವನ್ನು ಅವಲಂಬಿಸಿ ಹೆಣ್ಣು, ಗಂಡು ಅನ್ನಿಸಿಕೊಳ್ಳುವುದು.
     ಮೃತ ಶರೀರವನ್ನು 'ವ್ಯಕ್ತಿಯ ಹೆಣ', 'ವ್ಯಕ್ತಿಯ ದೇಹ(ಬಾಡಿ)' ಅನ್ನುತ್ತೇವೆಯೇ ಹೊರತು 'ವ್ಯಕ್ತಿ' ಅನ್ನುವುದಿಲ್ಲ. ಅಂದರೆ ಕೇವಲ ಶರೀರ ವ್ಯಕ್ತಿಯೆನಿಸುವುದಿಲ್ಲ. ಶರೀರದೊಳಗೆ ಜೀವಾತ್ಮನಿದ್ದಾಗ ಅದು ನಾಗರಾಜ, ಶ್ರೀಧರ, ಅಬ್ದುಲ್, ಡಿಸೋಜಾ, ಊರ್ಮಿಳಾ, ಇತ್ಯಾದಿಗಳಿಂದ ಗುರುತಿಸಲ್ಪಡುತ್ತದೆ. ಎಂತಹ ಚೋದ್ಯ! ಶರೀರಕ್ಕೆ ಸಾವಿದೆ, ಚೈತನ್ಯಕ್ಕಿಲ್ಲ. ಮಾಯೆಯೆಂದರೆ, ಶರೀರದೊಳಗಿನ ಚೈತನ್ಯವೂ ತನ್ನನ್ನು ಶರೀರದೊಂದಿಗೇ ಗುರುತಿಸಿಕೊಳ್ಳುತ್ತದೆ, ತಾನೇ ವ್ಯಕ್ತಿಯೆಂದು ಭಾವಿಸುತ್ತದೆ, ಚಿಂತನ-ಮಂಥನ ಮಾಡುತ್ತದೆ, ಸಕಲ ಸುಖವೂ ತನಗೇ ಬೇಕೆನ್ನುತ್ತದೆ, ಶರೀರ ಸಾಯುವವರೆಗೂ ಆ ಶರೀರ ನಾಶವಾಗುವುದನ್ನು ಬಯಸುವುದೇ ಇಲ್ಲ! ಆ ಶರೀರ ಮನುಷ್ಯನದಾಗಿರಬಹುದು ಅಥವ ಮನುಷ್ಯ ತಿಂದು ತೇಗುವ ಕೋಳಿ, ಹಂದಿಯದಾಗಿರಬಹುದು, ಬೇರೆ ಯಾವುದೇ ಜೀವಜಂತುವಾಗಿರಬಹುದು! ಇದೆಂತಹ ಸೃಷ್ಟಿ ರಹಸ್ಯ!
ಪ್ರಾಣವಿದ್ದರೆ ತ್ರಾಣ ಪ್ರಾಣದಿಂದಲೆ ನೀನು
ಪ್ರಾಣವಿರದಿರೆ ದೇಹಕರ್ಥವಿಹುದೇನು?|
ನಿನಗರ್ಥ ನೀಡಿರುವ ಜೀವಾತ್ಮನೇ ನೀನು 
ನೀನಲ್ಲ ತನುವೆಂಬುದರಿಯೋ ಮೂಢ|| 

ಹಿಂದೆ ಇರಲಿಲ್ಲ ಮುಂದೆ ಇರದೀ ದೇಹ
ಈಗಿರುವ ದೇಹಕರ್ಥ ಬಂದುದು ಹೇಗೆ|
ಶುದ್ಧ ಬುದ್ಧಿಯಲಿ ನೋಡೆ ತಿಳಿದೀತು ನಿನಗೆ
ಅಂತರಾತ್ಮನ ಕರೆಯು ಕೇಳಿಪುದು ಮೂಢ|| 

ಕಾಣದದು ನಯನ ಕಿವಿಗೆ ಕೇಳಿಸದು
ಮುಟ್ಟಲಾಗದು ಕರ ತಿಳಿಯದು ಮನ |
ಬಣ್ಣಿಸಲು ಸಿಗದು ಪ್ರಮಾಣಕೆಟುಕದು
ಅವ್ಯಕ್ತ ಆತ್ಮದರಿವು ಸುಲಭವೇ ಮೂಢ? || 

ಕಾಣುವುದು ನಿಜವಲ್ಲ ಕಾಣದಿರೆ ಸುಳ್ಳಲ್ಲ
ತಿಳಿದದ್ದು ನಿಜವಲ್ಲ ತಿಳಿಯದಿರೆ ಸುಳ್ಳಲ್ಲ |
ಕೇಳುವುದು ನಿಜವಲ್ಲ ಕೇಳದಿರೆ ಸುಳ್ಳಲ್ಲ
ಆತ್ಮಾನಾತ್ಮರರಿವು ಅವನೆ ಬಲ್ಲ ಮೂಢ || 

-ಕ.ವೆಂ.ನಾಗರಾಜ್.
**************
[17-10-2013ರ ಜನಮಿತ್ರ ಪತ್ರಿಕೆಯಲ್ಲಿ ಪ್ರಕಟಿತ]



ಶುಕ್ರವಾರ, ಮಾರ್ಚ್ 21, 2014

ನಾವೆಷ್ಟು ಒಳ್ಳೆಯವರು?

ರಸಭರಿತ ಫಲಮೂಲ ಕೊಂಬೆ ತಾನಲ್ಲ
ಫಲಸತ್ವ ಸಾಗಿಪ ಮಾರ್ಗ ತಾನಹುದು|
ಮಾಡಿದೆನೆನಬೇಡ ನಿನದೆನಬೇಡ
ಜಗವೃಕ್ಷರಸ ಹರಿವ ಕೊಂಬೆ ನೀ ಮೂಢ||
     ಕೊಂಬೆಯಲ್ಲಿ ಗೊಂಚಲು ಗೊಂಚಲಾಗಿ ಬಿಟ್ಟ ಫಲಗಳನ್ನು ಕಂಡು ಕೊಂಬೆ ತನ್ನಿಂದ ಈ ಫಲಗಳು ಎಂದು ಹೆಮ್ಮೆ ಪಡಬಹುದೇ? ಮರದ ಬೇರು, ವಿವಿಧ ಅಂಗಾಂಗಗಳು ನೆಲ, ಜಲ, ಗಾಳಿ, ಬೆಳಕುಗಳಿಂದ ಪಡೆದ  ಸತ್ವಗಳು ಕೊಂಬೆಯ ಮೂಲಕ ಸಾಗಿ ರೂಪಿತವಾದುದೇ ಫಲ. ಅದಕ್ಕೆ ಕೊಂಬೆಯೂ ಸಹಕಾರಿಯೇ ಹೊರತು ಅದೇ ಮೂಲವಲ್ಲ. ಅದೇ ರೀತಿ ನಾವು ಏನನ್ನು ಮಾಡಿದ್ದೇವೆ, ಸಾಧಿಸಿದ್ದೇವೆ ಎಂದು ಅಂದುಕೊಳ್ಳುತ್ತೀವೋ ಅದಕ್ಕೆ ನಾವೂ ಕಾರಣರು ಎಂದಷ್ಟೇ ಹೇಳಿಕೊಳ್ಳಬಹುದು. ನಾವೇ ಕಾರಣರು ಎಂದು ಹೇಳಲಾಗದು. ನಾವು ವಾಹಕಗಳಷ್ಟೆ. ಎಂತಹ ವಾಹಕರು ಎಂಬುದು ನಮ್ಮಿಂದ ಆಗುವ ಕಾರ್ಯಗಳು ತೋರಿಸುತ್ತವೆ. ಒಳ್ಳೆಯ ವಾಹಕಗಳಾಗಿದ್ದಲ್ಲಿ ಒಳ್ಳೆಯ ಫಲಗಳು, ಕೆಟ್ಟದಾಗಿದ್ದಲ್ಲಿ ಕೊಳೆತ, ಕೆಟ್ಟ ಫಲಗಳು ಗೋಚರಿಸುತ್ತವೆ. 
     ಕಲ್ಮಶಭರಿತ ನೀರನ್ನು ಶುದ್ಧವಾದ ಪಾತ್ರೆಗೆ ಹಾಕಿದಾಕ್ಷಣ ನೀರು ಶುದ್ಧವಾಗುವುದಿಲ್ಲ. ಅದೇ ರೀತಿ ಶುದ್ಧವಾದ ನೀರನ್ನು ಕಲ್ಮಶಭರಿತ ಪಾತ್ರೆಗೆ ಹಾಕಿದರೆ ನೀರೂ ಅಶುದ್ಧವಾಗುತ್ತದೆ. ಆದ್ದರಿಂದ ನಾವು ಶುದ್ಧ ವಾಹಕಗಳಾಗಬೇಕೆಂದರೆ ಎಚ್ಚರಿಕೆಯಿಂದಿರಬೇಕು. ನಮ್ಮ ಆಹಾರ -ಅಂದರೆ, ಕೇವಲ ತಿನ್ನುವುದು, ಕುಡಿಯುವುದು ಮಾತ್ರ ಅಲ್ಲ ನೋಡುವುದು, ಕೇಳುವುದು, ಗ್ರಹಿಸುವುದು, ಇತ್ಯಾದಿಗಳೂ ಸೇರಿ- ಶುದ್ಧವಾಗಿರಬೇಕು. ಒಂದು ಉದಾಹರಣೆ ನೋಡೋಣ: ಸ್ನೇಹಿತರೊಬ್ಬರ ಮನೆಯಲ್ಲಿ ಮಾತನಾಡುತ್ತಾ ಕುಳಿತಿದ್ದಾಗ ಅವರ ೩ ವರ್ಷದ  ಚಿಕ್ಕ ಮಗು ಒಬ್ಬರು ಹಿರಿಯರನ್ನು ಕುರಿತು 'ನೀನು ಪೆದ್ದ, ದಂಡ' ಎಂದಿತು. ಚಿಕ್ಕ ಮಗುವಾದ್ದರಿಂದ ಆ ಮಗುವಿನ ಮಾತನ್ನು ಯಾರೂ ಗಂಭೀರವಾಗಿ ಪರಿಗಣಿಸಲಿಲ್ಲ. ಹಿರಿಯರು ಯಾವುದೋ ಕಾರಣಕ್ಕೆ ಹೊರಗೆ ಹೋದಾಗ ಅಲ್ಲಿದ್ದ ಮಗುವಿನ ಸಂಬಂಧಿಯೊಬ್ಬರು  "ಮಗು  ಸರಿಯಾಗಿ ಹೇಳಿತು, ಬಿಡು, ಅವರು ಮಾಡುವುದೂ ಹಾಗೆಯೇ, ಇರುವುದೂ ಹಾಗೆಯೇ"  ಎಂದರು.  ಅಲ್ಲೇ ಕುಳಿತಿದ್ದ ಮಗು ಖುಷಿಯಿಂದ ಇದನ್ನು ಕೇಳಿಸಿಕೊಂಡಿತು. ಈ ಪ್ರಸಂಗ ನನ್ನನ್ನು ವಿಚಾರಕ್ಕೆ ದೂಡಿತು. ಹಿರಿಯರಿಗೂ ಆ  ಸಂಬಂಧಿಗೂ ಅಷ್ಟಾಗಿ ಸರಿಯಿರಲಿಲ್ಲ. ಅದು ಮಗುವಿನ ಮೂಲಕ ಹೊರಬಿತ್ತು ಅಷ್ಟೆ. ಅವರು ಹಿರಿಯರ ಬೆನ್ನ ಹಿಂದೆ ಯಾವಾಗಲೋ ಆಡಿದ ಮಾತುಗಳನ್ನು ಮಗು ಪುನರುಚ್ಛರಿಸಿತ್ತಷ್ಟೆ ಹೊರತು ಅದು ಮಗುವಿನ ಸ್ವಂತ ಮಾತಾಗಿರಲಿಲ್ಲ. ಈಗ ಅವರು ಆಡಿದ ಮಾತಿನಿಂದ ಮಗುವಿಗೆ ತಾನು ಮಾಡಿದ್ದು ಸರಿ ಎಂದು ಶಹಭಾಸಗಿರಿ ಕೊಟ್ಟಂತಾತು. ಮಗು ಮುಂದೆ ಇಂತಹ ಮಾತುಗಳನ್ನು ಇನ್ನೂ ಹೆಚ್ಚು ಹೆಚ್ಚಾಗಿ ಆಡಲು ಪ್ರೇರೇಪಿಸಿದಂತೆ ಆಯಿತು. ಕಲುಷಿತ ಭಾವನೆಯನ್ನು ವಾಹಕರಾಗಿ ಅವರು ಆ ಮಗುವಿಗೂ ಹರಿಸಿದರಲ್ಲವೇ? ಇದು ಸರಿಯೇ?  ಮಕ್ಕಳು ನಿಷ್ಕಲ್ಮಶವಾದ ಪಾತ್ರೆಯಿದ್ದಂತೆ. ಆ ಪಾತ್ರೆಗೆ ಕಲ್ಮಶಗಳನ್ನು ತುಂಬಬಾರದಿತ್ತಲ್ಲವೇ?
     ಮನುಷ್ಯನ ಸ್ವಭಾವವೇ ವಿಚಿತ್ರ. ತನಗೆ ಬೇಕಾದವರ ಬಗ್ಗೆ ಯಾರಾದರೂ ಪ್ರಿಯವಾದ ವಿಷಯ ಹೇಳಿದರೆ ಅದಕ್ಕೆ ಮತ್ತಷ್ಟು ಒತ್ತುಕೊಟ್ಟು ಇನ್ನೊಬ್ಬರಿಗೆ ಹೇಳುತ್ತಾನೆ. ತನಗಾಗದವರ ಬಗ್ಗೆ ಒಳ್ಳೆಯ ಸಂಗತಿ ಕೇಳಿದರೆ ಅದನ್ನು ತಿರುಚಿ ತಮ್ಮ ಕೆಟ್ಟ ಅಭಿಪ್ರಾಯ ಸೇರಿಸಿ ಹೇಳುತ್ತಾನೆ. ಅವರ ಬಗ್ಗೆ ಕೆಟ್ಟ ವಿಷಯ ಕೇಳಿದರಂತೂ ಸಂಭ್ರಮಿಸಿ ಎಲ್ಲರಿಗೂ ಹರಡುತ್ತಾನೆ. (ಇಂದಿನ ಕೆಲವು ಟಿವಿ ಮಾಧ್ಯಮಗಳು ಇಂತಹ ಪ್ರವೃತ್ತಿಗೆ ಉತ್ತಮವಾದ ಉದಾಹರಣೆ.) ಆತ್ಮೀಯರು ಸೀನಿದರೆ ಸಾಕು, ಏನೋ ಆಗಿಹೋಯಿತೆಂದು ಕಳವಳ ಪಡುತ್ತಾರೆ. ಇಷ್ಟಪಡದವರು ಗಂಭೀರ ಕಾಯಿಲೆಯಿಂದ ನರಳುತ್ತಿದ್ದರೂ 'ಅವರಿಗೇನಾಗಿದೆ? ಇನ್ನೂ ಗಟ್ಟಿಗಡತವಾಗಿದ್ದಾರೆ. ಇನ್ನೂ ಎಷ್ಟು ಜನರನ್ನು ಹಾಳುಮಾಡಬೇಕೋ?' ಎಂದು ಉದ್ಗರಿಸುತ್ತಾರೆ. ಇಂತಹವರನ್ನು ಒಳ್ಳೆಯ ವಾಹಕರೆನ್ನಬಹುದೆ? ಸಂಬಂಧಗಳು ಹಾಳಾಗುವುದು ಇಂತಹ ನಡವಳಿಕೆಗಳಿಂದಲೇ.
     ಇನ್ನು ಕೆಲವರಿರುತ್ತಾರೆ. ಕೆಟ್ಟ ವಿಷಯ ಕೇಳಿದರೆ ಕೇಳಿಸಿಕೊಂಡು ಸುಮ್ಮನಾಗುತ್ತಾರೆಯೇ ಹೊರತು ಅದನ್ನು ಹರಡಲು ಹೋಗುವುದಿಲ್ಲ. ಒಳ್ಳೆಯ ವಿಷಯಗಳಿಗೆ ಸ್ಪಂದಿಸುತ್ತಾರೆ. ಇವರು ಒಳ್ಳೆಯ ವಾಹಕರು. ಇಂತಹವರನ್ನು ಸಾಮಾನ್ಯವಾಗಿ ಜನ ಒಳ್ಳೆಯವರೆಂದು ಗುರುತಿಸುತ್ತಾರೆ. ಇವರ ಮಾತುಗಳಿಗೆ ಗೌರವ ಕೊಡುತ್ತಾರೆ. ಸಂಬಂಧಗಳು ಉಳಿಯುವುದು, ಬೆಳೆಯುವುದು ಇಂತಹವರಿಂದಲೇ ಎಂಬುದರಲ್ಲಿ ಅನುಮಾನವಿಲ್ಲ. ಕುಟುಂಬದ ಮುಖ್ಯಸ್ಥ ಮುಖ್ಯ ವಾಹಕನಾದರೆ ಕುಟುಂಬದ ಸದಸ್ಯರುಗಳು ಉಪವಾಹಕಗಳಿದ್ದಂತೆ. ವಾಹಕ, ಉಪವಾಹಕಗಳಲ್ಲಿ ಯಾವುದೇ ಒಂದು ಸರಿಲ್ಲದಿದ್ದರೂ ಒಂದು ಘಟಕವಾಗಿ ಕುಟುಂಬಕ್ಕೇ ಕೆಟ್ಟ ಹೆಸರು ಬರುತ್ತದೆ. ಈ ವಿಚಾರದಲ್ಲಿ ಎಚ್ಚರವಿರುವುದು ಒಳ್ಳೆಯದು. ಒಬ್ಬರಿದ್ದಂತೆ ಇನ್ನೊಬ್ಬರು ಇಲ್ಲದಿರುವುದರಿಂದ ಇದಕ್ಕೆ ಪರಿಹಾರ ಕಷ್ಟಸಾಧ್ಯ. ಗೀತೆಯ 'ಕರ್ಮಣ್ಯೇವಾಧಿಕಾರಸ್ತೇ ಮಾ ಫಲೇಶು ಕದಾಚನಾ' ಎಂಬಂತೆ ಬಂದದ್ದನ್ನು ಸ್ವೀಕರಿಸಿ ನಡೆಯುವುದೊಂದೇ ಆಗ ಉಳಿಯುವ ಮಾರ್ಗ. ಆದರೆ ಒಬ್ಬರ ಕಾರಣದಿಂದ ಕುಟುಂಬದ ಎಲ್ಲರಿಗೂ ಕೆಟ್ಟ ಹೆಸರು ಬರುವಂತಾಗುವುದು ಒಳ್ಳೆಯ ಲಕ್ಷಣವಂತೂ ಅಲ್ಲ. ನಾವು ಆಡುವ ಮಾತುಗಳು ನಮ್ಮ ವ್ಯಕ್ತಿತ್ವವನ್ನು ತೋರಿಸುತ್ತವೆ. ಆಡುವ ಮಾತುಗಳು ಹೇಗಿರಬೇಕೆಂದು ಋಗ್ವೇದದ ಈ ಮಂತ್ರ ಮಾರ್ಗದರ್ಶನ ನೀಡುತ್ತಿದೆ: 
ಸಕ್ತುಮಿವ ತಿತಉನಾ ಪುನಂತೋ ಯತ್ರ ಧೀರಾ ಮನಸಾ ವಾಚಮಕ್ರತ |
ಅತ್ರಾ ಸಖಾಯಃ ಸಖ್ಯಾನಿ ಜಾನತೇ ಭದ್ರೈಷಾಂ ಲಕ್ಷ್ಮೀರ್ನಿಹಿತಾಧಿ ವಾಚಿ || (ಋಕ್. ೧೦.೭೧.೨.)
     ಜರಡಿಯಿಂದ ಹಿಟ್ಟನ್ನು ಶೋಧಿಸುವಂತೆ ಬುದ್ಧಿವಂತರು ಆಡುವ ಮಾತನ್ನು ಮನಸ್ಸಿನಲ್ಲಿ ಶೋಧಿಸಿ ನಂತರ ಮಾತನಾಡುತ್ತಾರೆ. ಈ ರೀತಿ ಆಲೋಚಿಸಿ ಮಾತನಾಡುವವರಿಂದ ಜನರಲ್ಲಿ ಸ್ನೇಹಭಾವನೆ ಬೆಳೆಯುತ್ತದೆ. ಮನುಷ್ಯನ ನಿಜವಾದ ಸಂಪತ್ತು ಮಾತಿನಲ್ಲಿಯೇ ಅಡಗಿದೆ ಎಂಬ ಈ ಮಂತ್ರದ ಅರ್ಥವನ್ನು ತಿಳಿದು ಆಚರಿಸಿದಲ್ಲಿ ಒಳಿತೇ ಆಗುತ್ತದೆ. 
     ನಾವೆಷ್ಟು ಒಳ್ಳೆಯವರು ಎಂಬುದರ ಅಳತೆಗೋಲು ನಮ್ಮಲ್ಲೇ ಇದೆ. ಕುಟುಂಬದ ಸದಸ್ಯರುಗಳ, ಬಂಧುಗಳ, ಸ್ನೇಹಿತರ ಪಟ್ಟಿ ಮಾಡಿರಿ. ಆ ಹೆಸರುಗಳ ಮುಂದೆ ಎರಡು ಕಲಮುಗಳು ಇರಲಿ. ಒಂದು ಕಲಮಿನಲ್ಲಿ ನಿಮ್ಮ ದೃಷ್ಟಿಯಲ್ಲಿ  ಅವರು ಒಳ್ಳೆಯವರೋ, ಕೆಟ್ಟವರೋ ಎಂಬುದನ್ನು ದಾಖಲಿಸಿ. ಇನ್ನೊಂದು ಕಲಮಿನಲ್ಲಿ ಅವರ ದೃಷ್ಟಿಯಲ್ಲಿ ನೀವು  ಒಳ್ಳೆಯವರೋ, ಕೆಟ್ಟವರೋ ಎಂಬುದನ್ನು ದಾಖಲಿಸಿ. ಒಂದು ಆಶ್ಚರ್ಯದ ಸಂಗತಿ ನಿಮಗೇ ಗೋಚರಿಸುವುದು. ಸಾಮಾನ್ಯವಾಗಿ ಎರಡು ಕಲಮುಗಳ ವಿವರ ಒಂದೇ ಆಗಿರುತ್ತದೆ. ನೀವು ಒಳ್ಳೆಯವರೆಂದು ಹೇಳುವವರು ನಿಮ್ಮನ್ನೂ ಒಳ್ಳೆಯವರೆಂದು ಭಾವಿಸುವರು. ನೀವು ಕೆಟ್ಟವರೆನ್ನುವವರು ನಿಮ್ಮನ್ನು ಒಳ್ಳೆಯವರೆಂದು ಹೇಳಲಾರರು. ಕೊನೆಯಲ್ಲಿ ಎಷ್ಟು ಒಳ್ಳೆಯವರು ಮತ್ತು ಕೆಟ್ಟವರು ಎಂಬುದನ್ನು ಲೆಕ್ಕ ಹಾಕಿರಿ. ಒಳ್ಳೆಯವರು ಎಂಬ ಸಂಖ್ಯೆ ಜಾಸ್ತಿ ಬಂದರೆ ನೀವು ಒಳ್ಳೆಯವರೇ. ಕೆಟ್ಟವರು ಎಂಬ ವಿವರ ಹೆಚ್ಚಾಗಿದ್ದರೆ ತಿದ್ದಿಕೊಳ್ಳುವ, ಬದಲಾಗುವ ಅಗತ್ಯವಿದೆ ಎಂದೇ ಅರ್ಥ. ಈ ಜಗತ್ತು ಕನ್ನಡಿಯಿದ್ದಂತೆ. ಒಳ್ಳೆಯವರಿಗೆ ಒಳ್ಳೆಯದಾಗಿ, ಕೆಟ್ಟವರಿಗೆ ಕೆಟ್ಟದಾಗಿ ಕಾಣುತ್ತದೆ. ಕನ್ನಡಿಯ ಪ್ರತಿಬಿಂಬವೂ ಅಷ್ಟೆ. ನಾವು ಎಷ್ಟು ದೂರದಲ್ಲಿರುತ್ತೇವೋ ಪ್ರತಿಬಿಂಬವೂ ಅಷ್ಟೇ ದೂರದಲ್ಲಿರುತ್ತದೆ. ಇದರ ಅರ್ಥವನ್ನು ಬಿಡಿಸಿ ಹೇಳುವ ಅಗತ್ಯವಿಲ್ಲವಲ್ಲವೇ?
     ಈ ಬದುಕು ಮೂರುದಿನದ್ದು ಎಂಬುದು ಎಲ್ಲರಿಗೂ ಗೊತ್ತಿದ್ದರೂ ನಾವು ಚಿರಂಜೀವಿಗಳು ಎಂಬಂತೆ ವರ್ತಿಸುತ್ತೇವೆ. ಇತರರ ಬಗ್ಗೆ "ಅವನು ಏಕೆ ಹಾಗಾಡುತ್ತಾನೆ? ಹೋಗುವಾಗ ಎಲ್ಲಾ ಹೊತ್ತುಕೊಂಡು ಹೋಗುತ್ತಾನಾ?" ಎಂದು ಹೇಳುವ ನಾವು ಅದೇ ತತ್ವವನ್ನು ನಮಗೆ ಹೇಳಿಕೊಳ್ಳುತ್ತೇವೆಯೇ? ಒಂದು ವೇಳೆ ನಾವು ಸದ್ಯದಲ್ಲೇ ಸಾಯುತ್ತೇವೆ ಎಂಬುದು ನಮ್ಮ ಅರಿವಿಗೆ ಬಂದಾಗ ಮತ್ತು ಏನಾದರೂ ಹೇಳಲು ಐದು ನಿಮಿಷ ಮಾತ್ರ ಅವಕಾಶ ಸಿಕ್ಕಾಗ ನಾವು ಏನು ಹೇಳಬಹುದು, ಊಹಿಸಿಕೊಳ್ಳಿ. ಆ ಮಾತನ್ನು ಈಗಲೇ ಏಕೆ ಹೇಳಬಾರದು? ಜೀವನ ಪೂರ್ತಿ ಉತ್ತಮ ರೀತಿಯಲ್ಲಿ ಬಾಳಲು ಸಿದ್ಧತೆ ಮಾಡಿಕೊಳ್ಳುವುದರಲ್ಲಿಯೇ ಕಳೆಯುವ ನಾವು ಉತ್ತಮವಾಗಿ ಬಾಳುವುದಿಲ್ಲ ಎಂಬುದು ವಿಪರ್ಯಾಸದ ಸಂಗತಿಯಾಗಿದೆ.
     ಸಂಬಂಧಗಳಲ್ಲಿ ಬರುವ ದೊಡ್ಡ ಸವಾಲೆಂದರೆ  ಏನನ್ನಾದರೂ ಪಡೆಯುವ ಸಲುವಾಗಿಯೇ ಸಂಬಂಧಗಳನ್ನು  ಹೆಚ್ಚಿನವರು ಬೆಳೆಸುವುದೇ ಆಗಿದೆ. ಅವರು ಇತರರು ತಮಗೆ ಒಳಿತು ಮಾಡಲಿ ಎಂದು ಬಯಸಿ ಸಂಬಂಧ ಬೆಳೆಸುತ್ತಾರೆ. ಸಂಬಂಧಗಳು ಏನನ್ನಾದರೂ ಕೊಡುವ ಸಲುವಾಗಿ, ಪಡೆಯುವ ಸಲುವಾಗಿ ಅಲ್ಲ ಎಂದುಕೊಂಡರೆ ಸಂಬಂಧಗಳು ಉಳಿಯುತ್ತವೆ, ಬೆಳೆಯುತ್ತವೆ.  ಬರ್ನಾರ್ಡ್ ಶಾ ಹೇಳಿದಂತೆ "ಸಾಯುವ ಮುನ್ನ ನಮ್ಮಲ್ಲಿರುವ ಒಳ್ಳೆಯದನ್ನೆಲ್ಲಾ ಕೊಟ್ಟುಬಿಡೋಣ." ಸಂತೋಷ ಹಂಚಿಕೊಳ್ಳೋಣ; ಅದು ದ್ವಿಗುಣಗೊಳ್ಳುತ್ತದೆ. ದುಃಖವನ್ನೂ ಹಂಚಿಕೊಳ್ಳೋಣ; ಅದು ಅರ್ಧ ಕಡಿಮೆಯಾಗುತ್ತದೆ. ಒಟ್ಟಿನಲ್ಲಿ, ಒಡಲಗುಡಿಯ ರಜ-ತಮಗಳ ಗುಡಿಸಿ ಒಳಗಣ್ಣಿನಲಿ ಕಂಡ ಸತ್ವವನು ಉರಿಸಿ ಮನದ ಕತ್ತಲ ಕಳೆದು ತಿಳಿವಿನ ಬೆಳಕ ಪಸರಿಸೋಣ; ಒಳ್ಳೆಯವರಾಗೋಣ. 
 -ಕ.ವೆಂ.ನಾಗರಾಜ್.
**************
[03-10-2013ರ 'ಜನಮಿತ್ರ'ದಲ್ಲಿ ಪ್ರಕಟವಾಗಿದೆ.]



ಬುಧವಾರ, ಮಾರ್ಚ್ 19, 2014

ಆಯುರ್ಧಾರಾ-೭: ಆಯುರ್ವೇದ ತ್ರಿದೋಷ ಸಿದ್ಧಾಂತ-ಒಂದು ಪರಿಚಯ

 ಆಯುರ್ವೇದ ತ್ರಿದೋಷ ಸಿದ್ಧಾಂತ-ಒಂದು ಪರಿಚಯ

       ನಮ್ಮ ಶರೀರದ ರಚನೆ ಹಾಗೂ ಕ್ರಿಯೆಗಳನ್ನು ಅರ್ಥಮಾಡಿಕೊಳ್ಳುವ ವಿಶಿಷ್ಟ ಸಿದ್ಧಾಂತಗಳನ್ನು ಆಯುರ್ವೇದದ ಶಾಸ್ತ್ರ ಗ್ರಂಥಗಳು ಪ್ರಸ್ತುತ ಪಡಿಸುತ್ತವೆ. ಅಂತಹ ಅನೇಕ ಮೂಲಭೂತ ಸಿದ್ಧಾಂತಗಳಲ್ಲಿ ಅತ್ಯಂತ ಪ್ರಮುಖವಾದದ್ದು ದೋಷ-ಧಾತು-ಮಲ ಸಿದ್ಧಾಂತ.
       'ದೋಷ ಧಾತು ಮಲಾ ಮೂಲಂ ಹಿ ಶರೀರಂ ||'(ಸುಶ್ರುತ ಸಂಹಿತಾ) ಎಂದು ಸುಶ್ರುತನು ತನ್ನ ಸಂಹಿತೆಯಲ್ಲಿ ಉಲ್ಲೇಖಿಸಿದ್ದಾನೆ. ಯಾವ ರೀತಿ ವೃಕ್ಷಗಳ ಸಂಭವ, ಸ್ಥಿತಿ ಹಾಗೂ ನಾಶಕ್ಕೆ ಅವುಗಳ ಮೂಲ ಅಥವಾ ಬೇರುಗಳು ಕಾರಣವೋ, ಅದೇ ರೀತಿ ನಮ್ಮಶರೀರದ ಸಂಭವ, ಸ್ಥಿತಿ ಹಾಗೂ ಲಯಗಳಿಗೆ ದೋಷ, ಧಾತು ಹಾಗು ಮಲಗಳು ಕಾರಣವಾಗಿವೆ. ಅಂದರೆ, ನಮ್ಮ ಶರೀರವು ದೋಷ-ಧಾತು-ಮಲಮಯವಾಗಿದೆ.
       ಈ ಸಂಚಿಕೆಯಲ್ಲಿ ತ್ರಿದೋಷ ಸಿದ್ಧಾಂತದ ಬಗ್ಗೆ ಪರಿಚಯ ಮಾಡಿಕೊಳ್ಳೋಣ.
       ನಮ್ಮ ಶರೀರದಲ್ಲಿ ವಾತ, ಪಿತ್ತ ಹಾಗು ಕಫ ಎಂಬ ಮೂರು ದೋಷಗಳು ಕಾರ್ಯಪ್ರವೃತ್ತವಾಗಿವೆ. ಅಂದರೆ ಶರೀರದ ಎಲ್ಲಾ ಕ್ರಿಯೆಗಳಿಗೂ ಈ ತ್ರಿದೋಷಗಳೇ ಕಾರಣವಾಗಿವೆ. ಈ ದೋಷಗಳು ಸಮಾವಸ್ಥೆಯಲ್ಲಿರುವಾಗ ಶರೀರವು ಸ್ವಸ್ಥವಾಗಿದ್ದು ಎಲ್ಲಾ ಕ್ರಿಯಾತ್ಮಕ ಚಟುವಟಿಕೆಗಳು ಸುವ್ಯವಸ್ಥಿತವಾಗಿ ನಡೆಯುತ್ತವೆ. ಇವು ವಿಕೃತಾವಸ್ಥೆಯಲ್ಲಿರುವಾಗ, ಶರೀರದ ಕ್ರಿಯೆಗಳೂ ವಿಕೃತಿ ಹೊಂದಿ, ವಿಕಾರ ಅಥವಾ ರೋಗವು ಉಂಟಾಗುತ್ತದೆ. ಆದ್ದರಿಂದ ಆಯುರ್ವೇದದಲ್ಲಿಯ ಶಾರೀರ ವಿಜ್ಞಾನ, ರೋಗ ಕಾರಣ, ನಿದಾನ, ದ್ರವ್ಯಗುಣ, ಆಹಾರ ವಿಜ್ಞಾನ, ಋತುಚರ್ಯೆ ಇತ್ಯಾದಿ ಪ್ರತಿಯೊಂದು ವಿಚಾರದಲ್ಲಿಯೂ ತ್ರಿದೋಷ ಜ್ಞಾನವು ಓತಪ್ರೋತವಾಗಿ ತುಂಬಿರುವುದು.
       ದೋಷಗಳು ಭೌತಿಕ ತತ್ವಗಳಾಗಿದ್ದು, ಪಂಚಮಹಾಭೂತಗಳಿಂದ ಇವುಗಳ ರಚನೆಯು ಉಂಟಾಗಿದೆ. ವಾತ ದೋಷವು ಆಕಾಶ ಹಾಗೂ ವಾಯು ಮಹಾಭೂತಗಳ ಪ್ರಾಬಲ್ಯದಿಂದಲೂ, ಪಿತ್ತ ದೋಷವು ಅಗ್ನಿ ಮಹಾಭೂತದ ಪ್ರಾಬಲ್ಯದಿಂದಲೂ, ಕಫ ದೋಷವು ಪೃಥ್ವಿ ಹಾಗೂ ಜಲ  ಮಹಾಭೂತಗಳ ಪ್ರಾಬಲ್ಯದಿಂದಲೂ ರಚಿಸಲ್ಪಟ್ಟಿವೆ.
              ವಿಸರ್ಗಾದಾನ ವಿಕ್ಷೇಪೈಃ ಸೋಮಸೂರ್ಯಾನಿಲಾ ಯಥಾ |
              ಧಾರಯಂತಿ ಜಗದ್ದೇಹಂ ಕಫ ಪಿತ್ತ ಅನಿಲಾಸ್ತಥಾ || (ಸುಶ್ರುತ)      
       ಚಂದ್ರನು ತನ್ನ ಸ್ವಭಾವ ಜನ್ಯವಾದ ಶೈತ್ಯ ಸಾಮರ್ಥ್ಯದಿಂದ, ಸೂರ್ಯನು ತನ್ನ ಸ್ವಭಾವ ಜನ್ಯವಾದ ಉಷ್ಣ ಸಾಮರ್ಥ್ಯದಿಂದ, ವಾಯುವು ತನ್ನ ಸ್ವಭಾವ ಜನ್ಯವಾದ ಗತಿ ಸಾಮರ್ಥ್ಯದಿಂದ, ಪ್ರಪಂಚದ ಬಲವನ್ನು ಕ್ರಮವಾಗಿ ಹೆಚ್ಚಿಸುವುದು, ಹ್ರಾಸ ಮಾಡುವುದು ಹಾಗೂ ಪ್ರಸರಿಸುವುದು ಈ ಕಾರ್ಯಗಳಿಂದ ಜಗತ್ತನ್ನು ಧಾರಣೆ ಮಾಡುವಂತೆ, ಕಫ, ಪಿತ್ತ ಹಾಗೂ ವಾತಗಳು ಶರೀರವೆಂಬ ಜಗತ್ತನ್ನು ಧಾರಣೆ ಮಾಡಿಕೊಂಡಿರುವವು.
       ಮೇಲಿನ ಶ್ಲೋಕದಲ್ಲಿ ಪ್ರಕೃತ್ಯಾರಂಭಕ ಶಕ್ತಿಗಳು ಬ್ರಹ್ಮಾಂಡ ಪಿಂಡಾಂಡಗಳೆರಡಲ್ಲಿಯೂ ಹೇಗೆ ಒಂದೇ ವಿಧವಾಗಿ ಕಾರ್ಯ ಮಾಡುವವೆಂಬುದನ್ನು ಹೇಳಿರುವರು.
       ಆಯುರ್ವೇದ ಶಾಸ್ತ್ರ ಗ್ರಂಥಗಳಲ್ಲಿ ತ್ರಿದೋಷಗಳು ಕೇವಲ ಶಕ್ತಿಗಳೇ ಎಂದಾಗಲೀ ಅಥವಾ ಕೇವಲ ದ್ರವ್ಯಗಳೇ ಎಂದಾಗಲೀ ಎಲ್ಲಿಯೂ ಹೇಳಿಲ್ಲ. ಎರಡೂ ಅರ್ಥ ಬರುವತೆ ಇವುಗಳ ಗುಣಕರ್ಮಗಳನ್ನು ವರ್ಣನೆ ಮಾಡಲಾಗಿದೆ. ಹಾಗಾದರೆ ಇವುಗಳ ಗುಣಗಳೇನು, ವಿಧಗಳೇನು, ಸ್ವರೂಪವೇನು, ಕಾರ್ಯಗಳೇನು ಇತ್ಯಾದಿ ವಿಚಾರವಾಗಿ ಮುಂದಿನ ಸಂಚಿಕೆಯಲ್ಲಿ ತಿಳಿದುಕೊಳ್ಳೋಣ.